Friday, May 8, 2020

ತಾಲೂಕು ದಂಡಾಧಿಕಾರಿಯಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಭದ್ರಾವತಿ ತಾಲೂಕು ನೂತನ ತಾಲೂಕು ದಂಡಾಧಿಕಾರಿಯಾಗಿ 
ಶಿವಕುಮಾರ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡರು. 
ಭದ್ರಾವತಿ: ನೂತನ ತಾಲೂಕು ದಂಡಾಧಿಕಾರಿಯಾಗಿ ತಹಸೀಲ್ದಾರ್ ಶಿವಕುಮಾರ್ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಉಪಸ್ಥಿತಿಯಲ್ಲಿ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು. ನಗರಸಭೆ ಪೌರಾಯುಕ್ತ ಮನೋಹರ್, ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ ಮಲ್ಲಪ್ಪ, ಹೀರಿಯ ಆರೋಗ್ಯ ಸಹಾಯಕ ನಿಲೇಶ್‌ರಾಜ್, ಪರಿಸರ ಅಭಿಯಂತರ ರುದ್ರೇಗೌಡ, ಕಂದಾಯಾಧಿಕಾರಿ ಪ್ರಶಾಂತ್, ಪ್ರೇಮ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ತಾಲೂಕು ನೂತನ ತಾಲೂಕು ದಂಡಾಧಿಕಾರಿಯಾಗಿ ಶಿವಕುಮಾರ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದು, ಇವರನ್ನು ಆರೋಗ್ಯ ಇಲಾಖೆ ವತಿಯಿಂದ ಸ್ವಾಗತಿಸಲಾಯಿತು. 
ಶಿವಕುಮಾರ್ ಪರಿಚಯ: 
ಶಿವಕುಮಾರ್‌ರವರು ೨೦೦೦ ಇಸವಿಯಲ್ಲಿ ತಹಸೀಲ್ದಾರ್ ಹುದ್ದೆಯಲ್ಲಿ ನೇಮಕಗೊಂಡಿದ್ದು, ಸುಮಾರು ೧೯ ವರ್ಷ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸಿದ್ದು, ನಂತರ ಹಾವೇರಿ ತಾಲೂಕು ದಂಡಾಧಿಕಾರಿಯಾಗಿ ಸುಮಾರು ೨ ವರ್ಷ ಸೇವೆ ಸಲ್ಲಿಸಿ ಇದೀಗ ಭದ್ರಾವತಿಗೆ ವರ್ಗಾವಣೆಗೊಂಡಿದ್ದಾರೆ.
ಈ ಹಿಂದೆ ಸೋಮಶೇಖರ್‌ರವರು ಸುಮಾರು ೧ ವರ್ಷ ತಾಲೂಕು ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಏ.೩೦ರಂದು ನಿವೃತ್ತಿ ಹೊಂದಿದ್ದರು. ಇದೀಗ ತೆರವಾಗಿದ್ದ ಹುದ್ದೆಗೆ ಶಿವಕುಮಾರ್ ನೇಮಕಗೊಂಡಿದ್ದಾರೆ. 

ಸ್ವ ಸಹಾಯ ಮಹಿಳಾ ಸಂಘಗಳಿಂದ ಮಾಸ್ಕ್ ತಯಾರಿಕೆ

ಭದ್ರಾವತಿ ನಗರಸಭೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ (ಡೇ-ನಲ್ಮ್) ಗುಂಪು ಉದ್ಯೋಗ ಕಾರ್ಯಕ್ರಮದಡಿ ರಚನೆಯಾಗಿರುವ ಹೆಬ್ಬಂಡಿ ಗ್ರಾಮದ ಬಾಂಧವ್ಯ ಮಹಿಳಾ ಘಟಕ ಮತ್ತು ಹೊಸಸಿದ್ದಾಪುರದ ಚಾಮುಂಡೇಶ್ವರಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಮಾಸ್ಕ್ ತಯಾರಿಕೆಯಲ್ಲಿ ತೊಡಗಿರುವುದು.
ಭದ್ರಾವತಿ, ಏ. ೮: ಲಾಕ್‌ಡೌನ್ ಅಂತ್ಯಗೊಂಡಿದ್ದರೂ ಸಹ ರಾಜ್ಯಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಹಸಿರು ವಲಯದಲ್ಲಿ ಸಾರ್ವಜನಿಕರ ಸಂಚಾರ ಅಧಿಕವಾಗಿದೆ. ಈ ನಡುವೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಬಳಸುವಂತೆ ಹಾಗೂ ಎಲ್ಲಿಬೇಕೆಂದರಲ್ಲಿ ಉಗುಳದಂತೆ ಎಚ್ಚರಿಕೆ ನೀಡಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದ ಸ್ವಸಹಾಯ ಮಹಿಳಾ ಸಂಘಗಳು ಇದೀಗ ಮಾಸ್ಕ್ ತಯಾರಿಕೆಯನ್ನು ಉದ್ಯೋಗವನ್ನಾಗಿಸಿ ಕೊಂಡಿವೆ.
ನಗರಸಭೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ (ಡೇ-ನಲ್ಮ್) ಗುಂಪು ಉದ್ಯೋಗ ಕಾರ್ಯಕ್ರಮದಡಿ ರಚನೆಯಾಗಿರುವ ಹೆಬ್ಬಂಡಿ ಗ್ರಾಮದ ಬಾಂಧವ್ಯ ಮಹಿಳಾ ಘಟಕ ಮತ್ತು ಹೊಸಸಿದ್ದಾಪುರದ ಚಾಮುಂಡೇಶ್ವರಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಮಾಸ್ಕ್ ತಯಾರಿಕೆಯಲ್ಲಿ ತೊಡಗಿದ್ದಾರೆ.
ಉತ್ತಮ ಗುಣಮಟ್ಟದ ಕಾಟನ್ ಮಾಸ್ಕ್ ತಯಾರಿಸುತ್ತಿದ್ದು, ಮಾಸ್ಕ್ ಅಗತ್ಯವಿರುವವರು ಖರೀದಿಸಬಹುದಾಗಿದೆ.  ದೊಡ್ಡ ಪ್ರಮಾಣದಲ್ಲಿ ಮಾಸ್ಕ್‌ಗಳನ್ನು ತಯಾರಿಸಲಾಗುತ್ತಿದ್ದು, ಖರೀದಿಸುವವರು ಮೊ. ೮೬೬೦೬೭೧೬೯೫, ೯೯೮೬೫೭೦೯೦೭ ಅಥವಾ ೯೬೬೩೮೯೪೬೪೬ ಸಂಪರ್ಕಿಸಬಹುದಾಗಿದೆ.



ಅನಿಲ ವಿತರಕರಿಂದ ಹೆಚ್ಚುವರಿ ಹಣ ವಸೂಲಾತಿ : ಸ್ಥಳೀಯರಿಂದ ದೂರು

ಭದ್ರಾವತಿ ಜನ್ನಾಪುರದಲ್ಲಿರುವ ಓಂ ಸಾಯಿ ಇಂಡಿಯನ್ ಡಿಸ್ಟ್ರಿಬ್ಯೂಟರ್‍ಸ್ ಗ್ರಾಹಕರಿಗೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಲು ಹೆಚ್ಚುವರಿ ಹಣ ಪಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ದೂರು ಸಲ್ಲಿಸಿ ಒತ್ತಾಯಿಸಿದ್ದಾರೆ. 

ಭದ್ರಾವತಿ: ನಗರದ ಜನ್ನಾಪುರದಲ್ಲಿರುವ ಓಂ ಸಾಯಿ ಇಂಡಿಯನ್ ಡಿಸ್ಟ್ರಿಬ್ಯೂಟರ್‍ಸ್ ಗ್ರಾಹಕರಿಗೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡಲು ಹೆಚ್ಚುವರಿ ಹಣ ಪಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ದೂರು ಸಲ್ಲಿಸಿ ಒತ್ತಾಯಿಸಿದ್ದಾರೆ.
ಅನಿಲ ಸಿಲಿಂಡರ್ ನಿಗದಿತ ದರಕ್ಕೆ ಪೂರೈಕೆ ಮಾಡದೆ ೭೪೩ ರು. ಇದ್ದರೆ, ೭೭೦ ರು. ಪಡೆಯಲಾಗುತ್ತಿದೆ. ಹೆಚ್ಚುವರಿಯಾಗಿ ಸುಮಾರು ೨೭ ಹೆಚ್ಚು ಪಡೆಯಲಾಗುತ್ತಿದೆ. ಆದರೆ ೭೪೩ ರು.ಗಳಿಗೆ ರಶೀದಿ ನೀಡಲಾಗುತ್ತಿದೆ. ಪ್ರಸ್ತುತ ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿದ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲೂ ಹೆಚ್ಚುವರಿ ಹಣ ವಸೂಲಾತಿ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಮೋಹನ್‌ಕುಮಾರ್,  ಎಚ್. ಮಂಜುನಾಥ್, ಎಸ್. ಶಿವು, ಪ್ರಕಾಶ್, ಸುಬ್ಬೇಗೌಡ, ಅಲಿಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.