Thursday, June 24, 2021

ಕೊರೋನಾ ಸೋಂಕು ನಿಯಂತ್ರಣಕ್ಕೆ ಎಲ್ಲೆಡೆ ಜಾಗೃತಿ ಅಗತ್ಯ : ಕೆ.ಎಸ್ ಈಶ್ವರಪ್ಪ

ಭದ್ರಾವತಿ ತರೀಕೆರೆ ರಸ್ತೆಯ ವಳ್ಳುವರ್ ಕಲ್ಯಾಣ ಮಂಟಪದಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಡವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಚಾಲನೆ ನೀಡಿದರು.
  ಭದ್ರಾವತಿ, ಜೂ. ೨೪: ಕೊರೋನಾ ಸೋಂಕು ನಿಯಂತ್ರಣದಲ್ಲಿ ಗ್ರಾಮೀಣ ಜನರ ಪಾತ್ರ ಹೆಚ್ಚಿನದ್ದಾಗಿದ್ದು, ಪ್ರಸ್ತುತ ಎಲ್ಲೆಡೆ ಜಾಗೃತಿ ಅತಿ ಅವಶ್ಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
  ಅವರು ಗುರುವಾರ ನಗರದ ತರೀಕೆರೆ ರಸ್ತೆಯ ವಳ್ಳುವರ್ ಕಲ್ಯಾಣ ಮಂಟಪದಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಡವರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಪ್ರಸ್ತುತ ಕೋವಿಡ್-೧೯ರ ಪರಿಣಾಮ ಪ್ರಪಂಚದಾದ್ಯಂತ ಹಲವಾರು ಸಂಕಷ್ಟ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಶಕ್ತಿ ಮೀರಿ ಶ್ರಮಿಸುತ್ತಿವೆ. ಈ ನಡುವೆ ಲೆಕ್ಕವಿಲ್ಲದಷ್ಟು ದಾನಿಗಳು, ಸ್ವಯಂ ಸೇವಾ ಸಂಸ್ಥೆಗಳು ತಮ್ಮದೇ ಆದೆ ರೀತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿವೆ. ಕೋವಿಡ್ ನಿಯಂತ್ರಣಕ್ಕೆ ಕೇವಲ ನೆರವಿನ ಅಗತ್ಯ ಮಾತ್ರವಲ್ಲದೆ ಜಾಗೃತಿ ಸಹ ಅತಿ ಅವಶ್ಯಕವಾಗಿದೆ ಎಂದರು.
    ಗ್ರಾಮಮಟ್ಟದಲ್ಲಿ ಜಾಗೃತಿ ಪಡೆ ಹಾಗು ಗ್ರಾಮಸ್ಥರು ಕೋವಿಡ್-೧೯ರ ನಿಯಂತ್ರಣಕ್ಕೆ ಕೈಗೊಳ್ಳುತ್ತಿರುವ ಕ್ರಮಗಳು ಶ್ಲಾಘನೀಯವಾಗಿದ್ದು, ಪ್ರತಿ ಹಂತದ ಎಚ್ಚರಿಕೆ ಕ್ರಮಗಳು ನಿಯಂತ್ರಣಕ್ಕೆ ಸಹಕಾರಿಯಾಗಿವೆ. ಗ್ರಾಮಮಟ್ಟದಲ್ಲಿ ಅನುಸರಿಸುತ್ತಿರುವ ಕ್ರಮಗಳನ್ನು ನಗರಮಟ್ಟದಲ್ಲೂ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ದೊಡ್ಡ ಮಟ್ಟದ ಜಾಗೃತಿ ಅಭಿಮಾನ ನಡೆಯಬೇಕಾಗಿದೆ ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗಬೇಕೆಂಬ ಉದ್ದೇಶದೊಂದಿಗೆ ನಗರಸಭೆ ೩೫ ವಾರ್ಡ್‌ಗಳ ವ್ಯಾಪ್ತಿಯಲ್ಲಿನ ಅರ್ಹ ಕಡು ಬಡವರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವಾರ್ಡ್‌ಗಳ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಗ್ರಿಗಳು ತಲುಪಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
    ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಪೌರಾಯುಕ್ತ ಕೆ. ಪರಮೇಶ್ ಹಾಗು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಲ್ಲಾ ವಾರ್ಡ್‌ಗಳ ನಗರಸಭಾ ಸದಸ್ಯರು, ಒಂದೊಂದು ವಾರ್ಡ್‌ಗಳಿಂದ ತಲಾ ಇಬ್ಬರು ಫಲಾನುಭವಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.



No comments:

Post a Comment