Friday, September 4, 2020

ಶಿಕ್ಷಕರ ದಿನಾಚರಣೆ : ೩ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

ಚಂದ್ರಶೇಖರಪ್ಪ ಚಕ್ರಸಾಲಿ

ಭದ್ರಾವತಿ, ಸೆ. ೪: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಶಿಕ್ಷಕರ ದಿನಾಚರಣೆ ಸರಳವಾಗಿ ನಡೆಯುತ್ತಿದ್ದು, ಈ ನಡುವೆ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿರುವ ತಾಲೂಕಿನ ೩ ಶಿಕ್ಷಕರಿಗೆ ಈ ಬಾರಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
      ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ಹನುಮಂತನಗರ ಎ.ಕೆ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರಪ್ಪ ಚಕ್ರಸಾಲಿಯವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಚಕ್ರಸಾಲಿಯವರು ಮೂತಃ ಹಿರೇಕೆರೆ ತಾಲೂಕಿನ ರಟ್ಟೇಹಳ್ಳಿ ಗ್ರಾಮದವರಾಗಿದ್ದಾರೆ. ಕುಂಬಾರಿಕೆ ವೃತ್ತಿ ಕುಟುಂಬದಲ್ಲಿ ಹುಟ್ಟಿ ಬೆಳೆದ ಇವರು ಬಡತನದಲ್ಲಿ ವಿದ್ಯಾಭ್ಯಾಸ ಪೂರೈಸಿ ೧೯೯೮ರಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡರು. ಆರಂಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
        ಶಿಕ್ಷಕ ವೃತ್ತಿ ಜೊತೆಗೆ ಜಾನಪದ ಕಲೆಯನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದು, ಗೀಗೀ ಪದ, ಭಜನಾ ಪದ, ಡೊಳ್ಳು ಕುಣಿತ, ನಾಟಕ ಸೇರಿದಂತೆ ಇನ್ನಿತರ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತಿ ಹೊಂದಿದ್ದಾರೆ.  ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಿ. ಮಂಜಪ್ಪ

      ಹಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಾಲೂಕಿನ ಕಾಳಿಂಗನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯೋಪಾಧ್ಯಾಯ ಬಿ. ಮಂಜಪ್ಪರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಮಂಜಪ್ಪರವರು ೧೯೮೫ರಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ೧೯೮೫ ರಿಂದ ೧೯೯೩ರವರೆಗೆ ಕರ್ತವ್ಯ ನಿರ್ವಹಿಸಿದ್ದು, ನಂತರ ೧೯೯೩ ರಿಂದ ಇಲ್ಲಿಯವರೆಗೆ ಭದ್ರಾವತಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
       ಇವರು ಚಿತ್ರಕಲೆ, ಸಂಗೀತ, ರಂಗಕಲೆ, ಕ್ರೀಡೆಗಳಲ್ಲಿ ಆಸಕ್ತಿ ಹೊಂದಿದ್ದು, ಬೆಂಗಳೂರಿನ ಪ್ರತಿಭಾ ಪರಿಷತ್ ವತಿಯಿಂದ ೨೦೧೦ರಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ, ೨೦೦೩ರಲ್ಲಿ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, ಜನಗಣತಿ ಸೇವೆಗಾಗಿ ೨೦೦೧ರಲ್ಲಿ ರಜತ ಪದಕ, ೨೦೧೦ರಲ್ಲಿ ರಾಜ್ಯಮಟ್ಟದ ಕನಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
      

   ಕೆ. ಜ್ಯೋತಿ
ಪ್ರೌಢಶಾಲಾ ವಿಭಾಗದಲ್ಲಿ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ಕೆ. ಜ್ಯೋತಿಯವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.  ಜ್ಯೋತಿಯವರು ೨೦೦೯ರಲ್ಲಿ ಈ ಶಾಲೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಇವರು ಉತ್ತಮ ಕ್ರೀಡಾಪಟು ಆಗಿದ್ದು,  ೨೦೦೦ ರಿಂದ ೨೦೦೩ರ ವರೆಗೆ ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ನಾಯಕಿಯಾಗಿದ್ದರು. ೮ ರಾಷ್ಟ್ರಮಟ್ಟದ, ೧೫ ರಾಜ್ಯಮಟ್ಟದ ಮತ್ತು ೨೫ ಜಿಲ್ಲಾ ಮಟ್ಟದ ಪ್ರಶಸ್ತಿ ಹಾಗು ೩ ವಿಶ್ವ ವಿದ್ಯಾನಿಲಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಇವರು ಈ ಶಾಲೆಯಲ್ಲಿ ಕರ್ತವ್ಯ ಆರಂಭಿಸಿದ ನಂತರ ಮಕ್ಕಳನ್ನು ಹೆಚ್ಚಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಮೂಲಕ ೩ ರಾಷ್ಟ್ರಮಟ್ಟದ, ೧೫ ರಾಜ್ಯಮಟ್ಟದ ಹಾಗೂ ೩೦ ಜಿಲ್ಲಾಮಟ್ಟದ ಹಾಗು ೫೦ಕ್ಕೂ ಹೆಚ್ಚು ತಾಲೂಕು ಮಟ್ಟದ ಪ್ರಶಸ್ತಿಗಳು ಶಾಲೆಗೆ ಲಭಿಸಿವೆ.

ಎ.ವಿ ನಂಜಯ್ಯ ನಿಧನ

ಎ.ವಿ ನಂಜಯ್ಯ
ಭದ್ರಾವತಿ, ಸೆ. ೪: ಎಂಪಿಎಂ ಕಾರ್ಖಾನೆಯ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕ ಸಿದ್ದಾರೂಢ ನಗರದ ನಿವಾಸಿ ಎ.ವಿ ನಂಜಯ್ಯ(೬೪) ಶುಕ್ರವಾರ ನಿಧನ ಹೊಂದಿದರು.
        ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹೊಂದಿದ್ದರು. ಶನಿವಾರ ಬೆಳಿಗ್ಗೆ ತಾಲೂಕಿನ ಗುಡ್ಡದ ನೇರಳೆಕೆರೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮೃತರ ನಿಧನಕ್ಕೆ ಎಂಪಿಎಂ ಕಾರ್ಖಾನೆಯ ಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷ ಪಟೇಲ್ ಸಿದ್ದಲಿಂಗಪ್ಪ ನಿಧನ

ಪಟೇಲ್ ಸಿದ್ದಲಿಂಗಪ್ಪ
ಭದ್ರಾವತಿ, ಸೆ. ೪: ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷರಾದ ಸಿಂಗನ ಮನೆ ಗ್ರಾಮದ ನಿವಾಸಿ ಪಟೇಲ್ ಸಿದ್ದಲಿಂಗಪ್ಪ(೯೦) ಶುಕ್ರವಾರ ನಿಧನ ಹೊಂದಿದರು.
   ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದಲಿಂಗಪ್ಪನವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದು, ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಸಿಂಗನಮನೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ, ಗ್ರಾಮದ ಮೊದಲ ಪ್ರಧಾನರಾಗಿ ಸೇವೆ ಸಲ್ಲಿಸಿದ್ದರು.
     ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ, ಕುವೆಂಪು ವಿ.ವಿ ಆರಂಭಕ್ಕೆ ಹೆಚ್ಚಿನ ಶ್ರಮ ವಹಿಸಿದ್ದರು. ಅಂದಿನ ಶಿಕ್ಷಣ ಸಚಿವರಾಗಿದ್ದ ಎ.ಆರ್ ಬದರಿನಾರಾಯಣ್‌ರವರ ಒಡನಾಡಿಯಾಗಿದ್ದರು.
    ಸಿದ್ದಲಿಂಗಪ್ಪನವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಸಿಂಗನಮನೆ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಟಿ.ಡಿ ಶಶಿಕುಮಾರ್, ಜಿಲ್ಲಾ ಗೌರವಾಧ್ಯಕ್ಷ ಜಿ.ಆರ್ ತ್ಯಾಗರಾಜ್, ಸಾಧನ ಮಹಿಳಾ ವೇದಿಕೆ ಅಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಸಿಂಗನಮನೆ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗು ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.