Monday, May 3, 2021

ಕೊರೋನಾ ಸೋಂಕು ವ್ಯಾಪಕವಾಗಿ ಹರಡದಂತೆ ಎಚ್ಚರ ವಹಿಸಿ : ಸಂಸದ ಬಿ.ವೈ ರಾಘವೇಂದ್ರ

ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸೋಮವಾರ ಕೋವಿಡ್-೧೯ ಮುಂಜಾಗ್ರತೆ ವಹಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
    ಭದ್ರಾವತಿ, ಮೇ. ೩: ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡದಂತೆ ಹೆಚ್ಚಿನ ಜಾಗೃತಿ ವಹಿಸುವಂತೆ  ಸಂಸದ ಬಿ.ವೈ ರಾಘವೇಂದ್ರ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
    ಅವರು ಸೋಮವಾರ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಕೋವಿಡ್-೧೯ ಮುಂಜಾಗ್ರತೆ ವಹಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ಟ್ಯಾಂಕ್ ನಿರ್ಮಿಸಿರುವುದರಿಂದ ಸೂಕ್ತ ಸಮಯದಲ್ಲಿ ಆಕ್ಸಿಜನ್ ಒದಗಿಸಲು ಸಾಧ್ಯವಾಗಿದೆ. ವಿಐಎಸ್‌ಎಲ್ ಕಾರ್ಖಾನೆ ಒಳಭಾಗದಲ್ಲಿ ಖಾಸಗಿಯವರ ಸಹಭಾಗಿತ್ವದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿದ್ದು, ಈ ಆಕ್ಸಿಜನ್ ಸಮರ್ಪಕವಾಗಿ ಬಳಸುವ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.
       ಕೊರೋನಾ ಸೋಂಕಿತರಿಗೆ ಆಹಾರ ಒದಗಿಸಲು ಸರ್ಕಾರ ತಲಾ ರು. ೨೫೦ ವೆಚ್ಚ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕಿತರಿಗೆ ಗುಣಮಟ್ಟದ ಆಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಸೋಂಕಿತರು ಹೊರಗಡೆ ತಿರುಗಾಡದಂತೆ ನಿಗಾವಹಿಸಬೇಕು. ಅಗತ್ಯ ಕಂಡು ಬಂದಲ್ಲಿ ಸೋಂಕಿತರಿಗೆ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
      ತಾಲೂಕಿನಲ್ಲಿ ದಿನ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ವ್ಯಾಪಿಸದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು. ಶಿವಮೊಗ್ಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿರುವ ಹಿನ್ನಲೆಯಲ್ಲಿ ಎಲ್ಲಾ ಅಧಿಕಾರಿಗಳು ಒಟ್ಟುಗೂಡಿ ಒಂದು ತಂಡವಾಗಿ ಕಾರ್ಯ ನಿರ್ವಹಿಸುವ ಮೂಲಕ ಕೊರೋಣ ನಿಯಂತ್ರಣಕ್ಕೆ ಶ್ರಮಿಸಬೇಕೆಂದರು ಕರೆ ನೀಡಿದರು.
     ಪೊಲೀಸ್ ಇಲಾಖೆಯವರು ಮಾಸ್ಕ್ ಧರಿಸದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ದೂರು ದಾಖಲಿಸಿಕೊಳ್ಳಬೇಕು.  ಸರ್ಕಾರಿ ಇಲಾಖೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಸರ್ಕಾರಿ ಕಛೇರಿಗೆ ಬರುವವರ ಮೇಲೆ ನಿಗಾವಹಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಿ. ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ನೀಡದಿರುವಂತೆ ಸಲಹೆ ನೀಡಿದರು.
    ಇದಕ್ಕೂ ಮೊದಲು ಸಭೆಯಲ್ಲಿ ಮಾಹಿತಿ ನೀಡಿದ  ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ೧೯  ಹಾಸಿಗೆಗಳನ್ನು ಸಿದ್ದಪಡಿಸಲಾಗಿದೆ. ಕಳೆದ ೨ ದಿನಗಳ ಹಿಂದೆ  ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇನ್ನೂ ೨೦ ಹಾಸಿಗೆಗಳನ್ನು ಹೆಚ್ಚಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೋಂಕಿತರಿಗೆ ಬೆಳಿಗ್ಗೆ ಉಪಹಾರ ಹೋಟೆಲ್‌ನಿಂದ ತಂದು ಪೂರೈಸಲಾಗುತ್ತಿದ್ದು, ಮಧ್ಯಾಹ್ನ ಆಸ್ಪತ್ರೆಯಲ್ಲಿಯೇ ಊಟ ನೀಡಲಾಗುತ್ತಿದೆ ಎಂದರು.
     ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಮಟ್ಟದ ಅಧಿಕಾರಿಗಳಾದ ಟಿ.ಎನ್ ಸೋಮಶೇಖರಯ್ಯ, ಕೆ.ಜೆ ತಮ್ಮಣ್ಣಗೌಡ, ಶಶಿಧರ್, ಕಾಂತರಾಜ್, ಎನ್ ಕೃಷ್ಣಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment