Sunday, June 27, 2021

ಭದ್ರಾವತಿಯಲ್ಲಿ ೫ ಕೋ. ರು. ವೆಚ್ಚದಲ್ಲಿ ಕಾರ್ಮಿಕರ ಭವನ ನಿರ್ಮಾಣ : ಬಿ.ವೈ ರಾಘವೇಂದ್ರ


ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
   ಭದ್ರಾವತಿ, ಜೂ. ೨೭: ಶಿವಮೊಗ್ಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಭದ್ರಾವತಿ ತಾಲೂಕಿನಲ್ಲಿ ಸುಮಾರು ೫ ಕೋ. ರು. ವೆಚ್ಚದಲ್ಲಿ ಕಾರ್ಮಿಕರ ಭವನ ನಿರ್ಮಾಣ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
   ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭದ್ರಾವತಿಯಲ್ಲಿ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು ಮಾತ್ರವಲ್ಲದೆ ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗು ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಸುಮಾರು ೨೫ ರಿಂದ ೩೦ ಸಾವಿರದಷ್ಟು ಕಾರ್ಮಿಕರಿದ್ದಾರೆ. ಕೇಂದ್ರ ಸರ್ಕಾರ ಕಾರ್ಮಿಕರು ಹಾಗು ಅವರ ಕುಟುಂಬ ವರ್ಗದವರ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಮಿಕರ ಭವನ ಸ್ಥಾಪಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಒಂದು ಭವನ ಮಂಜೂರಾತಿಯಾಗಿದ್ದು, ಭವನವನ್ನು ಭದ್ರಾವತಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
    ದೇಶಾದ್ಯಂತ ವಲಸೆ ಕಾರ್ಮಿಕರು ಕೋವಿಡ್‌ನಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಇದೀಗ ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮಹತ್ವದ ಯೋಜನೆ ರೂಪಿಸಲಾಗಿದೆ. ವಲಸೆ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಈ ಯೋಜನೆಯಡಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಿವೆ. ರಾಜ್ಯದಲ್ಲಿ ಈ ಯೋಜನೆ ೨ ಜಿಲ್ಲೆಗಳಿಗೆ ಮಾತ್ರ ಮಂಜೂರಾಗಿದ್ದು, ಈ ಪೈಕಿ ೧ ಶಿವಮೊಗ್ಗ ಜಿಲ್ಲೆಯಾಗಿದೆ ಎಂದರು.
     ಈಗಾಗಲೇ ಈ ಯೋಜನೆಗೆ ಸರ್ವೇ ನಂ.೧೦೪, ೧೦೫ ಮತ್ತು ೧೦೩ರಲ್ಲಿ  ಸುಮಾರು ೧೦ ಎಕರೆ ಸ್ಥಳ ಗುರುತಿಸಿ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಸುಮಾರು ೨೦೦೦ ವಲಸೆ ಕಾರ್ಮಿಕರಿದ್ದು, ಈ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಕುರಿತು ಹೆಚ್ಚಿನ ಪ್ರಚಾರ ನಡೆಸಿ ಮಾಹಿತಿ ತಿಳಿಸಲಾಗುವುದು ಎಂದರು.
   ಉಳಿದಂತೆ ಕ್ಷಿಪ್ರ ಕಾರ್ಯಾಪಡೆ ಘಟಕ(ಆರ್‌ಎಎಫ್)ದ ಅಭಿವೃದ್ಧಿ ಕಾರ್ಯಗಳು ಶೀಘ್ರವಾಗಿ ನಡೆಯಲಿವೆ. ವಿಐಎಸ್‌ಎಲ್ ಕಾರ್ಖಾನೆ ಸಮಸ್ಯೆಗಳು ಸಹ ಒಂದು ಹಂತದಲ್ಲಿ ಬಗೆಹರಿಯುತ್ತಿದ್ದು, ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದರು.
    ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ನಗರಸಭಾ ಸದಸ್ಯರಾದ ಅನುಪಮ, ಶಶಿಕಲಾ, ಅನಿತಾ, ಪ್ರಮುಖರಾದ ಎಂ. ಪ್ರಭಾಕರ್, ವಿ. ಕದಿರೇಶ್, ಮಂಗೋಟೆ ರುದ್ರೇಶ್, ಕೂಡ್ಲಿಗೆರೆ ಹಾಲೇಶ್, ಚನ್ನೇಶ್, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment