Thursday, September 3, 2020

ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಗಳ ಕಣ್ಣಂಚಿನಲ್ಲಿ ಲೀನವಾದ ಮಾಜಿ ಶಾಸಕ

ಬುಧವಾರ ರಾತ್ರಿ ನಿಧನ ಹೊಂದಿದ ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿರುವ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು.
ಭದ್ರಾವತಿ, ಸೆ. ೩: ಬುಧವಾರ ರಾತ್ರಿ ನಿಧನ ಹೊಂದಿದ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳ ಕಣ್ಣಂಚಿನಲ್ಲಿ ಲೀನವಾಗಿದ್ದು, ಗುರುವಾರ ಸಂಜೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿತು.
    ಅಪ್ಪಾಜಿಯವರ ಅಂತಿಮ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡ ಕಾರಣ ಬೆಳಿಗ್ಗೆ ೧೧ ಗಂಟೆಗೆ ನಡೆಯಬೇಕಿದ್ದ ಅಂತ್ಯಕ್ರಿಯೆ ವಿಳಂಬವಾಗಿದ್ದು, ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ಅಪ್ಪಾಜಿಯವರ ತೋಟ ತಲುಪುವಲ್ಲಿ ಸಂಜೆಯಾಯಿತು. ಈ ನಡುವೆ ಬಾರಿ ಮಳೆಯಿಂದಾಗಿ ಮತ್ತಷ್ಟು ವಿಳಂಬವಾಯಿತು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಗಿದ್ದು, ಪುತ್ರ, ನಗರಸಭೆ ಸದಸ್ಯ ಎಂ.ಎ ಅಜಿತ್ ಅಗ್ನಿ ಸ್ಪರ್ಶ ನೆರವೇರಿಸಿದರು.
       ಅಪ್ಪಾಜಿ ಮೃತಪಟ್ಟ ನಂತರ ಅವರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಆದರೂ ಸಹ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಬೆಳಿಗ್ಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವರ ನಿವಾಸದಲ್ಲಿ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕೊರೋನಾ ಭೀತಿ ನಡುವೆಯೂ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಹೆಚ್ಚಿನ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.


ಸೆ.೪ರಂದು ರೈತ ಸಂಘದಿಂದ ಸಂತಾಪ ಸೂಚಕ ಸಭೆ

ಭದ್ರಾವತಿ, ಸೆ. ೩: ಜನಸಾಮಾನ್ಯರ ಧ್ವನಿ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಸೆ.೪ರಂದು ಸಂತಾಪ ಸೂಚಕ ಸಭೆ ಹಮ್ಮಿಕೊಳ್ಳಲಾಗಿದೆ.
         ಹಳೇನಗರದ ಪತ್ರಿಕಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸಭೆ ನಡೆಯಲಿದ್ದು, ಸಂಘದ ತಾಲೂಕು ಅಧ್ಯಕ್ಷ ಎಚ್.ಪಿ ಹಿರಿಯಣ್ಣಯ್ಯ, ಪ್ರಧಾನ ಕಾರ್ಯದರ್ಶಿ ರಾಮಚಂದ್ರರಾವ್ ಘೋರ್ಪಡೆ ಸಭೆ ಯಶಸ್ವಿಗೊಳಿಸಲು ಕೋರಿದ್ದಾರೆ.


ಸೆ.೫ರಂದು ಶಿಕ್ಷಕರ ದಿನಾಚರಣೆ

ಭದ್ರಾವತಿ, ಸೆ. ೫: ರಾಜ್ಯಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಸೆ.೫ರಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಸರಳವಾಗಿ ಹಮ್ಮಿಕೊಳ್ಳಲಾಗಿದೆ.
         ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿವಮೊಗ್ಗ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಕೋರಿದ್ದಾರೆ.