Wednesday, September 9, 2020

ಗಾಂಜಾ ಮಾರಾಟ : ನಾಲ್ವರ ಬಂಧನ

ಭದ್ರಾವತಿ, ಸೆ. ೯: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಯುವಕರನ್ನು ಹಳೇನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ.
      ಹಳೇನಗರದ ಭೂತನಗುಡಿಯ ಸರ್ಕಾರಿ ಆಸ್ಪತ್ರೆ ಬಳಿ ನಿವಾಸಿ ಇಂಜಿನಿಯರ್ ವಿದ್ಯಾರ್ಥಿ ಶೇಖ್ ಅಬೂಬಕರ್ ಸಿದ್ದಿಕ್(೨೨), ವೆಲ್ಡಿಂಗ್ ಕೆಲಸ ಮಾಡುವ ಜಾಫರ್ ಸಾಧಿಕ್(೨೪), ದುರ್ಗಿ ನಗರದ ನಿವಾಸಿ ಸಾಧಿಕ್ ಪಾಷಾ(೩೧) ಮತ್ತು ಗಾರೆ ಕೆಲಸ ಮಾಡುವ ಮೊಮಿನ್ ಮೊಹಲ್ಲಾ ನಿವಾಸಿ ತೋಫಿಕ್(೨೩) ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.  
       ಈ ನಾಲ್ವರು ಹೊಳೆಹೊನ್ನೂರು ರಸ್ತೆಗೆ ಸಂಪರ್ಕಗೊಂಡಿರುವ ಹಳೇಸೀಗೆಬಾಗಿ ರಸ್ತೆಯಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಬಂಧಿತರಿಂದ ಸುಮಾರು ೨೦ ಸಾವಿರ ರು. ಮೌಲ್ಯದ ೧ ಕೆ.ಜಿ ೨೫೦ ಗ್ರಾಂ ತೂಕದ ಗಾಂಜಾ ಸೊಪ್ಪು, ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರವಾಹನಗಳು ಸೇರಿದಂತೆ ಒಟ್ಟು ೨,೦೫,೦೦೦ ರು. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ.


ವಿದ್ಯಾಗಮ ಯೋಜನೆ ಕುರಿತು ಪ್ರಗತಿ ಪರಿಶೀಲನೆ ಸಭೆ


ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಭಾಂಗಣದಲ್ಲಿ ಬುಧವಾರ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಭದ್ರಾವತಿ, ಸೆ. ೯: ಶಾಲಾ-ಕಾಲೇಜುಗಳು ಪುನರ್ ಆರಂಭಗೊಳ್ಳುವವರೆಗೂ ವಿದ್ಯಾರ್ಥಿಗಳನ್ನು ಸಕ್ರಿಯವಾಗಿರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಜಾರಿಗೆ ತಂದಿರುವ ವಿದ್ಯಾಗಮ ವಿನೂತನ ಯೋಜನೆಯ ಪ್ರಗತಿ ಕುರಿತು ಬುಧವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
       ಈಗಾಗಲೇ ಈ ಯೋಜನೆ ತಾಲೂಕಿನ ಬಹುತೇಕ ಕಡೆ ಯಶಸ್ವಿಗೊಂಡಿದ್ದು, ಯೋಜನೆಯ ಸಾಧಕ-ಬಾಧಕಗಳ ಕುರಿತಂತೆ ಇಲಾಖೆಗೆ ಪತ್ರಗಳು ಬಂದಿವೆ. ಈ ಎಲ್ಲಾ ಬೆಳವಣಿಗೆಗಳನ್ನು ಕುರಿತು ಹಾಗು ಮುಂದೆ ರೂಪಿಸಿಕೊಳ್ಳಬಹುದಾದ ಕ್ರಮಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
        ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರಾದ ಆಡಳಿತ ವಿಭಾಗದ ಎನ್.ಎಂ ರಮೇಶ್, ಅಭಿವೃದ್ಧಿ ಯೋಜನೆ ವಿಭಾಗದ ಸುಮಂಗಳ ಪಿ. ಕುಚಿನಾಡ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
      ತಾಲೂಕಿನ ಎಲ್ಲಾ ಸಿಆರ್‌ಪಿ, ಬಿಆರ್‌ಸಿ ಮತ್ತು ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪೌರಾಯುಕ್ತರಿಗೂ ಕೊರೋನಾ : ನಗರಸಭೆ ಸೀಲ್‌ಡೌನ್


ಭದ್ರಾವತಿ ನಗರಸಭೆ ಆಡಳಿತ ಕಛೇರಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬುಧವಾರ ಮಧ್ಯಾಹ್ನ ಸೀಲ್‌ಡೌನ್ ಮಾಡಲಾಗಿದೆ.
ಭದ್ರಾವತಿ, ಸೆ. ೯: ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಹಾಮಾರಿ ಸರ್ಕಾರಿ ಕಛೇರಿಗಳನ್ನು ಸಹ ಆವರಿಸಿಕೊಳ್ಳುತ್ತಿದೆ. ಇದೀಗ ನಗರಸಭೆ ಆಡಳಿತ ಕಛೇರಿ ಸಹ ಸೀಲ್‌ಡೌನ್ ಮಾಡಲಾಗಿದೆ.
      ನಗರಸಭೆ ಪೌರಾಯುಕ್ತ ಮನೋಹರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಸಹ ಸೋಂಕಿಗೆ ಒಳಗಾಗಿದ್ದು,  ಈ ಹಿನ್ನಲೆಯಲ್ಲಿ ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್‌ರವರ ಸೂಚನೆ ಮೇರೆಗೆ ಬುಧವಾರ ಮಧ್ಯಾಹ್ನ ನಗರಸಭೆ ಕಛೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.
     ಕೆಲವು ದಿನಗಳ ಹಿಂದೆ ಪೌರಾಯುಕ್ತರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ಅನಾರೋಗ್ಯದ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳವಾರ ಮಧ್ಯಾಹ್ನ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಪಾಲ್ಗೊಂಡಿದ್ದರು.
        ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕ್ರಮ :
      ಅಧಿಕಾರಿಯಾದರೂ ಸಹ ನಗರದಲ್ಲಿ ಸಾಮಾನ್ಯ ಜನರೊಂದಿಗೆ ಸಾಮಾನ್ಯ ವ್ಯಕ್ತಿಯಂತೆ ಗುರುತಿಸಿಕೊಂಡಿರುವ ಮನೋಹರ್‌ರವರು ಎಲ್ಲಾ ಕೆಲಸಗಳ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ನಿರಂತರವಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದಾರೆ. ಬಡವರ ಬಗ್ಗೆ ಹೆಚ್ಚಿನ ಕಾಳಜಿವಹಿಸಿದ್ದ ಪೌರಾಯುಕ್ತರು ಕಂಟೈನ್ಮೆಂಟ್ ವಲಯಗಳಲ್ಲಿನ ಕಡುಬಡವರ ನೆರವಿಗೆ ಮುಂದಾಗಿದ್ದರು.  ಕೊರೋನಾ ವಾರಿರ್ಯಸ್ ರೀತಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಾಯುಕ್ತರು ಶೀಘ್ರ ಗುಣಮುಖರಾಗಲಿ ಎಂದು ನಗರದ ನಾಗರೀಕರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
      ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್ ಸಹ ಈಗಾಗಲೇ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದಾರೆ. ಈ ಹಿಂದೆ ತಾಲೂಕು ಕಛೇರಿಯಲ್ಲೂ ಮಹಾಮಾರಿ ಕಾಣಿಸಿಕೊಂಡಿದ್ದು, ಸುಮಾರು ೧೦ಕ್ಕೂ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮಿನಿ ವಿಧಾನಸೌಧ ಸಹ ಸೀಲ್‌ಡೌನ್ ಮಾಡಲಾಗಿತ್ತು.  ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಛೇರಿಗಳಲ್ಲೂ ಸಹ ಸೋಂಕು ಕಾಣಿಸಿಕೊಳ್ಳುತ್ತಿರುವುದು ನಗರದ ನಾಗರೀಕರನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

ನಂಜಮ್ಮ ನಿಧನ

ನಂಜಮ್ಮ
ಭದ್ರಾವತಿ, ಸೆ. ೯: ನಗರದ ಛಲವಾದಿ ಮಹಾಸಭಾ ಉಪಾಧ್ಯಕ್ಷ, ಎಂಪಿಎಂ ಕಾರ್ಮಿಕ ಲೋಕೇಶ್‌ರವರ ತಾಯಿ ನಂಜಮ್ಮ ಬುಧವಾರ ನಿಧನ ಹೊಂದಿದರು.
       ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಂಜಮ್ಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇಬ್ಬರು ಪುತ್ರರನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ನಗರದ ಬುಳ್ಳಾಪುರದಲ್ಲಿರುವ ಶ್ರೀ ಸತ್ಯಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ಛಲವಾದಿ ಮಹಾಸಭಾ, ಪ್ರಗತಿಪರ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.