ಭದ್ರಾವತಿ : ದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ ಪೊಕ್ಸೋ ಕಾಯಿದೆಯನ್ನು ಜಾರಿಗೆ ತರುವ ಮೂಲಕ ರಕ್ಷಣೆಗೆ ಮುಂದಾಗಿದ್ದು, ಹೆಣ್ಣುಮಕ್ಕಳು ಈ ಕಾಯಿದೆ ಕುರಿತು ಹೆಚ್ಚಿನ ಅರಿವು ಹೊಂದಬೇಕೆಂದು ನ್ಯಾಯವಾದಿ ಟಿ ಚಂದ್ರೇಗೌಡ ತಿಳಿಸಿದರು.
ಅವರು ಗುರುವಾರ ನ್ಯೂಟೌನ್ ಸರ್ ಎಂ ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸರ್ ಎಂ ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಒಂದೆಡೆ ವಿಷಾದನೀಯ ಬೆಳವಣಿಗೆಯಾಗಿದೆ. ಅತ್ಯಾಚಾರ ಬಾಲ್ಯ ವಿವಾಹ, ಅಪ್ರಾಪ್ತ ಬಾಲಕಿಯರ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಭಾಗಿಯಾದ ಎಲ್ಲರನ್ನೂ ಕಠಿಣವಾಗಿ ಶಿಕ್ಷಿಸುವ ವ್ಯವಸ್ಥೆ ರೂಪಿಸಲಾಗಿದ್ದು, ಈ ನಿಟ್ಟಿನಲ್ಲಿ ಪೊಕ್ಸೋ ಕಾಯ್ದೆ ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು.
ಕಾರ್ಯಕ್ರಮವನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಟಿ.ಪಿ ಪುರುಷೋತ್ತಮ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಜಿ ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು . ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಟಿ ಎಸ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಪ್ರಿಯಾ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ಡಾ ಬಿ.ಎಂ ನಾಸಿರ್ ಖಾನ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಎಸ್ ವರದರಾಜು ನಿರೂಪಿಸಿದರು. ಡಾ. ದ್ರಾಕ್ಷಾಯಿಣಿ ಎಂ ಡೋಂಗ್ರೆ ವಂದಿಸಿದರು.
ಕಾಲೇಜಿನ ವಿವಿಧ ವಿಭಾಗಗಳ ಸಹಾಯಕ ಪ್ರಾಧ್ಯಾಪಕರಾದ ಡಾ. ಮಂಜುನಾಥ್, ಡಾ. ಸಕ್ರಿ ನಾಯ್ಕ್, ಫರ್ಹಾನ ಅಂಜುಮ್, ವಿಶ್ವನಾಥ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
No comments:
Post a Comment