Thursday, June 25, 2020

ಲಾರಿ ಚಾಲಕನಿಗೂ ಕೊರೋನಾ ವೈರಸ್ : ಹಳೇನಗರ ಭಾಗದಲ್ಲಿ ಆತಂಕ

ಭದ್ರಾವತಿ, ಜೂ. ೨೫: ಹಳೇನಗರದ ಬಸವೇಶ್ವರ ವೃತ್ತದ ಉಪ್ಪಾರರ ಬೀದಿ ನಿವಾಸಿ, ಲಾರಿ ಚಾಲಕರೊಬ್ಬರಿಗೆ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಹೆಚ್ಚಾಗಿದ್ದು, ಗುರುವಾರ ಶಿವಮೊಗ್ಗ ಮೆಗ್ಗಾನ್ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಜೂ.೧೯ರಂದು ಚಾಲಕ ತುಮಕೂರಿಗೆ ಪ್ರಯಾಣ ಬೆಳೆಸಿದ್ದು, ೨೧ರಂದು ನಗರಕ್ಕೆ ಹಿಂದಿರುಗಿದ್ದಾರೆ. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾಗ ಕೊರೋನಾ ವೈರಸ್ ಹರಡಿರುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕೋವಿಡ್-೧೯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನಲಾಗಿದೆ. 
ನಗರಸಭೆ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಚಾಲಕ ವಾಸವಿದ್ದ ಮನೆಯ ಸುತ್ತಮುತ್ತ ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್‌ಮೆಂಟ್ ವಲಯವಾಗಿಸಿದ್ದು, ಮುಂದಿನ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದ್ದಾರೆ. ಈ ಹಿಂದೆ ಚನ್ನಗಿರಿ ರಸ್ತೆಯಲ್ಲಿ ಮಹಿಳೆಯೊಬ್ಬರಲ್ಲಿ ವೈರಸ್ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ೪-೫ ದಿನಗಳ ವರೆಗೆ ರಂಗಪ್ಪ ವೃತ್ತದಿಂದ ಹೊಳೆಹೊನ್ನೂರು ವೃತ್ತದ ವರೆಗೆ ಸೀಲ್‌ಡೌನ್ ಘೋಷಿಸಲಾಗಿತ್ತು. 

ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಕೊರೋನಾ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಭಿನಂದಿಸಲಾಯಿತು. 
ಭದ್ರಾವತಿ, ಜೂ. ೨೫: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವಾರಿಯರ್ಸ್‌ಗಳಾದ ವೈದ್ಯರು, ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ  ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ವತಿಯಿಂದ ಗುರುವಾರ ಅಭಿನಂದಿಸಲಾಯಿತು. 
ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ) ಆವರಣದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್‌ಗಳ ಕರ್ತವ್ಯವನ್ನು ಶ್ಲಾಘಿಸಿ ಅಭಿನಂದಿಸುವ ಜೊತೆಗೆ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ದಾಂಜಿಲಿ ಸಲ್ಲಿಸಿ ಗೌರವ ಸೂಚಿಸಲಾಯಿತು. 
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಆರ್. ಕವಿತಾ, ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮಹಿಳಾ ಘಟಕದ ಅಧ್ಯಕ್ಷೆ ಶಿವಮ್ಮ ಶ್ರಿನಿವಾಸ್, ಉಪಾಧ್ಯಕ್ಷೆ ಧನಲಕ್ಷ್ಮಿ ರಾಮಣ್ಣ, ಲಾಬ್ ಟೆಕ್ನಿಷಿಯನ್ ಸಚಿನ್ ಸೇರಿದಂತೆ ಟ್ರಸ್ಟ್ ಮಹಿಳಾ ಘಟಕದ ೨೧ ಮಂದಿ ಪದಾಧಿಕಾರಿಗಳು ಉಪಸ್ಥಿತರಿದ್ದರು. 
ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಸುಮಾರು ೨೫ಕ್ಕೂ ಹೆಚ್ಚು ಮಂದಿಯನ್ನು ಅಭಿನಂದಿಸಲಾಯಿತು. 

೪೦೦೧ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರು

ಭದ್ರಾವತಿ ನ್ಯೂಟೌನ್ ಸರ್ಕಾರಿ ರಜಿತ ಮಹೋತ್ಸವ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಭದ್ರಾವತಿ, ಜೂ. ೨೫: ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನವಾದ ಗುರುವಾರ ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಹೆಚ್ಚಿನ ಸುರಕ್ಷತಾ ಕ್ರಮಗಳೊಂದಿಗೆ ಕಳೆದ ಸುಮಾರು ೨ ತಿಂಗಳಿನಿಂದ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ಸರ್ಕಾರದ ಇನ್ನಿತರ ಇಲಾಖೆಗಳ ಸಹಕಾರದೊಂದಿಗೆ ಶಿಕ್ಷಣ ಇಲಾಖೆ ನಿರಂತರವಾಗಿ ಸಿದ್ದತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿತ್ತು. ಇದರ ಪರಿಣಾಮ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿದೆ.
ಪತ್ರಿಕೆಯೊಂದಿಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಈ ಬಾರಿ ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು ೪೧೭೬ ವಿದ್ಯಾರ್ಥಿಗಳ ಪೈಕಿ ೪೦೦೧ ವಿದ್ಯಾರ್ಥಿಗಳು ಹಾಜರಿದ್ದು, ೧೭೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಳಿದಂತೆ ೨ ವಿದ್ಯಾರ್ಥಿಗಳು ಕಂಟೈನ್‌ಮೆಂಟ್ ಪ್ರದೇಶಗಳಿಂದ ಬಂದಿದ್ದು,  ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದಂತೆ ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಒಟ್ಟು ೩೮ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೭೭ ವಲಸೆ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.  ೧೫ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದರು.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಬ್ಯಾರಿಗೇಡ್‌ಗಳನ್ನು ಅಳವಡಿಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಥರ್ಮೋ ಸ್ಕ್ರೀನಿಂಗ್ ಯಂತ್ರದ ಮೂಲಕ ಆರೋಗ್ಯ ತಪಾಸಣೆ ನಡೆಸಲಾಯಿತು. ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.

ಆ.೨೦ ದೇವರಾಜ ಅರಸು ಜನ್ಮದಿನದಂದು ಹಕ್ಕು ಪತ್ರ ವಿತರಣೆ ಮಾಡಿ : ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗದ ನೇತಾರ ಡಿ. ದೇವರಾಜ ಅರಸುರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ  ಆ. ೨೦ರಂದು ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಗುರುವಾರ ಭದ್ರಾವತಿಯಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೨೫: ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ಎರಡು ದಶಕಗಳ ನಂತರ ನಿವೇಶನರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಸಿದ್ದತೆಗಳು ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗದ ನೇತಾರ ಡಿ. ದೇವರಾಜ ಅರಸುರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ  ಆ. ೨೦ರಂದು ಹಕ್ಕು ಪತ್ರಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮನವಿ ಸಲ್ಲಿಸಲಾಯಿತು. 
ತಾವು ಶಾಸಕರಾಗಿ ಆಯ್ಕೆಯಾದ ನಂತರ ನಿರಂತರ ಪ್ರಯತ್ನದ ಫಲವಾಗಿ ನಿವೇಶನರಹಿತರಿಂದ ನಗರಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ್ದು, ದೀನದಲಿತರು, ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಜೀವನ ನಡೆಸುತ್ತಿರುವವರು ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳ ವಿತರಣೆಗೆ  ಕಾತರದಿಂದ ಎದುರು ನೋಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ.೨೦ರಂದು ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. 
ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಮನವಿ: 
ನಗರಸಭೆ ಬೆಳ್ಳಿ ಮಹೋಹತ್ಸವ ಆಚರಣೆಯ ಸವಿನೆನಪಿಗಾಗಿ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯರವರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ನಗರಸಭೆ ಖಾಲಿ ನಿವೇಶನದಲ್ಲಿ ಸುಮಾರು ೨ ಕೋ. ರೂ. ವೆಚ್ಚದ ಸುಸಜ್ಜಿತವಾದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿ ಸಹಕಾರ ನೀಡಬೇಕು. 
ಈಗಾಗಲೇ ಈ ಸಂಬಂಧ ಡಿಸೆಂಬರ್ ೨೧, ೨೦೧೯ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನವಾಗಿದ್ದು,  ಈ ಹಿನ್ನಲೆಯಲ್ಲಿ ಭವನ ನಿರ್ಮಾಣಕ್ಕೆ ಮುಂದಾಬೇಕೆಂದು ಮನವಿ ಮಾಡಲಾಯಿತು.  
ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಕಾರ್ಯಾಧ್ಯಕ್ಷೆ ರಮಾವೆಂಕಟೇಶ್, ಗೀತಾ ಶಿವಕುಮಾರ್, ಭಾಗ್ಯಲಕ್ಷ್ಮಿ ಬಸವರಾಜು, ದೇವಿಕಾ ನಾಗರಾಜ್, ಶೈಲಜಾ ರಾಮಕೃಷ್ಣ, ಆರ್. ಮುಕುಂದಯ್ಯ ಮತ್ತು ಜೇವಿಯರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.