Sunday, December 27, 2020

ಪ್ರೊ ಕಬಡ್ಡಿ ಪಂದ್ಯಾವಳಿಗೆ ೧೨ ತಂಡಗಳ ೯೬ ಕ್ರೀಡಾಪಟುಗಳ ಆಯ್ಕೆ

ಭದ್ರಾವತಿಯಲ್ಲಿ ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಯಿತು.
   ಭದ್ರಾವತಿ, ಡಿ. ೨೭: ತಾಲೂಕು ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಇದರ ಅಂಗವಾಗಿ ಭಾನುವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಯಿತು.
     ಒಟ್ಟು ೧೪೬ ಮಂದಿ ಕಬಡ್ಡಿ ಪಟುಗಳು ಪಾಲ್ಗೊಂಡಿದ್ದು, ಈ ಪೈಕಿ ತಲಾ ೮ ಜನರಂತೆ ೧೨ ತಂಡಗಳ ೯೬ ಮಂದಿ ಕಬಡ್ಡಿ ಪಟುಗಳನ್ನು ಆಯ್ಕೆ ಮಾಡಲಾಯಿತು. ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ನಗರಸಭಾ ಸದಸ್ಯ ಮಣಿ ಎ.ಎನ್.ಎಸ್, ಮಾರುತಿ ಮೆಡಿಕಲ್ಸ್ ಆನಂದ್ ಹಾಗು ನಗರಸಭೆ ಮಾಜಿ ಸದಸ್ಯ ಚನ್ನಪ್ಪ ಉಪಸ್ಥಿತರಿದ್ದು, ತಲಾ ಒಂದೊಂದು ತಂಡಗಳನ್ನು ಖರೀದಿಸಿದರು.
   ರಾಜ್ಯಮಟ್ಟದ ಕಬಡ್ಡಿ ಕೇಸರಿ ಪ್ರಶಸ್ತಿ ವಿಜೇತ, ತರಬೇತಿದಾರ ಎಚ್.ಆರ್ ರಂಗನಾಥ್, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಎಚ್.ಎನ್ ಕೃಷ್ಣೇಗೌಡ, ತೀರ್ಪುಗಾರ ಎಂ.ಬಿ ಬಸವರಾಜ್, ದೇವರಾಜ್ ಮತ್ತು ಅಂತರಾಷ್ಟ್ರೀಯ ತೀರ್ಪುಗಾರ ಎಸ್.ಎನ್ ಸಿದ್ದಯ್ಯ ನೇತೃತ್ವದಲ್ಲಿ ಆಯ್ಕೆ ನಡೆಯಿತು.
  ಹಿರಿಯ ಕಬಡ್ಡಿ ಪಟು ಚಿನ್ನಯ್ಯ, ಅತ್ತಿಗುಂದ ಕರಿಯಪ್ಪ, ಬೊಮ್ಮನಕಟ್ಟೆ ಸರ್.ಎಂ.ವಿ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವಸಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಏಕಾಂತಮ್ಮ ನಿಧನ

ಏಕಾಂತಮ್ಮ
ಭದ್ರಾವತಿ, ಡಿ. ೨೭: ನಗರ ರುದ್ರ ಕ್ಲಿನಿಕ್ ವೈದ್ಯ ಡಾ. ರುದ್ರಮೂರ್ತಿರವರ ಪತ್ನಿ ಏಕಾಂತಮ್ಮ  ಭಾನುವಾರ ನಿಧನ ಹೊಂದಿದರು.
ಪತಿ ಡಾ. ರುದ್ರಮೂರ್ತಿ, ಅಬುದಾಬಿಯಲ್ಲಿರುವ ಇಂಜಿನಿಯರ್ ಯತೀಶ್, ಬೆಂಗಳೂರಿನ ಖಾಸಗಿ ಕಂಪನಿಯೊಂದರ ವ್ಯವಸ್ಥಾಪಕ ತಿಪ್ಪೇಶ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಸೊಸೆಯಂದಿರನ್ನು ಹೊಂದಿದ್ದರು.
ಮೃತರ ಅಂತ್ಯಕ್ರಿಯೆ ಡಿ.೨೮ರ ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದ್ದು, ಮೃತರ ನಿಧನಕ್ಕೆ ನಗರದ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.



ಹಳೇಯ ವಿದ್ಯಾರ್ಥಿ ಸ್ನೇಹಿತ ನ್ಯಾಯಾಧೀಶ ಎಸ್.ಟಿ ದೇವರಾಜ್‌ಗೆ ಸನ್ಮಾನ, ಅಭಿನಂದನೆ

ಮೈಸೂರಿನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ದೇವರಾಜ್‌ರವರು ಕಾರ್ಯ ನಿಮಿತ್ತ ಕುಟುಂಬ ಸಮೇತ ಭದ್ರಾವತಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿ ಸನ್ಮಾನಿಸಿ ಅಭಿನಂದಿಸಿದರು.
ಭದ್ರಾವತಿ, ಡಿ. ೨೭: ಸುಮಾರು ೩೪ ವರ್ಷಗಳ ನಂತರ ವಿದ್ಯಾರ್ಥಿ ಸ್ನೇಹಿತರೊಬ್ಬರು ಉನ್ನತ ಹುದ್ದೆಯನ್ನು ಆಲಂಕರಿಸಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಸ್ನೇಹಿತರೆಲ್ಲರೂ ಸೇರಿ ಅವರನ್ನು ಸನ್ಮಾನಿಸಿ ಅಭಿನಂದಿಸುವ ಮೂಲಕ ತಮ್ಮ ಹಳೇಯ ನೆನಪಿನೊಂದಿಗೆ ಕೆಲ ಕ್ಷಣ ಸಂಭ್ರಮಿಸಿದ ಘಟನೆ ಭಾನುವಾರ ವಿಐಎಸ್‌ಎಲ್ ಅತಿಥಿ ಗೃಹದಲ್ಲಿ ನಡೆಯಿತು. 
ಮೈಸೂರಿನ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ದೇವರಾಜ್‌ರವರು ಕಾರ್ಯ ನಿಮಿತ್ತ ಕುಟುಂಬ ಸಮೇತ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರ ವಿದ್ಯಾರ್ಥಿ ಸ್ನೇಹಿತರೆಲ್ಲರೂ ಒಂದೆಡೆ ಸೇರಿ ಸನ್ಮಾನಿಸಿ ಅಭಿನಂದಿಸಿದರು. 
ದೇವರಾಜ್‌ರವರು ೩೪ ವರ್ಷಗಳ ಹಿಂದೆ ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬಿ.ಎಸ್ಸಿ  ವ್ಯಾಸಂಗ ನಡೆಸಿದ್ದರು. ಈ ಸಂದರ್ಭದಲ್ಲಿ ಇವರೊಂದಿಗೆ ವ್ಯಾಸಂಗ ನಡೆಸುತ್ತಿದ್ದ ನಗರದ ವಿಇಎಸ್ ವಿದ್ಯಾಸಂಸ್ಥೆಯ ರಾಷ್ಟ್ರ ಪ್ರಶಸ್ತಿ ಶಿಕ್ಷಕ ಶಿವಲಿಂಗೇಗೌಡ, ಡಾ. ಭುಜಂಗಶೆಟ್ಟಿ, ರವಿಶಂಕರ್, ಬಾಬುಶೇಟ್, ಭುವನೇಶ್ವರ್, ಉಪನ್ಯಾಸಕ ಮಲ್ಲೇಶಪ್ಪ, ಮುಖ್ಯೋಪಾಧ್ಯಾಯ ಜಯಪ್ಪ, ವಕೀಲ ಕಾರಂತ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಹೈಕೋರ್ಟ್ ವಕೀಲ ಲೋಕನಾಥ್ ಹಾಗು ಇನ್ನಿತರರು ತಮ್ಮ ಹಳೇಯ ನೆನಪುಗಳೊಂದಿಗೆ ಕೆಲ ಕ್ಷಣ ಸಂಭ್ರಮಿಸಿದರು. 

ವಿಜೃಂಭಣೆಯಿಂದ ಜರುಗಿದ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಕೋವಿಡ್-೧೯ರ ನಡುವೆಯೂ ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ, ಡಿ. ೨೭: ಕೋವಿಡ್-೧೯ರ ನಡುವೆಯೂ ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹುತ್ತಾ ಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಮಧ್ಯಾಹ್ನ ಸುಮಾರು ೧೨.೩೦ಕ್ಕೆ ದೇವಸ್ಥಾನದ ಆವರಣದಿಂದ ಆರಂಭಗೊಂಡ ರಥೋತ್ಸವ ಸರ್.ಎಂ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೆ ಸಾಗಿತು. ನೂರಾರು ಭಕ್ತಾಧಿಗಳು ರಥೋತ್ಸವ ಆರಂಭವಾಗುತ್ತಿದ್ದಂತೆ ಜೈಕಾರಗಳನ್ನು ಹಾಕಿ ಮುಂದೆ ಸಾಗಿದರು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಹಲವಾರು ವರ್ಷಗಳಿಂದ ರಥೋತ್ಸವದಲ್ಲಿ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ನೆರವೇರಿಸಿಕೊಂಡು ಬರುತ್ತಿದ್ದು, ಈ ಬಾರಿ ಸಹ ಇವರ ನೇತೃತ್ವದಲ್ಲಿ ಪ್ರಸಾದ ವಿತರಣೆ ನಡೆಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ಸಮಾಜ ಸೇವಕ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್, ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ, ಬಿಜೆಪಿ ಮುಖಂಡ ಎಚ್.ಸಿ ರಮೇಶ್, ಮುಖಂಡರಾದ ದೇವಸ್ಥಾನ ಸೇವಾ ಸಮಿತಿ ಪ್ರಮುಖರಾದ ಕರಿಯಪ್ಪ, ಎ.ಟಿ ರವಿ, ಕಬ್ಬಡಿ ಕೃಷ್ಣೇಗೌಡ, ಸತೀಶ್‌ಗೌಡ, ತಿಮ್ಮೇಗೌಡ, ಆರ್. ವೇಣುಗೋಪಾಲ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಕೊವೀಡ್-೧೯ರ ಹಿನ್ನಲೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚಿನ ಜಾಗೃತಿ ವಹಿಸಿತ್ತು. ಭಕ್ತಾಧಿಗಳ ಸಂಖ್ಯೆ ನಿಯಂತ್ರಿಸುವ ಹಿನ್ನಲೆಯಲ್ಲಿ ರಥೋತ್ಸವ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡಿರಲಿಲ್ಲ. ಆದರೂ ಸಹ ಈ ಬಾರಿ ಪ್ರತಿ ವರ್ಷಕ್ಕಿಂತ ಹೆಚ್ಚಿನ ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
ಮಾಸ್ಕ್-ಸಾಮಾಜಿಕ ಅಂತರ ಕಂಡು ಬರಲಿಲ್ಲ:
ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳಲ್ಲಿ ಸಾಮಾಜಿಕ ಅಂತರವಾಗಲಿ, ಮಾಸ್ಕ್ ಬಳಕೆಯಾಗಲಿ ಕಂಡು ಬರಲಿಲ್ಲ. ಒಟ್ಟಾರೆ ಕೋವಿಡ್-೧೯ ನಿಯಮಗಳನ್ನು ಪಾಲಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ.