Saturday, September 19, 2020

ಟಿ.ಬಿ ಧನಂಜಯ ನಿಧನ

ಟಿ.ಬಿ ಧನಂಜಯ
ಭದ್ರಾವತಿ, ಸೆ. ೧೯: ತಾಲೂಕಿನ ಸಿಂಗನ ಮನೆ ಗ್ರಾಮ ಜಯ ಕರ್ನಾಟಕ ಶಾಖೆ ಅಧ್ಯಕ್ಷ, ಗ್ರಾಮ ಪಂಚಾಯಿತಿ ಸದಸ್ಯ ಟಿ.ಡಿ ಶಶಿಕುಮಾರ್‌ರರ ತಂದೆ ಟಿ.ಬಿ ಧನಂಜಯ(೭೩) ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹೊಂದಿದ್ದರು.  ಕರ್ನಾಟಕ ವಿದ್ಯುತ್ ನಿಗಮ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಶಂಕರಘಟ್ಟದಲ್ಲಿ ನೆರವೇರಿತು.
       ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಸಿಂಗನಮನೆ ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್, ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷ ತ್ಯಾಗರಾಜ್, ಗ್ರಾ.ಪಂ. ಅಧ್ಯಕ್ಷೆ ಆರ್. ಉಮಾ, ದೀನ ಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ರಮೇಶ್, ಶಂಕರ್ ರೈಸ್ ಮಿಲ್ ಮಾಲೀಕ ನಂದೀಶ್‌ಕುಮಾರ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಸರ್.ಎಂ.ವಿ ಸ್ಮರಣಾರ್ಥ ದತ್ತಿ ಕಾರ್ಯಕ್ರಮ

ಭದ್ರಾವತಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಸರ್.ಎಂ ವಿಶ್ವೇಶ್ವರಯ್ಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಈರಮ್ಮ ದಿವಂಗತ ವೀರಭದ್ರಪ್ಪ ದತ್ತಿ ಕಾರ್ಯಕ್ರಮವನ್ನು ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಸ್ ಸಿದ್ದಲಿಂಗಮೂರ್ತಿ ಉದ್ಘಾಟಿಸಿದರು.
ಭದ್ರಾವತಿ, ಸೆ. ೧೯: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗು ಪ್ರೌಢ ಶಾಲಾ ವಿಭಾಗದ ಸಹಯೋಗದೊಂದಿಗೆ ಶನಿವಾರ ಸರ್.ಎಂ ವಿಶ್ವೇಶ್ವರಯ್ಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಈರಮ್ಮ ದಿವಂಗತ ವೀರಭದ್ರಪ್ಪ ದತ್ತಿ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಸ್ ಸಿದ್ದಲಿಂಗಮೂರ್ತಿ ಉದ್ಘಾಟಿಸಿದರು.
    ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ ಕಾರ್ಯದಶಿ ಸಿ. ಚನ್ನಪ್ಪ ಆಶಯ ನುಡಿಗಳನ್ನಾಡಿದರು. ಆಧುನಿಕ ಸಮಾಜಕ್ಕೆ ಸರ್‌ಎಂವಿರವರ ಕೊಡುಗೆ ಕುರಿತು ಉಪನ್ಯಾಸ ನೀಡಲಾಯಿತು.
    ದತ್ತಿ ದಾನಿ, ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ಕರಿಗೌಡ್ರ ನಾಗರಾಜಪ್ಪ ಆರುಂಡಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪರಿಷತ್ ಪ್ರಮುಖರಾದ ಧನಂಜಯ, ಯು. ಮಹಾದೇವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಂಎಸ್‌ಎಂಇ ನಿರ್ದೇಶಕರಾಗಿ ಉದ್ಯಮಿ ಎಚ್.ಸಿ ರಮೇಶ್ ನೇಮಕ

ಭದ್ರಾವತಿ ಬಿಜೆಪಿ ಮುಖಂಡ, ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಗೆ ನಿರ್ದೇಶಕರನ್ನಾಗಿ ನೇಮಕಗೊಳಿಸಿದ್ದು, ಅವರಿಗೆ ಸಂಸ್ಥೆಯ ಅಧ್ಯಕ್ಷ ಹರಿನಾರಾಯಣ ರಾಜ್‌ಬಾರ್  ಆದೇಶ ಪತ್ರ ವಿತರಿಸಿದರು.
ಭದ್ರಾವತಿ, ಸೆ. ೧೯: ಬಿಜೆಪಿ ಮುಖಂಡ, ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಗೆ ನಿರ್ದೇಶಕರನ್ನಾಗಿ ನೇಮಕಗೊಳಿಸಲಾಗಿದೆ. 
ಕೇಂದ್ರ ಸಚಿ ನಿತಿನ್ ಗಡ್ಕರ್‌ರವರ ಆದೇಶದ ಮೇರೆಗೆ ಸಂಸ್ಥೆಯ ಅಧ್ಯಕ್ಷ, ಉತ್ತರ ಪ್ರದೇಶದ ಲೋಕಸಭಾ ಸದಸ್ಯ ಹರಿನಾರಾಯಣ ರಾಜ್‌ಬಾರ್ ೩ ವರ್ಷಗಳ ಅವಧಿಗೆ ರಮೇಶ್‌ರವರನ್ನು ನಿರ್ದೇಶಕರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. 
ಎಚ್.ಸಿ ರಮೇಶ್‌ರವರು ನಗರದ ಹಿರಿಯ ಕ್ರೀಡಾಪಟು ರಾಷ್ಟ್ರ ಪ್ರಶಸ್ತಿ ವಿಜೇತ ಎಚ್.ಸಿ ಚನ್ನಯ್ಯರವರ ಪುತ್ರರಾಗಿದ್ದು, ಆರಂಭದಿಂದಲೂ ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿಸಿಕೊಂಡು ನಂತರ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಇವರು ಪಕ್ಷಕ್ಕೆ ಸಲ್ಲಿಸಿರುವ ಪ್ರಾಮಾಣಿಕ ಸೇವೆ ಹಾಗು ಉದ್ಯಮ ಕ್ಷೇತ್ರದಲ್ಲಿ ಹೊಂದಿರುವ ಅನುಭವ ಪರಿಗಣಿಸಿ ನಿರ್ದೇಶಕರನ್ನಾಗಿ ನೇಮಕಗೊಳಿಸಲಾಗಿದೆ ಎನ್ನಲಾಗಿದೆ. 
ನಿರ್ದೇಶಕರಾಗಿ ನೇಮಕಗೊಳ್ಳಲು ಕಾರಣಕರ್ತರಾಗಿರುವ ಕೇಂದ್ರ ಸಚಿವರಿಗೆ, ಪಕ್ಷದ ವರಿಷ್ಠರಿಗೆ, ಕಾರ್ಯಕರ್ತರಿಗೆ ಎಚ್.ಸಿ ರಮೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. 
ಸೆ.೨೦ರಂದು ಎಚ್.ಸಿ ರಮೇಶ್ ನಗರಕ್ಕೆ ಆಗಮನ: 
ಎಂಎಸ್‌ಎಂಇ ನಿರ್ದೇಶಕರಾಗಿ ನೇಮಕಗೊಂಡಿರುವ ಎಚ್.ಸಿ ರಮೇಶ್‌ರವರಿಗೆ ನಗರದ ಸ್ನೇಹಿತರು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ. ಸೆ.೨೦ರಂದು ಎಚ್.ಸಿ ರಮೇಶ್‌ರವರು ನಗರಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಅವರನ್ನು ನಗರದ ತರೀಕೆರೆ ರಸ್ತೆ ಮಹಾತ್ಮಗಾಂಧಿ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸಿದ್ದತೆಗಳು ನಡೆದಿವೆ. 
ಮಹಾತ್ಮಗಾಂಧಿ ವೃತ್ತದಿಂದ ನಂತರ ಮೆರವಣಿಗೆ ನಡೆಯಲಿದ್ದು, ನ್ಯೂಟೌನ್ ಲಯನ್ಸ್  ಕ್ಲಬ್‌ನಲ್ಲಿ ಸಂಜೆ ೫.೩೦ಕ್ಕೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಆರೋಗ್ಯವಂತ ಮಗು ದೇಶದ ಆಸ್ತಿ : ಪೋಷಣ್ ಮಾಸಾಚರಣೆಗೆ ಚಾಲನೆ

ಭದ್ರಾವತಿಯಲ್ಲಿ ಭದ್ರಾ ಕಾಲೋನಿ ಮತ್ತು ಬೊಮ್ಮನಕಟ್ಟೆ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರಿಗಾಗಿ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಪೋಷಣ್ ಮಾಸಾಚರಣೆ' ಕಾರ್ಯಕ್ರಮಕ್ಕೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾವಿತ್ರಿ ಚಾಲನೆ ನೀಡಿದು.  
ಭದ್ರಾವತಿ, ಸೆ. ೧೯: ಆರೋಗ್ಯವಂತ ಮಗು ದೇಶದ ಆಸ್ತಿಯಾಗಿದ್ದು, ಈ ಹಿನ್ನಲೆಯಲ್ಲಿ ಮಗುವಿಗೆ ಪೌಷ್ಠಿಕ ಆಹಾರದ ಅಗತ್ಯವಿದೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾವಿತ್ರಿ ಹೇಳಿದರು.
    ಭದ್ರಾ ಕಾಲೋನಿ ಮತ್ತು ಬೊಮ್ಮನಕಟ್ಟೆ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರಿಗಾಗಿ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಪೋಷಣ್ ಮಾಸಾಚರಣೆ' ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ತಾಯಂದಿರು ಗರ್ಭಾವಸ್ಥೆಯಲ್ಲಿ ಇರುವಾಗಲೇ ಪೌಷ್ಟಿಕ ಆಹಾರ ಸೇವಿಸಬೇಕು. ಇದು ಮಗುವಿನ ಬೆಳವಣಿಗೆಗೆ ಸಹಕಾರಿಯಾಗಲಿದೆ  ಎಂದರು.
      ಶಾಲೆಯ ಶಿಕ್ಷಕ ತಿಪ್ಪೇಸ್ವಾಮಿ ಮಾತನಾಡಿ, ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಹಣ ವ್ಯಯ ಮಾಡುತ್ತಿದ್ದು, ಸಾರ್ವಜನಿಕರು ಇಂತಹ ಯೋಜನೆಗಳ ಸದುಪಯೋಗಪಡೆದುಕೊಳ್ಳಲು ಸಹಕಾರಿಯಾಗುವ ನಿಟ್ಟಿನಲ್ಲಿ ಅಂಗನವಾಡಿ ಸಹಾಯಕಿಯರು ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.
      ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ಮಧ್ಯಾಹ್ನದ ಊಟ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿಭಾವಂತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದರು.
     ಶಾಲೆಯ ಶಿಕ್ಷಕರಾದ ವಿಶ್ವನಾಥ್, ಉಷಾರಾಣಿ, ಸುಜಾತ, ಪ್ರಮೀಳಾ, ಸುಶ್ಮಿತಾ, ವಿಜಯಕುಮಾರಿ, ಶಾಬಾನ, ಭದ್ರಾ ಕಾಲೋನಿ ಮತ್ತು ಬೊಮ್ಮನಕಟ್ಟೆ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.