Sunday, September 20, 2020

ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಕೊರೋನಾ ಸೋಂಕು : ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು

ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಸೆ. ೨೦: ಶಾಸಕ ಬಿ.ಕೆ ಸಂಗಮೇಶ್ವರ್‌ಗೂ ಕೊರೋನಾ ಸೋಂಕು ತಗುಲಿದ್ದು, ಭಾನುವಾರ ಸಂಜೆ ದಿಢೀರನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
     ಕಳೆದ ೨ ದಿನಗಳ ಹಿಂದೆ ಮನೆಯಲ್ಲಿ ಕೆಲಸ ಮಾಡುವ ೪ ಮಂದಿ ಕೆಲಸಗಾರರಲ್ಲಿ ಕೊರೋನಾ ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಂಗಮೇಶ್ವರ್ ಮತ್ತು ಸಹೋದರ್ ಬಿ.ಕೆ ಮೋಹನ್ ನಿವಾಸಗಳನ್ನು ಸೀಲ್‌ಡೌನ್ ಮಾಡಲಾಗಿತ್ತು.
     ಈ ನಡುವೆ ಕೊರೋನಾ ತಪಾಸಣೆ ವರದಿಯಲ್ಲಿ ಸಂಗಮೇಶ್ವರ್‌ಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಕಾಮಕೇಳಿ ತಹಸೀಲ್ದಾರ್ ಅಮಾನತ್ತಿಗೆ ಆಗ್ರಹಿಸಿ ಸೆ.೨೧ರಂದು ಪ್ರತಿಭಟನಾ ಧರಣಿ

ಭದ್ರಾವತಿ ನ್ಯೂಟೌನ್ ಗಾಂಧಿ ಉದ್ಯಾನವನದಲ್ಲಿ ಭಾನುವಾರ  ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ, ಪ್ರಗತಿಪರ ಸಂಘಟನೆಗಳು, ವಿವಿಧ ಸಮಾಜಗಳು, ಮಹಿಳಾ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಪೂರ್ವಭಾವಿ ಸಭೆ ನಡೆಸಿದರು.
ಭದ್ರಾವತಿ, ಸೆ. ೨೦: ಪರಿಶಿಷ್ಟ ಜಾತಿ ಮಹಿಳೆಯನ್ನು ಲೌಂಗಿಕವಾಗಿ ಶೋಷಣೆ ಮಾಡಿರುವ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ರವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿ ಸೋಮವಾರ ಬೆಳಿಗ್ಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.
     ಈ ಸಂಬಂಧ ನ್ಯೂಟೌನ್ ಗಾಂಧಿ ಉದ್ಯಾನವನದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಿದ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗ, ಪ್ರಗತಿಪರ ಸಂಘಟನೆಗಳು, ವಿವಿಧ ಸಮಾಜಗಳು, ಮಹಿಳಾ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನಾ ಧರಣಿ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ. ಸಾರ್ವಜನಿಕರು ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
      ಸಭೆಯಲ್ಲಿ ಪ್ರಮುಖರಾದ ಟಿ.ಎಚ್ ಹಾಲೇಶಪ್ಪ, ಎಸ್. ಮಣಿಶೇಖರ್, ಎಚ್. ರವಿಕುಮಾರ್, ಬದರಿನಾರಾಯಣ್, ಎಸ್. ಮಂಜುನಾಥ್, ಕೆ. ಮಂಜುನಾಥ್, ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಹೋರಾಟದ ಮೂಲಕ ಕೈಗಾರಿಕಾ ನಗರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಎಚ್.ಸಿ ರಮೇಶ್

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನ ಸಮಾರಂಭವನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್ ಉದ್ಘಾಟಿಸಿದರು.
ಭದ್ರಾವತಿ, ಸೆ.೨೦ :  ಕೈಗಾರಿಕಾ ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ನಡೆಸುವುದಾಗಿ ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್ ಭರವಸೆ ವ್ಯಕ್ತಪಡಿಸಿದರು.
        ಎಂಎಸ್‌ಎಂಇ ಸಂಸ್ಥೆಗೆ ನೇಮಕಗೊಂಡ ನಂತರ ಅವರು ಮೊದಲ ಬಾರಿಗೆ  ಭಾನುವಾರ  ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರ ಅಭಿನಂದನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
       ವಿಐಎಸ್‌ಎಲ್ ಕಾರ್ಖಾನೆಯ ಕಾರ್ಮಿಕನ ಮಗನಾಗಿ ಹುಟ್ಟಿರುವ ನಾನು ಈ ನಗರದ ಋಣ ತೀರಿಸುವುದು ನನ್ನ ಜವಾಬ್ದಾರಿಯಾಗಿದೆ. ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ಬಹಳ ಪ್ರಮುಖವಾದ ಜವಬ್ದಾರಿಯನ್ನು ನೀಡಿದ್ದಾರೆ.  ನನಗೆ ವಹಿಸಿಕೊಟ್ಟಿರುವ ಜವಬ್ದಾರಿಗೆ ಸದಾ ಚಿರಋಣಿಯಾಗಿದ್ದು, ಕ್ಷೇತ್ರದಲ್ಲಿ ಸಾಮಾನ್ಯ ಜನರ ಸಂಕಷ್ಟಗಳನ್ನು ಅರಿತು ಅವರ ಪರವಾಗಿ ಹೋರಾಟ ನಡೆಸಲು ಸಿದ್ದವಾಗಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಸಹ ಸ್ಪಂದಿಸುವುದಾಗಿ ಭರವಸೆ ನೀಡಿದರು.
       ಎಂಪಿಎಂ ಮತ್ತು ವಿಐಎಸ್‌ಎಲ್ ಎರಡು ಕಾರ್ಖಾನೆಗಳ ಸಮಸ್ಯೆಗಳನ್ನು ರಾಜ್ಯ ಮತ್ತು ಕೇಂದ್ರ ನಾಯಕರುಗಳ ಬಳಿ ಕೊಂಡೊಯ್ದು ವಾಸ್ತವ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಗಮನ ಸೆಳೆಯಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಕ್ಷೇತ್ರದ ಸಮಸ್ತ ನಾಗರೀಕರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.    


ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

    ನಗರಸಭೆ ಹಿರಿಯ ಸದಸ್ಯ ಕೆ.ಎನ್ ಭೈರಪ್ಪಗೌಡ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಂದರ್ ಬಾಬು ಮಾತನಾಡಿದರು. ಇದಕ್ಕೂ ಮೊದಲು ನಗರಕ್ಕೆ ಆಗಮಿಸಿದ ಎಚ್.ಸಿ ರಮೇಶ್‌ರವರನ್ನು ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
        ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ರಮೇಶ್‌ರವನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
     ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಪ್ರಮುಖರಾದ ಅಂತೋಣಿ ಗ್ಸೇವಿಯರ್, ಭವಾನಿ ಶಂಕರ್, ಆರ್. ಮುಕುಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಬಸವಕುಮಾರ್ ನಿಧನ

ಬಸವಕುಮಾರ್
ಭದ್ರಾವತಿ: ತಾಲೂಕಿನ ಗೋಣಿಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವಕುಮಾರ್(೫೫) ಭಾನುವಾರ ನಿಧನ ಹೊಂದಿದರು.
       ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಹೊಸಮನೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಬಳಿ ವಾಸಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಏಕಾಏಕಿ ಪುನಃ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಕಳೆದ ಕೆಲವು ವರ್ಷಗಳಿಂದ ಗೋಣಿಬೀಡು ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು.
      ಸರ್ಕಾರಿ ನೌಕರರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ, ದಲಿತ ಸಂಘರ್ಷ ಸಮಿತಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರ ನಿಧನಕ್ಕೆ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಸರ್ಕಾರಿ ನೌಕರರು ಸೇರಿದಂತೆ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

ಭದ್ರಾ ನದಿಗೆ ಜಲಾಶಯದಿಂದ ಹೆಚ್ಚುವರಿ ನೀರು : ಹೊಸ ಸೇತುವೆ ಮುಳುಗಡೆ

ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ನಿವಾಸಿಗಳ ಸ್ಥಳಾಂತರ
ಭದ್ರಾವತಿ, ಸೆ. ೨೦: ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ.
ಕಳೆದ ವಾರವೇ ಜಲಾಶಯ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿದ್ದು, ೪ ಕ್ರಸ್ಟ್ ಗೇಟ್‌ಗಳ ಮೂಲಕ ಸ್ವಲ್ಪ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿತ್ತು. ಕಳೆದ ೨ ದಿನಗಳಿಂದ ಜಲಾಶಯ ವ್ಯಾಪ್ತಿಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶನಿವಾರ ರಾತ್ರಿಯಿಂದ ಹೆಚ್ಚುವರಿ ನೀರು ಬಿಡಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಸುಮಾರು ೬೦ ಸಾವಿರ ಕ್ಯೂಸೆಕ್ಸ್ ನೀರು ನದಿಯಲ್ಲಿ ಹರಿದು ಬರುತ್ತಿದ್ದು, ಇದರಿಂದಾಗಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಕವಲಗುಂದಿ ಗ್ರಾಮದ ಮನೆಗಳಿಗೆ ನೀರು:
ಪ್ರತಿ ಬಾರಿ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯ ಕವಲಗುಂದಿ ಗ್ರಾಮದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದ್ದು, ಈ ಬಾರಿ ಸಹ ನೀರು ಮನೆಗಳಿಗೆ ನುಗ್ಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಸಭೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು,  ನಿರಾಶ್ರಿತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಹೊಸ ಸೇತುವೆ ಮುಳುಗಡೆ:
ಪ್ರತಿ ಬಾರಿಯಂತೆ ಈ ಬಾರಿ ಸಹ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಇರುವ ಹೊಸಸೇತುವೆ ಹಾಗೂ ಹಳೇಸೇತುವೆ ಬಳಿ ಇರುವ ಸಂಗಮೇಶ್ವರ ದೇವಸ್ಥಾನ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಹೊಸಸೇತುವೆ ಮೇಲಿನ ಸಂಚಾರವನ್ನು ಬೆಳಿಗ್ಗೆಯಿಂದಲೇ ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಸೇತುವೆ ಎರಡು ಕಡೆ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ. ಎಲ್ಲಾ ವಾಹನಗಳು ಹಳೇ ಸೇತುವೆ ಮೇಲೆ ಸಂಚರಿಸುತ್ತಿದ್ದು, ಇದರಿಂದಾಗಿ ವಾಹನ ದಟ್ಟಣೆ ಅಧಿಕವಾಗಿದೆ.  
ಉಳಿದಂತೆ ಅಂಬೇಡ್ಕರ್ ಸರ್ಕಲ್ ಮತ್ತು ಗುಂಡೂರಾವ್ ಶೆಡ್ ಬಳಿ ಮನೆಗಳಿಗೆ ನೀರು ನುಗ್ಗಿದೆ. ಜಲಾವೃತಗೊಂಡ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ನಾಗರಾಜ್, ನಗರಸಭೆ ಪೌರಾಯುಕ್ತ ಮನೋಹ್ ಸೇರಿದಂತೆ ಇನ್ನಿತರ ಅಧಿಕಾರಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಚಿತ್ರ: ಡಿ೨೦-ಬಿಡಿವಿಟ೩
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ನಗರದ ಹೊಸಸೇತುವೆ ಭಾನುವಾರ ಸಂಪೂರ್ಣವಾಗಿ ಮುಳುಗಡೆಯಾಗಿರುವುದು.

ಚಿತ್ರ: ಡಿ೨೦-ಬಿಡಿವಿಟಿ೪
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜಲಾವೃತಗೊಂಡ ಪ್ರದೇಶಗಳಿಗೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.



ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸೇರಿದಂತೆ ನಿಧನ ಹೊಂದಿದ ಗಣ್ಯರಿಗೆ ಶ್ರದ್ದಾಂಜಲಿ

ಭದ್ರಾವತಿಯಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳ್ ಹಿತರಕ್ಷಣಾ ಸಮಿತಿ ತಾಲೂಕು ಶಾಖೆವತಿಯಿಂದ ನ್ಯೂಟೌನ್ ಜೆಟಿಎಸ್ ಶಾಲೆ ಬಳಿ ಇರುವ ಲಯನ್ಸ್ ಶುಗರ್‌ಟೌನ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹಾಗು ಸಮಿತಿ ಸಂಸ್ಥಾಪಕ ಮತ್ತು ದಲಿತ ಮುಖಂಡ ಎಂ. ಶ್ರೀನಿವಾಸನ್‌ರವರಿಗೆ  ಶ್ರದ್ದಾಂಜಲಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯರಾದ ಆರ್. ಕರುಣಾಮೂರ್ತಿ, ಮಣಿ ಎಎನ್‌ಎಸ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಸೆ. ೨೦: ನಗರದ ವಿವಿಧೆಡೆ ಇತ್ತೀಚೆಗೆ ನಿಧನ ಹೊಂದಿದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸೇರಿದಂತೆ ವಿವಿಧ ಗಣ್ಯರ ಸಂತಾಪ ಸೂಚಕ ಭಾನುವಾರ ಜರುಗಿತು.
     ಜಿಲ್ಲಾ ಪರಿಶಿಷ್ಟ ಜಾತಿ ಆದಿದ್ರಾವಿಡ ತಮಿಳ್ ಹಿತರಕ್ಷಣಾ ಸಮಿತಿ ತಾಲೂಕು ಶಾಖೆವತಿಯಿಂದ ನ್ಯೂಟೌನ್ ಜೆಟಿಎಸ್ ಶಾಲೆ ಬಳಿ ಇರುವ ಲಯನ್ಸ್ ಶುಗರ್‌ಟೌನ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಹಾಗು ಸಮಿತಿ ಸಂಸ್ಥಾಪಕ ಮತ್ತು ದಲಿತ ಮುಖಂಡ ಎಂ. ಶ್ರೀನಿವಾಸನ್‌ರವರಿಗೆ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
       ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ನಗರಸಭೆ ಸದಸ್ಯರಾದ ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಮಣಿ ಎ.ಎನ್.ಎಸ್, ಗುಣಶೇಖರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್, ಸಮಿತಿ ಪ್ರಮುಖರಾದ ಎಸ್. ರಾಜು, ವಿಜಯ್‌ಕುಮಾರ್, ನಾರಾಯಣಸ್ವಾಮಿ, ಪಳನಿ, ದೊರೆಸ್ವಾಮಿ, ಅಣ್ಣಪ್ಪ, ಪ್ರಶಾಂತ್, ಜಗನ್ನಾಥ, ಮುರುಗನ್, ಶೇಖರ್, ಉದಯ್‌ಕುಮಾರ್, ರಾಜು, ಸುಬ್ರಮಣಿ, ಜಿಲ್ಲಾ ಸಮಿತಿಯ ವೆಂಕಟಚಲ ಹಾಗು ಎನ್. ಶ್ರೀನಿವಾಸ್ ಕುಟುಂಬ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮಿತಿಯ ಕರುಣನಿಧಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಪಾಲ್ ಪ್ರಸ್ತಾವಿಕ ನುಡಿಗಳನ್ನಾಡಿದರು.

\
ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಹಾಗೂ ಸಿದ್ದಾರೂಢ ನಗರದ ನಿವಾಸಿಗಳಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ರಂಗ ದಾಸೋಹಿ ಎಸ್. ಜಿ ಶಂಕರಮೂರ್ತಿ, ನಗರಸಭಾ ಸದಸ್ಯ ಜಿ.ಡಿ ನಟರಾಜ್ ಮತ್ತು ಎಂ.ಪಿ.ಎಂ ನಿವೃತ್ತ ಅಧಿಕಾರಿ ನಂಜಯ್ಯರವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

     ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಹಾಗೂ ಸಿದ್ದಾರೂಢ ನಗರದ ನಿವಾಸಿಗಳಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ರಂಗ ದಾಸೋಹಿ ಎಸ್. ಜಿ ಶಂಕರಮೂರ್ತಿ, ನಗರಸಭಾ ಸದಸ್ಯ ಜಿ.ಡಿ ನಟರಾಜ್ ಮತ್ತು ಎಂ.ಪಿ.ಎಂ ನಿವೃತ್ತ ಅಧಿಕಾರಿ ನಂಜಯ್ಯರವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
      ಸಿದ್ದರೂಢನಗರದ ಶಾರದಾ ಮಾತೆ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್,  ಎಂ.ಜೆ ಅಪ್ಪಾಜಿ ಪುತ್ರ ಎಂ.ಎ ಅಜಿತ್, ನಿವೃತ್ತ ಪ್ರೊಫೆಸರ್ ಭುವನೇಶ್ವರ್,  ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಭಾಗವಹಿಸಿದ ಬಸವರಾಜು, ನಗರಸಭೆ ಪೌರಾಯುಕ್ತ ಮನೋಹರ್, ಸದಸ್ಯರಾದ ಶಿವರಾಜ್, ಗುಣಶೇಖರ್, ಕವಿತಾ ಸುರೇಶ್, ಎಚ್. ಮಂಜುನಾಥ್, ಶಿವಲಿಂಗೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಿ.ಡಿ ನಟರಾಜ್ ನಿಧನ

ಜಿ.ಡಿ ನಟರಾಜ್
ಭದ್ರಾವತಿ, ಸೆ.೨೦: ನಗರದ ಗಣೇಶ್ ಕಾಲೋನಿ ನಿವಾಸಿ, ನಗರಸಭಾ ಸದಸ್ಯ ಜಿ.ಡಿ ನಟರಾಜ್(೪೯) ಶನಿವಾರ ರಾತ್ರಿ ನಿಧನ ಹೊಂದಿದರು.
      ಮೃತರು ತಾಯಿ, ಪತ್ನಿ, ೩ ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮಾಜಿ ಶಾಸಕ ದಿಂಗತ ಎಂ.ಜೆ ಅಪ್ಪಾಜಿ ಅವರೊಂದಿಗೆ ಗುರುತಿಸಿಕೊಂಡು ಜೆಡಿಎಸ್ ಪಕ್ಷದಿಂದ ೨ ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
        ಹಲವು ವರ್ಷಗಳಿಂದ ನ್ಯಾಯಬೆಲೆ ಅಂಗಡಿ ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದು, ತಾಲೂಕು ಪಡಿತರ ವಿತರಕರ ಸಂಘದ ಉಪಾಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದರು.
       ಇವರ ನಿಧನಕ್ಕೆ ತಾಲೂಕು ಪಡಿತರ ವಿತರಕರ ಸಂಘ, ನಗರಸಭಾ ಸದಸ್ಯರು, ಜೆಡಿಎಸ್ ಪಕ್ಷದ ಮುಖಂಡರು, ನಗರದ ಗಣ್ಯರು, ತಾಲೂಕು ಮಡಿವಾಳ ಸಮಾಜ, ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
      ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ:
     ಮೃತರ ನಿಧನಕ್ಕೆ ಸಂತಾಪ ಸೂಚಿಸಿರುವ ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ, ಜಿ.ಡಿ ನಟರಾಜ್‌ರವರು ನಿಧನ ಹೊಂದಿರುವ ವಿಷಯ ಮನಸ್ಸಿಗೆ ತುಂಬಾ ದುಃಖವನ್ನುಂಟು ಮಾಡಿದೆ. ಒಳ್ಳೆಯ ವ್ಯಕ್ತಿಯಾಗಿದ್ದು, ಎಲ್ಲಾ ಕೆಲಸಗಳಲ್ಲೂ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದರು. ಇವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.
      ಇದೀಗ ವಿಧಾನಸಭೆ ಅಧಿವೇಶನ ಆರಂಭಗೊಳ್ಳುತ್ತಿದ್ದು, ಜಿ.ಡಿ ನಟರಾಜ್‌ರವರ ಕುಟುಂಬಕ್ಕೆ ಆರ್ಥಿಕ ನೆರವು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದರು.