Saturday, October 31, 2020

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದುಶ್ಚಟಗಳಿಂದ ದೂರವಿರಿಸಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ರಸ್ತೆಯಲ್ಲಿರುವ ಗೌರಾಪುರದ ಶ್ರೀ ಕೆಂಚಮ್ಮ ದೇವಾಲಯದ ಸಮುದಾಯ ಭವನದಲ್ಲಿ ಸಂಸದರ ನಿಧಿಯಿಂದ ೧೫ ಲಕ್ಷ ರು. ವೆಚ್ಚದ ಮುಂದುವರೆದ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಿ ಕೆ.ಸಂಗಮೇಶ್ವರನ್ನು ದೇವಸ್ಥಾನ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಅ. ೩೧: ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಜೊತೆಗೆ ದುಶ್ಚಟಗಳಿಂದ ದೂರವಿರುವಂತೆ ಎಚ್ಚರ ವಹಿಸಬೇಕು. ಆಗ ಮಾತ್ರ ಮಕ್ಕಳು ಕುಟುಂಬ ಮತ್ತು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
      ಅವರು ಶನಿವಾರ ತಾಲೂಕಿನ ಅಂತರಗಂಗೆ ಗ್ರಾಮದ ರಸ್ತೆಯಲ್ಲಿರುವ ಗೌರಾಪುರದ ಶ್ರೀ ಕೆಂಚಮ್ಮ ದೇವಾಲಯದ ಸಮುದಾಯ ಭವನದಲ್ಲಿ ಸಂಸದರ ನಿಧಿಯಿಂದ ೧೫ ಲಕ್ಷ ರು. ವೆಚ್ಚದ ಮುಂದುವರೆದ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
      ಗೌರಾಪುರ ಗ್ರಾಮದ ಅಭಿವೃದ್ಧಿಗೆ ಬದ್ಧನಾಗಿದ್ದು, ಈ ಸಮುದಾಯ ಭವನದಿಂದ ಸುತ್ತಮುತ್ತಲ ೫-೬ ಗ್ರಾಮಗಳ ಗ್ರಾಮಸ್ಥರಿಗೆ, ಬಡವರಿಗೆ ಹೆಚ್ಚಿನ ಅನುಕೂಲವಾಗುತ್ತಿರುವುದು ಸಂತಸದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಸಮುದಾಯ ಭವನದ ಅಭಿವೃದ್ಧಿ ಇನ್ನೂ ಹೆಚ್ಚಿನ ಗಮನ ನೀಡಲಾಗುವುದು. ಶ್ರೀ ಕೆಂಚಮ್ಮ ದೇವಿ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ರು. ೧೦ ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.
      ಇದೆ ರೀತಿ ಬಸವನಗುಡಿ ಗ್ರಾಮದ ಸರ್ಕಾರಿ ಭೂಮಿಯಲ್ಲಿ ಸುಮಾರು ರು. ೧ ಕೋ. ವೆಚ್ಚದಲ್ಲಿ ಸುತ್ತಮುತ್ತಲ ಹತ್ತಾರು ಗ್ರಾಮಗಳ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಲ್ಯಾಣ ಮಂಟಪ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಇದ್ದು, ಈ ಬಗ್ಗೆ ಎಲ್ಲರೂ ಜವಾಬ್ದಾರಿವಹಿಸಿ ಮುಂದಿನ ಸಿದ್ದತೆಗಳನ್ನು ಕೈಗೊಳ್ಳುವ ಬಗ್ಗೆ ಗಮನ ವಹಿಸಬೇಕೆಂದರು.
   ಮುಖಂಡ ಸಿ.ಆರ್.ಶಿವರಾಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖಂಡರಾದ ಎ. ಮಂಜಪ್ಪ, ಎಲ್ಲಪ್ಪ, ಬಿ.ಆರ್ ಹಾಲೇಶಪ್ಪ, ತಾ.ಪಂ. ಉಪಾಧ್ಯಕ್ಷ ಎನ್. ಶ್ರೀನಿವಾಸ್, ಅಶೋಕ್, ಸೂರಪ್ಪನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶಿಥಿಲಗೊಂಡ ಸರ್ಕಾರಿ ಶಾಲೆಗಳು : ದುರಸ್ತಿಗೊಳಿಸುವಲ್ಲಿ ನಿರ್ಲಕ್ಷ್ಯ

ಶಿಕ್ಷಕರಿಗೆ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವ ಆತಂಕ

ಭದ್ರಾವತಿ ತಾಲೂಕಿನ ದೊಬಣಘಟ್ಟ ಗ್ರಾಮದ ಪಂಚಾಯಿತಿ ಕಛೇರಿ ಹಿಂಭಾಗದಲ್ಲಿರುವ ಕನ್ನಡ ಸರ್ಕಾರಿ ಶಾಲೆಯ ಶಿಥಿಲಗೊಂಡ ಮೇಲ್ಛಾವಣಿ ಹಿಡಿದು ಆಟವಾಡುತ್ತಿರುವ ವಿದ್ಯಾರ್ಥಿ.
ಭದ್ರಾವತಿ, ಅ. ೩೧: ಕೊರೋನಾ ಹಿನ್ನಲೆಯಲ್ಲಿ ಕಳೆದ ೫-೬ ತಿಂಗಳಿನಿಂದ ಮುಚ್ಚಲ್ಪಟ್ಟಿರುವ ತಾಲೂಕಿನ ಬಹಳಷ್ಟು ಸರ್ಕಾರಿ ಶಾಲೆಗಳು ಶಿಥಿಲಗೊಂಡು ಹಾಳಾಗಿದ್ದು, ಶಾಲೆಗಳನ್ನು ದುರಸ್ತಿಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ.
       ಶಾಲೆಗಳು ಪುನಃ ಯಾವಾಗ ಆರಂಭಗೊಳ್ಳುತ್ತವೆಯೋ ಗೊತ್ತಿಲ್ಲ. ಆದರೆ ಶಾಲೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಗತ್ಯವಿರುವ ಕಡೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಸುಮಾರು ೨-೩ ತಿಂಗಳ ಹಿಂದೆಯೇ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ. ಆದರೆ ತಾಲೂಕಿನ ಬಹುತೇಕ ಶಾಲೆಗಳಲ್ಲಿ ಸರಿಯಾಗಿ ಪರಿಶೀಲನೆ ನಡೆಸಿಲ್ಲ. ಅಲ್ಲದೆ ಪರಿಶೀಲನೆ ನಡೆಸಿದ್ದರೂ ಸಹ ಕ್ರಮ ಕೈಗೊಂಡಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.
       ದೊಣಬಘಟ್ಟ ಗ್ರಾಮದ ಪಂಚಾಯಿತಿ ಕಛೇರಿ ಹಿಂಭಾಗದಲ್ಲಿರುವ ಕನ್ನಡ ಸರ್ಕಾರಿ ಶಾಲೆಯಲ್ಲಿ  ಶಾಲೆಯ ಗೋಡೆ ಶಿಥಿಲಗೊಂಡು ಹಲವಾರು ವರ್ಷಗಳು ಕಳೆದಿವೆ. ಗೋಡೆಗಳು ಬೀಳುವ ಸ್ಥಿತಿಯಲ್ಲಿವೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ ನ.೨ ರಿಂದ ಶಿಕ್ಷಕರು ಕಡ್ಡಾಯವಾಗಿ ಶಾಲೆಗಳಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ. ಇದರಿಂದಾಗಿ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ ಎಂದು ಶಿಕ್ಷಕಿ ಅನಿತಾ ಮೇರಿ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶಾಲೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಸಹ ಇಲ್ಲದಂತಾಗಿದೆ. ಈ ಕುರಿತು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದ್ದು, ಆದರೂ ಸಹ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ರೈತರಿಂದ ಭೂಮಿ ಹುಣ್ಣಿಮೆ ಪೂಜೆ

ಭದ್ರಾವತಿ ತಾಲೂಕಿನ ವಿವಿಧೆಡೆ ಆಶ್ವಿಜ ಮಾಸದ ಪೌರ್ಣಿಮೆ ದಿನ ಶನಿವಾರ ರೈತರು ಸಾಂಪ್ರದಾಯಿಕವಾಗಿ ಭೂಮಿ ಹುಣ್ಣಿಮೆ ಪೂಜೆ ನೆರವೇರಿಸಿದರು.
ಭದ್ರಾವತಿ, ಅ. ೩೧: ತಾಲೂಕಿನ ವಿವಿಧೆಡೆ ಆಶ್ವಿಜ ಮಾಸದ ಪೌರ್ಣಿಮೆ ದಿನ ಶನಿವಾರ ರೈತರು ಸಾಂಪ್ರದಾಯಿಕವಾಗಿ ಭೂಮಿ ಹುಣ್ಣಿಮೆ ಪೂಜೆ ನೆರವೇರಿಸಿದರು.
      ಮುಂಜಾನೆ ಹೊಲ, ಗದ್ದೆ, ತೋಟಗಳಲ್ಲಿ ಬೆಳೆಗಳ ನಡುವೆ ಚಪ್ಪರ ಹಾಕಿ ಭೂಮಿಯನ್ನು ಸಾರಿಸಿ, ಬಣ್ಣ ಬಣ್ಣದ ರಂಗೋಲಿ ಚಿತ್ತಾರಗಳ ನಡುವೆ ಕಳಸವಿಟ್ಟು, ವಿವಿಧ ಪುಷ್ಪಗಳಿಂದ ಅಲಂಕರಿಸಿ, ಬಾಳೆಕಂದು, ತಳಿರುತೋರಣಗಳಿಂದ ಸಿಂಗರಸಿ ಭೂ ಮಾತೆಯನ್ನು ಪೂಜೆಸಲಾಯಿತು. ಕೆಲವು ಭಾಗಗಳಲ್ಲಿ ತೋಟದಲ್ಲಿನ ಅಡಕೆ, ತೆಂಗಿನ ಮರಗಳಿಗೆ ಬಣ ಬಣ್ಣದ ಸೀರೆಗಳಿಂದ ಸಿಂಗರಿಸಿ ಭೂ ಮಾತೆಯನ್ನು ಪ್ರತಿಷ್ಠಾಪಿಸಿ ಆರಾಧಿಸಲಾಯಿತು.

ಮುಂದಿನ ಒಂದು ವರ್ಷದೊಳಗೆ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಪೂರ್ಣ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಸಹಕಾರದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಅ. ೩೧:  ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
    ಅವರು ಶನಿವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಹಣದ ಕೊರತೆಯಿಂದ ವಾಲ್ಮೀಕಿ ಭವನ ಕಾಮಗಾರಿ ಸ್ಥಗಿತಗೊಂಡಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚಿನ ನೆರವು ಕೋರಬೇಕಾಗಿದೆ. ಅಲ್ಲದೆ ಸಮಾಜದ ಬಂಧುಗಳು ಸಹ  ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ನೆರವು ನೀಡಲು ಮುಂದಾಗಬೇಕು. ಮುಂದಿನ ವಾಲ್ಮೀಕಿ ಜಯಂತಿಯನ್ನು ನೂತನ ಭವನದಲ್ಲಿ ಆಚರಿಸುವಂತಾಗಬೇಕೆಂದರು.


ಭದ್ರಾವತಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
     ಪ್ರಸ್ತುತ ಸಮಾಜಕ್ಕೆ ಶ್ರೀ ಮಹರ್ಷಿ ವಾಲ್ಮೀಕಿಯವರ ಆದರ್ಶತನಗಳು ಅವಶ್ಯಕವಾಗಿದ್ದು, ಅವರ ಜಯಂತಿ ಕೇವಲ ಆಚರಣೆಗೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ಪ್ರೀತಿ, ಸಹೋದರತ್ವ, ಸಹಬಾಳ್ವೆ, ಸಮಾನತೆ, ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕು. ಇದು ಮಹರ್ಷಿ ವಾಲ್ಮೀಕಿಯವರು ಈ ಜಗತ್ತಿಗೆ ನೀಡಿರುವ ದೊಡ್ಡ ಸಂದೇಶವಾಗಿದೆ. ಇದನ್ನು ಅರಿತು ಎಲ್ಲರೂ ಮುನ್ನಡೆಯಬೇಕೆಂದರು.
     ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ. ಲಕ್ಷ್ಮೀದೇವಿ, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್, ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್ ನಗರ ವೃತ್ತ ನಿರೀಕ್ಷ ರಾಘವೇಂದ್ರ ಕಾಂಡಿಕೆ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ಠಾಣಾಧಿಕಾರಿ ದೇವರಾಜ್, ಶಿರಸ್ತೇದಾರ್ ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
     ಸಮಾಜದ ಗೌರವಾಧ್ಯಕ್ಷ ಬಸವರಾಜಪ್ಪ ಉಪನ್ಯಾಸ ನೀಡಿದರು. ಅಧ್ಯಕ್ಷ ಬಸವರಾಜ ಬಿ. ಆನೆಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ್, ನಾಗಣ್ಣ, ಪುಟ್ಟಸ್ವಾಮಿ ನಾಯಕ, ಪಾಲಯ್ಯ, ಜಯಮ್ಮ ಸೇರಿದಂತೆ ಇನ್ನಿತರನ್ನು ಸನ್ಮಾನಿಸಿ ಗೌರವಿಸಲಾಯಿತು.  
    ಸಮಾಜದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿ ಶಿವಾನಂದ, ಕಾರ್ಯದಶಿ ಮಂಜುನಾಥ್ ಸೇರಿದಂತೆ, ನಿರ್ದೇಶಕರಾದ ಕಡದಕಟ್ಟೆ ಬಸವರಾಜ್, ಸದಾನಂದ, ಸದಾಶಿವಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವಿಐಎಸ್‌ಎಲ್‌ನಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ್‌ಭಾಯಿ ಪಟೇಲರ ಹುಟ್ಟುಹಬ್ಬದ ಅಂಗವಾಗಿ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಆಡಳಿತ ಕಛೇರಿ ಸಮೀಪದ ಇಸ್ಪಾತ್ ಭವನದ ಮುಂಭಾಗ ಶನಿವಾರ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.
ಭದ್ರಾವತಿ, ಅ. ೩೧: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ್‌ಭಾಯಿ ಪಟೇಲರ ಹುಟ್ಟುಹಬ್ಬದ ಅಂಗವಾಗಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಆಡಳಿತ ಕಛೇರಿ ಸಮೀಪದ ಇಸ್ಪಾತ್ ಭವನದ ಮುಂಭಾಗ ಶನಿವಾರ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.
      ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಎಂ.ವೈ. ಸುರೇಶ್ ಕನ್ನಡದಲ್ಲಿ, ಡಾ. ಸುಜೀತ್‌ಕುಮಾರ್ ಹಿಂದಿಯಲ್ಲಿ ಮತ್ತು ಡಾ. ರಾಜು ಆಂಗ್ಲ ಭಾಷೆಯಲ್ಲಿ ಪ್ರತಿಙ ವಿಧಿ ಬೋಧಿಸಿದರು. ವಿಶೇಷವಾಗಿ ಕೊರೋನಾ ಯೋಧರಿಗೆ ಗೌರವ ಸೂಚಿಸಲಾಯಿತು.
     ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್.ಎಸ್ ರಾವ್, ಸುರಜೀತ್‌ಮಿಶ್ರ, ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು. ಪ್ರವೀಣ್‌ಕುಮಾರ್‌ದೇವಾಂಗಮಠ ನಿರೂಪಿಸಿದರು.

Friday, October 30, 2020

ನಾಯ್ಡು ಸಮಾಜದ ಸಮುದಾಯಭವನದ ಮುಂದುವರೆದ ಕಾಮಗಾರಿಗೆ ಭೂಮಿಪೂಜೆ

ಭದ್ರಾವತಿಯಲ್ಲಿ ನಾಯ್ಡು ಸಮಾಜದ ಸಮುದಾಯಭವನದ ಮುಂದುವರೆದ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿಪೂಜೆ ನೆರವೇರಿಸಿದರು.
ಭದ್ರಾವತಿ, ಅ. ೩೦: ನಗರದ ಬಿ.ಹೆಚ್ ರಸ್ತೆ ಗೌಳಿಗರ ಬೀದಿ ಶ್ರೀರಾಮ ಮಂದಿರ ಆವರಣದಲ್ಲಿ ನಾಯ್ಡು ಸಮಾಜದ ವತಿಯಿಂದ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಶಿವಮೊಗ್ಗ ಲೋಕಸಭಾ ಸದಸ್ಯರ ನಿಧಿsಯಿಂದ ರು. ೨೫ ಲಕ್ಷ ಬಿಡುಗಡೆಯಾಗಿದ್ದು,  ಶಾಸಕ ಬಿ.ಕೆ. ಸಂಗಮೇಶ್ವರ್ ಭೂಮಿಪೂಜೆ ನೆರವೇರಿಸಿದರು.
     ಬಿಜೆಪಿ ಪಕ್ಷದ ಮುಖಂಡರಾದ ವಿ. ಕದಿರೇಶ್, ಟಿ. ವೆಂಕಟೇಶ್, ಆನಂದ್, ಮಂಗೋಟೆ ರುದ್ರೇಶ್, ನಾಯ್ಡು ಸಮಾಜದ ಗೌರವಾಧ್ಯಕ್ಷರಾದ ಎಸ್. ಮೋಹನ್‌ನಾಯ್ಡು, ಅಧ್ಯಕ್ಷ ವಿ. ಗೋವಿಂದ್‌ರಾಜ್, ಕಾರ್ಯದರ್ಶಿ ಬಿ.ವಿ ಗಿರಿನಾಯ್ಡು, ಉಪಾಧ್ಯಕ್ಷರಾದ ಪ್ರಭಾಕರ್. ಖಜಾಂಚಿ ಇಂದು ಶೇಖರ್, ಮೋಹನ್, ಜಯಕುಮಾರ್, ಚಲುವರಾಜ್, ವಾಸು, ಪಿ.ಎಸ್ ಬಾಬು, ಮುನಿಸ್ವಾಮಿ, ಬಾಲಚಂದ್ರ ಮುಂತಾದವರು ಉಪಸ್ಥಿತರಿದ್ದರು.


ನಗರಸಭೆ ಕಾರ್ಯಾಚರಣೆ : ಬೀದಿಬದಿ ಮೀನು ವ್ಯಾಪಾರಿಗಳ ತೆರವು

ಭದ್ರಾವತಿಯಲ್ಲಿ ಪ್ರಮುಖ ರಸ್ತೆಗಳ ಬೀದಿಬದಿ ಮೀನು ವ್ಯಾಪಾರಿಗಳನ್ನು ಶುಕ್ರವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿರುವ ಘಟನೆ ನಡೆಯಿತು.
ಭದ್ರಾವತಿ, ಅ. ೩೦: ನಗರದ ಪ್ರಮುಖ ರಸ್ತೆಗಳ ಬೀದಿಬದಿ ಮೀನು ವ್ಯಾಪಾರಿಗಳನ್ನು ಶುಕ್ರವಾರ ನಗರಸಭೆ ವತಿಯಿಂದ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿರುವ ಘಟನೆ ನಡೆಯಿತು.
     ಮೀನುಗಾರರ ಬೀದಿ ಬಿ.ಎಚ್ ರಸ್ತೆ ದುರ್ಗಾ ನರ್ಸಿಂಗ್ ಹೋಂ ಬಳಿ ಹಾಗು  ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದಲ್ಲಿ ಪ್ರತಿ ದಿನ ಬೀದಿ ಬದಿ ಹಸಿ ಮೀನು ಮಾರಾಟ ನಡೆಸಲಾಗುತ್ತಿತ್ತು. ಇದರಿಂದ ರಸ್ತೆಯಲ್ಲಿ ಸಂಚರಿಸುವವರು, ಸಮೀಪದ ಅಂಗಡಿ ಮುಂಗಟ್ಟುಗಳ ವ್ಯಾಪಾರಸ್ಥರು, ಮೆಸ್ಕಾಂ ಸಿಬ್ಬಂದಿಗಳು ಹಾಗು ಸಮೀಪದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿತ್ತು. ಅಲ್ಲದೆ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಇಲ್ಲದೆ ಇರುವುದು ಕಂಡು ಬರುತ್ತಿತ್ತು. 


       ಈ ಹಿನ್ನಲೆಯಲ್ಲಿ ನಗರಸಭೆ ಇಂಜಿನಿಯರ್ ಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಹಾಗು ಸೂಪರ್ ವೈಸರ್ ಎನ್. ಗೋವಿಂದ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸುವಲ್ಲಿ ಯಶಸ್ವಿಯಾಯಿತು.

ಈದ್ ಮಿಲಾದ್ : ಮುಸ್ಲಿಂ ಯುವಕರಿಂದ ಹಣ್ಣು-ಹಂಪಲು ವಿತರಣೆ

ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಯುವಕರ ತಂಡ ಶುಕ್ರವಾರ ನಗರದ ವಿವಿಧೆಡೆ ಹಣ್ಣು-ಹಂಪಲು ವಿತರಿಸಿತು.
ಭದ್ರಾವತಿ, ಅ. ೩೦: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಯುವಕರ ತಂಡ ಶುಕ್ರವಾರ ನಗರದ ವಿವಿಧೆಡೆ ಹಣ್ಣು-ಹಂಪಲು ವಿತರಿಸಿತು.
   ನೌಜವಾನ್ ಕಮಿಟಿ ಪ್ರಮುಖರಾದ ಸೈಯದ್ ಫೈರೋಜ್, ನೂರು ಅಹಮದ್, ಖಲೀದ್ ರಜಾ, ಅದಿಲ್ ಮತ್ತು ರಹೀಮ್ ಸೇರಿದಂತೆ ಇನ್ನಿತರರನ್ನೊಳಗೊಂಡ ತಂಡ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ನಿರ್ಮಲಾ ಆಸ್ಪತ್ರೆ ಒಳ ರೋಗಿಗಳಿಗೆ ಮತ್ತು ನ್ಯೂಟೌನ್ ಸಿದ್ಧಾರ್ಥ ಅಂಧರ ಕೇಂದ್ರದ ವಿಕಲಚೇತನರಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಹಬ್ಬದ ಶುಭಾಶಯ ಕೋರಿತು.
   ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಹುತೇಕ ಮುಸ್ಲಿಂ ಸಂಘಟನೆಗಳು ಸರಳವಾಗಿ ಹಬ್ಬವನ್ನು ಆಚರಿಸಿದವು. ಆಯಾ ಭಾಗದಲ್ಲಿರುವ ಮಸೀದಿಗಳಲ್ಲಿ ಗುರುವಾರ ರಾತ್ರಿ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಬಹುತೇಕ ಮಸೀದಿಗಳ ಬಳಿ ಮೆಕ್ಕಾ ಮದೀನ ಮಾದರಿಗಳನ್ನು ನಿರ್ಮಿಸಲಾಗಿತ್ತು.  ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಲ್ಲಿ ಈ ಬಾರಿ ಹಬ್ಬದ ಸಂಭ್ರಮ ಕ್ಷೀಣಿಸಿರುವುದು ಕಂಡು ಬಂದಿತು.

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನ.೨ರಂದು ಸಭೆ


ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹೆಸರನ್ನು ನಾಮಕರಣಗೊಳಿಸುವಂತೆ ನಡೆಸುತ್ತಿರುವ ಹೋರಾಟದ ಮುಂದಿನ ಹಂತದ ಬಗ್ಗೆ ಚರ್ಚಿಸಲು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನ.೨ರಂದು ಬೆಳಿಗ್ಗೆ 11ಕ್ಕೆ   ಬಿ.ಎಚ್ ರಸ್ತೆ ಪದ್ಮ ನಿಲಯ ಹೋಟೆಲ್ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
         ಸಭೆಯನ್ನು ಮಾಜಿ ಶಾಸಕ ವೈಎಸ್‌ವಿ ದತ್ತಾ ಉದ್ಘಾಟಿಸಲಿದ್ದು, ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ಅಧ್ಯಕ್ಷ ಆರ್. ಕರುಣಾಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾರದ ಅಪ್ಪಾಜಿ, ಮುಖಂಡರಾದ ಕರಿಯಪ್ಪ, ಎಂ.ಎ ಅಜಿತ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 
      ನಗರದ ಎಲ್ಲಾ ಸಂಘ-ಸಂಸ್ಥೆಗಳ, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.

ಪ್ರಧಾನ ಅಂಚೆ ಕಛೇರಿಯಲ್ಲಿ ಜಾಗೃತಿ ಸಪ್ತಾಹ : ಆಶು ಭಾಷಣ ಸ್ಪರ್ಧೆ

ಭದ್ರಾವತಿ ಪ್ರಧಾನ ಅಂಚೆ ಕಛೇರಿಯಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ ನೌಕರರ ಜಾಗೃತಿ ಕುರಿತ ವಿಶೇಷ ಆಶು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.
ಭದ್ರಾವತಿ: ನಗರದ ಪ್ರಧಾನ ಅಂಚೆ ಕಛೇರಿಯಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ ನೌಕರರ ಜಾಗೃತಿ ಕುರಿತ ವಿಶೇಷ ಆಶು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.
     ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯುತ್ ಮತ್ತು ವಿದ್ಯುನ್ಮಾನ ವಿಭಾಗದ ಅಧಿಕಾರಿ ಎಚ್.ಆರ್ ಶ್ರೀಧರೇಶ್ ಭಾರದ್ವಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಸದ್ಗುಣಗಳಿಂದ ನಾಗರೀಕ ಸಮಾಜದ ಪ್ರಜ್ಞಾವಂತ ಪ್ರಜೆಗಳಾಗಿ ಬದುಕುವ ಜೊತೆಗೆ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ನೌಕರರ ಜವಾಬ್ದಾರಿ ಕುರಿತು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಅಂಚೆ ಪಾಲಕ ವಿ. ಶಶಿಧರ್ ಮಾತನಾಡಿ, ಅಂಚೆ ಕಛೇರಿಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಸಮಾಜದಲ್ಲಿ ಅಂಚೆ ಇಲಾಖೆಯ ಮಹತ್ವ ವಿವರಿಸಿದರು.  
     ಪಾಲಿಟೆಕ್ನಿಕ್ ಹಿರಿಯ ಶ್ರೇಣಿ ಉಪನ್ಯಾಸಕ ಬಾಲಸುಬ್ರಮಣ್ಯ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಸುಮಾರು ೩೫ ಮಂದಿ ಅಂಚೆ ನೌಕರರು ಪಾಲ್ಗೊಂಡಿದ್ದರು. ನೌಕರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
     ನಿತ್ಯಾನಂದ ನಾಯಕ್ ಪ್ರಾರ್ಥಿಸಿದರು. ನಾಗರಾಜ್ ಪೂಜಾರ್ ಸ್ವಾಗತಿಸಿದರು. ಉದಯ ಆಚಾರ್ ನಿರೂಪಿಸಿದರು.

ಅಗ್ನಿಶಾಮಕ, ಗೃಹರಕ್ಷಕದಳ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

ಭದ್ರಾವತಿ ನಗರಸಭೆ ಸಹಯೋಗದೊಂದಿಗೆ ಗುರುವಾರ ಹೊಸಬುಳ್ಳಾಪುರದ ಅಗ್ನಿಶಾಮಕ ಠಾಣೆ ಆವರಣದ ಸುತ್ತಲೂ ಹಾಗು ಹಿಂಭಾಗದ ರಸ್ತೆ, ಚರಂಡಿಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಭದ್ರಾವತಿ: ನಗರಸಭೆ ಸಹಯೋಗದೊಂದಿಗೆ ಗುರುವಾರ ಹೊಸಬುಳ್ಳಾಪುರದ ಅಗ್ನಿಶಾಮಕ ಠಾಣೆ ಆವರಣದ ಸುತ್ತಲೂ ಹಾಗು ಹಿಂಭಾಗದ ರಸ್ತೆ, ಚರಂಡಿಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
     ಠಾಣೆಯ ಹಿಂಭಾಗದ ರಸ್ತೆ ಮತ್ತು ಚರಂಡಿಗಳಲ್ಲಿ ಆಳೆತ್ತರಕ್ಕೆ ಬೆಳೆದು ನಿಂತ ಗಿಡ ಗಂಟೆಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ನೇತೃತ್ವದಲ್ಲಿ ಅಗ್ನಿಶಾಮಕ ಹಾಗೂ ಗೃಹರಕ್ಷಕದಳ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Wednesday, October 28, 2020

ಯಂತ್ರ ಶ್ರೀ ಯೋಧರ ತರಬೇತಿ ಕಾರ್ಯಾಗಾರ .

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ  ಕೃಷಿ ಯಂತ್ರಧಾರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ಯಂತ್ರ ಶ್ರೀ ಯೋಧರ ತರಬೇತಿ ಕಾರ್ಯಾಗಾರ ನಡೆಯಿತು.
ಭದ್ರಾವತಿ, ಅ. ೨೮:  ತಾಲೂಕಿನ ಕೂಡ್ಲಿಗೆರೆ ಹೋಬಳಿ  ಕೃಷಿ ಯಂತ್ರಧಾರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ಯಂತ್ರ ಶ್ರೀ ಯೋಧರ ತರಬೇತಿ ಕಾರ್ಯಾಗಾರ ನಡೆಯಿತು.
    ಯೋಜನಾಧಿಕಾರಿ ಸುಧೀರ ಜೈನ್ ಕಾರ್ಯಾಗಾರ ಉದ್ಘಾಟಿಸಿದರು. ರೈತರಿಗೆ ಕಡಿಮೆ ಖರ್ಚಿನಲ್ಲಿ ಭತ್ತದ ಬೇಸಾಯ ಯಂತ್ರದ ಮೂಲಕ ಅನುಷ್ಠಾನಗೊಳಿಸುವ ಬಗ್ಗೆ, ಭತ್ತದ ಬೀಜೋಪಚಾರ, ಟ್ರೇಗಳಲ್ಲಿ ಸಸಿಮಡಿ ತಯಾರಿ ಹಾಗೂ ಯಂತ್ರದ ಮೂಲಕ ಭತ್ತ ನಾಟಿ ಸೇರಿದಂತೆ ಇನ್ನಿತರ ಮಾಹಿತಿ ನೀಡಲಾಯಿತು.
     ಕೃಷಿ ಯಂತ್ರಧಾರೆ ಯೋಜನಾಧಿಕಾರಿ ನಿಂಗಪ್ಪ ಅಗಸರ ಯಂತ್ರಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಭದ್ರಾವತಿ, ತರೀಕೆರೆ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್ ಪುರ ತಾಲೂಕಿನ ಆಯ್ದ ೨೦ ಮಂದಿ ಯಂತ್ರ ಶ್ರೀ ಯೋಧರು ಭಾಗವಹಿಸಿದರು. ಯಂತ್ರದ ಮೂಲಕ ಭತ್ತದ ಬೆಳೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಕೃಷಿಕರಾದ ತಾಲೂಕಿನ ದೊಡ್ಡೇರಿ ಶ್ರೀರಾಮು ಮತ್ತು ಬಾಳೆಕಟ್ಟೆ ಅನಸೂಯಮ್ಮ ಪಾಲ್ಗೊಂಡಿದ್ದರು. ವಿವಿಧ ತಾಲೂಕಿನ ಕೃಷಿ ಅಧಿಕಾರಿಗಳು, ಕೃಷಿ ಯಂತ್ರಧಾರೆ ಪ್ರಬಂಧಕರು ಭಾಗವಹಿಸಿದ್ದರು.  ಗೋವಿಂದಪ್ಪ ನಿರೂಪಿಸಿದರು.  ಪ್ರಸನ್ನ ಕುಮಾರ ಸ್ವಾಗತಿಸಿದರು. ಉಮೇಶ ವಂದಿಸಿದರು.

ಮನೆಯ ಬೀಗ ಮುರಿದು ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಕಳವು

ಭದ್ರಾವತಿ, ಅ. ೨೮: ತಾಲೂಕಿನ ಕೊಮಾರನಹಳ್ಳಿ ಗ್ರಾಮದ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿದೆ.
    ಸತ್ಯನಾರಾಯಣ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಅ.೨೫ರಂದು ರಾತ್ರಿ ಧರ್ಮಸ್ಥಳಕ್ಕೆ ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು. ಅ.೨೭ರಂದು ರಾತ್ರಿ ಪುನಃ ಹಿಂದಿರುಗಿದ್ದು, ಈ ಸಂದರ್ಭದಲ್ಲಿ ಮನೆಯ ಬೀಗ ಮುರಿದಿರುವುದು ಕಂಡು ಬಂದಿದೆ.
     ಮನೆಯ ಬೀರುವಿನಲ್ಲಿದ್ದ ಸುಮಾರು ೧೬,೪೦೦ ರು. ಮೌಲ್ಯದ ೫ ಗ್ರಾಂ ತೂಕದ ೨ ಬಂಗಾರದ ಉಂಗುರ, ಸುಮಾರು ೧೨,೮೦೦ ರು. ಮೌಲ್ಯದ ೪ ಗ್ರಾಂ ತೂಕದ ಬ್ರಾಸ್‌ಲೈಟ್, ಸುಮಾರು ೯,೬೦೦ ರು. ಮೌಲ್ಯದ ೩ ಗ್ರಾಂ ತೂಕದ ತಾಳಿದಾರದ ತಂತಿ, ಸುಮಾರು ೨೫,೬೦೦ ರು. ಮೌಲ್ಯದ ೮ ಗ್ರಾಂ ತೂಕದ ಜುಮುಕಿ ಓಲೆ, ಸುಮಾರು ೧೭,೨೦೦ ರು. ಮೌಲ್ಯದ ೫.೨೫ ಗ್ರಾಂ ತೂಕದ ಒಂದು ಜೊತೆ ಹ್ಯಾಂಗಿಂಗ್ ಸೆಟ್ ಮತ್ತು ಸುಮಾರು ೨೫,೬೦೦ ರು. ಮೌಲ್ಯದ ೧೩ ಗ್ರಾಂ ತೂಕದ ೧ ಬಂಗಾರದ ಬಳೆ ಸೇರಿದಂತೆ ಒಟ್ಟು ೧.೪೦ ಲಕ್ಷ ರು. ಮೌಲ್ಯದ ೪೩.೨೫ ಗ್ರಾಂ ತೂಕದ ಆಭರಣಗಳನ್ನು ಮತ್ತು ೭ ಸಾವಿರ ರು. ನಗದು ಹಾಗು ಸುಮಾರು ೩೦ ಸಾವಿರ ರು. ಮೌಲ್ಯದ ಲ್ಯಾಪ್‌ಟಾಪ್ ಮತ್ತು ಸುಮಾರು ೨ ರು. ಮೌಲ್ಯದ ಡಾಂಗಲ್ ಕಳವು ಮಾಡಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೋವಿಡ್-೧೯ ಅರಿವು, ಪ್ರತಿಜ್ಞಾ ವಿಧಿ ಸ್ವೀಕಾರ

ಕೊರೋನಾ ವೈರಸ್ ನಿಯಂತ್ರಿಸುವ ಉದ್ದೇಶದಿಂದ ಭದ್ರಾವತಿ ಅಗ್ನಿಶಾಮಕ ಠಾಣೆಯಲ್ಲಿ ಜಾಗೃತಿ ಅರಿವು ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಅ. ೨೮: ನಗರದ ಅಗ್ನಿಶಾಮಕ ಠಾಣೆಯಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ  ಉದ್ದೇಶದಿಂದ ಜಾಗೃತಿ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
      ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ಸಿಬ್ಬಂದಿಗಳಿಗೆ ಕೊರೋನಾ ಜಾಗೃತಿ ಅರಿವಿನ ಮಹತ್ವ ತಿಳಿಸಿಕೊಡುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಹೆಚ್ಚಿನ ಗಮನ ನೀಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾರ್ವಜನಿಕರಿಗೂ ಅರಿವು ಮೂಡಿಸಬೇಕೆಂದು ಕರೆ ನೀಡಿದರು.

ನಗರಸಭೆ ವ್ಯಾಪ್ತಿ ಕೆರೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಸಚಿವರಿಗೆ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ನಗರಸಭೆಗೆ ರು.೧೦೦ ಕೋ. ವಿಶೇಷ ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್ ಈಶ್ವರಪ್ಪರವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
      ಭದ್ರಾವತಿ, ಅ. ೨೮: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ನಗರಸಭೆಗೆ ರು.೧೦೦ ಕೋ. ವಿಶೇಷ ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್ ಈಶ್ವರಪ್ಪರವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
    ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ರೀತಿಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೬೯ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು.  ಕೆರೆಗಳಲ್ಲಿ ಅಂತರ್ಜಲ ಹೆಚ್ಚಿಸಿ ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸಿಕೊಡಲು ತಕ್ಷಣ ಯೋಜನೆ ರೂಪಿಸುವಂತೆ ಒತ್ತಾಯಿಸಲಾಗಿದೆ.
      ನಗರಸಭೆ ಅಸ್ತಿತ್ವಕ್ಕೆ ಬಂದು ೨೫ ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ರು.೧೦೦ ಕೋ. ವಿಶೇಷ ಅನುದಾನ ಬಿಡುಗಡೆಗೊಳಿಸುವುದು. ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಖಾಲಿ ನಿವೇಶನದಲ್ಲಿ ಹೈಟೆಕ್  ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ರು. ೩ ಕೋ. ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ.
    ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸಲು ಕಾರ್ಖಾನೆಗೆ ಸೇರಿದ ನಗರಾಡಳಿತ ಪ್ರದೇಶವನ್ನು ಖಾಸಗಿಯವರಿಗೆ ವಹಿಸಿಕೊಡುವ ವಿಚಾರ ತಿಳಿದು ಬಂದಿದ್ದು, ಈ ವ್ಯಾಪ್ತಿಯ ೪,೫,೬ ಮತ್ತು ೮ನೇ ವಾರ್ಡ್ ಹಾಗೂ ಆನೆಕೊಪ್ಪ ಕೊಳಚೆ ಪ್ರದೇಶದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಖಾಸಗಿಯವರಿಗೆ ಹಸ್ತಾಂತರ ಮಾಡದೆ ನಗರಸಭೆಗೆ ವಹಿಸಿಕೊಡುವಂತೆ ಕೋರಲಾಗಿದೆ.
    ಟ್ರಸ್ಟ್  ಛೇರ‍್ಮನ್ ಆರ್. ವೇಣುಗೋಪಾಲ್‌ರವರು ಸುಮಾರು ೪೦ ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರುವ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಅವರ ಸುಧೀರ್ಘ ಹೋರಾಟದ ಸವಿನೆನಪಿಗಾಗಿ ಪೌರಕಾರ್ಮಿಕರೊಡನೆ ಸ್ನೇಹ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಚಿವರು ಈ ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಸುಮಾರು ೨೫ ವರ್ಷಗಳಿಂದ ನಡೆಯದಿರುವ ನಗರಸಭೆ ಪ್ರಗತಿಪರಿಶೀಲನಾ ಸಭೆ ನಡೆಸಬೇಕೆಂದು ಮನವಿ ಮಾಡಲಾಗಿದೆ.
     ಟ್ರಸ್ಟ್ ಪ್ರಮುಖರಾದ ಛೇರ‍್ಮನ್ ಆರ್. ವೇಣುಗೋಪಾಲ್, ಕಾರ್ಯದರ್ಶಿ ವಿ. ಅಂಜನ, ಡಿ. ದೇವರಾಜ ಅರಸ್ ಜನಸ್ಪಂದನ ವೇದಿಕೆ ಕಾರ್ಯಧ್ಯಕ್ಷೆ ರಮಾವೆಂಕಟೇಶ್, ಶೋಭ, ಭವಾನಿ ಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಜಾಗೃತಿಯೊಂದಿಗೆ ಪ್ರಾಮಾಣಿಕರಾಗಿ ಸಂಸ್ಥೆ, ಸಮಾಜ, ದೇಶದೆಡೆಗೆ ನಿಷ್ಠೆ ತೋರಿಸಿ : ಕೆ.ಎಲ್.ಎಸ್ ರಾವ್

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಆಡಳಿತ ಕಛೇರಿ ಇಸ್ಪಾತ್ ಭವನದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಕೆ.ಎಸ್.ಎಸ್ ರಾವ್  ಸರ್.ಎಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಾಗೃತಿ ತಿಳುವಳಿಕೆ ಸಪ್ತಾಹಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಅ. ೨೮: ಪ್ರತಿಯೊಬ್ಬರು ಜಾಗರೂಕರಾಗಿ, ಪ್ರಾಮಾಣಿಕರಾಗಿ ತಮ್ಮ ಕೆಲಸ, ಸಂಸ್ಥೆ, ಸಮಾಜ ಹಾಗೂ ದೇಶದೆಡೆಗೆ ನಿಷ್ಠೆ ತೋರಬೇಕೆಂದು ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಲ್.ಎಸ್ ರಾವ್ ಹೇಳಿದರು.
    ಅವರು ಕಾರ್ಖಾನೆಯ ಆಡಳಿತ ಕಛೇರಿ ಇಸ್ಪಾತ್ ಭವನದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ  ಸರ್.ಎಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆಮಾಡುವ ಮೂಲಕ ಜಾಗೃತಿ ತಿಳುವಳಿಕೆ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು.
       ಯಾರೂ ಸಹ ವಿಜಿಲೆನ್ಸ್ ವಿಭಾಗದ ಬಗ್ಗೆ ಭಯಪಡುವ ಅಗತ್ಯವಿಲ್ಲ.  ಈ ವಿಭಾಗ ಮುನ್ನಚ್ಚರಿಕೆ ಕ್ರಮಗಳ ಕುರಿತು ನಮಗೆ ಮಾರ್ಗದರ್ಶನ ನೀಡುತ್ತದೆ. ನಾವು ವೆಚ್ಚ ಕಡಿಮೆಗೊಳಿಸುವ ಮೂಲಕ ನಮ್ಮ ಕೆಲಸದೆಡೆಗೆ ಪ್ರತಿಶತ ೧೦೦ರಷ್ಟು ಗುರಿ ಸಾಧಿಸುವ ಜೊತೆಗೆ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಬೇಕೆಂದರು.
      ವಿಜಿಲೆನ್ಸ್ ಮತ್ತು ಎಸಿವಿಓ ವಿಭಾಗದ ಉಪ ಮಹಾಪ್ರಬಂಧಕ ಆರ್. ಜಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ಪ್ರತಿನಿತ್ಯ ಜಾಗೃತರಾಗಿ ಮುನ್ನಡೆಯುವ ಜೊತೆಗೆ ನಿಷ್ಠೆ ಮತ್ತು ಪ್ರಾಮಾಣಿಕತೆ ಪ್ರತಿಯೊಂದು ಹಂತದಲ್ಲೂ ಕಾಯ್ದಿರಿಸಿಕೊಳ್ಳಬೇಕು. ಈ ಬಾರಿ ಸಪ್ತಾಹದ ಧ್ಯೇಯ ವಾಕ್ಯ 'ಜಾಗೃತ ಭಾರತ, ಸಮೃದ್ಧ ಭಾರತ' ಎಂಬುದಾಗಿದೆ. ಮುಂಜಾಗ್ರತೆ ಕ್ರಮಗಳನ್ನು ಮತ್ತು ಇ-ಆಡಳಿತ ಸಾಧನಗಳನ್ನು ಬಳಸಿ ಸಂಸ್ಥೆಯೆಡೆಗೆ ತಮ್ಮ ನಿಷ್ಠೆಯನ್ನು ಕಾಯ್ದುಕೊಂಡು ಸಂಸ್ಥೆಯ ಜೊತೆಗೆ ದೇಶದ ಸಮೃದ್ಧಿಯನ್ನು ಹೆಚ್ಚಿಸಬೇಕೆಂದರು.
     ಸ್ಥಾವರ ವಿಭಾಗದ ಮುಖ್ಯ ಮಹಾಪ್ರಬಂಧಕ ಸುರಜಿತ್ ಮಿಶ್ರಾ,  ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಮಹಾಪ್ರಬಂಧಕ ಪಿ.ಪಿ. ಚಕ್ರವರ್ತಿ, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್. ವೀರಣ್ಣ, ಕಾರ್ಮಿಕರ ಸಂಘದ ಅಧ್ಯಕ್ಷ  ಜೆ. ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಅಧಿಕಾರಿಗಳಾದ  ಡಿ. ಲೋಕೇಶ್ವರ, ಸುರಜೀತ್ ಮಿಶ್ರಾ ಮತ್ತು ಟಿ. ರವಿಚಂದ್ರನ್ ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತಿಙ ವಿಧಿ ಬೋಧಿಸಿದರು.
    ಪಿ.ಎಚ್.ಆರ್ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮಹಾಪ್ರಬಂಧಕ ಎಲ್. ಪ್ರವೀಣ್‌ಕುಮಾರ್, ಪ್ರಾಜೆಕ್ಟ್ ಮತ್ತು ಮೈನ್ಸ್ ವಿಭಾಗದ ಮಹಾಪ್ರಬಂಧಕ ಮೋಹನ್ ರಾಜ್ ಶೆಟ್ಟಿ ಮತ್ತು ವಿಐಎಸ್‌ಎಲ್ ಆಸ್ಪತ್ರೆ ಜಂಟಿ ನಿರ್ದೇಶಕ ಡಾ. ಎಂ.ವೈ ಸುರೇಶ್‌ರವರು ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ವಿಜಿಲೆನ್ಸ್ ಕಮಿಷನರ್‌ರವರ ಸಂದೇಶಗಳನ್ನು ವಾಚಿಸಿದರು.
      ಕೋವಿಡ್-೧೯ ಮಾರ್ಗಸೂಚಿ ಅನುಸಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಮಾಸ್ಕ್ ಧರಿಸುವಿಕೆ ಬಗ್ಗೆ ಅರಿವು ಮೂಡಿಸುವ ಹಿನ್ನಲೆಯಲ್ಲಿ ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ  ಸ್ಪರ್ಧೆ ಮತ್ತು ಗ್ರೀಟಿಂಗ್ ಕಾರ್ಡ್ ರಚಿಸುವ ಸ್ಪರ್ಧೆಯನ್ನು ಅಧಿಕಾರಿಗಳು, ಕಾಯಂ ಮತ್ತು ಗುತ್ತಿಗೆ ಕಾರ್ಮಿಕರಿಗೆ ಆಯೋಜಿಸಲಾಗಿತ್ತು. ಹೌಸ್ ಕೀಪಿಂಗ್ ಸ್ಪರ್ಧೆಯನ್ನು ೨ ವಿಭಾಗಗಳಲ್ಲಿ ಉತ್ಪಾದಕಾ ಮತ್ತು ಸೇವಾ ಇಲಾಖೆಗಳಿಗೆ ಆಯೋಜಿಸಲಾಗಿತ್ತು.
     ವೈದ್ಯಕೀಯ ಮತ್ತು ಆರೋಗ್ಯ ಸೇವೆ ವಿಭಾಗದ ಜಂಟಿ ನಿರ್ದೇಶಕಿ ಡಾ|| ಎಸ್.ಕವಿತಾ  ಪ್ರಾರ್ಥಿಸಿದರು. ವಿಜಿಲೆನ್ಸ್ ವಿಭಾಗದ ಹಿರಿಯ ವ್ಯವಸ್ಥಾಪಕ ವಿಕಾಸ್ ಬಸೇರ್ ನಿರೂಪಿಸಿದರು.  ಟೆಕ್ನಿಷಿಯನ್‌ಕೇದಾರ್‌ನಾಥ್ ವಂದಿಸಿದರು.

Tuesday, October 27, 2020

ಭ್ರಷ್ಟಾಚಾರ ದೇಶದ ಬಹುದೊಡ್ಡ ಸಮಸ್ಯೆ : ಡಾ. ಬಿ.ಜಿ ಧನಂಜಯ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಅ. ೨೭: ಭ್ರಷ್ಟಾಚಾರ ಪ್ರಸ್ತುತ ದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಹೇಳಿದರು.
   ಅವರು ಮಂಗಳವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ಭ್ರಷ್ಟಾಚಾರ ದೇಶದಲ್ಲಿ ಅಪಾಯಕಾರಿ ಸಾಮಾಜಿಕ ಸಮಸ್ಯೆಯಾಗಿ ರೂಪುಗೊಂಡಿದೆ. ಎಲ್ಲಾ ಕ್ಷೇತ್ರಗಳಿಗೂ ಇದರಿಂದ ಹಿನ್ನಡೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇದರ ವಿರುದ್ಧ ಯುವ ಸಮುದಾಯ ಜಾಗೃತಗೊಂಡು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
    ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಿಬಿಐ, ಲೋಕಾಯುಕ್ತ, ಎಸಿಬಿ ಮತ್ತು ಪೊಲೀಸ್ ವ್ಯವಸ್ಥೆಗಳು ಮತ್ತಷ್ಟು ಸದೃಢಗೊಳ್ಳಬೇಕು. ನಾಗರೀಕ ಸಮಾಜ ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸಿ ಗೌರವಿಸಬೇಕು. ಯುವ ಸಮುದಾಯ ಜಯಪ್ರಕಾಶ್ ನಾರಾಯಣ್ ಮತ್ತು ಲೋಹಿಯರವರ ಸಮಾಜವಾದಿ ಚಿಂತನೆಗಳನ್ನು, ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
    ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಪ್ತಾಹದಲ್ಲಿ ಪಾಲ್ಗೊಂಡಿದ್ದರು.

೩೬ ವರ್ಷಗಳಿಂದ ಹಾಸಿಗೆ ಹಿಡಿದಿರುವ ವಿಕಲಚೇತನ ಯುವತಿ

ಪಿಂಚಣಿ ಸೇರಿದಂತೆ ಸರ್ಕಾರಿ ಸೌಲಭ್ಯಗಳಿಗೆ ಮನವಿ : ತಾಲೂಕು ಆಡಳಿತ ಸ್ಪಂದನೆ

ಹಾಸಿಗೆ ಹಿಡಿದಿರುವ ಭದ್ರಾವತಿ ತಾಲ್ಲೂಕಿನ ಹೊಳೆಗಂಗೂರು ಗ್ರಾಮದ ಸುಮಾರು ೩೬ ವರ್ಷದ ವಿಕಲಚೇತನ ಯುವತಿ.
ಭದ್ರಾವತಿ, ಅ. ೨೭:  ತಾಲ್ಲೂಕಿನ ಹೊಳೆಗಂಗೂರು ಗ್ರಾಮದ ಸುಮಾರು ೩೬ ವರ್ಷದ ವಿಕಲಚೇತನ ಯುವತಿಗೆ ಇದುವರೆಗೂ ಸರ್ಕಾರದ ಯಾವುದೇ ಪಿಂಚಣಿ  ಸೌಲಭ್ಯ ಲಭಿಸಿಲ್ಲ. ಓಡಾಡುವುದಕ್ಕೂ ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ಯುವತಿಯ ನೆರವಿಗೆ ತಾಲೂಕು ಆಡಳಿತ ಮುಂದಾಗುವಂತೆ ಆಮ್ ಆದ್ಮಿ ಪಾರ್ಟಿ ಮನವಿ ಮಾಡಿದೆ.
   ಮನವಿಗೆ ಸ್ಪಂದಿಸಿ ಶಿರಸ್ತೇದಾರ್ ಮಂಜಾನಾಯ್ಕ ಹಾಗು ಭೂಮಿ ಕೇಂದ್ರದ ಮಲ್ಲಿಕಾರ್ಜುನಯ್ಯರವರು ಮಂಗಳವಾರ ಯುವತಿಯ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿ ತಕ್ಷಣ  ಕ್ರಮ ಕೈಗೊಂಡು ಪಿಂಚಣಿ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಭರವಸೆ ನೀಡಿದರು. ತಾಲೂಕು ಆಡಳಿತದ ಕಾರ್ಯ ವೈಖರಿಗೆ ಆಮ್ ಆದ್ಮಿ ಪಾರ್ಟಿ ಮೆಚ್ಚುಗೆ ವ್ಯಕ್ತಪಡಿಸಿದೆ.


ಶಿರಸ್ತೇದಾರ್ ಮಂಜಾನಾಯ್ಕ ಹಾಗು ಭೂಮಿ ಕೇಂದ್ರದ ಮಲ್ಲಿಕಾರ್ಜುನಯ್ಯರವರು ಮಂಗಳವಾರ ಯುವತಿಯ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದರು.
      ಅಧಿಕಾರಿಗಳ ಭೇಟಿ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಪರಮೇಶ್ವರ್ ನಾಯ್ಕ್, ಜಾವೇದ್, ಎಚ್.  ರವಿಕುಮಾರ್ ಸೇರಿದಂತೆ  ಇತರರು ಉಪಸ್ಥಿತರಿದರು.

Monday, October 26, 2020

ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಸಮಸ್ಯೆ : ಪೂರಕ ಸ್ಪಂದನೆ

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಭರವಸೆ ನೀಡಿದ ಸಂಸದ ಬಿ.ವೈ ರಾಘವೇಂದ್ರ

ಭದ್ರಾವತಿ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಭದ್ರಾವತಿ, ಅ. ೨೬: ನಗರದ ವಿಐಎಸ್‌ಎಲ್ ಕಾರ್ಖಾನೆಯ ವಸತಿ ಗೃಹಗಳಲ್ಲಿ ವಾಸವಾಗಿರುವ ನಿವೃತ್ತ ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು.
    ಅವರು ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ಕಾರ್ಖಾನೆಯ ಅಧಿಕಾರಿಗಳು ಹಾಗು ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿ, ಕಾರ್ಖಾನೆಯ ನಗರಾಡಳಿತ ಇಲಾಖೆ ವಿರುದ್ಧ ಇತ್ತೀಚೆಗೆ ನಿವೃತ್ತ ಕಾರ್ಮಿಕರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿರುವ ಮಾಹಿತಿ ತಿಳಿದು ಬಂದಿದೆ. ಪ್ರಸ್ತುತ ನಿಗದಿಪಡಿಸಲಾಗಿರುವ ಬಾಡಿಗೆ ದರ ಕಡಿಮೆಗೊಳಿಸಲು ಕಾರ್ಖಾನೆ ಆಡಳಿತ ಮಂಡಳಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ೬ ವರ್ಷಗಳವರೆಗೆ ಬಾಡಿಗೆ ದರ ಹೆಚ್ಚಳ ಮಾಡದಂತೆ ಸೂಚಿಸಲಾಗಿದೆ ಎಂದರು.
    ಉಳಿದಂತೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳಾದರೂ ಅಥವಾ ಸಮಸ್ಯೆಗಳು ಎದುರಾದಲ್ಲಿ ಸಹ ನಿವೃತ್ತ ಕಾರ್ಮಿಕರ ಪರವಾಗಿ ಇರುವುದಾಗಿ ಭರವಸೆ ನೀಡಿದರು.
ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಕಾರ್ಯ ಚಟುವಟಿಗಳನ್ನು ಖಾಸಗಿಯವರಿಗೆ ವಹಿಸಿಕೊಡುವ ಪ್ರಕ್ರಿಯೆಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಟೆಂಡರ್ ಸಹ ಅಂತಿಮಗೊಂಡಿದೆ. ಈ ಹಿನ್ನಲೆಯಲ್ಲಿ ವಸತಿ ಗೃಹಗಳಲ್ಲಿ ವಾಸವಿರುವ ಕಾರ್ಮಿಕರನ್ನು ಖಾಲಿ ಮಾಡಲು ಅಲ್ಲಿನ ನಗರಡಳಿತ ಇಲಾಖೆ ಸೂಚಿಸಿದ್ದು, ಶೀಘ್ರದಲ್ಲಿಯೇ ಕಾರ್ಖಾನೆಯಲ್ಲಿ ಕಾರ್ಯಚಟುವಟಿಕೆಗಳು ಪುನಃ ಆರಂಭಗೊಳ್ಳಲಿವೆ ಎಂದರು.
    ಪತ್ರಿಕಾಭವನಕ್ಕೆ ೫೦ ಲಕ್ಷ ರು. ನೆರವು:
   ಹಳೇನಗರದ ಕಾರ್ಯನಿರತರ ಪತ್ರಕರ್ತರ ಸಂಘದ ಪತ್ರಿಕಾಭವನದಲ್ಲಿ ಮುಂದುವರೆದ ಅಭಿವೃದ್ಧಿ ಕಾಮಗಾರಿಗಳಿಗೆ ರು.೫೦ ಲಕ್ಷ ಅನುದಾನ ನೀಡುವುದಾಗಿ ಸಂಸದರು ಭರವಸೆ ನೀಡಿದರು.
    ಪತ್ರಿಕಾ ಭವನ ಕಟ್ಟಡ ಸಮಿತಿ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ ಹಾಗು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ನೇತೃತ್ವದಲ್ಲಿ ಸುಮಾರು ರು. ೧.೬ ಕೋ. ಅನುದಾನಕ್ಕೆ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಸಂಸದರು ಸದ್ಯಕ್ಕೆ ರು. ೫೦ ಲಕ್ಷ ಅನುದಾನ ನೀಡಲಾಗುವುದು. ಕಾಮಗಾರಿ ಮುಕ್ತಾಯದ ನಂತರ ಮುಂದಿನ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವುದು ಎಂದರು.
    ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್‌ಪ್ರೈಸಸ್ ಸಂಸ್ಥೆ ರಾಜ್ಯಾಧ್ಯಕ್ಷ ಎಚ್.ಸಿ ರಮೇಶ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿಪ್ರಕಾಶ್, ಬಿಜೆಪಿ ಪಕ್ಷದ ಪ್ರಮುಖರಾದ ಎಂ. ಪ್ರಭಾಕರ್, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಪಿ. ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಾಡಹಬ್ಬ ೯ ದಿನಗಳ ಜನಜಾಗೃತಿ ದಸರಾ ಆಚರಣೆಗೆ ತೆರೆ

ಉತ್ಸವ ಮೆರವಣಿಗೆಗೆ ಶಾಸಕ ಸಂಗಮೇಶ್ವರ್ ಚಾಲನೆ, 

ಬನ್ನಿ ಮುಡಿದ ಉಪವಿಭಾಗಾಧಿಕಾರಿ ಪ್ರಕಾಶ್

ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೯ ದಿನಗಳ ಜನಜಾಗೃತಿ ದಸರಾ ಸೋಮವಾರ ಉಪವಿಭಾಗಾಧಿಕಾರಿ, ನಗರಸಭೆ ಆಡಳಿತಾಧಿಕಾರಿ ಟಿ.ವಿ ಪ್ರಕಾಶ್ ಬನ್ನಿ ಮುಡಿಯುವ ಮೂಲಕ ಅಂತ್ಯಗೊಂಡಿತು.
ಭದ್ರಾವತಿ, ಅ. ೨೬: ನಾಡಹಬ್ಬ ದಸರಾ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೯ ದಿನಗಳ ಜನಜಾಗೃತಿ ದಸರಾ ಸೋಮವಾರ ಉಪವಿಭಾಗಾಧಿಕಾರಿ, ನಗರಸಭೆ ಆಡಳಿತಾಧಿಕಾರಿ ಟಿ.ವಿ ಪ್ರಕಾಶ್ ಬನ್ನಿ ಮುಡಿಯುವ ಮೂಲಕ ಅಂತ್ಯಗೊಂಡಿತು.
     ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆ ೯ ದಿನಗಳ ಜನಜಾಗೃತಿ ದಸರಾ ಯಶಸ್ವಿಯಾಗಿ ನಡೆಯಿತು. ಹಬ್ಬದ ಆಚರಣೆಯಂತೆ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಶ್ರೀ ಚಾಮುಂಡೇಶ್ವರಿಗೆ ವಿಶೇಷ ಪೂಜೆಯೊಂದಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ನಂದಿ ಧ್ಜಜಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಉತ್ಸವ ಮೆರವಣಿಗೆಗೆ ಚಾಲನೆ ನೀಡಿದರು.
    ಮೆರವಣಿಗೆಯಲ್ಲಿ ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ, ಶ್ರೀ ಹಳದಮ್ಮ, ನಗರಸಭೆ ಶ್ರೀ ಚಾಮುಂಡೇಶ್ವರಿ ಸೇರಿದಂತೆ ಕೇವಲ ೪ ಉತ್ಸವ ಮೂರ್ತಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಮೆರವಣಿಗೆ ತಾಲೂಕು ಕಛೇರಿ ರಸ್ತೆಯಲ್ಲಿ ಸಾಗಿ ಕನಕಮಂಟಪ ಮೈದಾನ ಬಂದು ತಲುಪಿತು.
    ನಂತರ ಉಪವಿಭಾಗಾಧಿಕಾರಿ, ನಗರಸಭೆ ಆಡಳಿತಾಧಿಕಾರಿ ಟಿ.ವಿ ಪ್ರಕಾಶ್ ಬನ್ನಿ ಮುಡಿಯುವ ಮೂಲಕ ಅಂತ್ಯಗೊಳಿಸಿದರು. ರಾವಣ ದಹನ ಮತ್ತು ಸಿಡಿ ಮದ್ದುಗಳ ಪ್ರದರ್ಶನ ಆಕರ್ಷಕವಾಗಿ ಕಂಡು ಬಂದಿತು. ಸರ್ಕಾರದ ಮಾರ್ಗಸೂಚಿಯಂತೆ  ಸಾಮಾಜಿಕ ಅಂತರ, ಮಾಸ್ಕ್ ಬಳಕೆಯೊಂದಿಗೆ ಸುಮಾರು ೨೦೦ ಮಂದಿಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.


ಭದ್ರಾವತಿಯಲ್ಲಿ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೯ ದಿನಗಳ ಜನಜಾಗೃತಿ ದಸರಾ ಆಚರಣೆಯ ಕೊನೆಯ ದಿನವಾದ ಸೋಮವಾರ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
       ಶಾಸಕ ಬಿ.ಕೆ ಸಂಗಮೇಶ್ವರ್ ವಿಷಾದ:
  ಬನ್ನಿಮಂಟದಲ್ಲಿ ಕ್ಷೇತ್ರದ ದಸರಾ ಆಚರಣೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್ ಈ ಬಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತನ್ನದೇ ಆದ ಪರಂಪರೆಯನ್ನು ಹೊಂದಿರುವ ನಾಡಹಬ್ಬ ದಸರಾ ವಿಜೃಂಭಣೆ ಕಳೆದುಕೊಂಡಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.
    ಪ್ರತಿ ವರ್ಷ ಸುಮಾರು ೩೦ ರಿಂದ ೪೦ ಸಾವಿರ ಜನರು ಒಂದೆಡೆ ಸೇರಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದರು. ಆದರೆ ಈ ಬಾರಿ ವಿಜೃಂಭಣೆ ಇಲ್ಲದಿದ್ದರೂ ಸಹ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ೯ನೇ ದಿನಗಳ ಆಚರಣೆಯನ್ನು ನಗರಸಭೆ ಆಡಳಿತ ಎಲ್ಲಾ ಇಲಾಖೆಗಳು ಹಾಗು ಸಂಘ-ಸಂಸ್ಥೆಗಳು ಮತ್ತು ನಾಗರೀಕರ ಸಹಕಾರದೊಂದಿಗೆ ಯಶಸ್ವಿಗೊಳಿಸಿರುವುದು ಹೆಮ್ಮೆಯ ವಿಚಾರವಾಗಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದ ಜನತೆ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಯಶಸ್ವಿಯಾಗಿ ಜರುಗಿದವು.
    ಪೌರಾಯುಕ್ತ ಮನೋಹರ್, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಿವೃತ್ತ ತಹಸೀಲ್ದಾರ್ ಸೋಮಶೇಖರ್, ಪ್ರಮುಖರಾದ ಶ್ರೀ ಹಳದಮ್ಮ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಬಿ.ಎಂ ಸಂತೋಷ್, ಪ್ರಮುಖರಾದ ಮಂಗೋಟೆ ರುದ್ರೇಶ್, ಬಿ.ಕೆ ಶ್ರೀನಾಥ್, ನರಸಿಂಹಚಾರ್, ರಮಾಕಾಂತ, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Saturday, October 24, 2020

ಕರುಮಾರಿಯಮ್ಮ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ದುರ್ಗಾ ಹೋಮ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದಲ್ಲಿರುವ ಶ್ರೀ ಕರುಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರತಿ ವರ್ಷದಂತೆ ಈ ಬಾರಿ ನಡೆಯುತ್ತಿದ್ದು, ಶನಿವಾರ ಲೋಕ ಕಲ್ಯಾಣಾರ್ಥವಾಗಿ ದುರ್ಗಾ ಹೋಮ ನಡೆಯಿತು.
ಭದ್ರಾವತಿ, ಅ. ೨೪: ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದಲ್ಲಿರುವ ಶ್ರೀ ಕರುಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರತಿ ವರ್ಷದಂತೆ ಈ ಬಾರಿ ನಡೆಯುತ್ತಿದ್ದು, ಶನಿವಾರ ಲೋಕ ಕಲ್ಯಾಣಾರ್ಥವಾಗಿ ದುರ್ಗಾ ಹೋಮ ನಡೆಯಿತು.
     ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಬಿ. ಕುಪ್ಪಸ್ವಾಮಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಮ್ಮನವರಿಗೆ ಮೊದಲನೇ ದಿನ ಕಾಮಾಕ್ಷಿ, ಎರಡನೇ ದಿನ ಮೀನಾಕ್ಷಿ, ಮೂರನೇ ದಿನ ವಿಶಾಲಾಕ್ಷಿ, ನಾಲ್ಕನೇ ದಿನ ಅನ್ನಪೂರ್ಣೇಶ್ವರಿ, ಐದನೇ ದಿನ ಸರಸ್ವತಿ, ಆರನೇ ದಿನ ಅಖಿಲಾಂಡೇಶ್ವರಿ, ಏಳನೇ ದಿನ ಲಕ್ಷ್ಮೀ ಮತ್ತು ಎಂಟನೇ ದಿನ ದುರ್ಗಾದೇವಿ ಅಲಂಕಾರ ಕೈಗೊಳ್ಳಲಾಗಿತ್ತು.
    ದೇವಸ್ಥಾನದ ಪ್ರಧಾನ ಅರ್ಚಕ ಕಾಶಿನಾಥ್, ವಿಜಯ್‌ಕುಮಾರ್ ಹಾಗು ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.

ಕೊರೋನಾ ವಾರಿಯರ್ಸ್‌ಗಳಾಗಿ ಶ್ರಮಿಸಿದವರಿಗೆ ಸನ್ಮಾನ

ಭದ್ರಾವತಿ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಜನ ಜಾಗೃತಿ ಕಾರ್ಯಕ್ರಮದಲ್ಲಿ ಕಳೆದ ೬ ತಿಂಗಳಿನಿಂದ ಕೊರೋನಾ ವಾರಿಯರ್ಸ್‌ಗಳಾಗಿ ಶ್ರಮಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಭದ್ರಾವತಿ, ಅ. ೨೪: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಜನ ಜಾಗೃತಿ ಕಾರ್ಯಕ್ರಮದಲ್ಲಿ ಕಳೆದ ೬ ತಿಂಗಳಿನಿಂದ ಕೊರೋನಾ ವಾರಿಯರ್ಸ್‌ಗಳಾಗಿ ಶ್ರಮಿಸಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.
     ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕೊರೋನಾ ಸಂಕಷ್ಟದ ಸಮಯದಲ್ಲಿ ಶ್ರೀಸಾಮಾನ್ಯರ ನೆರವಿಗೆ ಧಾವಿಸಿದ ವಿವಿಧ ಸೇವಾ ಸಂಸ್ಥೆಗಳ ಮುಖಂಡರು, ಪತ್ರಕರ್ತರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರನ್ನು ಗುರುತಿಸಿ ಸನ್ಮಾನಿಸಿದರು.
    ಜನ ಜಾಗೃತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಕೇಶವಮೂರ್ತಿ, ನಗರಸಭೆ ಸದಸ್ಯರಾದ ವಿ. ಕದಿರೇಶ್, ಲಕ್ಷ್ಮೀದೇವಿ, ಮುಖಂಡರಾದ ನರಸಿಂಹಚಾರ್, ರಮಾಕಾಂತ್, ಬಾಲಕೃಷ್ಣ, ಶಿವಬಸಪ್ಪ, ಜೆಬಿಟಿ ಬಾಬು ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಂಪಿಎಂ ಕಾರ್ಖಾನೆ ವಸತಿ ಗೃಹಗಳ ತೆರವಿಗೆ ನೋಟಿಸ್ : ಕಾರ್ಮಿಕ ವಲಯದಲ್ಲಿ ಆತಂಕ

ಭದ್ರಾವತಿ ಎಂಪಿಎಂ ಕಾರ್ಖಾನೆಯ ವಸತಿಗೃಹಗಳಲ್ಲಿ ವಾಸಿಸುತ್ತಿರುವ ಸರ್ಕಾರಿ ಹಾಗು ಅರೆ ಸರ್ಕಾರಿ ನೌಕರರನ್ನು ತಕ್ಷಣ ಮನೆ ಖಾಲಿ ಮಾಡುವಂತೆ ನಗರಾಡಳಿ ಇಲಾಖೆ ನೋಟಿಸ್ ನೀಡಿರುವುದು.
ಭದ್ರಾವತಿ, ಅ. ೨೪: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಾವಿರಾರು ವಸತಿ ಗೃಹಗಳು ಈಗಾಗಲೇ ಪಾಳು ಬಿದ್ದಿದ್ದು, ಈ ನಡುವೆ ಕೆಲವು ಮನೆಗಳಲ್ಲಿ ವಾಸಿಸುತ್ತಿರುವ ಸರ್ಕಾರಿ ಹಾಗು ಅರೆ ಸರ್ಕಾರಿ ನೌಕರರನ್ನು ಸಹ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ.
    ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಸಂಬಂಧ ಕಾರ್ಖಾನೆಯ ನಗರಾಡಳಿತ ಇಲಾಖೆ ವಸತಿ ಗೃಹಗಳಲ್ಲಿ ವಾಸಿಸುತ್ತಿರುವ ಎಲ್ಲರನ್ನು ಏಕಾಏಕಿ ಖಾಲಿ ಮಾಡಿಸಲು ಮುಂದಾಗಿದ್ದು, ಇದರಿಂದಾಗಿ ಕಾರ್ಮಿಕ ವಲಯದಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಈ ನಡುವೆ ನಗರಾಡಳಿತ ವ್ಯಾಪ್ತಿಯಲ್ಲಿರುವ ಅಂಗಡಿಮುಂಗಟ್ಟುಗಳನ್ನು ಸಹ ತೆರವುಗೊಳಿಸಲು ಸೂಚಿಸಲಾಗಿದೆ. ಕೋವಿಡ್-೧೯ ಪರಿಣಾಮ ವ್ಯಾಪಾರ ವಹಿವಾಟು ಕುಸಿದಿದ್ದು, ಈಗಾಗಲೇ ಶ್ರೀಸಾಮಾನ್ಯರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನೋಟಿಸ್ ನೀಡಿರುವುದು ಎಷ್ಟು ಸರಿ ಎಂದು ಕಾರ್ಮಿಕ ಮುಖಂಡರು ಪ್ರಶ್ನಿಸಿದ್ದಾರೆ.
    ಕಳೆದ ಸುಮಾರು ೫ ವರ್ಷಗಳಿಂದ ಕಾರ್ಖಾನೆ ಸ್ಥಗಿತಗೊಂಡಿದ್ದು, ಇದುವರೆಗೂ ಆರಂಭಗೊಂಡಿಲ್ಲ. ಪುನಃ ಆರಂಭಗೊಳ್ಳುವ ನಿರೀಕ್ಷೆ ಇಲ್ಲ. ಈಗಾಗಲೇ ೨೦೧೭ ವಿಶೇಷ ಸ್ವಯಂ ನಿವೃತ್ತಿ ಯೋಜನೆ ಜಾರಿಗೊಳಿಸುವ ಮೂಲಕ ಶೇ.೯೦ ರಷ್ಟು ಕಾರ್ಮಿಕರಿಗೆ ಸ್ವಯಂ ನಿವೃತ್ತಿ ನೀಡಲಾಗಿದೆ. ವಸತಿ ಗೃಹಗಳಲ್ಲಿ ವಾಸವಿದ್ದ ಕಾರ್ಮಿಕರನ್ನು ಖಾಲಿ ಮಾಡಿಸಲಾಗಿದೆ. ಇದರಿಂದಾಗಿ ೩-೪ ವರ್ಷಗಳಿಂದ ಸಾವಿರಾರು ಮನೆಗಳು ಪಾಳುಬಿದ್ದಿದ್ದು, ಸಂಪೂರ್ಣವಾಗಿ ಹಾಳಾಗಿವೆ. ಅಲ್ಲದೆ ನಗರಾಡಳಿತ ವ್ಯಾಪ್ತಿಯಲ್ಲಿನ ಆರ್ಥಿಕ ಚಟುವಟಿಕೆಗಳು ಸಹ ಸ್ಥಗಿತಗೊಂಡಿವೆ. ಇದೀಗ ಕೆಲವು ಮನೆಗಳಲ್ಲಿ ಉಳಿದುಕೊಂಡಿರುವ ಸರ್ಕಾರಿ ಹಾಗು ಅರೆ ಸರ್ಕಾರಿ ಸೇವೆಯಲ್ಲಿರುವ ಉದ್ಯೋಗಿಗಳನ್ನು ಸಹ ಖಾಲಿ ಮಾಡಲು ನೋಟಿಸ್ ನೀಡಲಾಗಿದೆ. ಇದರಿಂದಾಗಿ ಸಂಪೂರ್ಣವಾಗಿ ವಸತಿ ಗೃಹಗಳು ಹಾಳಾಗುವ ಭೀತಿ ಎದುರಾಗಿದೆ.  ಈ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

Friday, October 23, 2020


 

ಹಿರಿಯ ಕಾರ್ಮಿಕ ಮುಖಂಡ ಎಚ್.ಜಿ ಉಮಾಪತಿ ಸ್ಮರಣೆ

ಭದ್ರಾವತಿ ಅಭಿವೃದ್ಧಿ ವೇದಿಕೆಯಿಂದ ಶ್ರದ್ದಾಂಜಲಿ, ಗೌರವ

ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್.ಜಿ ಉಮಾಪತಿಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
ಭದ್ರಾವತಿ, ಅ. ೨೩: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರದ ಅಧೀನಕ್ಕೆ ವಹಿಸಿಕೊಡುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾರ್ಮಿಕ ಮುಖಂಡ ದಿವಂಗತ ಎಚ್.ಜಿ ಉಮಾಪತಿಯವರಿಗೆ ಶುಕ್ರವಾರ ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಗೌರವ ಸೂಚಿಸಲಾಯಿತು.
     ಇತ್ತೀಚೆಗೆ ಬೆಂಗಳೂರಿನಲ್ಲಿ ಉಮಾಪತಿಯವರು ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿದ ವೇದಿಕೆ ಮುಖಂಡರು ಉಮಾಪತಿಯವರು ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ಸೇವೆ ಸಲ್ಲಿಸುವ ಮೂಲಕ ಕಾರ್ಮಿಕ ಮುಖಂಡರಾಗಿ ಬೆಳೆದು ಎಲ್ಲರ ಒಡನಾಡಿಯಾಗಿದ್ದರು. ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸೇವಾದಳ ಘಟಕದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು ಎಂದು ಸ್ಮರಿಸಿದರು.
    ಶ್ರದ್ದಾಂಜಲಿ ಸಭೆಯಲ್ಲಿ ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಸಹಕಾರ ಧುರೀಣ ಕೆ.ಎನ್ ಭೈರಪ್ಪಗೌಡ, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಹಿರಿಯ ರಂಗ ಕಲಾವಿದ ಜವರೇಗೌಡ ಕೊರೋನಾ ಸೋಂಕಿಗೆ ಬಲಿ


ಜವರೇಗೌಡ
ಭದ್ರಾವತಿ, ಅ. ೨೩: ನಗರದ ಹಿರಿಯ ರಂಗ ಕಲಾವಿದ, ಮೈಸೂರು ಕಾಗದ ಕಾರ್ಖಾನೆ ಉದ್ಯೋಗಿ ಜವರೇಗೌಡ(೬೭) ಶುಕ್ರವಾರ ನಿಧನ ಹೊಂದಿದರು.
        ಪತ್ನಿ, ಮೂವರು ಹೆಣ್ಣು ಮಕ್ಕಳು, ಅಳಿಯಂದಿರನ್ನು ಹೊಂದಿದ್ದರು. ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಜವರೇಗೌಡರವರು ವಿಕಸಂ ರಂಗ ತಂಡದ ಹಿರಿಯ ಕಲಾವಿದರಾಗಿದ್ದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.      ಮೃತರ ನಿಧನಕ್ಕೆ ಎಂಪಿಎಂ ಕಾರ್ಖಾನೆ ನೌಕರರು, ರಂಗಕಲಾವಿದರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

ಮದ್ಯದಂಗಡಿಗಳಲ್ಲಿ ಹೆಚ್ಚಿನ ದರ ವಿರೋಧಿಸಿ ಹೋರಾಟ

ಪೂರಕ ಸ್ಪಂದನೆ : ೯ನೇ ದಿನಕ್ಕೆ ಹೋರಾಟ ತಾತ್ಕಾಲಿಕ ಅಂತ್ಯ

ಜನತಾದಳ(ಸಂಯುಕ್ತ) ವತಿಯಿಂದ  ಭದ್ರಾವತಿ ತಾಲೂಕು ಕಚೇರಿ ಮುಂಭಾಗ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಮದ್ಯದಂಗಡಿಗಳಲ್ಲಿ ಅಧಿಕ ದರಕ್ಕೆ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹ  ಶುಕ್ರವಾರ ತಾತ್ಕಾಲಿಕವಾಗಿ ಅಂತ್ಯಗೊಂಡಿದ್ದು, ಈ ಸಂದರ್ಭದಲ್ಲಿ ತಹಸೀಲ್ದಾರ್ ಎನ್.ಜೆ ನಾಗರಾಜ್‌ರವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಜನತಾದಳ(ಸಂಯುಕ್ತ) ವತಿಯಿಂದ  ತಾಲೂಕು ಕಚೇರಿ ಮುಂಭಾಗ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ಮದ್ಯದಂಗಡಿಗಳಲ್ಲಿ ಅಧಿಕ ದರಕ್ಕೆ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹ  ಶುಕ್ರವಾರ ತಾತ್ಕಾಲಿಕವಾಗಿ ಅಂತ್ಯಗೊಂಡಿದೆ.
    ತಾಲೂಕಿನ ಸಿಎಲ್-೨ ಮತ್ತು ಎಂಎಸ್‌ಐಎಲ್ ಮದ್ಯದಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರಗಿಂತ ಹೆಚ್ಚಿನ ದರ ವಸೂಲಾತಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಅ.೧೫ ರಿಂದ ಹೋರಾಟ ಆರಂಭಿಸಲಾಗಿತ್ತು. ಹೋರಾಟಕ್ಕೆ ತಾಲ್ಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆ ಪೂರಕವಾಗಿ ಸ್ಪಂದಿಸಿದ್ದು, ಶೇ.೮೦ರಷ್ಟು ಮದ್ಯದಂಗಡಿಗಳಲ್ಲಿ ಹೆಚ್ಚಿನ ದರ ವಸೂಲಾತಿ ಮಾಡದಂತೆ ಫಲಕಗಳನ್ನು ಹಾಕಲಾಗಿದೆ. ಈ ಹಿನ್ನಲೆಯಲ್ಲಿ  ಹೋರಾಟವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ.
    ಉಜ್ಜನಿಪುರದ ಎಂಎಸ್‌ಐಎಲ್ ಮದ್ಯದಂಗಡಿ ತೆರವುಗೊಳಿಸುವುದು, ಮೈಕ್ರೋ ಫೈನಾನ್ಸ್‌ಗಳಿಂದ ಮಹಿಳೆಯರಿಗೆ ಉಂಟಾಗುತ್ತಿರುವ ಕಿರುಕುಳ ತಪ್ಪಿಸುವುದು, ಅಬಕಾರಿ ಕಾಯ್ದೆಗಳಿಗೆ ಚ್ಯುತಿ ಬರುವಂತೆ ಹಾಗು ಹೋರಾಟಗಾರರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಅಬಕಾರಿ ನಿರೀಕ್ಷಕ ಧರ್ಮಪ್ಪರನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸುವುದು ಸೇರಿದಂತೆ ಇನ್ನೂ ಹಲವು ಬೇಡಿಕೆಗಳು ಬಾಕಿ ಉಳಿದಿದ್ದು, ಈ ಹಿನ್ನಲೆಯಲ್ಲಿ ನ.೪ರಂದು ತಾಲೂಕು ಕಚೇರಿ ಮುಂಭಾಗದಿಂದ ಜಿಲ್ಲಾಧಿಕಾರಿ ಕಛೇರಿ ಮತ್ತು ಜಿಲ್ಲಾ ಅಬಕಾರಿ ಉಪ ಆಯುಕ್ತರ ಕಛೇರಿವರೆಗೂ ಪಾದಯಾತ್ರೆ ನಡೆಸಲಾಗುವುದು. ಹೋರಾಟಕ್ಕೆ ಸಹಕರಿಸಿದ ಪಕ್ಷದ ರಾಜಾಧ್ಯಕ್ಷ ಮಹಿಮಾ ಜೆ. ಪಟೇಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್‌ಕುಮಾರ್ ಸೇರಿದಂತೆ ಎಲ್ಲಾ ಮುಖಂಡರಿಗೆ, ಕಾರ್ಯಕರ್ತರಿಗೆ, ತಾಲೂಕು ಆಡಳಿತಕ್ಕೆ, ಅಬಕಾರಿ ಇಲಾಖೆ ಹಾಗು ಪೊಲೀಸ್ ಇಲಾಖೆಗೆ ಶಶಿಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
    ಹೋರಾಟ ಅಂತ್ಯಗೊಳಿಸುವ ಸಂಬಂಧ ತಹಸೀಲ್ದಾರ್ ಡಾ. ಎನ್.ಜೆ ನಾಗರಾಜ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆರವರಿಗೆ ಮನವಿ ಸಲ್ಲಿಸಲಾಯಿತು.
    ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ಸಂದೇಶ್‌ಕುಮಾರ್, ಚಂದ್ರಶೇಖರ್, ಅಬ್ದುಲ್ ಖದೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
   




Thursday, October 22, 2020

ಹೆಚ್ಚಿನ ದರಕ್ಕೆ ಮದ್ಯ ಮಾರಾಟ ವಿರುದ್ಧ ಏಕಾಂಗಿ ಹೋರಾಟ

ಬೇಡಿಕೆ ಈಡೇರದಿದ್ದಲ್ಲಿ ನ.೨ರಿಂದ ಅಮರಣಾಂತರ ಉಪವಾಸ ಸತ್ಯಾಗ್ರಹ 


ಜನಾತದಳ(ಸಂಯುಕ್ತ) ವತಿಯಿಂದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ನೇತೃತ್ವದಲ್ಲಿ ಅ.೧೫ರಿಂದ ಭದ್ರಾವತಿ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ನಡೆಸುತ್ತಿರುವ ಹೋರಾಟ ಬುಧವಾರ ೭ ದಿನಗಳನ್ನು ಪೂರೈಸಿದ್ದು, ಏಕಾಂಗಿಯಾಗಿ ಹೋರಾಟ ಮುಂದುವರೆಸಿದ್ದಾರೆ.
ಭದ್ರಾವತಿ: ತಾಲೂಕಿನ ಮದ್ಯದಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಹಾಗು ಬಡ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಪೈನಾನ್ಸ್‌ಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜನಾತದಳ(ಸಂಯುಕ್ತ) ವತಿಯಿಂದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ನೇತೃತ್ವದಲ್ಲಿ ಅ.೧೫ರಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ನಡೆಸುತ್ತಿರುವ ಹೋರಾಟ ಗುರುವಾರ ೮ನೇ ದಿನಕ್ಕೆ ಕಾಲಿಟ್ಟಿದೆ. 
    ಕಳೆದ ೪-೫ ದಿನಗಳಿಂದ ಏಕಾಂಗಿಯಾಗಿ ಹೋರಾಟ ನಡೆಸುತ್ತಿರುವ ಶಶಿಕುಮಾರ್‌ರವರು, ತಾಲೂಕಿನ ಸಿಎಲ್ ೨ ಮದ್ಯದಂಗಡಿ ಮತ್ತು ಎಂಎಸ್‌ಐಎಲ್ ಮದ್ಯದಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಎಂಆರ್‌ಪಿ ದರ ಪಡೆಯದೆ ಹೆಚ್ಚಿನ ದರ ಪಡೆಯಲಾಗುತ್ತಿದೆ. ಈ ಸಂಬಂಧ ಹಲವಾರು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ. ಅಲ್ಲದೆ ಉಜ್ಜನಿಪುರ ಆನೆಕೊಪ್ಪದಲ್ಲಿರುವ ಎಂಎಸ್‌ಐಎಲ್ ಮದ್ಯದಂಗಡಿಯಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಈ ಮದ್ಯದಂಗಡಿ ಸ್ಥಳಾಂತರಿಸುವಂತೆ ಒತ್ತಾಯಿಸಲಾಗಿದೆ. ಅಲ್ಲದೆ ನಿವಾಸಿಗಳು ಅರ್ನಿಷ್ಟಾವಧಿ ಧರಣಿ ಸತ್ಯಾಗ್ರಹ ಸಹ ನಡೆಸಿರುತ್ತಾರೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. 
       ಇದೆ ರೀತಿ ಮೈಕ್ರೋ ಫೈನಾನ್ಸ್‌ಗಳು ಸಾಲ ಪಡೆದಿರುವ ಬಡ ಮಹಿಳೆಯರಿಗೆ ತೊಂದರೆ ಕೊಡುತ್ತಿದ್ದು, ಕೊರೋನಾ ಸಂಕಷ್ಟದ ಸಮಯದಲ್ಲಿ ಒಂದೆಡೆ ಉದ್ಯೋಗವಿಲ್ಲದೆ, ಮತ್ತೊಂದೆಡೆ ಆರ್ಥಿಕ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವ ಸಂದರ್ಭದಲ್ಲಿ ಸರ್ಕಾರದ ಆದೇಶವಿದ್ದರೂ ಸಹ ಬಲವಂತವಾಗಿ ಕಂತು ಪಾವತಿಸಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಹ ಹಳೇನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಕಳೆದ ೭ ದಿನಗಳಿಂದ ಹೋರಾಟ ನಡೆಸಲಾಗುತ್ತಿದ್ದು, ಈ ನಡುವೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿರುವ ಅಬಕಾರಿ ನಿರೀಕ್ಷಕ ಧರ್ಮಪ್ಪರವರು ದೌರ್ಜನ್ಯದಿಂದ ವರ್ತಿಸುವ ಜೊತೆಗೆ ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಒತ್ತಾಯಿಸಿದರು. 
   ಒಂದು ವೇಳೆ ಬೇಡಿಕೆ ಈಡೇರದಿದ್ದಲ್ಲಿ ನ.೨ರಿಂದ ಅಮರಣಾಂತರ ಉಪವಾಸ ಸತ್ಯಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದರು. 

ಮನವಿಗೆ ಪೂರಕವಾಗಿ ಸ್ಪಂದಿಸದೆ ದೌರ್ಜನ್ಯ : ಅಬಕಾರಿ ನಿರೀಕ್ಷಕರನ್ನು ಅಮಾನತುಗೊಳಿಸಲು ಆಗ್ರಹ

ಅಬಕಾರಿ ಇಲಾಖೆ ನಿರೀಕ್ಷಕರ ದೌರ್ಜನ್ಯ ಖಂಡಿಸಿ ತಕ್ಷಣ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಗುರುವಾರ ಭದ್ರಾವತಿಯಲ್ಲಿ ಹೊಸ ಸೇತುವೆ ರಸ್ತೆಯಲ್ಲಿರುವ ಅಬಕಾರಿ ನಿರೀಕ್ಷಕರ ಕಛೇರಿ ಮುಂಭಾಗ ಕರ್ನಾಟಕ ಜನಸೈನ್ಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
 ಭದ್ರಾವತಿ: ನಗರದ ಅಬಕಾರಿ ಇಲಾಖೆ ನಿರೀಕ್ಷಕರ ದೌರ್ಜನ್ಯ ಖಂಡಿಸಿ ತಕ್ಷಣ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಗುರುವಾರ ಹೊಸ ಸೇತುವೆ ರಸ್ತೆಯಲ್ಲಿರುವ ಅಬಕಾರಿ ನಿರೀಕ್ಷಕರ ಕಛೇರಿ ಮುಂಭಾಗ ಕರ್ನಾಟಕ ಜನಸೈನ್ಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
       ಜನ್ನಾಪುರದಲ್ಲಿರುವ ಮದ್ಯದಂಗಡಿಯೊಂದರಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಬಗೆಹರಿಸುವಂತೆ ಅಬಕಾರಿ ನಿರೀಕ್ಷಕ ಧರ್ಮಪ್ಪರವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಮನವಿಗೆ ಪೂರಕವಾಗಿ ಸ್ಪಂದಿಸಬೇಕಾದ ನಿರೀಕ್ಷಕರು ಮನವಿ ಸಲ್ಲಿಸಿದವರ ವಿರುದ್ಧ ದೌರ್ಜನ್ಯದಿಂದ ವರ್ತಿಸುತ್ತಿದ್ದಾರೆ. ಕನಿಷ್ಠ ಗೌರವ ನೀಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಹಿನ್ನಲೆಯಲ್ಲಿ ನ್ಯೂಟೌನ್ ಪೊಲೀಸ್ ದೂರು ಸಹ ನೀಡಲಾಗಿದೆ.
   ಅಬಕಾರಿ ಕಾಯ್ದೆಗಳನ್ನು ಉಲ್ಲಂಘಿಸಿ ಸಾರ್ವಜನಿಕರೊಂದಿಗೆ ದೌರ್ಜನ್ಯದಿಂದ ವರ್ತಿಸುತ್ತಿರುವ ಧರ್ಮಪ್ಪರವರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
    ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ನಗರಸಭೆ ಸದಸ್ಯರಾದ ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಿ.ವಿ ಗಿರೀಶ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಮುಖಂಡರಾದ ಅನಂತರಾಮು, ರುದ್ರೇಶ್, ಸಂತೋಷ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೊರೋನಾಗೆ ಎಂಪಿಎಂ ಹಣಕಾಸು ಅಧಿಕಾರಿ ಬಲಿ

ವಿಶ್ವನಾಥ ಮಲಗನ್
ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ  ಮುಖ್ಯ ಹಣಕಾಸು ಅಧಿಕಾರಿ ವಿಶ್ವನಾಥ ಮಲಗನ್(೫೯) ಗುರುವಾರ ನಿಧನ ಹೊಂದಿದರು.
     ಪತ್ನಿ, ಓರ್ವ ಪುತ್ರ ಹೊಂದಿದ್ದರು. ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಿತು. ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಕಳೆದ ೨ ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
     ಸರ್ಕಾರ ಜಾರಿಗೊಳಿಸಿದ ೨೦೧೭ ಸ್ವಯಂ ನಿವೃತ್ತಿ ಯೋಜನೆಯಡಿ ಸ್ವಯಂ ನಿವೃತ್ತಿ ಹೊಂದಿದ್ದರು. ನಂತರ ನಿಯೋಜನೆ ಮೇಲೆ ಹುದ್ದೆಯಲ್ಲಿ ಮುಂದುವರೆದಿದ್ದರು. ಕಾರ್ಮಿಕರಿಗೆ ಸ್ವಯಂ ನಿವೃತ್ತಿ ಹಣ ಕೊಡಿಸುವ ಕಾರ್ಯದಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು. ಅಲ್ಲದೆ ಹಣಕಾಸಿನ ಇಲಾಖೆಗೆ ಸಂಬಂಧಿಸಿದ ಬಹುತೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು.
   ಮೃತರ ನಿಧನಕ್ಕೆ ಎಂಪಿಎಂ ಕಾರ್ಖಾನೆಯ ವಿವಿಧ ಕಾರ್ಮಿಕ ಸಂಘಟನೆಗಳು, ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.


Saturday, October 17, 2020

ಕೋವಿಡ್ ಸಂಕಷ್ಟದ ನಡುವೆಯೂ ರು.೪೦೦ ಕೋ. ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ

ಶೀಘ್ರದಲ್ಲಿಯೇ ಕಾಮಗಾರಿಗಳ ಆರಂಭ : ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ವಿವರಣೆ


ಶನಿವಾರ ಶಾಸಕ ಗೃಹ ಕಛೇರಿಯಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು. 
ಭದ್ರಾವತಿ, ಅ. ೧೭: ಕ್ಷೇತ್ರದಲ್ಲಿ ಒಟ್ಟು ಸುಮಾರು ೪೦೦ ಕೋ. ರು. ವೆಚ್ಚದ ಹಲವು ಅಭಿವೃದ್ದಿ ಕಾರ್ಯಗಳಿಗೆ ಮಂಜೂರಾತಿ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕಾಮಗಾರಿಗಳು ಶೀಘ್ರದಲ್ಲಿಯೇ ಆರಂಭಗೊಳ್ಳಲಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
    ಕೋವಿಡ್-೧೯ ಸಂಕಷ್ಟದ ಸಮಯದಲ್ಲೂ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಂತರ ಗುಣಮುಖರಾಗಿದ್ದು, ಬಿಡುಗಡೆಗೊಂಡ ನಂತರ ಬೆಂಗಳೂರಿನಲ್ಲಿಯೇ ಉಳಿದುಕೊಂಡು ಎಲ್ಲಾ ಇಲಾಖೆಗಳಲ್ಲಿ ಸುಮಾರು ೧ ವರ್ಷದಿಂದ ಬಾಕಿ ಉಳಿದಿದ್ದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಹಾಗು ಸಂಬಂಧಪಟ್ಟ ಸಚಿವರು, ಸಂಸದರನ್ನು ಭೇಟಿ ಮಾಡಿ ಮಂಜೂರಾತಿ ಪಡೆಯುವಲ್ಲಿ ಯಶಸ್ವಿಯಾಗಿದ್ದೇನೆ ಎಂದರು.
    ಬಹುಮುಖ್ಯವಾಗಿ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಗಮನ ನೀಡಲಾಗಿದೆ. ಈ ನಡುವೆ ಭದ್ರಾ ನದಿಗೆ ತಡೆ ಗೋಡೆ ನಿರ್ಮಾಣ, ವಸತಿ ನಿರ್ಮಾಣ, ಭದ್ರಾ ಜಲಾಶಯ ಮುಂಭಾಗ ಮಿನಿ ಉದ್ಯಾನವನ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೂ ಮಂಜೂರಾತಿ ಪಡೆಯಲಾಗಿದೆ ಎಂದರು.
     ಮಂಜೂರಾತಿ ಪಡೆದ ಅಭಿವೃದ್ಧಿ ಕಾಮಗಾರಿಗಳ ವಿವರಗಳು:
    ರು.೨ ಕೋ. ವೆಚ್ಚದಲ್ಲಿ ಕೋಡಿಹಳ್ಳಿ ಬಳಿ ಚರಂಡಿ ನಿರ್ಮಾಣ,  ರು. ೫ ಕೋ. ವೆಚ್ಚದಲ್ಲಿ ಸೀತಾರಾಂಪುರದಿಂದ ತಳ್ಳಿಕಟ್ಟೆ, ಕುಮರಿ ನಾರಾಯಣಪುರ ಮಾರ್ಗವಾಗಿ ೫.೫ ಕಿ.ಮೀ ರಸ್ತೆ ನಿರ್ಮಾಣ,  ರು. ೫ ಕೋ. ವೆಚ್ಚದಲ್ಲಿ ವೀರಾಪುರದಿಂದ ಕೊಮಾರನಹಳ್ಳಿ, ಜಯನಗರ ಕಾಚಗೊಂಡನಹಳ್ಳಿಗೆ ಸಂಪರ್ಕಿಸುವ ೫ ಕಿ.ಮೀ ರಸ್ತೆ ನಿರ್ಮಾಣ, ರು.೪.೨೭ ಲಕ್ಷ ರು. ವೆಚ್ಚದಲ್ಲಿ ಡೈರಿ ಸರ್ಕಲ್ ಬಳಿಯಿಂದ ಮಜ್ಜಿಗೇನಹಳ್ಳಿ, ಕೆರೆಕೋಡಿ ಸರ್ಕಲ್, ಬಿಳಕಿ ರಸ್ತೆ ಮೂಲಕ ನವುಲೆ ಬಸಾಪುರ ಮಾರ್ಗದ ೪.೮ ಕಿ.ಮೀ ರಸ್ತೆ ನಿರ್ಮಾಣ, ರು. ೨ ಕೋ. ವೆಚ್ಚದಲ್ಲಿ ನೆರೆ ಹಾವಳಿಯಿಂದಾಗಿ ಹಾಳಾದ ಕಾಗೆಕೋಡಮಗ್ಗಿ, ತಿಮ್ಲಾಪುರ, ಹೊಸೂರು, ಅರಳಿಹಳ್ಳಿ, ರೆಡ್ಡಿ ಕ್ಯಾಂಪ್ ರಸ್ತೆ ದುರಸ್ತಿ ಕಾಮಗಾರಿಗೆ ಅನುಮೋದನೆ ಪಡೆಯಲಾಗಿದೆ ಎಂದುರು.
    ಸುಮಾರು ರು. ೪೫ ಕೋ. ವೆಚ್ಚದಲ್ಲಿ ಗೋಣಿಬೀಡಿನಿಂದ ಕಂಬದಾಳು ಹೊಸೂರು ಮೂಲಕ ೪೫ ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಯೋಜನೆ,  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತಡೆ ಹಿಡಿದಿದ್ದ ೮ ಕೋ. ರು. ನುದಾನ, ರು. ೯.೯೯ ಕೋ. ವೆಚ್ಚದಲ್ಲಿ ಗೊಂದಿ ಸೇತುವೆಯಿಂದ ಕರಕುಚ್ಚಿ ಮಾರ್ಗದ ನಾಲೆಗೆ ಸೇತುವೆ ನಿರ್ಮಾಣ, ರು. ೨ ಕೋ. ವೆಚ್ಚದಲ್ಲಿ ಭದ್ರಾ ಜಲಾಶಯ ಮುಂಭಾಗದಲ್ಲಿ ಮಿನಿ ಉದ್ಯಾನವನ ನಿರ್ಮಾಣ, ರು.೪.೫ ಕೋ. ವೆಚ್ಚದಲ್ಲಿ ದೊಣಬಘಟ್ಟ ಏತ ನೀರಾವರಿ ಯೋಜನೆ, ರು.೨೧.೦೬ ಕೋ. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಬಾಕಿ ಉಳಿದಿರುವ ಯುಜಿಡಿ ಕಾಮಗಾರಿ,  ರು.೨೫.೪೦ ಕೋ. ವೆಚ್ಚದಲ್ಲಿ ದೊಣಬಘಟ್ಟದಿಂದ ಬಾಬಳ್ಳಿ, ಹೊಳೆಹೊನ್ನೂರು ಸೇತುವೆ ನಿರ್ಮಾಣ, ರು.೧೮ ಕೋ. ಹೆಚ್ಚುವರಿ ಅನುದಾನದಲ್ಲಿ ಸಿದ್ದರೂಢನಗರದ ಅಭಿವೃದ್ಧಿ, ರು.೧.೨೦ ಕೋ. ವೆಚ್ಚದಲ್ಲಿ ಮಾರುತಿನಗರದ ಬಳಿ ಇರುವ ಸೇತುವೆ ಅಗಲೀಕರಣ ಮತ್ತು ರು. ೭೦ ಲಕ್ಷ ವೆಚ್ಚದಲ್ಲಿ ಹೊಳೆಹೊನ್ನೂರು ಕಾಗೆಕೋಡಮಗ್ಗಿ ಬಳಿಯಲ್ಲಿ ರಸ್ತೆ ಅಭಿವೃದ್ಧಿಗೆ ಅನುಮೋದನೆ ಪಡೆಯಲಾಗಿದೆ ಎಂದರು.
    ರು. ೬೦ ಲಕ್ಷ ವೆಚ್ಚದಲ್ಲಿ ಬಾರಂದೂರು ಕುಂಬಾರಗುಂಡಿ, ಬೊಮ್ಮೇನಹಳ್ಳಿಗೆ ಸಂಪರ್ಕಿಸುವ ಕಾಂಕ್ರಿಟ್ ರಸ್ತೆ ಕಾಮಗಾರಿ, ರು.೬೫ ಲಕ್ಷ ವೆಚ್ಚದಲ್ಲಿ ಕೊಮಾರನಹಳ್ಳಿ ಕೆರೆ ಅಭಿವೃದ್ಧಿ, ರು. ೩೫ ಲಕ್ಷ ವೆಚ್ಚದಲ್ಲಿ ಸಿರಿಯೂರು-ಕಲ್ಲಹಳ್ಳಿ-ಹಾಗಲಮನೆ ರಸ್ತೆಯಲ್ಲಿ ಕಿರು ಸೇತುವೆ ಮರು ನಿರ್ಮಾಣ,
    ರು. ೨ ಕೋ. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯ ಜಯಶ್ರೀ ಸರ್ಕಲ್, ಜನ್ನಾಪುರ, ಮಲ್ಲೇಶ್ವರ ಸಮುದಾಯ ಭವನ, ಜಿಂಕ್‌ಲೈನ್ ಮಾರ್ಗವಾಗಿ ಪಿಡಬ್ಲ್ಯೂಡಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ,  ಒಟ್ಟು ರು. ೬೦ ಲಕ್ಷ ವೆಚ್ಚದಲ್ಲಿ ನರಸೀಪುರ ಮತ್ತು ಕಾರೇಹಳ್ಳಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ರು.೨೦ ಲಕ್ಷ ವೆಚ್ಚದಲ್ಲಿ ಎರೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ, ರು.೧ ಕೋ. ವೆಚ್ಚದಲ್ಲಿ ನೀರಾವರಿ ಇಲಾಖೆಯಿಂದ ಭದ್ರಾ ಕಾಲೋನಿ, ಕಬಳಿಕಟ್ಟೆ, ಗುಂಡಪ್ಪ ಕ್ಯಾಂಪ್‌ವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಹಾಗು ರು. ೧೦ ಕೋ. ವೆಚ್ಚದಲ್ಲಿವಿಶ್ವಸ್ವರೂಪಿಣಿ ಮಾರಿಯಮ್ಮ ದೇವಾಸ್ಥಾನದ ಬಳಿ ಭದ್ರಾ ನದಿಗೆ ತಡೆಗೋಡೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಅನುಮೋದನೆ ಪಡೆಯಲಾಗಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮುಖಂಡರಾದ ಬಾಲಕೃಷ್ಣ, ಬಿ.ಟಿ ನಾಗರಾಜ್, ಅಣ್ಣೋಜಿರಾವ್, ಚನ್ನಪ್ಪ, ರಮೇಶ್‌ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಪತ್ರಿಕಾ ವಿತರಕ ಭಾನುಪ್ರಕಾಶ್ ನಿಧನ


ಭಾನುಪ್ರಕಾಶ್
ಭದ್ರಾವತಿ, ಅ. ೧೭: ನಗರದ ಹೊಸಮನೆ ನಿವಾಸಿ, ದಿನ ಪತ್ರಿಕೆಗಳ ವಿತರಕ ಭಾನುಪ್ರಕಾಶ್(೭೦) ಶುಕ್ರವಾರ ರಾತ್ರಿ ನಿಧನ ಹೊಂದಿದರು.
      ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳು, ಮೊಮ್ಮಕ್ಕಳನ್ನು ಹೊಂದಿದ್ದರು. ಸುಮಾರು ೨೦ಕ್ಕೂ ಹೆಚ್ಚು ವರ್ಷಗಳಿಂದ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ನಿಧನಕ್ಕೆ ಪತ್ರಿಕಾವಿತರಕರು ಸಂತಾಪ ಸೂಚಿಸಿದ್ದಾರೆ.

ನಿವೃತ್ತ ಸೈನಿಕರನ್ನು ಗುರುತಿಸುವ ಕಾರ್ಯ ಶ್ಲಾಘನೀಯ : ಸುಬೇದಾರ್ ಎಲ್.ಡಿ ಅಶೋಕ್

ಗ್ರಾಮ ದೇವತೆ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಾಡಹಬ್ಬಕ್ಕೆ ಚಾಲನೆ

ಭದ್ರಾವತಿ ನಗರಸಭೆ ವತಿಯಿಂದ ೯ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಸರಳ ದಸರಾ ಮಹೋತ್ಸವಕ್ಕೆ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಮಾಜಿ ಸೈನಿಕರ ಸಂಘದ ತಾಲೂಕು ಅಧ್ಯಕ್ಷ, ಸುಬೇದಾರ್ ಎಲ್.ಡಿ ಅಶೋಕ್ ಚಾಲನೆ ನೀಡಿದರು.
ಭದ್ರಾವತಿ, ಅ. ೧೭:  ದೇಶ ರಕ್ಷಣೆಯಲ್ಲಿ ತೊಡಗಿ ನಿವೃತ್ತಿ ಹೊಂದಿರುವ ಸೈನಿಕರನ್ನು ಗುರುತಿಸುವ ಜೊತೆಗೆ ದಸರಾ ಉದ್ಘಾಟನೆಗೆ ಆಹ್ವಾನಿಸುವ ಮೂಲಕ ಅವರಿಗೆ ಗೌರವ ನೀಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ ಎಂದು ಮಾಜಿ ಸೈನಿಕರ ಸಂಘದ ತಾಲೂಕು ಅಧ್ಯಕ್ಷ, ಸುಬೇದಾರ್ ಎಲ್.ಡಿ ಅಶೋಕ್ ಪ್ರಶಂಸೆ ವ್ಯಕ್ತಪಡಿಸಿದರು.
        ಅವರು ಶನಿವಾರ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಗರಸಭೆ ವತಿಯಿಂದ ೯ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಸರಳ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
       ಮಾಜಿ ಸೈನಿಕರನ್ನು ನಿರ್ಲಕ್ಷಿಸುತ್ತಿರುವ ಇಂದಿನ ಸಂದರ್ಭದಲ್ಲಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಅವರನ್ನು ಗುರುತಿಸುವ ಮೂಲಕ ದಸರಾ ಉದ್ಘಾಟನೆಗೆ ಅವಕಾಶ ಮಾಡಿಕೊಟ್ಟಿರುವುದು ತಾಲೂಕಿನ ಎಲ್ಲಾ ಮಾಜಿ ಸೈನಿಕರಿಗೆ ಸಲ್ಲುವ ಗೌರವಾಗಿದೆ. ಪ್ರತಿಯೊಬ್ಬರ ರಕ್ಷಣೆ ಇಂದು ಅಗತ್ಯವಾಗಿದ್ದು, ನಾಡಹಬ್ಬ ದಸರಾ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
       ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಯಿ ಚಾಮುಂಡೇಶ್ವರಿ ದೇವಿ ಎಲ್ಲರನ್ನು ರಕ್ಷಿಸುವ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ರೀತಿಯಲ್ಲಿ ನಡೆಯುವಂತಾಗಲಿ ಎಂದು ಪ್ರಾರ್ಥಿಸಿದರು.
       ವೇದಿಕೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ. ನಾಗೇಂದ್ರ ಹೊನ್ನಾಳಿ, ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ಡಾ. ಎನ್.ಜೆ ನಾಗರಾಜ್, ಸುಬೇದಾರ್ ಬೋರೇಗೌಡ, ಹಲ್ದಾರ್‌ಗಳಾದ ವಿನೋದ್‌ಪೂಜಾರಿ, ಪ್ರಸಾದ್, ನಾಯಕ್ ರಾಜೇಶ್, ಮಾಜಿ ಸೈನಿಕ ಗುಳ್‌ಗುಳೇ, ಮುಖಂಡರಾದ ನರಸಿಂಹಚಾರ್, ರಮಾಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ನಗರಸಭೆ ಪೌರಾಯುಕ್ತ ಮನೋಹರ್ ಸ್ವಾಗತಿಸಿದರು. ಕಂದಾಯಾಧಿಕಾರಿ ರಾಜ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮೊದಲು ದಸರಾ ಉದ್ಘಾಟನೆಗೆ ಆಗಮಿಸಿದ ಸುಬೇದಾರ್ ಎಲ್.ಡಿ ಅಶೋಕ್‌ರವರನ್ನು ಸ್ವಾಗತಿಸಲಾಯಿತು. ಶ್ರೀ ಹಳದಮ್ಮ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.


ಭದ್ರಾವತಿ ನಗರಸಭೆ ವತಿಯಿಂದ ೯ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಸರಳ ದಸರಾ ಮಹೋತ್ಸವದಲ್ಲಿ ಕೊರೋನಾ ವಾರಿಯರ್ಸ್‌ಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
   ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕೊರೋನಾ ವಾರಿಯರ್ಸ್‌ಗಳಾದ ಹಳೇನಗರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಹಿರಿಯ ಆರೋಗ್ಯ ನಿರೀಕ್ಷಕ ನಿಲೇಶ್‌ರಾಜ್ ಸೇರಿದಂತೆ ಅಂಗನವಾಡಿ ಹಾಗು ಆಶಾಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.

Friday, October 16, 2020

ಹಟ್ಟಿ ಚಿನ್ನದ ಗಣಿ ಕಂಪನಿ ನಿರ್ದೇಶಕರಾಗಿ ಕೂಡ್ಲಿಗೆರೆ ಎಸ್. ಹಾಲೇಶ್ ನೇಮಕ

ಕೂಡ್ಲಿಗೆರೆ ಎಸ್. ಹಾಲೇಶ್
ಭದ್ರಾವತಿ, ಅ. ೧೬: ತಾಲೂಕಿನ ಕೂಡ್ಲಿಗೆರೆ ಗ್ರಾಮದ ನಿವಾಸಿ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೂಡ್ಲಿಗೆರೆ ಎಸ್ ಹಾಲೇಶ್‌ರವರನ್ನು ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿಯ ಅಧಿಕಾರೇತರ ನಿರ್ದೇಶಕರನ್ನಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
      ಕೂಡ್ಲಿಗೆರೆ ಹಾಲೇಶ್‌ರವರು ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುವ ಜೊತೆಗೆ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅಲ್ಲದೆ ರೋಟರಿ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದರು. ಇದೀಗ ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿಯ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.




೯ ದಿನಗಳ ದಸರಾ ಆಚರಣೆಗೆ ನಗರಾಡಳಿತ ಸಿದ್ದತೆ : ಶಾಸಕರಿಗೆ ಆಹ್ವಾನ

ನಾಡಹಬ್ಬ ದಸರಾ ಆಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಪೌರಾಯುಕ್ತ ಮನೋಹರ್ ಆಮಂತ್ರಣ ನೀಡುವ ಮೂಲಕ ಆಹ್ವಾನಿಸಿದರು.
ಭದ್ರಾವತಿ, ಅ. ೧೬: ಕೊರೋನಾ ಸಂಕಷ್ಟದ ನಡುವೆಯೂ ೯ ದಿನಗಳ ನಾಡಹಬ್ಬ ದಸರಾ ಆಚರಣೆಗೆ ನಗರಸಭೆ ಆಡಳಿತ ಮುಂದಾಗಿದ್ದು, ಮಾಜಿ ಸೈನಿಕ ಸುಬೇದಾರ್ ಎಲ್.ಡಿ ಅಶೋಕ್ ಅ.೧೭ರ ಶನಿವಾರ ಚಾಲನೆ ನೀಡಲಿದ್ದಾರೆ.
      ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಸ್ಥಾನದ  ಆವರಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಪೂಜೆಯೊಂದಿಗೆ ಆಚರಣೆಗೆ ಚಾಲನೆ ದೊರೆಯಲಿದ್ದು, ಈ ನಡುವೆ ನಗರದ ವಿವಿಧ ದೇವಾಲಯಗಳಲ್ಲಿ ೯ ದಿನಗಳ ಆಚರಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಬಹುತೇಕ ದೇವಾಲಯಗಳ ಸಮಿತಿಗಳು ಸರ್ಕಾರದ ಮಾರ್ಗಸೂಚಿಗಳಂತೆ ಸರಳ ಆಚರಣೆಗೆ ಮುಂದಾಗಿವೆ.
        ಶಾಸಕರಿಗೆ ಆಹ್ವಾನ:  
    ನಾಡಹಬ್ಬ ದಸರಾ ಆಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಪೌರಾಯುಕ್ತ ಮನೋಹರ್ ಆಮಂತ್ರಣ ನೀಡುವ ಮೂಲಕ ಆಹ್ವಾನಿಸಿದರು.
ನಗರಸಭೆ ಆಡಳಿತದ ಪರವಾಗಿ ಶಾಸಕರ ನಿವಾಸಕ್ಕೆ ತೆರಳಿದ ಮನೋಹರ್ ನೇತೃತ್ವದ ತಂಡ ದಸರಾ ಆಚರಣೆ ಯಶಸ್ವಿಗೆ ಹೆಚ್ಚಿನ ಸಹಕಾರ ನೀಡುವಂತೆ ಕೋರಿತು.
       ಕಂದಾಯಾಧಿಕಾರಿ ರಾಜ್‌ಕುಮಾರ್, ಲೇಖಾಧಿಕಾರಿ ಸೈಯದ್  ಮಹಬೂಬ್ ಆಲಿ, ಮಂಜುನಾಥ್, ಸತ್ಯನಾರಾಯಣ, ನರಸಿಂಹಚಾರ್, ರಮಾಕಾಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮನೆ ಬಾಡಿಗೆ ಹೆಚ್ಚಳ, ಕುಡಿಯುವ ನೀರು ಅಸಮರ್ಪಕ ಪೂರೈಕೆ ವಿರುದ್ಧ ಪ್ರತಿಭಟನೆ

ವಿಐಎಸ್‌ಎಲ್ ನಗರಾಡಳಿತದಿಂದ ಬೇಡಿಕೆ ಈಡೇರಿಕೆಗೆ ಭರವಸೆ

ಮನೆ ಬಾಡಿಗೆ ಹೆಚ್ಚಳ, ಅಸಮರ್ಪಕ ಕುಡಿಯುವ ನೀರು ಪೂರೈಕೆ ಸೇರಿದಂತೆ  ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ವಿಫಲವಾಗಿರುವ ಭದ್ರಾವತಿ ವಿಐಎಸ್‌ಎಲ್ ನಗರಾಡಳಿತ ವಿರುದ್ಧ ನಿವೃತ್ತ ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು
ಭದ್ರಾವತಿ, ಅ. ೧೬ :  ಮನೆ ಬಾಡಿಗೆ ಹೆಚ್ಚಳ, ಅಸಮರ್ಪಕ ಕುಡಿಯುವ ನೀರು ಪೂರೈಕೆ ಸೇರಿದಂತೆ  ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ವಿಫಲವಾಗಿರುವ ವಿಐಎಸ್‌ಎಲ್ ನಗರಾಡಳಿತ ವಿರುದ್ಧ ನಿವೃತ್ತ ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
         ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಕಾರ್ಖಾನೆಯಲ್ಲಿ ಸುಮಾರು ೩೦-೪೦ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಕಾರ್ಮಿಕರು ವಾಸಿಸುತ್ತಿರುವ ಮನೆಗಳಿಗೆ  ಅಧಿಕ ಬಾಡಿಗೆ ನಿಗದಿಪಡಿಸಿರುವುದು ಸರಿಯಲ್ಲ.  ವಾಸಕ್ಕೆ ಯೋಗ್ಯವಲ್ಲದ ಹಾಳಾದ ಮನೆಗಳನ್ನು ಸುಮಾರು ೫-೬ ಲಕ್ಷ ರು. ವೆಚ್ಚದಲ್ಲಿ ದುರಸ್ತಿ ಪಡಿಸಿಕೊಂಡು ವಾಸಿಸುತ್ತಿದ್ದು,  ನಿವೃತ್ತಿ ಹಣವನ್ನು  ಬಹುತೇಕ ವ್ಯಯ ಮಾಡಿದ್ದಾರೆ.  ಇದೀಗ  ಇದೀಗ ಶೇಕಡ ನೂರರಷ್ಟು ಮನೆ ಬಾಡಿಗೆ ಹೆಚ್ಚಳ ಮಾಡಿರುವುದು ನಿವೃತ್ತ ಕಾರ್ಮಿಕರನ್ನು ಮತ್ತಷ್ಟು  ಸಂಕಷ್ಟಕ್ಕೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
        ಈ ನಡುವೆ  ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ.  ಬೆಳಿಗ್ಗೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ.  ಇದರಿಂದಾಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ಕಾರ್ಖಾನೆಯ ನಗರಾಡಳಿತ ಯಾವುದೇ ರೀತಿಯಲ್ಲಿ ಪೂರಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.


ಮನೆ ಬಾಡಿಗೆ ಹೆಚ್ಚಳ, ಅಸಮರ್ಪಕ ಕುಡಿಯುವ ನೀರು ಪೂರೈಕೆ ಸೇರಿದಂತೆ  ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ವಿಫಲವಾಗಿರುವ ಭದ್ರಾವತಿ ವಿಐಎಸ್‌ಎಲ್ ನಗರಾಡಳಿತ ವಿರುದ್ಧ ನಿವೃತ್ತ ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
      ಶಾಸಕ ಬಿ.ಕೆ ಸಂಗಮೇಶ್ವರ,  ಸಮಿತಿ ಅಧ್ಯಕ್ಷ ಬಾಲಕೃಷ್ಣ, ಡಿಎಸ್‌ಎಸ್ ಮುಖಂಡ ಸತ್ಯ, ಮುಖಂಡರಾದ ಗೋವಿಂದ ಸ್ವಾಮಿ, ಕಾಂತರಾಜು, ವಿಲ್ಸನ್ ಬಾಬು, ಕಬಡ್ಡಿ ಕೃಷ್ಣೇಗೌಡ, ಎನ್, ರಾಮಕೃಷ್ಣ, ಡಿ. ನರಸಿಂಹಮೂರ್ತಿ, ಎಸ್.ಎಸ್ ಭೈರಪ್ಪ, ಮುಕುಂದಯ್ಯ, ವೆಂಕಟೇಶ್, ಕೀರ್ತಿ ಗುಜ್ಜಾರ್, ಚನ್ನಪ್ಪ, ವಿಶ್ವನಾಥಗಾಯಕ್‌ವಾಡ್, ಗಿರಿನಾಯ್ಡು, ಎಎಪಿ ಪಕ್ಷದ ಪ್ರಮುಖರಾದ ಜಿಲ್ಲಾಧ್ಯಕ್ಷ ರವಿಕುಮಾರ್, ಪರಮೇಶ್ವರಾಚಾರ್, ಜಯಶ್ರೀ ವೃತ್ತ ಹಿರಿಯ ನಾಗರೀಕರ ಸಂಘದ ಅಧ್ಯಕ್ಷ ದೊಡ್ಡಯ್ಯ, ಲಾಜರ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಪದಾಧಿಕಾರಿಗಳು ಸೇರಿದಂತೆ ನಿವೃತ್ತ ಕಾರ್ಮಿಕರ ಕುಟುಂಬ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
      ಪ್ರತಿಭಟನೆಗೆ ಮಣಿದ ವಿಐಎಸ್‌ಎಲ್ ನಗರಾಡಳಿತ:
      ಪ್ರತಿಭಟನೆ ಹೆಚ್ಚಾದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕಾರ್ಖಾನೆ ಹಿರಿಯ ಅಧಿಕಾರಿಗಳು ಉಕ್ಕು ಪ್ರಾಧಿಕಾರದ ಮುಖ್ಯ ಆಡಳಿತ ಕಛೇರಿ ಅಧಿಕಾರಿಗಳೊಂದಿಗೆ ಚರ್ಚಿಸುವ  ಮೂಲಕ ಮುಂದಿನ ೬ವರ್ಷಗಳ ವರೆಗೆ ಯಾವುದೇ ಕಾರಣಕ್ಕೂ ಬಾಡಿಗೆ ಹೆಚ್ಚಳ ಮಾಡುವುದಿಲ್ಲ. ಮುಂದಿನ ಒಂದು ವಾರದ ನಂತರ ಸಮರ್ಪಕವಾಗಿ ನೀರು ಪೂರೈಕೆ ಮಾಡುವುದಾಗಿ ಭರವಸೆ ನೀಡಿದರು.

Thursday, October 15, 2020

ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಕ್ಕಿ ವಶ : ಪ್ರಕರಣ ದಾಖಲು

ಭದ್ರಾವತಿ, ಅ. ೧೫:  ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಕ್ಕಿಯನ್ನು ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಗುರುವಾರ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
     ನಗರದ ಹೊಸಮನೆ ವ್ಯಾಪ್ತಿಯ ಮೊದಲನೇ ತಿರುವಿನ ಮನೆಯೊಂದರಲ್ಲಿ ಸಂಗ್ರಹಿಸಲಾಗಿದ್ದ ಅಕ್ಕಿಯನ್ನು ಬೇರೆಡೆಗೆ ಸಾಗಿಸಲು ಲಾರಿಗೆ ತುಂಬುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಸುಮಾರು ೧.೮೦ ಲಕ್ಷ ರು. ಮೌಲ್ಯದ ಸುಮಾರು ೬೦ ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
     ಸ್ಥಳಕ್ಕೆ ಠಾಣಾಧಿಕಾರಿ ಜಯಣ್ಣ, ಆಹಾರ ಇಲಾಖೆ ಅಧಿಕಾರಿ ಗಾಯತ್ರಿ ಸೇರಿದಂತೆ ಇನ್ನಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.