Tuesday, June 23, 2020

ಬಲವಂತದ ಸಾಲ ವಸೂಲಾತಿ ಕೈ ಬಿಡಿ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮನವಿ

ಜೆಡಿಯು ಯುವ ಘಟಕ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಹೋರಾಟಕ್ಕೆ ಸ್ಪಂದನೆ 

ಭದ್ರಾವತಿಯಲ್ಲಿ ಮಂಗಳವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಸಭೆ ನಡೆಯಿತು. 
ಭದ್ರಾವತಿ, ಜೂ. ೨೩: ಕೊರೋನಾ ಸಂಕಷ್ಟದ ಹಿನ್ನಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಯಾವುದೇ ಕಾರಣಕ್ಕೂ ಬಲವಂತವಾಗಿ ಸಾಲ ವಸೂಲಿ ಮಾಡಬಾರದು. ಅಲ್ಲದೆ ಯಾವುದೇ ರೀತಿ ಕಿರುಕುಳ ನೀಡದಂತೆ ಎಚ್ಚರ ವಹಿಸುವಂತೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮನವಿ ಮಾಡಿದರು. 
ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದ ಮಹಿಳೆಯರು ಅನುಭವಿಸುತ್ತಿರುವ ಶೋಷಣೆಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಸಂಯುಕ್ತ ಜನತಾದಳ ರಾಜ್ಯ ಯುವ ಘಟಕದ ಉಪಾಧ್ಯಕ್ಷ ನಗರದ ಶಶಿಕುಮಾರ್ ಎಸ್. ಗೌಡ ಅವರ ಮನವಿಗೆ ಸ್ಪಂದಿಸಿ ಮಂಗಳವಾರ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಲಿಸಿ ಮಾತನಾಡಿದರು. 
ಇದಕ್ಕೂ ಮೊದಲು ಮಾತನಾಡಿದ ಶಶಿಕುಮಾರ್ ಎಸ್. ಗೌಡ, ಮೈಕ್ರೋ ಪೈನಾನ್ಸ್ ಕಂಪನಿಗಳು ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಮಹಿಳೆಯರಿಗೆ ಸಾಲ ನೀಡುತ್ತಿವೆ. ಸಾಲದ ಉದ್ದೇಶ ಹಾಗೂ ಸಾಧಕ-ಬಾಧಕಗಳನ್ನು ಅರಿಯದೆ ಮಹಿಳೆಯರಿಗೆ ಸಾಲ ನೀಡುತ್ತಿವೆ. ಒಂದು ಬಾರಿ ಒಂದು ಕಂಪನಿಯಿಂದ ಸಾಲ ಪಡೆದ ಮಹಿಳೆಗೆ ಸಾಲ ಮರುಪಾವತಿಯಾಗುವ ಮೊದಲೇ ಮತ್ತೊಂದು ಕಂಪನಿಯಿಂದ ಸಾಲ ನೀಡಲಾಗುತ್ತಿದೆ. ಇದರಿಂದಾಗಿ ಮಹಿಳೆಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ. ಈ ನಡುವೆ ಮೈಕ್ರೋ ಫೈನಾನ್ಸ್ ಕಂಪನಿಯವರು ನಿಯಮ ಉಲ್ಲಂಘಿಸಿ ಸಾಲ ವಸೂಲಾತಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು. 
ದೇಶದಲ್ಲಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ಎಲ್ಲೆಡೆ ಆರ್ಥಿಕ ಸಂಕಷ್ಟ ಎದುರಾಗಿದೆ. ಸರ್ಕಾರ ಸಹ ಸಂಕಷ್ಟಕ್ಕೆ ಸ್ಪಂದಿಸಿ ನೆರವಿಗೆ ಮುಂದಾಗಿದೆ. ಆರ್‌ಬಿಐ ಬಲವಂತವಾಗಿ ಸಾಲ ವಸೂಲಾತಿ ಮಾಡದಿರುವಂತೆ ಆದೇಶಿಸಿದೆ. ಆದರೂ ಸಹ ಕಂಪನಿಯವರು ವಿನಾಕಾರಣ ನೋಟಿಸ್ ನೀಡುವುದು, ಹೊತ್ತಲ್ಲದ ಹೊತ್ತಿನಲ್ಲಿ ಮನೆ ಬಾಗಿಲಿಗೆ ಹೋಗಿ ವಸೂಲಾತಿ ಮಾಡುವುದು ಸೇರಿದಂತೆ ಇತ್ಯಾದಿ ಕಾರ್ಯಗಳಲ್ಲಿ ತೊಡಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. 
ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಮಾತನಾಡಿ, ಕಂಪನಿಗಳಿಂದ ಯಾವುದೇ ರೀತಿ ಕಿರುಕುಳ ನೀಡುತ್ತಿಲ್ಲ. ಯಾವುದೇ ನಿಯಮಗಳನ್ನು ಸಹ ಉಲ್ಲಂಘಿಸಿಲ್ಲ ಎಂದು ಸಮರ್ಥಿಸಿಕೊಂಡರು. ಆರ್‌ಬಿಐ ನಿರ್ದೇಶನದಂತೆ ಸಾಲ ವಸೂಲಾತಿ ಮಾಡಲಾಗುತ್ತಿದ್ದು, ಯಾರಿಂದಲೂ ಬಲವಂತವಾಗಿ ಸಾಲ ವಸೂಲಾತಿ ಮಾಡುತ್ತಿಲ್ಲ. ಮುಂದೆ ಸಹ ಇದೆ ರೀತಿ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು.   
ಶಿರಸ್ತೆದಾರ್ ಮಲ್ಲಿಕಾರ್ಜುನಯ್ಯ, ಮಂಜಾನಾಯ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕೆ. ಪ್ರಸಾದ್, ಮಂಜುನಾಥ್, ಯೋಗೇಶ್, ಕುಮಾರ್, ಕೃಷ್ಣ ಪ್ರಗತಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೋಡಾಕ್, ನಿರಂತರ, ಉಜ್ಜೀವನ ಸೇರಿದಂತೆ ಇನ್ನಿತರ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಜೆಡಿಯು ಮುಖಂಡ ಬಾಬು ದೀಪಕ್‌ಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು. 

No comments:

Post a Comment