Sunday, January 31, 2021

ಬಸವೇಶ್ವರ ವೃತ್ತದಲ್ಲಿ ೧೨ ಅಡಿ ನಂದಿ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ೧೨ ಅಡಿ ಎತ್ತರದ ನಂದಿ ಪ್ರತಿಮೆ(ಬಸವಣ್ಣ) ನಿರ್ಮಾಣಕ್ಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ ಭೂಮಿ ಪೂಜೆ ನೆರವೇರಿಸಿದರು.
   ಭದ್ರಾವತಿ, ಜ. ೩೧: ಹಳೇನಗರದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ೧೨ ಅಡಿ ಎತ್ತರದ ನಂದಿ ಪ್ರತಿಮೆ(ಬಸವಣ್ಣ) ನಿರ್ಮಾಣಕ್ಕೆ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ ಭೂಮಿ ಪೂಜೆ ನೆರವೇರಿಸಿದರು.
   ಬಸವೇಶ್ವರ ವೃತ್ತವನ್ನು ಸಂಪೂರ್ಣವಾಗಿ ಆಧುನೀಕರಣಗೊಳಿಸಿ ಶಿಥಿಲಗೊಂಡಿರುವ ಪ್ರತಿಮೆಯನ್ನು ತೆರವುಗೊಳಿಸಿ ಹೊಸ ಪ್ರತಿಮೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಇದ್ದು, ಈ ಹಿನ್ನಲೆಯಲ್ಲಿ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
  ಪ್ರಮುಖರಾದ ಬಿ.ಎಸ್ ಗಣೇಶ್, ಪರಶುರಾಮ್, ಮಹೇಶ್, ರಾಜು, ರಮಾಕಾಂತ, ಹಾಲೇಶ್, ರವಿಕುಮಾರ್, ರೇವಣ್ಣ, ಗುರುರಾಜ್, ಶಿವಾನಂದ್, ಬಿ.ಪಿ ರಾಘವೇಂದ್ರ, ಅಣ್ಣೋಜಿರಾವ್, ಗುತ್ತಿಗೆದಾರ ಬಾಲಾಜಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಫೆ.೨೭, ೨೮ರಂದು ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಮಾದರಿ ಪಂದ್ಯಾವಳಿ

ಫೆ.೨೭, ೨೮ರಂದು ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಮಾದರಿ ಪಂದ್ಯಾವಳಿ ಭದ್ರಾವತಿಯಲ್ಲಿ ಆಯೋಜಿಸಿರುವ ಕುರಿತು ಅಂತರಾಷ್ಟ್ರೀಯ ಕಬಡ್ಡಿ ಆಟಗಾರರಾದ ಕೃಷ್ಣೇಗೌಡ ಮತ್ತು ಎಚ್.ಆರ್ ರಂಗನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
   ಭದ್ರಾವತಿ, ಜ. ೩೧: ತಾಲೂಕಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭದ್ರಾ ಯೂತ್ ಕಬಡ್ಡಿ(ಬಿವೈಕೆ) ವತಿಯಿಂದ ಕರ್ನಾಟಕ ರಾಜ್ಯ ಅಮೆಚೂರ್ ಅಸೋಸಿಯೇಷನ್ ಹಾಗು ಜಿಲ್ಲಾ ಅಮೆಚೂರ್ ಅಸೋಸಿಯೇಷನ್ ಮತ್ತು ಶಾಸಕ ಬಿ.ಕೆ ಬಿ.ಕೆ ಸಂಗಮೇಶ್ವರ್‌ರವರ ಸಹಕಾರದೊಂದಿಗೆ ಫೆ. ೨೭ ಮತ್ತು ೨೮ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ (ಮ್ಯಾಟ್) ಮಾದರಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಅಂತರಾಷ್ಟ್ರೀಯ ಕಬಡ್ಡಿ ಆಟಗಾರರಾದ ಕೃಷ್ಣೇಗೌಡ ಮತ್ತು ಎಚ್.ಆರ್ ರಂಗನಾಥ್ ತಿಳಿಸಿದರು.
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಕೀರ್ತಿ ತಂದಿರುವ ಕ್ರೀಡಾಪಟುಗಳಿದ್ದು, ಕಬಡ್ಡಿ ಕ್ರೀಡೆ ತನ್ನದೇ ಆದ ಹಿರಿಮೆಯನ್ನು ಹೊಂದಿದೆ.  ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.
    ಈಗಾಗಲೇ ಡಿ.೨೭ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಕ್ರೀಡಾಪಟುಗಳ ಆಯ್ಕೆ ನಡೆಸಲಾಗಿದೆ. ೮ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ.  ಮೊದಲ ೪ ವಿಜೇತ ತಂಡಗಳಿಗೆ ನಗದು ಬಹುಮಾನ ಮತ್ತು ಟ್ರೋಪಿಗಳನ್ನು ವಿತರಿಸಲಾಗುವುದು. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿ ಯಶಸ್ವಿಗೊಳಿಸುವಂತೆ ಕೋರಿದರು.
   ರಾಜ್ಯಮಟ್ಟದ ಆಟಗಾರರಾದ ಶ್ರೀನಿವಾಸ್, ಚಂದ್ರಶೇಖರ್, ಮಾರ್ಕಂಡಯ್ಯ, ವಿಶ್ವನಾಥ್, ಅಂತರಾಷ್ಟ್ರೀಯ ತೀರ್ಪುಗಾರರಾದ ಸಿದ್ದಯ್ಯ, ಬಸವರಾಜ್, ಜಗದೀಶ್, ದಾಸಿ, ಗೋಪಿ, ನಗರಸಭೆ ಮಾಜಿ ಸದಸ್ಯ ಚನ್ನಪ್ಪ, ನಗರ ಆಶ್ರಯ ಸಮಿತಿ ಸದಸ್ಯ ದೇವರಾಜ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.  

ಯಾರಿಗೂ ಅಧಿಕಾರ ಮುಖ್ಯವಲ್ಲ, ಬೆಳೆದು ಬಂದ ದಾರಿ ಮುಖ್ಯ : ಶಿಮೂಲ್ ಅಧ್ಯಕ್ಷ ಆನಂದ್

ಭದ್ರಾವತಿ ಜನ್ನಾಪುರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಒಂದು ನೆನಪು ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಶಾರದ ಅಪ್ಪಾಜಿ ಉದ್ಘಾಟಿಸಿದರು.
   ಭದ್ರಾವತಿ, ಜ. ೩೧: ಯಾರಿಗೂ ಅಧಿಕಾರ ಮುಖ್ಯವಲ್ಲ. ಬೆಳೆದು ಬಂದ ದಾರಿ, ಬೆಳೆಯಲು ಕಾರಣಕರ್ತದವರು ಮುಖ್ಯ ಎಂಬುದನ್ನು ಅರಿತುಕೊಳ್ಳಬೇಕು.  ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಆನಂದ್ ಹೇಳಿದರು.
   ಅವರು ಭಾನುವಾರ ಜನ್ನಾಪುರ ಹುತ್ತಾಕಾಲೋನಿ ಚಂದ್ರಾಲಯದಲ್ಲಿ ಎಂ.ಜೆ ಅಪ್ಪಾಜಿ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಒಂದು ನೆನಪು ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರ ರಾಜಕೀಯ ಜೀವನ ವೈಶಿಷ್ಟ ಪೂರ್ಣವಾಗಿದ್ದು, ಅವರು ಎಂದಿಗೂ ಕುಟುಂಬ ರಾಜಕಾರಣ ಮಾಡಲಿಲ್ಲ. ಅವರು ನಂಬಿ ಬಂದವರನ್ನು ಅಧಿಕಾರ ಇರಲಿ, ಇಲ್ಲದಿರಲಿ ಕೊನೆಯವರೆಗೂ ಕೈಬಿಡಲಿಲ್ಲ. ತಮ್ಮದೇ ಆದ ವರ್ಚಸ್ಸು, ಅಭಿಮಾನ ಬಳಗ ಹೊಂದಿದ್ದರು. ಅವರು ನಿಧನ ಹೊಂದಿದ ನಂತರ ಕೆಲವು ಹಿಂಬಾಲಕರು ಸುಳ್ಳು ಹೇಳಿಕೆಗಳನ್ನು ನೀಡುವ ಜೊತೆಗೆ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸದಲ್ಲಿ ತೊಡಗಿದ್ದಾರೆಂದು ಹೆಸರು ಹೇಳದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
   ನಾನು ಶಿಮೂಲ್ ಅಧ್ಯಕ್ಷನಾಗಲು ಎಂ.ಜೆ ಅಪ್ಪಾಜಿಯವರು ಕಾರಣಕರ್ತರಾಗಿದ್ದು, ಅವರ ಋಣ ತೀರಿಸಲು ಸಾಧ್ಯವಿಲ್ಲ. ಅವರು ಬದುಕಿರುವಾಗ ಅವರಿಗೆ ನೀಡುತ್ತಿದ್ದ ಗೌರವವನ್ನು ಅವರ ನಿಧನ ಹೊಂದಿದ ನಂತರವೂ ಸಹ ನೀಡುತ್ತಿದ್ದೇನೆ. ಅಭಿಮಾನಿಗಳು, ಕಾರ್ಯಕರ್ತರಲ್ಲೂ ಇದೆ ಭಾವನೆ ಇದೆ ಎಂದು ಭಾವಿಸಿರುತ್ತೇನೆ. ಆದರೆ ಅಪ್ಪಾಜಿಯವರ ನೆರವಿನಿಂದ ಇಂದು ರಾಜಕಾರಣದಲ್ಲಿ ಮುಂದೆ ಬಂದವರು ಅವರನ್ನು ಇಂದು ಅಗೌರವದಿಂದ ಕಾಣುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
  ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್ ಮಾತನಾಡಿ, ಅಪ್ಪಾಜಿಯವರ ಹೆಸರು ಹೇಳಿಕೊಳ್ಳುವುದೇ ಒಂದೇ ದೊಡ್ಡ ಗೌರವವಾಗಿದೆ. ಈ ಗೌರವದ ಮುಂದೆ ಯಾವ ಅಧಿಕಾರವೂ ದೊಡ್ಡದಲ್ಲ. ಅಪ್ಪಾಜಿಯವರು ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಕ್ಷೇತ್ರದ ಜನರು ಕೊನೆಯವರೆಗೂ ಮರೆಯುವುದಿಲ್ಲ. ಯಾರೋ ಕೆಲವು ಬೆಂಬಲಿಗರು ಬಿಟ್ಟು ಹೋಗಬಹುದು. ಅದಕ್ಕೆ ಯಾರು ಸಹ ಚಿಂತಿಸಬೇಕಾದ ಅಗತ್ಯವಿಲ್ಲ. ಬಿಟ್ಟು ಹೋದವರ ಪೈಕಿ ಎರಡರಷ್ಟು ಮಂದಿ ಪುನಃ ಹಿಂದಿರುಗಿ ಬರಲಿದ್ದಾರೆ. ಅಪ್ಪಾಜಿಯವರ ಕುಟುಂಬ ಪುನಃ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದೆ. ಶಾರದ ಅಪ್ಪಾಜಿಯವರು ಎಲ್ಲಾ ಅಭಿಮಾನಿಗಳಿಗೂ, ಕಾರ್ಯಕರ್ತರಿಗೂ ಮಾರ್ಗದರ್ಶಕರಾಗಿ ಮುನ್ನಡೆಸಿಕೊಂಡು ಹೋಗುವ ವಿಶ್ವಾಸವಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾರದ ಅಪ್ಪಾಜಿ, ಅಭಿಮಾನಿಗಳು, ಕಾರ್ಯಕರ್ತರು ಅಪ್ಪಾಜಿಯವರ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚಿರಋಣಿಯಾಗಿರುತ್ತೇನೆ. ಅಪ್ಪಾಜಿಯವರಿಗೆ ನೀಡುತ್ತಿದ್ದ ಸಹಕಾರ, ಪ್ರೋತ್ಸಾಹ ನಾನು ಸಹ ನಿರೀಕ್ಷಿಸುತ್ತೇನೆ. ಕೊನೆಯವರೆಗೂ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತೇನೆಂದು ಭರವಸೆ ನೀಡಿದರು.
   ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದ ಪೂರ‍್ಯಾನಾಯ್ಕ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಹಿರಿಯ ಮುಖಂಡ ಕರಿಯಪ್ಪ, ನ್ಯಾಯವಾದಿ ಎ.ಟಿ ರವಿ ಸೇರಿದಂತೆ ಇನ್ನಿತರರು ಮಾತನಾಡಿದರು.
   ನಗರಸಭಾ ಸದಸ್ಯರಾದ ಎಚ್.ಬಿ ರವಿಕುಮಾರ್, ಆನಂದ್, ಮುಖಂಡರಾದ ಬಸವರಾಜ ಆನೇಕೊಪ್ಪ, ಧರ್ಮರಾಜ್, ಕೆ. ಮಂಜುನಾಥ್, ಉಮೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ಜೆಡಿಎಸ್ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಕೃಷ್ಣರಾಜ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ ವಂದಿಸಿದರು.

ಅಂಗವೈಕಲ್ಯದಿಂದ ಮುಕ್ತಿ ಹೊಂದಿ ಆರೋಗ್ಯವಂತರಾಗಿ ಬೆಳೆಯಲು ಪಲ್ಸ್ ಪೋಲಿಯೋ ಸಹಕಾರಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ರೋಟರಿ ಕ್ಲಬ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೊಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.  
   ಭದ್ರಾವತಿ, ಜ. ೩೧: ಅಂಗವೈಕಲ್ಯದಿಂದ ಮುಕ್ತಿಹೊಂದುವ ಜೊತೆಗೆ ಸದೃಢವಾಗಿ ಆರೋಗ್ಯವಂತರಾಗಿ ಬೆಳೆಯಲು ಪಲ್ಸ್ ಪೋಲಿಯೋ ಹೆಚ್ಚು ಸಹಕಾರಿಯಾಗಿದ್ದು, ಪ್ರತಿಯೊಬ್ಬರು ನಿರ್ಲಕ್ಷ್ಯವಹಿಸದೆ ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
   ಅವರು ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ರೋಟರಿ ಕ್ಲಬ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೊಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪೋಲಿಯೋ ದುಷ್ಪರಿಣಾಮಗಳು ಎಲ್ಲರಿಗೂ ತಿಳಿದಿದೆ. ಈ ಹಿಂದೆ ದೇಶದಲ್ಲಿ ಸಾಕಷ್ಟು ಜನರು ಅಂಗವೈಕಲ್ಯಕ್ಕೆ ಒಳಗಾಗಿ ಸಂಕಷ್ಟದ ಬದುಕು ನಡೆಸಿದ್ದರು. ಭವಿಷ್ಯದಲ್ಲಿ ಪುನಃ ಪೋಲಿಯೋ ಕಾಣಿಸಿಕೊಳ್ಳಬಾರದೆಂಬ ಧ್ಯೇಯದೊಂದಿಗೆ  ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಸಂಶೋಧನೆಗಳು ನಡೆದು ಪಲ್ಸ್ ಪೋಲಿಯೋ ಕಂಡು ಹಿಡಿಯಲಾಯಿತು. ಆ ನಂತರ ದೇಶಾದ್ಯಂತ ನಿರಂತರವಾಗಿ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ಹಾಕಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.  
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿ, ತಾಲೂಕಿನಾದ್ಯಂತ ಪಲ್ಸ್ ಪೋಲಿಯೋ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಅಲೆಮಾರಿ ಹಾಗು ವಲಸೆ ಕಾರ್ಮಿಕ ಕುಟುಂಬಗಳನ್ನು ಗುರುತಿಸಿ ೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹಾಕಲಾಗುತ್ತಿದೆ. ಭಾರತ ದೇಶ ೨೦೧೧ರಲ್ಲಿಯೇ ಪೋಲಿಯೋ ಮುಕ್ತವಾಗಿದ್ದು, ಪಾಕಿಸ್ತಾನ, ಅಪ್ಘಾನಿಸ್ತಾನ ಸೇರಿದಂತೆ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಪೋಲಿಯೋ ಇನ್ನೂ ಜೀವಂತವಾಗಿದ್ದು, ಈ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ದೇಶದಲ್ಲಿ ಪಲ್ಸ್ ಪೋಲಿಯೋ ಹಾಕಲಾಗುತ್ತಿದೆ ಎಂದರು.
  ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಓ. ಮಲ್ಲಪ್ಪ, ರೇವತಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುಂದರ್‌ಬಾಬು, ರಮಾಕಾಂತ, ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್, ಕಾರ್ಯದರ್ಶಿ ಎಂ.ಎನ್ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

Saturday, January 30, 2021

ಜ.೩೧ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

ಭದ್ರಾವತಿ, ಜ. ೩೦: ಪ್ರತಿ ವರ್ಷದಂತೆ ಈ ಬಾರಿ ಸಹ ತಾಲೂಕಿನಾದ್ಯಂತ ಜ.೩೧ರಂದು ಆರೋಗ್ಯ ಇಲಾಖೆ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಬಾರಿ ತಾಲೂಕಿನಲ್ಲಿ ೫ ವರ್ಷದೊಳಗಿನ ಒಟ್ಟು ೨೬,೯೦೮ ಮಕ್ಕಳನ್ನು ಗುರುತಿಸಲಾಗಿದೆ. ಈ ಪೈಕಿ ಗ್ರಾಮಾಂತರ ಪ್ರದೇಶದಲ್ಲಿ ೧೬,೧೩೫ ಮತ್ತು ನಗರ ಪ್ರದೇಶದಲ್ಲಿ ೧೦,೭೭೩ ಮಕ್ಕಳಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು ೧೦೦ ಮತ್ತು ನಗರ ಪ್ರದೇಶದಲ್ಲಿ ಒಟ್ಟು ೬೭ ಬೂತ್‌ಗಳಲ್ಲಿ ಪೋಲಿಯೋ ಹನಿ ಹಾಕಲಾಗುವುದು. ಒಟ್ಟು ೮ ಟ್ರಾನ್ಸಿಟ್ ತಂಡಗಳು ಕಾರ್ಯ ನಿರ್ವಹಿಸಲಿವೆ.
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೮ ಗಂಟೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಕೋರಿದ್ದಾರೆ.

ಕೆಎಸ್‌ಆರ್‌ಟಿಸಿ ಘಟಕದಿಂದ ಮಣಿಪಾಲ್-ಉಡುಪಿ ನಡುವೆ ಬಸ್ ಸಂಚಾರ ಆರಂಭಿಸಿ

ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಭದ್ರಾವತಿ, ಜ. ೩೦: ನಗರದ ಭದ್ರಾವತಿ ಕೆಎಸ್‌ಆರ್‌ಟಿಸಿ ಘಟಕದಿಂದ ಮಣಿಪಾಲ್-ಉಡುಪಿ ನಡುವೆ ಬಸ್ ಸಂಚಾರ ಆರಂಭಿಸುವಂತೆ ಆಗ್ರಹಿಸಿ ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಆರೋಗ್ಯ ಸೌಲಭ್ಯ ಪಡೆದುಕೊಳ್ಳಲು ನಗರದಿಂದ ಮಣಿಪಾಲ್ ಆಸ್ಪತ್ರೆಗೆ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದು, ಅಲ್ಲದೆ ಅನಾರೋಗ್ಯಕ್ಕೆ ಒಳಗಾದವರ ಜೊತೆ ಸಹಾಯಕರು, ಕುಟುಂಬಸ್ಥರು ಸಹ ತೆರಳುತ್ತಿದ್ದಾರೆ.  ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅದರಲ್ಲೂ ಗ್ರಾಮೀಣ ಭಾಗದ ಜನರು ತೊಂದರೆ ಅನುಭವಿಸುವಂತಾಗಿದೆ.
ನಗರ ಹಾಗು ಗ್ರಾಮಾಂತರ ಭಾಗದಲ್ಲಿ ವಾಸಿಸುತ್ತಿರುವ ಹೆಚ್ಚಿನ ಜನರು ಕೂಲಿ ಕಾರ್ಮಿಕರು, ಬಡ ವರ್ಗದವರಾಗಿದ್ದು, ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಅಗತ್ಯವಾಗಿದೆ. ಭದ್ರಾವತಿ ಘಟಕದಿಂದ ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ, ಇದೆ ರೀತಿ ಶಿವಮೊಗ್ಗ-ಆಯನೂರು-ರಿಪ್ಪನ್‌ಪೇಟೆ-ಹುಂಚ-ಕೋಣಂದೂರು-ತೀರ್ಥಹಳ್ಳಿ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ಹಾಗು ಎನ್.ಆರ್ ಪುರ-ಕೊಪ್ಪ-ಹರಿಹರಪುರ-ಆಗುಂಬೆ ಮಾರ್ಗವಾಗಿ ಮಣಿಪಾಲ್-ಉಡುಪಿಗೆ ಬಸ್ ಸಂಚಾರ ಆರಂಭಿಸುವಂತೆ ಈಗಾಗಲೇ ಹಲವು ಬಾರಿ ಶಾಸಕರು ಹಾಗು ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಕೆಎಸ್‌ಆರ್‌ಟಿಸಿ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮನವಿಗೆ ಪೂರಕವಾಗಿ ಸ್ಪಂದಿಸಿ ತಕ್ಷಣ ಬಸ್ ಸಂಚಾರ ಆರಂಭಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆ ಗೌರವಾಧ್ಯಕ್ಷ ಡಿ. ನಂಜಪ್ಪ, ಅಧ್ಯಕ್ಷ ಜಿ.ಟಿ ಬಸವರಾಜ್, ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹಮೂರ್ತಿ ಮತ್ತು ಖಜಾಂಚಿ ಕೆ.ಜೆ ಹನುಮಂತಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಂಪಿಎಂ ನಿವೃತ್ತ ಉದ್ಯೋಗಿ ಟಿ. ನಂಜಪ್ಪ ನಿಧನ

ಟಿ. ನಂಜಪ್ಪ(ಲಂಬೂ)
     ಭದ್ರಾವತಿ, ಜ. ೩೦: ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಉದ್ಯೋಗಿ, ಕಾಂಗ್ರೆಸ್ ಮುಖಂಡ ಟಿ. ನಂಜಪ್ಪ(ಲಂಬೂ)(೮೫) ಶನಿವಾರ ನಿಧನ ಹೊಂದಿದರು.
   ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಎಂಪಿಎಂ ಕಾರ್ಖಾನೆ ಎಲೆಕ್ಟ್ರಿಕಲ್ ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೈಸೂರು ಕಾಗದ ಕಾರ್ಖಾನೆ ನೌಕರರ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಆರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಿವೃತ್ತಿ ನಂತರ ಜನ್ನಾಪುರದ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು.
   ಮೃತರ ನಿಧನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ ದಾಸೇಗೌಡ ಸೇರಿದಂತೆ ಎಂಪಿಎಂ ನಿವೃತ್ತ ಕಾರ್ಮಿಕರು, ಒಕ್ಕಲಿಗ ಸಮಾಜದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದೇವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ರು.೫೦೦ ಕೋ. ಅನುದಾನ ನೀಡಿ

ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ

ಭದ್ರಾವತಿಯಲ್ಲಿ ದೇವಾಂಗ ಅಭಿವೃದ್ದಿ ನಿಗಮ ಹೋರಾಟ ಸಮಿತಿ ವತಿಯಿಂದ ಶನಿವಾರ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಜ. ೩೦: ಶಿವನ ತ್ರಿನೇತ್ರದಿಂದ ಉದ್ಭವಿಸಿದ ಶ್ರೀ ದೇವಲ ದೇವಾಂಗ ಮಹರ್ಷಿಯವರು ತ್ರಿಮೂರ್ತಿಗಳಿಗೆ ಹಾಗು ಇತರೆ ದೇವತೆಗಳಿಗೆ ವಸ್ತ್ರವನ್ನು ನೇಯ್ದುಕೊಟ್ಟು ಮೂಲ ನೇಕಾರ ಅನಿಸಿಕೊಂಡಿದ್ದಾರೆ. ಮಾನ ಕಾಪಾಡುವ ದೇವಾಂಗ ಜನಾಂಗಕ್ಕೆ ಪ್ರಸ್ತುತ ಸರ್ಕಾರ ಯಾವುದೇ ರೀತಿಯ ಮೀಸಲಾತಿ ಕಲ್ಪಿಸದೆ ಮೂಲೆ ಗುಂಪಾಗಿಸಿದೆ ಎಂದು ದೇವಾಂಗ ಅಭಿವೃದ್ದಿ ನಿಗಮ ಹೋರಾಟ ಸಮಿತಿ ಅಧ್ಯಕ್ಷ ಧರ್ಮಪಾಲಕ್ಷ ಮತ್ತು ತಾಲೂಕು ದೇವಾಂಗ ಸಮಾಜದ ಅಧ್ಯಕ್ಷ ಎಂ. ಪ್ರಭಾಕರ ಆರೋಪಿಸಿದರು.
  ಅವರು ಶನಿವಾರ ದೇವಾಂಗ ಅಭಿವೃದ್ದಿ ನಿಗಮ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಕಾರ್ಯಕ್ರಮದಲ್ಲಿ ನೇತೃತ್ವವಹಿಸಿ ಮಾತನಾಡಿದರು.
    ಈ ಹಿಂದೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಕಾಲದಲ್ಲಿ ದೇವಾಂಗ ಸಮಾಜವನ್ನು '೨ಎ' ವರ್ಗಕ್ಕೆ ಸೇರಿಸಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಇತ್ತೀಚಿನ ಕೆಲವು ವರ್ಷಗಳಿಂದ ಈ ಸೌಲಭ್ಯಗಳನ್ನು ಪಡೆಯಲು ಸಮಾಜಕ್ಕೆ ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.
     ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಹಿಂದುಳಿದ ವರ್ಗಗಳ ಸಮಾಜಗಳ ಅಭಿವೃದ್ದಿಗೆ ಸಾಕಷ್ಟು ಕಾಳಜಿ ವಹಿಸಿದ್ದು, ಈಗಾಗಲೇ ಹಲವು ಹಿಂದುಳಿದ ವರ್ಗಗಳ ಸಮಾಜಗಳಿಗೆ ನಿಗಮ/ಮಂಡಳಿ/ ಪ್ರಾಧಿಕಾರಗಳನ್ನು ರಚನೆ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ದೇವಾಂಗ ಸಮಾಜಕ್ಕೂ ನಿಗಮ ರಚನೆ ಮಾಡುವ ಮೂಲಕ ರು. ೫೦೦ ಕೋ. ಅನುದಾನ ನೀಡಬೇಕು. ಮಹಾರಾಷ್ಟ್ರ ಸರ್ಕಾರ ವಿದ್ಯಾರ್ಥಿಗಳಿಗೆ ನೀಡಿದಂತೆ ಪ್ರತ್ಯೇಕವಾಗಿ ಶೇ.೨ರಷ್ಟು ಮೀಸಲಾತಿ ನೀಡುವುದು, ಶ್ರೀ ದೇವಲ ಮಹರ್ಷಿಗಳ ಜಯಂತಿಯನ್ನು ಸರ್ಕಾರದಿಂದ ಆಚರಿಸಬೇಕು, ಶ್ರೀ ದೇವಲ ಮಹರ್ಷಿ ಮತ್ತು ಆದ್ಯ ವಚನಕಾರ ಶ್ರೀ  ದೇವರ ದಾಸಿಮಯ್ಯನವರ ಪ್ರತಿಮೆಗಳನ್ನು ಬೆಂಗಳೂರು ಹಾಗು ದೇವಾಂಗ ಸಮಾಜದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಸ್ಥಾಪಿಸುವುದು, ಶ್ರೀ ದೇವರ ದಾಮಯ್ಯನವರ ಜನ್ಮ ಸ್ಥಳ ಅಭಿವೃದ್ಧಿಗೆ ಮುದನೂರು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
   ಹೋರಾಟ ಸಮಿತಿ ಸಂಚಾಲಕ ಡಿ.ವಿ ವೇಣು, ಕಾರ್ಯದರ್ಶಿ ಡಿ. ನಾಗರಾಜಪ್ಪ, ದೇವಾಂಗ ಸಮಾಜದ ಕಾರ್ಯದರ್ಶಿ ಬಿ. ಆಂಜನೇಯ, ಪ್ರಮುಖರಾದ ಬಿ.ಕೆ ಚಂದ್ರಪ್ಪ, ಎಸ್.ಬಿ ನಿರಂಜನಮೂರ್ತಿ, ಹೊನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Friday, January 29, 2021

ವಿವಿಧ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳ ಪರಿಶೀಲನಾ ಸಭೆ

ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ, ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ

ನಗರದ ವಿವಿಧ ಇಲಾಖೆಗಳ ವಿವಿಧ ಅನುದಾನಗಳಡಿಯಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ನಡೆಯಿತು.
   ಭದ್ರಾವತಿ, ಜ. ೨೯: ನಗರದ ವಿವಿಧ ಇಲಾಖೆಗಳ ವಿವಿಧ ಅನುದಾನಗಳಡಿಯಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಿತು.
   ತಾಲೂಕು ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರಿ ನಿವೇಶನಗಳ ಒಟ್ಟು ೨೩ ಎಕರೆ ಜಾಗವನ್ನು ಗುರುತಿಸಿ ಸರ್ವೆ ಮಾಡಿ ಗಡಿ ನಿಗದಿಪಡಿಸುವ ಸಂಬಂಧ ಕೈಗೊಂಡ ಕ್ರಮಗಳ ಕುರಿತು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ರವರು ಸಭೆಗೆ ಮಾಹಿತಿ ನೀಡಿ, ನಗರಸಭೆ ವ್ಯಾಪ್ತಿಯ ತಿಮ್ಲಾಪುರ, ಬೊಮ್ಮನಕಟ್ಟೆ ಮತ್ತು ಉಜ್ಜನಿಪುರದಲ್ಲಿ ಸರ್ಕಾರಿ ಭೂಮಿಯನ್ನು ಗುರುತಿಸಲಾಗಿದೆ. ಈ ಬಾರಿ ಪೂರ್ಣ ಬಂದೋಬಸ್ತ್ ಮಾಡಿಕೊಂಡು ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಇದರಿಂದ ಆಕ್ರೋಶಗೊಂಡ ಶಾಸಕರು,  ನಮಗೆ ಬೇಕಾಗಿರುವುದು ಕೇವಲ ೨೩ ಎಕರೆ ಖಾಲಿ ಜಾಗ ಮಾತ್ರ. ಈ ಸಂಬಂಧ ಸುಮಾರು ಒಂದು ವರ್ಷದಿಂದ ಖಾಲಿ ಇರುವ ಸರ್ಕಾರಿ ಜಾಗ ಗುರುತಿಸುವಂತೆ ತಾಲೂಕು ಆಡಳಿತಕ್ಕೆ ತಿಳಿಸಲಾಗಿದೆ. ಆದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ತಾಲೂಕು ಆಡಳಿತ ಮತ್ತು ಕಂದಾಯ ಇಲಾಖೆ ಸತ್ತು ಹೋಗಿರುವಂತೆ ಕಂಡು ಬರುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಾಣುತ್ತಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಗೊತ್ತಾಗುತ್ತಿಲ್ಲ. ಮುಂದಿನ ಒಂದು ವಾರದೊಳಗೆ ಜಾಗವನ್ನು ಗುರುತಿಸಿ ಸರ್ವೆ ಮಾಡಿ ಗಡಿ ನಿಗದಿಪಡಿಸಿ ಕಂದಾಯ ಇಲಾಖೆ ಸ್ವತ್ತು ಎಂದು ಫಲಕ ಹಾಕುವಂತೆ ಎಚ್ಚರಿಸಿದರು.  
   ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಹೊಸಮನೆ ಶಿವಾಜಿ ಸರ್ಕಲ್ ರಸ್ತೆ, ತಾಲೂಕು ಕಚೇರಿ ರಸ್ತೆ ಮತ್ತು ಹೊಸ ಸೇತುವೆ ರಸ್ತೆಗಳ ಅಭಿವೃದ್ಧಿ ಕಾಮಗಾರಿ, ಸೀಗೆಬಾಗಿಯಿಂದ ರಂಗಪ್ಪ ವೃತ್ತದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಬಿಳಕಿ ಕ್ರಾಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಮತ್ತು ಜಯಶ್ರೀ ಸರ್ಕಲ್ ರಸ್ತೆ ಮತ್ತು ವೇಲೂರು ಶೆಡ್ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಸಾರ್ವಜನಿಕರಿಂದ ಸಾಕಷ್ಟು ದೂರುಗಳಿಗೆ ಕೇಳಿ ಬರುತ್ತಿವೆ. ಜನರು ರಸ್ತೆ ಹಾಳಾಗಿರುವ ಸಂಬಂಧ ಪೌರಾಯುಕ್ತರನ್ನು ಪ್ರಶ್ನಿಸುತ್ತಿದ್ದಾರೆ. ಲೋಕೋಪಯೋಗಿ ಇಲಾಖೆಯವರು ಒಂದು ವರ್ಷ ಕಳೆದರೂ ಸಹ  ಒಂದು ಸಾಮಾನ್ಯ ಸೀಮೆಂಟ್ ರಸ್ತೆ ನಿರ್ಮಾಣ ಮಾಡಿಲ್ಲ. ಶಿವಾಜಿ ಸರ್ಕಲ್‌ನಿಂದ ಕಬಳಿಕಟ್ಟೆ ವರೆಗೆ ರಸ್ತೆಯ ಅಕ್ಕಪಕ್ಕದಲ್ಲಿರುವ ಮರಗಳನ್ನು ಕಡಿತಲೆಗೊಳಿಸಿಲ್ಲ, ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಲ್ಲ. ಕೆಇಬಿ ಇಲಾಖೆ ಒಂದು ದರಿದ್ರ ಇಲಾಖೆಯಾಗಿದೆ. ವಿದ್ಯುತ್ ಬಿಲ್ ಕಟ್ಟಲಿಲ್ಲ ಎಂದರೆ ವಿದ್ಯುತ್ ಕಡಿತ ಮಾಡುತ್ತಾರೆ. ಆದರೆ ಅವರು ಮಾಡಬೇಕಾಗಿರುವ ಕೆಲಸ ಮಾತ್ರ ಸರಿಯಾಗಿ ಮಾಡುವುದಿಲ್ಲ. ತಕ್ಷಣ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.  
    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸಂಬಂಧಿಸಿದಂತೆ ಅಮೃತ್ ಯೋಜನೆಯಡಿ ಕೈಗೊಳ್ಳುತ್ತಿರುವ ಕುಡಿಯುವ ನೀರಿನ ಅಭಿವೃದ್ಧಿ ಕಾಮಗಾರಿಗಳು ಹಾಗು ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಒಳಚರಂಡಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿಗೆ ಅಗತ್ಯವಿರುವ ಸೀಮೆಂಟ್, ಜಲ್ಲಿಕಲ್ಲು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಸರಿಯಾಗಿ ಪೂರೈಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಕಾಮಗಾರಿ ಸಮರ್ಪಕವಾಗಿ ನಡೆಸುವ ಮೂಲಕ ಶೀಘ್ರವಾಗಿ ಮುಕ್ತಾಯಗೊಳಿಸಬೇಕೆಂದರು.
     ಈ ನಡುವೆ ಶಾಸಕರು ಕೆಎಸ್‌ಆರ್‌ಟಿಸಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಲಾಖೆಗೆ ಹಣ ಮುಖ್ಯ ಅಲ್ಲ. ಜನರಿಗೆ ಸೇವೆ ಕೊಡುವುದು ಮುಖ್ಯ. ಆದಾಯ ಬರುವುದಿಲ್ಲ ಎಂದು ಅಗತ್ಯವಿರುವ ಕಡೆ ಬಸ್‌ಗಳನ್ನು ಬಿಡದಿರುವುದು ಸರಿಯಲ್ಲ. ಶಾಲೆಗಳು ಆರಂಭಗೊಂಡು ಹಲವು ದಿನಗಳು ಕಳೆದಿವೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ವಿದ್ಯಾರ್ಥಿಗಳು ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಪ್ರತಿಭಟನೆ ಮಾಡಿದ ನಂತರ ಇಲಾಖೆಗೆ ಜ್ಞಾನೋದಯವಾಗಿದೆ. ಇಲಾಖೆ ಅಧಿಕಾರಿಗಳು ಇದಕ್ಕೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಸಾರಿಗೆ ವ್ಯವಸ್ಥೆಯನ್ನು ಸೂಕ್ತ ರೀತಿ ಕಲ್ಪಿಸಿಕೊಡಬೇಕೆಂದು ಅಸಮಾಧಾನ ವ್ಯಕ್ತಪಡಿಸಿದರು.
     ಉಳಿದಂತೆ ನಗರಸಭೆವತಿಯಿಂದ ಕೈಗೊಳ್ಳಲಾಗುತ್ತಿರುವ ಕೆಎಂಆರಪಿ ಯೋಜನೆಯಡಿ ರು. ೨೧ ಕೋ. ಅನುದಾನದದ ಒಳಚರಂಡಿ ಅಭಿವೃದ್ಧಿ ಕಾಮಗಾರಿ, ಖಾಸಗಿ ಬಸ್ ನಿಲ್ದಾಣದ ಅಭಿವೃದ್ಧಿ, ನಗರದ ವಿವಿಧ ವೃತ್ತಗಳ ಅಭಿವೃದಧಿ, ನಗರಸಭೆ ಕಛೇರಿಯ ನೂತನ ಕಟ್ಟಡ, ಸ್ಟ್ರೀಟ್ ವೆಂಡಿಂಗ್ ಜೋನ್ ಕಾಮಗಾರಿ, ಮೀನು ಮಾರುಕಟ್ಟೆ ಅಭಿವೃದ್ಧಿ, ಬಸವೇಶ್ವರ ವೃತ್ತದ ಅಭಿವೃದ್ಧಿ, ನಗರೋತ್ಥಾನ ಹಂತ-೩ರ ಉಳಿಕೆ ಅನುದಾನದ ಕಾಮಗಾರಿಗಳು ಮತ್ತು ವಸತಿ ಯೋಜನೆಗಳ ಪ್ರಗತಿ ಹಾಗು ಕೆಆರ್‌ಐಡಿಎಲ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮತ್ತು ಮೆಸ್ಕಾಂ ನಗರ ಉಪ ವಿಭಾಗದ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
     ಸಭೆಯಲ್ಲಿ ನಗರಸಭೆ ಪೌರಾಯುಕ್ತ ಮನೋಹರ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಶರತ್ಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಅಂಗನವಾಡಿ ಕಟ್ಟಡಗಳ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ವಾಗ್ವಾದ

ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವರ್ತನೆಗೆ ಸದಸ್ಯರ ಆಕ್ರೋಶ

ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಶುಕ್ರವಾರ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ದೇವಿ ಅಧ್ಯಕ್ಷತೆಯಲ್ಲಿ ನಡೆಯಿತು.
     ಭದ್ರಾವತಿ, ಜ. ೨೯: ತಾಲೂಕಿನಲ್ಲಿರುವ ಅಂಗನವಾಡಿ ಕಟ್ಟಡಗಳ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳೊಂದಿಗೆ ತಾಲೂಕು ಪಂಚಾಯಿತಿ ಸದಸ್ಯರು ವಾಗ್ವಾದಕ್ಕೆ ಇಳಿದ ಘಟನೆ ಶುಕ್ರವಾರ ನಡೆಯಿತು.
    ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್‌ರವರು ಇಲಾಖೆ ವರದಿ ಮಂಡಿಸಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಹೊಸದಾಗಿ ೨೬ ಅಂಗನವಾಡಿ ಕಟ್ಟಡಗಳ ಕಾಮಗಾರಿ ನಡೆಯುತ್ತಿದ್ದು, ಪ್ರಗತಿ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸದಸ್ಯರಾದ ಪ್ರೇಮ್‌ಕುಮಾರ್, ಅಣ್ಣಾಮಲೈ, ತಿಪ್ಪೇಶ್‌ರಾವ್ ಸೇರಿದಂತೆ ಇನ್ನಿತರರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಸದಸ್ಯರ ಗಮನಕ್ಕೆ ತರುತ್ತಿಲ್ಲ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಜಾಗ ಕೊಡಿಸಲು ಮಾತ್ರ ನಾವು ಬೇಕು. ಉಳಿದಂತೆ ನಮ್ಮನ್ನು ಕಾಮಗಾರಿ ಆರಂಭ ಮಾಡುವಾಗ, ಕಾಮಗಾರಿ ಪರಿಶೀಲನೆ ನಡೆಸುವಾಗ ಹಾಗು ಪೂರ್ಣಗೊಂಡಾಗ ಯಾವ ಮಾಹಿತಿಯನ್ನು ನೀಡದೆ ಕಡೆಗಣಿಸಲಾಗುತ್ತಿದೆ. ನಾವು ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಹಣ ಕೊಡಿ ಎಂದು ಕೇಳುತ್ತಿಲ್ಲ. ಇಲಾಖೆ ಅಧಿಕಾರಿಗಳು ನಮಗೆ ಕಾಮಗಾರಿ ಕುರಿತು ಮಾಹಿತಿ ನೀಡುವ ಜೊತೆಗೆ ಗೌರವದಿಂದ ವರ್ತಿಸಿ ಎಂದು ಕೇಳುತ್ತಿದ್ದೇವೆ. ಈ ಸಂಬಂಧ ಹಲವಾರು ಬಾರಿ ಸಭೆಯಲ್ಲಿ ಚರ್ಚಿಸಿದ್ದರೂ ಸಹ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನಿರ್ಲಕ್ಷ್ಯ ಧೋರಣೆಯಿಂದ ವರ್ತಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಈ ನಡುವೆ ಸೂಕ್ತ ಉತ್ತರ ನೀಡದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುದ್ಧ ಅಧ್ಯಕ್ಷರು ಸಹ ಅಸಮದಾನ ವ್ಯಕ್ತಪಡಿಸಿ, ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿ. ಸಭೆಗೆ ಬಂದಿರುವುದು ವರದಿ ನೀಡುವುದಕ್ಕೆ ಹೊರತು ರಾಜಕಾರಣ ಮಾಡುವುದಕ್ಕಲ್ಲ. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ ಎಂದರು.
    ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಧಿಕಾರಿ ಟಿ.ಎನ್ ಸೋಮಶೇಖರಯ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯರಾದ ಪ್ರೇಮ್‌ಕುಮಾರ್ ಮತ್ತು ಕೆ. ಮಂಜುನಾಥ್‌ರವರು, ಖಾಸಗಿ ಶಿಕ್ಷಣ ಸಂಸ್ಥೆಗಳು ಬೇಕಾಬಿಟ್ಟಿಯಾಗಿ ಶುಲ್ಕ ವಸೂಲಾತಿ ಮಾಡುತ್ತಿವೆ. ಪ್ರಸ್ತಕ್ತ ಸಾಲಿನ ಶೈಕ್ಷಣಿಕ ಶಿಕ್ಷಣ ಆರಂಭಗೊಂಡಿಲ್ಲ. ಈಗಾಗಲೇ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಅಲ್ಲದೆ ಸರ್ಕಾರದ ಮಾರ್ಗಸೂಚಿಯಂತೆ ಯಾವ ಖಾಸಗಿ ಶಾಲೆಗಳು ಸಹ ಶುಲ್ಕ ವಸೂಲಿ ಮಾಡುತ್ತಿಲ್ಲ. ಅಲ್ಲದೆ ಶಿಲ್ಕ ಮಾಹಿತಿಯನ್ನು ಸರ್ಕಾರದ ಸುತ್ತೋಲೆಯಂತೆ ಪ್ರಕಟಣಾ ಫಲಕಗಳಲ್ಲಿ ಪ್ರದರ್ಶಿಸುತ್ತಿಲ್ಲ.  ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ತಕ್ಷಣ ಗಮನಹರಿಸುವಂತೆ ಆಗ್ರಹಿಸಿದರು.
     ಇದಕ್ಕೆ ಉತ್ತರಿಸಿದ ಟಿ.ಟನ್ ಸೋಮಶೇಖರಯ್ಯ, ಈಗಾಗಲೇ  ಸರ್ಕಾರದ ಸುತ್ತೋಲೆ ಖಾಸಗಿ ಶಾಲೆಗಳ ಗಮನಕ್ಕೆ ತರುವ ಮೂಲಕ ಎಚ್ಚರಿಸಲಾಗಿದೆ. ಉಳಿದಂತೆ ಮುಂದಿನ ೪ ದಿನಗಳಲ್ಲಿ ಎಲ್ಲಾ ಖಾಸಗಿ ಶಾಲೆಗಳು ಶುಲ್ಕ ಮಾಹಿತಿಗೆ ಕುರಿತಂತೆ ಫಲಕಗಳಲ್ಲಿ ಪ್ರಕಟಿಸುವಂತೆ ಸೂಚಿಸಲಾಗುವುದು ಎಂದರು.
   ಇದೆ ಸಂದರ್ಭದಲ್ಲಿ ದೇವರನರಸೀಪುರ ಮುರಾರ್ಜಿದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಬಸವರಾಜಪ್ಪ ಮಾಹಿತಿ ನೀಡಿ, ವಸತಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿಯೇ ಶಾಲೆಗಳನ್ನು ಆರಂಭಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು. ಇದೆ ಸಂದರ್ಭದಲ್ಲಿ ಆರ್‌ಎಎಫ್ ಸಿಬ್ಬಂದಿಗಳಿಗೆ ವಸತಿ ಶಾಲೆಯಲ್ಲಿ ಸುಮಾರು ೧ ವರ್ಷದ ವರೆಗೆ ಉಳಿದುಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿರುವ ಸಂಬಂಧ ಅಧ್ಯಕ್ಷೆ ಲಕ್ಷ್ಮೀದೇವಿ ತೀವ್ರ ಅಸಮಧಾನ ವ್ಯಕ್ತಪಡಿಸಿ ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಲಿದೆ ಆತಂಕ ವ್ಯಕ್ತಪಡಿಸಿದರು.
    ಇದಕ್ಕೆ ಉತ್ತರಿಸಿದ ಬಸವರಾಜಪ್ಪ, ಇಲಾಖೆಯ ಉನ್ನತ ಅಧಿಕಾರಿಗಳ ಆದೇಶದಂತೆ ಆರ್‌ಎಎಫ್ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಉಳಿದು ಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
    ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ ಮಾಹಿತಿ ನೀಡಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ವಿವರಿಸಿದರು. ಅಲ್ಲದೆ ಆಸ್ಪತ್ರೆಯಲ್ಲಿ ವೈದ್ಯರು ಹಾಗು ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ಮಾಹಿತಿ ನೀಡಿದರು.
   ಇದೆ ರೀತಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆ ವರದಿ ಮಂಡಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ನೇತ್ರಾಬಾಯಿ, ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಉಪಸ್ಥಿತರಿದ್ದರು.

Thursday, January 28, 2021

ಬನದ ಹುಣ್ಣಿಮೆ ಪ್ರಯುಕ್ತ ಹೋಮ-ಪೂಜೆ

ಭದ್ರಾವತಿ ಹೊಸಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಮಹೋತ್ಸವ ಗುರುವಾರ ಅದ್ದೂರಿಯಾಗಿ ಜರುಗಿತು.
   ಭದ್ರಾವತಿ, ಜ. ೨೮: ನಗರದ ಹೊಸಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಮಹೋತ್ಸವ ಗುರುವಾರ ಅದ್ದೂರಿಯಾಗಿ ಜರುಗಿತು.
    ಬನಶಂಕರಿ ದೇವಿಗೆ ಪಂಚಾಮೃತ ಅಭಿಷೇಕ, ಮಹಾ ಗಣಪತಿ ಹೋಮ, ದುರ್ಗಾಹೋಮ ಹಾಗೂ ಕಳಾಹೋಮ ಏರ್ಪಡಿಸಲಾಗಿತ್ತು. ಪೂರ್ಣಾಹುತಿಯ ನಂತರ ಮಹಾಮಂಗಳಾರತಿ ಮತ್ತು ಮಹಾಪ್ರಸಾದದ ವ್ಯವಸ್ಥೆ ಏರ್ಪಡಿಸಲಾಗಿತ್ತು. ನೂರಾರು ಭಕ್ತರು ಪಾಲ್ಗೊಂಡಿದ್ದರು. ಸಂಜೆ ರಾಜಬೀದಿ ಉತ್ಸವ ಏರ್ಪಡಿಸಲಾಗಿತ್ತು. ಪ್ರತಿ ವರ್ಷದಂತೆ ಈ ಬಾರಿ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡಿದ್ದರು.
      ತಾಲೂಕು ಕಚೇರಿ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲೂ ಸಹ ದೇವಿಗೆ  ಅಭಿಷೇಕ, ವಿಶೇಷಪೂಜೆ ಏರ್ಪಡಿಸಲಾಗಿತ್ತು. ನೂರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.


ಭದ್ರಾವತಿ ಹೊಸಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಮಹೋತ್ಸವ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.

ಯಲ್ಲಮ್ಮ ದೇವಿಗೆ ೧ ಕೆ.ಜಿ ತೂಕದ ಬೆಳ್ಳಿ ಮುಖವಾಡ ಸಮರ್ಪಣೆ

ಭದ್ರಾವತಿ ಹಳೇನಗರದ ದೊಡ್ಡಕುರುಬರಬೀದಿಯಲ್ಲಿ (ರೇಣುಕಮ್ಮ ಕಾಂಪೌಂಡ್) ಮಾಲಾ ಜೋಗಮ್ಮ ರವರು ಲೋಕ ಕಲ್ಯಾಣಾರ್ಥವಾಗಿ ಪ್ರತಿಷ್ಠಾಪಿಸಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ಸುಮಾರು ೧ ಕೆ.ಜಿ ತೂಕದ ಬೆಳ್ಳಿ ಮುಖವಾಡ ಸಮರ್ಪಿಸಿರುವುದು.
     ಭದ್ರಾವತಿ, ಜ. ೨೮ : ಹಳೇನಗರದ ದೊಡ್ಡಕುರುಬರಬೀದಿಯಲ್ಲಿ (ರೇಣುಕಮ್ಮ ಕಾಂಪೌಂಡ್) ಮಾಲಾ ಜೋಗಮ್ಮ ರವರು ಲೋಕ ಕಲ್ಯಾಣಾರ್ಥವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯನ್ನು ಅನೇಕ ವರ್ಷಗಳಿಂದ ಪ್ರತಿಷ್ಠಾಪಿಸಿ ಆರಾಧಿಸಿಕೊಂಡು ಬರುತ್ತಿದ್ದು,
     ಭಕ್ತರ ಕೋರಿಕೆಯಂತೆ ಶ್ರೀ ಯಲ್ಲಮ್ಮ ದೇವಿಗೆ ಸುಮಾರು ೧ ಕೆ.ಜಿ ತೂಕದ ಬೆಳ್ಳಿಯ ನೂತನ ಮುಖವಾಡವನ್ನು ಬನದ ಹುಣ್ಣಿಮೆಯಂದು ಗುರುವಾರ ಸಮರ್ಪಿಸಿದರು.  
    ಕಾರ್ಯಕ್ರಮದ ಅಂಗವಾಗಿ ಮಂಗಳವಾದ್ಯದೊಂದಿಗೆ ಭದ್ರಾನದಿಯಿಂದ ಗಂಗೆಪೂಜೆಯೊಂದಿಗೆ ಉತ್ಸವ ನಡೆಸಲಾಯಿತು .
    ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಯಸ್ಸಿಗೆ ಸಹಕರಿಸಿದ ಭಕ್ತರಿಗೆ ಮಾಲಾ ಜೋಗಮ್ಮ ಕೃತಜ್ಞತೆ ಸಲ್ಲಿಸಿದರು.

೧೭ ದಿನಗಳ ಹೋರಾಟಕ್ಕೆ ಸ್ಪಂದಿಸಿದ ಸಂಸದ ಬಿ.ವೈ ರಾಘವೇಂದ್ರ

ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ಅನುದಾನಕ್ಕೆ ಭರವಸೆ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಸುಮಾರು ೧೭ ದಿನಗಳಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೊನೆಗೂ ಸಂಸದ ಬಿ.ವೈ ರಾಘವೇಂದ್ರ ಗುರುವಾರ ಸ್ಪಂದಿಸಿದರು.
    ಭದ್ರಾವತಿ, ಜ. ೨೮: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಛೇರಿ ಮುಂಭಾಗ ಸುಮಾರು ೧೭ ದಿನಗಳಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಕೊನೆಗೂ ಸಂಸದ ಬಿ.ವೈ ರಾಘವೇಂದ್ರ ಸ್ಪಂದಿಸಿದ್ದಾರೆ.  
    ಸಮಿತಿಯ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ೫.೫೦ ಕೋ. ರು. ಬಿಡುಗಡೆಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಕಾರ್ಯಕ್ರಮ ನಿಮಿತ್ತ ಗುರುವಾರ ನಗರಕ್ಕೆ ಆಗಮಿಸಿದ್ದ ಸಂಸದರು ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಸಮಿತಿಗೆ ನೀಡಿದರು.
    ಸಮಿತಿ ವತಿಯಿಂದ ಸಂಸದರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಪ್ರಮುಖರಾದ ಆರ್. ಬಸವರಾಜ್, ಐ.ಎಲ್ ಅರುಣ್‌ಕುಮಾರ್, ಎಂ.ವಿ ಚಂದ್ರಶೇಖರ್, ಸುಬ್ಬೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

೩೨ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ : ಜಾಗೃತಿ ಜಾಥಾ

೩೨ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ ಭದ್ರಾವತಿಯಲ್ಲಿ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ಗುರುವಾರ ಜಾಗೃತಿ ಜಾಥಾ ನಡೆಸಲಾಯಿತು.
   ಭದ್ರಾವತಿ, ಜ. ೨೮: ೩೨ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ ನಗರದ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ಗುರುವಾರ ಜಾಗೃತಿ ಜಾಥಾ ನಡೆಸಲಾಯಿತು.
    ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಸಿ.ಎನ್ ರಸ್ತೆ ರಂಗಪ್ಪವೃತ್ತದ ವರೆಗೆ ಜಾಥಾ ನಡೆಯಿತು. ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ ಶಾಂತಕುಮಾರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು.
    ರೋಟರಿ ಕ್ಲಬ್ ಕಾರ್ಯದರ್ಶಿ ಎಂ.ಎನ್ ಗಿರೀಶ್, ಜೋನಲ್ ಲೆಫ್ಟಿನೆಂಟ್ ಕೆ. ನಾಗರಾಜ್, ಸುಂದರ್ ಬಾಬು, ತೀರ್ಥಯ್ಯ, ರಾಘವೇಂದ್ರ ಉಪಾಧ್ಯಾಯ, ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್, ಬಿಜೆಪಿ ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಸಂಚಾರಿ ಠಾಣಾಧಿಕಾರಿ ಕವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೂರು ಪುಟಾಣಿ ಮಕ್ಕಳಿಂದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಾಣಿಕೆ ಹುಂಡಿ ಸಮರ್ಪಣೆ

ಭದ್ರಾವತಿ, ಜ. ೨೮: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಗರದ ಹೊಸಮನೆಯ ಮೂರು ಪುಟಾಣಿ ಮಕ್ಕಳು ಪ್ರತಿದಿನ ಸಂಗ್ರಹಿಸಿದ್ದ ಕಾಣಿಕೆ ಹುಂಡಿ ಹಣ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
     ಹೊಸಮನೆ ನಿವಾಸಿಗಳಾದ ಗಿರೀಶ್ ಪುಟ್ಟೇಗೌಡ ಹಾಗೂ ಮೋಹನ್ ಪುಟ್ಟೆಗೌಡರ ಮಕ್ಕಳಾದ ಶಿಖರ್, ಕೌಶಿಕ್ ಮತ್ತು ದಿಗಂತ್ ಅಯೋಧ್ಯೆ ಶ್ರೀರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನ ಕೈಗೊಂಡಿರುವ ಮಾಹಿತಿ ಅರಿತು ಪ್ರತಿದಿನ ಕಾಣಿಕೆ ಹುಂಡಿಯಲ್ಲಿ ಹಣ ಸಂಗ್ರಹಿಸಿದ್ದರು. ಒಟ್ಟು ೩,೦೧೦ ರು. ಹಣ ನೀಡುವ ಗಮನ ಸೆಳೆದಿದ್ದಾರೆ.
   ಶ್ರೀರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನದ ಪ್ರಮುಖರಾದ ರಾಮನಾಥ್ ಬರ್ಗೆ, ಸುಬ್ರಮಣ್ಯ, ಸುನಿಲ್‌ಗಾಯಕ್‌ವಾಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭದ್ರಾವತಿ ಹೊಸಮನೆಯ ಮೂರು ಪುಟಾಣಿ ಮಕ್ಕಳು ಪ್ರತಿದಿನ ಸಂಗ್ರಹಿಸಿದ್ದ ಕಾಣಿಕೆ ಹುಂಡಿ ಹಣ ನೀಡುವ ಮೂಲಕ ಗಮನ ಸೆಳೆದಿದ್ದಾರೆ.


ಭದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆ

ಭದ್ರಾವತಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ಸಭೆಯಲ್ಲಿ ಕೆಲವು ಪಂಚಾಯಿತಿಗಳ ಸದಸ್ಯರು ಮೀಸಲಾತಿ ನಿಗದಿ ಸಂಬಂಧ ಉಂಟಾದ ಗೊಂದಲಗಳನ್ನು ಸ್ಥಳದಲ್ಲಿಯೇ ಚರ್ಚಿಸಿ ಬಗೆಹರಿಸಿಕೊಂಡರು.
     ಭದ್ರಾವತಿ, ಜ. ೨೮: ತಾಲೂಕಿನ ೪೧ ಗ್ರಾಮ ಪಂಚಾಯಿತಿಗಳ ಪೈಕಿ ೩೭ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಯಿತು.
ನಗರದ ಚನ್ನಗಿರಿ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಚಿತ್ರ ಮಂದಿರ(ಡಬಲ್ ಟಾಕೀಸ್)ದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದಲ್ಲಿ ಮೀಸಲಾತಿ ನಿಗದಿ ಸಭೆ ನಡೆಯಿತು.


     ಅರಕೆರೆ ಅಧ್ಯಕ್ಷ 'ಎ' ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ದೊಣಬಘಟ್ಟ ಅಧ್ಯಕ್ಷ 'ಎ' ವರ್ಗಕ್ಕೆ, ಉಪಾಧ್ಯಕ್ಷ ಎಸ್.ಸಿ ಮಹಿಳೆ, ಕಲ್ಲಹಳ್ಳಿ ಅಧ್ಯಕ್ಷ 'ಎ'ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ, ಯರೇಹಳ್ಳಿ ಅಧ್ಯಕ್ಷ 'ಎ' ವರ್ಗಕ್ಕೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಸೈದರಕಲ್ಲಹಳ್ಳಿ ಅಧ್ಯಕ್ಷ 'ಎ' ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಸಿದ್ಲೀಪುರ ಅಧ್ಯಕ್ಷ 'ಎ'ವರ್ಗ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ಮಾರಶೆಟ್ಟಿಹಳ್ಳಿ ಅಧ್ಯಕ್ಷ 'ಎ' ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ತಡಸ ಅಧ್ಯಕ್ಷ 'ಎ'ವರ್ಗ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕಾಗೇಕೋಡಮಗ್ಗಿ ಅಧ್ಯಕ್ಷ 'ಎ' ವರ್ಗ ಮಹಿಳೆ, ಉಪಾಧ್ಯಕ್ಷ 'ಬಿ' ವರ್ಗ ಮಹಿಳೆ, ದಾಸರಕಲ್ಲಹಳ್ಳಿ ಅಧ್ಯಕ್ಷ 'ಬಿ' ವರ್ಗ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಬಾರಂದೂರು ಅಧ್ಯಕ್ಷ 'ಬಿ'ವರ್ಗ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಗುಡಮಘಟ್ಟ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಆಗರದಹಳ್ಳಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಯಡೇಹಳ್ಳಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅರಹತೊಳಲು ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಕಲ್ಲಿಹಾಳ್ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಅರಬಿಳಚಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
     ವೀರಾಪುರ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ 'ಬಿ'ವರ್ಗ, ದೊಡ್ಡೇರಿ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಮಾವಿನಕೆರೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಅರಳಿಕೊಪ್ಪ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ತಾವರಘಟ್ಟ ಅಧ್ಯಕ್ಷ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಆನವೇರಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ, ಮಂಗೋಟೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ನಾಗತಿಬೆಳಗಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕೂಡ್ಲಿಗೆರೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕೊಮಾರನಹಳ್ಳಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಅರಳಿಹಳ್ಳಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ 'ಎ' ವರ್ಗ, ಅಂತರಗಂಗೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ 'ಎ'ವರ್ಗ, ಕಂಬದಾಳ್ ಹೊಸೂರು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಪಂಗಡ ಮಹಿಳೆ, ಮೈದೊಳಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಪರಿಶಿಷ್ಟ ಜಾತಿ, ಸನ್ಯಾಸಿಕೋಡಮಗ್ಗೆ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ 'ಎ'ವರ್ಗ ಮಹಿಳೆ, ಹನುಮಂತಪುರ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ 'ಎ' ವರ್ಗ ಮಹಿಳೆ, ಸಿಂಗನಮನೆ ಅಧ್ಯಕ್ಷ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನಿಂಬೆಗೊಂದಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಅತ್ತಿಗುಂದ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ,  ಉಪಾಧ್ಯಕ್ಷ 'ಎ' ವರ್ಗ, ಬಿಳಿಕಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕಾರೇಹಳ್ಳಿ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮತ್ತು ಹಿರಿಯೂರು ಅಧ್ಯಕ್ಷ ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮೀಸಲಾಗಿದೆ.


    ಮೀಸಲಾತಿ ನಿಗದಿ ಸಂಬಂಧ ಕೆಲವು ಪಂಚಾಯಿತಿಗಳ ಸದಸ್ಯರು ಜಿಲ್ಲಾಧಿಕಾರಿಗಳೊಂದಿಗೆ ಪ್ರಶ್ನಿಸಿ ಗೊಂದಲ ಬಗೆಹರಿಸಿಕೊಂಡರು. ಪ್ರಸ್ತುತ ೩೦ ತಿಂಗಳ ಅವಧಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.
ತಾಲೂಕಿನ ಒಟ್ಟು ೪೧ ಗ್ರಾಮ ಪಂಚಾಯಿತಿಗಳ ಪೈಕಿ ಕಳೆದ ತಿಂಗಳು ಡಿಸೆಂಬರ್‌ನಲ್ಲಿ ೩೫ ಪಂಚಾಯಿತಿಗಳಿಗೆ ಮಾತ್ರ ಚುನಾವಣೆ ನಡೆಸಲಾಯಿತು. ಅವಧಿ ಮುಗಿಯದ ಕಾರಣ ಕೊಮಾರನಹಳ್ಳಿ ಮತ್ತು ವೀರಾಪುರ ಈ ಎರಡು ಗ್ರಾಮ ಪಂಚಾಯಿತಿಗಳಿಗೆ ಹಾಗು ಉಳಿದಂತೆ ಸರ್ಕಾರ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಹೊಳೆಹೊನ್ನೂರು, ಹನುಮಂತಾಪುರ, ಸಿದ್ಲಿಪುರ ಮತ್ತು ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿಲ್ಲ. ಇದೀಗ ಮೀಸಲಾತಿ ೩೭ ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಲಾಗಿದೆ.  
     ಹಿರಿಯ ಅಧಿಕಾರಿ ವೆಂಕಟೇಶ್ ಬನಕಟ್ಟಿ, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, January 27, 2021

ಹಗಲಿರುಳು ಹೋರಾಟ ನಡೆಸುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸದಿರುವುದು ಖಂಡನೀಯ : ಬಿ.ಎನ್ ರಾಜು

ಜ.೨೮ರಂದು ನಗರಕ್ಕೆ ಆಗಮಿಸಲಿರುವ ಸಂಸದರು ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲಿ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಬುಧವಾರ ಪತ್ರಿಕಾಗೋಷ್ಠಿ ನಡೆಸಲಾಯಿತು
ಭದ್ರಾವತಿ, ಜ. ೨೭: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.೧೧ರಿಂದ ತಾಲೂಕು ಕಛೇರಿ ಮುಂಭಾಗ ಹಗಲಿರುಳು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸಹ ಮುಖ್ಯಮಂತ್ರಿಗಳಾಗಲಿ, ಸಂಸದರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಸ್ಪಂದಿಸದಿರುವುದು ಖಂಡನೀಯ. ತಕ್ಷಣ ಧರಣಿ ಸ್ಥಳಕ್ಕೆ ಆಗಮಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಎಚ್ಚರಿಸಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದೇಶಕ್ಕೆ ಆಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ಎಷ್ಟೋ ಮುಖ್ಯವೋ,  ಪ್ರಪಂಚದಲ್ಲಿ ಮನುಕುಲಕ್ಕೆ ಮಾನವೀಯತೆಯ ಸಮಾನತೆ ಸಂದೇಶ ಸಾರಿದ ಭೀಮ ಮಂದಿರಗಳು ಸಹ ಅಷ್ಟೇ ಮುಖ್ಯವಾಗಿವೆ. ಭೀಮ ಎಂದರೆ ಡಾ. ಭೀಮರಾವ್ ಅಂಬೇಡ್ಕರ್, ಭೀಮ ಮಂದಿರ ಎಂದರೆ ಶಾಲಾ-ಕಾಲೇಜುಗಳು, ಗ್ರಂಥಾಲಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಭವನಗಳು, ವಿಶ್ವವಿದ್ಯಾನಿಲಯಗಳಾಗಿವೆ ಎಂದರು.
ದಲಿತ ಚಳುವಳಿ ಹುಟ್ಟಿದ ಈ ಕ್ಷೇತ್ರದಲ್ಲಿ ಕಳೆದ ಸುಮಾರು ೨೫ ವರ್ಷಗಳಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಕೊನೆಗೂ ಹೋರಾಟಕ್ಕೆ ಒಂದು ಹಂತದಲ್ಲಿ ಫಲ ಲಭಿಸಿದ ಪರಿಣಾಮ ೨೦೧೭ರಲ್ಲಿ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಆದರೆ ಕಾಮಗಾರಿ ಪೂರ್ಣಗೊಳ್ಳದೆ ಪ್ರಸ್ತುತ ಸ್ಥಗಿತಗೊಂಡಿದೆ. ಇದನ್ನು ಖಂಡಿಸಿ ಸಮಿತಿವತಿಯಿಂದ ಹೋರಾಟ ನಡೆಸಲಾಗುತ್ತಿದೆ. ತಕ್ಷಣ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ೫.೫೦ ಕೋ. ರು. ಬಿಡುಗಡೆಗೊಳಿಸಿ ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ಮುಕ್ತಾಯಗೊಳಿಸಬೇಕು. ಅಲ್ಲದೆ ನೂತನ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಉದ್ಘಾಟಿಸಬೇಕೆಂದು ಆಗ್ರಹಿಸಿದರು.
ತಾಲೂಕಿನ ನವಲೆ ಬಸಾಪುರ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಾಗು ಸ್ಮಶಾಣ ಭೂಮಿ ಇಲ್ಲದಿರುವುದನ್ನು ಸಮಿತಿ ಖಂಡಿಸುತ್ತದೆ. ಅಲ್ಲದೆ ತಾಲೂಕಿನ ಹೊಳೆಹೊನ್ನೂರು ಕಲ್ಲಾಪುರದ ರಂಗಾಪುರ ಗ್ರಾಮದ ಸರ್ವೆ ನಂ.೧ರಲ್ಲಿ ೭೪ ಎಕರೆ ೧೬ ಗುಂಟೆ ಜಮೀನಿದ್ದು, ಹಲವಾರು ವರ್ಷಗಳಿಂದ ೨೪ ಕುಟುಂಬದ ರೈತರು ಸಾಗುವಳಿ ಮಾಡುತ್ತಿದ್ದು, ಇವರನ್ನು ಅಕ್ರಮವಾಗಿ ಬಂಧಿಸಿ ಜೈಲಿಗೆ ಕಳುಹಿಸುವ ಜೊತೆಗೆ ಶ್ರೀಮಂತರಿಗೆ ಜಮೀನು ಮಂಜೂರು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ಉಳಿದಿರುವ ೪೪ ಎಕರೆ ಜಮೀನಿನಲ್ಲಿ ೨೪ ಕುಟುಂಬದ ರೈತರಿಗೆ ಜಮೀನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಗಲಿರುಳು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಸಹ ಸಂಸದರು ಸ್ಪಂದಿಸದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಧರಣಿ ಸತ್ಯಾಗ್ರಹ ನಡೆಯುತ್ತಿರುವ ಸ್ಥಳದ ಸಮೀಪದಲ್ಲೇ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನ ಉದ್ಘಾಟನೆಗೆ ಜ.೨೮ರ ಗುರುವಾರ ಬೆಳಿಗ್ಗೆ ಸಂಸದರು ಆಗಮಿಸಲಿದ್ದಾರೆಂಬ ವಿಚಾರ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸಂಸದರು ಅಂಬೇಡ್ಕರ್ ಭವನ ಕಾಮಗಾರಿಯನ್ನು ವೀಕ್ಷಿಸಿ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಲು ಮುಂದಾಗಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಸಮಿತಿ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದು ಖಚಿತ ಎಂದರು.
ಸಮಿತಿ ಪ್ರಮುಖರಾದ ಆರ್. ಬಸವರಾಜ್, ಐ.ಎಲ್ ಅರುಣ್‌ಕುಮಾರ್, ಎಂ.ವಿ ಚಂದ್ರಶೇಖರ್, ಸುಬ್ಬೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನವೀಕರಣಗೊಂಡ ಪಿಎಲ್‌ಡಿ ಬ್ಯಾಂಕ್ ಕಟ್ಟಡ, ನೂತನ ಮಳಿಗೆ ಉದ್ಘಾಟನೆ

ಭದ್ರಾವತಿ ಸಿ.ಎನ್ ರಸ್ತೆಯಲ್ಲಿರುವ ನವೀಕರಣಗೊಂಡ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಟ್ಟಡ ಮತ್ತು ನೂತನ ಮಳಿಗೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಭದ್ರಾವತಿ, ಜ. ೨೭: ನಗರದ ಸಿ.ಎನ್ ರಸ್ತೆಯಲ್ಲಿರುವ ನವೀಕರಣಗೊಂಡ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಟ್ಟಡ ಮತ್ತು ನೂತನ ಮಳಿಗೆಯನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
     ಬ್ಯಾಂಕಿನ ಅಧ್ಯಕ್ಷ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಲೋಕೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಕುಮಾರ್, ಬ್ಯಾಂಕಿನ ಉಪಾಧ್ಯಕ್ಷೆ ಎ.ಬಿ ಆಶಾ, ನಿರ್ದೇಶಕರಾದ ಜಿ.ಎಂ ಚನ್ನಬಸಪ್ಪ, ವಿರೂಪಾಕ್ಷಪ್ಪ, ಕೆ. ಮಂಜಪ್ಪ, ಗೋಪಾಲಪ್ಪ ಮತ್ತು ಟಿ.ಎಸ್ ರಂಗಸ್ವಾಮಿ, ಬ್ಯಾಂಕಿನ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜ.೨೮ ನೂತನ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನ ಉದ್ಘಾಟನೆ

ಭದ್ರಾವತಿ, ಜ. ೨೭: ಹಳೇನಗರದ ವೀರಶೈವ ಸೇವಾ ಸಮಿತಿ ವತಿಯಿಂದ ಜ.೨೮ರ ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ನೀರಾವರಿ ನಿಗಮದ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನದ ಉದ್ಘಾಟನೆ ನಡೆಯಲಿದೆ.
   ಬಳ್ಳಾರಿ ಜಿಲ್ಲೆಯ ಉಜ್ಜಯನಿ ಪೀಠದ ಶ್ರೀ ೧೦೦೮ ಜಗದ್ಗುರು ಸಿದ್ದಲಿಂಗರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು, ತರೀಕೆರೆ ಹಿರೇಮಠದ ಶ್ರೀ ಜಗದೀಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಹಿರೇಮಠದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಶ್ರೀ ಕೇದಾರಲಿಂಗ ಶಿವ ಶಾಂತವೀರ ಶಿವಾಚಾರ್ಯ ಸ್ವಾಮೀಜಿ ಮತ್ತು ಹಾರ‍್ನಹಳ್ಳಿ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು.
    ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕರಾದ ಬಿ.ಕೆ ಸಂಗಮೇಶ್ವರ್, ಎಸ್. ರುದ್ರೇಗೌಡ, ನಗರಸಭೆ ಪೌರಾಯುಕ್ತ ಮನೋಹರ್,  ಸೂಡಾ ಅಧ್ಯಕ್ಷ ಎಸ್.ಎಸ್  ಜ್ಯೋತಿಪ್ರಕಾಶ್, ಗಿರೀಶ್‌ಪಟೇಲ್, ಕೂಡ್ಲಿಗೆರೆ ಹಾಲೇಶ್, ಮಂಗೋಟೆ ರುದ್ರೇಶ್, ಬಿ.ಎಸ್ ನಾಗರಾಜ್, ಎಸ್. ಅಡವೀಶಯ್ಯ, ಆರ್.ಎಸ್ ಶೋಭಾ, ಕೆ.ಸಿ ವೀರಭದ್ರಪ್ಪ, ಪಿ.ಎಸ್ ಅವಿನಾಶ್, ಬಿ.ಕೆ ಜಗನ್ನಾಥ, ಎಸ್.ಎಸ್ ಜಗದೀಶ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
   ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.

ಆಂಗ್ಲ ಭಾಷೆ ಕೇವಲ ವ್ಯವಹಾರಿಕ ಭಾಷೆಯಾಗಲಿ, ಕನ್ನಡ ಬದುಕಿನ ಭಾಷೆಯಾಗಲಿ

ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿ. ಮೇಘ ಉದ್ಘಾಟನಾ ನುಡಿ

ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಈಶ್ವರಮ್ಮ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಬಿ. ಮೇಘ ಉದ್ಘಾಟಿಸಿದರು.
    ಭದ್ರಾವತಿ, ಜ. ೨೭: ಆಂಗ್ಲ ಭಾಷೆಯನ್ನು ಕೇವಲ ವ್ಯವಹಾರಿಕ ಭಾಷೆಯಾಗಿ ಬಳಸಿ ಮಾತೃ ಭಾಷೆ ಕನ್ನಡಕ್ಕೆ ಹೆಚ್ಚಿನ ಮಾನ್ಯತೆ ನೀಡುವ ಜೊತೆಗೆ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕೆಂದು ನಗರದ ನ್ಯೂಟೌನ್ ಈಶ್ವರಮ್ಮ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಬಿ. ಮೇಘ ತಿಳಿಸಿದರು.
ಅವರು ಬುಧವಾರ  ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
     ಕನ್ನಡ ಭಾಷೆಗೆ ತನ್ನದೇ ಆದ ಭವ್ಯ ಪರಂಪರೆ, ವಿಶಿಷ್ಟತೆ ಇದ್ದು, ನಾಡಿನಲ್ಲಿ ಅನೇಕ ಸಾಹಿತಿಗಳು, ಕವಿಗಳು, ಕಾದಂಬರಿಕಾರರು ಸೇರಿದಂತೆ ಅನೇಕ ಮಹನಿಯರು ಕನ್ನಡ ಭಾಷೆ ಮೆರಗನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳು ಮಾತೃ ಭಾಷೆ ಕನ್ನಡಕ್ಕೆ  ಹೆಚ್ಚಿನ ಒತ್ತು ನೀಡಿ ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚಾಗಿ ಬಳಸಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕೆಂದರು.
    ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ನಮ್ಮ ಪ್ರತಿಷ್ಠೆ ಹೆಚ್ಚಿಸಿಕೊಳ್ಳಲು ಅಥವಾ ಇನ್ನೊಬ್ಬರಿಂದ ಪ್ರಶಂಸೆಗೆ ಒಳಗಾಗಬೇಕೆಂಬ ಉದ್ದೇಶದಿಂದ ಆರಂಭಿಸಿಲ್ಲ ಬದಲಾಗಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆರಂಭಿಸಲಾಗಿದೆ. ನಮ್ಮ ಪ್ರಯತ್ನ ಯಶಸ್ವಿಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳು ಗುರುತಿಸಿಕೊಂಡಿದ್ದಾರೆ ಎಂದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥಸ್ವಾಮೀಜಿ ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿದ್ದರು. ಎಸ್‌ಎವಿ ಶಾಲೆ ೧೦ನೇ ತರಗತಿ ವಿದ್ಯಾರ್ಥಿನಿ ಭುವನಶ್ರೀ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
    ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ  ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಪ್ರಾಂಶುಪಾಲೆ ಡಾ. ಹರಿಣಾಕ್ಷಿ ಸ್ವಾಗತಿಸಿದರು.

Tuesday, January 26, 2021

ವಿಐಎಸ್‌ಎಲ್, ಗೃಹ ರಕ್ಷಕದಳ ಸೇರಿದಂತೆ ವಿವಿಧೆಡೆ ಗಣರಾಜ್ಯೋತ್ಸವ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.

ಭದ್ರಾವತಿ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ವರ್ಷದ ಗಣ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಭದ್ರಾವತಿ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.

ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.

   ಭದ್ರಾವತಿ, ಜ. ೨೬: ನಗರದ ವಿವಿಧೆಡೆ ಸರ್ಕಾರಿ ಕಛೇರಿಗಳು, ಶಾಲಾ-ಕಾಲೇಜು, ವಿವಿಧ ಸಂಘ-ಸಂಸ್ಥೆಗಳಲ್ಲಿ ೭೨ನೇ ವರ್ಷದ ಗಣ ರಾಜ್ಯೋತ್ಸವ ಆಚರಿಸಲಾಯಿತು.
     ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗಣರಾಜ್ಯೋತ್ಸವ:
   ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.
     ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಖಾನೆಯಲ್ಲಿ ಹಲವಾರು ಗುಣಾತ್ಮಕ ಕ್ರಮಗಳ ಮೂಲಕ ವೆಚ್ಚ ಕಡಿಮೆ ಮಾಡಿ ಉತ್ಪಾದನೆಯಲ್ಲಿ ಗಣನೀಯವಾಗಿ ಸುಧಾರಣೆ ಕಂಡು ಕೊಳ್ಳಲಾಗಿದೆ. ಇದರ ಪರಿಣಾಮ ೨೦೨೦ರ ಸಾಲಿನಲ್ಲಿ ೮೪ ಲಕ್ಷ ರು. ಲಾಭ ಗಳಿಸಿದೆ. ಮುಂದಿನ ಇನ್ನೂ ಹೆಚ್ಚಿನ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಮೂಲಕ ಗತವೈಭವ ಮರಳಿ ಪಡೆಯಲು ಪ್ರಯತ್ನಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
   ಕಾರ್ಯಕ್ರಮದಲ್ಲಿ ೨೦೨೦ರಲ್ಲಿ ಕಾರ್ಖಾನೆಯಲ್ಲಿ ಶ್ರೇಷ್ಠ ಸಾಧನೆ ಮಾಡಿರುವವರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು. ಅಧಿಕಾರಿಗಳ ಹಾಗು ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್ ನಿರೂಪಿಸಿದರು.
     ಗೃಹ ರಕ್ಷಕದಳದಿಂದ ಗಣ ರಾಜ್ಯೋತ್ಸವ :
    ನಗರದ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ೭೨ನೇ ವರ್ಷದ ಗಣ ರಾಜ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಪೌರಾಯುಕ್ತ ಮನೋಹರ್, ಘಟಕಾಧಿಕಾರಿ ಜಗದೀಶ್, ಹಿರಿಯ ವೈದ್ಯಾಧಿಕಾರಿ ಡಾ. ರವೀಂದ್ರನಾಥ ಕೋಠಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
      ಪೇಪರ್‌ಟೌನ್ ಆಂಗ್ಲ ಶಾಲೆ ಗಣ ರಾಜ್ಯೋತ್ಸವ:
     ಕಾಗದನಗರದ ಪೇಪರ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣ ರಾಜ್ಯೋತ್ಸವದಲ್ಲಿ ಎಂಪಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ದತ್ತಾತ್ರೇಯ ಭಾರದ್ವಾಜ್ ಧ್ವಜಾರೋಹಣ ನೆರವೇರಿಸಿದರು.
   ಶಾಲೆಯ ಪ್ರಾಂಶುಪಾಲ ಆರ್. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಆಯೋಗ ಆಯೋಜಿಸಿದ್ದ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
      ಟ್ರ್ಯಾಕ್ಟರ್ ರ್‍ಯಾಲಿಗೆ ಬೆಂಬಲ:
    ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಯಿತು.
ಟ್ರ್ಯಾಕ್ಟರ್ ರ್‍ಯಾಲಿ ಮಧ್ಯಾಹ್ನ ೧೨.೩೦ಕ್ಕೆ ಆರಂಭಗೊಂಡು ನಗರದ ಸಿ.ಎನ್ ರಸ್ತೆ, ಬಿ.ಎಚ್ ರಸ್ತೆ ಮೂಲಕ ಶಿವಮೊಗ್ಗ ತಲುಪಿತು. ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ಪ್ರಮುಖರಾದ ರಾಮಚಂದ್ರರಾವ್, ಮೋಹನ್, ಶರತ್ಚಂದ್ರ, ವೀರೇಶ್, ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಸುಮಾರು ೪೦ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದವು.
     ಕೇರಳ ಸಮಾಜಂ ವತಿದಿಂದ ಗಣರಾಜ್ಯೋತ್ಸವ :
     ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ನಗರದ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.
ಸಮಾಜಂ ಅಧ್ಯಕ್ಷ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್, ಉಪಾಧ್ಯಕ್ಷರಾದ ವಿ.ಕೆ ಮೊಹಿನ್, ಖಜಾಂಚಿ ಎ. ಚಂದ್ರಶೇಖರ್, ಮಹಿಳಾ ವಿಭಾಗಂ ಕಾರ್ಯದರ್ಶಿ ಎಸ್.ಎಚ್. ಕಲ್ಯಾಣಿ ಶಶಿಧರನ್, ಸಹಕಾರ್ಯದರ್ಶಿ ರೇಖಾಚಂದ್ರನ್ ಮತ್ತು ಸದಸ್ಯರಾದ ಎಸ್. ಕುಮಾರ್, ಶಶಿಕಲಾ ಸುರೇಶ್, ಶೈಲಜಾ ಸುರೇಶ್, ಪ್ರೇಮ ವೇಲಾಯುದನ್, ಕೆ.ಎಸ್ ಯಶೋಧ, ಶಾಂತಮ್ಮ ಅನಿತ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಜ.೨೮ರಂದು ತೈಪೂಸಂ ಜಾತ್ರೋತ್ಸವ

ಭದ್ರಾವತಿ, ಜ. ೨೬:  ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಜ.೨೮ರಂದು ತೈಪೂಸಂ ಜಾತ್ರೋತ್ಸವ ನಡೆಯಲಿದೆ.
     ಕೊರೋನಾ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವ ಸರಳವಾಗಿ ನಡೆಯುತ್ತಿದ್ದು, ಭಕ್ತಾದಿಗಳು ಸಹಕರಿಸುವಂತೆ ಆಡಳಿತ ಮಂಡಳಿ ಕೋರಿದೆ.

ಜಗತ್ತಿನಲ್ಲಿಯೇ ನಮ್ಮದ್ದು ವಿಶಿಷ್ಟವಾದ ಶ್ರೇಷ್ಠ ಸಂವಿಧಾನ : ಜಿ. ಸಂತೋಷ್‌ಕುಮಾರ್

ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ತಹಸೀಲ್ದಾರ್ ಜಿ. ಸಂತೋಷ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.  
    ಭದ್ರಾವತಿ, ಜ. ೨೬: ಭಾರತೀಯ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದ ಸಂವಿಧಾನವಾಗಿದ್ದು, ವಿಶಿಷ್ಟತೆಯಿಂದ ಕೂಡಿದೆ ಎಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಹೇಳಿದರು.
    ಅವರು ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಸಂದರ್ಭದಲ್ಲಿ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು ಸರ್ದಾರ್ ವಲ್ಲಭಬಾಯಿ ಪಟೇಲ್‌ರವರ ಪರಿಶ್ರಮದಿಂದಾಗಿ ಒಗ್ಗೂಡಿಸಲಾಯಿತು. ಆ ನಂತರ ಸಂವಿಧಾನ ರಚನೆ ಮೂಲಕ ದೇಶದಲ್ಲಿ ಏಕತೆ, ಸಮಾನತೆ ಪರಿಕಲ್ಪನೆಯನ್ನು ಕಂಡುಕೊಳ್ಳುವ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಲಾಯಿತು. ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪರಿಶ್ರಮ ಹೆಚ್ಚಿನದ್ದಾಗಿದೆ. ನಮ್ಮದು ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ಪ್ರತಿಯೊಬ್ಬರು ಈ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಅರಿತು ಮುನ್ನಡೆಬೇಕೆಂದರು.
    ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಅಹಿಂಸೆ, ತ್ಯಾಗ, ಬಲಿದಾನಗಳ ಮೂಲಕ ಮಹಾತ್ಮಗಾಂಧಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ನಂತರ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸರ್ವರನ್ನು ಸಮಾನತೆಯಿಂದ ಕಾಣುವ ವಿಶಿಷ್ಟವಾದ ಸಂವಿಧಾನವನ್ನು ರಚನೆ ಮಾಡಿದ ಪರಿಣಾಮ ವಿಶಿಷ್ಟವಾದ ಪ್ರಜಾಪ್ರಭುತ್ವ ವ್ಯವಸ್ಥೆ ರೂಪುಗೊಂಡು ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಈ ಹಿನ್ನಲೆಯಲ್ಲಿ ನಾವೆಲ್ಲರೂ ಇಂದು ನೆಮ್ಮದಿಯಾಗಿ ಬದುಕಲು ಸಾಧ್ಯವಾಗಿದೆ ಎಂದರು.
    ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಸದಸ್ಯರಾದ ಕೆ.ವಿ ರುದ್ರಪ್ಪ, ಆರ್. ತಿಪ್ಪೇಶ್‌ರಾವ್, ಎ.ಎನ್ ಉಷಾಕಿರಣ, ಯಶೋದಮ್ಮ, ಆಶಾ ಶ್ರೀಧರ್, ನಗರಸಭೆ ಪೌರಾಯುಕ್ತ ಮನೋಹರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಲವೇಶ್‌ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಪ್ರೌಢಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಮುಖಂಡರಾದ ಲೋಕೇಶ್, ಅಣ್ಣೋಜಿರಾವ್, ಮಂಜುಳರಾಮಚಂದ್ರ, ರಾಘವೇಂದ್ರ ಸರಾಟೆ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸುಮಂತಿ ಕಾರಂತ್ ತಂಡದವರು ಪ್ರಾರ್ಥಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಬೇಡ್ಕರ್‌ರವರು ನೀಡಿರುವ ಮತದಾನದ ಹಕ್ಕು ಮಾರಿಕೊಳ್ಳದಿರಿ : ಪೊಲೀಸ್ ಉಮೇಶ್

ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೫ರ ಹೊಸಬುಳ್ಳಾಪುರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೧ನೇ ಸಂವಿಧಾನ ದಿನಾಚರಣೆ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಮಹಾನಾಯಕ ಕಾರ್ಯಕ್ರಮವನ್ನು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಉದ್ಘಾಟಿಸಿದರು.
    ಭದ್ರಾವತಿ, ಜ. ೨೬: ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ನೀಡಿದ್ದು, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಯಾವುದೇ ಅಮಿಷಕ್ಕೆ ಬಲಿಯಾಗಿ ಮಾರಿಕೊಳ್ಳದೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜ್ಞಾನವಂತರು, ಸಮರ್ಥರು ಹಾಗು ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವವರನ್ನು ಆಯ್ಕೆ ಮಾಡಬೇಕೆಂದು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಮನವಿ ಮಾಡಿದರು.
      ಅವರು ಮಂಗಳವಾರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೫ರ ಹೊಸಬುಳ್ಳಾಪುರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೧ನೇ ಸಂವಿಧಾನ ದಿನಾಚರಣೆ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಮಹಾನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
      ಅಂಬೇಡ್ಕರ್‌ರವರು ಜಾತಿ, ಮತ, ಧರ್ಮ, ಶ್ರೀಮಂತ, ಬಡವ, ಅಕ್ಷರಸ್ಥ, ಅನಕ್ಷರಸ್ಥ ಎಂಬ ಯಾವುದೇ ಅಸಮಾನತೆ ಇಲ್ಲದೆ ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಿದ್ದಾರೆ. ಇದರ ಮಹತ್ವ ಪ್ರತಿಯೊಬ್ಬರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕೆಂದರು.
     ಬುದ್ಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಮಾತನಾಡಿ, ಪ್ರತಿಯೊಬ್ಬರು ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ನೀಡಿರುವ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಅರಿತು ಮುನ್ನಡೆಬೇಕೆಂದರು.
     ಪ್ರೊ. ಬಿ. ಕೃಷ್ಣಪ್ಪರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಅಂಬೇಡ್ಕರ್‌ರವರು ಈ ದೇಶಕ್ಕೆ ಮಾತ್ರ ಮಹಾನಾಯಕರಾಗಿ ಸೀಮಿತವಾಗಿಲ್ಲ. ಇಡೀ ಜಗತ್ತಿಗೆ ಮಹಾನಾಯಕರಾಗಿದ್ದು, ಈ ಹಿನ್ನಲೆಯಲ್ಲಿ ಅವರಿಗೆ ವಿಶ್ವಜ್ಞಾನಿ ಎಂಬ ಬಿರುದನ್ನು ನೀಡಲಾಗಿದೆ. ಹಲವು ಸಂಕಷ್ಟಗಳ ನಡುವೆ ತಮ್ಮಲ್ಲಿನ ಅಪಾರ ಜ್ಞಾನದ ಮೂಲಕ ವಿದ್ಯಾರ್ಜನೆ ಪಡೆದು ಉನ್ನತ ಮಟ್ಟಕ್ಕೆ ಏರಿದರು. ಅವರ ಆಶಯ ಪ್ರತಿಯೊಬ್ಬರು ವಿದ್ಯಾವಂತರಾಗಬೇಕೆಂಬುದಾಗಿದೆ. ದಲಿತರು ವಾಸಿಸುವ ಸ್ಥಳಗಳಲ್ಲಿ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಮಠಮಂದಿರಗಳು ತೆರೆಯುವ ಬದಲು ಶಾಲೆಗಳು, ಗ್ರಂಥಾಲಯಗಳು ತೆರೆಯಬೇಕೆಂಬುದಾಗಿದೆ. ಇದನ್ನು ಅರಿತು ದಲಿತರು ಮುನ್ನಡೆಯಬೇಕೆಂದರು.
    ಪ್ರಮುಖರಾದ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ. ಜಯಪ್ಪ, ನ್ಯಾಯವಾದಿ ನಾರಾಯಣ್, ತಾಲೂಕು ಅಧ್ಯಕ್ಷೆ ಎಸ್. ಉಮಾ, ರಾಜ್ಯ ಸಂಘಟನಾ ಸಂಚಾಲಕಿ ಶಾಂತಿ, ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್ ರಾಜ್, ಮಣಿ ಜಿಂಕ್‌ಲೈನ್, ಆರ್. ವರಲಕ್ಷ್ಮೀ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ವಾರ್ಡ್ ಸಂಚಾಲಕ ಆರ್. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಈಶ್ವರಪ್ಪ ನಿರೂಪಿಸಿದರು. ತಾಲೂಕು ಸಂಚಾಲಕ ರಂಗನಾಥ್ ಸ್ವಾಗತಿಸಿದರು. ನಗರ ಸಂಚಾಲಕ ಗೋವಿಂದ ವಂದಿಸಿದರು.

Monday, January 25, 2021

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ

ಪೌರಾಯುಕ್ತ ಮನೋಹರ್, ಪಿಎಸ್‌ಐ ಬಿ.ಎನ್ ದುರ್ಗಾಪ್ರಸಾದ್, ಇಸ್ರೊ ವಿಜ್ಞಾನಿ ರವಿಶಂಕರ್ ಸೇರಿದಂತೆ ಒಟ್ಟು ೩೩ ಮಂದಿ
ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗು ವಿವಿಧ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೩೩ ಮಂದಿಯನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಿದೆ.
ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶ್ರಾಂತ ಪ್ರಾಂಶುಪಾಲ, ಕಸಾಪ ಜಿಲ್ಲಾ ಉಪಾಧ್ಯಕ್ಷ ಎಚ್.ಎನ್ ಮಹಾರುದ್ರ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ, ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಕಿ ಕೆ. ಜ್ಯೋತಿ, ರಾಜ್ಯಮಟ್ಟದ ಖೋ-ಖೋ ಸ್ಪರ್ಧೆಗಳಲ್ಲಿ ಭಾಗವಹಿಸಿ ತಂಡವನ್ನು ಪ್ರತಿನಿಧಿಸುತ್ತಿರುವ ಇದೆ ಶಾಲೆಯ ದೈಹಿಕ ಶಿಕ್ಷಕ ದಯಾನಂದ, ಡಾ. ಬಿ.ಆರ್ ಅಂಬೇಡ್ಕರ್ ಫಿಲಾಸಫಿ ಅವಾರ್ಡ್ ಪ್ರಶಸ್ತಿ ಪುರಸ್ಕೃತ, ಕಾರೇಹಳ್ಳಿ ಡಾ. ಬಿ.ಆರ್ ಅಂಬೇಡ್ಕರ್ ಪ್ರೌಢಶಾಲೆ ದೈಹಿಕ ಶಿಕ್ಷಕ ಶ್ರೀಕಾಂತ್, ಸುಮಾರು ೧೫ ವರ್ಷಗಳಿಂದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಬೋಧನ ಮತ್ತು ಚೇತನ ತರಬೇತಿಯಲ್ಲಿ ತೊಡಗಿಸಿಕೊಂಡಿರುವ ತಾಲೂಕಿನ ಹನುಮಂತಪುರ ಬಡ್ತಿ ಮುಖ್ಯ ಶಿಕ್ಷಕ ಎಸ್. ಪುಟ್ಟರಾಜ್, ಸರ್‌ಎಂವಿ ಸರ್ಕಾರಿ ಕಾಲೇಜಿನ ಆಂಗ್ಲ ಉಪನ್ಯಾಸಕ ಮೊಹಮ್ಮದ್ ನಜೀಬ್, ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಂದ್ರನಾಯ್ಕ ಹಾಗು ಸ್ಮಾರ್ಟ್ ಕ್ಲಾಸ್ ಹಾಗು ಎನ್‌ಜಿಓ ಸಂಸ್ಥೆಯಿಂದ ಅನುದಾನ ಪಡೆದು ಶಾಲೆಯನ್ನು ಅಭಿವೃದ್ಧಿಪಡಿಸಿರುವ ತಾಲೂಕಿನ ಕಲ್ಲಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನವೀನ್ ಹಿರೇಮಠ್‌ರವರಿಗೆ ಸನ್ಮಾನ ನಡೆಯಲಿದೆ.
ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತ ಸ್ಕೌಟ್ ವಿಭಾಗದಿಂದ ರಾಜ್ಯಪಾಲರಿಂದ ರಾಜ್ಯ ಪುರಸ್ಕಾರ ಪಡೆದ ನಗರದ ಹೊಸಮನೆ ಸೇಂಟ್ ಮೇರಿಸ್ ಶಾಲೆ ವಿದ್ಯಾರ್ಥಿಗಳಾದ ಕೆ. ಸಂಜಯ್ ಸಿಂಗ್, ಎಂ. ಕಿರಣ್‌ರಾವ್, ಬಿ.ಎಸ್ ಮಂಜುನಾಥ್, ಜಿ. ದಿಗಂತ, ಡಿ.ಎನ್ ಪುಜಿತ, ಪಿ. ಚಂದನ ಕುಮಾರ್ ಮತ್ತು ಸ್ವಾಮಿ ವಿವೇಕಾನಂದ ಆವಾರ್ಡ್ ಪ್ರಶಸ್ತಿ ಪುರಸ್ಕೃತ, ರಾಷ್ಟ್ರಮಟ್ಟದ ಖೋ-ಖೋ ಆಟಗಾರ ಕೆ. ಪವನ್ ಕುಮಾರ್ ಹಾಗು ರಾಷ್ಟ್ರಮಟ್ಟದ ಯೋಗಪಟು ಐ.ಪಿ ಮೋಹನ್, ಖೋ-ಖೋ ಇಂಡಿಯಾ ಗೋಲ್ಡ್ ಮೆಡಲ್ ಪ್ರಶಸ್ತಿ ವಿಜೇತರಾದ ಎನ್. ಅಭಿಷೇಕ್, ಎಂ. ಕೋಟೇಶ್ವರ ಮತ್ತು ಯೂತ್ ನ್ಯಾಷನಲ್ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಜಿ.ಎನ್ ಆಕಾಶ್‌ರವರಿಗೆ ಸನ್ಮಾನ ನಡೆಯಲಿದೆ.
ಸರ್ಕಾರಿ ಸೇವೆ ವಿಭಾಗದಿಂದ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿರುವ ನಗರಸಭೆ ಪೌರಾಯುಕ್ತ ಮನೋಹರ್, ಶಿಕ್ಷಣ ಇಲಾಖೆಯ ಟಿ.ಪಿ.ಯು ಪಂಚಾಲ್, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಕೆ.ಆರ್ ಪ್ರಶಾಂತ್, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್, ಇದೆ ರೀತಿ ಸಾಹಿತ್ಯ ಹಾಗು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿಯಾಗಿರುವ ಬೊಮ್ಮನಕಟ್ಟೆ ಕ್ಲಸ್ಟರ್ ಸಿಆರ್‌ಪಿ ಚನ್ನಪ್ಪ, ಕೋಶಾಧ್ಯಕ್ಷರಾಗಿರುವ ಕೈಗಾರಿಕೋದ್ಯಮಿ ಜಿ.ಎನ್ ಸತ್ಯಮೂರ್ತಿ, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂಲತಃ ನಗರದವರಾದ ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ಗಳಾದ ಬಿ.ಎನ್ ದುರ್ಗಾಪ್ರಸಾದ್ ಮತ್ತು ನಾಗೇಂದ್ರ, ವಿಜ್ಞಾನ ವಿಭಾಗದಿಂದ ಇಸ್ರೊ ವಿಜ್ಞಾನಿ ಕಾಗದನಗರದ ನಿವಾಸಿ ರವಿಶಂಕರ್, ಸಮಾಜ ಸೇವೆ ವಿಭಾಗದಿಂದ ಹಳೇನಗರದ ಅಕ್ಕ ಮಹಾದೇವಿ ಬಳಗದ ಬಸವರಾಜಯ್ಯ, ಜಮೀನ್ದಾಋ ಎಚ್.ಎಸ್ ನಾಗರಾಜಪ್ಪ ಮತ್ತು ಮತ್ತು ಹಳೇನಗರ ರಾಘವೇಂದ್ರ ಮಠದ ಸೀತಾರಾಮಣ್ಣ ಸೇರಿದಂತೆ ಒಟ್ಟು ೩೩ ಮಂದಿಯನ್ನು ಸನ್ಮಾನಿಸಿ ಗೌರವಿಸಲಿದೆ.  

ತಾಲ್ಲೂಕು ಕಛೇರಿ ಸೇರಿದಂತೆ ವಿವಿಧೆಡೆ ಮತದಾರರ ದಿನ


ಭದ್ರಾವತಿ ಜೆ ಪಿ ಎಸ್ ಕಾಲೋನಿಯಲ್ಲಿರುವ ಘಟಕ -1ರ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ  ಕಾರ್ಯನಿರ್ವಾಹಕ  ಅಭಿಯಂತರ  ಎನ್. ಎಸ್ ಸತೀಶ್ಚಂದ್ರ ನೇತೃತ್ವದಲ್ಲಿ ಮತದಾರರ ದಿನ ನಡೆಯಿತು.
ಭದ್ರಾವತಿ :  ತಾಲ್ಲೂಕು ಕಚೇರಿ, ಶಾಲಾ ಕಾಲೇಜು  ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಸೋಮವಾರ ಮತದಾರರ ದಿನ ಆಚರಿಸಲಾಯಿತು. 
   ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಚುನಾವಣಾ ತರಬೇತಿ ಅಧಿಕಾರಿ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ಬಿ.ಜಿ  ಧನಂಜಯ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
     ನ್ಯಾಯಾಧೀಶ  ಪುರುಷೋತ್ತಮ್,  ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಟಿ.ಎಸ್ ರಾಜು, ಸರ್ಕಾರಿ ಅಭಿಯೋಜಕ ತ್ಯಾಗರಾಜ್,  ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ಉಪ ತಹಸೀಲ್ದಾರ್ ಮಲ್ಲಿಕಾರ್ಜುನಯ್ಯ, ಶಿರಸ್ತೇದಾರ್ ಮಂಜಾನಾಯ್ಕ್, ಕಂದಾಯ ಅಧಿಕಾರಿ ಪ್ರಶಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
        ಮೆಸ್ಕಾಂ  ಘಟಕ-1ರ ವಿಭಾಗೀಯ  ಕಚೇರಿಯಲ್ಲಿ  ಮತದಾರರ ದಿನ: 
  ಜೆಪಿಎಸ್ ಕಾಲೋನಿಯಲ್ಲಿರುವ ಘಟಕ -1ರ ವಿಭಾಗೀಯ  ಕಚೇರಿಯಲ್ಲಿ ವಿಭಾಗೀಯ  ಕಾರ್ಯನಿರ್ವಾಹಕ ಅಭಿಯಂತರ ಎನ್. ಎಸ್ ಸತೀಶ್ಚಂದ್ರ ನೇತೃತ್ವದಲ್ಲಿ ಮತದಾರರ ದಿನ ನಡೆಯಿತು.
     ಕಚೇರಿ  ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಲೆಕ್ಕಾಧಿಕಾರಿ ಎಂ.ಈ ರಾಮಚಂದ್ರ, ಸಹಾಯಕ ಲೆಕ್ಕಾಧಿಕಾರಿ ಎಂ. ಜಿ ಅಶ್ವಿನ್ ಕುಮಾರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಉನ್ನತ ಮಟ್ಟದ ತನಿಖೆ ಕೈಗೊಳ್ಳಿ

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಉನ್ನತ ಮಟ್ಟದ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭದ್ರಾವತಿಯಲ್ಲಿ ಸೋಮವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.  
   ಭದ್ರಾವತಿ, ಜ. ೨೫: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನಲೆಯಲ್ಲಿ ಉನ್ನತ ಮಟ್ಟದ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.  
   ಇತ್ತೀಚಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಅದರಲ್ಲೂ ಲೋಕಸೇವಾ ಆಯೋಗದಲ್ಲಿ ಹೆಚ್ಚಿನ ಭ್ರಷ್ಟಾಚಾರ ಪ್ರಕರಣಗಳು ಕಂಡು ಬರುತ್ತಿದ್ದು, ಪ್ರಕರಣಗಳು ಮರುಕಳುಹಿಸುತ್ತಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ.
   ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ರೀತಿಯ ಪ್ರಕರಣಗಳು ಪುನಃ ನಡೆಯದಂತೆ ಎಚ್ಚರ ವಹಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರಮುಖರಾದ ಮನು, ಆಕಾಶ್, ವರುಣ್, ಪುನಿತ್ ಮತ್ತು ಸೂರ್ಯ ಇತರರು ಉಪಸ್ಥಿತರಿದ್ದರು.

ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ಸಾವು

ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ  ಘಟನೆ  :  ಗುತ್ತಿಗೆ ಕಾರ್ಮಿಕರಿಂದ ಪ್ರತಿಭಟನೆ  

ಹೃದಯಾಘಾತದಿಂದ ಸಾವನ್ನಪ್ಪಿದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಅಂತೋಣಿ ರಾಜ್.
    ಭದ್ರಾವತಿ, ಜ. ೨೫: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಅಂತೋಣಿ ರಾಜ್  ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
      ಹೃದಯಾಘಾತ ಸಂಭವಿಸಿದ ತಕ್ಷಣ ಆಂಬ್ಯುಲೆನ್ಸ್ ಸೇವೆ ಲಭ್ಯವಾಗದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಆಂತೋಣಿ ರಾಜ್ ಮೃತಪಟ್ಟಿದ್ದು, ಆಂಬ್ಯುಲೆನ್ಸ್ ಸಕಾಲದಲ್ಲಿ ಆಗಮಿಸದಿರುವುದನ್ನು ಖಂಡಿಸಿ ಹಾಗೂ ಮೃತ ಕುಟುಂಬಕ್ಕೆ ಗುತ್ತಿಗೆದಾರರು ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮತ್ತು  ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವಂತೆ ಗುತ್ತಿಗೆ ನೌಕರರು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದರು.  

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಅಂತೋಣಿ ರಾಜ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಆಡಳಿತ ಮಂಡಳಿಯೊಂದಿಗೆ ನಡೆದ ಸಂಧಾನ ಸಭೆ.


       ಸಂಧಾನ ಸಭೆ ಮಾತುಕತೆ ಯಶಸ್ವಿ:
    ಕಾರ್ಖಾನೆ ಆಡಳಿತ ಮಂಡಳಿ, ಗುತ್ತಿಗೆದಾರರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಇದರ ಪರಿಣಾಮ ಕುಟುಂಬ ೧೦ ಲಕ್ಷ ರು. ಪರಿಹಾರ ಹಾಗು ಹೆಂಡತಿ ಮತ್ತು ಮಗಳಿಗೆ ನಗರಾಡಳಿತ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡುವ ಭರವಸೆ ನೀಡಲಾಯಿತು.
   ಸಭೆಯಲ್ಲಿ ನಡೆದ ಮಾತುಕತೆ ಪ್ರಕಾರ ಶಾಸಕ ಬಿ.ಕೆ ಸಂಗಮೇಶ್ವರ್ ಗುತ್ತಿಗೆದಾರರು ನೀಡಬೇಕಾಗಿರುವ ಪರಿಹಾರ ಮೊತ್ತವನ್ನು ತಕ್ಷಣ ನೊಂದ ಕುಟುಂಬಕ್ಕೆ ನೀಡಬೇಕೆಂಬ ಉದ್ದೇಶದಿಂದ ಸ್ಥಳದಲ್ಲಿಯೇ ರು.೧೦ ಲಕ್ಷ ಪರಿಹಾರ ವಿತರಿಸಿ ಮಾನವೀಯತೆ ಮೆರದರು.
    ಸಭೆಯಲ್ಲಿ ಪ್ರಮುಖರಾದ ಆಡಳಿತ ಮಂಡಳಿ ಅಧಿಕಾರಿಗಳು, ಸ್ನೇಹ ಜೀವಿ ಬಳಗದ ಉಮೇಶ್, ನಗರಸಭಾ ಸದಸ್ಯ ಎಂ.ಎ ಅಜಿತ್, ಎಎಪಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಬಾಲಕೃಷ್ಣ, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ಪದಾಧಿಕಾರಿಗಳು, ಗುತ್ತಿಗೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯದರ್ಶಿ ಅಂತೋಣಿ ರಾಜ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್.

ಜಗತ್ತಿಗೆ ಕಾಯಕದ ಮಹತ್ವ ತಿಳಿಸಿಕೊಟ್ಟ ನೆಲದಲ್ಲಿ ಇಂದು ಕಾಯಕ ಮರೆ : ಡಾ. ಬಿ.ವಿ ವೀರಭದ್ರಪ್ಪ

ಭದ್ರಾವತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ : ಜಗತ್ತಿಗೆ ೧೨ನೇ ಶತಮಾನದಲ್ಲಿಯೇ ಕಾಯಕದ ಮಹತ್ವ ತಿಳಿಸಿಕೊಟ್ಟ ದೇಶದಲ್ಲಿ ಪ್ರಸ್ತುತ ಕಾಯಕವನ್ನು ನಿರ್ಲಕ್ಷಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಬಿ.ವಿ ವೀರಭದ್ರಪ್ಪ ಹೇಳಿದರು.
    ಅವರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
     ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಸುಮಾರು ೧೨ ಗಂಟೆ ಸಮಯವನ್ನು ಕಾಯಕಕ್ಕೆ ಮೀಸಲಿಡಲಾಗಿದೆ. ಈ ಹಿನ್ನಲೆಯಲ್ಲಿ ಆ ರಾಷ್ಟ್ರಗಳಲ್ಲಿ ಬಡತನ ಎಂಬುದು ಕಣ್ಮರೆಯಾಗಿದೆ. ಆದರೆ ನಮ್ಮ ರಾಷ್ಟ್ರದಲ್ಲಿ  ಕಾಯಕದ ಪರಿಕಲ್ಪನೆ ಮರೆಯಾಗುತ್ತಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದೇ ಪ್ರಮುಖ ಗುರಿ ಎಂಬ ಆಲೋಚನೆಯಲ್ಲಿನ ಕಾಲಘಟ್ಟದಲ್ಲಿಯೇ ಕಾಯಕ ಮರೆಯಾಗಿ ಹೋಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಪ್ರತಿಯೊಬ್ಬರು ಕಾಯಕವನ್ನು ನಂಬಿ ಬದುಕು ಸಾಗಿಸಬೇಕು. ನಮ್ಮ ಅಗತ್ಯಗಳನ್ನು ನಾವು ಸಂಪಾದಿಸಿದ ಹಣದಲ್ಲಿಯೇ ಸಾಧ್ಯವಾದಷ್ಟು ಈಡೇರಿಸಿಕೊಳ್ಳಬೇಕು. ನಮ್ಮ ಹಿಂದಿನ ತಲೆಮಾರಿನವರ ಆಲೋಚನೆಗಳು ಈ ನಿಟ್ಟಿನಲ್ಲಿಯೇ ಸಾಗುತ್ತಿತ್ತು. ಯಾರು ಸಹ ಸಾಲದ ಸುಳಿಗೆ ಒಳಗಾಗುತ್ತಿರಲಿಲ್ಲ. ಒಂದು ವೇಳೆ ಸಾಲ ಮಾಡಿದರೂ ಸಹ ಅದನ್ನು ಪೂರ್ಣವಾಗಿ ಹಿಂದಿರುಗಿಸುವ ಬದ್ದತೆ ಬೆಳೆಸಿಕೊಂಡಿದ್ದರು. ಆದರೆ ಇಂದಿನವರಿಗೆ ಆ ಬದ್ದತೆ ಇಲ್ಲವಾಗಿದೆ. ಎಲ್ಲವನ್ನು ಸರ್ಕಾರ ಮಾಡಬೇಕು ಎಂಬ ಆಲೋಚನೆ ಬೆಳೆಸಿಕೊಂಡಿದ್ದಾರೆ. ಈ ಆಲೋಚನೆಯಿಂದ ಹೊರಬರಬೇಕಾಗಿದೆ. ಸರ್ಕಾರದಿಂದ ನಾವು ಪ್ರೀತಿ, ಮಮತೆ, ಸಹಕಾರ, ಸಹಬಾಳ್ವೆ, ಸೋದರತ್ವವನ್ನು ಮಾತ್ರ ನಿರೀಕ್ಷಿಸಬೇಕು. ನಮ್ಮ ನಾಡು ಪುನಃ ೧೨ನೇ ಶತಮಾನದ ಪರಿಕಲ್ಪನೆಯಂತೆ ಕಲ್ಯಾಣದ ನೆಲೆಬೀಡಾಗಿ ರೂಪು ಕೊಳ್ಳಬೇಕಾಗಿದೆ ಎಂದರು.
    ಸಮಾರೋಪ ಸಮಾರಂಭದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಎ ಪಿ ಕುಮಾರ್ ದಂಪತಿ, ತಾಲ್ಲೂಕು ಅಧ್ಯಕ್ಷ ಅಪೇಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವ ಸಂಭ್ರಮ ಶ್ರೀಮಂತರು, ಬಂಡವಾಳಶಾಹಿಗಳು, ಅಧಿಕಾರಿಗಳಿಗೆ ಮಾತ್ರ : ಕೆ.ಟಿ ಗಂಗಾಧರ್

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆ

ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್ ಮಾತನಾಡಿದರು.
ಭದ್ರಾವತಿ, ಜ. ೨: ದೇಶದಲ್ಲಿ ಗಣರಾಜ್ಯೋತ್ಸವ ಸಂಭ್ರಮ ಎಂಬುದು ಕೇವಲ ಶ್ರೀಮಂತರು, ಬಂಡವಾಳಶಾಹಿಗಳು, ಮತ್ತು ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ. ಈ ದೇಶದಲ್ಲಿ ಬಡವರಿಗೆ, ದುಡಿಯುವ ವರ್ಗಕ್ಕೆ ಇದರ ಸಂಭ್ರಮ ಇಲ್ಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್ ಆರೋಪಿಸಿದರು.
      ಅವರು ಸೋಮವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಸ್ತುತ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರು ಹಾಗು ಕಾರ್ಯ ರೂಪಕ್ಕೆ ತರಬೇಕಾದ ಅಧಿಕಾರಿ ವರ್ಗದವರು ಸಂವಿಧಾನದ ಮಹತ್ವ ಅರ್ಥ ಮಾಡಿಕೊಂಡಿಲ್ಲ. ಈ ಹಿನ್ನಲೆಯಲ್ಲಿ ಸಂವಿಧಾನ ಬದ್ಧವಾಗಿ ಲಭಿಸಬೇಕಾದ ಸೌಲಭ್ಯಗಳಿಂದ ಬಡವರ್ಗದವರು, ದುಡಿಯುವ ವರ್ಗದವರು ವಂಚಿತರಾಗಿದ್ದಾರೆಂದು ದೂರಿದರು.
ಸಂವಿಧಾನದ ಆಶಯ ಎತ್ತಿ ಹಿಡಿಯಬೇಕಾದ ಅವಶ್ಯಕತೆ ಇಂದು ಹೆಚ್ಚಿನದ್ದಾಗಿದ್ದು, ಈ ಹಿನ್ನಲೆಯಲ್ಲಿ ರೈತರ ಸಂಘ ಸಮಾಜವಾದಿ ಚಿಂತಕರು ಹಾಗು ಸಮಾನ ಮನಸ್ಕರೊಂದಿಗೆ ಜ.೨೬ರ ಮಂಗಳವಾರ ಜನತಾ ಗಣರಾಜ್ಯೋತ್ಸವ ಶಿವಮೊಗ್ಗ ನಗರದಲ್ಲಿ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಡವರ್ಗದವರು, ಶ್ರಮಿಕರು, ಶ್ರೀಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.  
ಪ್ರಸ್ತುತ ಬಿ.ಎನ್ ರಾಜುರವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಹೋರಾಟದ ಬಹುತೇಕ ಬೇಡಿಕೆಗಳು ಸಂವಿಧಾನದಲ್ಲಿ ರೂಪಿಸಲಾಗಿರುವ ಕಾನೂನಿಗೆ ಸರಿಸಮಾನವಾಗಿವೆ. ಈ ಹಿನ್ನಲೆಯಲ್ಲಿ ಅಧಿಕಾರಿ ವರ್ಗ ಬೇಡಿಕೆಗಳನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಆಗ್ರಹಿಸಿದರು.
ನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರ ತಕ್ಷಣ ಬಿಡುಗಡೆಗೊಳಿಸಬೇಕು. ಪ್ರಸ್ತುತ ಎದುರಾಗಿರುವ ಆರ್ಥಿಕ ಸಂಕಷ್ಟದಿಂದ ಹಣ ಬಿಡುಗಡೆ ಮಾಡಲು ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಈ ಬಾರಿ ಬಜೆಟ್‌ನಲ್ಲಿ ಅಧಿಕೃತವಾಗಿ ಹಣ ಬಿಡುಗಡೆ ಬಗ್ಗೆ ಘೋಷಿಸಬೇಕೆಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ಸಮಿತಿ ಅಧ್ಯಕ್ಷ ಬಿ.ಎನ್ ರಾಜು ವಿವಿಧ ಹೋರಾಟಗಳ ಬಗ್ಗೆ ವಿವರಿಸಿದರು. ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಪ್ರಮುಖರಾದ ಡಿ.ವಿ ವೀರೇಶ್, ಸುಬ್ಬೇಗೌಡ, ಮುಳ್ಕೆರೆ ಲೋಕೇಶ್, ಇಬ್ರಾಹಿಂ ಖಾನ್, ತಮ್ಮಣ್ಣ, ಮುತ್ತು, ಆಂಜನೇಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, January 24, 2021

ವಿಐಎಸ್ಎಲ್ ಕಾರ್ಖಾನೆ ವತಿಯಿಂದ ಗಣರಾಜ್ಯೋತ್ಸವ

ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಜ.26ರಂದು ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ 72ನೇ ಗಣರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್ ಕುಮಾರ್ ಕೋರಿದ್ದಾರೆ.