ಹಿಂದೂ ಸಂಸ್ಕೃತಿ ಪಾಲಿಸಿದರೆ ಜಗತ್ತಿನಲ್ಲಿ ಶಾಂತಿ : ಯದುಕೃಷ್ಣ ಮತ್ತೂರು
ಭದ್ರಾವತಿ ಹಳೇನಗರದ ಭೂತನಗುಡಿ ಶ್ರೀ ಕೃಷ್ಣರುಕ್ಮಿಣಿ ದೇವಸ್ಥಾನ ಮುಂಭಾಗ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಆರ್ಎಸ್ಎಸ್ ಪ್ರಾಂತ ಸಹ ಸಂಪರ್ಕ ಪ್ರಮುಖ್ ಯದುಕೃಷ್ಣ ಮತ್ತೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ: ಭಾರತದ ಸನಾತನ ಹಿಂದೂ ಸಂಸ್ಕೃತಿ ಜಗತ್ತಿನ ಎಲ್ಲಾ ಸಂಸ್ಕೃತಿಗಳ ತಾಯಿಯಾಗಿದೆ. ಈ ಸಂಸ್ಕೃತಿಯನ್ನು ಪಾಲಿಸಿದರೆ ಜಗತ್ತಿನಲ್ಲಿ ಶಾಂತಿ ನೆಲೆಸುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಆರ್ಎಸ್ಎಸ್ ಪ್ರಾಂತ ಸಹ ಸಂಪರ್ಕ ಪ್ರಮುಖ್ ಯದುಕೃಷ್ಣ ಮತ್ತೂರು ತಿಳಿಸಿದರು. ಅವರು ಹಳೇನಗರದ ಭೂತನಗುಡಿ ಶ್ರೀ ಕೃಷ್ಣರುಕ್ಮಿಣಿ ದೇವಸ್ಥಾನ ಮುಂಭಾಗ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು. ಹಿಂದೂ ಧರ್ಮದ ಆಚರಣೆ ಫಲವಾಗಿ ಇಂದು ಕೇವಲ ಭಾರತ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿನ ೧೨ ದೇಶಗಳಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಅಲ್ಲದೆ ಪ್ರಪಂಚದ ಇತರೆ ದೇಶಗಳಲ್ಲಿ ದೊಡ್ಡ ದೊಡ್ಡ ದೇವಾಲಯಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದೂ ಧರ್ಮದ ಆಚರಣೆಗಳನ್ನು ಪಾಲಿಸಲಾಗುತ್ತಿದೆ. ಇದು ೪೦೦ ವರ್ಷಗಳ ಹಿಂದೆ ಹಿಂದುತ್ವದ ನೆಲೆಯಲ್ಲಿ ಗುರುತಿಸಿಕೊಳ್ಳುವಂತಹ ವಾತಾವರಣ ನಿರ್ಮಾಣದ ಫಲವಾಗಿದೆ ಎಂದರು. ...