Monday, January 11, 2021

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಘಟನೆಗಳ ನೇತೃತ್ವದಲ್ಲಿಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೧೧: ನಗರದ ಹೃದಯ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಹಾಗು ಬಗರ್‌ಹುಕುಂ ರೈತರ ಮತ್ತು ನಿವೇಶನ ರಹಿತ ಬಡವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಘಟನೆಗಳ ನೇತೃತ್ವದಲ್ಲಿಪ್ರತಿಭಟನೆ ನಡೆಸಲಾಯಿತು.
    ರು.೧೦ ಕೋ. ವೆಚ್ಚದ ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರವಾಗಿ ಮುಕ್ತಾಯಗೊಳಿಸಿ:
ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ರು.೧೦ ವೆಚ್ಚದ ಅಂಬೇಡ್ಕರ್ ಭವನ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಬಾಕಿ ಉಳಿದಿರುವ ರು. ೫.೫೦ ಕೋ. ತಕ್ಷಣ ಬಿಡುಗಡೆಗೊಳಿಸಬೇಕು. ಭವನದ ಕೆಳ ಅಂತಸ್ತಿನಲ್ಲಿ(ಪಡುಕೋಣೆ) ಅಂಬೇಡ್ಕರ್ ಗ್ರಂಥಾಲಯ ತೆರೆಯಬೇಕು. ಉದ್ಘಾಟನಾ ಕಾರ್ಯಕ್ರಮವನ್ನು ಸರ್ಕಾರವೇ ಸುಸ್ಸಜಿತವಾಗಿ ನಡೆಸಬೇಕು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಮಾಜ ಕಲ್ಯಾಣ ಖಾತೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಸೇರಿದಂತ ಇನ್ನಿತರ ಗಣ್ಯರು ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡು ವಿಚಾರ ಸಂಕೀರ್ಣ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉದ್ಘಾಟನೆ ನೆರವೇರಿಸಬೇಕೆಂದು ಆಗ್ರಹಿಸಲಾಯಿತು.
    ಕಂದಾಯ ಜಮೀನು ಶ್ರೀಮಂತರಿಗೆ ಮಂಜೂರಾತಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಿ:
     ತಾಲೂಕಿನ ಕಲ್ಲಾಪುರ ಗ್ರಾಮದ ಸರ್ವೆ ನಂ. ೦೧ರಲ್ಲಿ ೭೪ ಎಕರೆ ೧೪ ಗುಂಟೆ ಕಂದಾಯ ಜಮೀನನ್ನು ಕೆಲ ಶ್ರೀಮಂತರಿಗೆ ಅಕ್ರಮವಾಗಿ ಮಂಜೂರು ಮಾಡಿರುವ ಅಧಿಕಾರಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು ಜೈಲಿಗೆ ಹೋದ ೨೪ ಬಗರ್‌ಹುಕುಂ ರೈತರ ಕುಟುಂಬಗಳಿಗೆ ಜಮೀನು ಮಂಜೂರಾತಿ ಮಾಡಬೇಕೆಂದು ಒತ್ತಾಯಿಸಲಾಯಿತು.
     ಜಮೀನು ಉಳುಮೆ ಮಾಡುತ್ತಿರುವ ಪರಿಶಿಷ್ಟ ಜಾತಿ ರೈತ ಕುಟುಂಬಕ್ಕೆ ರಕ್ಷಣೆ ನೀಡಿ:
   ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಸರ್ವೆ ನಂ. ೩೭/೧, ೩೭/೬ ರಲ್ಲಿ ೧.೨೦ ಗುಂಟೆ ಜಮೀನಿನಲ್ಲಿ ಕಾನೂನು ಬದ್ಧವಾಗಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಪರಿಶಿಷ್ಟ ಜಾತಿಯ ಸೀನಪ್ಪ ಬಿನ್ ವೆಂಕಟರಾಮುರವರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗು ಪೊಲೀಸರು ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ.  ಪೊಲೀಸ್ ಇಲಾಖೆಯ ನಗರವೃತ್ತ ನಿರೀಕ್ಷಕರು ಹಾಗು ಸಿಬ್ಬಂದಿ ದೌರ್ಜನ್ಯ ನಡೆಸುವವರ ಪರವಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಉಪಾಧೀಕ್ಷಕರು ಸೂಕ್ತ ತನಿಖೆ ಕೈಗೊಂಡು ಕಾನೂನು ಕ್ರಮ ಜರುಗಿಸಬೇಕು. ದೌರ್ಜನ್ಯಕ್ಕೆ ಒಳಗಾಗಿರುವ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಲಾಯಿತು.
     ನಿವೇಶನ ರಹಿತ ಬಡವರಿಗೆ ನಿವೇಶನ ಹಾಗು ಸ್ಮಶಾಣ ಜಾಗ ಮಂಜೂರು ಮಾಡಿ:
ತಾಲೂಕಿನ ನವಿಲೇ ಬಸಾಪುರ ಗ್ರಾಮದಲ್ಲಿ ಸುಮಾರು ೨೦ ವರ್ಷಗಳಿಂದ ವಾಸಿಸುತ್ತಿರುವ ಬಡವರಿಗೆ ಇದುವರೆಗೂ ನಿವೇಶನ ಮಂಜೂರಾತಿ ಮಾಡಿರುವುದಿಲ್ಲ. ಅಲ್ಲದೆ ಬಡವರು ನಿಧನ ಹೊಂದಿದ್ದಲ್ಲಿ ಅಂತ್ಯಸಂಸ್ಕಾರಕ್ಕೆ ಸ್ಮಶಾಣ ಸಹ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಸ್ಮಶಾಣಕ್ಕಾಗಿ ಇದುವರೆಗೂ ಸರ್ಕಾರದ ಗ್ರಾಮ ಠಾಣಾ ಜಾಗವನ್ನು ಅಳತೆ ಮಾಡಿ ಗುರುತಿಸದೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕು. ಬಡವರಿಗೆ ನಿವೇಶನ ಹಾಗು ಸ್ಮಶಾನ ಜಾಗ ಮಂಜೂರಾತಿ ಮಾಡಬೇಕೆಂದು ಒತ್ತಾಯಿಸಲಾಯಿತು.
  ಪ್ರತಿಭಟನೆಯಲ್ಲಿ ಮಾನವ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಉಪಾಧ್ಯಕ್ಷರಾದ ಎಂ.ವಿ ಚಂದ್ರಶೇಖರ್, ಬ್ರಹ್ಮಲಿಂಗಯ್ಯ, ಸುಬ್ಬೇಗೌಡ, ವಿವಿಧ ಸಂಘಟನೆಗಳ ಮುಖಂಡರಾದ ಈ. ಚಂದ್ರಶೇಕರನ್, ಜಿ. ಲತಾ, ಪಿ.ಈ ಬಸವರಾಜ್, ಬಿ.ವಿ ಗಿರೀಶ್, ಶಶಿಕುಮಾರ್ ಎಸ್. ಗೌಡ, ಎಂ. ನಾರಾಯಣ, ಡಿ.ವಿ ವೀರೇಶ್, ಬಾಲ್ಯನಾಯ್ಕ, ಕೆ. ಮಂಜುನಾಥ್, ಶಾರದಮ್ಮ, ಡಿ. ರಾಜು, ಚಿನ್ನಯ್ಯ, ಕಲ್ಲಾಪುರ ಗ್ರಾಮದ ಜಯಮ್ಮ, ಗಂಗಮ್ಮ, ನೀಲಮ್ಮ, ಬಸಮ್ಮ, ಮಹೇಶ್, ರಾಕೇಶ್, ನಾಗರತ್ನಮ್ಮ, ಲಕ್ಷ್ಮಮ್ಮ, ಜಯಮ್ಮ, ನಿರ್ಮಲ, ಸತೀಶ್, ಪುಷ್ಪ, ಸುರೇಶ್, ವಿ. ಈರೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment