Saturday, November 21, 2020

ಪ್ರೇಮಪಾಶ ಪುಸ್ತಕ ಬಿಡುಗಡೆ

ಭದ್ರಾವತಿ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಹಿಂದೂ ಯುವ ಜಾಗೃತಿವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಚೈತ್ರಾ ಕುಂದಾಪುರರವರ ಪ್ರೇಮಪಾಶ (ಪ್ರೀತಿಯೆಂಬ ಜಿಹಾದಿನ ಪರದೆ) ಪುಸ್ತಕ ಬಿಡುಗಡೆಗೊಳಿಸಲಾಯಿತು.
     ಭದ್ರಾವತಿ, ನ. ೨೧: ದೇಶದ ಸನಾತನ ಧರ್ಮ, ಸಂಸ್ಕೃತಿ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಚೈತ್ರಾ ಕುಂದಾಪುರರವರ ಪ್ರೇಮಪಾಶ (ಪ್ರೀತಿಯೆಂಬ ಜಿಹಾದಿನ ಪರದೆ) ಪುಸ್ತಕ ಬಿಡುಗಡೆ ಸಮಾರಂಭ ಶನಿವಾರ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ಹಿಂದೂ ಯುವ ಜಾಗೃತಿವತಿಯಿಂದ ಆಯೋಜಿಸಲಾಗಿತ್ತು.
ಎಂ.ಎಸ್.ಎಂ.ಇ ನಿರ್ದೇಶಕ ಎಚ್.ಸಿ ರಮೇಶ್ ಪುಸ್ತಕ ಬಿಡುಗಡೆಗೊಳಿಸಿದರು. ಲೇಖಕಿ ಚೈತ್ರಾ ಕುಂದಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ಸುದರ್ಶನ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಯುವ ಉದ್ಯಮಿ ಎನ್. ಗೋಕುಲ್‌ಕೃಷ್ಣನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಟಿ.ಎಸ್ ದುಗ್ಗೇಶ್

ಟಿ.ಎಸ್ ದುಗ್ಗೇಶ್
ಭದ್ರಾವತಿ, ನ. 21: ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ನಗರದ ಟವನ್ ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಟಿ.ಎಸ್ ದುಗ್ಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
   ಶನಿವಾರ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿ ಇಲ್ಲದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು. ದುಗ್ಗೇಶ್‌ರವರು ಹಲವಾರು ವರ್ಷಗಳಿಂದ ಟವನ್ ಭಾವಸಾರ ಕ್ಷತ್ರಿಯ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಗುರುತಿಸಿಕೊಂಡಿದ್ದರು.  ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್‌ಗೆ ತಾಲೂಕಿನ ಅರಕೆರೆ ಎಚ್.ಎಲ್ ಷಡಾಕ್ಷರಿ, ಗೊಂದಿ ಜಯರಾಮ್, ಎಚ್.ಎಸ್ ಸಂಜೀವಕುಮಾರ್ ಮತ್ತು ಟಿ.ಎಸ್ ದುಗ್ಗೇಶ್ ಸೇರಿದಂತೆ 4 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಯೂನಿಯನ್ ಒಟ್ಟು 14 ನಿರ್ದೇಶಕ ಸ್ಥಾನಗಳನ್ನು ಹೊಂದಿದ್ದು, ಈ ಹಿಂದೆ ತಾಲೂಕಿನ ಅರಕೆರೆ ಎಚ್.ಎಲ್ ಷಡಾಕ್ಷರಿಯವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
    ಅಧ್ಯಕ್ಷರಾಗಿ ಆಯ್ಕೆಯಾಗಿರುವ ಟಿ.ಎಸ್ ದುಗ್ಗೇಶ್‌ರವರಿಗೆ  ನಗರದ ಟವನ್ ಭಾವಸಾರ ಕ್ಷತ್ರಿಯ ಕೊ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಯುವಕರಿಗೆ ಕೆರೆ ಅಭಿವೃದ್ಧಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಿ ಕೊಡಿ

ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಮತ್ತು ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಆಲಿ ಮನವಿ

ಭದ್ರಾವತಿ, ನ. ೨೧: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಮತ್ತು ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಆಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾ ಪಂಚಾಯಿತಿ ಮುಖ್ಯ  ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮನವಿ ಸಲ್ಲಿಸಿದ್ದಾರೆ.
   ಜಿಲ್ಲಾ ಪಂಚಾಯಿತಿ ವತಿಯಿಂದ ತಾಲೂಕಿನ ದೊಣಬಘಟ್ಟ ಗ್ರಾಮದ ಸರ್ವೆ ನಂ. ೭೧ರ ಬ್ರಹ್ಮದೇವರಕಟ್ಟೆ ಕೆರೆ ಅಭಿವೃದ್ಧಿಗೆ ರು.೯ ಲಕ್ಷ,  ಸರ್ವೆ ನಂ.೨೫ರ ಎರೆಕಟ್ಟೆ ಕೆರೆ ಅಭಿವೃದ್ಧಿಗೆ ರು. ೯ ಲಕ್ಷ ಅನುದಾನ ಮಂಜೂರಾತಿಯಾಗಿದೆ. ಪ್ರಸ್ತುತ ಕೋವಿಡ್-೧೯ರ ಹಿನ್ನಲೆಯಲ್ಲಿ ಗ್ರಾಮದ ಯುವಕರು ಉದ್ಯೋಗ ವಿಲ್ಲದೆ ಪರದಾಡುತ್ತಿದ್ದಾರೆ. ಈ ನಡುವೆ ಕೆಲವರು ಬೇರೆ ಊರುಗಳಿಗೆ ವಲಸೆ ಹೋಗುತ್ತಿದ್ದು, ಈ ಹಿನ್ನಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವ ಮೂಲಕ ಹಿತ ಕಾಪಾಡಬೇಕು.
   ಪ್ರಸ್ತುತ ಗ್ರಾಮದಲ್ಲಿ ಭತ್ತದ ಕಟಾವು ಮುಗಿದಿದ್ದು, ಇದೀಗ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸೂಕ್ತ ಸಮಯವಾಗಿದೆ. ಕೆರೆಗಳು ಅಭಿವೃದ್ಧಿಗೊಂಡಲ್ಲಿ ಶುದ್ದ ನೀರು ಸರಬರಾಜು ಜೊತೆಗೆ ಸ್ವಚ್ಛತೆಯಿಂದ ಗ್ರಾಮದಲ್ಲಿ ರೋಗರುಜಿನ ಹರಡದಂತೆ ತಡೆಗಟ್ಟೆ ಬಹುದಾಗಿದೆ.  ಅಲ್ಲದೆ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಯುವಕರು ಉತ್ಸುಕರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಎರಡು ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಬೌಂಡರಿ ನಿಗದಿಪಡಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕೆಂದು ಕೋರಿದ್ದಾರೆ.