೧೦ ಸಾವಿರು ರು. ಲಂಚ ಸ್ವೀಕರಿಸುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ
20 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಾಮದೇವ್ ಭದ್ರಾವತಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ನಾಮದೇವ್. ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶಪಾಲ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಸಿ. ಮೇಘರಾಜ್ ಅವರು ತಮ್ಮ ಪುತ್ರಿ ದೀಕ್ಷಾ ಅವರನ್ನು ವಸತಿ ಶಾಲೆಯ ೭ನೇ ತರಗತಿಗೆ ದಾಖಲಿಸಲು ಪ್ರಾಂಶುಪಾಲರನ್ನು ಸಂಪರ್ಕಿಸಿದ್ದರು. ಈ ವೇಳೆ ಶಾಲೆಗೆ ಡ್ರಮ್ ಸೆಟ್ ಖರೀದಿಸುವ ನೆಪವೊಡ್ಡಿದ ಪ್ರಾಂಶುಪಾಲ ನಾಮದೇವ್ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ೨೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೇಘರಾಜ್ ಅವರು ಜು. ೧೮ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಪ್ರಾಂಶುಪಾಲನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-೧೯೮೮ (ತಿದ್ದುಪಡಿ-೨೦೧೮)ರ ಕಲಂ ೭(೩) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ...