Friday, August 21, 2020

ಕೊರೋನಾ ಭೀತಿ ನಡುವೆ ಗೌರಿ-ಗಣೇಶ ಹಬ್ಬ : ಮೂರ್ತಿ ಪ್ರತಿಷ್ಠಾಪನೆ ಮಾಹಿತಿಯೇ ಇಲ್ಲ

ಭದ್ರಾವತಿ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿ ಗೌರಿ-ಗಣೇಶ ಮೂರ್ತಿಗಳ ಖರೀದಿ ಭರ್ಜರಿಯಾಗಿ ನಡೆಯುತ್ತಿರುವುದು.
ಭದ್ರಾವತಿ, ಆ. ೨೧: ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಈ ಬಾರಿ ಎಲ್ಲೆಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಮಾಹಿತಿ ಯಾರಿಗೂ ಸರಿಯಾಗಿ ಲಭ್ಯವಾಗುತ್ತಿಲ್ಲ.
     ಕಳೆದ ೪ ದಿನಗಳ ಹಿಂದೆಯಷ್ಟೆ ಹಲವು ಷರತ್ತುಗಳೊಂದಿಗೆ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿರುವುದರಿಂದ ಹಲವು ಸಂಘಟನೆಗಳು ಗೊಂದಲಕ್ಕೆ ಒಳಗಾಗಿವೆ. ಅದರಲ್ಲೂ ಒಂದೇ ಒಂದು ದಿನ ಪ್ರತಿಷ್ಠಾಪಿಸುವ ಗೋಜಿಗೆ ಯಾವ ಸಂಘಟನೆಗಳು ಮುಂದಾಗುತ್ತಿಲ್ಲ. ಬೆಳಿಗ್ಗೆ ಪ್ರತಿಷ್ಠಾಪನೆ ಮಾಡಿ ಸಂಜೆ ವಿಸರ್ಜನೆ ಮಾಡುವ ಬದಲು ಈ ಬಾರಿ ಆಚರಣೆಯಿಂದ ಹಿಂದೆ ಸರಿಯುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬದ್ಧವಾಗಿರುವಂತೆ ಕಂಡು ಬರುತ್ತಿದೆ.
    ಕಾಲಾವಕಾಶ ಕಡಿಮೆ ಇರುವುದರಿಂದ ಯಾವುದೇ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲು ಸಂಘಟನೆಗಳಿಗೆ ಸಾಧ್ಯವಾಗಿಲ್ಲ. ಅಲ್ಲದೆ ವಿವಿಧ ಇಲಾಖೆಗಳಿಂದ ಪ್ರತಿಷ್ಠಾಪನೆಗೆ ಅನುಮತಿ ಬೇಕಾಗಿದೆ. ಒಂದೇ ಕಡೆ ಎಲ್ಲಾ ಇಲಾಖೆಗಳ ಅನುಮತಿ ಲಭಿಸುವ ವ್ಯವಸ್ಥೆ ಈ ಬಾರಿ ಕೈಗೊಂಡಿಲ್ಲ. ಪ್ರತಿ ವರ್ಷ ತಾಲೂಕಿನಲ್ಲಿ ಸುಮಾರು ೩೦೦ ರಿಂದ ೪೦೦ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಅದರಲ್ಲೂ ಪೊಲೀಸ್ ಇಲಾಖೆ ಆಯಾ ಪ್ರದೇಶಗಳ ವ್ಯಾಪ್ತಿಯಲ್ಲಿ ಸಾಮಾನ್ಯ, ಸೂಕ್ಷ್ಮ, ಅತಿ ಸೂಕ್ಷ್ಮ ಎಂಬ ಗುಂಪುಗಳಾಗಿ ಗುರುತಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಹಬ್ಬ ಆಚರಣೆಗೆ ಮುಂದಾಗುವಂತೆ ನೋಡಿಕೊಳ್ಳುತ್ತಿತ್ತು.  ಆದರೆ ಈ ಬಾರಿ ಯಾವುದೇ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಿಲ್ಲ.


  ಈ ನಡುವೆ ಮನೆ ಮನೆಗಳಲ್ಲಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಮಾರುಕಟ್ಟೆಯಲ್ಲಿ ಮೂರ್ತಿಗಳ ಖರೀದಿ ಭರ್ಜರಿಯಾಗಿ ನಡೆಯುತ್ತಿದೆ. ಶುಕ್ರವಾರ ಸಂಜೆಯೇ ಮನೆಗಳಿಗೆ ಮೂರ್ತಿಗಳನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಿತು.
      ಭರ್ಜರಿ ವ್ಯಾಪಾರ:
   ನಗರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಕಳೆದ ೩ ದಿನಗಳಿಂದ ಜನದಟ್ಟಣೆ ಅಧಿಕವಾಗುತ್ತಿದೆ. ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದ್ದು, ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಖರೀದಿಯಲ್ಲಿ ತೊಡಗಿರುವುದು ಕಂಡು ಬಂದಿತು.

ವಿಐಎಸ್‌ಎಲ್‌ಗೆ ೧೯ ಕೋ.ರು. ಬಿಡುಗಡೆಗೆ ಒತ್ತಾಯಿಸಿ ಉಸ್ತುವಾರಿ ಸಚಿವರಿಗೆ ಮನವಿ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೧: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ೧೯ ಕೋ. ರು. ಅನುದಾನ ಬಿಡುಗಡೆಗೊಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
         ಕಾರ್ಖಾನೆಯ ಆಕ್ಸಿಜನ್ ಪ್ಲಾಂಟ್ ವೀಕ್ಷಣೆಗೆ ಆಗಮಿಸಿದ್ದ ಸಚಿವರಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಪ್ರಸ್ತುತ ಕಾರ್ಖಾನೆಯಲ್ಲಿ ಯಂತ್ರಗಳು ಚಾಲನೆಯಲ್ಲಿರಲು ಕಚ್ಛಾ ಸಾಮಗ್ರಿ ಆಮದು, ನಿರ್ವಹಣೆ ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸುಮಾರು ೧೯ ಕೋ. ರು. ಅಗತ್ಯವಿದೆ. ಈಗಾಗಲೇ ಈ ಸಂಬಂಧ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ, ಸಂಬಂಧಪಟ್ಟ ಸಚಿವರಿಗೆ, ಶಿವಮೊಗ್ಗ ಲೋಕಸಭಾ ಸದಸ್ಯರಿಗೆ ಮನವಿ ಮಾಡಿ ಒತ್ತಾಯಿಸಲಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಮೂಲಕ ತಕ್ಷಣ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಹಾಗು ಕಾರ್ಮಿಕ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿ ಆಕ್ಸಿಜನ್ ಪ್ಲಾಂಟ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ : ಪರಿಶೀಲನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಒಳಭಾಗದಲ್ಲಿರುವ ಎಂಎಸ್‌ಡಿ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಹೊರಭಾಗದಲ್ಲಿ ಎಂಪಿಎಂ ಕಾರ್ಖಾನೆ ರಸ್ತೆಯಲ್ಲಿರುವ ದಿ ಸದರನ್ ಗ್ಯಾಸ್ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಕ್ಸಿಜನ್ ಕೊರತೆ ಎದುರಾಗದಂತೆ ಮುನ್ನಚ್ಚರಿಕೆ ಹಿನ್ನಲೆಯಲ್ಲಿ ಉತ್ಪಾದನೆ ಕುರಿತು ಅಧಿಕಾರಿಗಳಿಂದ ಮಾಹಿತಿ

ಭದ್ರಾವತಿ, ಆ. ೨೧: ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಒಳಭಾಗದಲ್ಲಿರುವ ಎಂಎಸ್‌ಪಿಎಲ್ ಆಕ್ಸಿಜನ್ ಉತ್ಪಾದನಾ ಘಟಕ ಹಾಗೂ ಹೊರಭಾಗದಲ್ಲಿ ಎಂಪಿಎಂ ಕಾರ್ಖಾನೆ ರಸ್ತೆಯಲ್ಲಿರುವ ದಿ ಸದರನ್ ಗ್ಯಾಸ್ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರಿಂದ ಇದುವರೆಗೂ ಹೆಚ್ಚಿನ ಸಹಕಾರ ಲಭಿಸಿದೆ. ಮುಂದೆ ಸಹ ಇದೆ ರೀತಿ ಸಹಕಾರ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆಕ್ಸಿಜನ ಕೊರತೆ ಇಲ್ಲ. ಆದರೂ ಸಹ ಮುನ್ನಚ್ಚರಿಕೆ ಕ್ರಮವಾಗಿ ತುರ್ತು ಅನಿವಾರ್ಯ ಸಂದರ್ಭದಲ್ಲಿ ಆಕ್ಸಿಜನ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಆಕ್ಸಿಜನ್ ಪ್ಲಾಂಟ್‌ಗಳ ವೀಕ್ಷಣೆ ನಡೆಸಿದ್ದು, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದರು. 
ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಈ ನಿಟ್ಟಿನಲ್ಲಿ ಕಂಪನಿಯವರಿಗೆ ಭರವಸೆ ನೀಡುತ್ತಿದ್ದು, ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸೋಂಕು ವಾಪಕವಾಗಿ ಹರಡುತ್ತಿದ್ದು, ಕಂಪನಿಗಳು ಹೆಚ್ಚಿನ ಸಹಕಾರ ನೀಡುವಂತೆ ಕೋರಿದರು. 


     ಇದಕ್ಕೂ ಮೊದಲು ವಿಐಎಸ್‌ಎಲ್ ಅಥಿತಿ ಗೃಹದಲ್ಲಿ ಜಿಲ್ಲೆಯ ವಿವಿದೆಡೆ ಇರುವ ಆಕ್ಸಿಜನ್ ಪ್ಲಾಂಟ್‌ಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡರು. 
ಎಂಎಸ್‌ಪಿಎಲ್ ಗ್ಯಾಸ್ ಲಿಮಿಟೆಡ್: 
ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಕಬ್ಬಿಣ ಮತ್ತು ಉಕ್ಕು ಉತ್ಪಾದನೆಯ ವಿವಿಧ ಘಟಕಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು ಎರಡು ಆಕ್ಸಿಜನ್ ಘಟಕಗಳಿದ್ದು, ಈ ಪೈಕಿ ಒಂದು ಕಾರ್ಖಾನೆಗೆ ಸೇರಿದೆ.  ಇದರ ಜೊತೆಗೆ ೨೦೦೬ರಲ್ಲಿ ಎಂಎಸ್‌ಪಿಎಲ್ ಗ್ಯಾಸ್ ಲಿಮಿಟೆಡ್ ಖಾಸಗಿ ಕಂಪನಿಗೆ ಕಾರ್ಖಾನೆ ಒಳಭಾಗದಲ್ಲಿ ಮತ್ತೊಂದು ಘಟಕ ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಅನಿಲ ರೂಪದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ಕಾರ್ಖಾನೆಯಲ್ಲಿ ಉತ್ಪಾದನೆ ಇಲ್ಲದೆ ವಿವಿಧ ಘಟಕಗಳು ಮುಚ್ಚಲ್ಪಟ್ಟಿವೆ. ಈ ಹಿನ್ನಲೆಯಲ್ಲಿ ೨ ವರ್ಷಗಳಿಂದ ಈ ಕಂಪನಿ ಸಹ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಪ್ರಸ್ತುತ ಸುಮಾರು ೩೦೦ ಸಿಲಿಂಡರ್‌ಗಳು ಸಂಗ್ರಹದಲ್ಲಿದ್ದು, ಈ ಸಿಲಿಂಡರ್‌ಗಳನ್ನು ವೈದ್ಯಕೀಯ ಬಳಕೆಗೆ ದ್ರವರೂಪಕ್ಕೆ ಬದಲಿಸಬೇಕಾಗಿದೆ. ಅಗತ್ಯಬಿದ್ದಲ್ಲಿ ಈ ಕಾರ್ಖಾನೆಯನ್ನು ಪುನಃ ಆರಂಭಿಸಲು ಸಂಬಂಧಪಟ್ಟ ಘಟಕದ ಆಡಳಿತ ಮಂಡಳಿಯ ಅನುಮತಿ ಪಡೆಯಬೇಕಾಗಿದೆ. ಜೊತೆಗೆ ಸಿಲಿಂಡರ್‌ಗಳನ್ನು ಸಾಗಾಣೆ ಮಾಡಲು ವಾಹನ ಪರವಾನಗಿ ನೀಡಬೇಕಾಗಿದೆ. 
ದಿ ಸದರನ್ ಗ್ಯಾಸ್ ಲಿಮಿಟೆಡ್ : 
ಈ ಘಟಕವನ್ನು ವಿಐಎಸ್‌ಎಲ್ ಕಾರ್ಖಾನೆಯ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಎಂಪಿಎಂ ಕಾರ್ಖಾನೆಯ ಸಮೀಪದಲ್ಲಿ ಸ್ಥಾಪಿಸಲಾಗಿದೆ. ಸುಮಾರು ೫ ದಶಕಗಳಿಗೂ ಹಳೇಯದಾದ ಘಟಕ ಇದಾಗಿದ್ದು, ಇದರ ಕೇಂದ್ರ ಕಛೇರಿ ಗೋವಾದಲ್ಲಿದೆ. ಈ ಘಟಕ ಸ್ಥಳೀಯವಾಗಿ ಅಗತ್ಯವಿರುವ ಆಕ್ಸಿಜನ್ ಗ್ಯಾಸ್ ಪೂರ‍್ಯಕೆಯಲ್ಲಿ ತೊಡಗಿಸಿಕೊಂಡಿದೆ. ಇಲ್ಲಿ ಆಕ್ಸಿಜನ್ ದ್ರವ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸೂಕ್ತವಾಗಿದೆ. 
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿ.ಪಂ. ಸದಸ್ಯ ಕೆ.ಇ ಕಾಂತೇಶ್, ತಹಸೀಲ್ದಾರ್ ಎಚ್.ಸಿ ಯೋಗೇಶ್, ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಕೆ.ಎಲ್ ಶ್ರೀನಿವಾಸ್ ರಾವ್, ಹಿರಿಯ ಅಧಿಕಾರಿ ಬಿ. ವಿಶ್ವನಾಥ್, ಸ್ಥಳೀಯ ಮುಖಂಡರಾದ ಜಿ. ಧರ್ಮಪ್ರಸಾಧ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

     ೧೨ ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಸಂಗ್ರಹ ಘಟಕ: 

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಪ್ರಸ್ತುತ ೧೨ ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು ಕಾರ್ಯಾಂಭಗೊಳ್ಳಲಿದೆ. ಇದೀಗ ಅಗತ್ಯವಿರುವ ಆಕ್ಸಿಜನ್ ಬಳ್ಳಾರಿಯಿಂದ ಪೂರೈಕೆಯಾಗುತ್ತಿದ್ದು, ಹೆಚ್ಚಿನ ಅಗತ್ಯ ಕಂಡು ಬಂದಲ್ಲಿ ವಿಐಎಸ್‌ಎಲ್ ಎಂಎಸ್‌ಪಿಎಲ್ ಹಾಗೂ ಸದರನ್ ಗ್ಯಾಸ್ ಲಿಮಿಟೆಡ್‌ಗಳಿಂದ ಪೂರೈಕೆ ಮಾಡಿಕೊಳ್ಳಲಾಗುವುದು. 
                                                                - ಕೆ.ಬಿ ಶಿವಕುಮಾರ್, ಜಿಲ್ಲಾಧಿಕಾರಿ, ಶಿವಮೊಗ್ಗ