Monday, May 31, 2021

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಕೃಷ್ಣಪ್ಪರಿಗೆ ಬೀಳ್ಕೊಡುಗೆ


ಭದ್ರಾವತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎನ್. ಕೃಷ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
   ಭದ್ರಾವತಿ, ಮೇ. ೨೧: ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಿ ಹೊಂದಿದ ಎನ್. ಕೃಷ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
    ಎನ್. ಕೃಷ್ಣಪ್ಪ ಸತತವಾಗಿ ೪ ಬಾರಿ ಸಂಘದ ತಾಲೂಕು ಶಾಖೆ ಅಧ್ಯಕ್ಷರಾಗಿ ಹಾಗು ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ತಮ್ಮ ಅವಧಿಯಲ್ಲಿ ಸಂಘವನ್ನು ಸದೃಢವಾಗಿ ಕಟ್ಟಿ ಬೆಳೆಸುವಲ್ಲಿ ಹೆಚ್ಚಿನ ಶ್ರಮವಹಿಸಿದ್ದಾರೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿ, ಪ್ರಭಾರ ಸಹಾಯಕ ನಿರ್ದೇಶಕರಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
    ಇದೆ ಸಂದರ್ಭದಲ್ಲಿ ಪ್ರಭಾರಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕರಾದ ಬಿ. ಸಿದ್ದಬಸಪ್ಪ ಅವರನ್ನು ಸಹ ಸನ್ಮಾನಿಸಿ ಅಭಿನಂದಿಸಲಾಯಿತು.
   ಪ್ರಮುಖರಾದ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಎಂ.ಎಸ್ ಬಸರಾಜ್, ಎಸ್.ಕೆ ಮೋಹನ್, ಸಿ. ಜಯಪ್ಪ, ಉಪನ್ಯಾಸಕ ಡಾ. ಧನಂಜಯ, ರಾಜ್‌ಕುಮಾರ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ೮೨ ಸೋಂಕು : ೬ ಬಲಿ

ಭದ್ರಾವತಿ, ಮೇ. ೩೧: ತಾಲೂಕಿನಲ್ಲಿ ಇದೀಗ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ.  ಸೋಮವಾರ ೮೨ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
   ಸುಮಾರು ೧೦ ದಿನಗಳಿಂದ ನೂರು, ಇನ್ನೂರರ ಗಡಿಯಾಚೆಯಲ್ಲೇ ಇದ್ದ ಸೋಂಕಿನ ಪ್ರಮಾಣ ಇದೀಗ ಕಡಿಮೆಯಾಗಿದೆ. ಒಟ್ಟು ೪೪೦ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೮೨ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೭೬ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ೪೯೩೦ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೨೮೫ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ೬೪೫ ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
    ತಾಲೂಕಿನಲ್ಲಿ ಇದುವರೆಗೂ ೧೩೨ ಮಂದಿ ಮೃತಪಟ್ಟಿದ್ದು, ೩೮೬ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ಭಾಗದಲ್ಲಿ ೮೪ ಹಾಗು ಗ್ರಾಮಾಂತರ ಭಾಗದಲ್ಲಿ ೨೮ ಕಂಟೈನ್‌ಮೆಂಟ್ ಜೋನ್‌ಗಳಿವೆ.

ಕೋವಿಡ್ ಲಸಿಕಾ ಕೇಂದ್ರ ಉದ್ಘಾಟನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಮತ್ತು ಉಜ್ಜನಿಪುರ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದನಗರದ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಸೋಮವಾರ ನಗರಸಭಾ ಸದಸ್ಯರಾದ ಬಿ.ಕೆ ಮೋಹನ್ ಮತ್ತು ಬಸವರಾಜ ಬಿ. ಆನೇಕೊಪ್ಪ ಉದ್ಘಾಟಿಸಿದರು.
   ಭದ್ರಾವತಿ, ಮೇ. ೩೧: ನಗರಸಭೆ ವ್ಯಾಪ್ತಿಯ ಕಾಗದನಗರ ಮತ್ತು ಉಜ್ಜನಿಪುರ ಸುತ್ತಮುತ್ತಲಿನ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದನಗರದ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಸೋಮವಾರ ನಗರಸಭಾ ಸದಸ್ಯರಾದ ಬಿ.ಕೆ ಮೋಹನ್ ಮತ್ತು ಬಸವರಾಜ ಬಿ. ಆನೇಕೊಪ್ಪ ಉದ್ಘಾಟಿಸಿದರು.
   ಈ ವ್ಯಾಪ್ತಿಯಲ್ಲಿ ನಗರಸಭೆ ವಾರ್ಡ್ ನಂ.೧೯, ೨೦ ಮತ್ತು ೨೧ ಒಟ್ಟು ೩ ವಾರ್ಡ್‌ಗಳಿದ್ದು, ಈ ವಾರ್ಡ್‌ಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಶನಿವಾರ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಗರಸಭಾ ಸದಸ್ಯ ಬಸವರಾಜ ಬಿ. ಆನೇಕೊಪ್ಪರವರು ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿ ಕೇಂದ್ರ ತೆರೆಯಲು ಮನವಿ ಮಾಡಿದ್ದರು. ಹೆಚ್ಚುವರಿ ಕೇಂದ್ರದ ಬದಲು ವಿಶಾಲವಾದ ಸ್ಥಳದಲ್ಲಿ ಒಂದೇ ಕಡೆ ಲಸಿಕಾ ಕೇಂದ್ರ ತೆರೆಯುವುದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂಬ ಉದ್ದೇಶದೊಂದಿಗೆ ನಗರ ಆರೋಗ್ಯ ಕೇಂದ್ರದಲ್ಲಿ ತೆರೆಯಲಾಗಿದ್ದ ಲಸಿಕಾ ಕೇಂದ್ರವನ್ನು ಇದೀಗ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸಲಾಗಿದೆ.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ವೈದ್ಯ ಡಾ. ಗಿರಿಧರ್, ನಗರಸಭೆ ಮಾಜಿ ಸದಸ್ಯ ವೆಂಕಟಯ್ಯ, ಮುಖಂಡರಾದ ಜಿ. ರಾಜು, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Sunday, May 30, 2021

ಭದ್ರಾವತಿಯಲ್ಲಿ ೧೨೦ ಸೋಂಕು ಪತ್ತೆ : ೪ ಬಲಿ


ಭದ್ರಾವತಿ ಕಾಗದನಗರ ವ್ಯಾಪ್ತಿಯ ಕೊರೋನಾ ಸೋಂಕಿತ ಪ್ರದೇಶಗಳಲ್ಲಿ ನಗರಸಭೆ ವತಿಯಿಂದ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಜರ್ ಸಿಂಪಡಿಸಲಾಯಿತು.

   ಭದ್ರಾವತಿ, ಮೇ. ೩೦: ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆ ಕಂಡು ಬರುತ್ತಿಲ್ಲ. ನೂರರ ಗಡಿಯಾಚೆಯಲ್ಲಿದ್ದು, ಭಾನುವಾರ ೧೨೦ ಸೋಂಕು ಪತ್ತೆಯಾಗಿದೆ.
   ಒಟ್ಟು ೧೭೯ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೧೨೦ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೭೮ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ  ಬಿಡುಗಡೆಗೊಂಡಿದ್ದಾರೆ. ಇದುವರೆಗೂ ಒಟ್ಟು ೪೮೪೮ ಮಂದಿಗೆ ಸೋಂಕು ತಗುಲಿದ್ದು, ೪೨೦೯ ಮಂದಿ ಗುಣಮುಖರಾಗಿದ್ದಾರೆ. ೬೩೯ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿದ್ದು, ಒಂದೇ ದಿನ ೪ ಮಂದಿ ಬಲಿಯಾಗಿದ್ದಾರೆ. ಇದುವರೆಗೂ ೧೨೬ ಮಂದಿ ಮೃತಪಟ್ಟಿದ್ದು, ೩೩೨ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ೮೪ ಹಾಗು ಗ್ರಾಮಾಂತರ ವ್ಯಾಪ್ತಿಯಲ್ಲಿ ೨೮ ಕಂಟೈನ್‌ಮೆಂಟ್ ಜೋನ್‌ಗಳಿವೆ.
        ಕೊರೋನಾ ಸೋಂಕಿತ ಪ್ರದೇಶಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ:
    ಕಾಗದನಗರ ವ್ಯಾಪ್ತಿಯ ಕೊರೋನಾ ಸೋಂಕಿತ ಪ್ರದೇಶಗಳಲ್ಲಿ ನಗರಸಭೆ ವತಿಯಿಂದ ಮುನ್ನಚ್ಚರಿಕೆ ಕ್ರಮವಾಗಿ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿಗಳಾದ ರಾಜ್‌ಕುಮಾರ್, ಪ್ರಶಾಂತ್, ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ, ಸೂಪರ್‌ವೈಸರ್ ಎನ್. ಗೋವಿಂದ ಹಾಗು ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಬಿ. ಸಿದ್ದಬಸಪ್ಪ


ಬಿ. ಸಿದ್ದಬಸಪ್ಪ
ಭದ್ರಾವತಿ, ಮೇ. ೩೦: ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ನೇಮಕಗೊಂಡಿದ್ದಾರೆ.
    ಪ್ರಸ್ತುತ ಅಧ್ಯಕ್ಷರಾಗಿ ಎನ್. ಕೃಷ್ಣಪ್ಪ ಅವರು ಸೋಮವಾರ ನಿವೃತ್ತಿ ಹೊಂದುತ್ತಿರುವ ಹಿನ್ನಲೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ತಾತ್ಕಾಲಿಕವಾಗಿ ಪ್ರಭಾರ ಅಧ್ಯಕ್ಷರನ್ನಾಗಿ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿರುವ ಬಿ. ಸಿದ್ದಬಸಪ್ಪ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
     ಬಿ. ಸಿದ್ದಬಸಪ್ಪ ಅವರು ೪ ಬಾರಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ೩ ಬಾರಿ ಜಿಲ್ಲಾ ಸರ್ಕಾರಿ ನೌಕರರ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ತಾಲೂಕು ಸರ್ಕಾರಿ ನೌಕರರ ಸಂಘ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಸಂಘ-ಸಂಸ್ಥೆಗಳು, ಶಿಕ್ಷಕರು ಸೇರಿದಂತೆ ಇನ್ನಿತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ ನಿವೃತ್ತಿ

ಎನ್. ಕೃಷ್ಣಪ್ಪ
    ಭದ್ರಾವತಿ, ಮೇ. ೩೦: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ, ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ  ಎನ್. ಕೃಷ್ಣಪ್ಪ ಸೋಮವಾರ ನಿವೃತ್ತಿ ಹೊಂದಲಿದ್ದಾರೆ.
    ಮೂಲತಃ ಕಂದಾಯ ಇಲಾಖೆಯಲ್ಲಿ ವೃತ್ತಿ ಆರಂಭಿಸಿದ ಎನ್.ಕೃಷ್ಣಪ್ಪ ಅವರು ಅನಿರೀಕ್ಷಿತವಾಗಿ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಳ್ಳುವ ಮೂಲಕ ಈ ಇಲಾಖೆಯಲ್ಲಿಯೇ ಉಳಿದುಕೊಂಡು ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ೨ ತಿಂಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿದ್ದ ದೂದ್‌ಪೀರ್ ಮುಂಬಡ್ತಿ ಹೊಂದಿ ಉಡುಪಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಇವರ ಸ್ಥಾನಕ್ಕೆ ಪ್ರಭಾರ ಅಧಿಕಾರ ವಹಿಸಿಕೊಂಡಿದ್ದರು.
      ಸತತ ೪ ಬಾರಿ ಅಧ್ಯಕ್ಷರಾಗಿ ಆಯ್ಕೆ:
    ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗೆ ಮೊದಲ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಎನ್. ಕೃಷ್ಣಪ್ಪ ನಂತರ ೨ನೇ ಅವಧಿಯಿಂದ ಸತತವಾಗಿ ೪ ಬಾರಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಅಲ್ಲದೆ ಕರ್ನಾಟಕ ಸರ್ಕಾರದ ಜಂಟಿ ಸಮಾಲೋಚನಾ ಸಮಿತಿ ಸದಸ್ಯರಾಗಿ ಸಹ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
     ವಿಇಎಸ್ ವಿದ್ಯಾಸಂಸ್ಥೆ ಕೃತಜ್ಞತೆ :
ನಗರದ ಹೊಸಸೇತುವೆ ರಸ್ತೆಯ ಸಿದ್ಧಾರೂಢನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಬೆಳವಣಿಗೆಗೆ ಎನ್. ಕೃಷ್ಣಪ್ಪನವರ ಶ್ರಮ ಹೆಚ್ಚಿನದ್ದಾಗಿದೆ. ನೌಕರರ ಸಂಘಕ್ಕೆ ಮೊದಲ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ವಿದ್ಯಾಸಂಸ್ಥೆಯಲ್ಲಿ ಖಜಾಂಚಿಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ಪದನಿಮಿತ್ತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ವಿದ್ಯಾಸಂಸ್ಥೆಯು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಎನ್. ಕೃಷ್ಣಪ್ಪನವರ ಶ್ರಮ ಹೆಚ್ಚಿನದ್ದಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

Saturday, May 29, 2021

ಭದ್ರಾವತಿಯಲ್ಲಿ 154 ಸೋಂಕು ಪತ್ತೆ

   ಭದ್ರಾವತಿ, ಮೇ. ೨೯: ತಾಲೂಕಿನಲ್ಲಿ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶನಿವಾರ ಒಟ್ಟು 154 ಸೋಂಕು ಪತ್ತೆಯಾಗಿದ್ದು, 5 ಜನ ಬಲಿಯಾಗಿದ್ದಾರೆ.
   ಒಟ್ಟು 363 ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ 154 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇವಲ ೩೮ ಮಂದಿ ಮಾತ್ರ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ತಾಲೂಕಿನಲ್ಲಿ ಒಟ್ಟು 4735 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4131 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 604 ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನ ೫ ಮಂದಿ ಬಲಿಯಾಗಿದ್ದಾರೆ. ಇದುವರೆಗೂ ಒಟ್ಟು 122 ಮಂದಿ ಮೃತಪಟ್ಟಿದ್ದು, 373 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಟ್ಟು 46 ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ 45 ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಉಳಿದಂತೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಒಟ್ಟು 19 ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ 15 ಜೋನ್‌ಗಳನ್ನು ತೆರವುಗೊಳಿಸಲಾಗಿದೆ.

ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ಕುರಿತು ಜಾಗೃತಿ ಜಾಥಾ



ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ವತಿಯಿಂದ ಕೊರೋನಾ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
   ಭದ್ರಾವತಿ, ಮೇ. ೨೯: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ವತಿಯಿಂದ ಕೊರೋನಾ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಹಳ್ಳಿ, ಸಿರಿಯೂರು ತಾಂಡ, ವೀರಾಪುರ, ರಾಮನಕೊಪ್ಪ, ಸಂಕ್ಲಿಪುರ, ಹಾಗಲಮನೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಜಾಥಾ ನಡೆಸುವ ಮೂಲಕ ಕೊರೋನಾ ಕುರಿತು ಜಾಗೃತಿ ಮೂಡಿಸಲಾಯಿತು.
    ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷ ಬಿ. ಆನಂದ, ಸದಸ್ಯರಾದ ಕೆ.ವಿ ಧನಂಜಯ, ಪುನೀತ್‌ಕುಮಾರ್, ಆರ್. ಧರ್ಮಪ್ಪ, ಶೋಭಾ ಬಾಯಿ, ಸುಭದ್ರಾ ಬಾಯಿ, ಗಾಯಿತ್ರಿ, ಉಮೇಶ್, ಅಭಿವೃದ್ಧಿ ಅಧಿಕಾರಿ ಸಿ. ಕುಮಾರ್, ಗ್ರಾಮಲೆಕ್ಕಿಗ ಎಸ್.ಎಂ ಶಿವಣ್ಣ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ಸೇವೆ

ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭದ್ರಾವತಿಯಲ್ಲಿ ಕೊರೋನಾ ಸೋಂಕಿತರಿಗಾಗಿ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು.
   ಭದ್ರಾವತಿ, ಮೇ. ೨೯: ಕಳೆದ ೩ ವರ್ಷಗಳಿಂದ ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ವಿನಾಯಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರೋನಾ ಸೋಂಕಿತರಿಗಾಗಿ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ.
    ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಎ. ಧಮೇಂದ್ರ, ಎಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಅಲ್ಲದೆ ಹಲವು ಸಂಕಷ್ಟಗಳು ಎದುರಾಗಿವೆ. ಇಂತಹ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಸಂಕಷ್ಟದಲ್ಲಿರುವವರಿಗೆ ಕಲ್ಪಿಸಿಕೊಡಲಾಗುತ್ತಿದೆ. ತಾಲೂಕಿನಾದ್ಯಂತ ಸೇವೆ ಒಂದಗಿಸಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
    ಕಳೆದ ೩ ವರ್ಷಗಳಿಂದ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳು ವಿತರಿಸಲಾಗುತ್ತಿದೆ. ಸೋಮವಾರದಿಂದ ಸಂಕಷ್ಟದಲ್ಲಿರುವ ಬಡವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನೂ ಹಲವು ಸೇವಾ ಕಾರ್ಯಗಳನ್ನು ಕೈಗೊಳ್ಳುವ  ಗುರಿ ಹೊಂದಲಾಗಿದೆ. ಉಚಿತ ಅಂಬ್ಯುಲೆನ್ಸ್ ಸೇವೆ ಬಯಸುವವರು ಮೊಬೈಲ್ : ೭೦೧೯೬೯೨೮೪೬ ಸಂಖ್ಯೆಗೆ ಕರೆಮಾಡಬಹುದಾಗಿದೆ ಎಂದರು.
     ಅಂಬ್ಯುಲೆನ್ಸ್ ಸೇವಾ ಕಾರ್ಯಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ಮಂಜಾನಾಯ್ಕ್, ಮಲ್ಲಿಕಾರ್ಜುನಯ್ಯ, ಟ್ರಸ್ಟ್ ಸೇವಾಕರ್ತರು ಹಾಗು ಇನ್ನಿತರರು ಉಪಸ್ಥಿತರಿದ್ದರು.

ಎಂಪಿಎಂ ಕಾಯಂ ಉದ್ಯೋಗಿಗಳಿಗೆ, ಭದ್ರತಾ ಸಿಬ್ಬಂದಿಗಳಿಗೆ ವೇತನ ನೀಡಿ

ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿಗಳಿಗೆ ನೂತನ ನಗರಸಭಾ ಸದಸ್ಯ ಬಸವರಾಜ ಬಿ. ಆನೆಕೊಪ್ಪ ಮನವಿ



ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಉದ್ಯೋಗಿಗಳಿಗೆ ಹಾಗು ಭದ್ರತಾ ವಿಭಾಗದ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೊಳಿಸುವಂತೆ ನಗರಸಭೆ ೧೯ನೇ ವಾರ್ಡ್‌ನ ನೂತನ ಸದಸ್ಯ ಬಸವರಾಜ ಬಿ. ಆನೆಕೊಪ್ಪ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್‌ಗೆ ಒತ್ತಾಯಿಸಿದರು.
   ಭದ್ರಾವತಿ, ಮೇ. ೨೯: ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಉದ್ಯೋಗಿಗಳಿಗೆ ಹಾಗು ಭದ್ರತಾ ವಿಭಾಗದ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೊಳಿಸುವಂತೆ ನಗರಸಭೆ ೧೯ನೇ ವಾರ್ಡ್‌ನ ನೂತನ ಸದಸ್ಯ ಬಸವರಾಜ ಬಿ. ಆನೆಕೊಪ್ಪ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್‌ಗೆ ಒತ್ತಾಯಿಸಿದರು.
    ಶನಿವಾರ ನಗರದ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತನಾಡಿದ ಬಸವರಾಜ್, ಕಳೆದ ಹಲವು ತಿಂಗಳಿಂದ ಕಾಯಂ ಉದ್ಯೋಗಿಗಳು, ಭದ್ರತಾ ವಿಭಾಗದ ಸಿಬ್ಬಂದಿಗಳು ವೇತನವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಸ್ತುತ ಕೊರೋನಾ ಸಂದರ್ಭದಲ್ಲಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಯಲ್ಲಿ  ತಕ್ಷಣ ವೇತನ ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದವು.
   ಪ್ರಸ್ತುತ ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಲಸಿಕೆ ಹಾಕಲಾಗುತ್ತಿದ್ದು, ಈ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಜನಸಂದಣಿ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಎಂಪಿಎಂ ಆಸ್ಪತ್ರೆಯಲ್ಲಿ ಹೆಚ್ಚುವರಿ ಲಸಿಕಾ ಕೇಂದ್ರ ತೆರೆಯಬೇಕು. ಇದರಿಂದ ಕಾಗದನಗರ, ಆನೆಕೊಪ್ಪ, ಜೆಪಿಎಸ್ ಕಾಲೋನಿ, ಸುರಗಿತೋಪು ಸೇರಿದಂತೆ ಸುತ್ತಮುತ್ತಲ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.  
       ಕೋವಿಡ್ ನಿಷೇಧಿತ ವಲಯ, ಆರೈಕೆ ಹಾಗು ತಪಾಸಣಾ ಕೇಂದ್ರಗಳಿಗೆ ಭೇಟಿ:
   ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಾಲೂಕಿನಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶನಿವಾರ ನಗರದ ವಿವಿಧೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಕೋವಿಡ್ ನಿಷೇಧಿತ ವಲಯಗಳಿಗೆ ಹಾಗು ಆರೈಕೆ ಕೇಂದ್ರಗಳಿಗೆ ಭೇಟಿ ಪರಿಶೀಲನೆ ನಡೆಸಿದರು.
   ಕೊರೋನಾ ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತೆ ವಹಿಸುವ ಜೊತೆಗೆ ನಗರ ಹಾಗು ಗ್ರಾಮಾಂತರ ಭಾಗದಲ್ಲಿ ಕೊರೋನಾ ಕುರಿತು ವ್ಯಾಪಕ ಪ್ರಚಾರ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
   ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರಸಭೆ ಪೌರಾಯುಕ್ತ ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ಸ್ಥಳೀಯ ಮುಖಂಡ ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ತಿಂಗಳ ಅಂತ್ಯದೊಳಗೆ ಶಾಸಕರ ಅನುದಾನದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಶನಿವಾರ ಶಾಸಕರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಿತು.
     ಭದ್ರಾವತಿ, ಮೇ. ೨೯: ಶಾಸಕರ ಅನುದಾನದ ಒಂದು ಕೋಟಿ ರು. ವೆಚ್ಚದಲ್ಲಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಜಾಗ ಗುರುತಿಸಿದ್ದು, ಈ ತಿಂಗಳ ಅಂತ್ಯದೊಳಗೆ ಆಕ್ಸಿಜನ್ ಉತ್ಪಾದನೆ ನಡೆಯಲಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
   ಅವರು ಶನಿವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೂತನ ಆಕ್ಸಿಜನ್ ಪ್ಲಾಂಟ್‌ನಲ್ಲಿ  ಒಂದು ನಿಮಿಷಕ್ಕೆ ೪೦೦ ಲೀಟರ್ ಗಾಳಿಯಿಂದ ಆಮ್ಲಜನಕ ಉತ್ಪಾದನೆಯಾಗಲಿದೆ. ಇದರಿಂದ ತಕ್ಷಣಕ್ಕೆ ಆಕ್ಸಿಜನ್ ಕೊರತೆ ಎದುರಾಗುವುದಿಲ್ಲ. ಈಗಾಗಲೇ ಆಸ್ಪತ್ರೆಯಲ್ಲಿ ಆಕ್ಸಿಜನ್ ಒಳಗೊಂಡ ೫೦ ಹಾಸಿಗೆಗಳಿದ್ದು, ಇದರ ಜೊತೆಗೆ ಇದೀಗ ೨೫ ಲಕ್ಷ ರು. ಶಾಸಕರ ಅನುದಾನದಲ್ಲಿ ಹೊಸದಾಗಿ ಆಕ್ಸಿಜನ್ ಒಳಗೊಂಡ ೫೦ ಹಾಸಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಐಸಿಯು ಒಳಗೊಂಡ ೩ ಹಾಸಿಗೆಗಳಿದ್ದು, ಇದನ್ನು ೧೦ ಹಾಸಿಗೆಗಳಿಗೆ ಹೆಚ್ಚಳ ಮಾಡಲಾಗುವುದು ಎಂದರು.
     ಈಗಾಗಲೇ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ೧೦೦ ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಲಾಗಿದ್ದು, ಸರ್ಕಾರ ಇದೀಗ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುವ ವಿಧಾನವನ್ನು ಬದಲಿಸಿದೆ. ಇದರಿಂದ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ದೇವರ ನರಸೀಪುರ ಮೊರಾರ್ಜಿ ವಸತಿ ಶಾಲೆಯಲ್ಲಿ ೧೬೦ ಹಾಸಿಗೆಯುಳ್ಳ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗಿದೆ.  ಈ ಕೇಂದ್ರ ಭಾನುವಾರದಿಂದಲೇ ಕಾರ್ಯಾರಂಭ ಮಾಡಲಿದೆ. ಪ್ರಸ್ತುತ ದಾಖಲಾಗುವವರನ್ನು ಈ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲೂ ಆರೈಕೆ ಕೇಂದ್ರ ತೆರೆಯಲಾಗುವುದು ಎಂದರು.
       ನಗರ ವ್ಯಾಪ್ತಿಯಲ್ಲಿ ಕೊರೋನಾ ಇಳಿಮುಖ:
   ನಗರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಎಲ್ಲಾ ಇಲಾಖೆಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿವೆ ಎಂದರು ಪ್ರಶಂಸೆ ವ್ಯಕ್ತಪಡಿಸಿದರು.
   ಗ್ರಾಮಾಂತರ ಭಾಗದಲ್ಲಿ ಸೋಂಕು ಹೆಚ್ಚಳವಾಗುತ್ತಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಅಲ್ಲದೆ ಸ್ಯಾನಿಟೈಜರ್ ಸೇರಿದಂತೆ ಇನ್ನಿತರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಬದಲಾಗದಿದ್ದಲ್ಲಿ ಅವರ ವಿರುದ್ಧ ಮೇಲಾಧಿಕಾರಿಗಳಿಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ಎಚ್ಚರಿಸಿದರು.
     ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರ್ ರವಿಕಿರಣ್, ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ನೂತನ ಸದಸ್ಯರು, ಎರೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿದ ಸೋಂಕು : ಸ್ಥಳೀಯರಲ್ಲಿ ಆತಂಕ, ನಿರ್ಬಂಧದ ಶಿಕ್ಷೆ




ಭದ್ರಾವತಿ, ಮೇ. ೨೯: ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಒಂದೇ ದಿನ ೧೩ ಸೋಂಕು ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯ ಪಡೆ ವತಿಯಿಂದ ಎ.ಕೆ ಕಾಲೋನಿ ಬ್ಯಾಂಕ್ ರಸ್ತೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಆತಂಕದಲ್ಲಿ ಬದುಕು ಸಾಗಿಸುವಂತಾಗಿದೆ. ಅಂಗಡಿ ಮುಂಗಟ್ಟುಗಳಿಂದ ನಿರ್ಬಂಧದ ಶಿಕ್ಷೆ ಎದುರುವಂತಾಗಿದೆ. 
    ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಕೆ ಕಾಲೋನಿಯಲ್ಲಿ ೬ ಮಂದಿಗೆ ಹಾಗು ಹಳ್ಳಿಕೆರೆ ವ್ಯಾಪ್ತಿಯಲ್ಲಿ ೭ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಎ.ಕೆ ಕಾಲೋನಿಯಲ್ಲಿ ಸೋಂಕು ಕಾಣಿಸಿಕೊಂಡಿರುವ ಬ್ಯಾಂಕ್ ರಸ್ತೆಯನ್ನು ಮಾತ್ರ ಬಂದ್ ಮಾಡಲಾಗಿದೆ. ಆದರೆ ಇಡೀ ಕಾಲೋನಿಯ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಸೋಂಕು ಕಾಣಿಸಿಕೊಳ್ಳದ ರಸ್ತೆಗಳಲ್ಲಿನ ನಿವಾಸಿಗಳಿಗೂ ಹಾಲು, ಔಷಧ ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳಲ್ಲಿ ಪ್ರವೇಶಿಸದಂತೆ ನಿರ್ಬಂಧಿಸಲಾಗುತ್ತಿದೆ. ಜೊತೆಗೆ ಅಕ್ಕಪಕ್ಕದ ಕಾಲೋನಿಯವರು ಸಹ ಒಂದು ರೀತಿಯಲ್ಲಿ ನೋಡುತ್ತಿದ್ದಾರೆಂಬ ಅಸಮಾಧಾನ ಇಲ್ಲಿನ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆಡಳಿತ, ಗ್ರಾಮ ಪಂಚಾಯಿತಿ ಕಾರ್ಯಪಡೆ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನು ಒಂದೇ ರೀತಿಯಲ್ಲಿ ಕಾಣುವಂತಹ ವಾತಾವರಣ ಕಲ್ಪಿಸಿಕೊಡಬೇಕಾಗಿದೆ. 


Friday, May 28, 2021

ಕೊರೋನಾ ಸೋಂಕಿತರು, ಕ್ಯಾನ್ಸರ್ ರೋಗಿಗಳು, ಮುಂಚೂಣಿ ಕಾರ್ಯಕರ್ತರಿಗೆ ಹಣ್ಣು ಹಂಪಲು ವಿತರಣೆ


ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಕೈಗೊಂಡಿರುವ ಹಣ್ಣು ಹಂಪಲು ವಿತರಿಸುವ ಸೇವಾ ಕಾರ್ಯಕ್ಕೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ  ಪರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಸೇರಿದಂತೆ ಇನ್ನಿತರರು ಚಾಲನೆ ನೀಡಿದರು.
    ಭದ್ರಾವತಿ, ಮೇ. ೨೮: ದೇಶ ಸೇವೆಯೊಂದಿಗೆ ಸಮಾಜ ಸೇವೆಗೂ ಸಿದ್ದ ಎಂಬುದನ್ನು ನಗರದ ತಾಲೂಕು ಮಾಜಿ ಸೈನಿಕರ ಸಂಘ ಪ್ರತಿ ಬಾರಿ ಸಂಕಷ್ಟದ  ಸಂದರ್ಭದಲ್ಲಿ ಸಾಬೀತು ಮಾಡಿ ತೋರಿಸುತ್ತಿದೆ. ಈ ಬಾರಿ ಸಹ ಸೇವೆಯನ್ನು ಮುಂದುವರೆಸಿದ್ದು, ಶುಕ್ರವಾರ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ, ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಹಾಗು ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಪೌಷ್ಠಿಕಾಂಶವುಳ್ಳ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
     ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸುವ ಸೇವಾ ಕಾರ್ಯಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ  ಪರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಸೇರಿದಂತೆ ಇನ್ನಿತರರು ಚಾಲನೆ ನೀಡಿ ಮಾಜಿ ಸೈನಿಕರ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
    ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರಿಗೆ, ಕಾಗದ ನಗರದ ಎಂಪಿಎಂ ಕಲ್ಯಾಣ ಮಂಟಪದ ಕೋವಿಡ್ ಆರೈಕೆ ಕೇಂದ್ರದಲ್ಲಿರುವವರಿಗೆ, ಶಿವಮೊಗ್ಗ ಮಾಚೇನಹಳ್ಳಿಯ ಮಲ್ನಾಡ್ ಆಸ್ಪತ್ರೆ ಮತ್ತು ಗಂಥಿ ಸಂಸ್ಥೆಯಲ್ಲಿರುವ ಕ್ಯಾನ್ಸರ್ ರೋಗಿಗಳಿಗೆ ಹಾಗು ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸೇವೆಯ ಸಾರ್ಥಕತೆಗೆ ಮಾಜಿ ಸೈನಿಕರು ಸಾಕ್ಷಿಯಾದರು.
    ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ದಿನೇಶ್‌ಕುಮಾರ್, ಕಾರ್ಯದರ್ಶಿ ವೆಂಕಟಗಿರಿ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಾವಿತ್ರಿ ಬಾಯಿ ನಿಧನ

ಸಾವಿತ್ರಿ ಬಾಯಿ
ಭದ್ರಾವತಿ, ಮೇ. ೨೮: ಪ್ರಿಂಟಿಂಗ್ ಪ್ರೆಸ್ ನೌಕರ ಅಜಯ್  ಅವರ ತಾಯಿ ಹಳೇನಗರದ ರಥಬೀದಿ ನಿವಾಸಿ ಸಾವಿತ್ರಿ ಬಾಯಿ(೫೭) ಶುಕ್ರವಾರ ನಿಧನ ಹೊಂದಿದರು.
   ಅನಾರೋಗ್ಯದಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಮೃತರ ನಿಧನಕ್ಕೆ ಮಲೆನಾಡು ಮುದ್ರಕರ ಮಾಲೀಕರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎನ್. ಗಣೇಶ್‌ರಾವ್ ಸಿಂಧ್ಯಾ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಒಂದೇ ದಿನ ಸೋಂಕಿಗೆ ೯ ಬಲಿ : ಬಾರಂದೂರು ಎ.ಕೆ ಕಾಲೋನಿ ಸೀಲ್‌ಡೌನ್


ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದ ಎ.ಕೆ ಕಾಲೋನಿಯಲ್ಲಿ ಒಂದೇ ದಿನ ೧೩ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರ ಈ ಕಾಲೋನಿಯನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ.
ಭದ್ರಾವತಿ, ಮೇ. ೨೮: ಲಾಕ್‌ಡೌನ್ ೨ನೇ ಅವಧಿಯಲ್ಲಿಯೂ ಸಹ ತಾಲೂಕಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ೧೨೪ ಸೋಂಕು ಪತ್ತೆಯಾಗಿದೆ. ಒಂದೇ ದಿನ ೯ ಜನ ಬಲಿಯಾಗಿದ್ದು, ನಗರ ಹಾಗು ಗ್ರಾಮಾಂತರ ಭಾಗದ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
    ಒಟ್ಟು ೩೯೨ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ ೧೨೪ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೧೨೬ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ತಾಲೂಕಿನಲ್ಲಿ ಒಟ್ಟು ೪೭೩೫ ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ ೪೦೯೩ ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನ ೯ ಮಂದಿ ಬಲಿಯಾಗಿದ್ದು, ಇದುವರೆಗೂ ೧೧೭ ಮಂದಿ ಮೃತಪಟ್ಟಿದ್ದಾರೆ.
    ೨೮೫ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಒಟ್ಟು ೩೯ ಕಂಟೈನ್‌ಮೆಂಟ್ ಜೋನ್‌ಗಳಿವೆ. ಒಟ್ಟು ೫೨ ಕಂಟೈನ್‌ಮೆಂಟ್ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮಾಂತರ ಭಾಗದಲ್ಲಿ ೨೯ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.
       ಬಾರಂದೂರು ಎ.ಕೆ ಕಾಲೋನಿ ಸೀಲ್‌ಡೌನ್:
    ತಾಲೂಕಿನ ಬಾರಂದೂರು ಗ್ರಾಮದ ಎ.ಕೆ ಕಾಲೋನಿಯಲ್ಲಿ ಒಂದೇ ದಿನ ೧೩ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಶುಕ್ರವಾರ ಈ ಕಾಲೋನಿಯನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ.
     ಕಳೆದ ೩-೪ ದಿನಗಳ ಹಿಂದೆ ಈ ಕಾಲೋನಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ವ್ಯಕ್ತಿಯ ಶವ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಸುಮಾರು ೧೩ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಕೋವಿಡ್ ಕಾರ್ಯಪಡೆ ವತಿಯಿಂದ ರೋಗ ನಿರೋಧಕ ಔಷಧಿ ಸಿಂಪಡಿಸಲಾಗಿದ್ದು, ನಿವಾಸಿಗಳು ಸೋಂಕು ಕುರಿತು ಜಾಗೃತಿ ಮೂಡಿಸುವ ಮೂಲಕ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
    ಕಾಲೋನಿಯ ಮುಖ್ಯ ರಸ್ತೆಯನ್ನು ಬ್ಯಾರಿಗೇಡ್ ಮೂಲಕ ಸಂಪೂರ್ಣ ಬಂದ್ ಮಾಡಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ಗುತ್ತಿಗೆ ಪೌರ ನೌಕರನ ಹತ್ಯೆ ಪ್ರಕರಣ : ಬಿಜೆಪಿ ಪ್ರತಿಭಟನೆ



ಭದ್ರಾವತಿ ನಗರಸಭೆ ಗುತ್ತಿಗೆ ಪೌರ ನೌಕರನ ಹತ್ಯೆ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಕೈಗೊಳ್ಳುವ ಜೊತೆಗೆ ಹತ್ಯೆಗೆ ಕುಮ್ಮಕ್ಕು ನೀಡಿರುವವರ ವಿರುದ್ಧ ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
   ಭದ್ರಾವತಿ, ಮೇ. ೨೮: ನಗರಸಭೆ ಗುತ್ತಿಗೆ ಪೌರ ನೌಕರನ ಹತ್ಯೆ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಕೈಗೊಳ್ಳುವ ಜೊತೆಗೆ ಹತ್ಯೆಗೆ ಕುಮ್ಮಕ್ಕು ನೀಡಿರುವವರ ವಿರುದ್ಧ ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಶುಕ್ರವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಕೊರೋನಾ ವೈರಸ್ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಈ ರೀತಿಯ ಘಟನೆ ನಡೆದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿದೆ. ಬಹುತೇಕ ಸ್ಥಳೀಯ ಪೊಲೀಸ್ ಅಧಿಕಾರಿಗಳು ಇಲ್ಲಿನ ಜನಪ್ರತಿನಿಧಿಗಳು ಹೇಳಿದಂತೆ ಕೇಳುತ್ತಾರೆ. ಇದರಿಂದಾಗಿ ಕ್ಷೇತ್ರದಲ್ಲಿ  ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರಿಗೆ ಹಾಗು ಕುಮ್ಮಕ್ಕು ನೀಡುವವರಿಗೆ ಯಾವುದೇ ಭಯವಿಲ್ಲದಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
    ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಕ್ಷೇತ್ರದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ನಮ್ಮ ಜವಾಬ್ದಾರಿಯಾಗಿದೆ. ಈಗಾಗಲೇ ಈ ಪ್ರಕರಣ ಕುರಿತು ಸಮಗ್ರ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಂಸದರಿಗೆ ತಿಳಿಸಲಾಗಿದೆ. ಮುಂದಿನ ಕ್ರಮದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದರು.
    ತಾಲೂಕು ಆಡಳಿತ, ಪೊಲೀಸ್ ಇಲಾಖೆ ಯಾರಿಗೂ ಹೆದರುವ  ಅಗತ್ಯವಿಲ್ಲ. ಪಕ್ಷ ಸದಾ ನಿಮಗೆ ಬೆಂಬಲ ನೀಡಲಿದೆ.  ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಹತ್ಯೆಯಾದವರ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅಲ್ಲದೆ ದಲಿತ ಕುಟುಂಬಕ್ಕೆ ರಕ್ಷಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಒಂದು ವೇಳೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
   ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಪ್ರಮುಖರಾದ ಕೆ.ಆರ್ ಸತೀಶ್, ಕೆ. ಮಂಜಪ್ಪ, ರಾಮನಾಥಬರ್ಗೆ, ಎಂ. ಮಂಜುನಾಥ್, ಅವಿನಾಶ್, ಪಿ. ಗಣೇಶ್‌ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಚಿತ್ರ: ಡಿ೨೮-ಬಿಡಿವಿಟಿ


Thursday, May 27, 2021

ಭದ್ರಾವತಿ ಪುನಃ ೨ ದಿನ ಮೇ.೨೯, ೩೦ರಂದು ಸಂಪೂರ್ಣ ಲಾಕ್‌ಡೌನ್

ಭದ್ರಾವತಿ, ಮೇ. ೨೭: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇನ್ನೂ ಇಳಿಮುಖವಾಗದ ಹಿನ್ನಲೆಯಲ್ಲಿ ಪುನಃ ಎರಡು ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
     ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅವರು ಮೇ.೨೯ ಮತ್ತು ೩೦ ಶನಿವಾರ ಹಾಗು ಭಾನುವಾರ ೨ ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಹಾಲು ಮತ್ತು ಔಷಧ ಅಂಗಡಿಗಳು ಹೊರತುಪಡಿಸಿ ಉಳಿದ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಅಲ್ಲದೆ ಸಾರ್ವಜನಿಕರು ವಿನಾಕಾರಣ ತಿರುಗಾಡುವಂತಿಲ್ಲ. ಸಂಪೂರ್ಣ ಲಾಕ್‌ಡೌನ್‌ಗೆ ಎಲ್ಲರೂ ಸಹಕಾರ ನೀಡುವಂತೆ ಕೋರಲಾಗಿದೆ.

ವಿವಿಧ ಸೇವಾ ಸಂಸ್ಥೆಗಳಿಂದ ಸಂಕಷ್ಟದಲ್ಲಿರುವವರಿಗೆ ನೆರವು


ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಕೋವಿಡ್ ಚಿಕಿತ್ಸೆ ಪಡೆಯುವವರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಾರುತಿ ಇಕೊ ಮೊಬೈಲ್ ವ್ಯಾನ್ ಉಚಿತ ಸೇವೆಗಾಗಿ ಮೀಸಲಿಡಲಾಗಿದೆ.
    ಭದ್ರಾವತಿ, ಮೇ. ೨೭: ತಾಲೂಕಿನಲ್ಲಿ ಕೊರೋನಾ ಸೋಂಕು ೨ನೇ ಅಲೆ  ಭೀತಿ ನಡುವೆಯೂ ಲಾಕ್‌ಡೌನ್ ಪರಿಣಾಮ ಸಂಕಷ್ಟಕ್ಕೆ ಒಳಗಾಗಿರುವವರ ನೆರವಿಗೆ ದಾನಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗು ಸ್ವಯಂ ಸೇವಾ ಸಂಸ್ಥೆಗಳು ಮುಂದಾಗುವ ಮೂಲಕ ಮಾನವೀಯತೆ ಮೆರೆಯುತ್ತಿವೆ.
       ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು :
     ಸೇವೆಯಲ್ಲಿ ಭಗವಂತನನ್ನು ಕಾಣಬೇಕೆಂಬ ಮನೋಭಾವನೆಯೊಂದಿಗೆ ನಿರಂತರವಾಗಿ ಹಲವಾರು ಸೇವಾ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ನಗರದ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸೇವಾ ಕಾರ್ಯಗಳನ್ನು ಮತ್ತಷ್ಟು ವಿಸ್ತರಿಸಿಕೊಂಡಿವೆ.
      ಮೇ.೪ ರಿಂದ ಕೊರೋನಾ ಸಂದಭದಲ್ಲಿನ ಸೇವಾ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಕೋವಿಡ್ ಚಿಕಿತ್ಸೆ ಪಡೆಯುವವರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮಾರುತಿ ಇಕೊ ಮೊಬೈಲ್ ವ್ಯಾನ್ ಉಚಿತ ಸೇವೆಗಾಗಿ ಮೀಸಲಿಡಲಾಗಿದೆ. ಮೇ.೭ರಿಂದ ಪ್ರತಿದಿನ ಸುಮಾರು ೧೫೦ ಮಂದಿಗೆ ಸಾಕಾಗುವಷ್ಟು ಆಹಾರ ತಯಾರಿಸಿ ಹಸಿವಿನಿಂದ ಬಳಲುತ್ತಿರುವವರಿಗೆ, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ವಿತರಿಸಲಾಗುತ್ತಿದೆ. ಜೊತೆಗೆ ಭಿಕ್ಷುಕರು, ನಿರ್ಗತಿಕರು, ಅಸಹಾಯಕರಿಗೆ ಊಟದ ಜೊತೆ ಬಟ್ಟೆ ಸಹ ವಿತರಿಸಲಾಗುತ್ತಿದೆ. ಇವೆಲ್ಲದರ ಜೊತೆಗೆ ಸೋಂಕಿನಿಂದ ಗುಣಮುಖರಾಗಿರುವವರಿಗೆ ಒಂದು ಆಕ್ಸಿಜನ್ ಕಾನ್ಸನ್‌ಟ್ರೇಟರ್ ಮೀಸಲಾಗಿದ್ದು, ಸಂಸ್ಥೆಯ ಭಕ್ತರು ಹಾಗು ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಾಲಾ ಸಿಬ್ಬಂದಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.



ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಭಿಕ್ಷುಕರು, ನಿರ್ಗತಿಕರು, ಅಸಹಾಯಕರಿಗೆ ಸಿದ್ದಪಡಿಸಿದ ಆಹಾರದ ಜೊತೆಗೆ ಬಟ್ಟೆ ಸಹ ವಿತರಿಸುತ್ತಿರುವುದು.

     ಸಂಸ್ಥೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಮೊ: ೯೮೪೪೨೩೮೫೮೬ ಅಥವಾ ಮೊ: ೯೧೪೧೬೪೨೪೩೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ನಗರದಲ್ಲಿ ಸೇವಾ ಕಾರ್ಯಗಳು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯನವರ ನೇತೃತ್ವದಲ್ಲಿ ನಡೆಯುತ್ತಿವೆ. ಈಗಾಗಲೇ ಸಂಸ್ಥೆಯ ಅನೇಕ ಭಕ್ತರು ಸ್ವಯಂ ಪ್ರೇರಣೆಯಿಂದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ.
    ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವು:
   ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕಿನಲ್ಲಿ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.
    ತಾಲೂಕಿನಲ್ಲಿ ಒಟ್ಟು ಸುಮಾರು ೪೦೦೦ ಕಟ್ಟಡ ಕಾರ್ಮಿಕರಿದ್ದು, ಈ ಪೈಕಿ ಬಹುತೇಕ ಮಂದಿ ಬಡತನ ರೇಖೆಗಿಂತ ಕೆಳಗಿನವರಾಗಿದ್ದಾರೆ. ಇಂತಹ ಕಟ್ಟಡ ಕಾರ್ಮಿಕರನ್ನು ಗುರುತಿಸಿ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ನಗರದ ವಿವಿಧೆಡೆ ನೆಲೆಸಿರುವ ಕಟ್ಟಡ ಕಾರ್ಮಿಕರಿಗೆ ಆಯಾ ಭಾಗದಲ್ಲಿಯೇ ದಿನ ಸಾಮಗ್ರಿಗಳನ್ನು ವಿತರಿಸುವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಇದುವರೆಗೂ ಸುಮಾರು ೫೦೦ ರಿಂದ ೬೦೦ ಮಂದಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಇನ್ನೂ ಸುಮಾರು ೧೦೦೦ ಮಂದಿಗೆ ವಿತರಿಸಬೇಕಾಗಿದೆ.
    ಗುರುವಾರ ಭಂಡಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ನಗರಸಭೆ ಮಾಜಿ ಸದಸ್ಯ ಗಂಗಾಧರ್, ತಾಲೂಕು ಆಟೋ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷಣ್, ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಗೌರವಾಧ್ಯಕ್ಷ ಸುರೇಶ್‌ಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ತಾಲೂಕು ಅಧ್ಯಕ್ಷ ನಾಗರಾಜ್, ಮನೋಹರ್, ಶೇಖರ್, ಪೇಂಟಿಂಗ್ ಸಂಘದ ಅಧ್ಯಕ್ಷ ಶಿವಣ್ಣ, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ನಾಗೇಶ್, ಗುರು, ಅಂತೋಣಿ ಕ್ರೂಸ್, ನಾರಾಯಣ ಸ್ವಾಮಿ, ಅಭಿಲಾಷ್, ಮಂಜುನಾಥ್, ಸುಬ್ರಮಣ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಭದ್ರಾವತಿ ಭಂಡಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಕರ್ನಾಟಕ ರಾಜ್ಯ ಕನ್ಸ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಭದ್ರಾವತಿಯಲ್ಲಿ ೧೦೭ ಸೋಂಕು ಪತ್ತೆ : ೪ ಮಂದಿ ಬಲಿ

    ಭದ್ರಾವತಿ, ಮೇ. ೨೭: ತಾಲೂಕಿನಲ್ಲಿ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣ ಕಂಡು ಬರುತ್ತಿಲ್ಲ. ಇನ್ನೂ ನೂರರ ಗಡಿಯಾಚೆಯಲ್ಲಿದ್ದು, ಗುರುವಾರ ಒಟ್ಟು ೧೦೭ ಸೋಂಕು ಪತ್ತೆಯಾಗಿದೆ.
   ಒಟ್ಟು ೪೪೮ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ ೧೦೭ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೧೭೬ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಈ ೪ ಮಂದಿ ಬಲಿಯಾಗಿದ್ದಾರೆ. ಇದುವರೆಗೂ ೧೦೮ ಮಂದಿ ಮೃತಪಟ್ಟಿದ್ದು, ೪೦೧ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ನಗರ ಭಾಗದಲ್ಲಿ ಒಟ್ಟು ೬೦ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨೬ ತೆರವುಗೊಳಿಸಲಾಗಿದೆ. ಗ್ರಾಮಾಂತರ ಭಾಗದಲ್ಲಿ ಒಟ್ಟು ೨೯ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ ೨ ಜೋನ್ ತೆರವುಗೊಳಿಸಲಾಗಿದೆ.

ನೂತನ ಬಿಪಿಎಲ್ ಸಂಘ ಅಸ್ತಿತ್ವಕ್ಕೆ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗ ನೂತನವಾಗಿ ಬಿ.ಪಿ.ಎಲ್ ಸಂಘ(ಭದ್ರಾವತಿ ಪ್ರಜಾ ವಿಮೋಚನೆ) ಅಸ್ತಿತ್ವಕ್ಕೆ ಬಂದಿದ್ದು, ಗುರುವಾರ ಸಂಘದ ಕಛೇರಿ ಉದ್ಘಾಟಿಸಲಾಯಿತು.

    ಭದ್ರಾವತಿ, ಮೇ. ೨೭: ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ಮುಂಭಾಗ ನೂತನವಾಗಿ ಬಿ.ಪಿ.ಎಲ್ ಸಂಘ(ಭದ್ರಾವತಿ ಪ್ರಜಾ ವಿಮೋಚನೆ) ಅಸ್ತಿತ್ವಕ್ಕೆ ಬಂದಿದ್ದು, ಗುರುವಾರ ಸಂಘದ ಕಛೇರಿ ಉದ್ಘಾಟಿಸಲಾಯಿತು.
    ಈಗಾಗಲೇ ಸಂಘದ ವತಿಯಿಂದ ಕೋವಿಡ್ ಲಾಕ್‌ಡೌನ್ ಪರಿಣಾಮ ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ನೀಡುವ ಸೇವಾ ಕಾರ್ಯ ನಡೆಸಿಕೊಂಡು ಬರಲಾಗುತ್ತಿದೆ. ನೂತನ ಸಂಘದ ಸೇವಾ ಕಾರ್ಯದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡಿದ್ದಾರೆ.
    ಸಂಘದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ, ಅಧ್ಯಕ್ಷ ಎಂ. ಮುಕುಂದನ್, ಕಾರ್ಯಾಧ್ಯಕ್ಷ ಎಂ. ರವಿಕುಮಾರ್, ಉಪಾಧ್ಯಕ್ಷರಾದ ಸಾಮ್ಯುಯೆಲ್, ವಿಲಿಯಂ ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ. ಜಗದೀಶ್, ಕಾರ್ಯದರ್ಶಿ ಎಂ.ಸಿ ಸುನಿಲ್‌ಕುಮಾರ್, ಸಹಕಾರ್ಯದರ್ಶಿ ಜಿ. ಗೋವಿಂದ, ಖಜಾಂಚಿ ಎ.ವಿ ಮುರುಳಿಕೃಷ್ಣ, ನಿರ್ದೇಶಕರಾದ ಶ್ರೀಕಾಂತ್, ಎನ್. ನವೀನ್‌ಕುಮಾರ್, ಆರ್. ರವೀಂದ್ರಪ್ಪ, ಸಿ. ಉಮಾಶಂಕರ್, ಜಿ. ಕರುಣಾನಿಧಿ, ಎನ್. ಲೋಕೇಶ್, ಬಿ.ವೈ. ಅಜಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೋವಿಡ್-೧೯ ಕಾರ್ಯಪಡೆ ವತಿಯಿಂದ ಕೂಡ್ಲಿಗೆರೆ ಗ್ರಾಮದಲ್ಲಿ ಜಾಗೃತಿಗಾಗಿ ಪಥ ಸಂಚಲನ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕೋವಿಡ್-೧೯ ಕಾರ್ಯಪಡೆ ವತಿಯಿಂದ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಥ ಸಂಚಲನ ನಡೆಸಲಾಯಿತು.
    ಭದ್ರಾವತಿ, ಮೇ. ೨೭: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕೋವಿಡ್-೧೯ ಕಾರ್ಯಪಡೆ ವತಿಯಿಂದ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಥ ಸಂಚಲನ ನಡೆಸಲಾಯಿತು.
    ಈಗಾಗಲೇ ಕೂಡ್ಲಿಗೆರೆ ಗ್ರಾಮದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದ್ದು, ರೋಗ ನಿರೋಧಕ ಔಷಧ ಸಿಂಪಡಿಸುವ ಜೊತೆಗೆ ಸೀಲ್‌ಡೌನ್ ಸಹ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮಸ್ಥರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ವ್ಯಾಪಕ ಪ್ರಚಾರ ನಡೆಸಲಾಯಿತು.
   ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಉಪ ತಹಸೀಲ್ದಾರ್ ನಾರಾಯಣಗೌಡ, ರಾಜಸ್ವ ನಿರೀಕ್ಷಕ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ವರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಪಂಚಾಯಿತಿ ಸದಸ್ಯರಾದ ರುದ್ರೇಶ್, ಆರ್.ಎನ್ ಸ್ವಾಮಿನಾಥನ್, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಪ್ಪನ್, ಪೊಲೀಸ್ ಇಲಾಖೆಯ ಜಗದೀಶ್, ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, May 26, 2021

ವಿಶಿಷ್ಟ ಸೇವೆ ಸಲ್ಲಿಸುತ್ತಿರುವವರಿಗೆ ನೆರವು

ಭದ್ರಾವತಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಕಾರ್ಯಗಳನ್ನು ಉಚಿತವಾಗಿ ನೆರವೇರಿಸುವ ಮೂಲಕ ವಿಶೇಷವಾಗಿ ಸೇವೆ ಸಲ್ಲಿಸುತ್ತಿರುವ ಬಜರಂಗದಳ ಕಾರ್ಯಕರ್ತರನ್ನು ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಸನ್ಮಾನಿಸಿ ೨೫ ಸಾವಿರ ರು. ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಲಾಯಿತು.
    ಭದ್ರಾವತಿ, ಮೇ. ೨೬: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿರುವವರ ನೆರವಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು ಮುಂದಾಗುವ ಜೊತೆಗೆ ಮತ್ತಷ್ಟು ಪ್ರೋತ್ಸಾಹ ನೀಡುತ್ತಿವೆ.
    ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿಶೇಷವಾಗಿ ಸೇವೆ ಸಲ್ಲಿಸುತ್ತಿರುವ ಬಜರಂಗದಳ ಕಾರ್ಯಕರ್ತರನ್ನು ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಸನ್ಮಾನಿಸಿ ಸುಮಾರು ೨೫ ಸಾವಿರ ರು. ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸಲಾಯಿತು.
    ಬಜರಂಗದಳ ಕಾರ್ಯಕರ್ತರು ವಾಹನವೊಂದನ್ನು ಬಾಡಿಗೆಗೆ ಪಡೆದು ಕೋವಿಡ್-೧೯ರ ಸೇವೆಗೆ ಮೀಸಲಿಡುವ ಜೊತೆಗೆ ಉಚಿತವಾಗಿ ಇದುವರೆಗೂ ಸುಮಾರು ೩೩ ಮೃತ ದೇಹಗಳ ಅಂತ್ಯಸಂಸ್ಕಾರವನ್ನು ಕೈಗೊಂಡಿದೆ.
     ಹಿಂದೂ ಮಹಾಸಭಾ, ಹಿಂದೂ ರಾಷ್ಟ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಉಪಾಧ್ಯಕ್ಷರಾದ ಮಣಿ ಎಎನ್‌ಎಸ್, ಕೆ. ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾದ ಭವಾನಿ, ಚನ್ನಪ್ಪ, ಕಾರ್ಯದರ್ಶಿ ಕೆ. ಸುದೀಪ್ ಕುಮಾರ್,  ಪ್ರಮುಖರಾದ ಶೇಖರಪ್ಪ, ಗಿರೀಶ್, ಬಜರಂಗದಳ ಪ್ರಮುಖರಾದ ಸುನಿಲ್, ವಡಿವೇಲು, ದೇವರಾಜ್, ಕೃಷ್ಣ, ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಆರ್ಥಿಕವಾಗಿ ಸಂಕಷ್ಟದಲ್ಲಿರುವ ಗೃಹ ರಕ್ಷಕರಿಗೆ ಭದ್ರಾವತಿ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕರ ಕಛೇರಿ ಬಳಿ ಬುಧವಾರ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಅಗತ್ಯವಿರುವ ದಿನಸಿ ಸಾಮಗ್ರಿ ಹಾಗು ತರಕಾರಿ ವಿತರಿಸಲಾಯಿತು.

      ಗೃಹ ರಕ್ಷಕರಿಗೆ ನೆರವು:
    ಕೊರೋನಾ ಸಂಕಷ್ಟದ ಸಮಯದಲ್ಲೂ ಹಗಲಿರುಳು ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಗೃಹ ರಕ್ಷಕರ ನೆರವಿಗೆ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟ ಮುಂದಾಗುವ ಮೂಲಕ ವಿಶೇಷತೆ ಮೆರೆದಿದೆ.
   ಆರ್ಥಿಕವಾಗಿ ಸಂಕಷ್ಟದಲ್ಲಿರುವ ಗೃಹ ರಕ್ಷಕರಿಗೆ ನ್ಯೂಟೌನ್‌ನಲ್ಲಿರುವ ಗೃಹ ರಕ್ಷಕರ ಕಛೇರಿ ಬಳಿ ಬುಧವಾರ ಅಗತ್ಯವಿರುವ ದಿನಸಿ ಸಾಮಗ್ರಿ ಹಾಗು ತರಕಾರಿ ವಿತರಿಸುವ ಮೂಲಕ ಸಮಾಜಕ್ಕೆ ಅವರ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಲಾಯಿತು.  
   ಲಾಕ್‌ಡೌನ್ ಮೊದಲ ಅವಧಿ ಮುಕ್ತಾಯಗೊಳ್ಳುವವರೆಗೂ ಒಕ್ಕೂಟದಿಂದ ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ನೀಡುವ ಸೇವಾ ಕಾರ್ಯ ಕೈಗೊಳ್ಳಲಾಗಿತ್ತು. ಇದೀಗ ೨ನೇ ಅವಧಿಯಲ್ಲಿ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದೆ.
    ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪಾಸ್ಟರ್ ದೇವನೇಸನ್ ಸ್ಯಾಮ್ಯುವೆಲ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಯಕರ್ನಾಟಕ ಜನಪರ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಸ್ ಭೈರಪ್ಪ, ಪ್ರಮುಖರಾದ ನಗರಸಭೆ ಮಾಜಿ ಸದಸ್ಯ ಪ್ರಾನ್ಸಿಸ್, ಪ್ರಮುಖರಾದ ವಿಲ್ಸನ್ ಬಾಬು, ಎಂ.ಜಿ ರಾಮಚಂದ್ರ, ದಾಸ್, ಗೃಹ ರಕ್ಷಕದಳದ ಘಟಕಾಧಿಕಾರಿ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ೧೩೫ ಕೊರೋನಾ ಸೋಂಕು : ೩ ಮಂದಿ ಬಲಿ

ಭದ್ರಾವತಿ, ಮೇ. ೨೬: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಬುಧವಾರ ಒಟ್ಟು ೧೩೫ ಸೋಂಕು ಪತ್ತೆಯಾಗಿದ್ದು, ೩ ಮಂದಿ ಬಲಿಯಾಗಿದ್ದಾರೆ.
ಒಟ್ಟು ೩೫೦ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೩೫ ಮಂದಿಗೆ ಸೋಂಕು ದೃಢಪಟ್ಟಿದೆ. ಕೇವಲ ೩೫ ಮಂದಿ ಮಾತ್ರ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಇದುವರೆಗೂ ೧೦೪ ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಒಟ್ಟು ೪೩೭ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ೫೬ ಕಂಟೈನ್‌ಮೆಂಟ್ ಜೋನ್‌ಗಳ ಪೈಕಿ ೨೬ ತೆರವುಗೊಳಿಸಲಾಗಿದೆ. ಗ್ರಾಮೀಣ ಭಾಗದ ೨೭ ಕಂಟೈನ್‌ಮೆಂಟ್ ಜೋನ್‌ಗಳ ಪೈಕಿ ೨ ತೆರವುಗೊಳಿಸಲಾಗಿದೆ.

ಕೊಲೆ ಪ್ರಕರಣ : ೫ ಜನರ ಬಂಧನ

ಭದ್ರಾವತಿ ಜೈ ಭೀಮಾ ನಗರದಲ್ಲಿ ಮಂಗಳವಾರ ಸಂಜೆ ನಡೆದಿರುವ ನಗರಸಭೆ ಗುತ್ತಿಗ ನೌಕರ ಸುನಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ೫ ಜನರನ್ನು ಬಂಧಿಸಿರುವುದು.
    ಭದ್ರಾವತಿ, ಮೇ. ೨೬: ಇಲ್ಲಿನ ಜೈ ಭೀಮಾ ನಗರದಲ್ಲಿ ಮಂಗಳವಾರ ಸಂಜೆ ನಡೆದಿರುವ ನಗರಸಭೆ ಗುತ್ತಿಗ ನೌಕರ ಸುನಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ೫ ಜನರನ್ನು ಬಂಧಿಸಿದ್ದಾರೆ.
    ಕೋವಿಡ್ ಸಂಕಷ್ಟದ ಸಮಯದಲ್ಲೂ  ಪೊಲೀಸರು ಕೊಲೆಯಾದ ೨೪ ಗಂಟೆಯೊಳಗೆ ಮುಂಚಿನ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ೫ ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
   ನಗರದ ಅನ್ವರ್ ಕಾಲೋನಿ ನಿವಾಸಿ ಸಾಬೀತ್(೨೦), ಶಿವಮೊಗ್ಗ ಆರ್.ಎಂ.ಎಲ್ ನಗರದ ಇದಾಯತ್(೨೦), ಮಹಮದ್ ಜುನೇದ್(೨೦), ಬುದ್ದಾ ನಗರದ ನಿಶಾದ್ ಪಾಷಾ(೨೧) ಮತ್ತು ತಬ್ರೇಜ್ ಪಾಷಾ(೨೧) ಅವರನ್ನು ಬಂಧಿಸಲಾಗಿದೆ ಹಾಗು ಕೃತಕ್ಕೆ ಬಳಸಿದ ಆಯುಧ ಮತ್ತು ೨ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ನಗರಸಭೆ ಗುತ್ತಿಗೆ ನೌಕರ ಕೊಲೆ : ಮತ್ತೊಬ್ಬನಿಗೆ ಗಾಯ

ಸ್ಥಳಕ್ಕೆ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ಭೇಟಿ

ಭದ್ರಾವತಿ ಜೈಭೀಮಾ ನಗರದಲ್ಲಿ ಕೊಲೆಯಾದ ನಗರಸಭೆ ಗುತ್ತಿಗೆ ನೌಕರ ಸುನಿಲ್
ಭದ್ರಾವತಿ, ಮೇ. ೨೬: ಕೊರೋನಾ ಹಿನ್ನಲೆಯಲ್ಲಿ ಲಾಕ್‌ಡೌನ್ ಘೋಷಿಸಿದ್ದರೂ ಸಹ ನಗರಸಭೆ ವ್ಯಾಪ್ತಿಯ ಜೈ ಭೀಮಾ ನಗರದಲ್ಲಿ ಹೊರಗಿನಿಂದ ಬಂದು ವಿನಾಕಾರಣ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದವರನ್ನು ಪ್ರಶ್ನಿಸಿದ ಅಲ್ಲಿನ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
    ನಗರಸಭೆ ಗುತ್ತಿಗೆ ನೌಕರ ಸುನಿಲ್(೨೫) ಕೊಲೆಯಾಗಿದ್ದು, ಶ್ರೀಕಂಠ ಎಂಬ ಯುವಕ ಹಲ್ಲೆಗೊಳಗಾಗಿದ್ದಾನೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
        ಘಟನೆ ವಿವರ:
    ಹಳೇನಗರದ ನಿರ್ಮಲಾ ಆಸ್ಪತ್ರೆ ಹಿಂಭಾಗ ಲಕ್ಷ್ಮೀ ಸಾಮಿಲ್‌ಗೆ ಹೋಗುವ ರಸ್ತೆಗೆ ಜೈ ಭೀಮಾ ನಗರದ ರಸ್ತೆ ಸಂಪರ್ಕಗೊಂಡಿದ್ದು, ಇಲ್ಲಿನ ನಿವಾಸಿಗಳಾದ ಸುನಿಲ್, ಶ್ರೀಕಂಠ ಮತ್ತು ರಹೀಂ ರಸ್ತೆ ಸಂಪರ್ಕಗೊಂಡಿರುವ ಸ್ಥಳದ ಸಮೀಪದಲ್ಲಿ ಮಾತನಾಡಿಕೊಂಡು ನಿಂತಿರುವ ಸಂದರ್ಭದಲ್ಲಿ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ವಿನಾಕಾರಣ ಜೈಭೀಮಾ ನಗರದಲ್ಲಿ ಸುತ್ತಾಡುವುದನ್ನು ಕಂಡು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಜಗಳ ಉಂಟಾಗಿದೆ.  ಈ ಜಗಳ ಇಷ್ಟಕ್ಕೆ ಮುಗಿಯದೆ ಪುನಃ ಇಬ್ಬರು ಇನ್ನಿಬ್ಬರೊಂದಿಗೆ ಜೈ ಭೀಮಾ ನಗರಕ್ಕೆ  ಆಗಮಿಸಿ ಸುನಿಲ್ ಮೇಲೆ ಜಾಕುವಿನಿಂದ ಹಲ್ಲೆ ನಡೆಸಿದ್ದು,  ಈ ಸಂದರ್ಭದಲ್ಲಿ ಬಿಡಿಸಲು ಬಂದ ಶ್ರೀಕಂಠ ಮತ್ತು ರಹೀಂ ಇಬ್ಬರ ಮೇಲೂ ಸಹ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತೀವ್ರ ಗಾಯಗೊಂಡಿದ್ದ ಸುನಿಲ್ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
     ಹಲ್ಲೆಗೊಳಗಾಗಿರುವ ಶ್ರೀಕಂಠ ಈ ಸಂಬಂಧ ಪೊಲೀಸರಿಗೆ ನೀಡಿರುವ ದೂರಿನಲ್ಲಿ ೪ ಜನರ ಪೈಕಿ ಓರ್ವನನ್ನು ನಗರದ ಮೋಮಿನ್ ಮೊಹಲ್ಲಾ ನಿವಾಸಿ ಸಾಬೀತ್ ಎಂದು ತಿಳಿಸಿದ್ದು, ಉಳಿದ ಮೂವರ ಬಗ್ಗೆ ಯಾವುದೇ ಮಾಹಿತಿ ಇಲ್ಲ.


ಭದ್ರಾವತಿ ಜೈಭೀಮಾ ನಗರದಲ್ಲಿ ನಡೆದಿರುವ ಘಟನೆಯಲ್ಲಿ ಹಲ್ಲೆಗೊಳಗಾಗಿರುವ ಶ್ರೀಕಂಠ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.

      ಸ್ಥಳಕ್ಕೆ ಭೇಟಿ ನೀಡಿದ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ:
   ಘಟನಾ ಸ್ಥಳಕ್ಕೆ ಬುಧವಾರ ಬೆಳಿಗ್ಗೆ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ರವಿ, ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ ಲಕ್ಷ್ಮಿಪ್ರಸಾದ್ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ. ಕೊರೋನಾ ಲಾಕ್‌ಡೌನ್ ನಡುವೆಯೂ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
       ಗಾಂಜಾ, ಮಟ್ಕಾ, ಇಸ್ಪೀಟ್ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ಹೆಚ್ಚಳ :
    ಘಟನೆ ಕುರಿತು ನಗರದ ಅಂಜುಮಾನ್ ಇಸ್ಲಾವುಲ್ ಮುಸ್ಲಿಮೀನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಎಂ ಖಾದರ್ ಹಳೇನಗರ ಪೊಲೀಸರ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕೊಲೆ ಪ್ರಕರಣ ಕಾನೂನು ಬಾಹಿರ ಚಟುವಟಿಕೆಗಳ ಹಿನ್ನಲೆಯಲ್ಲಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
    ಈ ಕುರಿತು ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕರಿಗೆ, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದ್ವನಿ ಮುದ್ರಣ ರವಾನಿಸಿದ್ದು, ಹಳೇನಗರ ಭಾಗದ ಹಲವೆಡೆ ಗಾಂಜಾ, ಮಟ್ಕಾ, ಇಸ್ಪೀಟ್ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ. ಈ ಸಂಬಂಧ ಸುಮಾರು ೬ ತಿಂಗಳ ಹಿಂದೆಯೇ ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಲಾಗಿತ್ತು. ಆದರೆ ಹಳೇನಗರ ಠಾಣೆ ಪೊಲೀಸರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರ ಈ ನಿರ್ಲಕ್ಷ್ಯತನವೇ ಈ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

Tuesday, May 25, 2021

ಛಾಯಾಗ್ರಾಹಕ ವಡಿವೇಲು ನಿಧನ

ವಡಿವೇಲು
ಭದ್ರಾವತಿ, ಮೇ. ೨೫: ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ಛಾಯಾಗ್ರಾಹಕ ವಡಿವೇಲು(೩೭) ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು.
    ತಂದೆ, ಇಬ್ಬರು ಸಹೋದರಿಯರನ್ನು ಹೊಂದಿದ್ದರು. ಹಲವಾರು ವರ್ಷಗಳಿಂದ ನಗರದಲ್ಲಿ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ತಾಲೂಕು ಛಾಯಾಗ್ರಾಹಕರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ತಾಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ.

ವಿವಿಧೆ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪೋಸ್ಟರ್ ಚಳುವಳಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಲಾಕ್‌ಡೌನ್ ಹಿನ್ನಲೆಯಲ್ಲಿ ವಿಶೇಷವಾಗಿ ರಾಜ್ಯ ವ್ಯಾಪಿ ಆನ್ಲೈನ್ ಮೂಲಕ ಪೋಸ್ಟರ್ ಚಳುವಳಿ ನಡೆಸಿ ಗಮನ ಸೆಳೆದರು.
    ಭದ್ರಾವತಿ, ಮೇ. ೨೫: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಲಾಕ್‌ಡೌನ್ ಹಿನ್ನಲೆಯಲ್ಲಿ ವಿಶೇಷವಾಗಿ ರಾಜ್ಯ ವ್ಯಾಪಿ ಆನ್ಲೈನ್ ಮೂಲಕ ಪೋಸ್ಟರ್ ಚಳುವಳಿ ನಡೆಸಿ ಗಮನ ಸೆಳೆದರು.
   ಎಐಯುಟಿಯುಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಮನೆಯಿಂದ, ಕೆಲಸದ ಸ್ಥಳದಿಂದಲೇ ಪೋಸ್ಟರ್ ಚಳುವಳಿ ನಡೆಸಿದ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ವಿವಿಧ ಕೊರೋನಾ ವಾರಿಯರ್ಸ್‌ಗಳಿಗೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೂ ಸಹ ಕೋವಿಡ್ ವಿಶೇಷ ಪ್ರೋತ್ಸಾಹ ಧನ ಮಾಸಿಕ ರು. ೫೦೦೦ ನೀಡುವಂತೆ ಆಗ್ರಹಿಸಿದರು.
    ಸೋಂಕಿಗೆ ಒಳಗಾದ ಕಾರ್ಯಕರ್ತೆಯರಿಗೆ ಸೋಂಕಿನ ತೀವ್ರತೆಗೆ ಅನುಗುಣವಾಗಿ (ಕನಿಷ್ಠ ೨೫ ಸಾವಿರ ರು.) ಪರಿಹಾರ ನೀಡುವುದು. ಅಗತ್ಯವಿರುವಷ್ಟು ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ನೀಡುವುದು. ೩ ತಿಂಗಳು ಬಾಕಿ ಇರುವ ೪,೦೦೦ ರು. ಮಾಸಿಕ ಗೌರವ ಧನ ತಕ್ಷಣ ಬಿಡುಗಡೆಗೊಳಿಸುವುದು ಹಾಗು ಮೊದಲ ಅಲೆಯಲ್ಲಿ ನಿಧನ ಹೊಂದಿರುವ ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಕೋವಿಡ್ ವಿಮೆ ಹಣ ತಕ್ಷಣ ನೀಡುವಂತೆ ಒತ್ತಾಯಿಸಿದರು.
   ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಚಳುವಳಿ ನಡೆಸಲಾಯಿತು. ಶಾಯಿನಾ ಬಾನು, ಚಂದ್ರಕಲಾ, ಆಶಾ, ವಸಂತ ಮತ್ತು ಸುಜಾತ ನಗರದಲ್ಲಿ ಚಳುವಳಿ ನಡೆಸುವ ಮೂಲಕ ಗಮನ ಸೆಳೆದರು.

೧೩೫ ಸೋಂಕು, ಶತಕ ದಾಟಿದ ಸಾವಿನ ಸಂಖ್ಯೆ

ಭದ್ರಾವತಿ, ಮೇ. ೨೫: ಮೊದಲ ಹಂತದ ಲಾಕ್‌ಡೌನ್ ಮುಗಿದು ಎರಡನೇ ಹಂತದ ಲಾಕ್‌ಡೌನ್ ಜಾಲ್ತಿಯಲ್ಲಿದ್ದು, ಆದರೂ ಸಹ ತಾಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಮಂಗಳವಾರ ೧೩೫ ಸೋಂಕು ದೃಢಪಟ್ಟಿದೆ.
    ಒಟ್ಟು ೩೫೨ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೩೫ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು ೮೮ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಂದು ಸಾವು ಸಂಭವಿಸಿದೆ.
     ತಾಲೂಕಿನಲ್ಲಿ ಒಟ್ಟು ಸಾವಿನ ಸಂಖ್ಯೆ ಶತಕ ದಾಟಿದ್ದು, ೧೦೧ ಮಂದಿ ಮೃತಪಟ್ಟಿದ್ದಾರೆ. ಒಟ್ಟು ೩೨೭ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕಿನ ನಗರ ವ್ಯಾಪ್ತಿಯಲ್ಲಿ ಒಟ್ಟು ೬೬ ಕಂಟೈನ್‌ಮೆಂಟ್ ಜೋನ್‌ಗಳಿವೆ.

ನಿರ್ಮಲಾ ನಿಧನ

ನಿರ್ಮಲಾ
   ಭದ್ರಾವತಿ, ಮೇ. ೨೫: ನಗರದ ಹೊಸಮನೆ ನಿವಾಸಿ, ಸುಗಮ ಸಂಗೀತ ಗಾಯಕ ಹಾಗು ಚಿತ್ರ ಕಲಾವಿದ ವಾಣಿ ಆರ್ಟ್ಸ್‌ನ ಸುಬ್ರಹ್ಮಣ್ಯ ಕೆ. ಅಯ್ಯರ್ ಅವರ ಪತ್ನಿ ನಿರ್ಮಲಾ(೪೯) ಮಂಗಳವಾರ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರಿಯನ್ನು ಹೊಂದಿದ್ದರು. ನಿರ್ಮಲಾ ಅವರು ಸುಬ್ರಹ್ಮಣ್ಯ ಅವರ ಕಲಾ ಕ್ಷೇತ್ರದ ಸಾಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಜೊತೆಗೆ ಬೆನ್ನೆಲುಬಾಗಿದ್ದರು. ಇವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.


ರಂಗಪ್ಪ ನಿಧನ

ರಂಗಪ್ಪ  
   ಭದ್ರಾವತಿ, ಮೇ. ೨೫: ತಾಲೂಕಿನ ಬಾರಂದೂರು ಗ್ರಾಮದ ನಿವಾಸಿ ರಂಗಪ್ಪ(೭೦) ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದರು.
  ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಮಾದಿಗ ಸಮಾಜ, ಆದಿ ಜಾಂಬವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ ಹಿರಿಯ ಮಾರ್ಗದರ್ಶಕರಾಗಿ ಬಾರಂದೂರು ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು.
  ಇವರ ನಿಧನಕ್ಕೆ ಬಾರಂದೂರು ಗ್ರಾಮಸ್ಥರು, ಕರ್ನಾಟಕ ರಾಜ್ಯ ಮಾದಿಗ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ವಾಡ್.೨೯ ಬಡಕುಟುಂಬಗಳಿಗೆ ದಿನಸಿ ಸಾಮಗ್ರಿ ವಿತರಣೆ


ಭದ್ರಾವತಿ, ಮೇ. ೨೫: ನಗರಸಭೆ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ ಒಳಗೊಂಡಿರುವ ವಾರ್ಡ್ ನಂ.೨೯ರ ವ್ಯಾಪ್ತಿಯ ಬಡ ಕುಟುಂಬಗಳಿಗೆ ವಾರ್ಡ್ ನಿವಾಸಿ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಜಿ ರಾಧಮ್ಮ ಪ್ರಭಾಕರ್ ಕುಟುಂಬದವರು ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
    ಭದ್ರಾವತಿ, ಮೇ. ೨೫: ನಗರಸಭೆ ಜನ್ನಾಪುರ ಕಿತ್ತೂರು ರಾಣಿ ಚನ್ನಮ್ಮ ಬಡಾವಣೆ ಒಳಗೊಂಡಿರುವ ವಾರ್ಡ್ ನಂ.೨೯ರ ವ್ಯಾಪ್ತಿಯ ಬಡ ಕುಟುಂಬಗಳಿಗೆ ವಾರ್ಡ್ ನಿವಾಸಿ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಎ.ಜಿ ರಾಧಮ್ಮ ಪ್ರಭಾಕರ್ ಕುಟುಂಬದವರು ದಿನಸಿ ಸಾಮಗ್ರಿಗಳನ್ನು ವಿತರಿಸಿದರು.
    ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ಲಾಕ್‌ಡೌನ್ ಜಾರಿಗೊಳಿಸಿರುವ ಪರಿಣಾಮ ವಾರ್ಡ್‌ನಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಇದನ್ನು ಮನಗಂಡು ರಾಧಮ್ಮ ಕುಟುಂಬದವರು ಸುಮಾರು ೭೦ ಕುಟುಂಬಗಳಿಗೆ ವೈಯಕ್ತಿಕವಾಗಿ ದಿನಸಿಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರದಿದ್ದಾರೆ. ಕಳೆದ ಬಾರಿ ಸಹ ಲಾಕ್‌ಡೌನ್ ಸಂದರ್ಭದಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿತ್ತು.

ಮೆಸ್ಕಾಂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ

ಭದ್ರಾವತಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮಂಗಳವಾರ ಮೆಸ್ಕಾಂ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.
   ಭದ್ರಾವತಿ, ಮೇ. ೨೫: ಆರೋಗ್ಯ ಇಲಾಖೆ ವತಿಯಿಂದ ಆದ್ಯತೆ ಆಧಾರದ ಮೇಲೆ ಮೆಸ್ಕಾಂ ಸಿಬ್ಬಂದಿಗಳಿಗೆ ಮಂಗಳವಾರ ಕೊರೋನಾ ಲಸಿಕೆ ನೀಡಲಾಯಿತು.
    ಜೆಪಿಎಸ್ ಕಾಲೋನಿಯಲ್ಲಿರುವ ಮೆಸ್ಕಾಂ ಘಟಕ-೧ರ ಕಛೇರಿಯಲ್ಲಿ ೧೮ ರಿಂದ ೪೫ ವರ್ಷದೊಳಗಿನ ಸುಮಾರು ೧೦೦ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.
     ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಎನ್. ಕೃಷ್ಣಪ್ಪ, ಮೆಸ್ಕಾಂ ಶಿವಮೊಗ್ಗ ವೃತ್ತದ ಅಧೀಕ್ಷಕ ಇಂಜಿನಿಯರ್ ಶಿವಪ್ರಸಾದ್, ಕಾರ್ಯನಿರ್ವಾಹಕ ಇಂಜಿನಿಯರ್ ಕಿಶೋರ್, ನಗರದ ವಿಭಾಗೀಯ ಕಛೇರಿ ಸಹಾಯಕ ಲೆಕ್ಕಾಧಿಕಾರಿ ಅಶ್ವಿನಿಕುಮಾರ್, ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ಆನಂದ, ಹೇಮಣ್ಣ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Monday, May 24, 2021

ಕೊರೋನಾದಿಂದ ಸ್ಮೈಲ್ ಪ್ಲೀಸ್ ಎಂದವರ ಬದುಕು ಅತಂತ್ರ

     
ಭದ್ರಾವತಿ ತಾಲೂಕು ಛಾಯಾಗ್ರಾಹಕರ ತಂಡ.
  * ಅನಂತಕುಮಾರ್
      ಭದ್ರಾವತಿ, ಮೇ. ೨೪: ಸಮಾಜದಲ್ಲಿ ಛಾಯಾಗ್ರಾಹಕ ವೃತ್ತಿಗೂ ಒಂದು ವಿಶಿಷ್ಟ ಪರಂಪರೆ ಇದೆ. ಛಾಯಾಗ್ರಾಹಕರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ರಾಜ್ಯಾದ್ಯಂತ ಲಕ್ಷಾಂತರ ಮಂದಿ ಈ ವೃತ್ತಿಯನ್ನು ನಂಬಿ ಬದುಕುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಇವರ ಬದುಕು ತೀರ ಸಂಕಷ್ಟಕ್ಕೆ ತಳ್ಳಲ್ಪಟ್ಟಿದೆ. ಈ ನಡುವೆ ಸರ್ಕಾರ ಸಹ ನಿರ್ಲಕ್ಷ್ಯತನ ವಹಿಸಿರುವುದು ಛಾಯಾಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
      ರಾಜ್ಯಾದ್ಯಂತ ಸುಮಾರು ೨ ಲಕ್ಷಕ್ಕೂ ಅಧಿಕ ಮಂದಿ ಛಾಯಾಗ್ರಾಹಕ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿದ್ದು, ತಾಲೂಕಿನಾದ್ಯಂತ ಛಾಯಾಗ್ರಾಹಕ ವೃತ್ತಿಯಲ್ಲಿ ಪೋಟೋಗ್ರಾಫರ್ ಹಾಗು ವಿಡಿಯೋಗ್ರಾಫರ್ ಮತ್ತು ಸ್ಟುಡಿಯೋಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಒಳಗೊಂಡಂತೆ ಸುಮಾರು ೨೭೦ ಮಂದಿ ಬದುಕು ಕಟ್ಟಿಕೊಂಡಿದ್ದಾರೆ.  ಇತರೆ ವೃತ್ತಿಗಳಿಗೆ ಹೋಲಿಕೆ ಮಾಡಿಕೊಂಡಲ್ಲಿ ಛಾಯಾಗ್ರಾಹಕ ವೃತ್ತಿಯೇ ವಿಭಿನ್ನವಾಗಿದ್ದು, ಈ ವೃತ್ತಿಯಲ್ಲಿ ನಿರೀಕ್ಷೆಗೆ ತಕ್ಕಂತೆ ಕೆಲಸವೂ ಇಲ್ಲ, ಆದಾಯವೂ ಇಲ್ಲ. ವರ್ಷದಲ್ಲಿ ೫-೬ ತಿಂಗಳು ಮಾತ್ರ ಆದಾಯ ಎದುರು ನೋಡುವಂತಾಗಿದೆ.  ಮದುವೆ, ಆರಕ್ಷತೆ, ನಾಮಕರಣ ಸೇರಿದಂತೆ ಶುಭಾ ಸಮಾರಂಭಗಳು, ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರರ ಸಭೆ, ಸಮಾರಂಭಗಳನ್ನು ನಂಬಿಕೊಂಡು ಬದುಕುತ್ತಿರುವ ಛಾಯಾಗ್ರಾಹಕರು ಇದೀಗ ತೀರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
      ಹಲವು ಸವಾಲು:
    ತಂತ್ರಜ್ಞಾನ ಬೆಳವಣಿಗೆಯಾದಂತೆ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ತೀವ್ರ ಪೈಪೋಟಿ ನಡುವೆ ಹಲವು ಸವಾಲುಗಳು ಎದುರಾಗುತ್ತಿದ್ದು, ಛಾಯಾಗ್ರಾಹಕರ ವೃತ್ತಿಯಲ್ಲೂ ಸಹ ಹಲವು ಸವಾಲುಗಳು ಎದುರಾಗಿವೆ. ಬಹುಮುಖ್ಯವಾಗಿ ಸ್ಮಾರ್ಟ್ ಮೊಬೈಲ್ ಪೋನ್‌ಗಳು ಮಾರುಕಟ್ಟೆಗೆ ಬಿಡುಗಡೆಯಾದ ನಂತರ ಛಾಯಾಗ್ರಾಹಕರ ಅಗತ್ಯ ಬಹುತೇಕ ಕಡಿಮೆಯಾಗಿದೆ. ಸರ್ಕಾರಿ ಹಾಗು ಖಾಸಗಿ ಕಛೇರಿಗಳಲ್ಲಿ ಡಿಜಿಟಲೀಕರಣದ ಪರಿಣಾಮದಿಂದ ಛಾಯಾಗ್ರಾಹಕರನ್ನು ಬಹುತೇಕ ದೂರವೇ ಇಡಲಾಗಿದೆ. ಇವೆಲ್ಲ ಸವಾಲು ಹಾಗು ಪೈಪೋಟಿಗಳ ನಡುವೆ ಛಾಯಾಗ್ರಾಹಕರು ತಮ್ಮ ಅಸ್ತಿತ್ವ ಉಳಿಸಿಕೊಂಡು ಮುಂದೆ ಸಾಗುತ್ತಿದ್ದಾರೆ.


ಎಚ್. ಶ್ರೀನಿವಾಸ್


    ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಸೌಲಭ್ಯಗಳು ನಮಗೆ ಲಭಿಸಿಲ್ಲ. ಜೊತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಕಳೆದ ಬಾರಿ ಹಾಗು ಈ ಬಾರಿ ಘೋಷಿಸಿರುವ ಪರಿಹಾರ ಸಹ ಛಾಯಾಗ್ರಾಹಕರಿಗೆ ಲಭಿಸಿಲ್ಲ. ಪ್ರಸ್ತುತ ಛಾಯಾಗ್ರಾಹಕರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಇವರ ನೆರವಿಗೆ ಮುಂದಾಗಬೇಕು.
                                                                      
-ಎಚ್. ಶ್ರೀನಿವಾಸ್, ಅಧ್ಯಕ್ಷರು, ತಾಲೂಕು ಛಾಯಾಗ್ರಾಹಕರ ಸಂಘ, ಭದ್ರಾವತಿ.



        ಸ್ಮೈಲ್ ಪ್ಲೀಸ್ ಎಂದವರ ನಗು ಕಿತ್ತುಕೊಂಡ ಕೊರೋನಾ:
     ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಛಾಯಾಗ್ರಾಹಕರ ಬದುಕು ಅತಂತ್ರವಾಗಿದ್ದು,  ಅದರಲ್ಲೂ ಲಾಕ್‌ಡೌನ್ ಸಂದರ್ಭದಲ್ಲಿ ಅವರ ಸ್ಥಿತಿ ಹೇಳತಿಹದು. ತಾಲೂಕಿನಲ್ಲಿರುವ ಸುಮಾರು ೨೭೦ ಛಾಯಾಗ್ರಾಹಕರ ಪೈಕಿ ಸುಮಾರು ೬೦ ಮಂದಿ ಲಕ್ಷಾಂತರ ರು. ಸಾಲಸೋಲ ಮಾಡಿ ಸ್ವಂತ ಸ್ಟುಡಿಯೋಗಳನ್ನು ನಿರ್ಮಿಸಿಕೊಂಡಿದ್ದಾರೆ. ಸಾಲದ ಬಾಕಿ, ಸ್ಟುಡಿಯೋ ಬಾಡಿಗೆ ಕಟ್ಟಲು ಸಾಧ್ಯವಾಗದೆ ಪರಿತಪ್ಪಿಸುತ್ತಿದ್ದಾರೆ. ಉಳಿದಂತೆ ಛಾಯಾಗ್ರಾಹಕ ವೃತ್ತಿಯನ್ನೇ ನಂಬಿ ಕುಟುಂಬ ನಿರ್ವಹಣೆಯಲ್ಲಿ ತೊಡಗಿರುವವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಕೊರೋನಾ ಮಹಾಮಾರಿ ಸ್ಮೈಲ್ ಪ್ಲೀಸ್ ಎನ್ನುವವರ ನಗು ಕಿತ್ತುಕೊಂಡಿದೆ.
        ಸರ್ಕಾರದ ಯಾವುದೇ ಸೌಲಭ್ಯಗಳಿಲ್ಲ:
     ಛಾಯಾಗ್ರಾಹಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ೨೦೧೦ರಿಂದಲೂ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಸರ್ಕಾರದಿಂದ ಇದುವರೆಗೂ ಯಾವುದೇ ಸೌಲಭ್ಯಗಳು ಲಭಿಸಿಲ್ಲ.  ೨೦೧೩ರಲ್ಲಿ ಛಾಯಾಗ್ರಾಹಕರನ್ನು ಕಾರ್ಮಿಕ ಇಲಾಖೆಯ ಅಸಂಘಟಿತ ಕಾರ್ಮಿಕ ವಲಯದ ೪೨ನೇ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಆದರೂ ಸಹ ಯಾವುದೇ ಸೌಲಭ್ಯಗಳು ಛಾಯಾಗ್ರಾಹಕರಿಗೆ ಲಭಿಸುತ್ತಿಲ್ಲ. ಅಲ್ಲದೆ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಘೋಷಿಸಿರುವ ಪರಿಹಾರ ಧನ ಸಹ ಇವರಿಗೆ ಲಭಿಸಿಲ್ಲ. ಉಳಿದಂತೆ ಸ್ಥಳೀಯ ಸಂಸ್ಥೆಗಳಿಂದಲೂ ಯಾವುದೇ ಸೌಲಭ್ಯಗಳಿಲ್ಲ. ಇದರಿಂದಾಗಿ ಕೇವಲ ಹೆಸರಿಗೆ ಮಾತ್ರ ಅಸಂಘಟಿತ ಕಾರ್ಮಿಕರಾಗಿ ಉಳಿದುಕೊಂಡಿದ್ದಾರೆ.


Sunday, May 23, 2021

೨ ದಿನಗಳ ಸಂಪೂರ್ಣ ಲಾಕ್‌ಡೌನ್ ಬಹುತೇಕ ಯಶಸ್ವಿ

ಭದ್ರಾವತಿಯಲ್ಲಿ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಲಾಗಿದ್ದ ೨ ದಿನಗಳ ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಕಂಡು ಬಂದ ದೃಶ್ಯ.
    ಭದ್ರಾವತಿ, ಮೇ. ೨೩: ತಾಲೂಕಿನಲ್ಲಿ ಶನಿವಾರ ಮತ್ತು ಭಾನುವಾರ ಜಾರಿಗೊಳಿಸಲಾಗಿದ್ದ ೨ ದಿನಗಳ ಸಂಪೂರ್ಣ ಲಾಕ್‌ಡೌನ್ ಬಹುತೇಕ ಯಶಸ್ವಿಯಾಗಿದ್ದು, ಆದರೂ ಸೋಂಕು ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈಗಾಗಲೇ ಬಹುತೇಕ ಕಡೆ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನಲೆಯಲ್ಲಿ ಆತಂಕ ಎದುರಾಗಿದೆ.
     ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗು ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ೨ ದಿನಗಳ ಸಂಪೂರ್ಣ ಲಾಕ್‌ಡೌನ್‌ಗೆ ಹೆಚ್ಚಿನ ಶ್ರಮವಹಿಸಿರುವುದು ಕಂಡು ಬಂದಿದ್ದು, ಜನ ಸಂಚಾರ ಹೆಚ್ಚಾಗಿರುವ ಪ್ರದೇಶಗಳಲ್ಲಿ ಒಳಭಾಗದ ರಸ್ತೆಗಳನ್ನು ಸಹ ಬ್ಯಾರಿಗೇಡ್‌ಗಳಿಂದ ಬಂದ್ ಮಾಡಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ತೀವ್ರಗೊಳಿಸಿ ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕ್ರಮ ಕೈಗೊಂಡರು.
    ಹಾಲು ಹಾಗು ಔಷಧ ಅಂಗಡಿಗಳು ಹೊರತುಪಡಿಸಿ ಉಳಿದ ಅಂಗಡಿ, ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು.  ಜನರು ಸಹ ಲಾಕ್‌ಡೌನ್‌ಗೆ ಪೂರಕವಾಗಿ ಸ್ಪಂದಿಸಿದರು. ಸಂಪೂರ್ಣ ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಶನಿವಾರ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.
    ಸೋಮವಾರ ಬೆಳಿಗ್ಗೆ ಸಂಪೂರ್ಣ ಲಾಕ್‌ಡೌನ್ ಮುಕ್ತಾಯಗೊಳ್ಳಲಿದೆ. ಆದರೆ ಎಂದಿನಂತೆ ಲಾಕ್‌ಡೌನ್ ಮುಂದುವರೆಯಲಿದೆ. ಸರ್ಕಾರ ಪುನಃ ಲಾಕ್‌ಡೌನ್ ಮುಂದುವರೆಸಿರುವ ಕಾರಣ ಜನರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.



ನಗರಸಭೆ ೧೬ನೇ ವಾರ್ಡ್ ವ್ಯಾಪ್ತಿಯಲ್ಲಿ ಸ್ಯಾನಿಟೈಜರ್ ಸಿಂಪಡಣೆ


ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಭದ್ರಾವತಿಯಲ್ಲಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
    ಭದ್ರಾವತಿ, ಮೇ. ೨೩: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಗಾಂಧಿನಗರ ವ್ಯಾಪ್ತಿಯನ್ನು ಒಳಗೊಂಡಿರುವ ನಗರಸಭೆ ವಾರ್ಡ್ ನಂ.೧೬ರಲ್ಲಿ ಭಾನುವಾರ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ನಗರ ಪ್ರದೇಶದ ವ್ಯಾಪ್ತಿಯಲ್ಲಿರುವ ಪ್ರಮುಖ ವಾರ್ಡ್‌ಗಳ ಪೈಕಿ ೧೬ನೇ ವಾರ್ಡ್ ಸಹ ಒಂದಾಗಿದ್ದು, ನಗರಸಭೆ ಸಹಕಾರದೊಂದಿಗೆ ಅಗ್ನಿಶಾಮಕ ಇಲಾಖೆವತಿಯಿಂದ ವಾರ್ಡ್‌ನ ಪ್ರತಿಯೊಂದು ರಸ್ತೆಗೂ ಸ್ಯಾನಿಟೈಜರ್ ಸಿಂಪಡಿಸಲಾಯಿತು.
     ವಾರ್ಡ್ ನೂತನ ಸದಸ್ಯ, ಹಿರಿಯ ಬಿಜೆಪಿ ಮುಖಂಡ ವಿ. ಕದಿರೇಶ್, ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್ ಹಾಗು ಸಿಬ್ಬಂದಿಗಳು ಮತ್ತು  ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.

ಹಿರಿಯ ಜೀವಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಮಾಜಿ ಶಾಸಕರ ಪುತ್ರ

ಭದ್ರಾವತಿಯಲ್ಲಿ ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
    ಭದ್ರಾವತಿ, ಮೇ. ೨೩: ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
     ಸಾಮಾಜಿಕ ಜಾಲತಾಣವೊಂದರ ನಿರ್ವಾಹಕರಿಂದ ಹಿರಿಯ ಜೀವಿಗಳು ಸಂಕಷ್ಟದಲ್ಲಿರುವ ಮಾಹಿತಿ ಲಭಿಸಿದ ತಕ್ಷಣ ನಗರಸಭೆ ಮಾಜಿ ಸದಸ್ಯರಾದ ಎಂ.ಎ ಅಜಿತ್ ತಕ್ಷಣ ನೆರವಿಗೆ ಧಾವಿಸಿದ್ದಾರೆ.
    ಕಳೆದ ವರ್ಷ ಲಾಕ್‌ಡೌನ್ ಸಂದರ್ಭದಲ್ಲಿ ಸ್ವತಃ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರೇ ಕ್ಷೇತ್ರದಾದ್ಯಂತ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದರು. ಇದೀಗ ಅವರಿಲ್ಲದ ಸಂದರ್ಭದಲ್ಲಿ ಪುತ್ರ ಎಂ.ಎ ಅಜಿತ್ ತಮ್ಮ ಕೈಲಾದಷ್ಟು ಮಟ್ಟಿಗೆ ನೆರವಿಗೆ ಮುಂದಾಗಿದ್ದಾರೆ.

ನಾಗರತ್ನ ನಿಧನ

ನಾಗರತ್ನ
    ಭದ್ರಾವತಿ, ಮೇ. ೨೩:  ನಗರಸಭೆ ವ್ಯಾಪ್ತಿ ಜನ್ನಾಪುರ ವೇಲೂರ್ ಶೆಡ್ ೭ನೇ ತಿರುವಿನ ನಿವಾಸಿ ಎಸ್.ಎ ರಂಗನಾಥ್‌ರವರ ಪತ್ನಿ ನಾಗರತ್ನ (೬೦) ನಿಧನ ಹೊಂದಿದರು.
    ಇತ್ತೀಚೆಗೆ ನಾಗರತ್ನ ಅವರ ತಾಯಿ ತುಮಕೂರಿನಲ್ಲಿ ನಿಧನ ಹೊಂದಿದ್ದು, ಇದೆ ಕೊರಗಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಅರ್ಯವೈಶ್ಯ ಮಂಡಳಿ ಸಂತಾಪ ಸೂಚಿಸಿದೆ.

ಬಜರಂಗದಳ ಕಾರ್ಯಕರ್ತರ ಸೇವೆಗೆ ಭಾವಸಾರ ವಿಜನ್ ಇಂಡಿಯಾ ಕೃತಜ್ಞತೆ

ಕಾರ್ಯಕರ್ತರಿಗೆ ಸನ್ಮಾನಿಸಿ ಗೌರವ, ಸೇವಾ ಕಾರ್ಯಕ್ಕೆ ಆರ್ಥಿಕ ನೆರವು

ಭದ್ರಾವತಿಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರ ಕಾರ್ಯದಲ್ಲಿ ಪಾಲ್ಗೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಬಜರಂಗದಳ ಕಾರ್ಯಕರ್ತರನ್ನು ಭಾವಸಾರ ವಿಜನ್ ಇಂಡಿಯಾ ವತಿಯಿಂದ ಭಾನುವಾರ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಮೇ. ೨೩: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮತ್ತೊಂದೆಡೆ ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಕೊರೋನಾ ಸೋಂಕಿತರ ಮೃತದೇಹಗಳ ಅಂತ್ಯ ಸಂಸ್ಕಾರ ಸಹ ಬಹುದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಕೆಲವೆಡೆ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಹ ಮುಂದೆ ಬರುತ್ತಿಲ್ಲ. ಉಳಿದಂತೆ ಎಲ್ಲದಕ್ಕೂ ಹಣ ನೀಡಬೇಕಾದ ಇಂದಿನ ಸಂದರ್ಭದಲ್ಲಿ ಕಡು ಬಡಕುಟುಂಬಗಳು ಅಂತ್ಯಸಂಸ್ಕಾರ ನಡೆಸಲು ಅಶಕ್ತರಾಗಿದ್ದಾರೆ. ಇಂತಹ ಹಲವು ಸಮಸ್ಯೆಗಳ ನಡುವೆ ಯಾವುದೇ ಸ್ವಾರ್ಥವಿಲ್ಲದೆ ೧೦ ಜನರ ಯುವಕರ ತಂಡ ಸೋಂಕಿತ ಮೃತದೇಹಗಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಮೂಲಕ ಮಾನವೀಯತೆ ಮೆರೆದಿದೆ.
    ಬಜರಂಗದಳ ಪ್ರಮುಖರಾದ ವಡಿವೇಲು, ಸುನಿಲ್‌ಕುಮಾರ್, ಕೃಷ್ಣ, ಶಿವಶಂಕರ್, ಅರಳಿಹಳ್ಳಿ ದೇವರಾಜ್, ಕಿರಣ್, ರಂಗನಾಥ್, ಅಜಿತ್, ಶ್ರೀಕಾಂತ್, ಸವಾಯಿ ಸಿಂಗ್, ಮಣಿಕಂಠ ಮತ್ತು ರಮೇಶ್ ಸೇರಿದಂತೆ ಸುಮಾರು ೧೦ ಮಂದಿಯನ್ನು ಒಳಗೊಂಡಿರುವ ತಂಡ ಈ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ತಂಡದ ಈ ಕಾರ್ಯವನ್ನು ನಗರದ ಭಾವಸಾರ ವಿಜನ್ ಇಂಡಿಯಾ ಅಭಿನಂದಿಸುವ ಮೂಲಕ ಕೃತಜ್ಞತೆ ಸಹ ಸಲ್ಲಿಸಿದೆ.
    ಭಾವಸಾರ ವಿಜನ್ ಇಂಡಿಯಾ ಅಧ್ಯಕ್ಷ ಹಾಗು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ  ದುಗ್ಗೇಶ್ ತೇಲ್ಕರ್ ನೇತೃತ್ವದಲ್ಲಿ ಭಾನುವಾರ ಸೇವಾ ಕಾರ್ಯದಲ್ಲಿ ತೊಡಗಿರುವ ಬಜರಂಗದಳದ ೮ ಜನ ಕಾರ್ಯಕರ್ತರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಜೊತೆಗೆ ಸೇವಾ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಸದಸ್ಯರಿಂದ ಸಂಗ್ರಹಿಸಲಾದ ಆರ್ಥಿಕ ನೆರವನ್ನು ಸಹ ತಂಡಕ್ಕೆ ನೀಡಲಾಯಿತು. ಅಲ್ಲದೆ ತಂಡಕ್ಕೆ ಪ್ರತಿದಿನ ಊಟದ ವ್ಯವಸ್ಥೆ ಸಹ ಕೈಗೊಳ್ಳಲಾಗಿದೆ. ಯೋಗೇಶ್‌ಕುಮಾರ್, ಲಕ್ಷ್ಮೀಕಾಂತ್ ಸೇರಿದಂತೆ ಭಾವಸಾರ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.  

Saturday, May 22, 2021

ಕೊರೋನಾ ಸಂಕಷ್ಟ : ಹಸಿದವರಿಗೆ ಅನ್ನ, ಸೋಂಕಿತರಿಗೆ ಔಷಧ

ಭದ್ರಾವತಿ ಕಾಗದನಗರದ ನಗರಸಭೆ ವಾರ್ಡ್ ನಂ.೨೧ ಮತ್ತು ೨೨ರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭಾ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಶನಿವಾರ ಉಚಿತ ಔಷಧ ಸಾಮಗ್ರಿಗಳನ್ನು ವಿತರಿಸಲಾಯಿತು.
    ಭದ್ರಾವತಿ, ಮೇ. ೨೨: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮತ್ತೊಂದೆಡೆ ಲಾಕ್‌ಡೌನ್ ವಿಸ್ತರಣೆಯಾಗಿದೆ. ಈ ನಡುವೆ ಸಾಕಷ್ಟು ಜನರು ತೀರ ಸಂಕಷ್ಟಕ್ಕೆ ಒಳಗಾಗಿದ್ದು, ದಿನದ ಊಟಕ್ಕೂ ಎದುರು ನೋಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ವಿವಿಧ ರೀತಿಯಲ್ಲಿ ನೆರವಿಗೆ ಮುಂದಾಗಿವೆ.
      ಉಚಿತ ಕೊರೋನಾ ಔಷಧ ಸಾಮಗ್ರಿ ವಿತರಣೆ:
   ಕಾಗದನಗರದ ನಗರಸಭೆ ವಾರ್ಡ್ ನಂ.೨೧ ಮತ್ತು ೨೨ರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭಾ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಶನಿವಾರ ಉಚಿತ ಔಷಧ ಸಾಮಗ್ರಿಗಳನ್ನು ವಿತರಿಸಲಾಯಿತು.
    ಒಟ್ಟು ಸುಮಾರು ೧ ಲಕ್ಷ ರು. ಮೌಲ್ಯದ ಔಷಧ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿತರ ಸಂಕಷ್ಟಕ್ಕೆ ಸ್ಪಂದಿಸಲಾಯಿತು. ಮಾಜಿ ನಗರಸಭಾ ಸದಸ್ಯ ವೆಂಕಟಯ್ಯ, ಆಶಾ ಕಾರ್ಯಕತೆಯರು ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
     ಬಂಜಾರ ಸಮುದಾಯದಿಂದ ಉಚಿತ ಔಷಧ ಸಾಮಗ್ರಿ ವಿತರಣೆ:
   ಬಂಜಾರ ಸಮುದಾಯದ ಬಹುತೇಕ ತಾಂಡಗಳು ನಗರ ಪ್ರದೇಶಗಳಿಂದ ಹೊರಭಾಗದಲ್ಲಿದ್ದು, ತಾಂಡಗಳಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಯಿತು.
     ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ್, ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ನಾಯ್ಕ್, ಪ್ರಮುಖರಾದ ಪ್ರವೀಣ್‌ಕುಮಾರ್, ನಾಗರಾಜನಾಯ್ಕ್, ಉಮಾಮಹೇಶ್ವರ, ಚಂದ್ರನಾಯ್ಕ್ ಸೇರಿದಂತೆ ಇನ್ನಿತರರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


ಬೆಂಗಳೂರಿನಲ್ಲಿ ಐಎಎಸ್ ಪರೀಕ್ಷೆ ತರಬೇತಿ ಪಡೆಯುತ್ತಿರುವ ತುಳಸಿ ಎಂಬುವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಸಿದವರಿಗೆ ಅನ್ನಸೇವೆ ಕೈಗೊಳ್ಳಬೇಕೆಂಬ ಹಂಬಲದೊಂದಿಗೆ ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಒಂದು ದಿನದ ಸೇವಾ ಕಾರ್ಯ ನೆರವೇರಿಸುವ ಮೂಲಕ ಗಮನ ಸೆಳೆದರು.
      ಹುಟ್ಟುಹಬ್ಬದ ಪ್ರಯುಕ್ತ ಅನ್ನಸೇವೆ :
  ಬೆಂಗಳೂರಿನಲ್ಲಿ ಐಎಎಸ್ ಪರೀಕ್ಷೆ ತರಬೇತಿ ಪಡೆಯುತ್ತಿರುವ ತುಳಸಿ ಎಂಬುವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಸಿದವರಿಗೆ ಅನ್ನಸೇವೆ ಕೈಗೊಳ್ಳಬೇಕೆಂಬ ಹಂಬಲದೊಂದಿಗೆ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಒಂದು ದಿನದ ಸೇವಾ ಕಾರ್ಯ ನೆರವೇರಿಸುವ ಮೂಲಕ ಗಮನ ಸೆಳೆದರು.
     ಒಕ್ಕೂಟದ ವತಿಯಿಂದ ೧೧ ದಿನಗಳಿಂದ ಹಸಿದವರಿಗೆ ಅನ್ನ ನೀಡುವ ಸೇವೆ ಕೈಗೊಳ್ಳಲಾಗುತ್ತಿದೆ. ಆರಂಭದಲ್ಲಿ ೧೦೦ ಜನರಿಗೆ ಅನ್ನ ಸೇವೆ ನೀಡಲಾಗುತ್ತಿತ್ತು. ನಂತರ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಇದೀಗ ೧೮೦ ಮಂದಿಗೆ ಸೇವೆ ಒದಗಿಸಲಾಗುತ್ತಿದೆ.
     ನಗರಸಭಾ ಸದಸ್ಯರಾದ ಕಾಂತರಾಜ್, ಮಾಜಿ ಸದಸ್ಯರಾದ ಆರ್. ವೇಣುಗೋಪಾಲ್, ಪ್ರಾನ್ಸಿಸ್, ಮುಖಂಡರಾದ  ಬ್ರದರ್, ಪ್ರೇಮ್, ಸೆಲ್ವರಾಜ್, ಎಂ.ಜಿ ರಾಮಚಂದ್ರನ್, ವಿಲ್ಸನ್‌ಬಾಬು, ದಾಸ್, ಎಸ್. ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಹಸಿದವರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜಯಕರ್ನಾಟಕ ಸಂಘಟನೆ ಸೇವಾ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ವ್ಯಕ್ತಪಡಿಸಿ ಒಂದು ದಿನದ ಸೇವೆಯಲ್ಲಿ ಪಾಲ್ಗೊಂಡಿದ್ದರು.
     ಜಯಕರ್ನಾಟಕ ಸಂಘಟನೆಯಿಂದ ಹಸಿದವರಿಗೆ ಅನ್ನ:
    ಕೊರೋನಾ ಸಂಕಷ್ಟದ ಸಮಯದಲ್ಲಿ ಹಸಿವಿನಿಂದ ಬಳಲುತ್ತಿರುವವರ ನೆರವಿಗೆ ಜಯಕರ್ನಾಟಕ ಸಂಘಟನೆ ಮುಂದಾಗಿದ್ದು, ಸಂಘಟನೆ ತಾಲೂಕು ಅಧ್ಯಕ್ಷ ಅರುಣ್ ನೇತೃತ್ವದಲ್ಲಿ ಕಳೆದ ೭ ದಿನಗಳಿಂದ ನಗರದ ವಿವಿದೆಡೆ ಸೇವಾ ಕಾರ್ಯವನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ.
    ಸಂಘಟನೆ ಸೇವಾ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ವ್ಯಕ್ತಪಡಿಸಿ ಒಂದು ದಿನದ ಸೇವೆಯಲ್ಲಿ ಪಾಲ್ಗೊಂಡಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ಸಂಘಟನೆ ಪ್ರಮುಖರಾದ ಬಿ.ಎಸ್ ಬಸವೇಶ್, ಚರಣ್, ಶರವಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.