ಯುವಕರಿಗೆ ಹೆಚ್ಚಿನ ಆದ್ಯತೆ, ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ನೂತನ ಪದಾಧಿಕಾರಿಗಳ ನೇಮಕ : ಜಗದೀಶ್
ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಭದ್ರಾವತಿಗೆ ಆಗಮಿಸಿದ ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ, ಅಭಿನಂದಿಸಿದರು.
ಭದ್ರಾವತಿ, ಅ. ೫: ರಾಜ್ಯಾದ್ಯಂತ ಜಯ ಕರ್ನಾಟಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಸಂಘಟನೆಯ ಸಂಸ್ಥಾಪಕರ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಎಲ್ಲರೂ ಮುನ್ನಡೆಯಬೇಕೆಂದು ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್ ಕರೆ ನೀಡಿದರು.
ಅವರು ಅಧ್ಯಕ್ಷರಾದ ನಂತರ ಸೋಮವಾರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿ ಸಂಘಟನೆಯ ಪ್ರಮುಖರು ಹಾಗು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಮುತ್ತಪ್ಪ ರೈರವರು ಸಮಾಜಮುಖಿ ಚಿಂತನೆಗಳೊಂದಿಗೆ, ಜನಪರ ಕಾಳಜಿಯಿಂದ ಸಂಘಟನೆಯನ್ನು ಹುಟ್ಟು ಹಾಕಿದರು. ಇದೀಗ ಅವರು ನಮ್ಮೊಂದಿಗಿಲ್ಲ. ಆದರೆ ಅವರು ಬಿಟ್ಟು ಹೋಗಿರುವ ಸಂಘಟನೆ ನಮ್ಮೊಂದಿಗಿದೆ. ಈ ಹಿನ್ನಲೆಯಲ್ಲಿ ಆ ಮೂಲಕ ಅವರನ್ನು ಕಾಣುವ ಪ್ರಯತ್ನ ಸಂಘಟನೆಯ ಎಲ್ಲರೂ ಮಾಡಬೇಕಾಗಿದೆ.
ಜಯ ಕರ್ನಾಟಕ ಸಂಘಟನೆ ಕೇವಲ ನೆಲ, ಜಲ, ಭಾಷೆ ಹೋರಾಟಕ್ಕೆ ಸೀಮಿತವಾಗಿರದೆ ಜನರ ಮಾನವೀಯ ಮೌಲ್ಯಗಳಿಗೆ ಸ್ಪಂದಿಸಲಿದೆ ಎಂಬುದನ್ನು ಕಳೆದ ೫-೬ ತಿಂಗಳುಗಳಿಂದ ಕೈಗೊಳ್ಳುತ್ತಿರುವ ಸಮಾಜಮುಖಿ ಸೇವಾ ಕಾರ್ಯಗಳಿಂದ ಎಲ್ಲರೂ ತಿಳಿದುಕೊಳ್ಳಬಹುದಾಗಿದೆ. ಪ್ರಸ್ತುತ ಮಾದಕ ವ್ಯಸನ ವಿರುದ್ಧ ಸಂಘಟನೆ ಹೋರಾಟ ಇಳಿದಿದ್ದು, ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯದಲ್ಲಿ ಹಿಂದಿ ಭಾಷೆ ಏರಿಕೆ ಮಾಡಲು ಯತ್ನಿಸಿದ್ದು, ಇದರ ವಿರುದ್ಧ ಸಹ ಹೋರಾಟ ನಡೆಸಿ ಕನ್ನಡ ನೆಲದಲ್ಲಿ ಕನ್ನಡಕ್ಕೆ ಮಾತ್ರ ಮೊದಲ ಆದ್ಯತೆ ಎಂಬುದನ್ನು ತಿಳಿಸಲಾಗಿದೆ. ಇದೆ ರೀತಿ ಹಲವಾರು ಜನಪರ ಹೋರಾಟಗಳಲ್ಲಿ ಸಂಘಟನೆ ಮುಂಚೂಣಿಯಲ್ಲಿದ್ದು, ರಾಜ್ಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ೩೦ ಮಂದಿ ರಾಜ್ಯ ಪದಾಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುತ್ತಿದೆ. ಸಂಘಟನೆಯಲ್ಲಿ ಯುವಕರು ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಅವರಿಗೆ ತರಬೇತಿ ಸಹ ನೀಡಲಾಗುತ್ತಿದೆ. ಎಲ್ಲಾ ಜಿಲ್ಲೆ ಹಾಗು ತಾಲೂಕುಗಳಲ್ಲಿ ನೂತನ ಪದಾಧಿಕಾರಿಗಳನ್ನು ರಚಿಸಲಾಗುತ್ತಿದೆ ಎಂದರು.
ಇದಕ್ಕೂ ಮೊದಲು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೂತನ ಅಧ್ಯಕ್ಷರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ಪ್ರಧಾನ ಕಾರ್ಯದಶಿ ರಾಮಚಂದ್ರಯ್ಯ, ರಾಜ್ಯ ಉಪಾಧ್ಯಕ್ಷ ಮುನಿಸ್ವಾಮಿ, ಜಿಲ್ಲಾ ಉಸ್ತುವಾರಿ ಹರೀಶ್, ತಾಲೂಕು ಅಧ್ಯಕ್ಷ ಕೆ. ಸುದೀಪ್ಕುಮಾರ್, ಪ್ರಮುಖರಾದ ಪ್ರಾನ್ಸಿಸ್, ಮುಕುಂದಪ್ಪ, ಪ್ರಸನ್ನ, ಜ್ಯೋತಿ ಪ್ರಸಾದ್, ಕಿರಣ್, ರಾಖಿ, ಗಾಂಧಿ ಅಶೋಕ, ಚಂದ್ರು, ದಾಸ್, ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.