ಭದ್ರಾವತಿ, ಜೂ. ೨೫: ಹಳೇನಗರದ ಬಸವೇಶ್ವರ ವೃತ್ತದ ಉಪ್ಪಾರರ ಬೀದಿ ನಿವಾಸಿ, ಲಾರಿ ಚಾಲಕರೊಬ್ಬರಿಗೆ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಹೆಚ್ಚಾಗಿದ್ದು, ಗುರುವಾರ ಶಿವಮೊಗ್ಗ ಮೆಗ್ಗಾನ್ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೂ.೧೯ರಂದು ಚಾಲಕ ತುಮಕೂರಿಗೆ ಪ್ರಯಾಣ ಬೆಳೆಸಿದ್ದು, ೨೧ರಂದು ನಗರಕ್ಕೆ ಹಿಂದಿರುಗಿದ್ದಾರೆ. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾಗ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋವಿಡ್-೧೯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನಲಾಗಿದೆ.
ನಗರಸಭೆ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಚಾಲಕ ವಾಸವಿದ್ದ ಮನೆಯ ಸುತ್ತಮುತ್ತ ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವಾಗಿಸಿದ್ದು, ಮುಂದಿನ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ಹಿಂದೆ ಚನ್ನಗಿರಿ ರಸ್ತೆಯಲ್ಲಿ ಮಹಿಳೆಯೊಬ್ಬರಲ್ಲಿ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ೪-೫ ದಿನಗಳ ವರೆಗೆ ರಂಗಪ್ಪ ವೃತ್ತದಿಂದ ಹೊಳೆಹೊನ್ನೂರು ವೃತ್ತದ ವರೆಗೆ ಸೀಲ್ಡೌನ್ ಘೋಷಿಸಲಾಗಿತ್ತು.
No comments:
Post a Comment