Sunday, July 5, 2020

ವಿಐಎಸ್‌ಎಲ್ ಇದೀಗ ಕೋವಿಡ್-೧೯ ಆಸ್ಪತ್ರೆ

ಬಟ್ಟೆ ಅಂಗಡಿ ಯುವಕನಿಗೆ ಸೋಂಕು

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಕೋವಿಡ್-೧೯ ಆಸ್ಪತ್ರೆಯನ್ನಾಗಿ ಸಿದ್ದಗೊಳಿಸುತ್ತಿರುವ ಹಿನ್ನಲೆಯಲ್ಲಿ ಅಗತ್ಯವಿರುವ ಸಾಮಗ್ರಿಗಳನ್ನು ಎಂಪಿಎಂ ಆಸ್ಪತ್ರೆಯಿಂದ ಕೊಂಡೊಯ್ಯಲಾಯಿತು. 
ಭದ್ರಾವತಿ, ಜು. ೫: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆಯನ್ನು ಇದೀಗ ಹೆಚ್ಚುವರಿಯಾಗಿ ಕೋವಿಡ್-೧೯ ಆಸ್ಪತ್ರೆಯನ್ನಾಗಿ ಸಿದ್ದಗೊಳಿಸಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಒಂದು ಸೋಂಕಿನ ಪ್ರಕರಣ ಪತ್ತೆಯಾಗಿದೆ. 
ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಪ್ರಕರಣಗಳಿಗೆ ಪ್ರತ್ಯೇಕವಾಗಿ ಸುಮಾರು ೫೦ ಹಾಸಿಗೆ ಕಾಯ್ದಿರಿಸಲಾಗಿದ್ದು, ಕಳೆದ ೩ ದಿನಗಳಿಂದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು ೫ ವರ್ಷಗಳಿಂದ ಮುಚ್ಚಲ್ಪಟ್ಟಿರುವ ಎಂಪಿಎಂ ಆಸ್ಪತ್ರೆಯಿಂದ ೫೦ ಹಾಸಿಗೆಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ವಿಐಎಸ್‌ಎಲ್ ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕವಾಗಿ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದ್ದು,  ತುರ್ತು ಸೇವೆಗೆ ಅಂಬ್ಯುಲೆನ್ಸ್‌ಗಳನ್ನು ಮೀಸಲಿಡಲಾಗಿದೆ.  
    ನಿರ್ವಹಣೆ, ವೈದ್ಯರು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವುದು ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ಜಿಲ್ಲಾಡಳಿತ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. 
ಒಂದು ಸೋಂಕಿನ ಪ್ರಕರಣ: 
ಶುಕ್ರವಾರ ಒಟ್ಟು ೪ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರ ರಾತ್ರಿ ಹಳೇನಗರದ ಭೂತನಗುಡಿಯಲ್ಲಿ ಸುಮಾರು ೨೮ ವರ್ಷದ ಯುವಕನೋರ್ವನಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. 
ಈತ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕು ಇತರರಿಗೆ ಹರಡಿರುವ ಸಾಧ್ಯತೆ ಹೆಚ್ಚಾಗಿದೆ. ನಗರಸಭೆ ಆಡಳಿತ ಯುವಕ ವಾಸಿಸುತ್ತಿರುವ ಸ್ಥಳದ ೧೦೦ ಹಾಗೂ ೨೦೦ ಮೀಟರ್ ವಿಸ್ತೀರ್ಣದಲ್ಲಿ ಸ್ಯಾನಿಟೈಸ್ ಮಾಡಿಸಿ ಕಂಟೈನ್ಮೆಂಟ್ ವಲಯವನ್ನಾಗಿಸಿದ್ದು, ಈ ಭಾಗದ ಸುತ್ತಮುತ್ತಲ ರಸ್ತೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಭಾನುವಾರ ಯಾವುದೇ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ. 

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎ.ಜಿ ರಾಜಶೇಖರ್ ವರ್ಗಾವಣೆ

ಭದ್ರಾವತಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಸಿಆರ್‌ಪಿ)ಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಎ.ಜಿ ರಾಜಶೇಖರ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕಛೇರಿ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು. 
ಭದ್ರಾವತಿ, ಜು. ೫: ಕೆಇಎಸ್ ಗ್ರೇಡ್-೨ರ ಶ್ರೇಣಿಯ ಎ.ಜಿ ರಾಜಶೇಖರ್ ನಗರದಲ್ಲಿ ಸುಮಾರು ೪ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಸಿಆರ್‌ಪಿ)ಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿದ್ದಾರೆ. 
ಎ.ಜಿ ರಾಜಶೇಖರ್ ಸಂಪನ್ಮೂಲ ಅಧಿಕಾರಿಯಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಇದಕ್ಕೂ ಮೊದಲು ಬೆಳ್ತಂಗಡಿಯಲ್ಲಿ ಸುಮಾರು ೩ ವರ್ಷ, ನಂತರ ಚಿಕ್ಕಮಗಳೂರು ಉಪನಿರ್ದೇಶಕರ ಕಛೇರಿಯಲ್ಲಿ ಸೇವೆ ಸಲ್ಲಿಸಿದ್ದರು. ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು, ಕಲಿಕಾ ಸಾಮಗ್ರಿಗಳನ್ನು ಒದಗಿಸುವಲ್ಲಿ ಹಾಗೂ ಶಿಕ್ಷಕರ ಕುಂದು-ಕೊರತೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 
ಇದೀಗ ಕಡೂರು ಜಿಗಣೆಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಂಡಿದ್ದಾರೆ. ಇವರ ಸೇವೆಯನ್ನು ಸ್ಮರಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಮತ್ತು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕಛೇರಿ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು. 

ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಜಿ ಚನ್ನಬಸಪ್ಪ ನಿಧನ

ಪ್ರೊ. ಬಿ.ಜಿ ಚನ್ನಬಸಪ್ಪ  
ಭದ್ರಾವತಿ, ಜು. ೫: ನಗರದ ನಿವಾಸಿ, ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ.ಜಿ ಚನ್ನಬಸಪ್ಪ(೮೨) ಭಾನುವಾರ ಬೆಳಿಗ್ಗೆ ನಿಧನ ಹೊಂದಿದರು. 
ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಬಿಟ್ಟಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ಸಂಜೆ ಚನ್ನಗಿರಿ ಕಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ನಡೆಯಿತು. 
೧೯೬೪ರಲ್ಲಿ ಕುಡ್ಲೂರು ತರಳಬಾಳು ವಿದ್ಯಾಸಂಸ್ಥೆ ಸಿರಿಗೆರೆ ಶ್ರೀ ಮಹೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದು, ನಂತರ ನಗರದ ಸಿಲ್ವರ್ ಜ್ಯೂಬಿಲಿ ಪ್ರೌಢಶಾಲೆಯಲ್ಲಿ ೧೯೬೫ರಲ್ಲಿ ಸಹ ಶಿಕ್ಷಕರಾಗಿ ಸರ್ಕಾರಿ ವೃತ್ತಿಗೆ ಸೇರ್ಪಡೆಗೊಂಡರು. ೧೯೬೯ರ ವರೆಗೆ ಚಳ್ಳಕೆರೆ ತಾಲೂಕಿನ ಪುರಸಭಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿ, ೧೯೭೧ ರಿಂದ ೧೯೭೫ರ ವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದು, ನಂತರ ೧೯೭೬ರಿಂದ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಧ್ಯಾಪಕರಾಗಿ ಸೇವೆ ಆರಂಭಿಸಿದ್ದು, ಸುಮಾರು ೨೧ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. 
ಚನ್ನಬಸಪ್ಪ ಕೇವಲ ಪ್ರಾಧ್ಯಾಪಕ ಮಾತ್ರವಲ್ಲದೆ ಕ್ರೀಡಾ ಸಲಹೆಗಾರ, ತರಬೇತಿದಾರರಾಗಿ ಹಾಗೂ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಇವರು ತಮ್ಮ ೭೦ನೇ ವಯಸ್ಸಿನಲ್ಲಿ ಜೀವನ ಚರಿತ್ರೆ ಪುಸ್ತಕ ಹೊರತಂದಿದ್ದರು. 
ಇವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ನಗರಸಭಾ ಸದಸ್ಯ ಕೆ.ಎನ್ ಭೈರಪ್ಪಗೌಡ, ಬಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಚ್.ಎನ್ ಲೋಹಿತೇಶ್ವರಪ್ಪ, ಬನಿ ಮಹಾದೇವಪ್ಪ, ಜಿ. ಸುರೇಶಯ್ಯ, ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ಬಸವೇಶ್ವರ ಹಾಗೂ ಭದ್ರಾ ವಿದ್ಯಾ ಸಂಸ್ಥೆ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.