Monday, August 31, 2020

ಪೌರಕಾರ್ಮಿಕರ ದಿನಾಚರಣೆಯಲ್ಲಿ ಜಾನಪದ ಕಲಾವಿದರಿಗೆ ವೇದಿಕೆ ನೀಡಲು ಮನವಿ

 ಪೌರಕಾರ್ಮಿಕರ ದಿನಾಚರಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಕಲಾವಿದರಿಗೆ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸೋಮವಾರ ಭದ್ರಾವತಿ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೩೧: ಪ್ರತಿ ವರ್ಷ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗುವ ಪೌರಕಾರ್ಮಿಕರ ದಿನಾಚರಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಕಲಾವಿದರಿಗೆ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸೋಮವಾರ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
      ಸ್ವಚ್ಛತೆ ಹಾಗು ಕಾರ್ಮಿಕರಿಗೆ ಸಂಬಂಧಿಸಿದ ಮತ್ತು ಅಂಬೇಡ್ಕರ್‌ರವರ ಕುರಿತು ಹಾಡುಗಳನ್ನು ಹಾಡಲು ಕಲಾವಿದರಿಗೆ ಅವಕಾಶ ನೀಡುವಂತೆ  ಮನವಿಯಲ್ಲಿ ಕೋರಲಾಗಿದೆ.
      ಕಲಾವಿದರಾದ ತಮಟೆ ಜಗದೀಶ್, ಜಿ. ದಿವಾಕರ, ಲಾವಣ್ಯ ಮತ್ತು ಶಿವಾನಂದ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಿವೃತ್ತ ಶಿಕ್ಷಕ ಜಿ.ಟಿ ಗುರುಲಿಂಗಪ್ಪ ನಿಧನ


ಜಿ.ಟಿ ಗುರುಲಿಂಗಪ್ಪ
ಭದ್ರಾವತಿ, ಆ. ೩೧: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಉಪಾಧ್ಯಕ್ಷ, ನಿವೃತ್ತ ಶಿಕ್ಷಕ ಜಿ.ಟಿ ಗುರುಲಿಂಗಪ್ಪ ಸೋಮವಾರ ನಿಧನ ಹೊಂದಿದರು.
       ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹೊಂದಿದ್ದರು. ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಭದ್ರಾ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದರು. ಸ್ಕೌಟ್ಸ್ ಮಾಸ್ಟರ್ ಆಗಿದ್ದ ಗುರುಲಿಂಗಪ್ಪನವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಶರಣ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
      ಮೃತರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಶರಣ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು, ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ನಿವೃತ್ತಿ ಹೊಂದಿದ ಶಿಕ್ಷಕರುಗಳಿಗೆ ಸನ್ಮಾನ, ಅಭಿನಂದನೆ

ಭದ್ರಾವತಿ ಕಾಗದನಗರ ಪೇಪರ್‌ಟೌನ್ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಬೇಲಿಮಲ್ಲೂರು ಎಂ. ನಾಗಪ್ಪ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಅವರನ್ನು ಸೋಮವಾರ ತಾಲೂಕು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಆ. ೩೧: ತಾಲೂಕಿನ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರುಗಳಿಗೆ ಸೋಮವಾರ ತಾಲೂಕು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
    ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸುಮಾರು ೩೪ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕಾಗದನಗರ ಎಂಪಿಎಂ ಶಿಕ್ಷಣ ಮಂಡಳಿಯ ಪೇಪರ್‌ಟೌನ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬೇಲಿಮಲ್ಲೂರು ಎಂ. ನಾಗಪ್ಪ, ಅರಬಿಳಚಿ ಬಸವೇಶ್ವರ ಪ್ರೌಢಶಾಲೆ ಸಹ ಶಿಕ್ಷಕ ದೇವೇಂದ್ರಪ್ಪ ಹಾಗೂ ನ್ಯೂಟೌನ್ ಸೇಂಟ್‌ಚಾರ್ಲ್ಸ್ ಕನ್ನಡ ಶಾಲೆಯ ಶಿಕ್ಷಕಿ ಜಾನಿ ಅವರನ್ನು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸುವ ಮೂಲಕ ನಿವೃತ್ತಿ ಜೀವನಕ್ಕೆ ಶುಭ ಕೋರಲಾಯಿತು.

Sunday, August 30, 2020

ರಕ್ತದಾನ ಶಿಬಿರ : ೫೦ ಯೂನಿಟ್ ರಕ್ತ ಸಂಗ್ರಹ


ಭದ್ರಾವತಿ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಜಾಮಿಯಾ ಶಾದಿ ಮಹಲ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ರೋಟರಿ ರಕ್ತ ನಿಧಿ ಮುಖ್ಯಸ್ಥ ಸತೀಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
     ಭದ್ರಾವತಿ, ಆ. ೩೦: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತಾಲೂಕು ಶಾಖೆ ವತಿಯಿಂದ ಶಿವಮೊಗ್ಗ ರೋಟರಿ ರಕ್ತ ನಿಧಿ ಸಹಯೋಗದೊಂದಿಗೆ ಭಾನುವಾರ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಜಾಮಿಯಾ ಶಾದಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು ೫೦ ಯೂನಿಟ್ ರಕ್ತ ಸಂಗ್ರಹಿಸಲಾಯಿತು.    
      ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಕಾರ್ಯದರ್ಶಿ ಉಮರ್ ಫಾರೂಕ್, ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಲ್ಲಾಹ್ ಬಕಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ರೋಟರಿ ರಕ್ತ ನಿಧಿ ಮುಖ್ಯಸ್ಥ  ಸತೀಶ್‌ರವರನ್ನು ಸಂಘಟನೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ವಿಧಾನಸಭೆ ಕಾರ್ಯದರ್ಶಿ ಹುದ್ದೆಗೆ ಎಸ್. ಮೂರ್ತಿ ಮರು ನೇಮಕಗೊಳಿಸಲು ಆಗ್ರಹ

ಭದ್ರಾವತಿ, ಆ. ೩೦: ಪರಿಶಿಷ್ಟ ಜಾತಿಗೆ ಸೇರಿದ ಎಸ್. ಮೂರ್ತಿಯವರನ್ನು ಪುನಃ ವಿಧಾನಸಭೆ ಕಾರ್ಯದರ್ಶಿ ಸೇವೆಗೆ ನೇಮಕ ಮಾಡಿಕೊಳ್ಳುವಂತೆ ತಾಲೂಕು ಬಾಪೂಜಿ ಹರಿಜನ ಸೇವಾ ಸಂಘ ಆಗ್ರಹಿಸಿದೆ.
    ಪರಿಶಿಷ್ಟ ಜಾತಿಗೆ ಸೇರಿದ ಎಸ್. ಮೂರ್ತಿಯವರನ್ನು ಪ್ರಮುಖ ಹುದ್ದೆಯಿಂದ ಹೊರಗಿಡುವ ಹುನ್ನಾರ ನಡೆಸಲಾಗಿದ್ದು, ಕಾರ್ಯದರ್ಶಿ ಹುದ್ದೆಯಲ್ಲಿದ್ದ ಮೂರ್ತಿಯವರ ಮೇಲೆ ವಿನಾಕಾರಣ ಕರ್ತವ್ಯಲೋಪ ಆರೋಪ ಮಾಡಿ ೨೦೧೮ರಲ್ಲಿ ಸೇವೆಯಿಂದ ಅಮಾನತು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್ ಪಿಟೀಷನ್ ಹಾಕಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿಯವರು ೩ ವಾರಗಳೊಗಾಗಿ ಕಾರ್ಯದರ್ಶಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವಂತೆ ಜು.೨ರಂದು ತೀರ್ಪು ನೀಡಿದ್ದಾರೆ. ಈ ಆದೇಶವನ್ನು ಪಾಲಿಸದೆ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇದನ್ನು ಸಂಘವು ಖಂಡಿಸುತ್ತದೆ.
   ತಕ್ಷಣ ಸರ್ಕಾರ ನ್ಯಾಯಾಲಯದ ಆದೇಶದಂತೆ ಮೂರ್ತಿಯವರನ್ನು ಮರು ನೇಮಕ ಮಾಡಿಕೊಳ್ಳಬೇಕು. ದಲಿತ ವಿರೋಧಿ ನೀತಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗು ಸಭಾಧ್ಯಕ್ಷರ ನಿವಾಸದ ಮುಂದೆ ಬೃಹತ್ ಹೋರಾಟ ನಡೆಸುವುದಾಗಿ ಸಂಘ ಎಚ್ಚರಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಎಂ. ರಾಜೇಂದ್ರ ತಿಳಿಸಿದ್ದಾರೆ.


ಶಿಕ್ಷಕರು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಿ : ಮಧುಕರ್ ವಿ. ಕಾನಿಟ್ಕರ್

ಭದ್ರಾವತಿ ತರುಣ ಭಾರತಿ ವಿದ್ಯಾಕೇಂದ್ರದ ಕೋಡಿಹಳ್ಳಿ ರಸ್ತೆಯಲ್ಲಿರುವ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಕಾರ್ಯಾಗಾರದ ಸಮಾರೋಪ ಸಮಾರಂಭ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕಿ ಜಯಶ್ರೀ ದಂಪತಿಯನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಭದ್ರಾವತಿ, ಆ. ೩೦: ಶಿಕ್ಷಕರು ವೃತ್ತಿ ಜೀವನದಲ್ಲಿ ಉತ್ತಮ ಗುಣಗಳನ್ನು ರೂಢಿಸಿಕೊಂಡಾಗ ಮಾತ್ರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ತರುಣ ಭಾರತಿ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಮಧುಕರ್ ವಿ. ಕಾನಿಟ್ಕರ್ ಹೇಳಿದರು.
    ಅವರು ಭಾನುವಾರ ತರುಣ ಭಾರತಿ ವಿದ್ಯಾಕೇಂದ್ರದ ಕೋಡಿಹಳ್ಳಿ ರಸ್ತೆಯಲ್ಲಿರುವ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಕಾರ್ಯಾಗಾರದ ಸಮಾರೋಪ ಸಮಾರಂಭ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
      ಶಿಕ್ಷಕರು ಮತ್ತು ಮಕ್ಕಳ ನಡುವಿನ ಸ್ವಭಾವಗಳು ಶಿಕ್ಷಣದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಉತ್ತಮ ಸ್ವಭಾವಗಳು ಭವಿಷ್ಯದಲ್ಲಿ ಮಕ್ಕಳ ವ್ಯಕ್ತಿತ್ವ ರೂಪಿಸುತ್ತವೆ. ನಮ್ಮ ದೇಶ, ನಮ್ಮ ಸಮಾಜ, ನಮ್ಮ ಸಂಸ್ಕೃತಿ, ಸ್ವಾಭಿಮಾನದ ಗುಣಗಳನ್ನು ಶಿಕ್ಷಣದ ಜೊತೆ ಜೊತೆಗೆ ತಿಳಿಸಿಕೊಡಬೇಕಾಗಿದೆ. ಶಿಕ್ಷಕರ ವೃತ್ತಿ ಬದುಕು ಸಾರ್ಥಕವಾಗಬೇಕೆಂದರು.
    ನ್ಯೂಟೌನ್ ಬಾಲಬಾರತಿ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ ಮಾತನಾಡಿ, ನಗರದಲ್ಲಿ ಮೊದಲ ಬಾರಿಗೆ ವಿದ್ಯಾಸಂಸ್ಥೆ ಆರಂಭಗೊಂಡಾಗ ಎದುರಾದ ಸಮಸ್ಯೆಗಳು, ೩೫ ವರ್ಷಗಳ ನಿರಂತರ ಸೇವೆಯಲ್ಲಿ ಅನುಭವಿಸಿದ ಶಿಕ್ಷಕ ವೃತ್ತಿಯಲ್ಲಿನ ಸವಾಲುಗಳನ್ನು ವಿವರಿಸಿದರು.
    ಇದಕ್ಕೂ ಮೊದಲು ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದ ಅನುಭವಗಳನ್ನು ಶಿಕ್ಷಕರಾದ ತೇಜಸ್ವಿ, ಶಿಲ್ಪ, ರಾಘವಿ ಮತ್ತು ಪೂರ್ಣಿಮಾ ಹಂಚಿಕೊಂಡರು. ಕಾರ್ಯಾಗಾರ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಹಲವು ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
    ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕಿ ಜಯಶ್ರೀ ದಂಪತಿಯನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು. ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ. ಎಂ.ಎಚ್ ವಿದ್ಯಾಶಂಕರ್ ಉಪಸ್ಥಿತರಿದ್ದರು.  ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಚ್ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.
    ಮುಖ್ಯ ಶಿಕ್ಷಕಿ ರಾಧಿಕಾ ನಿರೂಪಿಸಿದರು. ಹಳೇ ವಿದ್ಯಾರ್ಥಿನಿ ದೃತಿ ಪ್ರಾರ್ಥಿಸಿದರು. ಶಿಕ್ಷಕಿ ಸುಜಾತ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಕಾರ್ಯಾಗಾರದ ವರದಿ ಮಂಡಿಸಿದರು. ವಿದ್ಯಾಕೇಂದ್ರದ ಖಜಾಂಚಿ ವಿಶ್ವನಾಥ್ ವಂದಿಸಿದರು.  

ಭದ್ರೆ ನದಿಯಲ್ಲ, ಐತಿಹಾಸಿಕ ಸ್ಥಳದ ಹೆಗ್ಗುರುತು

ಹೆಸರಿಗೆ ತಕ್ಕಂತೆ ಭವ್ಯ ಜಲಾಶಯ

ಭದ್ರಾ ಜಲಾಶಯ
* ಅನಂತಕುಮಾರ್
ಭದ್ರಾವತಿ: ನಾಡಿನ ಜೀವನದಿ ಕಾವೇರಿಯಂತೆ ಭದ್ರೆಗೂ ಒಂದು ಅಸ್ತಿತ್ವವಿದ್ದು, ಭದ್ರೆ ತನ್ನ ಇತಿಹಾಸದ ಗರ್ಭದೊಳಗೆ ಅಡಗಿಸಿಟ್ಟುಕೊಂಡಿರುವ ಭವ್ಯಪರಂಪರೆ ಇದೀಗ ಅನಾವರಣಗೊಳ್ಳುವ ಕಾಲ ಸನ್ನಿಹಿತವಾಗುತ್ತಿದೆ.
        ನಗರದ ಹಿರಿಯ ರಂಗದಾಸೋಹಿ, ಶಿಲ್ಪ ಕಲಾವಿದ ಹಾಗೂ ವರ್ಣ ವಿನ್ಯಾಸಕರಾಗಿರುವ ಎಸ್.ಜಿ ಶಂಕರಮೂರ್ತಿಯವರು ಭದ್ರೆ ತನ್ನ ಇತಿಹಾಸದ ಗರ್ಭದೊಳಗೆ ಅಡಗಿಸಿಟ್ಟುಕೊಂಡಿರುವ ಭವ್ಯಪರಂಪರೆ ಅನಾವರಣಕ್ಕೆ ಮುಂದಾಗಿದ್ದಾರೆ. ಭದ್ರೆ ಎಂಬುದು ಕೇವಲ ನದಿಯಲ್ಲ, ಅದು ಒಂದು ಐತಿಹಾಸಿಕ ಸ್ಥಳದ ಹೆಗ್ಗುರುತು.
         ಪೌರಾಣಿಕ ಇತಿಹಾಸ :
       ಕ್ರಿ.ಶ ೧೨೧೬ರ ಕಾಲಘಟ್ಟದಲ್ಲಿ ಆಳ್ವಿಕೆ ನಡೆಸಿದ್ದ ವೀರನರಸಿಂಹ ಭೂಪತೆ (ವಿಷ್ಣುವರ್ಧನ ಹಾಗು ಶಾಂತಲೆಯ ಮರಿ ಮೊಮ್ಮೊಗ) ವೆಂಕಿ ಮಹರ್ಷಿಯವರು ಭದ್ರಾ ನದಿ ದಡದಲ್ಲಿ ತಪ್ಪಸ್ಸು ನಡೆಸಿದ್ದ ಹಿನ್ನಲೆಯಲ್ಲಿ ಅಂದು ವಂಕಿ ತಾಣವಾಗಿದ್ದ ಸ್ಥಳದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ನಿರ್ಮಾಣ ಮಾಡಿ, ೧೨೨೬ನೇ ವ್ಯಯನಾಮ ಸಂವತ್ಸರದಂದು ಲೋಕಾರ್ಪಣೆ ಮಾಡಿ ವಂಕಿಪುರ ಎಂದು ನಾಮಕರಣ ಮಾಡುವ ಮೂಲಕ ಭದ್ರೆಯ ಆರಾಧನೆಗೂ ಮುನ್ನುಡಿ ಬರೆದಿದ್ದನು ಎನ್ನಲಾಗಿದೆ. ಈ ಕುರಿತ ಮಾಹಿತಿ ಪೌರಾಣಿಕ ಇತಿಹಾಸದಲ್ಲಿ ದಾಖಲಾಗಿದೆ ಎಂಬುದು ಊರಿನ ಹಿರಿಯರ ಉಲ್ಲೇಖವಾಗಿದೆ.  
      ೮.೫ ಅಡಿ ಎತ್ತರದ ಭದ್ರೆ ವಿಗ್ರಹ:
     ಭದ್ರೆಯ ಇತಿಹಾಸ ಅನಾವರಣಗೊಳಿಸುವ ಕಾಲ ಇದೀಗ ಕೂಡಿ ಬಂದಿದ್ದು, ನಗರಸಭೆ ಆಡಳಿತ ಭದ್ರೆ ವಿಗ್ರಹ ಪ್ರತಿಷ್ಠಾಪನೆಗೆ ಮುಂದಾಗಿದೆ. ದೈವ ಸ್ವರೂಪಿಣಿ ಭದ್ರೆಯ ವಿಗ್ರಹದ ಅಡಿಭಾಗದಲ್ಲಿ ವೀರನರಸಿಂಹ ಭೂಪತೆ ಭದ್ರಾಪಾನ ಮಾಡುವ ಸುಂದರ ವಿಗ್ರಹ ಎಸ್.ಜಿ ಶಂಕರಮೂರ್ತಿರವರ ಕಲಾ ಕೌಶಲ್ಯತೆಯಲ್ಲಿ ಆಕರ್ಷಕವಾಗಿ ನಿರ್ಮಾಣಗೊಳ್ಳುತ್ತಿದೆ. ಸುಮಾರು ೮.೫ ಅಡಿ ಎತ್ತರದ ವಿಗ್ರಹ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಪ್ರತಿಷ್ಠಾಪನೆಗೊಳ್ಳಲಿದ್ದು, ಆ ಮೂಲಕ ಗರ್ಭದೊಳಗೆ ಅಡಗಿರುವ ಇತಿಹಾಸ ಅನಾವರಣಗೊಳ್ಳಲಿದೆ.


ಭದ್ರೆ ವಿಗ್ರಹ ನಿರ್ಮಾಣದಲ್ಲಿ ತೊಡಗಿರುವ ಹಿರಿಯ ಶಿಲ್ಪ ಕಲಾವಿದ, ರಂಗದಾಸೋಹಿ ಜಿ.ಎಸ್ ಶಂಕರಮೂರ್ತಿ ದಂಪತಿ.

      ಭದ್ರಾ ಜಲಾಶಯ:
      ಪಶ್ಚಿಮಘಟ್ಟಗಳ ಪರ್ವತ ಶ್ರೇಣಿಯಲ್ಲಿ ಹುಟ್ಟಿ ಬೆಟ್ಟಗುಡ್ಡಗಳ ನಡುವೆ ಹರಿಯುವ ಭದ್ರೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರಿನ ಕೂಡಲಿಯಲ್ಲಿ ತುಂಗಾನದಿಯೊಂದಿಗೆ ಸೇರಿ ಮುಂದೆ ಹರಿದು ತುಂಗಾಭದ್ರಾ ಜಲಾಶಯ ಸೇರುತ್ತದೆ. ಈ ನದಿಗೆ ೧೯೬೫ರಲ್ಲಿ ಸುಮಾರು ೪೩ ಕೋಟಿ ರು. ವೆಚ್ಚದಲ್ಲಿ ಪ್ರಸ್ತುತ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ನಿರ್ಮಾಣಗೊಂಡ ಜಲಾಶಯ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರಿಗೆ ವರದಾನವಾಗಿದೆ. ಒಟ್ಟು ೧,೬೨,೮೧೮ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ.
     ಭದ್ರಾ ಜಲಾಶಯ ೧೮೬ ಅಡಿ ಎತ್ತರವಿದ್ದು, ಸುಮಾರು ೭೧ ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ವಿದೇಶಿ ತಂತ್ರಜ್ಞಾನದ ಅತ್ಯಾಧುನಿಕ ಸ್ವಯಂ ಚಾಲಿತ ೪ ಕ್ರೆಸ್ಟ್‌ಗೇಟ್‌ಗಳನ್ನು ಒಳ ಗೊಂಡಿದೆ. ಅಣೆಕಟ್ಟೆಯ ಮೇಲ್ಭಾಗದಲ್ಲಿ ಎರಡು ಕಾರುಗಳು ಒಟ್ಟಿಗೆ ಚಲಿಸುವಷ್ಟು ವಿಶಾಲ ಸ್ಥಳಾವಕಾಶವಿದೆ. ಎಡ-ಬಲ ಎರಡು ಬೃಹತ್ ನಾಲೆಗಳನ್ನು ಒಳಗೊಂಡಿದೆ.  ಎಡದಂಡೆ ನಾಲೆ ಮೂಲಕ ಶಿವಮೊಗ್ಗ ಹಾಗೂ ಭದ್ರಾವತಿ ತಾಲ್ಲೂಕಿನ ಸುಮಾರು ೮,೩೦೦ ಹೆಕ್ಟೇರು ಪ್ರದೇಶಕ್ಕೆ  ಹಾಗೂ ಬಲದಂಡೆ ನಾಲೆ ಮೂಲಕ ತರೀಕೆರೆ ಹಾಗೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. 
         ಜಲಾಶಯದ ನೀರನ್ನು ಕೇವಲ ನೀರಾವರಿಗೆ ಮಾತ್ರವಲ್ಲದೆ ಕುಡಿಯುವ ನೀರು, ಕೈಗಾರಿಕೆ ಹಾಗೂ ವಿದ್ಯುತ್ ಉತ್ಪಾದನೆಗೂ ಬಳಸಿಕೊಳ್ಳಲಾಗುತ್ತಿದೆ. ಸುಮಾರು ೩೯ ಮೆಗವ್ಯಾಟ್ ವಿದ್ಯುತ್  ಉತ್ಪಾದಿಸಲಾಗುತ್ತಿದೆ. ಕಳೆದ ಹಲವಾರುಗಳಿಂದ ವರ್ಷಗಳಿಂದ ಬಯಲುಸೀಮೆ ಹಾಗೂ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶ ದಿಂದ ಭದ್ರಾ ಮೇಲ್ಡಂಡೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ಇನ್ನೂ ಪ್ರಗತಿಯಲ್ಲಿದೆ.
         ೨೮ ಬಾರಿ ಪೂರ್ಣ ಪ್ರಮಾಣದಲ್ಲಿ ಭರ್ತಿ:  
ಜಲಾಶಯ ನಿರ್ಮಾಣಗೊಂಡ ಇದುವರೆಗೂ ಒಟ್ಟು ೨೮ ಬಾರಿ  ಪೂರ್ಣ ಪ್ರಮಾಣದಲ್ಲಿ ಭತ್ತಿಯಾಗಿದ್ದು, ೧೯೬೯ರಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿತ್ತು. ನಂತರ ೧೯೯೦ ರಿಂದ ೯೪ರ ವರೆಗೆ ೫ ಬಾರಿ, ೨೦೦೫ ರಿಂದ ೨೦೧೧ರ ವರೆಗೆ ೬ ಬಾರಿ, ೨೦೧೩ ಮತ್ತು ೨೦೧೪ರಲ್ಲಿ ಹಾಗೂ ೨೦೧೮ ಮತ್ತು ೨೦೧೯ರಲ್ಲಿ ಜಲಾಶಯ ಭರ್ತಿಯಾಗಿದ್ದು, ಹಲವು ಬಾರಿ ೧೭೦ ಅಡಿಗೂ ಅಧಿಕ ನೀರು ಸಂಗ್ರಹವಾದರೂ ಸಹ ಭರ್ತಿಯಾಗಿಲ್ಲ.


           ಹಲವು ವಿಶೇಷತೆಗಳು:
     ದೇಶದಲ್ಲಿ ೨ನೇ ಅತಿ ಎತ್ತರದ ಜಲಾಶಯ ಇದಾಗಿದ್ದು, ೧೮೬ ಅಡಿ ಎತ್ತರ ಹೊಂದಿದೆ. ಜಲಾಶಯದ ನೀರು ಬಿದಿರು ಹಸಿರಿನಿಂದ ಕಂಗೊಳಿಸುವುದು ವಿಶೇಷವಾಗಿದ್ದು, ಜಲಾಶಯದ ವ್ಯಾಪ್ತಿಯನ್ನು ಕಳಲೆ ಔಷಧಿ ಸಸಿಗಳು ಆವರಿಸಿಕೊಂಡಿವೆ. ಈ ಹಿನ್ನಲೆಯಲ್ಲಿ ಕ್ರಿಮಿಕೀಟಗಳಿಂದ ಮುಕ್ತಿಹೊಂದಿದ ಪರಿಶುದ್ಧ ನೀರು ಇದಾಗಿದೆ. ಭದ್ರಾ ಆಭಯಾರಣ್ಯದಲ್ಲಿ ೧೪೭ ಕಿ.ಮೀ. ವರೆಗೆ, ೫೨ ಕಿ.ಮೀ ಎನ್.ಆರ್ ಪುರದ ವರೆಗೆ, ೭೦ ಕಿ.ಮೀ. ಚಿಕ್ಕಮಗಳೂರುವರೆಗೆ, ೩೨ ಕಿ.ಮೀ. ಮುದ್ದಿನಕೊಪ್ಪದವರೆಗೆ ಜಲಾಶಯದ ನೀರು ವಿಸ್ತರಿಸಿಕೊಂಡಿದೆ. 
    ಭದ್ರಾ ನದಿಗೆ ಯಾವುದೇ ಉಪನದಿಗಳಿಲ್ಲ. ಜಲಾಶಯದಲ್ಲಿ ಅಲ್ಲಲ್ಲಿ ಹಸಿರು ಗುಡ್ಡಗಳಿದ್ದು, ಪ್ರತಿ ವರ್ಷ ಆನೇಕ ಜಾತಿಯ ಪಕ್ಷಿಗಳು ದೇಶ-ವಿದೇಶಗಳಿಂದ ಇಲ್ಲಿಗೆ ವಲಸೆ ಬಂದು ಸುಮಾರು ೫-೬ ತಿಂಗಳುಗಳು ಇದ್ದು, ಪುನಃ ಹಿಂದಿರುಗುತ್ತವೆ. ಈ ಪಕ್ಷಿಗಳ ವೀಕ್ಷಣೆಗಾಗಿಯೇ ಗುಡ್ಡಗಳಲ್ಲಿ ಪ್ರವಾಸಿಗರಿಗೆ ವೀಕ್ಷಣಾ ಧಾಮಗಳನ್ನು ನಿರ್ಮಿಸಲಾಗಿದ್ದು, ಅಲ್ಲದೆ ಬೋಟಿಂಗ್ ವ್ಯವಸ್ಥೆ ಸಹ ಕಲ್ಪಿಸಲಾಗಿದೆ. 
        ಕಳೆದ ಕೆಲವು ವರ್ಷಗಳ ಹಿಂದೆ ಜಲಾಶಯಕ್ಕೆ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ವೈಭವಯುತವಾಗಿ ಕಂಗೊಳಿಸುತ್ತದೆ. ಒಟ್ಟಾರೆ ಜಲಾಶಯ ಹಲವು ವಿಶೇಷತೆಗಳಿಂದ ಕೂಡಿದೆ.
      ಕೆಆರ್‌ಎಸ್ ಮಾದರಿ ಉದ್ಯಾನವನ:
   ಜಲಾಶಯ ಮುಂಭಾಗ ವಿಶಾಲವಾದ ಸ್ಥಳವಕಾಶವಿದ್ದು, ಈ ಸ್ಥಳದಲ್ಲಿ ಕೆಆರ್‌ಎಸ್ ಮಾದರಿ ಉದ್ಯಾನವನ ನಿರ್ಮಾಣ ಮಾಡುವಂತೆ ಹಲವಾರು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರಕ್ಕೆ ಒತ್ತಾಯಿಸಿಕೊಂಡು ಬರುತ್ತಿದ್ದಾರೆ. ಆದರೆ ಇದುವರೆಗೂ ಕಾರ್ಯಗತಗೊಂಡಿಲ್ಲ. ಅಲ್ಲದೆ ತಾಲೂಕಿನ ಅನ್ನದಾತ ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ ಅತಿ ಎತ್ತರದ ಪ್ರತಿಮೆ ಸಹ ನಿರ್ಮಾಣಬೇಕೆಂಬ ಒತ್ತಾಯ ಕೇಳಿ ಬರುತ್ತಿದ್ದು, ಆದರೆ ಈ ಬಗ್ಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

Saturday, August 29, 2020

ಎಂಪಿಎಂ ಉದ್ಯೋಗಿ ಬಿ.ವಿ ವೆಂಕಟೇಶ್ ನಿಧನ

ಬಿ.ವಿ ವೆಂಕಟೇಶ್
ಭದ್ರಾವತಿ, ಆ. ೨೯: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಉದ್ಯೋಗಿ ಬಿ.ವಿ ವೆಂಕಟೇಶ್ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
    ಜನ್ನಾಪುರ ರಾಜಪ್ಪ ಲೇಔಟ್‌ನಲ್ಲಿ ವಾಸಿಸುತ್ತಿದ್ದ ಇವರನ್ನು ಎಂಎಸ್‌ಐಎಲ್‌ಗೆ ಕರ್ತವ್ಯಕ್ಕೆ ನಿಯೋಜನೆಗೊಳಿಸಲಾಗಿತ್ತು. ಈ ಹಿಂದೆ ಎಂಪಿಎಂ ಸಹಕಾರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ಎಂಪಿಎಂ ಕಾರ್ಮಿಕರು ಹಾಗೂ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇಂದಿಗೂ ಪರಿಶಿಷ್ಟರು ಮೌಢ್ಯಗಳಿಂದ ಹೊರಬರಲು ಸಾಧ್ಯವಾಗಿಲ್ಲ

ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಹಾಲೇಶಪ್ಪ ವಿಷಾದ

ಭದ್ರಾವತಿ ತಾಲೂಕಿನ ಅರಬಿಳಿಚಿ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಶಾಖೆ ಉದ್ಘಾಟನಾ ಸಮಾರಂಭ ನಡೆಯಿತು.
ಭದ್ರಾವತಿ, ಆ. ೨೯: ದೇಶದಲ್ಲಿ ಬಹುಸಂಖ್ಯಾತರಾದ ಪರಿಶಿಷ್ಟರು ೨೧ನೇ ಶತಮಾನದಲ್ಲೂ ಮೌಢ್ಯ ಆಚರಣೆಗಳಿಂದ ಹೊರಬರಲು ಸಾಧ್ಯವಾಗಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಹಾಲೇಶಪ್ಪ ವಿಷಾದ ವ್ಯಕ್ತಪಡಿಸಿದರು.
    ಅವರು ತಾಲೂಕಿನ ಅರಬಿಳಿಚಿ ಗ್ರಾಮ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಮನುಸ್ಮೃತಿಯು ಹೇರಿದ ಮೌಢ್ಯಗಳಿಂದಾಗಿ ಪರಿಶಿಷ್ಟರು ಶೋಷಣೆಗೆ ಒಳಗಾಗಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ಶೋಷಣೆಗಳ ವಿರುದ್ಧ ಹೋರಾಟ ನಡೆಸುವ ಮೂಲಕ ದೇಶದಲ್ಲಿ ಎಲ್ಲರೂ ಸಮಾನವಾಗಿ ಬದುಕುವ ಸಂವಿಧಾನ ರೂಪಿಸಿಕೊಟ್ಟಿದ್ದಾರೆ. ರಾಜ್ಯದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ನೇತೃತ್ವದಲ್ಲಿ ಆರಂಭವಾದ ದಲಿತ ಚಳುವಳಿಗಳು ಪರಿಶಿಷ್ಟರ ಮೇಲಿನ  ದೌರ್ಜನ್ಯ, ದಬ್ಬಾಳಿಕೆಗಳನ್ನು ಎದುರಿಸುವಲ್ಲಿ ಆತ್ಮವಿಶ್ವಾಸ ಮೂಡಿಸಿದವು ಎಂದರು.
      ದೇಶದಲ್ಲಿ ಪರಿಶಿಷ್ಟರ ಮೇಲೆ ಇಂದಿಗೂ ದೌರ್ಜನ್ಯ, ದಬ್ಬಾಳಿಕೆಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ಧ ಹೋರಾಟ ನಡೆಸಲು ಪರಿಶಿಷ್ಟರು ಹೆಚ್ಚಿನ ರೀತಿಯಲ್ಲಿ ಸಂಘಟಿತರಾಗಬೇಕಾಗಿದೆ ಎಂದರು.  
ಜಿಲ್ಲಾ ಸಂಘಟನಾ ಸಂಚಾಲಕರಾದ ಎಂ. ಪಳನಿರಾಜ್, ಎಂ.ಆರ್ ಶಿವಕುಮಾರ್ ಆಸ್ತಿ, ಎ.ಡಿ ಆನಂದಪ್ಪ, ಹಕ್ಕಿಪಿಕ್ಕಿ ಜನಾಂಗದ ಮುಖಂಡರಾದ ತಾಲೂಕು ಸಂಘಟನಾ ಸಂಚಾಲಕ ಜಗ್ಗು, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ಸೂಗೂರು ಪರಮೇಶ್, ಜಿಲ್ಲಾ ಸಮಿತಿ ಸದಸ್ಯರಾದ ಎಸ್.ಆರ್ ಕಲ್ಲೇಶಪ್ಪ, ಶ್ರೀನಿವಾಸ್, ಕೆಂಚಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕು  ಪ್ರಧಾನ ಸಂಚಾಲಕ ಎಂ. ಕುಬೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.

ಆ.೩೦ರಂದು ರಕ್ತದಾನ ಶಿಬಿರ

ಭದ್ರಾವತಿ, ಆ. ೨೯: ಪಾಪ್ಯುಲರ್ ಫ್ರಂಟ್  ಆಫ್  ಇಂಡಿಯಾ ತಾಲೂಕು ಶಾಖೆ ವತಿಯಿಂದ ಆ.೩೦ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
        ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೩ ಗಂಟೆ ವರೆಗೆ ಹಳೇನಗರದ ಜಾಮಿಯಾ ಶಾದಿಮಹಲ್ ಸಭಾಂಗಣದಲ್ಲಿ ಶಿಬಿರ ನಡೆಯಲಿದ್ದು, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪಿಎಫ್‌ಐ ತಾಲೂಕು ಶಾಖೆ ಅಧ್ಯಕ್ಷ ಮುಹಮ್ಮದ್ ಸಾಧಿಕ್‌ವುಲ್ಲಾ ಕೋರಿದ್ದಾರೆ.




ಸೆ.೧ರಂದು ಸಂಗಮೇಶ್ವರ್ ಬಾಗಿನ ಸಮರ್ಪಣೆ

ಭದ್ರಾವತಿ, ಆ. ೨೯: ಈ ಬಾರಿ ಸಹ ಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಈ ಹಿನ್ನಲೆಯಲ್ಲಿ ಸೆ.೧ರಂದು ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್ ಬಾಗಿನ ಸಮರ್ಪಿಸಲಿದ್ದಾರೆ.
   ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆಯೊಂದಿಗೆ ಬೆಳಿಗ್ಗೆ ೧೧.೩೦ಕ್ಕೆ ಬಾಗಿನ ಸಮರ್ಪಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.


ಆ.೩೧ರಂದು ದೇವರಾಜ ಅರಸು, ರಾಮಕೃಷ್ಣ ಹೆಗಡೆ ಜನ್ಮದಿನಾಚರಣೆ

ಭದ್ರಾವತಿ, ಆ. ೨೯: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಆ.೩೧ರಂದು ಸಂಜೆ ೪ ಗಂಟೆಗೆ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಹಾಗು ರಾಮಕೃಷ್ಣ ಹೆಗಡೆಯವರ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ.
      ಜನ್ನಾಪುರ ಜಯಶ್ರೀ ಕಲ್ಯಾಣ ಮಂಟಪ ಮುಂಭಾಗದ ಶ್ರೀ ಸರಸ್ಪತಿ ಕಾಂಪ್ಲೆಕ್ಸ್ ಮಹಡಿಯಲ್ಲಿರುವ ಸಂಘದ ಕಛೇರಿಯಲ್ಲಿ ನಡೆಯಲಿರುವ  ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಟ್ರಸ್ಟ್ ಛೇರ‍್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಕೋರಿದ್ದಾರೆ.


Friday, August 28, 2020

ಶಿಕ್ಷಕರು ಮಕ್ಕಳಿಗೆ ವಚನಗಳ ಮೌಲ್ಯಗಳನ್ನು ತಿಳಿಸಿ ಕೊಡಿ : ಟಿ.ಎನ್ ಸೋಮಶೇಖರಯ್ಯ

ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೋಠಿ ವಂಶಸ್ಥರು ಇವರ ಸಹಯೋಗದೊಂದಿಗೆ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ  'ವಚನ ಸಾಹಿತ್ಯ ಮತ್ತು ಜೀವನ ಮೌಲ್ಯ' ಎಂಬ ವಿಷಯ ಕುರಿತ ಮ. ಮಲ್ಲಿಕಾರ್ಜುನ ಕೋಠಿ ದತ್ತಿನಿಧಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್  ಸೋಮಶೇಖರಯ್ಯ  ಉದ್ಘಾಟಿಸಿದರು.
ಭದ್ರಾವತಿ, ಆ. ೨೮: ಶಿಕ್ಷಕರು ಮಕ್ಕಳಿಗೆ ವಚನಗಳ ಮೌಲ್ಯಗಳನ್ನು ತಿಳಿಸಿಕೊಡುವ ಜೊತೆಗೆ ಅವುಗಳನ್ನು ಹೆಚ್ಚಾಗಿ ಅಭ್ಯಾಸ ಮಾಡುವಂತೆ ಪ್ರೇರೇಪಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕರೆ ನೀಡಿದರು.
      ಅವರು ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೋಠಿ ವಂಶಸ್ಥರು ಇವರ ಸಹಯೋಗದೊಂದಿಗೆ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ  'ವಚನ ಸಾಹಿತ್ಯ ಮತ್ತು ಜೀವನ ಮೌಲ್ಯ' ಎಂಬ ವಿಷಯ ಕುರಿತ ಮ. ಮಲ್ಲಿಕಾರ್ಜುನ ಕೋಠಿ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
        ವಚನಗಳು ಪ್ರತಿಯೊಬ್ಬರ ಬದುಕಿಗೆ ಅವಶ್ಯಕವಾಗಿದ್ದು, ಎಲ್ಲರೂ ಉತ್ತಮ ಮಾರ್ಗದಲ್ಲಿ ಸಾಗಲು ಸಹಕಾರಿಯಾಗಿವೆ. ಈ ಹಿನ್ನಲೆಯಲ್ಲಿ ಮಕ್ಕಳು ಅವುಗಳನ್ನು ಅಭ್ಯಸಿಸುವ ಜೊತೆಗೆ ಅವುಗಳ ಮೌಲ್ಯಗಳನ್ನು ಅರಿತುಕೊಳ್ಳಬೇಕೆಂದರು.
     ಸರ್ಕಾರ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮ ಮಹತ್ವಪೂರ್ಣವಾಗಿದ್ದು, ಈ ಕಾರ್ಯಕ್ರಮ ಇದೀಗ ಹಳ್ಳಿ, ಹಳ್ಳಿಗಳಲ್ಲಿ, ತಾಲೂಕು ಮಟ್ಟದಲ್ಲಿ ಯಶಸ್ಸು ಕಾಣುತ್ತಿದೆ. ಪ್ರಸ್ತುತ ಕೋವಿಡ್-೧೯ರ ಹಿನ್ನಲೆಯಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಆ ಮೂಲಕ ಕೋವಿಡ್-೧೯ ನಿರ್ಮೂಲನೆಗೆ ಮುಂದಾಗಬೇಕೆಂದರು.
    ಕಸಾಪ ಮಾಜಿ ಕೋಶಾಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ ಉಪನ್ಯಾಸ ನೀಡಿ, ಭಾರತ ದೇಶ ವಿಭಿನ್ನ ಸಂಸ್ಕೃತಿಯನ್ನು ಹೊಂದಿದೆ. ಜೊತೆಗೆ ಜಗತ್ತಿಗೆ ಗುರುವಾಗಬಲ್ಲ ಎಲ್ಲಾ ಶಕ್ತಿಯನ್ನು ಸಹ ಹೊಂದಿದೆ. ಮೌಲ್ಯಗಳು ಭಾಷೆಯನ್ನು ಮೀರಿ ಬೆಳೆಯುತ್ತಿವೆ ಎಂದರು.
    ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.  ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ, ಕಾರ್ಯದರ್ಶಿ ವೈ.ಕೆ ಹನುಮಂತಯ್ಯ ಉಪಸ್ಥಿತರಿದ್ದರು.
   ಕಾರ್ಯದರ್ಶಿ ಚನ್ನಪ್ಪ ಸಿ. ಚನ್ನಪ್ಪ ನಿರೂಪಿಸಿದರು. ಮುಖ್ಯೋಪಾಧ್ಯಾಯ ಪರಮೇಶ್ವರಪ್ಪ ಸ್ವಾಗತಿಸಿದರು. ಶಿಕ್ಷಕ ಎ. ತಿಪ್ಪೇಸ್ವಾಮಿ ವಂದಿಸಿದರು.

ಶಾಸಕರಿಂದ ಒತ್ತುವರಿ ನೆಪದಲ್ಲಿ ರೈತರ ಮೇಲೆ ದೌರ್ಜನ್ಯ

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಆರೋಪ

ಭದ್ರಾವತಿಯಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ಹಿಂದೆ ಸ್ಮಶಾನ ಭೂಮಿ ಜಾಗಕ್ಕೆ ಸಂಬಂಧಿಸಿದಂತೆ ನಡೆದಿರುವ ಗಲಾಟೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಗ್ರಾಮಸ್ಥರು ಹಾಗು ಬೆಂಬಲಿಗರೊಂದಿಗೆ ಸ್ಥಳಕ್ಕೆ ನ್ಯಾಯ ಕೇಳಲು ಹೋದಾಗ ವಿನಾಕಾರಣ ಗಲಾಟೆ ನಡೆಯುವಂತೆ ಪ್ರಚೋದಿಸಲಾಗಿದ್ದು, ಈ ಹಿನ್ನಲೆಯಲ್ಲಿ ಉಂಟಾಗಿರುವ ಗಲಾಟೆಯಲ್ಲಿ ನಮ್ಮ ಪಾತ್ರವಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದ್ದು, ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸಂಗಮೇಶ್ವರ್ ಅಣತಿಯಂತೆ ನಡೆದುಕೊಳ್ಳುತ್ತಿದ್ದು, ಭಯಭೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ವಾತಾವರಣದಿಂದ ಅಧಿಕಾರಿಗಳು ಹೊರಬರುವಂತಾಗಬೇಕು. ತಮ್ಮ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತಾಗಬೇಕು.
                                             -ಎಂ.ಜೆ ಅಪ್ಪಾಜಿ, ಮಾಜಿ ಶಾಸಕರು, ಭದ್ರಾವತಿ
ಭದ್ರಾವತಿ, ಆ. ೨೮: ವಿನಾಕಾರಣ ಕ್ಷೇತ್ರದ ನಿವಾಸಿಗಳಲ್ಲಿ ಗೊಂದಲ ಉಂಟು ಮಾಡಿ ದಾರಿ ತಪ್ಪಿಸುವ ಕಾರ್ಯದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮುಂದಾಗಿದ್ದು, ಮೊದಲು ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಗಮನ ಹರಿಸಲಿ ಎಂದು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಆಗ್ರಹಿಸಿದರು.
         ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಈ ಹಿಂದೆ ಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾವರಘಟ್ಟ ಸ್ಮಶಾನ ಭೂಮಿಗೆ ಜಾಗ ಮಂಜೂರಾತಿ ಮಾಡಿಸಲಾಗಿತ್ತು. ಇದೀಗ ಈ ಜಾಗಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಗೊಂದಲ ಉಂಟು ಮಾಡಲಾಗುತ್ತಿದೆ. ಒತ್ತುವರಿ ನೆಪದಲ್ಲಿ ಅಮಾಯಕ ರೈತರ ಜಮೀನು ಕಸಿದುಕೊಂಡು ದೌರ್ಜನ್ಯ ವೆಸಲಾಗುತ್ತಿದ್ದು, ಗ್ರಾಮಸ್ಥರಿಗೆ ನಿವೇಶನ ಹಂಚುವ ಸುಳ್ಳು ಭರವಸೆ ನೀಡಲಾಗಿದೆ ಎಂದು ಆರೋಪಿಸಿದರು.
       ಸ್ಮಶಾನ ಜಾಗದ ಸಮೀಪದಲ್ಲಿ ಸುಮಾರು ೩೫ ಮಂದಿ ರೈತರಿದ್ದು, ಈ ಪೈಕಿ ಕೇವಲ ಇಬ್ಬರು ರೈತರ ೨೦ ಗುಂಟೆ ಹಾಗು ೭ ಗುಂಟೆ ಜಮೀನನ್ನು ಮಾತ್ರ ಒತ್ತುವರಿ ನೆಪದಲ್ಲಿ ತೆರವುಗೊಳಿಸಲಾಗಿದೆ. ಉಳಿದ ರೈತರ ಜಮೀನನ್ನು ತೆರವುಗೊಳಿಸದೆ ತಾರತಮ್ಯ ವೆಸಗಲಾಗಿದ್ದು, ಈ ತಾರತಮ್ಯ ನೀತಿಯನ್ನು ಖಂಡಿಸುವ ಜೊತೆಗೆ ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಎಂಪಿಎಂ ಹಾಗು ವಿಐಎಸ್‌ಎಲ್ ಕಾರ್ಖಾನೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ಭರವಸೆಗಳನ್ನು ಶಾಸಕರು ಈಡೇರಿಸಿಕೊಡಲು ಮುಂದಾಗಬೇಕೆಂದರು.
      ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ತಾಲೂಕು ಆಡಳಿತ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ. ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯತನ ಧೋರಣೆಯನ್ನು ವಿರೋಧಿಸಿ ಆ.೩೧ರಂದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
       ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿ.ಪಂ. ಸದಸ್ಯರಾದ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ತಾ.ಪಂ. ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಮುಖಂಡರಾದ ಆರ್. ಕರುಣಾಮೂರ್ತಿ, ಕರಿಯಪ್ಪ, ಬದರಿನಾರಾಯಣ, ಜೆ.ಎನ್ ಚಂದ್ರಹಾಸ, ಜಿ.ಡಿ ನಟರಾಜ್, ಎಂ.ಎಸ್ ಸುಧಾಮಣಿ, ವಿಶಾಲಾಕ್ಷಿ, ಮೈಲಾರಪ್ಪ, ಲೋಕೇಶ್ವರ್‌ರಾವ್, ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Thursday, August 27, 2020

ಸೂಡ ಸದಸ್ಯರಾಗಿ ವಿ. ಕದಿರೇಶ್, ಬಿ.ಜೆ ರಾಮಲಿಂಗಯ್ಯ ನೇಮಕ

ವಿ. ಕದಿರೇಶ್

ಭದ್ರಾವತಿ, ಆ. ೨೭: ಬಿಜೆಪಿ ಪಕ್ಷದ ನಗರದ ಇಬ್ಬರು ಹಿರಿಯ ಮುಖಂಡರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ(ಸೂಡ) ಸದಸ್ಯರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
   ಹೊಸಮನೆ ನಿವಾಸಿ, ಹಿರಿಯ ಮುಖಂಡ ವಿ. ಕದಿರೇಶ್‌ರವರನ್ನು ಸದಸ್ಯರನ್ನಾಗಿ ನೇಮಕಗೊಳಿಸಲಾಗಿದ್ದು, ಇವರು ೨ ದಶಕಗಳಿಗೂ ಹೆಚ್ಚು ಕಾಲದಿಂದ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಸುಮಾರು ೪ ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳನ್ನು ಅಲಂಕಸಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಸರ್ಕಾರ ಸೂಡ ಸದಸ್ಯರನ್ನಾಗಿ ನೇಮಕಗೊಳಿಸಿರುವುದು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗು ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದೆ.


ಬಿ.ಜೆ ರಾಮಲಿಂಗಯ್ಯ
  ಇನ್ನೊಬ್ಬ ಹಿರಿಯ ಮುಖಂಡ ಬಿ.ಜೆ ರಾಮಲಿಂಗಯ್ಯನವರನ್ನು ಸಹ ಸದಸ್ಯರನ್ನಾಗಿ ನೇಮಕಗೊಳಿಸಲಾಗಿದ್ದು, ಇವರು ವಿಐಎಸ್‌ಎಲ್ ನಿವೃತ್ತ ಉದ್ಯೋಗಿಯಾಗಿದ್ದಾರೆ. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅಲ್ಲದೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಆ.೨೮ರಂದು ‘ವಚನ ಸಾಹಿತ್ಯ ಮತ್ತು ಜೀವನ ಮೌಲ್ಯ’ ದತ್ತಿ ಕಾರ್ಯಕ್ರಮ

ಭದ್ರಾವತಿ, ಆ. ೨೭: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೋಠಿ ವಂಶಸ್ಥರು ಇವರ ಸಹಯೋಗದೊಂದಿಗೆ ಆ.೨೮ರಂದು 'ವಚನ ಸಾಹಿತ್ಯ ಮತ್ತು ಜೀವನ ಮೌಲ್ಯ' ಎಂಬ ವಿಷಯ ಕುರಿತು ಮ.ಮಲ್ಲಿಕಾರ್ಜುನ ಕೋಠಿ ದತ್ತಿನಿಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಮಧ್ಯಾಹ್ನ ೨.೩೦ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಉದ್ಘಾಟಿಸಲಿದ್ದು, ತಾಲೂಕು ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
   ಕಸಾಪ ಮಾಜಿ ಕೋಶಾಧ್ಯಕ್ಷ ಕತ್ತಲಗೆರೆ ತಿಮ್ಮಪ್ಪ ಉಪನ್ಯಾಸ ನೀಡಲಿದ್ದು, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ ಮತ್ತು ಉಪಾಧ್ಯಕ್ಷ ಡಾ. ನಾಸಿರ್ ಖಾನ್ ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಸಿ. ಚನ್ನಪ್ಪ ಕೋರಿದ್ದಾರೆ.


ರಾಘವೇಂದ್ರ ಸ್ವಾಮಿ ಮಠದಲ್ಲಿ ಸರಳವಾಗಿ ಜರುಗಿದ ಜಗನ್ನಾಥದಾಸರ ಆರಾಧನೆ

ಭದ್ರಾವತಿ ಹಳೇನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಾದ್ವ ಮಂಡಲಿ ವತಿಯಿಂದ ಗುರುವಾರ ಜಗನ್ನಾಥದಾಸರ ಆರಾಧನ ಮಹೋತ್ಸವ ನಡೆಯಿತು.
ಭದ್ರಾವತಿ, ಆ. ೨೭: ಹಳೇನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಾದ್ವ ಮಂಡಲಿ ವತಿಯಿಂದ ಗುರುವಾರ ಜಗನ್ನಾಥದಾಸರ ಆರಾಧನ ಮಹೋತ್ಸವ ನಡೆಯಿತು.
     ಆರಾಧನ ಮಹೋತ್ಸವ ಅಂಗವಾಗಿ ಪ್ರಕಾರದಲ್ಲಿ ಗ್ರಾಮ ಪ್ರದಕ್ಷಿಣೆ, ನಂತರ ಶ್ರೀನಿಧಿ ಆಚಾರ್ ಅವರಿಂದ ಪ್ರವಚನ ಕಾರ್ಯಕ್ರಮ ನೆರವೇರಿತು.
    ಪ್ರಮುಖರಾದ ಜಯತೀರ್ಥ, ಸುಧೀಂದ್ರ, ವೆಂಕಟೇಶ, ಕೃಷ್ಣಮೂರ್ತಿ, ಗೋಪಾಲ್ ಆಚಾರ್, ಸತ್ಯನಾರಾಯಣ್ ಆಚಾರ್, ಶ್ರೀನಿವಾಸ ಆಚಾರ್, ಗುರುರಾಜ್, ರಮಾಕಾಂತ, ಮುರುಳಿಧರ ತಂತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಎಂಪಿಎಂ ಬಡಾವಣೆ ಅಭಿವೃದ್ಧಿಗೆ ಬದ್ಧ : ಬಿ.ಕೆ ಸಂಗಮೇಶ್ವರ್

ಸಸಿ ನೆಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಭದ್ರಾವತಿ ನಗರದ ಆನೆಕೊಪ್ಪ ಎಂಪಿಎಂ ಬಡಾವಣೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ  ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

    ಭದ್ರಾವತಿ, ಆ. ೨೭: ನಗರದ ಆನೆಕೊಪ್ಪದಲ್ಲಿರುವ ಎಂಪಿಎಂ ಬಡಾವಣೆ ಅಭಿವೃದ್ಧಿಗೆ ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
       ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಗರದ ಆನೆಕೊಪ್ಪ ಎಂಪಿಎಂ ಬಡಾವಣೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ  ಕಾರ್ಯಕ್ರಮ ಉದ್ದಾಟಿಸಿ ಅವರು ಮಾತನಾಡಿದರು.  
    ಎಂಪಿಎಂ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾರ್ಮಿಕರು ಪ್ರಸ್ತುತ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಬಡಾವಣೆ ಅಭಿವೃದ್ಧಿಗೆ ನಗರಸಭೆ ಮೂಲಕ ಸಾಧ್ಯವಾದಷ್ಟು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮುಂದಿನ ೬ ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದರು.
     ಬಡಾವಣೆ ಉತ್ತಮ ಪರಿಸರ ಹೊಂದಿದ್ದು, ಭೂಮಿಗೆ ಹೆಚ್ಚಿನ ಬೆಲೆ ಬಂದಿದೆ. ಭವಿಷ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಹೊಂದುವ ವಿಶ್ವಾಸವಿದೆ. ಬಡಾವಣೆಯಲ್ಲಿ ತಕ್ಷಣ ಹೆಚ್ಚಿನ ಮನೆಗಳು ನಿರ್ಮಾಣಗೊಳ್ಳಬೇಕು. ಆಗ ಮಾತ್ರ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯ. ಈಗಾಗಲೇ ಬಹುತೇಕ ಸಮಸ್ಯೆಗಳು ಬಗೆಹರಿದಿವೆ. ಇದನ್ನು ನಿವೇಶನ ಹೊಂದಿರುವವರು ಅರ್ಥ ಮಾಡಿಕೊಳ್ಳಬೇಕು. ಆರ್ಥಿಕ ಸಮಸ್ಯೆಗಳು ಇದ್ದಲ್ಲಿ ಪ್ರಸ್ತುತ ಸಾಲಸೌಲಭ್ಯ ವ್ಯವಸ್ಥೆ ಕಲ್ಪಿಸಿಕೊಳ್ಳಲು ಹಲವು ಯೋಜನೆಗಳಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.


       ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಎನ್.ಎಸ್ ಸತೀಶ್‌ಚಂದ್ರ ಮಾತನಾಡಿ, ಇಲಾಖೆ ಸಹ ಮರಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿನಾಕಾರಣ ಮರಗಳನ್ನು ಕಡಿಯುವ ಮನಸ್ಥಿತಿ ಹೊಂದಿಲ್ಲ. ಮರಗಳು ಇದ್ದಲ್ಲಿ ಉತ್ತಮ ಪರಿಸರ ಸಾಧ್ಯ. ಪ್ರಸ್ತುತ ಎಂಪಿಎಂ ಕಾರ್ಖಾನೆ ಮೆಸ್ಕಾಂ ಇಲಾಖೆಯಲ್ಲಿ ನೂರಾರು ಕೋ. ರು. ಬಾಕಿ ಉಳಿಸಿಕೊಂಡಿದೆ. ಈ ಹಣ ವಸೂಲಾತಿಗಾಗಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಆದರೂ ಸಹ ಕಾರ್ಖಾನೆ ಪ್ರಸ್ತುತ ಎದುರಿಸುತ್ತಿರುವ ಸಂದಿಗ್ದ ಪರಿಸ್ಥಿತಿಗೆ ಪೂರಕವಾಗಿ ಸ್ಪಂದಿಸುತ್ತಿದೆ. ಬಡಾವಣೆಗೆ ನಿರಂತರವಾಗಿ ವಿದ್ಯುತ್ ಪೂರೈಕೆಗೆ ಬದ್ಧವಾಗಿದೆ. ಆದರೆ ಸಹಕಾರ ಸಂಘ ಕೆಲವೊಂದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು.
   ನಗರಸಭೆ ಪೌರಾಯುಕ್ತ ಮನೋಹರ್ ಮಾತನಾಡಿ, ನಿರ್ಮಾಣಗೊಂಡಿರುವ ಮನೆಗಳಿಗೆ ಸಮರ್ಪಕವಾಗಿ ಯುಜಿಡಿ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ರಸ್ತೆ, ಚರಂಡಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು
     ವಲಯ ಅರಣ್ಯಾಧಿಕಾರಿ ಕೆ.ಎಚ್ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ದಿನೇಶ್‌ಕುಮಾರ್, ಬಡಾವಣೆ ನಿವಾಸಿ ಸಂತೋಷ್ ಹಾಗು ಸಂಘದ ಪದಾಧಿಕಾರಿಗಳು, ಸದಸ್ಯರು, ಬಡಾವಣೆ ನಿವಾಸಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಅಧ್ಯಕ್ಷತೆ ವಹಿಸಿದ್ದರು. ಮಾವು, ಹಲಸು, ಬೇವು ಸೇರಿದಂತೆ ಹಲವು ಜಾತಿಯ ಸಸಿಗಳನ್ನು ಬಡಾವಣೆ ವ್ಯಾಪ್ತಿಯಲ್ಲಿ ನೆಡಲಾಯಿತು.

Wednesday, August 26, 2020

ಸ್ಮಶಾನ ಜಾಗ ಒತ್ತುವರಿ : ಜಮೀನು ಕಳೆದುಕೊಂಡ ರೈತರು

ಏಕಾಏಕಿ ಕಾರ್ಯಾಚರಣೆಯಿಂದ ಬೆಳೆ ನಾಶ : ಆರೋಪ

ಭದ್ರಾವತಿ ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರ ಸಂಜೆ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆದಿದೆ.
ಭದ್ರಾವತಿ: ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿಗೆ ಸೇರಿದ ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರ ಸಂಜೆ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆದಿದೆ.
     ತಾವರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ. ೨೯(ಹಳೇ ಸರ್ವೆ ನಂ.೧೪)ರ ಗೋಮಾಳ ಜಾಗದಲ್ಲಿ ಸ್ಮಶಾನ ನಿರ್ಮಾಣಕ್ಕೆ ಸರ್ಕಾರದಿಂದ ೧ ಎಕರೆ ೨೦ ಗುಂಟೆ ಜಮೀನು ಮಂಜೂರಾತಿಯಾಗಿದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತದಿಂದ ಜು.೨೧ರಂದು ಸರ್ವೆ ಕಾರ್ಯ ನಡೆಸಲು ಗ್ರಾಮಕ್ಕೆ ತೆರಳಿದ್ದಾಗ ಗೋಮಾಳ ಒತ್ತುವರಿ ಮಾಡಿರುವ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಲಘು ಲಾಠಿ ಪ್ರಹಾರ ಸಹ ನಡೆದಿತ್ತು.  


   ಇದೀಗ ಏಕಾಏಕಿ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜಮೀನು ತೆರವು ಕಾರ್ಯಾಚರಣೆ ನಡೆಸಲಾಗಿದ್ದು,  ಇದರಿಂದಾಗಿ ಜಮೀನು ಕಳೆದುಕೊಂಡ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ಕಾರ್ಯಾಚರಣೆ ನಡೆಸಿರುವುದರಿಂದ ಹೆಚ್ಚಿನ ಹಾನಿ ಉಂಟಾಗಿದ್ದು, ಶುಂಠಿ, ಭತ್ತ, ಅಡಕೆ, ತೆಂಗಿನ ಬೆಳೆಗಳು ನಾಶವಾಗಿದೆ. ಅಲ್ಲದೆ ಒತ್ತುವರಿ ಕಾರ್ಯಾಚರಣೆಯಲ್ಲೂ ತಾರತಮ್ಯ ಮಾಡಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಭದ್ರಾ ಜಲಾಶಯಕ್ಕೆ ಬಾಗಿನ

ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ರೈತ ವರಿಷ್ಠ ಕೆ.ಟಿ ಗಂಗಾಧರ್ ನೇತೃತ್ವದಲ್ಲಿ ಬಾಗಿನ ಸಮರ್ಪಿಸಲಾಯಿತು.
ಭದ್ರಾವತಿ, ಆ. ೨೬:  ತಾಲೂಕಿನ ಜೀವನದಿ ಭದ್ರಾ ನದಿ ಜಲಾಶಯ ಬಹುತೇಕ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಬಾಗಿನ ಸಮರ್ಪಿಸಲಾಯಿತು.
   ಭದ್ರಾ ಜಲಾಶಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ರೈತ ಮುಖಂಡ, ವರಿಷ್ಠ ಕೆ.ಟಿ ಗಂಗಾಧರ್ ನೇತೃತ್ವವಹಿಸಿದ್ದರು.
    ಪ್ರಮುಖರಾದ ಯಶವಂತರಾವ್ ಘೋರ್ಪಡೆ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಗೊಂದಿ ಜಯರಾಂ, ಮಂಜಪ್ಪ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.






Tuesday, August 25, 2020

ಆ.೨೭ರಂದು ಶ್ರದ್ದಾಂಜಲಿ ಸಭೆ

ಭದ್ರಾವತಿ, ಆ. ೨೫: ಕಳೆದ ೨ ದಿನಗಳ ಹಿಂದೆ ನಿಧನ ಹೊಂದಿದ ಪ್ರಗತಿಪರ ಚಿಂತಕ, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ಶ್ರೀನಿವಾಸನ್‌ರವರಿಗೆ ಆ.೨೭ರಂದು ಶ್ರದ್ದಾಂಜಲಿ ಸಭೆ ಹಮ್ಮಿಕೊಳ್ಳಲಾಗಿಇದೆ.
ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸಂಜೆ ೫ ಗಂಟೆಗೆ ಸಭೆ ನಡೆಯಲಿದ್ದು, ಸಭೆ ಯಶಸ್ವಿಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೋರಿದೆ.


ಆ.೨೭ರಂದು ಸಸಿ ನೆಡುವ ಕಾರ್ಯಕ್ರಮ

ಭದ್ರಾವತಿ, ಆ. ೨೫: ಮೈಸೂರು ಕಾಗದ ಕಾರ್ಖಾನೆ  ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಗರಸಭೆ, ಮೆಸ್ಕಾಂ ಹಾಗು ಅರಣ್ಯ ಇಲಾಖೆ ಸಹಯೋಗದೊಂದಿಗೆ ಆನೆಕೊಪ್ಪದಲ್ಲಿರುವ ಎಂಪಿಎಂ ಬಡಾವಣೆಯಲ್ಲಿ ಆ.೨೭ರಂದು ಬೆಳಿಗ್ಗೆ ೧೧.೩೦ಕ್ಕೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಪೌರಾಯುಕ್ತ ಮನೋಹರ್, ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಎಸ್ ಸತೀಶ್‌ಚಂದ್ರ ಮತ್ತು ವಲಯ ಅರಣ್ಯಾಧಿಕಾರಿ ಕೆ.ಎಚ್ ಮಂಜುನಾಥ್ ಉಪಸ್ಥಿತರಿರುವರು.


ಬೀದಿ ಬದಿ ವ್ಯಾಪಾರಸ್ಥರಿಗೆ ಆರ್ಥಿಕ ನೆರವು

ಭದ್ರಾವತಿಯಲ್ಲಿ ಕೆನರಾ ಬ್ಯಾಂಕ್ ನೆರವಿನೊಂದಿಗೆ ಸುಮಾರು ೪೯ ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ ಸೇವಾ ನಿಧಿಯಿಂದ  ಸಾಲ ಮಂಜೂರಾತಿ ಮಾಡಲಾಗಿದ್ದು, ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ಪಾರಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಿಸಿದರು.
ಭದ್ರಾವತಿ, ಆ. ೨೫: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪರ ನಡೆಸುವ ಮೂಲಕ ಜೀವನ ಸಾಗಿಸುತ್ತಿರುವ ಬಡ ವ್ಯಾಪಾರಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್ಥಿಕ ನೆರವು ಕಲ್ಪಿಸಿಕೊಡುವಲ್ಲಿ ನಗರಸಭೆ ಆಡಳಿತ ಯಶಸ್ವಿಯಾಗಿದೆ.
     ಕೆನರಾ ಬ್ಯಾಂಕ್ ನೆರವಿನೊಂದಿಗೆ ಸುಮಾರು ೪೯ ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ ಸೇವಾ ನಿಧಿಯಿಂದ  ಸಾಲ ಮಂಜೂರಾತಿ ಮಾಡಲಾಗಿದ್ದು, ಮಂಗಳವಾರ ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಸಭಾಂಗಣದಲ್ಲಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಿಸಿದರು.
    ನಗರಸಭೆ ಪೌರಾಯುಕ್ತ ಮನೋಹರ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ, ಕೆನರಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





Monday, August 24, 2020

ಕನ್ನಡಕ್ಕೆ ಮೊದಲ ಆದ್ಯತೆ ನೀಡಿ : ಕರವೇ ಆಗ್ರಹ

ಬ್ಯಾಂಕ್ ಆಫ್  ಬರೋಡ ಶಾಖಾ ಕಛೇರಿ ವ್ಯವಸ್ಥಾಪಕರಿಗೆ ಮನವಿ

ಭದ್ರಾವತಿ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವ ಮೂಲಕ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೪: ನಗರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವ ಮೂಲಕ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
       ಬ್ಯಾಂಕಿನ ನಾಮಫಲಕ ಹಾಗು ಎಲ್ಲಾ ವ್ಯವಹಾರಗಳು ಕನ್ನಡ ಭಾಷೆಯಲ್ಲಿ ನಡೆಯಬೇಕು. ಠೇವಣಿ ತೆರೆಯುವ ಅರ್ಜಿ, ಎಟಿಎಂ ಯಂತ್ರದಲ್ಲಿ ಹಾಗು ಇನ್ನಿತರೆ ಅರ್ಜಿ ನಮೂನೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳು ನಮೂದಾಗಿದ್ದು, ಈ ಎಲ್ಲಾ ನಮೂನೆ ಹಾಗು ಹಣ ತೆಗೆಯುವ ಯಂತ್ರದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಬ್ಯಾಂಕಿನಲ್ಲಿ ಕನ್ನಡ ಭಾಷೆ ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಲಾಗಿದೆ.
     ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಗ್ರಾಹಕರು ಹಾಗು ಇನ್ನಿತರೆ ವ್ಯವಹಾರಗಳನ್ನು ನಡೆಸಲು ಬ್ಯಾಂಕಿಗೆ ಬರುವವರಿಗೆ ಹಿಂದಿ ಹಾಗು ಆಂಗ್ಲ ಭಾಷೆಗಳು ಸರಿಯಾಗಿ ಅರ್ಥವಾಗದೆ ವ್ಯವಹಾರ ನಡೆಸಲು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಅರ್ಜಿ ನಮೂನೆಗಳು, ಎಲ್ಲಾ ವ್ಯವಹಾರಗಳು ಕನ್ನಡದಲ್ಲಿ ನಡೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
    ಕರಾವೇ ತಾಲೂಕು ಶಾಖೆ ಅಧ್ಯಕ್ಷ ಬಿ.ವಿ ಗಿರೀಶ್, ಪ್ರಧಾನ ಕಾರ್ಯದರ್ಶಿ ಜಿ. ಮಂಜುನಾಥ್, ಕಾರ್ಯದರ್ಶಿ ಎ. ಸಂದೇಶ್‌ಕುಮಾರ್, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೊರೋನಾ ಸೋಂಕು ಪತ್ತೆ ಹಚ್ಚುವಲ್ಲಿ ಪ್ರಯೋಗ ಶಾಲಾ ಶಾಸ್ತ್ರಜ್ಞರ ಸೇವೆ ಅಪಾರ

ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಮೆಡಿಕಲ್ ಲ್ಯಾಬ್‌ಟೆಕ್ನಾಲಜಿಸ್ಟ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಪ್ರೈವೇಟ್ ಮೆಡಿಕಲ್ ಲ್ಯಾಬೋರೇಟರಿ ಅಸೋಸಿಯೇಷನ್ ವತಿಯಿಂದ ಕೋವಿಡ್ ೧೯ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಪ್ರಯೋಗ ಶಾಲಾ ಶಾಸ್ತ್ರಜ್ಞರಿಗೆ ಅಭಿನಂದನಾ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಆ. ೨೪: ಕೊರೋನಾ ಸೋಂಕು ಪತ್ತೆ ಹಚ್ಚುವ ಕಾರ್ಯದಲ್ಲಿ ಪ್ರಯೋಗ ಶಾಲಾ ಶಾಸ್ತ್ರಜ್ಞರ ಸೇವೆ ಹೆಚ್ಚಿನದ್ದಾಗಿದ್ದು, ಪ್ರಸ್ತುತ ದಿನಗಳಲ್ಲಿ ಇವರ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ಜಿಲ್ಲಾ ಪ್ರಯೋಗ ಶಾಲಾ ಶಾಸ್ತ್ರಜ್ಞರ ಸಂಘದ ಅಧ್ಯಕ್ಷ ಬಸವರಾಜ್ ಹೇಳಿದರು.
ಅವರು ಕರ್ನಾಟಕ ರಾಜ್ಯ ಮೆಡಿಕಲ್ ಲ್ಯಾಬ್‌ಟೆಕ್ನಾಲಜಿಸ್ಟ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಪ್ರೈವೇಟ್ ಮೆಡಿಕಲ್ ಲ್ಯಾಬೋರೇಟರಿ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ೧೯ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಪ್ರಯೋಗ ಶಾಲಾ ಶಾಸ್ತ್ರಜ್ಞರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೈರಸ್ ಪತ್ತೆ ಹಚ್ಚುವ ಕಾರ್ಯದಲ್ಲಿ ಮತ್ತಷ್ಟು ತೊಡಗಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಮೆಡಿಕಲ್ ಲ್ಯಾಬ್‌ಟೆಕ್ನಾಲಜಿಸ್ಟ್ ಅಸೋಸಿಯೇಷನ್ ಖಜಾಂಚಿ ಸುರೇಶ್ ಮಾತನಾಡಿ, ತೆರೆಮರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಯೋಗ ಶಾಲಾ ಶಾಸ್ತ್ರಜ್ಞರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘಟನೆ ಮುಂದಾಗಿದೆ ಎಂದರು.
ಜಿಲ್ಲಾ ಪ್ರಯೋಗ ಶಾಲಾ ಶಾಸ್ತ್ರಜ್ಞರ ಸಂಘದ ಮಾಜಿ ಅಧ್ಯಕ್ಷ ರತನ್‌ಕುಮಾರ್ ಗುಬ್ಬಿ ಉಪಸ್ಥಿತರಿದ್ದರು. ನಿರ್ಮಿಲ ಪ್ರಾರ್ಥಿಸಿದರು. ಮಧು ಲ್ಯಾಬೋರೇಟರಿಯ ಜಗದೀಶ್ ಸ್ವಾಗತಿಸಿದರು. ಪ್ರದೀಪ್ ಕುಮಾರ್ ವಂದಿಸಿದರು. ತಾಲೂಕಿನ ಸುಮಾರು ೨೦ಕ್ಕೂ ಅಧಿಕ ಪ್ರಯೋಗ ಶಾಲಾ ಶಾಸ್ತ್ರಜ್ಞರನ್ನು ಅಭಿನಂದಿಸಲಾಯಿತು.

ದಲಿತ ಮುಖಂಡ ಎಂ. ಶ್ರೀನಿವಾಸನ್ ನಿಧನ

ಎಂ. ಶ್ರೀನಿವಾಸನ್

ಭದ್ರಾವತಿ, ಫೆ. ೨೪: ಶಿವಮೊಗ್ಗ  ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳ್ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ, ದಲಿತ ಮುಖಂಡ ಎಂ. ಶ್ರೀನಿವಾಸನ್(೭೦) ಸೋಮವಾರ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್  ಬಳಿ ಇರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
    ವಿಐಎಸ್‌ಎಲ್ ನಿವೃತ್ತ ಉದ್ಯೋಗಿಯಾಗಿದ್ದ ಶ್ರೀನಿವಾಸನ್ ನಗರಸಭೆ ವ್ಯಾಪ್ತಿಯ ಸುರಗಿತೋಪಿನಲ್ಲಿ ವಾಸವಿದ್ದರು. ಪ್ರಗತಿಪರ  ಸಂಘಟನೆಗಳೊಂದಿಗೆ ಗುರುತಿಕೊಳ್ಳುವ ಜೊತೆಗೆ ಹಲವು ದಲಿತ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಇವರ ನಿಧನಕ್ಕೆ ಪ್ರಗತಿಪರ ಸಂಘಟನೆಗಳು ಹಾಗು ಶಿವಮೊಗ್ಗ  ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳ್ ಹಿತರಕ್ಷಣಾ ಸಮಿತಿ ಮತ್ತು ನಗರದ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

Sunday, August 23, 2020

ಕೊರೋನಾ ಭೀತಿ ನಡುವೆಯೂ ಗೌರಿ-ಗಣೇಶ ಹಬ್ಬ ಯಶಸ್ವಿ

ಪ್ರಮುಖ ಸಂಘಟನೆಗಳಿಂದ ಮಾತ್ರ ಮೂರ್ತಿ ಪ್ರತಿಷ್ಠಾಪನೆ

ಭದ್ರಾವತಿ ಹೊಸಮನೆಯಲ್ಲಿ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.

ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಭದ್ರಾವತಿ ಮಾಧವಚಾರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು.

ಭದ್ರಾವತಿ  ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.


ಭದ್ರಾವತಿ ಕಾಗದನಗರದ ೬ನೇ ವಾರ್ಡಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಘಂಟೆ ಗಣಪತಿ ಆಕರ್ಷಕವಾಗಿ ಕಂಡು ಬಂದಿತು.


ಭದ್ರಾವತಿ ಎನ್‌ಎಂಸಿ ಸಂತೆ ಮೈದಾನದ ಬಳಿ ಯುವಕರ ಸಂಘಟನೆಯೊಂದು ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿ.


ಭದ್ರಾವತಿ ಹೊಸಮನೆ ಮುಖ್ಯರಸ್ತೆಯಲ್ಲಿ ಭೋವಿ ಕಾಲೋನಿ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಭಾರಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.


ಭದ್ರಾವತಿ ಹಳೇನಗರದ ಶ್ರೀ ಕೋಟೆ ಬಸವಣ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಮ್ಮ ಭಕ್ತರ ಗಮನ ಸೆಳೆಯಿತು.


ಭದ್ರಾವತಿ ಜೆಪಿಎಸ್ ಕಾಲೋನಿಯಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.


ಭದ್ರಾವತಿ ಕಾಗದನಗರದ ಶ್ರೀರಾಮ ದೇವಾಲಯದ ಮುಂಭಾಗದಲ್ಲಿ ವಿನಾಯಕ ಸೇವಾ ಸಮಿತಿವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.

     ಭದ್ರಾವತಿ: ಕೊರೋನಾ ಭೀತಿ ನಡುವೆಯೂ ಈ ಬಾರಿ ನಗರದಲ್ಲಿ ಗೌರಿ-ಗಣೇಶ ಹಬ್ಬ ಯಶಸ್ವಿಯಾಗಿ ಜರುಗಿತು.
     ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ದಿನ ದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೆಡೆ ಆತಂಕದ ವಾತಾರಣ ನಿರ್ಮಾಣಗೊಂಡಿದ್ದು, ಮತ್ತೊಂದೆಡೆ ದೈನಂದಿನ ಬದುಕು ಯಥಾಸ್ಥಿತಿಗೆ ಬಾರದೆ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ಹಬ್ಬ ಹರಿದಿನಗಳು ಆಡಂಬರವಿಲ್ಲದೆ ಬಂದು ಹೋಗುತ್ತಿವೆ.
    ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶ ಹಬ್ಬ ಈ ಬಾರಿ ಸದ್ದು-ಗದ್ದಲವಿಲ್ಲದೆ ನಡೆದು ಹೋಗಿದೆ. ರಾಜ್ಯ ಸರ್ಕಾರ ಹಬ್ಬ ಆಚರಣೆಗೆ ಅನುಮತಿ ನೀಡಿದ ನಂತರ ಅದರಲ್ಲೂ ಸಾರ್ವಜನಿಕ .,ಳಗಳಲ್ಲಿ ಈ ಬಾರಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ನಂತರ ತರಾತುರಿಯಲ್ಲಿ ಪ್ರತಿಷ್ಠಾಪನೆ ನಡೆದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
   ಕೊರೋನಾ ಸೋಂಕು ವ್ಯಾಪಕವಾಗಿ ಹರಡದಂತೆ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಹಲವು ಮಾರ್ಗಸೂಚಿಗಳೊಂದಿಗೆ ಗೌರಿ-ಗಣೇಶ ಹಬ್ಬಕ್ಕೆ ಸರ್ಕಾರ ಕೊನೆ ಘಳಿಗೆಯಲ್ಲಿ ಅನುಮತಿ ನೀಡಿದ ಹಿನ್ನಲೆಯಲ್ಲಿ ಬಹಳಷ್ಟು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡದೆ ಈ ಬಾರಿ ಆಚರಣೆಯಿಂದ ಹಿಂದೆ ಸರಿದಿರುವುದು ಕಂಡು ಬಂದಿತು. ಕೆಲವು ಪ್ರತಿಷ್ಠಿತ ಸಂಘಟನೆಗಳು ಮಾತ್ರ ಮೂರ್ತಿ ಪ್ರತಿಷ್ಠಾಪನೆ ಮಾಡಿ ರಾತ್ರಿ ವೇಳೆಗೆ ವಿಸರ್ಜನೆಯೊಂದಿಗೆ ಆಚರಣೆ ಮುಕ್ತಾಯಗೊಳಿಸಿದವು. ಪ್ರತಿ ವರ್ಷ ತಾಲೂಕಿನಲ್ಲಿ ಸುಮಾರು ೩೦೦ ರಿಂದ ೪೦೦ ಮೂರ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಅತಿ ಕಡಿಮೆ ಸಂಖ್ಯೆಯಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
   ಹೊಸಮನೆ ಭಾಗದಲ್ಲಿ ಬಹುಮುಖ್ಯ ಸಂಘಟನೆಗಳಾದ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ, ಬೋವಿಕಾಲೋನಿ ವಿನಾಯಕ ಸೇವಾ ಸಮಿತಿ, ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
    ಉಳಿದಂತೆ ಮಾಧವಚಾರ್ ವೃತ್ತದಲ್ಲಿ ವಿನಾಯಕ ಸೇವಾ ಸಮಿತಿ, ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ, ಜನ್ನಾಪುರ ಭಾಗದಲ್ಲಿ ರಾಮರಾಜ್ಯ ಸಂಘಟನೆ ಹಾಗು ವಿದ್ಯಾಮಂದಿರ ಬಳಿ ಶ್ರೀರಾಮ ಹಿಂದೂ ವಿನಾಯಕ ಸೇವಾ ಸಮಿತಿ, ಎಸ್‌ಎವಿ ವಿದ್ಯಾಸಂಸ್ಥೆ ಬಳಿ ಶ್ರೀರಾಮ ವಿನಾಯಕ ಸೇವಾ ಸಮಿತಿ, ಜೆಪಿಎಸ್ ಕಾಲೋನಿ ಶ್ರೀ ಮಹಾಗಣಪತಿ ದೇವಸ್ಥಾನ ಸಮಿತಿ, ಕಾಗದನಗರದ ೬ನೇ ವಾರ್ಡ್ ಮತ್ತು ಶ್ರೀರಾಮ ದೇವಾಲಯದ ಮುಂಭಾಗದಲ್ಲಿ ವಿನಾಯಕ ಸೇವಾ ಸಮಿತಿವತಿಯಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
    ಮನೆ ಮನೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಪ್ರತಿವರ್ಷದಂತೆ ಈ ಬಾರಿ ಸಹ ಮೂರ್ತಿಗಳನ್ನು ಮಾರುಕಟ್ಟೆಗಳಿಗೆ ಬಂದು ಖರೀದಿಸಿ ಕೊಂಡ್ಯೊಯ್ದರು. ಆಯಾಕಟ್ಟಿನ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಶಿಕ್ಷಣ ಕ್ಷೇತ್ರಕ್ಕೆ ವಿಇಎಸ್ ವಿದ್ಯಾಸಂಸ್ಥೆ ಕೊಡುಗೆ ಅನನ್ಯ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯ ಕೆ. ಶಾಮಣ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದರು.

ಸಂಸ್ಥಾಪಕ ಸದಸ್ಯ ಕೆ. ಶಾಮಣ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಶಾಸಕ ಸಂಗಮೇಶ್ವರ್ ಪ್ರಶಂಸೆ

ಭದ್ರಾವತಿ, ಆ. ೨೩: ನಗರದ ಹೊಸಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಈ ವಿದ್ಯಾಸಂಸ್ಥೆಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಕೆ. ಶಾಮಣ್ಣರವರ ಪರಿಶ್ರಮ ಹೆಚ್ಚಿನದಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
      ಅವರು ಕೆ. ಶಾಮಣ್ಣರವರ ೮೦ನೇ ವರ್ಷದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಮಣ್ಣರವರು ತಮ್ಮ ವೃತ್ತಿ ಬದುಕಿನಲ್ಲಿ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ವಿಇಎಸ್ ವಿದ್ಯಾಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಪ್ರಸ್ತುತ ವಿದ್ಯಾಸಂಸ್ಥೆ ಸದೃಢವಾಗಿ ಬೆಳೆಯಲು ಕಾರಣಕರ್ತರಾಗಿದ್ದಾರೆ ಎಂದರೆ ತಪ್ಪಾಗಲಾರದು. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನದ ಮಾಡುವ ಮೂಲಕ ಸಾರ್ಥಕತೆ ಕಂಡುಕೊಂಡಿದ್ದಾರೆ ಎಂದರು.
      ವಿದ್ಯಾಸಂಸ್ಥೆಯ ಮಹಾಪೋಷಕರಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್  ಷಡಾಕ್ಷರಿಯವರು ವಿದ್ಯಾಸಂಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದಿಂದ ೧ ಕೋ. ರು. ಅನುದಾನ ಮಂಜೂರು ಮಾಡಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿದ್ಯಾಸಂಸ್ಥೆಗೆ ಸೇರಿದ ನಗರದ ಅನ್ವರ್ ಕಾಲೋನಿಯಲ್ಲಿರುವ  ೩ ಎಕರೆ ಜಮೀನಿನ ಸುಮಾರು ೧೦ ವರ್ಷದ ಹಿಂದಿನ ಮಾರಾಟ ಪ್ರಕ್ರಿಯೆಯನ್ನು ರದ್ದುಪಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಉಳಿಸಿಕೊಳ್ಳುವ ನಿರ್ಧಾರ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದರು.
       ಕೆ. ಶಾಮಣ್ಣ ಮಾತನಾಡಿ, ವಿಇಎಸ್ ವಿದ್ಯಾಸಂಸ್ಥೆ ಸ್ಥಾಪನೆಗೆ ಸಂಸ್ಥಾಪಕ ಸದಸ್ಯರುಗಳು ಕೈಗೊಂಡ ಪರಿಶ್ರಮಗಳನ್ನು ನೆನಪು ಮಾಡಿಕೊಂಡರು. ಪ್ರಸ್ತುತ ವಿದ್ಯಾಸಂಸ್ಥೆ ರಾಜ್ಯದಲ್ಲಿಯೇ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವುದು ಹೆಮ್ಮಯ ವಿಚಾರವಾಗಿದೆ ಎಂದರು.
      ಕಳೆದ ಸುಮಾರು ೧೦ ವರ್ಷಗಳ ಹಿಂದೆ ವಿದ್ಯಾಸಂಸ್ಥೆ ಖರೀದಿ ಮಾಡಿದ್ದ ಜಮೀನಿನ ಮಾರಾಟ ಪ್ರಕ್ರಿಯೆ ನಡೆಯುವಾಗ ಅಂದು ಆಡಳಿತ ಮಂಡಳಿ ಛೇರ‍್ಮನ್ ಆಗಿದ್ದ ತಮಗೆ ಹಾಗು ಸಂಸ್ಥಾಪಕ ಸದಸ್ಯರುಗಳಿಗೆ ಇಷ್ಟವಿರಲಿಲ್ಲ. ಸರ್ಕಾರ ಬೇರೆ ಕೆಲಸಗಳಿಗೆ ಡಿನೋಟಿಫಿಕೇಷನ್ ಮಾಡುವ ಆತಂಕದಲ್ಲಿ ಜಮೀನು ಕೈತಪ್ಪಿ ಹೋಗುವ ಹಿನ್ನಲೆಯಲ್ಲಿ ಹಾಗು ಆಡಳಿತ ಮಂಡಳಿಯ ಬಹುಮತದ ತೀರ್ಮಾನಕ್ಕೆ ಬದ್ಧರಾಗಿ ಒಪ್ಪಿಗೆ ಸೂಚಿಸುವ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ನಮ್ಮ ಅಂದಿನ ಪರಿಶ್ರಮಕ್ಕೆ ವಿದ್ಯಾಸಂಸ್ಥೆ ಆಡಳಿತ ಮಂಡಳಿಯಲ್ಲಿ ಕೆಲವರಿಂದ ಇಂದು ಕೆಟ್ಟ ಹೆಸರು ಬರುವಂತಾಗಿದೆ. ಈ ನಡುವೆ ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್ ಷಡಾಕ್ಷರಿಯವರ ಭವಿಷ್ಯದ ಕಾಳಜಿ ಹಾಗು ತಾಲೂಕಿನ ಸಮಸ್ತ ಸರ್ಕಾರಿ ನೌಕರರ ಒತ್ತಾಸೆಯಿಂದಾಗಿ ಮಾರಾಟ ಪ್ರಕ್ರಿಯೆ ತಡೆದು ಜಮೀನನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವುದು ಹೆಮ್ಮಯ ವಿಚಾರವಾಗಿದೆ ಎಂದರು.
       ವಿದ್ಯಾಸಂಸ್ಥೆ ಛೇರ‍್ಮನ್ ಬಿ.ಎಲ್ ರಂಗಸ್ವಾಮಿ, ಮಾಜಿ ಛೇರ‍್ಮನ್ ಡಾ. ಜಿ.ಎಂ ನಟರಾಜ್, ಸಂಘದ ಉಪಾಧ್ಯಕ್ಷ ನೀಲೇಶ್ ರಾಜ್, ರಾಜ್ಯ ಪರಿಷತ್ ಸದಸ್ಯ ಸಿದ್ದಬಸಪ್ಪ, ಶಿಕ್ಷಕರ ಸಂಘದ ಮುಖಂಡರಾದ ಎಸ್. ಕೂಬಾನಾಯ್ಕ, ಲೋಹಿತೇಶ್ವರಪ್ಪ, ಧನಂಜಯ, ಯು. ಮಹಾದೇವಪ್ಪ, ಎಂ.ಎಸ್ ಮಲ್ಲಿಕಾರ್ಜುನ್, ಎಂ.ಆರ್ ರೇವಣಪ್ಪ, ಬಸವಂತರಾವ್ ದಾಳೆ, ಲೋಕೇಶ್, ಶಿವಾನಂದ ಕಾಂಬಳೆ, ವೇಣುಗೋಪಾಲ್, ರಮೆಶ್, ಚಂದ್ರಶೇಖರಪ್ಪ ಚಕ್ರಸಾಲಿ, ಜಗದೀಶ್, ಇಂಡಿ ಮಂಜುನಾಥ್, ರಾಜಾನಾಯ್ಕ್ ದೇವರಾಜ್ ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




Saturday, August 22, 2020

ನಿವೃತ್ತ ಪ್ರಾಂಶುಪಾಲ ಕೆ.ಎಂ ಮೇಘರಾಜ್ ನಿಧನ

ಕೆ.ಎಂ ಮೇಘರಾಜ್
ಭದ್ರಾವತಿ, ಆ. ೨೨: ಹಳೇನಗರ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಎಂ ಮೇಘರಾಜ್(೬೦) ನಿಧನ ಹೊಂದಿದರು.
      ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಬಂಧು-ಬಳಗ ಬಿಟ್ಟಗಲಿದ್ದಾರೆ. ಮೇಘರಾಜ್‌ರವರು ಮೂಲತಃ ವಿದ್ಯಾರ್ಥಿ ಸಂಘಟನೆಯಿಂದ ಬೆಳೆದು ಬಂದಿದ್ದು, ಎಬಿವಿಪಿ ಸಂಘಟನೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ್ದರು. ನಗರದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜುಗಳಲ್ಲಿ ಹಲವು ವರ್ಷಗಳ ಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಮಾರ್ಚ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಹಲವು ವರ್ಷಗಳಿಂದ ತಾಲೂಕು ಗೊಲ್ಲ ಯಾದವ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
      ಮೃತರ ನಿಧನಕ್ಕೆ ಗೊಲ್ಲ ಯಾದವ ಸಮಾಜ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋರ್ವನ ಮೇಲೆ ಕರಡಿ ದಾಳಿ : ತೀವ್ರ ಗಾಯ

ಭದ್ರಾವತಿ ತಾಲೂಕಿನ ದೊಡ್ಡೇರಿ ಬಾಳೆಕಟ್ಟೆ ಗ್ರಾಮದ ನಿವಾಸಿ ಜಾನು ಎಂಬುವರು ಕರಡಿಯಿಂದ ತೀವ್ರವಾಗಿ ಗಾಯಗೊಂಡಿರುವುದು.
ಭದ್ರಾವತಿ, ಆ. ೨೨: ತಾಲೂಕಿನ ದೊಡ್ಡೇರಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಕರಡಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ದೊಡ್ಡೇರಿ ಬಾಳೆಕಟ್ಟೆ ಗ್ರಾಮದಲ್ಲಿ ಬಯಲು ಬಹಿರ್ದೆಸೆಗೆ ತೆರಳಿದ್ದ ಜಾನು ಎಂಬುವರ ಮೇಲೆ ಕರಡಿ ದಾಳಿ ನಡೆಸಿದ್ದು, ಮುಖದ ಒಂದು ಭಾಗ ತೀವ್ರ ಗಾಯಗೊಂಡಿದೆ. ಅಲ್ಲದೆ ಇತರೆಡೆ ಸಹ ಗಾಯಗಳಾಗಿದ್ದು, ಇವರನ್ನು ತಕ್ಷಣ ಅಂಬ್ಯುಲೆನ್ಸ್ ಮೂಲಕ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭಾಗದಲ್ಲಿ ಕರಡಿಗಳು ಹೆಚ್ಚಾಗಿದ್ದು, ಹಲವು ಬಾರಿ ಸ್ಥಳೀಯರು ಕರಡಿ ದಾಳಿಗೆ ತುತ್ತಾಗಿದ್ದಾರೆ. ಅಲ್ಲದೆ ದಾಳಿಯಿಂದ ಮೃತಪಟ್ಟಿರುವ ಘಟನೆಗಳು ಸಹ ನಡೆದಿವೆ.  ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಆರೋಪಗಳು ಕೇಳಿ ಬರುತ್ತಿವೆ.

Friday, August 21, 2020

ಕೊರೋನಾ ಭೀತಿ ನಡುವೆ ಗೌರಿ-ಗಣೇಶ ಹಬ್ಬ : ಮೂರ್ತಿ ಪ್ರತಿಷ್ಠಾಪನೆ ಮಾಹಿತಿಯೇ ಇಲ್ಲ

ಭದ್ರಾವತಿ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿ ಗೌರಿ-ಗಣೇಶ ಮೂರ್ತಿಗಳ ಖರೀದಿ ಭರ್ಜರಿಯಾಗಿ ನಡೆಯುತ್ತಿರುವುದು.
ಭದ್ರಾವತಿ, ಆ. ೨೧: ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಈ ಬಾರಿ ಎಲ್ಲೆಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಮಾಹಿತಿ ಯಾರಿಗೂ ಸರಿಯಾಗಿ ಲಭ್ಯವಾಗುತ್ತಿಲ್ಲ.
     ಕಳೆದ ೪ ದಿನಗಳ ಹಿಂದೆಯಷ್ಟೆ ಹಲವು ಷರತ್ತುಗಳೊಂದಿಗೆ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿರುವುದರಿಂದ ಹಲವು ಸಂಘಟನೆಗಳು ಗೊಂದಲಕ್ಕೆ ಒಳಗಾಗಿವೆ. ಅದರಲ್ಲೂ ಒಂದೇ ಒಂದು ದಿನ ಪ್ರತಿಷ್ಠಾಪಿಸುವ ಗೋಜಿಗೆ ಯಾವ ಸಂಘಟನೆಗಳು ಮುಂದಾಗುತ್ತಿಲ್ಲ. ಬೆಳಿಗ್ಗೆ ಪ್ರತಿಷ್ಠಾಪನೆ ಮಾಡಿ ಸಂಜೆ ವಿಸರ್ಜನೆ ಮಾಡುವ ಬದಲು ಈ ಬಾರಿ ಆಚರಣೆಯಿಂದ ಹಿಂದೆ ಸರಿಯುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬದ್ಧವಾಗಿರುವಂತೆ ಕಂಡು ಬರುತ್ತಿದೆ.
    ಕಾಲಾವಕಾಶ ಕಡಿಮೆ ಇರುವುದರಿಂದ ಯಾವುದೇ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲು ಸಂಘಟನೆಗಳಿಗೆ ಸಾಧ್ಯವಾಗಿಲ್ಲ. ಅಲ್ಲದೆ ವಿವಿಧ ಇಲಾಖೆಗಳಿಂದ ಪ್ರತಿಷ್ಠಾಪನೆಗೆ ಅನುಮತಿ ಬೇಕಾಗಿದೆ. ಒಂದೇ ಕಡೆ ಎಲ್ಲಾ ಇಲಾಖೆಗಳ ಅನುಮತಿ ಲಭಿಸುವ ವ್ಯವಸ್ಥೆ ಈ ಬಾರಿ ಕೈಗೊಂಡಿಲ್ಲ. ಪ್ರತಿ ವರ್ಷ ತಾಲೂಕಿನಲ್ಲಿ ಸುಮಾರು ೩೦೦ ರಿಂದ ೪೦೦ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಅದರಲ್ಲೂ ಪೊಲೀಸ್ ಇಲಾಖೆ ಆಯಾ ಪ್ರದೇಶಗಳ ವ್ಯಾಪ್ತಿಯಲ್ಲಿ ಸಾಮಾನ್ಯ, ಸೂಕ್ಷ್ಮ, ಅತಿ ಸೂಕ್ಷ್ಮ ಎಂಬ ಗುಂಪುಗಳಾಗಿ ಗುರುತಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆಗೆ ಮುಂದಾಗುವಂತೆ ನೋಡಿಕೊಳ್ಳುತ್ತಿತ್ತು.  ಆದರೆ ಈ ಬಾರಿ ಯಾವುದೇ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಿಲ್ಲ.


  ಈ ನಡುವೆ ಮನೆ ಮನೆಗಳಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಮಾರುಕಟ್ಟೆಯಲ್ಲಿ ಮೂರ್ತಿಗಳ ಖರೀದಿ ಭರ್ಜರಿಯಾಗಿ ನಡೆಯುತ್ತಿದೆ. ಶುಕ್ರವಾರ ಸಂಜೆಯೇ ಮನೆಗಳಿಗೆ ಮೂರ್ತಿಗಳನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಿತು.
      ಭರ್ಜರಿ ವ್ಯಾಪಾರ:
   ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಕಳೆದ ೩ ದಿನಗಳಿಂದ ಜನದಟ್ಟಣೆ ಅಧಿಕವಾಗುತ್ತಿದೆ. ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದ್ದು, ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಖರೀದಿಯಲ್ಲಿ ತೊಡಗಿರುವುದು ಕಂಡು ಬಂದಿತು.

ವಿಐಎಸ್‌ಎಲ್‌ಗೆ ೧೯ ಕೋ.ರು. ಬಿಡುಗಡೆಗೆ ಒತ್ತಾಯಿಸಿ ಉಸ್ತುವಾರಿ ಸಚಿವರಿಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೧: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
         ಕಾರ್ಖಾನೆಯ ಆಕ್ಸಿಜನ್ ಪ್ಲಾಂಟ್ ವೀಕ್ಷಣೆಗೆ ಆಗಮಿಸಿದ್ದ ಸಚಿವರಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಪ್ರಸ್ತುತ ಕಾರ್ಖಾನೆಯಲ್ಲಿ ಯಂತ್ರಗಳು ಚಾಲನೆಯಲ್ಲಿರಲು ಕಚ್ಛಾ ಸಾಮಗ್ರಿ ಆಮದು, ನಿರ್ವಹಣೆ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸುಮಾರು ೧೯ ಕೋ. ರು. ಅಗತ್ಯವಿದೆ. ಈಗಾಗಲೇ ಈ ಸಂಬಂಧ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ, ಸಂಬಂಧಪಟ್ಟ ಸಚಿವರಿಗೆ, ಶಿವಮೊಗ್ಗ ಲೋಕಸಭಾ ಸದಸ್ಯರಿಗೆ ಮನವಿ ಮಾಡಿ ಒತ್ತಾಯಿಸಲಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಮೂಲಕ ತಕ್ಷಣ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಹಾಗು ಕಾರ್ಮಿಕ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ಆಕ್ಸಿಜನ್ ಪ್ಲಾಂಟ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ : ಪರಿಶೀಲನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಒಳಭಾಗದಲ್ಲಿರುವ ಎಂಎಸ್‌ಡಿ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಹೊರಭಾಗದಲ್ಲಿ ಎಂಪಿಎಂ ಕಾರ್ಖಾನೆ ರಸ್ತೆಯಲ್ಲಿರುವ ದಿ ಸದರನ್ ಗ್ಯಾಸ್ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಕ್ಸಿಜನ್ ಕೊರತೆ ಎದುರಾಗದಂತೆ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಉತ್ಪಾದನೆ ಕುರಿತು ಅಧಿಕಾರಿಗಳಿಂದ ಮಾಹಿತಿ

ಭದ್ರಾವತಿ, ಆ. ೨೧: ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಒಳಭಾಗದಲ್ಲಿರುವ ಎಂಎಸ್‌ಪಿಎಲ್ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಹೊರಭಾಗದಲ್ಲಿ ಎಂಪಿಎಂ ಕಾರ್ಖಾನೆ ರಸ್ತೆಯಲ್ಲಿರುವ ದಿ ಸದರನ್ ಗ್ಯಾಸ್ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರಿಂದ ಇದುವರೆಗೂ ಹೆಚ್ಚಿನ ಸಹಕಾರ ಲಭಿಸಿದೆ. ಮುಂದೆ ಸಹ ಇದೆ ರೀತಿ ಸಹಕಾರ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆಕ್ಸಿಜನ ಕೊರತೆ ಇಲ್ಲ. ಆದರೂ ಸಹ ಮುನ್ನಚ್ಚರಿಕೆ ಕ್ರಮವಾಗಿ ತುರ್ತು ಅನಿವಾರ್ಯ ಸಂದರ್ಭದಲ್ಲಿ ಆಕ್ಸಿಜನ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಆಕ್ಸಿಜನ್ ಪ್ಲಾಂಟ್‌ಗಳ ವೀಕ್ಷಣೆ ನಡೆಸಿದ್ದು, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. 
ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಈ ನಿಟ್ಟಿನಲ್ಲಿ ಕಂಪನಿಯವರಿಗೆ ಭರವಸೆ ನೀಡುತ್ತಿದ್ದು, ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸೋಂಕು ವಾಪಕವಾಗಿ ಹರಡುತ್ತಿದ್ದು, ಕಂಪನಿಗಳು ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು. 


     ಇದಕ್ಕೂ ಮೊದಲು ವಿಐಎಸ್‌ಎಲ್ ಅಥಿತಿ ಗೃಹದಲ್ಲಿ ಜಿಲ್ಲೆಯ ವಿವಿದೆಡೆ ಇರುವ ಆಕ್ಸಿಜನ್ ಪ್ಲಾಂಟ್‌ಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡರು. 
ಎಂಎಸ್‌ಪಿಎಲ್ ಗ್ಯಾಸ್ ಲಿಮಿಟೆಡ್: 
ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಕಬ್ಬಿಣ ಮತ್ತು ಉಕ್ಕು ಉತ್ಪಾದನೆಯ ವಿವಿಧ ಘಟಕಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು ಎರಡು ಆಕ್ಸಿಜನ್ ಘಟಕಗಳಿದ್ದು, ಈ ಪೈಕಿ ಒಂದು ಕಾರ್ಖಾನೆಗೆ ಸೇರಿದೆ.  ಇದರ ಜೊತೆಗೆ ೨೦೦೬ರಲ್ಲಿ ಎಂಎಸ್‌ಪಿಎಲ್ ಗ್ಯಾಸ್ ಲಿಮಿಟೆಡ್ ಖಾಸಗಿ ಕಂಪನಿಗೆ ಕಾರ್ಖಾನೆ ಒಳಭಾಗದಲ್ಲಿ ಮತ್ತೊಂದು ಘಟಕ ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಅನಿಲ ರೂಪದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಕಾರ್ಖಾನೆಯಲ್ಲಿ ಉತ್ಪಾದನೆ ಇಲ್ಲದೆ ವಿವಿಧ ಘಟಕಗಳು ಮುಚ್ಚಲ್ಪಟ್ಟಿವೆ. ಈ ಹಿನ್ನಲೆಯಲ್ಲಿ ೨ ವರ್ಷಗಳಿಂದ ಈ ಕಂಪನಿ ಸಹ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಪ್ರಸ್ತುತ ಸುಮಾರು ೩೦೦ ಸಿಲಿಂಡರ್‌ಗಳು ಸಂಗ್ರಹದಲ್ಲಿದ್ದು, ಈ ಸಿಲಿಂಡರ್‌ಗಳನ್ನು ವೈದ್ಯಕೀಯ ಬಳಕೆಗೆ ದ್ರವರೂಪಕ್ಕೆ ಬದಲಿಸಬೇಕಾಗಿದೆ. ಅಗತ್ಯಬಿದ್ದಲ್ಲಿ ಈ ಕಾರ್ಖಾನೆಯನ್ನು ಪುನಃ ಆರಂಭಿಸಲು ಸಂಬಂಧಪಟ್ಟ ಘಟಕದ ಆಡಳಿತ ಮಂಡಳಿಯ ಅನುಮತಿ ಪಡೆಯಬೇಕಾಗಿದೆ. ಜೊತೆಗೆ ಸಿಲಿಂಡರ್‌ಗಳನ್ನು ಸಾಗಾಣೆ ಮಾಡಲು ವಾಹನ ಪರವಾನಗಿ ನೀಡಬೇಕಾಗಿದೆ. 
ದಿ ಸದರನ್ ಗ್ಯಾಸ್ ಲಿಮಿಟೆಡ್ : 
ಈ ಘಟಕವನ್ನು ವಿಐಎಸ್‌ಎಲ್ ಕಾರ್ಖಾನೆಯ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಎಂಪಿಎಂ ಕಾರ್ಖಾನೆಯ ಸಮೀಪದಲ್ಲಿ ಸ್ಥಾಪಿಸಲಾಗಿದೆ. ಸುಮಾರು ೫ ದಶಕಗಳಿಗೂ ಹಳೇಯದಾದ ಘಟಕ ಇದಾಗಿದ್ದು, ಇದರ ಕೇಂದ್ರ ಕಛೇರಿ ಗೋವಾದಲ್ಲಿದೆ. ಈ ಘಟಕ ಸ್ಥಳೀಯವಾಗಿ ಅಗತ್ಯವಿರುವ ಆಕ್ಸಿಜನ್ ಗ್ಯಾಸ್ ಪೂರ‍್ಯಕೆಯಲ್ಲಿ ತೊಡಗಿಸಿಕೊಂಡಿದೆ. ಇಲ್ಲಿ ಆಕ್ಸಿಜನ್ ದ್ರವ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸೂಕ್ತವಾಗಿದೆ. 
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ತಹಸೀಲ್ದಾರ್ ಎಚ್.ಸಿ ಯೋಗೇಶ್, ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್, ಹಿರಿಯ ಅಧಿಕಾರಿ ಬಿ. ವಿಶ್ವನಾಥ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

     ೧೨ ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಸಂಗ್ರಹ ಘಟಕ: 

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಪ್ರಸ್ತುತ ೧೨ ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು ಕಾರ್ಯಾಂಭಗೊಳ್ಳಲಿದೆ. ಇದೀಗ ಅಗತ್ಯವಿರುವ ಆಕ್ಸಿಜನ್ ಬಳ್ಳಾರಿಯಿಂದ ಪೂರೈಕೆಯಾಗುತ್ತಿದ್ದು, ಹೆಚ್ಚಿನ ಅಗತ್ಯ ಕಂಡು ಬಂದಲ್ಲಿ ವಿಐಎಸ್‌ಎಲ್ ಎಂಎಸ್‌ಪಿಎಲ್ ಹಾಗೂ ಸದರನ್ ಗ್ಯಾಸ್ ಲಿಮಿಟೆಡ್‌ಗಳಿಂದ ಪೂರೈಕೆ ಮಾಡಿಕೊಳ್ಳಲಾಗುವುದು. 
                                                                - ಕೆ.ಬಿ ಶಿವಕುಮಾರ್, ಜಿಲ್ಲಾಧಿಕಾರಿ, ಶಿವಮೊಗ್ಗ

Thursday, August 20, 2020

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಅರಸು ಜನ್ಮದಿನಾಚರಣೆ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮದಿನಾಚರಣೆ ಸರಳವಾಗಿ ನಡೆಯಿತು.
ಭದ್ರಾವತಿ, ಆ. ೨೦: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೦೫ನೇ ಜನ್ಮ ದಿನಚರಣೆ ಗುರುವಾರ ಸರಳವಾಗಿ ನಡೆಯಿತು.
      ವಿದ್ಯಾಸಂಸ್ಥೆಯಲ್ಲಿ ಪ್ರತಿವರ್ಷ ಅರಸುರವರ ಜನ್ಮದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಸಹ ಕೊರೋನಾ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ವಿದ್ಯಾಸಂಸ್ಥೆ ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಬಿಜೆಪಿ ರಾಜ್ಯ ಸರ್ಕಾರದ ಜನವಿರೋಧಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ

ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ

ಭದ್ರಾವತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಹಾಗು ಜನವಿರೋಧಿ ಕಾಯ್ದೆಗಳ ವಿರುದ್ಧ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೦: ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಹಾಗು ಜನವಿರೋಧಿ ಕಾಯ್ದೆಗಳ ವಿರುದ್ಧ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
      ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕೆಂದು ಹಾಗು ಕೊರೋನಾ ನಿಯಂತ್ರಣದಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ವಿಷಯದಲ್ಲಿ ಉಚ್ಛನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಆಗ್ರಹಿಸಿದರು.
     ಪ್ರತಿಭಟನೆಯಲ್ಲಿ ಮುಖಂಡರಾದ ಸಿ.ಎಂ ಖಾದರ್, ಬಿ.ಟಿ ನಾಗರಾಜ್, ಬಿ.ಪಿ ರಾಘವೇಂದ್ರ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಮಾತನಾಡಿದರು. ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವ ವಹಿಸಿದ್ದರು.
     ಮುಖಂಡರಾದ ಅಣ್ಣೋಜಿರಾವ್, ಪ್ರಕಾಶ್‌ರಾವ್ ದುರೆ, ದಶರಥ ಗಿರಿ, ಬಿ. ಗಂಗಾಧರ್, ಇಸ್ಮಾಯಿಲ್ ಖಾನ್, ಅತ್ತಿಗುಂದ ಗೋಪಾಲಪ್ಪ, ಎಂ. ಶಿವಕುಮಾರ್, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳರಾಮಚಂದ್ರ, ರೂಪಾನಾರಾಯಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಡಿ. ದೇವರಾಜ ಅರಸು ೧೦೫ನೇ ಜನ್ಮದಿನಾಚರಣೆ

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮದಿನಾಚರಣೆ ಗುರುವಾರ ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ ಸರಳವಾಗಿ ನಡೆಯಿತು.
ಭದ್ರಾವತಿ, ಆ. ೨೦: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೦೫ನೇ ಜನ್ಮ ದಿನಚರಣೆ ಗುರುವಾರ ಸರಳವಾಗಿ ನಡೆಯಿತು.
    ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಹಿಂದುಳಿದ ವರ್ಗಗಳ ಇಲಾಖೆ ವಿಸ್ತರಣಾಧಿಕಾರಿ ಚಿದಾನಂದ, ಅಲ್ಪ ಸಂಖ್ಯಾತ ಮುಖಂಡ ಸಿ.ಎಂ. ಖಾದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ಹಿಂದು ವರ್ಗಗಳ ಮುಖಂಡ ಟಿ. ವೆಂಕಟೇಶ್, ಹಿಂದುಳಿದ ವರ್ಗಗಳ ಇಲಾಖೆ ಹಾಗು ತಾಲೂಕು ಕಛೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಇಲಾಖೆಯ ರಮೇಶ್ ಸ್ವಾಗತಿಸಿದರು.