Thursday, June 4, 2020

ಮದ್ಯಪಾನ ನಿಷೇಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ

ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ 

ರಾಜ್ಯದಲ್ಲಿ ತಕ್ಷಣ ಮದ್ಯಪಾನ ನಿಷೇಧಿಸುವಂತೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಗುರುವಾರ ಸಂಯುಕ್ತ ಜನತಾದಳ ವತಿಯಿಂದ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೪: ರಾಜ್ಯದಲ್ಲಿ ತಕ್ಷಣ ಮದ್ಯಪಾನ ನಿಷೇಧಿಸುವಂತೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಗುರುವಾರ ಸಂಯುಕ್ತ ಜನತಾದಳ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 
ಲಾಕ್‌ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮದ್ಯ ಮಾರಾಟ ಪುನಃ ಆರಂಭಗೊಂಡಿರುವುದರಿಂದ ಒಂದೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿಯಲ್ಲಿರುವ ಕುಟುಂಬಗಳು ಮತ್ತಷ್ಟು ಸಂಕಷ್ಟ ಅನುಭವಿಸುವಂತಾಗಿದೆ. ಈ ಹಿಂದೆ ತಾವು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾರಾಯಿ ನಿಷೇಧಗೊಳಿಸಿದ್ದು, ಇಂದಿಗೂ ರಾಜ್ಯದ ಜನರು ಮರೆಯುವಂತಿಲ್ಲ. ಇದೀಗ ಸಂಪೂರ್ಣ ಮದ್ಯಪಾನ ನಿಷೇಧಿಸುವ ಮೂಲಕ ಈ ಬಾರಿ ಗಾಂಧಿ ಜಯಂತಿಗೆ ವಿಶಿಷ್ಟ ಕೊಡುಗೆ ನೀಡುವ ಜೊತೆಗೆ ರಾಷ್ಟ್ರದಲ್ಲಿಯೇ ಮಾದರಿ ರಾಜ್ಯವನ್ನಾಗಿಸಬೇಕೆಂದು ಒತ್ತಾಯಿಸಲಾಯಿತು. 
ಜಿಲ್ಲೆಯಲ್ಲಿ ಸುಮಾರು ೫೫ಕ್ಕೂ ಹೆಚ್ಚಿನ ಮೈಕ್ರೋ ಫೈನಾನ್ಸ್‌ಗಳಿದ್ದು, ಬಹುತೇಕ ಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ. ಕೊರೋನಾ ಲಾಕ್‌ಡೌನ್ ಪರಿಣಾಮ ಉದ್ಯೋಗವಿಲ್ಲದೆ ಎಲ್ಲೆಡೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಆಗಸ್ಟ್‌ವರೆಗೂ ಸದಸ್ಯರಿಗೆ ತಕ್ಷಣ ಹಣ ಪಾವತಿಸುವಂತೆ ಒತ್ತಾಯಿಸುವಂತಿಲ್ಲ ಎಂದು ಆದೇಶಿಸಿದೆ. ಆದರೆ ಈ ಆದೇಶವನ್ನು ಉಲ್ಲಂಘಿಸಿ ತಕ್ಷಣ ಹಣ ಪಾವತಿಸುವಂತೆ ಮಹಿಳಾ ಸದಸ್ಯರಿಗೆ ತೀವ್ರ ಒತ್ತಡ ಹಾಕಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಗೊಳಿಸಬೇಕು. ಅಲ್ಲದೆ ಈ ಫೈನಾನ್ಸ್‌ಗಳಲ್ಲಿ ಬಡ ವರ್ಗದ ಜನರು ಪಡೆದಿರುವ ಸಾಲ ಮನ್ನಾ  ಮಾಡಬೇಕೆಂದು ಆಗ್ರಹಿಸಲಾಯಿತು. 
ಮನೆ ಮನೆಗೆ ಅಡುಗೆ ಅನಿಲ ಪೂರೈಸುವ ವಿತರಕರು ನಿಗದಿತ ದರ ಪಡೆಯದೆ ೩೦ ರಿಂದ ೪೦ ರು. ಹೆಚ್ಚಿಗೆ ಪಡೆಯುತ್ತಿದ್ದಾರೆ. ಸಂಕಷ್ಟದ ಸಮಯದಲ್ಲಿ ಗ್ರಾಹಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುವುದು ಸರಿಯಲ್ಲ. ಈ ಸಂಬಂಧ ತಕ್ಷಣ ಕ್ರಮ ಕೈಗೊಳ್ಳಬೇಕು. ಔರಾದ್‌ಕರ್ ವರದಿ ಜಾರಿಗೆ ತರುವ ಮೂಲಕ ಪೊಲೀಸ್ ಸಿಬ್ಬಂದಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವುದು. ಸರ್ಕಾರ ಶಾಲೆಗಳ ಆರಂಭಕ್ಕೆ ಮುಂದಾಗಿರುವುದು ಸರಿಯಲ್ಲ. ಶಾಲಾ ಮಕ್ಕಳಿಗೆ ಸರ್ಕಾರದ ಯಾವುದೇ ಮಾರ್ಗಸೂಚಿ ತಿಳಿಯುವುದಿಲ್ಲ. ಅಲ್ಲದೆ ಮಕ್ಕಳು ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿದೆ. ಈ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸುವುದರಿಂದ ಹೆಚ್ಚಿನ ಆಪಾಯ ಎದುರಾಗಲಿದೆ. ಇದನ್ನು ಅರಿತು ತಕ್ಷಣ ಶಾಲೆಗಳನ್ನು ಆರಂಭಿಸದಿರುವಂತೆ ಮನವಿ ಮಾಡಲಾಯಿತು. 
ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್.ಗೌಡ ನೇತೃತ್ವ ವಹಿಸಿದ್ದರು. ರೈತ ಮುಖಂಡ ಸುಬ್ಬೇಗೌಡ, ಮುಖಂಡರಾದ ರವಿನಾಯ್ಕ, ರವಿ,  ಮಾನವ ಹಕ್ಕುಗಳ ಹೋರಾಟ ಸಮಿತಿ ಉಪಾಧ್ಯಕ್ಷ ಎಂ.ವಿ ಚಂದ್ರಶೇಖರ್, ಕರ್ನಾಟ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment