Tuesday, June 30, 2020

ಉಪ ಕುಲಸಚಿವೆ ಡಿ.ವಿ ಗಾಯತ್ರಿ ಅಮಾನತು

ಅಮಾನತು ಆದೇಶ ಪತ್ರ 
ಭದ್ರಾವತಿ, ಜೂ. ೩೦: ಕುವೆಂಪು ವಿಶ್ವ ವಿದ್ಯಾಲಯ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವೆ ಡಿ.ವಿ ಗಾಯತ್ರಿಯವರ ವಿರುದ್ಧ ಸುಳ್ಳು ಜಾತಿ ಪ್ರಮಾಣ ನೀಡಿ ಸರ್ಕಾರಿ ಉದ್ಯೋಗ ಪಡೆದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಸೇವೆಯಿಂದ ಅಮಾನುಗೊಳಿಸಿ ಆದೇಶಿಸಲಾಗಿದೆ. 
ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೇಮಕವಾದಂತಹ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದು, ಈ ಸಂಬಂಧ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ  ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಇದರನ್ವಯ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್  ದಾಖಲಾಗಿದೆ. ವಿಶ್ವವಿದ್ಯಾಲಯದ ನಿಯಮಾನುಸಾರ ಇಲಾಖಾ ವಿಚಾರಣೆ ಕಾಯ್ದಿರಿಸಿ ಕುಲಪತಿಗಳ ಆದೇಶದ ಮೇರೆಗೆ ಅಮಾನುಗೊಳಿಸಲಾಗಿದೆ ಎಂದು ಕುಲಸಚಿವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. 
  ಕಳೆದ ೩ ದಿನಗಳ ಹಿಂದೆ ಈ ಸಂಬಂಧ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿತ್ತು.

ದನದ ದೊಡ್ಡಿ ಜಾಗ ಖಾಸಗಿಯವರಿಗೆ ನೀಡದಿರಿ : ಬಿ.ಎನ್ ರಾಜು

ಕೋಟ್ಯಾಂತರ ರು. ಮೌಲ್ಯದ ಜಾಗ ಸದ್ಬಳಕೆಯಾಗಲಿ 

ಭದ್ರಾವತಿ ನಗರಸಭೆಗೆ ಸೇರಿದ ನಗರದ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿರುವ ದನದೊಡ್ಡಿ ಜಾಗವನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡದಿರುವಂತೆ ಮಾನಗ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. 
ಭದ್ರಾವತಿ, ಜೂ. ೩೦: ನಗರದ ಜೆಎಂಎಫ್‌ಸಿ ನ್ಯಾಯಾಲಯದ ಮುಂಭಾಗದಲ್ಲಿರುವ ನಗರಸಭೆಗೆ ಸೇರಿದ ದನದ ದೊಡ್ಡಿ ಜಾಗವನ್ನು ಯಾವುದೇ ಕಾನಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಆಗ್ರಹಿಸಿದೆ. 
ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಈ ಹಿಂದೆ ದನದ ದೊಡ್ಡಿಯಾಗಿದ್ದ ಜಾಗ ಅನೇಕ ವರ್ಷಗಳಿಂದಲೂ ವಿವಾದದಿಂದ ಕೂಡಿದೆ. ನಗರಸಭೆ ಖಾತೆ ನಂ. ೧೭೪/೧೭೪ರಲ್ಲಿ ಜಾಗದ ಅಳತೆ ೨೫*೮೦ ಅಡಿಗಳಾಗಿದ್ದು, ಈ ಜಾಗವನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ರವರು ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದವರಿಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮಂಜೂರಾತಿಗಾಗಿ ನಗರಸಭೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು. 
ಶಾಸಕರು ಸ್ವಜಾತಿಯ ಪ್ರೀತಿಯಿಂದ ಪ್ರಸ್ತಾವನೆ ಸಲ್ಲಿಸಿರುವ ಕ್ರಮವನ್ನು ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಕೋಟ್ಯಾಂತರ ರು. ಬೆಲೆ ಬಾಳುವ ಜಾಗವನ್ನು ನಗರಸಭೆಗೆ ಆದಾಯ ಬರುವ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಅಥವಾ ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡ ನಿರ್ಮಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದೆಂದು ಆಗ್ರಹಿಸಿದರು. 
ಜಾಗವನ್ನು ಖಾಸಗಿಯವರಿಗೆ ನೀಡುವ ಸಂಬಂಧ ಮೇ.೨೯ರಂದು ತಿಂಗಳೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಮಿತಿಯು ಈ ಸಂಬಂಧ ತಕರಾರು ಸಲ್ಲಿಸಲಿದೆ. ಅಲ್ಲದೆ ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಉಗ್ರ ಹೋರಾಟ ನಡೆಸಲಿದೆ ಎಂದರು. 
ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಉಪಾಧ್ಯಕ್ಷ ಎಂ.ವಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಕ್ರಮ್ ಖಾನ್, ಬ್ರಹ್ಮಲಿಂಗಯ್ಯ, ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಮನವಿ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೩೦: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಮತ್ತು ಗೌರವ ಧನ ಎರಡೂ ಸೇರಿ ಮಾಸಿಕ ೧೨ ಸಾವಿರ ರು. ನೀಡುವುದು. ಆಗಾಗ ಎಲ್ಲಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಿ ಕೊರೋನಾ ವೈರಸ್ ಪ್ರಕರಣ ಕಂಡು ಬಂದಲ್ಲಿ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡುವುದು. ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವ ಧನ ನೀಡುವುದು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈಗಾಗಲೇ ಈ ಸಂಬಂಧ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಆದರೂ ಸಹ ಯಾವುದೇ ಬೇಡಿಕೆ ಈಡೇರಿಲ್ಲ. ಈ ಹಿನ್ನಲೆಯಲ್ಲಿ ೭ ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿವಿಧ ರೀತಿಯ ಪ್ರತಿಭಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಒಂದು ವೇಳೆ ಸಮಸ್ಯೆ ಪರಿಹರಿಸದಿದ್ದಲ್ಲಿ ಜು.೧೦ರಿಂದ ರಾಜ್ಯಾದ್ಯಂತ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಲಾಗಿದೆ.
ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ಆಶಾ, ಆರ್. ವಾಸಂತಿ, ಎನ್. ಭಾಗ್ಯ, ಎಚ್. ನೇತ್ರಾವತಿ, ಎನ್. ಕಮಲ, ಪಿ. ಶೃತಿ, ಎನ್. ಸೀಮಾ, ಎಸ್. ಗೀತಾಂಜಲಿ, ಹೇಮಾವತಿ, ಆರ್. ಮಂಜುಳ, ಸುಮಿತ್ರ ಬಾಯಿ, ಫಜಲುನ್ನಿಸಾ, ಎಸ್. ಮಮತ, ವಿ. ಅನಿತಾ, ಬಿ. ದೀಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉಕ್ಕಿನ ನಗರದಲ್ಲಿ ಕೊರೋನಾ ವೈರಸ್ ಸ್ಪೋಟ

೬ ವರ್ಷದ ಬಾಲಕ ಸೇರಿ ೭ ಮಂದಿಯಲ್ಲಿ ವೈರಸ್ ಪತ್ತೆ 

ಭದ್ರಾವತಿ ನಗರಸಭೆ ವ್ಯಾಪ್ತಿಯ ಗಾಂಧಿನಗರ ಹಾಗೂ ಹೊಸಮನೆ ಸುಭಾಷ್ ನಗರದಲ್ಲಿ ಒಟ್ಟು ೭ ಮಂದಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಮುನ್ನಚ್ಚರಿಕೆ ಕ್ರಮವಾಗಿ ವೈರಸ್ ಕಾಣಿಸಿಕೊಂಡಿರುವ ಸ್ಥಳದ ಸುತ್ತಮುತ್ತ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್ ಮಾಡಲಾಗಿದೆ. 
ಭದ್ರಾವತಿ, ಜೂ. ೩೦: ಉಕ್ಕಿನ ನಗರದಲ್ಲಿ ದಿನ ದಿಂದ ದಿನಕ್ಕೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಂಗಳವಾರ ಒಂದೇ ದಿನ ೭ ಪ್ರಕರಣಗಳು ಧೃಢಪಟ್ಟಿವೆ. ಇದರಿಂದಾಗಿ ನಾಗರೀಕರು ಆತಂಕಕ್ಕೆ ಒಳಗಾಗುವಂತಾಗಿದೆ. 
ಗಾಂಧಿನಗರದ ಮೊದಲಿಯಾರ್ ಸಮುದಾಯ ಭವನ ಸಮೀಪದ ಒಂದೇ ಮನೆಯ ೬ ವರ್ಷದ ಬಾಲಕ ಸೇರಿದಂತೆ ೫ ಮಂದಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ.  ೫೬ ವರ್ಷದ ವ್ಯಕ್ತಿ, ೪೪ ವರ್ಷದ ಆತನ ಹೆಂಡತಿ, ೨೬ ವರ್ಷದ ಪುತ್ರಿ, ೬ ವರ್ಷದ ಮೊಮ್ಮಗ  ಹಾಗೂ ೪೩ ವರ್ಷದ ನಾದಿನಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ. ಇತ್ತೀಚಿಗೆ ಜೂ.೧೯ರಂದು ಈ ಮನೆಯ ಮಹಿಳೆಯೊಬ್ಬರು ಮಗನಿಗೆ ಹೆಣ್ಣು ನೋಡಲು ಖಾಸಗಿ ವಾಹನದಲ್ಲಿ ಸುಮಾರು ೧೦ ಮಂದಿಯೊಂದಿಗೆ ತುಮಕೂರಿಗೆ ತೆರಳಿ, ಪುನಃ ಜೂ.೨೧ರಂದು ಹಿಂದಿರುಗಿದ್ದರು. 
ಕೆಲವು ದಿನಗಳ ಹಿಂದೆ ಹಳೇನಗರದ ಉಪ್ಪಾರ ಬೀದಿಯಲ್ಲಿ ವಾಸವಿರುವ ಚಾಲಕನಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿತ್ತು. ಇದೀಗ ಒಬ್ಬ ಮಹಿಳೆಯಿಂದ ಮನೆಯ ೪ ಮಂದಿಗೆ ವೈರಸ್ ಹರಡಿದೆ ಎನ್ನಲಾಗಿದೆ. ವಾಹನದಲ್ಲಿ ತೆರಳಿದ್ದ ೧೦ ಜನರನ್ನು ಸಹ ನಿಗಾದಲ್ಲಿ ಇರಿಸಲಾಗಿತ್ತು. ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಮಗನ ಪ್ರಯೋಗಾಲಯದ ವರದಿ ಇನ್ನೂ ಬಂದಿಲ್ಲ. 
ಹೊಸಮನೆ ಸುಭಾಷ್‌ನಗರದಲ್ಲಿ ೨ ಪ್ರಕರಣಗಳು ಪತ್ತೆಯಾಗಿದ್ದು, ಸೊಸೆಯ ಹೆರಿಗೆ ಹಿನ್ನಲೆಯಲ್ಲಿ ತಮಿಳುನಾಡಿಗೆ ತೆರಳಿದ್ದ ೫೬ ವರ್ಷದ ವ್ಯಕ್ತಿ ಹಾಗೂ ಆತನ ೪೮ ವರ್ಷದ ಹೆಂಡತಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. 

೩ ಕಡೆ ಸೀಲ್ ಡೌನ್: 
ಕೊರೋನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ತೆರಳಿ ಸ್ಥಳ ಪರಿಶೀಲನೆ ನಡೆಸುವ ಜೊತೆಗೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದೊಂದಿಗೆ ಸ್ಯಾನಿಟೈಸರ್ ಕೈಗೊಂಡರು. ಉಳಿದಂತೆ ಮುನ್ನಚ್ಚರಿಕೆ ಕ್ರಮವಾಗಿ ಕೊರೋನಾ ವೈರಸ್ ಕಾಣಿಸಿಕೊಂಡಿರುವ ಗಾಂಧಿನಗರದ ಮೊದಲಿಯಾರ್ ಸಮುದಾಯ ಭವನ ಸಮೀಪದ ಮನೆಯ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್  ಮಾಡಲಾಗಿದೆ. 
ಅಲ್ಲದೆ ಈ ಮನೆಯೊಂದಿಗೆ ಸಂಪರ್ಕದಲ್ಲಿದ್ದ ಮಹಿಳೆಯೊಬ್ಬರು ವಾಸಿಸುತ್ತಿದ್ದ ಹೊಸಮನೆ ಭೋವಿ ಕಾಲೋನಿ ಎಡಭಾಗದ ೭ನೇ ತಿರುವಿನ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್ ಮಾಡಲಾಗಿದೆ. 
ಹೊಸಮನೆ ಸುಭಾಷ್‌ನಗರದ ೨ನೇ ತಿರುವಿನಲ್ಲಿ ವಾಸಿಸುತ್ತಿದ್ದ ದಂಪತಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಈ ಮನೆಯ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಕಂಟೈನ್‌ಮೆಂಟ್ ವಲಯದೊಂದಿಗೆ ಸೀಲ್ ಡೌನ್ ಮಾಡಲಾಗಿದೆ. ಒಟ್ಟು ನಗರದಲ್ಲಿ ೩ ಭಾಗದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ನಗರದ ನಾಗರೀಕರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. 

Monday, June 29, 2020

ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳ ಸೇವೆಗೆ ಪ್ರಶಂಸೆ, ಅಭಿನಂದನೆ

ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಅಭಿನಂದಿಲಾಯಿತು. 
ಭದ್ರಾವತಿ, ಜೂ. ೨೯: ಕೊರೋನಾ ವೈರಸ್ ಪರಿಣಾಮ ಪ್ರಸ್ತುತ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯಲ್ಲೂ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಸೋಮವಾರ ಪ್ರಶಂಸೆ ವ್ಯಕ್ತಪಡಿಸಲಾಯಿತು. 
ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಜೊತೆಗೆ, ಇತ್ತೀಚೆಗೆ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಲು ಕಾರಣಕರ್ತರಾದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರನ್ನು ಅಭಿನಂದಿಸಲಾಯಿತು. 
ಹಿರಿಯ ವೈದ್ಯ ಡಾ. ರವೀಂದ್ರನಾಥ ಕೋಠಿ, ತಮಿಳು ಸಮಾಜದ ಅಧ್ಯಕ್ಷ ಸುರೇಶ್‌ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ನೀಲೇಶ್‌ರಾಜ್, ರವೀಂದ್ರಕುಮಾರ್, ಆರೋಗ್ಯ ರಕ್ಷಾ ಸಮಿತಿಯ ಸುಂದರ್ ಬಾಬು, ಕೆ.ಎನ್ ನಾಗೇಶ್ ಹಾಗೂ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಶಾಲಾ ಮಕ್ಕಳಿಗೆ ನೀಡಬೇಕಾದ ಅಕ್ಕಿ, ಬೇಳೆ ವಿತರಣೆಯಲ್ಲಿ ವಂಚನೆ

ಎಎಪಿ ವತಿಯಿಂದ ಆಕ್ರೋಶ : ತಪ್ಪತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ 

 ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಷರ ದಾಸೋಹ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಬದಲು ವಿತರಿಸಲಾಗುತ್ತಿರುವ ಅಕ್ಕಿ, ಬೇಳೆ ವಿತರಣೆಯಲ್ಲಿ ವಂಚನೆ ನಡೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಸೋಮವಾರ ಆಮ್ ಆದ್ಮಿ ಪಾರ್ಟಿ ವತಿಯಿಂದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್‌ಗೆ ಮನವಿ ಸಲ್ಲಿಸಲಾಯಿತು. 

ಭದ್ರಾವತಿ, ಜೂ. ೨೯: ಕಳೆದ ಸುಮಾರು ೪ ತಿಂಗಳಿನಿಂದ ವಿಶ್ವದೆಲ್ಲೆಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವ ಜೊತೆಗೆ ಲಾಕ್‌ಡೌನ್ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಸಂಕಷ್ಟಕ್ಕೆ ಒಳಗಾಗದವರ ನೆರವಿಗೆ ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳು ಮುಂದಾಗುತ್ತಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಬಡ ಮಕ್ಕಳಿಗೆ ತಲುಪಬೇಕಾದ ಆಹಾರ ದಿನಸಿ ಸಾಮಗ್ರಿಗಳನ್ನು ಸಮರ್ಪಕವಾಗಿ ವಿತರಿಸದೆ ವಂಚಿಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. 
ಅವರು ಸೋಮವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಪಕ್ಷದ ಮುಖಂಡರೊಂದಿಗೆ ತೆರಳಿ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾದಿಕಾರಿ ಎ.ಜಿ ರಾಜಶೇಖರ್‌ಗೆ ಮನವಿ ಸಲ್ಲಿಸಿದರು. 
ಸರ್ಕಾರ ಶಾಲಾ ಮಕ್ಕಳಿಗೆ ಅಕ್ಷರ ದಾಸೋಹ ಯೋಜನೆಯಡಿ ಮಧ್ಯಾಹ್ನ ಬಿಸಿಯೂಟ ನೀಡುತ್ತಿದ್ದು, ಕೊರೋನಾ ವೈರಸ್ ಪರಿಣಾಮ ಲಾಕ್‌ಡೌನ್ ಜಾರಿಗೆ ಬಂದ ಹಿನ್ನಲೆಯಲ್ಲಿ ಶಾಲೆಗಳಿಗೆ ರಜಾ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಮಕ್ಕಳಿಗೆ ಊಟದ ಬದಲು ಪ್ರತಿ ತಿಂಗಳು ೨ ಕೆ.ಜಿ ಅಕ್ಕಿ ಹಾಗೂ ಬೇಳೆ ವಿತರಿಸಲಾಗುತ್ತಿದೆ. ಆಯಾ ಶಾಲೆಗಳು ಎಲ್ಲಾ ಮಕ್ಕಳಿಗೂ ವಿತರಿಸಲಾಗಿದೆ ಎಂದು ಸುಳ್ಳು ವರದಿಯನ್ನು ಮೇಲಾಧಿಕಾರಿಗಳಿಗೆ ನೀಡುತ್ತಿವೆ. ಆದರೆ ಶೇ.೪೦ರಷ್ಟು ಮಕ್ಕಳಿಗಳಿಗೆ ತಲುಪುತ್ತಿಲ್ಲ. ಈ ಸಂಬಂಧ ಪೋಷಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ತಕ್ಷಣ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 
ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಮುಳ್ಕೆರೆ ಲೋಕೇಶ್ ಹಾಗೂ  ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕಾಂತ ದಿನೇಶ್ ಸೇರಿದಂತೆ ಮಹಿಳಾ ಪ್ರಮುಖರು ಉಪಸ್ಥಿತರಿದ್ದರು. 

ಕೆರೆಗಳ ಅಭಿವೃದ್ಧಿಗೆ ಮುಂದಾದ ನಗರಸಭೆ ಆಡಳಿತ : ಪೌರಾಯುಕ್ತರ ಕಾರ್ಯಕ್ಕೆ ಮೆಚ್ಚುಗೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಬುಳ್ಳಾಪುರ ಸರ್ವೆ ನಂ.೭೨ರ ಸರ್ಕಾರಿ ಚಿಕ್ಕಿಯ್ಯನ ಕೆರೆಯನ್ನು ಅಭಿವೃದ್ಧಿಗೊಳಿಸುವ ಸಂಬಂಧ ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಿರುವುದು. 

ಭದ್ರಾವತಿ, ಜೂ. ೨೯: ಬಹಳ ವರ್ಷಗಳಿಂದ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳು ಅಭಿವೃದ್ಧಿ ಕಾಣದೆ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ತಲುಪಿವೆ. ಈ ನಡುವೆ ಇದೀಗ ಈ ಕೆರೆಗಳ ಅಭಿವೃದ್ಧಿಗೆ ನಗರಸಭೆ ಆಡಳಿತ ಮುಂದಾಗಿದೆ. 
ಪೌರಾಯುಕ್ತ ಮನೋಹರ್ ಕೆರೆಗಳ ಅಭಿವೃದ್ಧಿಗೆ ಇಚ್ಛಾಶಕ್ತಿ ಹೊಂದಿದ್ದು, ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ತಾಲೂಕು ಆಡಳಿತದ ನೆರವಿನೊಂದಿಗೆ ಬೌಂಡರಿ ಗುರುತಿಸಿ ಸ್ವಚ್ಛತಾ ಕಾರ್ಯ ನಡೆಸಿ ಅಭಿವೃದ್ದಿಗೆ ಸಂಬಂಧಪಟ್ಟಂತೆ ಯೋಜನಾ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. 
ಈ ಹಿನ್ನಲೆಯಲ್ಲಿ ಇದೀಗ ನಗರದ ಹೊಸಬುಳ್ಳಾಪುರ ಸರ್ವೆ ನಂ.೭೨ರ ಸರ್ಕಾರಿ ಚಿಕ್ಕಯ್ಯನ ಕೆರೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸುಮಾರು ೨೫ ವರ್ಷಗಳಿಂದ ಯಾವುದೇ ರೀತಿ ಅಭಿವೃದ್ಧಿ ಕಾಣದ ಕೆರೆಯನ್ನು ಜೆಸಿಬಿ ಯಂತ್ರ ಬಳಸಿ  ಸ್ವಚ್ಛತೆ ನಡೆಸಲಾಯಿತು. ಪರಿಸರ ಅಭಿಯಂತರ ರುದ್ರೇಗೌಡ, ಇಂಜಿನಿಯರ್ ಎಸ್.ಆರ್ ಸತೀಶ್, ಸ್ಥಳೀಯ ರೈತ ಮುಖಂಡ ಪ್ರಸನ್ನ ಹಾಗೂ ಇನ್ನಿತರರು ಉಪಸ್ಥಿತರಿದ್ದರು. 
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಪೌರಾಯುಕ್ತ ಮನೋಹರ್, ಎಲ್ಲಾ ಕೆರೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ಜೊತೆಗೆ ದನಗಾಹಿಗಳಿಗೆ ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು. ಈಗಾಗಲೇ ಈ ಸಂಬಂಧ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಯೋಜನಾ ವರದಿ ಸಿದ್ದಪಡಿಸಲಾಗುವುದು ಎಂದರು. 
ಹೋರಾಟಕ್ಕೆ ಸಂದ ಫಲ: 
ತಾಲೂಕಿನಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟದಂತೆ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ನಗರದ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ಪೌರಾಯುಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ, ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್ ಪೌರಾಯುಕ್ತರು ದಿಟ್ಟ ಕ್ರಮ ತೆಗೆದುಕೊಂಡು ತಾಲೂಕು ಆಡಳಿತದ ನೆರವಿನೊಂದಿಗೆ ಬೌಂಡರಿ ನಿಗದಿಪಡಿಸುವ ಹಾಗೂ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತಿರುವುದು ಇದುವರೆಗೂ ನಡೆಸಿರುವ ಹೋರಾಟಕ್ಕೆ ಸಂದ ಫಲವಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಕೆರೆಗಳನ್ನು ಇದೆ ರೀತಿ ಅಭಿವೃದ್ಧಿಗೊಳಿಸಲು ತಾಲೂಕು ಆಡಳಿತ ಮುಂದಾಬೇಕೆಂದರು. 
ಪ್ರಮುಖರಾದ ರಮಾವೆಂಕಟೇಶ್, ಶೈಲಜಾ ರಾಮಕೃಷ್ಣ, ಆರ್. ಮುಕುಂದಯ್ಯ, ಗ್ಸೇವಿಯರ್, ಭವಾನಿಶಂಕರ್ ಸೇರಿದಂತೆ ಇನ್ನಿತರರು ಪೌರಾಯುಕ್ತರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನಟರಾಜ್ ನಿಧನ

ನಟರಾಜ್ 
ಭದ್ರಾವತಿ, ಜೂ. ೨೯: ನಗರದ ಜನ್ನಾಪುರ ಲಿಂಗಾಯಿತರ ಬೀದಿ ನಿವಾಸಿ, ಹಳೇನಗರದ ಟಿಎಂಎಇಎಸ್ ಕೈಗಾರಿಕಾ ತರಬೇತಿ ಕೇಂದ್ರದ ಕಿರಿಯ ತರಬೇತಿ ಅಧಿಕಾರಿ ಎಂ. ನಟರಾಜ್(೫೪) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
  ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನ ವನದಲ್ಲಿ ವಾಯು ವಿಹಾರಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಪತ್ನಿ ಹಾಗೂ ಸಹೋದರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಐಟಿಐ ಪ್ರಾಂಶುಪಾಲ ದಾನಪ್ಪ ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ನಗರದ ಇನ್ನಿತರರು ಗಣ್ಯರು ಸಂತಾಪ ಸೂಚಿಸಿದ್ದಾರೆ. 

Sunday, June 28, 2020

ವೈದ್ಯರು, ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭ

ಭದ್ರಾವತಿ, ಜೂ. ೨೮: ಕೊರೋನಾ ವೈರಸ್ ಪರಿಣಾಮ ಪ್ರಸ್ತುತ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯಲ್ಲೂ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಜೂ.೨೯ರಂದು ಮಧ್ಯಾಹ್ನ ೩.೩೦ಕ್ಕೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. 
ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ನಗರದ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾದ ಹಿನ್ನಲೆಯಲ್ಲಿ ಕಾರಣಕರ್ತರಾದವರಿಗೂ ಸಹ ಅಭಿನಂದನೆ ನಡೆಯಲಿದ್ದು, ಸಮಾರಂಭ ಯಶಸ್ವಿಗೊಳ್ಳುವಂತೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ ಮಲ್ಲಪ್ಪ ಕೋರಿದ್ದಾರೆ. 

ರೋಟರಿ ಕ್ಲಬ್ ವತಿಯಿಂದ ಸಂಚಾರಿ ಸೂಚಕ, ನಾಮಫಲಕ ವಿತರಣೆ

ಭದ್ರಾವತಿಯಲ್ಲಿ ರೋಟರಿ ಕ್ಲಬ್ ವತಿಯಿಂದ ಸಂಚಾರಿ ಸೂಚಕ ಹಾಗೂ ನಾಮಫಲಕಗಳನ್ನು ನಗರದ ರಂಗಪ್ಪ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. 
ಭದ್ರಾವತಿ, ಜೂ. ೨೮: ಕೊರೋನಾ ವೈರಸ್ ಸಂಕಷ್ಟಗಳಿಗೆ ಸ್ಪಂದಿಸುವ ಜೊತೆಗೆ ಸೇವಾ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ರೋಟರಿ ಕ್ಲಬ್ ಈ ಬಾರಿ ನಗರದ ವಿವಿಧೆಡೆ ಸಂಚಾರಿ ಸೂಚಕ ಹಾಗೂ ನಾಮಫಲಕಗಳನ್ನು ಕೊಡುಗೆಯಾಗಿ ನೀಡಿದೆ. 
ಜಿಲ್ಲಾ ಗವರ್ನರ್ ಬಿ.ಎನ್ ರಮೇಶ್‌ರವರು ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ ಹಿನ್ನಲೆಯಲ್ಲಿ ಸಂಚಾರಿ ಪೊಲೀಸರಿಗೆ ನೆರವಾಗುವ ಉದ್ದೇಶದೊಂದಿಗೆ ಸಂಚಾರಿ ಸೂಚಕ ಹಾಗೂ ನಾಮಫಲಕಗಳನ್ನು ನಗರದ ರಂಗಪ್ಪ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು. 
  ತಾಲೂಕಿನ ಗ್ರಾಮೀಣಾ ಭಾಗದ ಮಕ್ಕಳ ನೆರವಿಗೆ ಮುಂದಾಗುವ ಉದ್ದೇಶದೊಂದಿಗೆ ಕೊಮಾರನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕ್ಲಬ್ ವತಿಯಿಂದ ಅಗತ್ಯವಿರುವ ಅಲ್ಮೇರಾ  ಕೊಡುಗೆಯಾಗಿ ನೀಡಲಾಯಿತು. 
ಸಹಾಯಕ ಜಿಲ್ಲಾ ಗವರ್ನರ್ ಮುರುಳಿ, ಕ್ಲಬ್ ಅಧ್ಯಕ್ಷ ತೀರ್ಥಯ್ಯ, ಕಾರ್ಯದರ್ಶಿ ಅಡವೀಶಯ್ಯ,  ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯ್ಕ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ಕ್ಲಬ್‌ನ ಪ್ರಮುಖವಾರ ಕೆ. ನಾಗರಾಜ್, ಕೂಡ್ಲಿಗೆರೆ ಹಾಲೇಶ್, ಡಿ. ಪ್ರಭಾಕರ ಬೀರಯ್ಯ, ಸುಂದರ್ ಬಾಬು, ಪಿ.ಸಿ ಜೈನ್, ರಾಘವೇಂದ್ರ ಉಪಾಧ್ಯಾಯ, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Saturday, June 27, 2020

ಕಸ ಸಂಗ್ರಹಕ್ಕೆ ಉಚಿತ ಬುಟ್ಟಿ ವಿತರಣೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಹೊಸಮನೆ ಭೋವಿ ಕಾಲೋನಿ ಕೊಳಚೆ ಪ್ರದೇಶದ ಸುಮಾರು ೩೪೮ ಮನೆಗಳಿಗೆ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಉಚಿತವಾಗಿ ಕಸದ ಬುಟ್ಟಿಗಳನ್ನು(ಡಸ್ಟ್ ಬಿನ್) ವಿತರಿಸಲಾಯಿತು. 
ಭದ್ರಾವತಿ, ಜೂ. ೨೭:  ನಗರಸಭೆ ವ್ಯಾಪ್ತಿಯ ಹೊಸಮನೆ ಭೋವಿ ಕಾಲೋನಿ ಕೊಳಚೆ ಪ್ರದೇಶದ ಸುಮಾರು ೩೪೮ ಮನೆಗಳಿಗೆ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಉಚಿತವಾಗಿ ಕಸದ ಬುಟ್ಟಿಗಳನ್ನು(ಡಸ್ಟ್ ಬಿನ್) ವಿತರಿಸಲಾಯಿತು. 
ಮನೆಯಲ್ಲಿಯೇ ಒಣ ಕಸ ಹಾಗೂ ಹಸಿ ಕಸ ಬೇರ್ಪಡಿಸಿ ಮನೆ ಬಾಗಿಲಿಗೆ ಬರುವ ಕಸದ ಗಾಡಿಯವರಿಗೆ ನೀಡಬೇಕು. ಎಲ್ಲೆಂದರಲ್ಲಿ ಕಸ ಎಸೆಯದೆ ಪರಿಸರದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಲಾಯಿತು. ಹಸಿರು ಹಾಗೂ ಕೆಂಪು ಬಣ್ಣದ ಎರಡು ಕಸದ ಬುಟ್ಟಿಗಳನ್ನು ಪ್ರತಿಯೊಂದು ಮನೆಗಳಿಗೂ ವಿತರಿಸಲಾಯಿತು. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಇಂಜಿನಿಯರ್ ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ ನಾಗರಾಜ್, ಅಣ್ಣೋಜಿರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಬೃಹತ್ ರಕ್ತದಾನ ಶಿಬಿರ : ೬೯ ಮಂದಿ ರಕ್ತದಾನ

ಭದ್ರಾವತಿ ಹೊಸಮನೆ ಮುಖ್ಯ ರಸ್ತೆ, ಸಂತೆ ಮೈದಾನ ಬಳಿ ಇರುವ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. 
ಭದ್ರಾವತಿ, ಜೂ. ೨೭: ನಗರದ ಹೊಸಮನೆ ಮುಖ್ಯ ರಸ್ತೆ, ಸಂತೆ ಮೈದಾನ ಬಳಿ ಇರುವ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ೬೯ ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.
ಶಿಬಿರವನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ ಹರಿಕೃಷ್ಣ  ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿ ಕೆ. ಪ್ರಸಾದ್ ಮತ್ತು ಸಂಸ್ಥೆಯ ಅಧ್ಯಕ್ಷ ಜಿ. ಅನಂದಕುಮಾರ್ ಉದ್ಘಾಟಿಸಿದರು. 
ಬಿಜೆಪಿ ಪಕ್ಷದ ಹಿರಿಯ ಮುಖಂಡ ವಿ. ಕದಿರೇಶ್, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಮಂಗೋಟೆ ರುದ್ರೇಶ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ನಗರಸಭಾ ಸದಸ್ಯರಾದ ಮಣಿ, ಭೈರಪ್ಪ ಗೌಡ, ಸುನಿಲ್ ಗಾಯಕ್ವಾಡ್ ಹಾಗೂ ಸಂಸ್ಥೆಯ ಪದಾಧಿಕಾರಿಗಳಾದ ಬಿ.ಎಸ್ ಶ್ರೀನಾಥ್, ಕೆ ಕುಮಾರ್, ಅರುಣ್, ಮಂಜುನಾಥ್ ಕೊಹ್ಲಿ, ಆದರ್ಶ, ಶಿವು ಮದಕರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಹೊಸಮನೆ ಮುಖ್ಯ ರಸ್ತೆ, ಸಂತೆ ಮೈದಾನ ಬಳಿ ಇರುವ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಕೊರೋನ ವಾರಿಯರ್ಸ್ ಗಳಾದ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ರಾಜ್ಯ ಸರ್ಕಾರದಿಂದ ನಗರದ ನ್ಯಾಯಾಲಯಕ್ಕೆ ಎಜಿಪಿಯಾಗಿ ನಿಯುಕ್ತಿಗೊಂಡ ಜೆ. ಮೋಹನ್‌ರವರನ್ನು  ಹಾಗೂ ಕೊರೋನ ವಾರಿಯರ್ಸ್ ಗಳಾದ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕೆಂಪೇಗೌಡರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು. 
ಭದ್ರಾವತಿ, ಜೂ. ೨೭: ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಕ್ಕೂ ಮಾದರಿ ವ್ಯಕ್ತಿಯಾಗಿದ್ದು, ಅವರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಸಮಾಜದ ಎಲ್ಲಾ ಆದರ್ಶ ವ್ಯಕ್ತಿಗಳ ವಿಚಾರಧಾರೆಗಳನ್ನು ಅರಿತುಕೊಂಡು ಮುನ್ನಡೆದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಒಕ್ಕಲಿಗರ ಸಮುದಾಯ ತನ್ನದೇ ಆದ ಕೊಡುಗೆಯನ್ನು ಈ ನಾಡಿಗೆ ನೀಡಿದೆ. ನಗರದಲ್ಲಿ ಈ ಸಮುದಾಯಕ್ಕೆ ಅಗತ್ಯವಿರುವ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು. 
ಚುಂಚಾದ್ರಿ ಮಹಿಳಾ ವೇದಿಕೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಹಲವು ಯೋಜನೆಗಳ ರೂವಾರಿಗಳಾಗಿದ್ದಾರೆ. ಅವರು ಇಂದಿಗೂ ಸಮಾಜಕ್ಕೆ ಸ್ಪೂರ್ತಿದಾಯಕ ಆದರ್ಶ ವ್ಯಕ್ತಿಗಳಾಗಿದ್ದು, ಇಂದಿನ ಯುವ ಪೀಳಿಗೆ ಅವರ ದಾರಿಯಲ್ಲಿ ಸಾಗುವಂತಾಗಬೇಕೆಂದರು. 
ಒಕ್ಕಲಿಗರ ಸಂಘದ ಕಾರ್ಯದರ್ಶಿ ಪ್ರಶಾಂತ್ ಮಾತನಾಡಿ,  ಒಕ್ಕಲಿಗರು ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮುದಾಯ ಭವನದ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಶಾಸಕರು ಸರ್ಕಾರದಿಂದ ಜಾಗ ಮಂಜೂರಾತಿ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು. 
ತಹಸೀಲ್ದಾರ್ ಶಿವಕುಮಾರ್, ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ರಾಮನಗರ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ಕಂದಾಯಾಧಿಕಾರಿ ಪ್ರಶಾಂತ್, ಒಕ್ಕಲಿಗ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಸಮಾಜದ ಪ್ರಮುಖರಾದ ಎ.ಟಿ ರವಿ, ಲೋಹಿತಾ ನಂಜಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.   


ಟಿ. ವಿಶ್ವನಾಥ ನಿಧನ

ಟಿ. ವಿಶ್ವನಾಥ
ಭದ್ರಾವತಿ, ಜೂ. ೨೭: ನಗರದ ಭದ್ರಾ ಕಾಲೋನಿ ನಿವಾಸಿ ಟಿ. ವಿಶ್ವನಾಥ(೬೦) ಶುಕ್ರವಾರ ರಾತ್ರಿ ನಿಧನ ಹೊಂದಿದರು.
ಏಕಲವ್ಯ ಪ್ರಶಸ್ತಿ ವಿಜೇತೆ, ಕ್ರೀಡಾಪಟು ನೇತ್ರಾವತಿ ಸೇರಿದಂತೆ ಇಬ್ಬರು ಪುತ್ರಿ, ಓರ್ವ ಪುತ್ರ, ಇಬ್ಬರು ಸಹೋದರಿ ಹಾಗೂ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಭದ್ರಾ ಕಾಲೋನಿ ತೋಟದಲ್ಲಿ ಶನಿವಾರ ನೆರವೇರಿತು.

Friday, June 26, 2020

ಅಗರದಹಳ್ಳಿ ಕೆರೆಗಳ ಅಳತೆ ಕಾರ್ಯ ತಕ್ಷಣ ಸ್ಥಗಿತಗೊಳಿಸಿ

ತಹಸೀಲ್ದಾರ್ ವಿರುದ್ಧ ಡಿಎಸ್‌ಎಸ್ ಪ್ರತಿಭಟನೆ 

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ, ಅಗರದಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ವತಿಯಿಂದ ಕೈಗೊಂಡಿರುವ ಕೆರೆಗಳ ಅಳತೆ ಕಾರ್ಯ ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಗರದಹಳ್ಳಿ ಕ್ಯಾಂಪ್ ಕೆರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೨೬: ತಾಲೂಕಿನ ಹೊಳೆಹೊನ್ನೂರು ಹೋಬಳಿ, ಅಗರದಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ವತಿಯಿಂದ ಕೈಗೊಂಡಿರುವ ಕೆರೆಗಳ ಅಳತೆ ಕಾರ್ಯ ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಗರದಹಳ್ಳಿ ಕ್ಯಾಂಪ್ ಕೆರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. 
ಗ್ರಾಮದಲ್ಲಿ ಸರ್ವೆ ನಂ.೩, ೪೯/ಬಿ, ೫೨, ೫೩, ೫೪, ೫೫, ೫೬, ೬೪, ೬೫ ಮತ್ತು ೭೨ರಲ್ಲಿ ಒಟ್ಟು ೯೮ ಎಕರೆ ವಿಸ್ತೀರ್ಣದಲ್ಲಿ ೩ ಕೆರೆಗಳಿದ್ದು, ಈ ಪೈಕಿ ಪರಿಶಿಷ್ಟ ಜಾತಿ, ಪಂಗಡದ ಬಡ ಕುಟುಂಬಗಳು ವಾಸಿಸುತ್ತಿರುವ ಸರ್ವೆ ನಂ. ೪೯/ಬಿ, ೫೨/೨, ೫೫, ೫೬/ಎ ಮತ್ತು ೬೯ರ ವ್ಯಾಪ್ತಿಯ ಕೆರೆಗಳನ್ನು ಮಾತ್ರ ಅಳತೆ ಮಾಡಲಾಗುತ್ತಿದೆ. ಹಣವಂತರಿಗೆ, ಬಲಾಢ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸಲು ತಾಲೂಕು ಆಡಳಿತ ಅಳತೆ ಕಾರ್ಯ ಕೈಗೊಳ್ಳುತ್ತಿದೆ ಎಂದು ಆರೋಪಿಸಲಾಯಿತು. 
ತಹಸೀಲ್ದಾರ್‌ರವರು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಅಳತೆ ಕಾರ್ಯ ಕೈಗೊಳ್ಳುತ್ತಿರುವುದಾಗಿ ದಲಿತ ಸಂಘರ್ಷ ಸಮಿತಿಗೆ ತಿಳಿಸಿದ್ದು, ಆದರೆ ಜಿಲ್ಲಾಧಿಕಾರಿಗಳು ಯಾವುದೇ ಕೆಲಸ ಕೈಗೊಳ್ಳುವಾಗ ಲಿಖಿತ ಆದೇಶ ನೀಡುತ್ತಾರೆ. ಇದನ್ನು ಗಮನಿಸಿದಾಗ ತಹಸೀಲ್ದಾರ್‌ರವರು ಯಾವುದೋ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಗಳ ಹೆಸರಿಗೆ ಮಸಿ ಬಳಿಯಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಳತೆ ಕಾರ್ಯ ಕೈಗೊಳ್ಳುವುದಾದರೆ ಒಟ್ಟು ೯೮ ಎಕರೆ ಕೆರೆ ಅಳತೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಯಿತು. 
ತಾಲೂಕು ಸಂಚಾಲಕ ವಿ. ವಿನೋದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಿಲ್ಲಾ ಸಂಘಟನಾ ಸಂಚಾಲಕರಾದ ಏಳುಕೋಟಿ, ಏಳುಮಲೈ, ಸುವರ್ಣಮ್ಮ, ತಾಲೂಕು ಸಂಘಟನಾ ಸಂಚಾಲಕರಾದ ವಸಂತಕುಮಾರ್, ಬಾಷ, ರವಿನಾಯ್ಕ, ಗುಣಶೇಖರ್, ಸುಧಾ, ಮಂಜಪ್ಪ, ಸೀನಾ, ಬಾಲು, ಮಲ್ಲೇಶ್, ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಪೌರಾಯುಕ್ತರಿಗೆ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್‌ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೨೬: ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್‌ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು. 
ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಸ್ಥಳೀಯ ನಿವಾಸಿಗಳ ಸಹಿ ಸಂಗ್ರಹಿಸಿ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಪೌರಾಯುಕ್ತರು ಮುಂದಿನ ಒಂದು ವಾರದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು. ಮಹಿಳಾ ಮುನ್ನಡೆ ತಾಲೂಕು ಸಂಚಾಲಕಿ ಎನ್. ನಾಗವೇಣಿ  ಸದಸ್ಯರಾದ ಗೌರಿ, ಲಕ್ಷ್ಮಿ ಇನ್ನಿತರರು ಉಪಸ್ಥಿತರಿದ್ದರು.

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ, ಮನವಿ 

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಕ್ರಮವಾಗಿ ಸರ್ಕಾರಿ ಉದ್ಯೋಗ ಪಡೆದು ಸರ್ಕಾರಕ್ಕೆ ವಂಚಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭದ್ರಾವತಿ ತಾಲೂಕಿನ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯದ ಮುಂಭಾಗ ಶುಕ್ರವಾರ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೨೬:  ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಕ್ರಮವಾಗಿ ಸರ್ಕಾರಿ ಉದ್ಯೋಗ ಪಡೆದು ಸರ್ಕಾರಕ್ಕೆ ವಂಚಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕಿನ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯದ ಮುಂಭಾಗ ಶುಕ್ರವಾರ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 
ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಕುಲ ಸಚಿವರಾಗಿರುವ ಡಿ.ಎ ಗಾಯತ್ರಿ ಹಾಗೂ ಎಂ. ಸೀತಾರಾಮ ಹಾಗೂ ರಾಜ್ಯಶಾಸ್ತ್ರದ ವಿಭಾಗದ ಎ. ಷಣ್ಮುಗಂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ಇದೀಗ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯಾಲಯ ಆದೇಶದಿಂದ ಛೀಮಾರಿ ಹಾಕಿದಂತಾಗಿದೆ. ಆದರೆ ಇಂದಿನ ಕುಲಪತಿಗಳಾಗಿರುವ ಪ್ರೊ. ಬಿ.ಪಿ ವೀರಭದ್ರಪ್ಪ ತಪ್ಪಿತಸ್ಥರ ವಿರುದ್ಧ ಅಮಾನತ್ತು ಅಥವಾ ಕಾನೂನು ರೀತಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ವಹಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆಂದು ಆರೋಪಿಸಲಾಯಿತು. 
ಈ ಹಿಂದೆ ವಿಶ್ವ ವಿದ್ಯಾಲಯದಲ್ಲಿ ಪರೀಕ್ಷಾಂಗ ಕುಲಸಚಿವರಾಗಿದ್ದ ಪ್ರೊ. ಬೋಜನಾಯ್ಕರವರು ೧.೨೭ ಕೋ. ರು. ನೇರವಾಗಿ ಲಪಟಾಯಿಸಿದ್ದು, ಈ ಸಂಬಂಧ ಅಗತ್ಯ ದಾಖಲೆಯೊಂದಿಗೆ ಪ್ರಶ್ನಿಸಿ ದೂರು ಸಲ್ಲಿಸಿದ್ದರೂ ಸಹ ಪರಿಶೀಲಿಸದೆ, ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. 
ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಜೊತೆಗೆ ನ್ಯಾಯಾಲಯದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಲಾಯಿತು. 
ವೇದಿಕೆ ರಾಜ್ಯಾಧ್ಯಕ್ಷ ಎಸ್.ಎಸ್ ಮಂಜುನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಗೌರವಾಧ್ಯಕ್ಷ ತಿಮ್ಲಾಪುರ ಲೋಕೇಶ್, ರಾಜ್ಯ ಉಪಾಧ್ಯಕ್ಷ ಎನ್.ಪಿ ವೆಂಕಟೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಕೆ ಹನುಮಂತಪ್ಪ ಮಂಗೋಟೆ ಮತ್ತು ಸಂಘಟನಾ ಕಾರ್ಯದರ್ಶಿ ಈ. ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಭದ್ರಾವತಿ, ಜೂ. ೨೬: ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು,  ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಮಂಜೂರಾತಿಯಾದ ರಸ್ತೆ, ಚರಂಡಿ ಕಾಮಗಾರಿಗಳು ಈಗಾಗಲೇ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಪ್ರಗತಿಯಲ್ಲಿವೆ. 
ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್, ಗ್ರಾಮಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಜಯರಾಮ್, ಮಂಜು, ಮುಖಂಡರಾದ ಸುದೀಪ್, ಗೋಪಾಲ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೪೦ ಲಕ್ಷ ರು. ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು ೪೦ ಲಕ್ಷ ರು. ವೆಚ್ಚದ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಭದ್ರಾವತಿ, ಜೂ. ೨೬: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸುಮಾರು ೪೦ ಲಕ್ಷ ರು. ವೆಚ್ಚದ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಬಹಳ ವರ್ಷಗಳಿಂದ ಸ್ವಂತ ಕಟ್ಟಡವಿಲ್ಲದೆ ಕನಕನಗರದ ಖಾಸಗಿ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಗೆ ಇದೀಗ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ಥಳವಕಾಶ ಕಲ್ಪಿಸಲಾಗಿದ್ದು, ನೂತನ ಕಟ್ಟಡ ಶೀಘ್ರದಲ್ಲಿಯೇ ನಿರ್ಮಾಣಗೊಳ್ಳಲಿದೆ. 
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಕಾರ್ಯದರ್ಶಿ ಸತೀಶ್ ಮತ್ತು ನಿರ್ದೇಶಕರು ಹಾಗೂ ತೂಕ ಮತ್ತು ಮಾಪನ ಶಾಸ್ತ್ರ ನಿರೀಕ್ಷಕರ ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. 

Thursday, June 25, 2020

ಲಾರಿ ಚಾಲಕನಿಗೂ ಕೊರೋನಾ ವೈರಸ್ : ಹಳೇನಗರ ಭಾಗದಲ್ಲಿ ಆತಂಕ

ಭದ್ರಾವತಿ, ಜೂ. ೨೫: ಹಳೇನಗರದ ಬಸವೇಶ್ವರ ವೃತ್ತದ ಉಪ್ಪಾರರ ಬೀದಿ ನಿವಾಸಿ, ಲಾರಿ ಚಾಲಕರೊಬ್ಬರಿಗೆ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಹೆಚ್ಚಾಗಿದ್ದು, ಗುರುವಾರ ಶಿವಮೊಗ್ಗ ಮೆಗ್ಗಾನ್ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಜೂ.೧೯ರಂದು ಚಾಲಕ ತುಮಕೂರಿಗೆ ಪ್ರಯಾಣ ಬೆಳೆಸಿದ್ದು, ೨೧ರಂದು ನಗರಕ್ಕೆ ಹಿಂದಿರುಗಿದ್ದಾರೆ. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾಗ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋವಿಡ್-೧೯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನಲಾಗಿದೆ. 
ನಗರಸಭೆ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಚಾಲಕ ವಾಸವಿದ್ದ ಮನೆಯ ಸುತ್ತಮುತ್ತ ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್‌ಮೆಂಟ್ ವಲಯವಾಗಿಸಿದ್ದು, ಮುಂದಿನ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ಹಿಂದೆ ಚನ್ನಗಿರಿ ರಸ್ತೆಯಲ್ಲಿ ಮಹಿಳೆಯೊಬ್ಬರಲ್ಲಿ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ೪-೫ ದಿನಗಳ ವರೆಗೆ ರಂಗಪ್ಪ ವೃತ್ತದಿಂದ ಹೊಳೆಹೊನ್ನೂರು ವೃತ್ತದ ವರೆಗೆ ಸೀಲ್‌ಡೌನ್ ಘೋಷಿಸಲಾಗಿತ್ತು. 

ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಕೊರೋನಾ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಭಿನಂದಿಸಲಾಯಿತು. 
ಭದ್ರಾವತಿ, ಜೂ. ೨೫: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ  ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಗುರುವಾರ ಅಭಿನಂದಿಸಲಾಯಿತು. 
ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್‌ಗಳ ಕರ್ತವ್ಯವನ್ನು ಶ್ಲಾಘಿಸಿ ಅಭಿನಂದಿಸುವ ಜೊತೆಗೆ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಿಲಿ ಸಲ್ಲಿಸಿ ಗೌರವ ಸೂಚಿಸಲಾಯಿತು. 
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಆರ್. ಕವಿತಾ, ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ಅಧ್ಯಕ್ಷೆ ಶಿವಮ್ಮ ಶ್ರಿನಿವಾಸ್, ಉಪಾಧ್ಯಕ್ಷೆ ಧನಲಕ್ಷ್ಮಿ ರಾಮಣ್ಣ, ಲಾಬ್ ಟೆಕ್ನಿಷಿಯನ್ ಸಚಿನ್ ಸೇರಿದಂತೆ ಟ್ರಸ್ಟ್ ಮಹಿಳಾ ಘಟಕದ ೨೧ ಮಂದಿ ಪದಾಧಿಕಾರಿಗಳು ಉಪಸ್ಥಿತರಿದ್ದರು. 
ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಸುಮಾರು ೨೫ಕ್ಕೂ ಹೆಚ್ಚು ಮಂದಿಯನ್ನು ಅಭಿನಂದಿಸಲಾಯಿತು. 

೪೦೦೧ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರು

ಭದ್ರಾವತಿ ನ್ಯೂಟೌನ್ ಸರ್ಕಾರಿ ರಜಿತ ಮಹೋತ್ಸವ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಭದ್ರಾವತಿ, ಜೂ. ೨೫: ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನವಾದ ಗುರುವಾರ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳೊಂದಿಗೆ ಕಳೆದ ಸುಮಾರು ೨ ತಿಂಗಳಿನಿಂದ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ಇನ್ನಿತರ ಇಲಾಖೆಗಳ ಸಹಕಾರದೊಂದಿಗೆ ಶಿಕ್ಷಣ ಇಲಾಖೆ ನಿರಂತರವಾಗಿ ಸಿದ್ದತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿತ್ತು. ಇದರ ಪರಿಣಾಮ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿದೆ.
ಪತ್ರಿಕೆಯೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಈ ಬಾರಿ ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಹಾಜರಿದ್ದು, ೧೭೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಳಿದಂತೆ ೨ ವಿದ್ಯಾರ್ಥಿಗಳು ಕಂಟೈನ್‌ಮೆಂಟ್ ಪ್ರದೇಶಗಳಿಂದ ಬಂದಿದ್ದು,  ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೭೭ ವಲಸೆ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.  ೧೫ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದರು.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಥರ್ಮೋ ಸ್ಕ್ರೀನಿಂಗ್ ಯಂತ್ರದ ಮೂಲಕ ಆರೋಗ್ಯ ತಪಾಸಣೆ ನಡೆಸಲಾಯಿತು. ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.

ಆ.೨೦ ದೇವರಾಜ ಅರಸು ಜನ್ಮದಿನದಂದು ಹಕ್ಕು ಪತ್ರ ವಿತರಣೆ ಮಾಡಿ : ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗದ ನೇತಾರ ಡಿ. ದೇವರಾಜ ಅರಸುರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ  ಆ. ೨೦ರಂದು ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಗುರುವಾರ ಭದ್ರಾವತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೨೫: ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ಎರಡು ದಶಕಗಳ ನಂತರ ನಿವೇಶನರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಸಿದ್ದತೆಗಳು ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗದ ನೇತಾರ ಡಿ. ದೇವರಾಜ ಅರಸುರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ  ಆ. ೨೦ರಂದು ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು. 
ತಾವು ಶಾಸಕರಾಗಿ ಆಯ್ಕೆಯಾದ ನಂತರ ನಿರಂತರ ಪ್ರಯತ್ನದ ಫಲವಾಗಿ ನಿವೇಶನರಹಿತರಿಂದ ನಗರಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ್ದು, ದೀನದಲಿತರು, ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಜೀವನ ನಡೆಸುತ್ತಿರುವವರು ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳ ವಿತರಣೆಗೆ  ಕಾತರದಿಂದ ಎದುರು ನೋಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ.೨೦ರಂದು ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. 
ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಮನವಿ: 
ನಗರಸಭೆ ಬೆಳ್ಳಿ ಮಹೋಹತ್ಸವ ಆಚರಣೆಯ ಸವಿನೆನಪಿಗಾಗಿ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ನಗರಸಭೆ ಖಾಲಿ ನಿವೇಶನದಲ್ಲಿ ಸುಮಾರು ೨ ಕೋ. ರೂ. ವೆಚ್ಚದ ಸುಸಜ್ಜಿತವಾದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿ ಸಹಕಾರ ನೀಡಬೇಕು. 
ಈಗಾಗಲೇ ಈ ಸಂಬಂಧ ಡಿಸೆಂಬರ್ ೨೧, ೨೦೧೯ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದ್ದು,  ಈ ಹಿನ್ನಲೆಯಲ್ಲಿ ಭವನ ನಿರ್ಮಾಣಕ್ಕೆ ಮುಂದಾಬೇಕೆಂದು ಮನವಿ ಮಾಡಲಾಯಿತು.  
ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಕಾರ್ಯಾಧ್ಯಕ್ಷೆ ರಮಾವೆಂಕಟೇಶ್, ಗೀತಾ ಶಿವಕುಮಾರ್, ಭಾಗ್ಯಲಕ್ಷ್ಮಿ ಬಸವರಾಜು, ದೇವಿಕಾ ನಾಗರಾಜ್, ಶೈಲಜಾ ರಾಮಕೃಷ್ಣ, ಆರ್. ಮುಕುಂದಯ್ಯ ಮತ್ತು ಜೇವಿಯರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


Wednesday, June 24, 2020

ಸಿಂಗನಮನೆ ಗ್ರಾ.ಪಂ. ವತಿಯಿಂದ ಶಾಲೆಗಳಿಗೆ ಸ್ಯಾನಿಟೈಸರ್

ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ, ವಸತಿ ನಿಲಯಗಳಿಗೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಕೈಗೊಳ್ಳಲಾಯಿತು.
ಭದ್ರಾವತಿ, ಜೂ. ೨೪: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗುರುವಾರದಿಂದ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಹಾಗೂ ವಸತಿ ನಿಲಯಗಳಿಗೆ ಪಂಚಾಯಿತಿ ವತಿಯಿಂದ ಕೊರೋನಾ ವೈರಸ್ ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಕೈಗೊಳ್ಳಲಾಯಿತು. 
ಗ್ರಾಮೀಣ ಭಾಗದಲ್ಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆಯಾಗದೆ ಸಾರಿಗೆ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ವತಿಯಿಂದ ಈಗಾಗಲೇ ಕೈಗೊಳ್ಳಲಾಗಿದೆ. ಅಲ್ಲದೆ ಆರೋಗ್ಯ ಮತ್ತು ಪೊಲೀಸ್ ಇಲಾಖೆ ವತಿಯಿಂದ ಸಹ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಸಿಂಗಮನೆ ಗ್ರಾಮ ಪಂಚಾಯಿತಿ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. 
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ಉಮಾ, ಸದಸ್ಯರಾದ ಟಿ.ಡಿ ಶಶಿಕುಮಾರ್, ಜೆ. ಸುಜಾತ, ಅಭಿವೃದ್ಧಿ ಅಧಿಕಾರಿ ಸೋಮಶೇಖರ್, ಕಾರ್ಯದರ್ಶಿ ರೇವಣ್ಣ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಅರಕೆರೆ ಗ್ರಾ.ಪಂ. ನೀರುಗಂಟಿ ನಿವೃತ್ತಿ : ಬೀಳ್ಕೊಡುಗೆ

ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಜೆ. ಬಸವರಾಜಪ್ಪನವರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.  
ಭದ್ರಾವತಿ, ಜೂ. ೨೪: ತಾಲೂಕಿನ ಅರಕೆರೆ ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತಿದ್ದ. ಜೆ. ಬಸವರಾಜಪ್ಪ ವಯೋನಿವೃತ್ತಿ ಹೊಂದಿದರು. 
ಕೋಡಿಹೊಸೂರು ಗ್ರಾಮದ ಜೆ. ಬಸವರಾಜಪ್ಪನವರ ಕರ್ತವ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷ ಚಂದ್ರಪ್ಪ, ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ, ಭೈರೇಶ್‌ಕುಮಾರ್, ಸದಸ್ಯ ಲಕ್ಷ್ಮೀಪತಿ ಇನ್ನಿತರ ಸದಸ್ಯರು ಮತ್ತು  ಗ್ರಾ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

ಬೃಹತ್ ರಕ್ತದಾನ ಶಿಬಿರ : ೯೪ ಯೂನಿಟ್ ರಕ್ತ ಸಂಗ್ರಹ

ಭದ್ರಾವತಿಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಕೆ ಶ್ರೀನಾಥ್ ಮಾತನಾಡಿದರು. 
ಭದ್ರಾವತಿ, ಜೂ. ೨೪: ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಒಟ್ಟು ೯೪ ಯೂನಿಟ್ ರಕ್ತ ಸಂಗ್ರಹಿಸಲಾಯಿತು. 
ಬಿ.ಕೆ ಸಂಗಮೇಶ್ವರ್ ಅಭಿಮಾನಿಗಳ ಬಳಗ, ತಾಲೂಕು ಬಿಜೆಪಿ ಯುವ ಮೋರ್ಚಾ, ಕುಂಚ ಕಲಾವಿದರ ಸಂಘ, ಕೆಎಸ್‌ಆರ್‌ಟಿಸಿ ಡಿಪೋ, ಕಾಂಗ್ರೆಸ್ ಕಾರ್ಮಿಕರ ವಿಭಾಗ, ಉಸ್ಮಾನಿಯಾ ಚಾರಿಟಬಲ್ ಟ್ರಸ್ಟ್, ಕಟ್ಟಡ ಕಾರ್ಮಿಕ ಸಂಘ, ಕೆಜಿಎನ್ ನೌಜವಾನ್ ಟ್ರಸ್ಟ್, ವೀರಶೈವ ಸಮಾಜ, ತಮಿಳು ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತನಿಧಿ ಘಟಕ ಮೆಗ್ಗಾನ್ ಆಸ್ಪತ್ರೆ ಹಾಗೂ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ. ಸೈಯದ್ ಫರೀನ್, ವೈದ್ಯೆ ಡಾ. ಪ್ರೀತಿ, ಆರೋಗ್ಯ ರಕ್ಷಾ ಸಮಿತಿಯ ಸುಂದರ್ ಬಾಬು, ನಾಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಯೋಗ ಶಾಲಾ ತಂತ್ರಜ್ಞ  ಮೋಹನ್ ಕುಮಾರ್ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ವಸಂತ ನಿರೂಪಿಸಿದರು. 

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭದ್ರಾವತಿಯಲ್ಲಿ ಸಕಲ ಸಿದ್ದತೆ : ಅಧಿಕಾರಿಗಳಿಂದ ಮರು ಪರಿಶೀಲನೆ

ಭದ್ರಾವತಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ಹಳೇನಗರ ಪೊಲೀಸ್ ಠಾಣಾಧಿಕಾರಿ ಹಾಗೂ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಶಾಂತಮ್ಮ, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. 
ಭದ್ರಾವತಿ, ಜೂ. ೨೪: ರಾಜ್ಯಾದ್ಯಂತ ಗುರುವಾರದಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಾಲೂಕಿನಲ್ಲಿ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಮತ್ತು ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯ್ಕ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ದತಾ ಕಾರ್ಯಗಳನ್ನು ಮರು ಪರಿಶೀಲನೆ ನಡೆಸಿದರು. 
ಪತ್ರಿಕೆಯೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಒಟ್ಟು ೧೮ ಖಾಸಗಿ ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಈ ಪೈಕಿ ೧೪ ಬಸ್‌ಗಳು ವಿವಿಧ ಮಾರ್ಗಗಳಲ್ಲಿ ಸಂಚರಿಸಲಿವೆ. ಉಳಿದಂತೆ ೪ ಬಸ್‌ಗಳು ಹೆಚ್ಚುವರಿಯಾಗಿ ಮೀಸಲಿಡಲಾಗಿದೆ. ೧ ಕೆಎಸ್‌ಆರ್‌ಟಿಸಿ ಬಸ್ ಸಹ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಈ ಬಸ್ ತಾಲೂಕಿನ ಬಂಡಿಗುಡ್ಡ ಮಾರ್ಗವಾಗಿ ಸಂಚರಿಸಲಿದೆ ಎಂದರು. 
ತಾಲೂಕಿನಲ್ಲಿ ಒಟ್ಟು ೧೫ ಪರೀಕ್ಷಾ ಕೇಂದ್ರಗಳಿದ್ದು, ಹೆಚ್ಚುವರಿಯಾಗಿ ೩ ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ ಈ ಹಿಂದೆ ೨೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿತ್ತು. ಇದೀಗ ೨೦ಕ್ಕೆ ಸೀಮಿತಗೊಳಿಸಲಾಗಿದೆ. ನ್ಯೂಟೌನ್ ಸೇಂಟ್ ಚಾರ್ಲ್ಸ್ ಪರೀಕ್ಷಾ ಕೇಂದ್ರ ತಾಲೂಕಿನಲ್ಲಿ ಅತಿದೊಡ್ಡ ಪರೀಕ್ಷಾ ಕೇಂದ್ರವಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಹೊಳೆಹೊನ್ನೂರಿನ ಸೇಂಟ್ ಮೇರಿಸ್ ಅತಿ ಚಿಕ್ಕ ಪರೀಕ್ಷಾ ಕೇಂದ್ರವಾಗಿದೆ ಕಡಿಮೆ ವಿದ್ಯಾರ್ಥಿಗಳನ್ನು ಒಳಗೊಂಡಿದೆ ಎಂದರು. 
        ಪರೀಕ್ಷಾ ಕೇಂದ್ರಗಳಲ್ಲಿ ಒಬ್ಬ ವಿದ್ಯಾರ್ಥಿಗೆ ೨ ಮಾಸ್ಕ್ ವಿತರಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ. ವಿವಿಧ ಸಂಘ-ಸಂಸ್ಥೆಗಳು, ದಾನಿಗಳು ನೀಡಿರುವ ಮಾಸ್ಕ್‌ಗಳನ್ನು ಆಯಾ ಕೇಂದ್ರಗಳಲ್ಲಿ ಹೆಚ್ಚುವರಿಯಾಗಿಡಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ೨ ಥರ್ಮೋ ಸ್ಕ್ರೀನಿಂಗ್ ಯಂತ್ರ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಿಸಲಾಗಿದೆ. ಅಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದರು. 
ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೈಗೊಳ್ಳಬೇಕಾಗಿರುವ ಕಾರ್ಯಗಳ ಕುರಿತು ಪುನಃ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೆ ವಿದ್ಯಾರ್ಥಿ ಕರ್ನಾಟಕ ಪರೀಕ್ಷಾ ಮಂಡಳಿ ವತಿಯಿಂದ ಜಾಗೃತಿ ಕರಪತ್ರಗಳನ್ನು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪೋಸ್ಟರ್‌ಗಳನ್ನು ವಿತರಿಸಲಾಗಿದೆ. ಎಲ್ಲಾ ಕಾರ್ಯಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವೀಕ್ಷಕರ ತಂಡ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಇದರ ಜೊತೆಗೆ ಹೊಸದಾಗಿ ‘ಬಿ’ ಗ್ರೂಪ್ ಅಧಿಕಾರಿಗಳನ್ನೊಳಗೊಂಡ ಸ್ಥಾನಿಕ ಜಾಗೃತಿ ದಳ ಸಹ ಕಾರ್ಯ ನಿರ್ವಹಿಸಲಿದೆ. ಒಟ್ಟಾರೆ ಪರೀಕ್ಷೆ ಯಶಸ್ವಿಯಾಗಿ ನಡೆಯಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು. 
ಪೊಲೀಸ್ ಉಪಾಧೀಕ್ಷರ ಸುಧಾಕರ ನಾಯ್ಕ ಮಾತನಾಡಿ, ತಾಲೂಕಿನ ೧೫ ಪರೀಕ್ಷಾ ಕೇಂದ್ರಗಳಲ್ಲಿ ತಲಾ ಇಬ್ಬರು ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದು, ಒಟ್ಟು ೩೦ ಮಂದಿಯೊಂದಿಗೆ ರೂಟ್ ಕಾರ್ಯಚರಣೆಯಲ್ಲಿ ೭ ಮಂದಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮತ್ತ ಜನದಟ್ಟಣೆ ಉಂಟಾಗದಂತೆ ಎಚ್ಚರವಹಿಸಲಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಧರಿಸಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾತ್ರ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಇತರರಿಗೆ ಪ್ರವೇಶ ನಿಬಂಧಿಸಲಾಗಿದೆ ಎಂದರು. 

Tuesday, June 23, 2020

ಮುಂಬೈಯಿಂದ ಬಂದಿದ್ದ ಮಹಿಳೆಗೆ ಕೊರೋನಾ ವೈರಸ್

ಕಾಗದನಗರದ ೬ನೇ ವಾರ್ಡಿನಲ್ಲಿ ಆತಂಕ 

ಭದ್ರಾವತಿ ಕಾಗದನಗರದ ೬ನೇ ವಾರ್ಡಿನ ಮಹಿಳೆಯೊಬ್ಬರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂಬ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ನಗರಸಭೆ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಿಳೆ ವಾಸವಿದ್ದ ಮನೆಯ ಸುತ್ತಮುತ್ತ ಸಂಚಾರ ನಿರ್ಬಂಧಿಸಿ ಕಟ್ಟೆಚ್ಚರ ಕೈಗೊಂಡಿತು. 
ಭದ್ರಾವತಿ, ಜೂ. ೨೩: ಕೆಲವು ದಿನಗಳ ಹಿಂದೆ ನಗರದ ಹೃದಯ ಭಾಗದಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ವೈರಸ್ ಪ್ರಕರಣ ಇದೀಗ ಕಾಗದನಗರಕ್ಕೂ ವಿಸ್ತರಿಸಿಕೊಂಡಿದೆ. ೬ನೇ ವಾರ್ಡಿನ ಮಹಿಳೆಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಂಗಳವಾರ ವಾರ್ಡಿನ ೩-೪ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. 
ಸ್ವಂತ ವಾಹನದಲ್ಲಿ ಮುಂಬೈ ಚಂಬುರೂಗೆ ಜೂ.೫ ರಂದು ಮಗುವಿನೊಂದಿಗೆ ಪ್ರಯಾಣ ಬೆಳೆಸಿದ್ದ ಮಹಿಳೆ ವಾಪಾಸು ರೈಲಿನ ಮೂಲಕ ಬೆಂಗಳೂರು ಮತ್ತು ಕೆ.ಆರ್ ಪೇಟೆಗೆ ತೆರಳಿ ಪುನಃ ಅಲ್ಲಿಂದ ಜೂ.೧೭ರಂದು ನಗರಕ್ಕೆ ಆಗಮಿಸಿದ್ದು, ಮೊದಲು ಜೂ.೧೮ರಂದು ನಗರದ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ.  ನಂತರ ಮಹಿಳೆ ಮತ್ತು ಮಗು ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. 
ಇಬ್ಬರ ಗಂಟಲು ಮಾದರಿಯನ್ನು ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು. ಸೋಮವಾರ ರಾತ್ರಿ ಮಹಿಳೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಮಗುವಿನಲ್ಲಿ ಯಾವುದೇ ವೈರಸ್ ಪತ್ತೆಯಾಗಿಲ್ಲ.  ಆದರೆ ಈ ಕುರಿತು ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಂಗಳವಾರ ಸಂಜೆಯಾದರೂ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ. 
ಮುನ್ನಚ್ಚರಿಕೆ ಕ್ರಮವಾಗಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ಶಿವಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಾಗದನಗರ ಪೊಲೀಸರು, ಸ್ಥಳೀಯ ಆಶಾ ಕಾರ್ಯಕರ್ತೆರು ಸೇರಿದಂತೆ ಇನ್ನಿತರನ್ನು ಒಳಗೊಂಡ ತಂಡ ಬೆಳಿಗ್ಗೆ ಮಹಿಳೆ ವಾಸವಿದ್ದ ಮನೆಯ ಸುತ್ತಾಮುತ್ತ ಪರಿಶೀಲನೆ ನಡೆಸಿತು. ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದೊಂದಿಗೆ ಸ್ಯಾನಿಟೈಸರ್ ಕೈಗೊಂಡರು. 
ಜಿಲ್ಲಾ ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರಬಿದ್ದ ನಂತರ ಸೀಲ್‌ಡೌನ್ ಘೋಷಣೆಯಾಗುವ ಎಲ್ಲಾ ಲಕ್ಷಣ ಕಂಡು ಬರುತ್ತಿದೆ.  ಸೀಲ್ ಡೌನ್ ಘೋಷಣೆಯಾದಲ್ಲಿ ಇಲ್ಲಿನ ನಿವಾಸಿಗಳಿಗೆ ಅಗತ್ಯ ಸೇವೆಗಳನ್ನು ನಗರಸಭೆ ಪೂರೈಸಲಿದೆ. 



ಜೂ.೨೪ರಂದು ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಭದ್ರಾವತಿ, ಜೂ. ೨೩: ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ರೋಟರಿ ಕ್ಲಬ್‌ಗೆ ಜೂ.೨೪ರಂದು ಜಿಲ್ಲಾ ಗವರ್ನರ್ ಬಿ.ಎನ್ ರಮೇಶ್ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ. 
ತಾಲೂಕಿನ ಕೋಮಾರನಹಳ್ಳಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಾಗೂ ನಗರದ  ರಂಗಪ್ಪ ವೃತ್ತದಲ್ಲಿ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಹಾಯಕ ಜಿಲ್ಲಾ ಗವರ್ನರ್ ಮುರುಳಿ ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರೋಟರಿ ಕಾರ್ಯದರ್ಶಿ ಅಡವೀಶಯ್ಯ ಕೋರಿದ್ದಾರೆ. 

ಜೂ.೨೪ರಂದು ಬೃಹತ್ ರಕ್ತದಾನ ಶಿಬಿರ

ಭದ್ರಾವತಿ, ಜೂ. ೨೩: ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಜೂ.೨೪ರಂದು ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಳೇನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತನಿಧಿ ಘಟಕ ಮೆಗ್ಗಾನ್ ಆಸ್ಪತ್ರೆ ಹಾಗೂ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಶಿಬಿರ ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಬಿ.ಕೆ ಮೋಹನ್, ಮೊ: ೯೪೪೭೩೯೦೭೨, ವಿಜಯ್, ಮೊ: ೭೬೭೬೭೦೯೪೪೫, ಸುಂದರ್ ಬಾಬು, ಮೊ: ೯೪೪೮೧೩೭೩೩೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 

ಬಲವಂತದ ಸಾಲ ವಸೂಲಾತಿ ಕೈ ಬಿಡಿ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮನವಿ

ಜೆಡಿಯು ಯುವ ಘಟಕ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಹೋರಾಟಕ್ಕೆ ಸ್ಪಂದನೆ 

ಭದ್ರಾವತಿಯಲ್ಲಿ ಮಂಗಳವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಸಭೆ ನಡೆಯಿತು. 
ಭದ್ರಾವತಿ, ಜೂ. ೨೩: ಕೊರೋನಾ ಸಂಕಷ್ಟದ ಹಿನ್ನಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಯಾವುದೇ ಕಾರಣಕ್ಕೂ ಬಲವಂತವಾಗಿ ಸಾಲ ವಸೂಲಿ ಮಾಡಬಾರದು. ಅಲ್ಲದೆ ಯಾವುದೇ ರೀತಿ ಕಿರುಕುಳ ನೀಡದಂತೆ ಎಚ್ಚರ ವಹಿಸುವಂತೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮನವಿ ಮಾಡಿದರು. 
ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದ ಮಹಿಳೆಯರು ಅನುಭವಿಸುತ್ತಿರುವ ಶೋಷಣೆಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಜನತಾದಳ ರಾಜ್ಯ ಯುವ ಘಟಕದ ಉಪಾಧ್ಯಕ್ಷ ನಗರದ ಶಶಿಕುಮಾರ್ ಎಸ್. ಗೌಡ ಅವರ ಮನವಿಗೆ ಸ್ಪಂದಿಸಿ ಮಂಗಳವಾರ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಲಿಸಿ ಮಾತನಾಡಿದರು. 
ಇದಕ್ಕೂ ಮೊದಲು ಮಾತನಾಡಿದ ಶಶಿಕುಮಾರ್ ಎಸ್. ಗೌಡ, ಮೈಕ್ರೋ ಪೈನಾನ್ಸ್ ಕಂಪನಿಗಳು ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಮಹಿಳೆಯರಿಗೆ ಸಾಲ ನೀಡುತ್ತಿವೆ. ಸಾಲದ ಉದ್ದೇಶ ಹಾಗೂ ಸಾಧಕ-ಬಾಧಕಗಳನ್ನು ಅರಿಯದೆ ಮಹಿಳೆಯರಿಗೆ ಸಾಲ ನೀಡುತ್ತಿವೆ. ಒಂದು ಬಾರಿ ಒಂದು ಕಂಪನಿಯಿಂದ ಸಾಲ ಪಡೆದ ಮಹಿಳೆಗೆ ಸಾಲ ಮರುಪಾವತಿಯಾಗುವ ಮೊದಲೇ ಮತ್ತೊಂದು ಕಂಪನಿಯಿಂದ ಸಾಲ ನೀಡಲಾಗುತ್ತಿದೆ. ಇದರಿಂದಾಗಿ ಮಹಿಳೆಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಈ ನಡುವೆ ಮೈಕ್ರೋ ಫೈನಾನ್ಸ್ ಕಂಪನಿಯವರು ನಿಯಮ ಉಲ್ಲಂಘಿಸಿ ಸಾಲ ವಸೂಲಾತಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು. 
ದೇಶದಲ್ಲಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ಎಲ್ಲೆಡೆ ಆರ್ಥಿಕ ಸಂಕಷ್ಟ ಎದುರಾಗಿದೆ. ಸರ್ಕಾರ ಸಹ ಸಂಕಷ್ಟಕ್ಕೆ ಸ್ಪಂದಿಸಿ ನೆರವಿಗೆ ಮುಂದಾಗಿದೆ. ಆರ್‌ಬಿಐ ಬಲವಂತವಾಗಿ ಸಾಲ ವಸೂಲಾತಿ ಮಾಡದಿರುವಂತೆ ಆದೇಶಿಸಿದೆ. ಆದರೂ ಸಹ ಕಂಪನಿಯವರು ವಿನಾಕಾರಣ ನೋಟಿಸ್ ನೀಡುವುದು, ಹೊತ್ತಲ್ಲದ ಹೊತ್ತಿನಲ್ಲಿ ಮನೆ ಬಾಗಿಲಿಗೆ ಹೋಗಿ ವಸೂಲಾತಿ ಮಾಡುವುದು ಸೇರಿದಂತೆ ಇತ್ಯಾದಿ ಕಾರ್ಯಗಳಲ್ಲಿ ತೊಡಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. 
ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಮಾತನಾಡಿ, ಕಂಪನಿಗಳಿಂದ ಯಾವುದೇ ರೀತಿ ಕಿರುಕುಳ ನೀಡುತ್ತಿಲ್ಲ. ಯಾವುದೇ ನಿಯಮಗಳನ್ನು ಸಹ ಉಲ್ಲಂಘಿಸಿಲ್ಲ ಎಂದು ಸಮರ್ಥಿಸಿಕೊಂಡರು. ಆರ್‌ಬಿಐ ನಿರ್ದೇಶನದಂತೆ ಸಾಲ ವಸೂಲಾತಿ ಮಾಡಲಾಗುತ್ತಿದ್ದು, ಯಾರಿಂದಲೂ ಬಲವಂತವಾಗಿ ಸಾಲ ವಸೂಲಾತಿ ಮಾಡುತ್ತಿಲ್ಲ. ಮುಂದೆ ಸಹ ಇದೆ ರೀತಿ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು.   
ಶಿರಸ್ತೆದಾರ್ ಮಲ್ಲಿಕಾರ್ಜುನಯ್ಯ, ಮಂಜಾನಾಯ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕೆ. ಪ್ರಸಾದ್, ಮಂಜುನಾಥ್, ಯೋಗೇಶ್, ಕುಮಾರ್, ಕೃಷ್ಣ ಪ್ರಗತಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೋಡಾಕ್, ನಿರಂತರ, ಉಜ್ಜೀವನ ಸೇರಿದಂತೆ ಇನ್ನಿತರ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಜೆಡಿಯು ಮುಖಂಡ ಬಾಬು ದೀಪಕ್‌ಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು. 

ಜಮೀನಿನ ಅಕ್ರಮ ಕಲ್ಲುಕಂಬ, ಬೇಲಿ ತೆರವುಗೊಳಿಸಲು ಆಗ್ರಹಿಸಿ ಕುಟುಂಬ ಸಮೇತ ಪ್ರತಿಭಟನೆ

ಜಮೀನಿನ ಅಕ್ರಮ ಕಲ್ಲುಕಂಬ, ಬೇಲಿ ತೆರವುಗೊಳಿಸಲು ಆಗ್ರಹಿಸಿ ಕುಟುಂಬ ಸಮೇತ ಪ್ರತಿಭಟನೆ ಮಂಗಳವಾರ ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಕಲಾಮನಿ ಕುಟುಂಬದವರು ಪ್ರತಿಭಟನೆ ನಡೆಸಿದರು. 
ಭದ್ರಾವತಿ, ಜೂ. ೨೩: ನ್ಯಾಯಾಲಯದ ಆದೇಶವಿದ್ದರೂ ಸಹ ಜಮೀನಿನಲ್ಲಿ ಅಕ್ರಮವಾಗಿ ಹಾಕಿರುವ ಬೇಲಿ ಮತ್ತು ಕಲ್ಲು ಕಂಬ ತೆಗೆದು ಯಥಾಸ್ಥಿತಿ ಮುಂದುವರೆಸುವಲ್ಲಿ ನಿರ್ಲಕ್ಷ್ಯತನ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿ ಮಂಗಳವಾರ ತಾಲೂಕು ಕಛೇರಿ ಮುಂಭಾಗ ತಾಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಕಲಾಮನಿ ಕುಟುಂಬದವರು ಪ್ರತಿಭಟನೆ ನಡೆಸಿದರು. 
ಸುಮಾರು ೫೫ ವರ್ಷಗಳಿಂದ ಪತಿ ಸುಬ್ಬರಾಜು ಹಾಗೂ ಅವರ ಅಣ್ಣ ಪೊನ್ನಯ್ಯರವರು ಜಮೀನು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಈ ಪೈಕಿ ಪತಿ ಸುಬ್ಬರಾಜುರವರ ಹೆಸರಿನಲ್ಲಿ ೩.೦೫ ಗುಂಟೆ ಜಮೀನು ಹಾಗೂ ಪೊನ್ನಯ್ಯ ಹೆಸರಿನಲ್ಲಿ ೩.೧೦ ಗುಂಟೆ ಜಮೀನು ಇದ್ದು, ೨೦೧೮ರಿಂದ ನನಗೆ ತಿಳಿಯದೆ ಪೋಡಿ ಮಾಡಿ ನನ್ನ ಜಮೀನನ್ನು ದುರಸ್ತಿ ಮಾಡಿ ಒತ್ತುವರಿಯಾಗಿದೆ ಎಂದು ಸುಮಾರು ೩೦೦ ಅಡಕೆ ಮರ ಒಳಗೊಂಡದಂತೆ ಜಮೀನಿಗೆ ಅಕ್ರಮವಾಗಿ ಕಲ್ಲು ಕಂಬದೊಂದಿಗೆ ಬೇಲಿ ಹಾಕಿಸಲಾಗಿದೆ. ಇದಕ್ಕೆ ಗ್ರಾಮ ಲೆಕ್ಕಾಧಿಕಾರಿ ಅನಿಲ್‌ಕುಮಾರ್, ರಾಜಸ್ವ ನಿರೀಕ್ಷಕ ಜಗದೀಶ್ ಹಾಗೂ ಸಿಬ್ಬಂದಿ ಪೂರ್ಣಿಮಾ ಕಾರಣಕರ್ತರಾಗಿದ್ದರೆಂದು ಆರೋಪಿಸಲಾಯಿತು. 
ಈ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಹಳೇಯ ಆದೇಶ ರದ್ದು ಪಡಿಸಲಾಗಿದೆ. ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನ್ಯಾಯಾಲಯದ ಆದೇಶವಿದೆ. ಈ ಹಿನ್ನಲೆಯಲ್ಲಿ ಕಳೆದ ಒಂದು ವಾರದಿಂದ ಕಲ್ಲು ಕಂಬ, ಬೇಲಿ ತೆರವುಗೊಳಿಸುವಂತೆ ಮನವಿ ಮಾಡಿಕೊಂಡರೂ ಸಹ ಗ್ರಾಮ ಲೆಕ್ಕಾಧಿಕಾರಿ ಹಾಗೂ ರಾಜಸ್ವ ನಿರೀಕ್ಷಕರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಹಿನ್ನಲೆ ತಕ್ಷಣ ತೆರವು ಕೈಗೊಂಡು ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಲಾಯಿತು. 

Monday, June 22, 2020

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ವತಿಯಿಂದ ಮಾಸ್ಕ್ ವಿತರಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂ.೨೫ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದೊಂದಿಗೆ ಭದ್ರಾವತಿ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಒಂದು ಸಾವಿರ ಮಾಸ್ಕ್‌ಗಳನ್ನು ಸೋಮವಾರ ವಿವಿಧ ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು. 
ಭದ್ರಾವತಿ, ಜೂ. ೨೨: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂ.೨೫ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದೊಂದಿಗೆ ನಗರದ ಲಯನ್ಸ್ ಕ್ಲಬ್ ವತಿಯಿಂದ ಸುಮಾರು ಒಂದು ಸಾವಿರ ಮಾಸ್ಕ್‌ಗಳನ್ನು ಸೋಮವಾರ ವಿವಿಧ ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು. 
ಲಯನ್ಸ್ ಕ್ಲಬ್ ಅಧ್ಯಕ್ಷ ಕುಮಾರಪ್ಪ ನೇತೃತ್ವದಲ್ಲಿ ನಡೆದ ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಎ.ಎನ್ ಕಾರ್ತಿಕ್, ಖಜಾಂಚಿ ಎಂ. ನಾಗರಾಜ ಶೇಟ್, ಎರಡನೇ ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ, ವಲಯ ಅಧ್ಯಕ್ಷ ಹೆಬ್ಬಂಡಿ ನಾಗರಾಜ್, ಕೆ.ವಿ ಚಂದ್ರಶೇಖರ್, ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೪೦ ಲಕ್ಷ ರು. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಭದ್ರಾವತಿ ತಾಲೂಕಿನ ಕಾಗೆಕೋಡಮಗ್ಗಿ ಮತ್ತು ಬಾಬಳ್ಳಿ ಗ್ರಾಮಗಳಲ್ಲಿ ಸುಮಾರು ೪೦ ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. 
ಭದ್ರಾವತಿ, ಜೂ. ೨೨: ತಾಲೂಕಿನ ಕಾಗೆಕೋಡಮಗ್ಗಿ ಮತ್ತು ಬಾಬಳ್ಳಿ ಗ್ರಾಮಗಳಲ್ಲಿ ಸುಮಾರು ೪೦ ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. 
ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳು ಇದೀಗ ಪುನಃ ಪ್ರಗತಿಯಲ್ಲಿದ್ದು, ಈ ನಡುವೆ ಮಳೆಗಾಲ ಸಹ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಕಾಮಗಾರಿಗಳು ಕೈಗೊಳ್ಳಲು ಸಮಸ್ಯೆ ಎದುರಾಗಿದೆ. ಅಲ್ಲದೆ ಕಳೆದ ಸುಮಾರು ೪ ತಿಂಗಳಿನಿಂದ ದೇಶಾದ್ಯಂತ ಕೊರೋನಾ ವೈರಸ್ ಹಿನ್ನಲೆಯಲ್ಲಿ ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಇದೀಗ ಕಾಮಗಾರಿ ಆರಂಭಗೊಂಡರೂ ಸಹ ಹಲವಾರು ಸಮಸ್ಯೆಗಳು ತಲೆತೋರುತ್ತಿವೆ. 
ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ತಾಲೂಕು ಪಂಚಾಯಿತಿ ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಜರುಲ್ಲಾ ಖಾನ್, ತಾ.ಪಂ. ಮಾಜಿ ಸದಸ್ಯ ದಶರಥ ಗಿರಿ, ಮುಖಂಡರಾದ ಹನುಮಂತನಾಯ್ಕ್, ತೀರ್ಥಪ್ಪ, ನಟರಾಜ್, ಶಿವಮೂರ್ತಿ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಕೋವಿಡ್-೧೯ ಚಿಕಿತ್ಸೆಗೆ ೪ ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ

ಜನವಸತಿ ಪ್ರದೇಶ, ಸ್ವಂತ ಕಟ್ಟಡವಿಲ್ಲ

ಭದ್ರಾವತಿ, ಜೂ. ೨೨: ಕೊರೋನಾ ವೈರಸ್ ಹಿನ್ನಲೆಯಲ್ಲಿ ಅನಾರೋಗ್ಯಕ್ಕೆ ಒಳಗಾಗದವರಿಗೆ ಚಿಕಿತ್ಸೆ ನೀಡಲು ಸರ್ಕಾರ ನಗರದ ೪ ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ ನೀಡಿದೆ.
ಇದುವರೆಗೂ ಸರ್ಕಾರವೇ ಸರ್ಕಾರಿ ಕೋವಿಡ್-೧೯ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಪತ್ಯೇಕವಾಗಿ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಖಾಸಗಿ ಆಸ್ಪತ್ರೆಗಳಿಗೆ ಅನುಮೋದನೆ ನೀಡಿದ್ದು, ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾಗಿದೆ. 
ಗಾಂಧಿನಗರದ ಭದ್ರಾ ನರ್ಸಿಂಗ್ ಹೋಂ, ದೂ. ೦೮೨೮೨-೨೬೬೪೮೩,  ತರೀಕೆರೆ ರಸ್ತೆಯಲ್ಲಿರುವ ನಯನ ಆಸ್ಪತ್ರೆ, ಮೊ. ೯೪೪೮೮೮೪೭೭೪, ಬಿ.ಎಚ್ ರಸ್ತೆ,  ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ದುರ್ಗಾ ನರ್ಸಿಂಗ್ ಹೋಂ, ಮೊ. ೯೪೪೯೮೩೬೩೫೨ ಮತ್ತು ತಾಲೂಕು ಕಛೇರಿ ರಸ್ತೆಯಲ್ಲಿರುವ ನಿರ್ಮಲಾ ಆಸ್ಪತ್ರೆ, ಮೊ. ೯೪೪೯೫೫೧೨೭೫ ಕೋವಿಡ್-೧೯ ಚಿಕಿತ್ಸೆ ನೀಡಲು ಅನುಮೋದನೆ ನೀಡಲಾಗಿದೆ. 
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ತಹಸೀಲ್ದಾರ್ ಶಿವಕುಮಾರ್, ನಗರದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್-೧೯ ಚಿಕಿತ್ಸೆ ನೀಡಲು ಅನುಮೋದಿಸಿರುವ ಮಾಹಿತಿ ನಮ್ಮ ಗಮನಕ್ಕೆ ಬಂದಿಲ್ಲ. ಈ ಸಂಬಂಧ ಯಾವುದೇ ಸಭೆಯಲ್ಲೂ ಸಹ ಚರ್ಚೆಯಾಗಿಲ್ಲ. ಆಸ್ಪತ್ರೆಗಳಿಗೆ ಅನುಮೋದನೆ ನೀಡುವ ವಿಚಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದೆ ಎಂದರು. 
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ಮಾತನಾಡಿ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಸರ್ಕಾರ ಅನುಮೋದನೆ ನೀಡಿದೆ. ಆದರೆ ಯಾವ ಮಾನದಂಡಗಳ ಆಧಾರದ ಮೇಲೆ ನೀಡಿದೆ ಎಂಬ ಮಾಹಿತಿ ನಮಗೆ ಇಲ್ಲ. ಈ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಡಬೇಕೆಂಬ ಶಿಫಾರಸ್ಸು ನಾವು ಮಾಡಿಲ್ಲ.  ಹೆಚ್ಚಿನ ಮಾಹಿತಿ ಮೇಲಾಧಿಕಾರಿಗಳಿಂದ ಕೇಳಿ ತಿಳಿಯಬೇಕಾಗಿದೆ ಎಂದರು. 
ಖಾಸಗಿ ಆಸ್ಪತ್ರೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವುದೇ?
ಎಲ್ಲಾ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ದರದಲ್ಲಿಯೇ ಚಿಕಿತ್ಸೆ ನೀಡಬೇಕು. ಯಾವುದೇ ಕಾರಣಕ್ಕೂ ಸುಲಿಗೆಗೆ ಮುಂದಾಗಬಾರದು. ಆದರೆ ಬಹುತೇಕ ಖಾಸಗಿ ಆಸ್ಪತ್ರೆಗಳು ಸಾರ್ವಜನಿಕರಿಂದ ಹೆಚ್ಚಿನ ಹಣ ಪಡೆಯುತ್ತಿವೆ. ಪ್ರತಿಯೊಂದಕ್ಕೂ ಲೆಕ್ಕಾಚಾರ ಹಾಕುತ್ತಿವೆ. ಅಲ್ಲದೆ ನಗರದಲ್ಲಿ ಅನುಮೋದನೆ ನೀಡಲಾಗಿರುವ ೪ ಖಾಸಗಿ ಆಸ್ಪತ್ರೆಗಳು ಸಹ ಪತ್ಯೇಕ ಕಟ್ಟಡವನ್ನು ಹೊಂದಿಲ್ಲ. ಎಲ್ಲಾ ರೋಗಿಗಳಿಗೂ ಒಂದೇ ಕಟ್ಟಡದಲ್ಲಿ ಚಿಕಿತ್ಸೆ ನೀಡುತ್ತಿವೆ. ಕೋವಿಡ್-೧೯ ರೋಗಿಗಳಿಗೆ ಪ್ರತ್ಯೇಕ ಕಟ್ಟಡ ಬೇಕೇ ಬೇಕು. ಇಲ್ಲವಾದಲ್ಲಿ ಆಸ್ಪತ್ರೆಗೆ ಬರುವ ಇತರೆ ರೋಗಿಗಳಿಗೆ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೇವಲ ಕೋವಿಡ್-೧೯ ಚಿಕಿತ್ಸೆ ಮಾತ್ರ ನೀಡಬೇಕು. ಉಳಿದ ಕಾಯಿಲೆಗಳಿಗೆ ಬೇರೆಡೆಗೆ ಕಳುಹಿಸಿ ಕೊಡಬೇಕಾಗಿದೆ. ಅಲ್ಲದೆ ಈ ಆಸ್ಪತ್ರೆಗಳು ಜನವಸತಿ ಪ್ರದೇಶಗಳಲ್ಲಿದ್ದು, ಸಮುದಾಯಕ್ಕೆ ವೈರಸ್ ಹರಡುವ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಊರಿನ ಹೊರಭಾಗಗಳಲ್ಲಿ ಇರುವ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್-೧೯ ಚಿಕಿತ್ಸೆಗೆ ಅನುಮೋದನೆ ನೀಡುವುದು ಸೂಕ್ತವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. 

Sunday, June 21, 2020

ಕಂಕಣ ಸೂರ್ಯ ಗ್ರಹಣದ ವೇಳೆ ಉಪಹಾರ ಸೇವನೆ : ಜಾಗೃತಿ ಮೂಡಿಸಿದ ಹವ್ಯಾಸಿ ಖಗೋಳ ಶಾಸ್ತ್ರಜ್ಞ ಹರೋನಹಳ್ಳಿ ಸ್ವಾಮಿ

ಭದ್ರಾವತಿಯಲ್ಲಿ ಹವ್ಯಾಸಿ ಖಗೋಳ ಶಾಸ್ತ್ರಜ್ಞ  ಹರೋನಹಳ್ಳಿ ಸ್ವಾಮಿ ಕಂಕಣ ಸೂರ್ಯ ಗ್ರಹಣದ ವೇಳೆ ಉಪಹಾರ ಸೇವನೆ ಮಾಡಿ ಜಾಗೃತಿ ಮೂಡಿಸಿದರು. 
ಭದ್ರಾವತಿ, ಜೂ. ೨೧: ಪ್ರಸ್ತುತ ವಿಜ್ಞಾನ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಬೆಳವಣಿಗೆ ಸಾಧಿಸಿದ್ದರೂ ಸಹ ಗ್ರಹಣ ಕುರಿತು ಈಗಲೂ ಬಹುತೇಕ ಮಂದಿಯಲ್ಲಿ ಮೂಡನಂಬಿಕೆ ದೂರವಾಗಿಲ್ಲ. ಜನರಲ್ಲಿರುವ ಮೂಡನಂಬಿಕೆಯನ್ನು ದೂರಮಾಡಬೇಕೆಂದು ಹಲವಾರು ವರ್ಷಗಳಿಂದ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಗರದ ಹವ್ಯಾಸಿ ಖಗೋಳ ಶಾಸ್ತ್ರಜ್ಞ ಹರೋನಹಳ್ಳಿ ಸ್ವಾಮಿ ಭಾನುವಾರ ಸಹ ಕಂಕಣ ಸೂರ್ಯ ಗ್ರಹಣದ ಸಮಯದಲ್ಲಿ ಉಪಹಾರ ಸೇವಿಸುವ ಮೂಲಕ ಗಮನ ಸೆಳೆದರು. 
ಶಿಕ್ಷಕರಾಗಿರುವ ಹರೋನಹಳ್ಳಿ ಸ್ವಾಮಿ, ಪ್ರತಿ ಬಾರಿ ಗ್ರಹಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆಕಾಶ ಕಾಯಗಳ ವೀಕ್ಷಣೆಗೆ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಅವಕಾಶ ಕಲ್ಪಿಸಿಕೊಡುವ ಜೊತೆಗೆ ಗ್ರಹಣ ಕುರಿತು ಸಂಪೂರ್ಣ ಮಾಹಿತಿ ನೀಡುತ್ತಾ ಬಂದಿದ್ದಾರೆ. ಈ ಬಾರಿ ಕೊರೋನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಿದ್ದರೂಢನಗರದ ಶಂಕರ ಮಠದ ಬಳಿ ಇರುವ ನಿವಾಸದಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದು, ಕೆಲವರು ಸೌರ ಕನ್ನಡಕ ಬಳಸಿ ಗ್ರಹಣ ವೀಕ್ಷಿಸಿದರು. 
 ಭದ್ರಾವತಿಯಲ್ಲಿ ಹವ್ಯಾಸಿ ಖಗೋಳ ಶಾಸ್ತ್ರಜ್ಞ  ಹರೋನಹಳ್ಳಿ ಸ್ವಾಮಿ ಸಾರ್ವಜನಿಕರಿಗೆ ಭಾನುವಾರ ತಮ್ಮ ನಿವಾಸದಲ್ಲಿ ಕಂಕಣ ಸೂರ್ಯ ಗ್ರಹಣವನ್ನು ಸೌರ ಕನ್ನಡಕ ಬಳಸಿ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಟ್ಟರು.  
ಪತ್ರಿಕೆಯೊಂದಿಗೆ ಮಾತನಾಡಿದ ಹರೋನಹಳ್ಳಿ ಸ್ವಾಮಿ, ಸಾರ್ವಜನಿಕರು ಸೂರ್ಯಗ್ರಹಣ, ಚಂದ್ರಗ್ರಹಣಗಳ ಬಗ್ಗೆ ಭಯಪಡುವ ಅಗತ್ಯವಿಲ್ಲ. ಗ್ರಹಣ ಎಂಬುದು ಆಕಾಶದಲ್ಲಿ ಪ್ರಕೃತಿ ಸಹಜವಾಗಿ ನಡೆಯುವ ನೆರಳು ಬೆಳಕಿನ ಆಟವಷ್ಟೆ. ಆದರೆ ಅನೇಕ ಟಿ.ವಿ ಮಾಧ್ಯಮಗಳು ಗ್ರಹಣಕ್ಕೆ ಸಂಬಂಧಿಸದ ಆಧಾರರಹಿತ ಮಾಹಿತಿಗಳೊಂದಿಗೆ ಮತ್ತಷ್ಟು ಭಯಭೀತರನ್ನಾಗಿಸುತ್ತಿವೆ. ಸಾರ್ವಜನಿಕರು ಎಚ್ಚರಗೊಂಡು ಮೂಡನಂಬಿಕೆಗಳಿಂದ ಹೊರಬರಬೇಕು. ಗ್ರಹಣ ವೀಕ್ಷಣೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಪ್ರಕೃತಿಯ ಅದ್ಭುತ ವಿದ್ಯಾಮಾನವನ್ನು ಕಣ್ತುಂಬಿಕೊಳ್ಳಬೇಕೆಂದರು. 
ಯಾವುದೇ ಕಾರಣಕ್ಕೂ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸಬಾರದು. ವೈಜ್ಞಾನಿಕವಾಗಿ ರೂಪಿಸಲಾದ ಸೌರ ಕನ್ನಡಕ ಬಳಸಿ ವೀಕ್ಷಿಸಬೇಕು ಅಥವಾ ತೆಳುವಾದ ಕಾರ್ಡ್ ಬೋರ್ಡ್‌ನಲ್ಲಿ ಸಣ್ಣ ರಂಧ್ರಮಾಡಿ, ಕನ್ನಡಿಯನ್ನು ಮುಂಭಾಗದಲ್ಲಿಟ್ಟು ಸೂರ್ಯನ ಪ್ರತಿಬಿಂಬವನ್ನು ಗೋಡೆಯ ಮೇಲೆ ಬಿಟ್ಟು ನೋಡಬಹುದಾಗಿದೆ ಅಥವಾ ಟೆಲಿಸ್ಕೋಪ್‌ಗಳ ಮೂಲಕ ಸೂರ್ಯನ ಪರೋಕ್ಷ ಪ್ರತಿಬಿಂಬವನ್ನು ಪರದೆ ಮೇಲೆ ಬಿಟ್ಟು ವೀಕ್ಷಿಸಬಹುದು. ಈ ವಿಧಾನಗಳನ್ನು ಬಿಟ್ಟು ಬೇರೆ ಯಾವುದೇ ರೀತಿಯಲ್ಲೂ ನೇರವಾಗಿ ಗ್ರಹಣವನ್ನು ವೀಕ್ಷಿಸಬಾರದು ಎಂದರು. 

Saturday, June 20, 2020

ಅಕ್ರಮ ಮದ್ಯ ಮಾರಾಟ : ದಾಳಿ

ಭದ್ರಾವತಿ, ಜೂ. ೨೦: ವಾಸದ ಮನೆಯೊಂದರ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ದಾಳಿ ನಡೆಸಿ ಮದ್ಯ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. 
ಹೊಸಮನೆ ಹನುಮಂತ ನಗರದ ನಿವಾಸಿ ಚಿನ್ನರಾಜು ಹಾಗೂ ಈತನ ಪತ್ನಿ ಮುನಿಯಮ್ಮ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಪೊಲೀಸರ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದಾರೆ. ಸ್ಥಳದಲ್ಲಿ  ೧೦೫೦ ರು. ಮೌಲ್ಯದ ೨ ಲೀ ೭೦೦ ಎಂ.ಎಲ್ ಪ್ರಮಾಣದ ೯೦ ಎಂ.ಎಲ್‌ನ ಹೇವರ್ಡ್ಸ್ ಚೀರ‍್ಸ್ ವಿಸ್ಕಿ ೩೦ ಪೌಚ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹುಟ್ಟುಹಬ್ಬ

ಭದ್ರಾವತಿಯಲ್ಲಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವದಲ್ಲಿ ಹುಟ್ಟುಹಬ್ಬದ ಅಂಗವಾಗಿ ಬಿ.ಕೆ ಮೋಹನ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
ಭದ್ರಾವತಿ, ಜೂ. ೨೦: ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ನಗರಸಭೆ ಮಾಜಿ ಅಧ್ಯಕ್ಷ, ಬಿ.ಕೆ ಮೋಹನ್ ಹುಟ್ಟುಹಬ್ಬ ಶನಿವಾರ ನಗರದ ವಿವಿಧೆಡೆ ಆಚರಿಸಲಾಯಿತು. 
ಶಾಸಕರ ಗೃಹ ಕಛೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದರು. 
ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವದಲ್ಲಿ ಬಿ.ಕೆ ಮೋಹನ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಪ್ರಮುಖರಾದ ಯುವ ಮುಖಂಡ ಬಿ.ಎಸ್ ಗಣೇಶ್, ದಿಲ್‌ದಾರ್, ಅಮೀರ್‌ಜಾನ್, ಎಂ. ಶಿವಕುಮಾರ್, ವೆಂಕಟಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮಾದಮ್ಮ ನಿಧನ

ಮಾದಮ್ಮ 
ಭದ್ರಾವತಿ, ಜೂ. ೨೦: ನಗರದ ರೈತರ ಅಡಿಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ(ರ‍್ಯಾಮ್ಕೋಸ್)ದ ಸಂಸ್ಥಾಪಕ ದಿವಂಗತ ಎಚ್. ಲೋಕೇಶಪ್ಪನವರ ಪತ್ನಿ ಮಾದಮ್ಮ(೮೦) ಶನಿವಾರ ಮಧ್ಯಾಹ್ನ ನಿಧನ ಹೊಂದಿದರು.
ಮೃತರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಸಹಕಾರಿ ಧುರೀಣ ಎಚ್.ಎಲ್ ಷಡಾಕ್ಷರಿ ಸೇರಿದಂತೆ ೩ ಗಂಡು, ೨ ಹೆಣ್ಣು ಮಕ್ಕಳು ಹಾಗೂ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜೂ.೨೧ರಂದು ಮಧ್ಯಾಹ್ನ ೨ ಗಂಟೆಗೆ ಅರಕೆರೆ ಗ್ರಾಮದ ಅವರ ತೋಟದಲ್ಲಿ ನಡೆಯಲಿದೆ. ಇವರ ನಿಧನಕ್ಕೆ ನಗರದ ಹಲವು ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಯೋಗ ದಿನಾಚರಣೆ ಅಂಗವಾಗಿ ರಾಷ್ಟ್ರಮಟ್ಟದ ಇ-ಕ್ವಿಜ್

ಭದ್ರಾವತಿ, ಜೂ. ೨೦: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಅರ್ಥಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ವಿಭಾಗ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಎನ್‌ಸಿಸಿ ಘಟಕದ ವತಿಯಿಂದ ರಾಷ್ಟ್ರಮಟ್ಟದ ಇ-ಕ್ವಿಜ್(ರಸ ಪ್ರಶ್ನೆ) ಸ್ಪರ್ಧೆ ಆಯೋಜಿಸಲಾಗಿದೆ. 
ಯೋಗ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿದೆ. ಆನ್‌ಲೈನ್ ಮೂಲಕ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿ ಶೇ.೫೦ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಇ-ಸರ್ಟಿಫಿಕೇಟ್ ಬಹುಮಾನ ವಿತರಿಸಲಾಗುವುದು. 
ಹೆಚ್ಚಿನ ಮಾಹಿತಿಗೆ ಎಂ.ಡಿ ವಿಶ್ವನಾಥ್, ಮೊ: ೯೯೮೬೮೧೭೩೨೪, ಡಾ. ಜಿ.ಆರ್ ರಾಜಶೇಖರ್, ಮೊ: ೯೬೧೧೪೨೨೧೨೨, ಡಾ. ಟಿ. ಪ್ರಸನ್ನ, ಮೊ: ೯೪೮೧೯೮೯೪೯೮ ಅಥವಾ ಪ್ರೊ. ಎನ್.ಯು ಹೆಗ್ಗಡೆ, ಮೊ: ೮೦೭೩೨೧೫೭೯೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಕೋರಿದ್ದಾರೆ. 


ನಗರದ ವಿವಿದೆಡೆ ಮಾಜಿ ಶಾಸಕ ಎಂಜೆ ಅಪ್ಪಾಜಿ ಹುಟ್ಟುಹಬ್ಬ

ಭದ್ರಾವತಿಯಲ್ಲಿ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲಿಕರ ಸಂಘದ ವತಿಯಿಂದ ಶನಿವಾರ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹುಟ್ಟುಹಬ್ಬದ ಜೊತೆಗೆ ಮುಖಂಡ ಧರ್ಮರಾಜ್‌ರವರ ಹುಟ್ಟುಹಬ್ಬ ಸಹ ಆಚರಿಸಿ ಇಬ್ಬರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
ಭದ್ರಾವತಿ, ಜೂ. ೨೦ : ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೬೭ನೇ ಹುಟ್ಟುಹಬ್ಬ ವಿವಿಧ ಸಂಘಟನೆಗಳಿಂದ ಶನಿವಾರ ಆಚರಿಸಲಾಯಿತು.
      ಬೆಳಿಗ್ಗೆ ತಾಲ್ಲೂಕಿನ ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಗರದ ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಎಂ.ಜೆ ಅಪ್ಪಾಜಿ ಹುಟ್ಟುಹಬ್ಬದ ಜೊತೆಗೆ ಮುಖಂಡ ಧರ್ಮರಾಜ್‌ರವರ ಹುಟ್ಟುಹಬ್ಬ ಸಹ ಆಚರಿಸಿ ಇಬ್ಬರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಮುಖಂಡ ಬಿ.ಎಸ್ ನಾರಾಯಣಪ್ಪ ಸೇರಿದಂತೆ ಪ್ರವಾಸಿ ವಾಹನ ಚಾಲಕರು, ಮಾಲಿಕರು, ಖಾಸಗಿ ಬಸ್ ಚಾಲಕರು, ನಿರ್ವಾಹಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
     ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಸಂಘದ ವತಿಯಿಂದ ಎಂ.ಜೆ ಅಪ್ಪಾಜಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
      ನ್ಯೂಟೌನ್ ನಗರಸಭೆ ಶಾಖಾ ಕಚೇರಿ ಆವರಣದಲ್ಲಿರುವ ನಿರ್ಗತಿಕರ ಆಶ್ರಯ ತಂಗುದಾಣದಲ್ಲಿ ಮಾದಿಗ ಸಮಾಜ ಮತ್ತು ಕರ್ನಾಟಕ ಜನಸೈನ್ಯ ಸೇರಿದಂತೆ ವಿವಿಧ ಸಂಘಟನೆಗಳಿಂದ ನಿರ್ಗತಿಕರಿಗೆ ಊಟ ಬಡಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಾಗಿತು.
ಎಂ.ಜೆ ಅಪ್ಪಾಜಿ, ಶಾರದ ಅಪ್ಪಾಜಿ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್, ಕರ್ನಾಟಕ ಜನಸೈನ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹನುಮಮ್ಮ, ಮುಖಂಡ ಅಶೋಕ್‌ಕುಮಾರ್, ಐ.ವಿ ಸಂತೋಷ್‌ಕುಮಾರ್, ಕಬ್ಬಡಿ ಸುಬ್ಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ನಾಗರತ್ನಮ್ಮ ನಿಧನ

ನಾಗರತ್ನಮ್ಮ 
ಭದ್ರಾವತಿ, ಜೂ. ೨೦: ದಿವಂಗತ. ಕೆ.ವಿ ನಾಗಪ್ಪ ಶೆಟ್ಟರ್ ಪತ್ನಿ, ಹಳೇನಗರದ ನಿವಾಸಿ ನಾಗರತ್ನಮ್ಮ( ೯೪)  ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. 
ಮೃತರು ೩ ಹೆಣ್ಣು, ೫ ಗಂಡು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ನಗರದ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಮೃತರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ. 

Friday, June 19, 2020

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆ : ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ವಿದ್ಯಾರ್ಥಿಗಳಿಗೆ ಕರೆ 

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ
ಭದ್ರಾವತಿ, ಜೂ. ೧೯: ಈ ಬಾರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ,  ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 
ಜೂ.೨೫ ರಿಂದ ಜು.೩ರವರೆಗೆ ತಾಲೂಕಿನ ನಗರ ವ್ಯಾಪ್ತಿಯ ೮ ಹಾಗೂ ಗ್ರಾಮಾಂತರ ವ್ಯಾಪ್ತಿಯ ೭ ಸೇರಿದಂತೆ ಒಟ್ಟು ೧೫ ಕೇಂದ್ರಗಳಲ್ಲಿ  ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು ೪೫೫೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರದ ಪ್ರತಿಯೊಂದು ಕೊಠಡಿಯಲ್ಲಿ ಒಂದು ಬೆಂಚಿನಲ್ಲಿ ತಲಾ ಇಬ್ಬರಂತೆ ಕನಿಷ್ಠ ೧೮ ರಿಂದ ೨೦ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು  ವ್ಯವಸ್ಥೆ ಮಾಡಲಾಗಿದೆ. ಯಾವುದೇ ಪರೀಕ್ಷಾ ಕೇಂದ್ರ ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಲ್ಲಿ ಪರಿಸ್ಥಿತಿ ಎದುರಿಸಲು ಮೂರು ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಿಕೊಳ್ಳಲಾಗಿದೆ ಎಂದರು.
ತಾಲ್ಲ್ಲೂಕಿನ ವಿವಿಧ ಭಾಗದ ಒಟ್ಟು ೨೫೯ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಆಯಾ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಖಾಸಗಿ ಶಾಲೆಗಳ ೧೫ ಬಸ್ಸುಗಳನ್ನು ಸಾರಿಗೆ ಸಂಪರ್ಕಕ್ಕೆ ಬಳಸಿಕೊಳ್ಳಲಾಗುತ್ತಿದೆ. ಒಂದು ಜೊತೆ ಮಾಸ್ಕ್ ಉಚಿತವಾಗಿ ವಿತರಿಸಲಾಗುತ್ತಿದ್ದು, ಪರೀಕ್ಷಾ ಕೊಠಡಿ ಪ್ರವೇಶಿಸುವ ಮೊದಲು ನಡೆಸುವ ತಪಾಸಣೆಯಲ್ಲಿ ಕೆಮ್ಮು, ಶೀತ, ನೆಗಡಿ, ಜ್ವರ ಸೇರಿದಂತೆ ಯಾವುದೇ ರೀತಿಯ ಲಕ್ಷಣಗಳು  ಕಂಡು ಬಂದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಪ್ರತಿಯೊಂದು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಹೊರ ಜಿಲ್ಲೆಗಳ ೭೭ ವಿದ್ಯಾರ್ಥಿಗಳು ತಾಲೂಕಿನಲ್ಲಿ  ಹಾಗೂ ತಾಲೂಕಿನ ೧೨೦ ವಿದ್ಯಾರ್ಥಿಗಳು ಹೊರಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಟೈಪಿಂಗ್, ಜೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರರು ಪ್ರವೇಶಿಸುವಂತಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ. ೨೦೦ ಮೀ ವ್ಯಾಪ್ತಿಯೊಳಗೆ ೪ ಜನರಿಗಿಂತ ಹೆಚ್ಚಿನ ಜನರು ಸೇರದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ನಿಷೇಧಾಜ್ಞೆ  ಜಾರಿಗೊಳಿಸಲಾಗಿದೆ ಎಂದರು.
ಉಳಿದಂತೆ ಒಟ್ಟಾರೆ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆಯುವ ನಿಟ್ಟಿನಲ್ಲಿ ಸಹಕಾರಿಯಾಗುವಂತೆ ಆತ್ಮವಿಶ್ವಾಸ ತುಂಬುವ, ಗೊಂದಲಗಳನ್ನು ನಿವಾರಿಸುವ, ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಎಲ್ಲಾ ಕ್ರಮಗಳನ್ನು ಇಲಾಖೆವತಿಯಿಂದ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವ ವಿಶ್ವಾಸವಿದೆ ಎಂದರು. ಕಚೇರಿ ವ್ಯವಸ್ಥಾಪಕ ಕಾಂತ್‌ರಾಜ್, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್ ಉಪಸ್ಥಿತರಿದ್ದರು.

ಎಪಿಎಂಸಿ ಅಧ್ಯಕ್ಷರಾಗಿ ಲವೇಶ್‌ಗೌಡ ಪುನರ್ ಆಯ್ಕೆ, ಉಪಾಧ್ಯಕ್ಷರಾಗಿ ರಾಜಾನಾಯ್ಕ

ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಲವೇಶ್‌ಗೌಡ ಶುಕ್ರವಾರ ನಡೆದ ಚುನಾವಣೆಯಲ್ಲಿ ಪುನರ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರಾಜಾನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ಭದ್ರಾವತಿ, ಜೂ. ೧೯: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಲವೇಶ್‌ಗೌಡ ಶುಕ್ರವಾರ ನಡೆದ ಚುನಾವಣೆಯಲ್ಲಿ ಪುನರ್ ಆಯ್ಕೆಯಾಗಿದ್ದಾರೆ. 
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲವೇಶ್‌ಗೌಡ ಪುನರ್ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿದ್ದ  ರತ್ನಮ್ಮರವರ ಸ್ಥಾನಕ್ಕೆ ಗೋಣಿಬೀಡಿನ ಜೆಡಿಎಸ್ ಪಕ್ಷದ ರಾಜಾನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಪಿಎಂಸಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಿಡಿದಿದ್ದು, ಸರದಿಯಂತೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ನಿರ್ದೇಶಕರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದಲ್ಲಿ ಮುಂದು ವರೆದಿದ್ದಾರೆ. ಆದರೆ ಈ ಬಾರಿ ಉಪಾಧ್ಯಕ್ಷ ಸ್ಥಾನದಲ್ಲೂ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ತಹಸೀಲ್ದಾರ್ ಶಿವಕುಮಾರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಕಾರ್ಯದರ್ಶಿ ಸತೀಶ್, ನಿರ್ದೇಶಕರಾದ ಡಾ. ಎನ್.ಟಿ.ಸಿ ನಾಗೇಶ್, ಜಯರಾಮ್, ಸತೀಶ್, ರತ್ನಮ್ಮ ಮುಖಂಡ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.