Thursday, September 17, 2020

ಬಾರಿ ಗಾತ್ರದ ಹೆಬ್ಬಾವು ಸೆರೆ

ಭದ್ರಾವತಿ ಹಳೇಬುಳ್ಳಾಪುರದ ನಿವಾಸಿ ಸ್ನೇಕ್ ಜೋಯಲ್ ಸ್ನೇಹಿತರ ತಂಡ ತಾಲೂಕಿನ ಸಮೀಪದ ಉಂಬ್ಳೆಬೈಲು ಗ್ರಾಮದಲ್ಲಿ ಬಾರಿ ಗಾತ್ರದ ಹೆಬ್ಬಾವು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದೆ.

ಭದ್ರಾವತಿ, ಸೆ. ೧೭: ನಗರದ ಹಳೇಬುಳ್ಳಾಪುರದ ನಿವಾಸಿ ಸ್ನೇಕ್ ಜೋಯಲ್ ಸ್ನೇಹಿತರ ತಂಡ ತಾಲೂಕಿನ ಸಮೀಪದ ಉಂಬ್ಳೆಬೈಲು ಗ್ರಾಮದಲ್ಲಿ ಬಾರಿ ಗಾತ್ರದ ಹೆಬ್ಬಾವು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದೆ.
     ಮನೆಯೊಂದರಲ್ಲಿ ಅಡಗಿದ್ದ ಸುಮಾರು ೧೫ ಅಡಿ ಉದ್ದದ, ೩೫ ಕೆ.ಜಿ ತೂಕದ ಹೆಬ್ಬಾವು ಸೆರೆ ಹಿಡಿಯಲಾಗಿದೆ. ಹೆಬ್ಬಾವು ಕಂಡು ಭಯಭೀತರಾಗಿದ್ದ ಮನೆಯವರು ತಕ್ಷಣ ಸ್ನೇಕ್ ಜೋಯಲ್‌ಗೆ ಕರೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಜೋಯಲ್ ಸ್ನೇಹಿತರ ತಂಡ ಸುರಕ್ಷಿತವಾಗಿ ಸೆರೆ ಹಿಡಿದಿದೆ.
      ಜೋಯಲ್ ಸ್ನೇಹಿತರಾದ ಸತ್ಯ, ಡೆನ್ನಿಸ್, ಸಂತು, ತಿಲಕ್, ಜಾಯ್ಸನ್, ಅಭಿ ಮತ್ತು ಲೋಯಿತಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಲೂಕು ಆಡಳಿತದಿಂದ ವಿಶ್ವಕರ್ಮ ದಿನಾಚರಣೆ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಗುರುವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ವಿಶ್ವಕರ್ಮ ದಿನಾಚರಣೆ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಸೆ. ೧೭: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಗುರುವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ವಿಶ್ವಕರ್ಮ ದಿನಾಚರಣೆಯನ್ನು ಈ ಬಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
     ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಶಿರಸ್ತೇದಾರ್ ಮಂಜಾನಾಯ್ಕ, ಕಂದಾಯಾಧಿಕಾರಿ ಪ್ರಶಾಂತ್, ವಿಶ್ವಕರ್ಮ ಸಮಾಜದ ಪ್ರಮುಖರಾದ ಕೃಷ್ಣಾನಂದ ರಾಯ್ಕರ್, ವೆಂಕಟೇಶ್, ಕೃಷ್ಣಪ್ಪ, ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾಮಾನ್ಯ ದೈಹಿಕ ಶಿಕ್ಷಕನೊಬ್ಬ ಜ್ಯೂನಿಯರ್ ವಿಷ್ಣುವರ್ಧನ್

ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್
* ಅನಂತಕುಮಾರ್
ಭದ್ರಾವತಿ: ಶಿಕ್ಷಕ ವೃತ್ತಿಯೊಂದಿಗೆ ಕಲಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಕಾಗದನಗರ ಪ್ರೌಢಶಾಲೆ ದೈಹಿಕ ಶಿಕ್ಷಕ ಮಂಜುನಾಥ್ ಜ್ಯೂನಿಯರ್ ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
       ಚಿನ್ನನಾಗಯ್ಯ ಮತ್ತು ಮುತ್ಯಾಲಮ್ಮನವರ ಪುತ್ರನಾಗಿ ೧೯೬೪ರಲ್ಲಿ ಜನಿಸಿದ ಮಂಜುನಾಥ್ ೧೯೯೦ ರಿಂದ ಕಾಗದ ನಗರ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೈಹಿಕ ಶಿಕ್ಷಕರಾಗಿದ್ದರೂ ಸಹ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ರವರ  ವೇಷಭೂಷಣ, ನಟನೆ, ನೃತ್ಯ ಮತ್ತು ಧ್ವನಿ ಅನುಕರಣೆ ಮೂಲಕ ಕಳೆದ ಹಲವಾರು ವರ್ಷಗಳಿಂದ ಜ್ಯೂನಿಯರ್ ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
        ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ, ಶಿಕ್ಷಕರ ದಿನಾಚರಣೆ ಸೇರಿದಂತೆ ಹಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಹಾಗೂ ಶುಭಾ ಸಮಾರಂಭಗಳಲ್ಲಿ ತಮ್ಮ ಪ್ರದರ್ಶನ ನೀಡುವ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಲ್ಲದೆ ರಾಜ್ಯದ ಮೂಲೆ ಮೂಲೆಗಳಲ್ಲಿ ತಮ್ಮ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿದ್ದಾರೆ.


ಜ್ಯೂನಿಯರ್ ವಿಷ್ಣುವರ್ಧನ್ ವೇಷದಲ್ಲಿ ಅಪೇಕ್ಷ ಮಂಜುನಾಥ್
   ಮಂಜುನಾಥ್‌ರವರು ಬಹುತೇಕ ಪ್ರದರ್ಶನಗಳನ್ನು ಉಚಿತವಾಗಿ ನೀಡಿದ್ದಾರೆ. ಕೆಲವು ಕಾರ್ಯಕ್ರಮಗಳಲ್ಲಿ ಪಡೆದ ಹಣವನ್ನು ತಮ್ಮ ಸ್ವಂತ ಬಳಕೆಗೆ ಬಳಸದೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಜೊತೆಗೆ ರಾಜ್ಯದ ಹಾಗೂ ಹೊರ ರಾಜ್ಯದ ಕಲಾವಿದರನ್ನು ಗುರುತಿಸಿ ಪ್ರತಿವರ್ಷ ಯುಗಾದಿ ಪುರಾಸ್ಕಾರ ಹೆಸರಿನಲ್ಲಿ ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ.
       ಅಪೇಕ್ಷ ನೃತ್ಯ ಕಲಾ ವೃಂದ ಸ್ಥಾಪಿಸುವ ಮೂಲಕ ಹಲವಾರು ವರ್ಷಗಳಿಂದ ಉಚಿತವಾಗಿ ನೃತ್ಯ ತರಬೇತಿ ನೀಡುತ್ತಿದ್ದಾರೆ. ಇವರಿಂದ ತರಬೇತಿ ಪಡೆದ ನೂರಾರು ವಿದ್ಯಾರ್ಥಿಗಳು ಉತ್ತಮ ನೃತ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.  ಪ್ರಸ್ತುತ ಅಪೇಕ್ಷ ಮಂಜುನಾಥ್ ಎಂಬ ಹೆಸರಿನಿಂದಲೇ ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ.
        ಕಲಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿರುವ ಮಂಜುನಾಥ್,  ರಾಜ್ಯಮಟ್ಟದ ಅಥ್ಲೆಟಿಕ್ಸ್ ಮತ್ತು ಕಬಡ್ಡಿ ಕ್ರೀಡಾಪಟು ಹಾಗು ತೀರ್ಪುಗಾರರಾಗಿದ್ದಾರೆ. ಅಂತರ್ ಕಾಲೇಜು ಮಟ್ಟದ ಕಬಡ್ಡಿ ಪಂದ್ಯಾವಳಿಗಳಲ್ಲಿ ಚಿನ್ನ ಮತ್ತು ಕಂಚಿನ ಪದಕಗಳನ್ನು ಹಾಗೂ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಮಿನಿಸ್ಟರಿ ಆಫ್ ಎಜುಕೇಷನ್ ಅಂಡ್ ಸೋಷಿಯಲ್ ವೆಲ್‌ಫೇರ್ ನಿಂದ ೩ ಬಾರಿ ಪ್ರಶಸ್ತಿ ಪಡೆದಿದ್ದಾರೆ.
         ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಜೆ.ಪಿ.ಸಮಾಜರತ್ನ ರಾಜ್ಯ ಪ್ರಶಸ್ತಿ, ನೃತ್ಯ ಶ್ರೀ ಪ್ರಶಸ್ತಿ, ಡಾ. ಅಂಬೇಡ್ಕರ್ ಸದ್ಭಾವನಾ ರಾಜ್ಯ ಪ್ರಶಸ್ತಿ, ಚಿತ್ರ ಶ್ರೀ ರಾಜ್ಯ ಪ್ರಶಸ್ತಿ, ಬಸವಜ್ಯೋತಿ ರಾಜ್ಯ ಪ್ರಶಸ್ತಿ, ಕಲಾರತ್ನ ಪ್ರಶಸ್ತಿ, ಸುವರ್ಣ ಕರ್ನಾಟಕ ಕನ್ನಡಿಗ ಕೇರಳ ರಾಜ್ಯ ಪ್ರಶಸ್ತಿ, ನೃತ್ಯ ಕಲಾ ಚೇತನ ಪ್ರಶಸ್ತಿ, ಪತಂಜಲಿ ರತ್ನ ರಾಜ್ಯ ಪ್ರಶಸ್ತಿ, ಸುವರ್ಣ ಕರ್ನಾಟಕ ಸೇವಾ ಪ್ರಶಸ್ತಿ ಮತ್ತು ಪ್ರೊ.ಬಿ.ಕೃಷ್ಣಪ್ಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ. ನೃತ್ಯಪ್ರಿಯ, ನೃತ್ಯ ಆರಾಧಕ, ಆದರ್ಶ ಶಿಕ್ಷಕ ರತ್ನ ಮತ್ತು ನಗೆ ನಾಟ್ಯ ಚೇತನ ಶ್ರೀ ಬಿರುದುಗಳು ಲಭಿಸಿವೆ.


ಸಮಾರಂಭ ಒಂದರಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಂದ ಸನ್ಮಾನಿಸಲ್ಪಡುತ್ತಿರುವ ಅಪೇಕ್ಷ ಮಂಜುನಾಥ್
     ಎನ್.ಸಿ.ಸಿ ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಹಲವು ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಲವಾರು ಬಾರಿ ರಕ್ತದಾನ ಸಹ ಮಾಡಿದ್ದಾರೆ.  ಚಂದನ, ಉದಯ, ಝೀ ಕನ್ನಡ ಸೇರಿದಂತೆ ಹಲವು ಟಿ.ವಿ ಚಾನಲ್‌ಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
      ಸಾಹಿತ್ಯ ಕ್ಷೇತ್ರದಲ್ಲೂ ಸೇವೆ ಸಲ್ಲಿಸಬೇಕೆಂಬ ಹಂಬಲದೊಂದಿಗೆ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಹಲವಾರು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರಿಷತ್ ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪ್ರಸ್ತುತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕಳೆದ ಸುಮಾರು ೧ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.  ಒಟ್ಟಾರೆ ಜ್ಯೂನಿಯರ್ ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಒಬ್ಬ ಸಾಮಾನ್ಯ ದೈಹಿಕ ಶಿಕ್ಷಕನೊಬ್ಬ ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ.
       ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ :
    ಚಲನಚಿತ್ರ ನಟ, ಸಾಹಸ ಸಿಂಹ ದಿವಂಗತ ಡಾ. ವಿಷ್ಣುವರ್ಧನ್ ೭೦ನೇ ಜನ್ಮದಿನದ ಅಂಗವಾಗಿ ಸೆ.೧೮ರಂದು ಡಾ. ವಿಷ್ಣು ಸೇವಾ ಸಮಿತಿ ವತಿಯಿಂದ ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
     ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ೯ ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜ್ಯೂನಿಯರ್ ವಿಷ್ಣುವರ್ಧನ್, ಕಲಾವಿದ ಅಪೇಕ್ಷ ಮಂಜುನಾಥ್ ಕೋರಿದ್ದಾರೆ.