ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೫ರ ಹೊಸಬುಳ್ಳಾಪುರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೧ನೇ ಸಂವಿಧಾನ ದಿನಾಚರಣೆ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಮಹಾನಾಯಕ ಕಾರ್ಯಕ್ರಮವನ್ನು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಉದ್ಘಾಟಿಸಿದರು.
ಭದ್ರಾವತಿ, ಜ. ೨೬: ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ರವರು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ನೀಡಿದ್ದು, ಪ್ರತಿಯೊಬ್ಬರು ತಮ್ಮ ಹಕ್ಕನ್ನು ಯಾವುದೇ ಅಮಿಷಕ್ಕೆ ಬಲಿಯಾಗಿ ಮಾರಿಕೊಳ್ಳದೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜ್ಞಾನವಂತರು, ಸಮರ್ಥರು ಹಾಗು ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವವರನ್ನು ಆಯ್ಕೆ ಮಾಡಬೇಕೆಂದು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಮನವಿ ಮಾಡಿದರು.
ಅವರು ಮಂಗಳವಾರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೨೫ರ ಹೊಸಬುಳ್ಳಾಪುರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೧ನೇ ಸಂವಿಧಾನ ದಿನಾಚರಣೆ ಹಾಗು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಮಹಾನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ರವರು ಜಾತಿ, ಮತ, ಧರ್ಮ, ಶ್ರೀಮಂತ, ಬಡವ, ಅಕ್ಷರಸ್ಥ, ಅನಕ್ಷರಸ್ಥ ಎಂಬ ಯಾವುದೇ ಅಸಮಾನತೆ ಇಲ್ಲದೆ ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಿದ್ದಾರೆ. ಇದರ ಮಹತ್ವ ಪ್ರತಿಯೊಬ್ಬರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕೆಂದರು.
ಬುದ್ಧರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ತಹಸೀಲ್ದಾರ್ ಜಿ. ಸಂತೋಷ್ಕುಮಾರ್ ಮಾತನಾಡಿ, ಪ್ರತಿಯೊಬ್ಬರು ಬಾಬಾ ಸಾಹೇಬ್ ಅಂಬೇಡ್ಕರ್ರವರು ಈ ದೇಶಕ್ಕೆ ನೀಡಿರುವ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯಗಳನ್ನು ಅರಿತು ಮುನ್ನಡೆಬೇಕೆಂದರು.
ಪ್ರೊ. ಬಿ. ಕೃಷ್ಣಪ್ಪರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಡಿಎಸ್ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಅಂಬೇಡ್ಕರ್ರವರು ಈ ದೇಶಕ್ಕೆ ಮಾತ್ರ ಮಹಾನಾಯಕರಾಗಿ ಸೀಮಿತವಾಗಿಲ್ಲ. ಇಡೀ ಜಗತ್ತಿಗೆ ಮಹಾನಾಯಕರಾಗಿದ್ದು, ಈ ಹಿನ್ನಲೆಯಲ್ಲಿ ಅವರಿಗೆ ವಿಶ್ವಜ್ಞಾನಿ ಎಂಬ ಬಿರುದನ್ನು ನೀಡಲಾಗಿದೆ. ಹಲವು ಸಂಕಷ್ಟಗಳ ನಡುವೆ ತಮ್ಮಲ್ಲಿನ ಅಪಾರ ಜ್ಞಾನದ ಮೂಲಕ ವಿದ್ಯಾರ್ಜನೆ ಪಡೆದು ಉನ್ನತ ಮಟ್ಟಕ್ಕೆ ಏರಿದರು. ಅವರ ಆಶಯ ಪ್ರತಿಯೊಬ್ಬರು ವಿದ್ಯಾವಂತರಾಗಬೇಕೆಂಬುದಾಗಿದೆ. ದಲಿತರು ವಾಸಿಸುವ ಸ್ಥಳಗಳಲ್ಲಿ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಮಠಮಂದಿರಗಳು ತೆರೆಯುವ ಬದಲು ಶಾಲೆಗಳು, ಗ್ರಂಥಾಲಯಗಳು ತೆರೆಯಬೇಕೆಂಬುದಾಗಿದೆ. ಇದನ್ನು ಅರಿತು ದಲಿತರು ಮುನ್ನಡೆಯಬೇಕೆಂದರು.
ಪ್ರಮುಖರಾದ ದಲಿತ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ. ಜಯಪ್ಪ, ನ್ಯಾಯವಾದಿ ನಾರಾಯಣ್, ತಾಲೂಕು ಅಧ್ಯಕ್ಷೆ ಎಸ್. ಉಮಾ, ರಾಜ್ಯ ಸಂಘಟನಾ ಸಂಚಾಲಕಿ ಶಾಂತಿ, ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್ ರಾಜ್, ಮಣಿ ಜಿಂಕ್ಲೈನ್, ಆರ್. ವರಲಕ್ಷ್ಮೀ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಾರ್ಡ್ ಸಂಚಾಲಕ ಆರ್. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಡಿಎಸ್ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಈಶ್ವರಪ್ಪ ನಿರೂಪಿಸಿದರು. ತಾಲೂಕು ಸಂಚಾಲಕ ರಂಗನಾಥ್ ಸ್ವಾಗತಿಸಿದರು. ನಗರ ಸಂಚಾಲಕ ಗೋವಿಂದ ವಂದಿಸಿದರು.
No comments:
Post a Comment