ಭದ್ರಾ ಜಲಾಶಯ
* ಅನಂತಕುಮಾರ್
ಭದ್ರಾವತಿ, ಜು. ೨೩: ನಾಡಿನ ಜೀವನದಿ ಕಾವೇರಿಯಂತೆ ಭದ್ರೆ ಸಹ ಬೃಹದಾಗಿ ವಿಸ್ತಾರಗೊಳ್ಳುತ್ತಿದ್ದು, ಇದೀಗ ಮಧ್ಯ ಕರ್ನಾಟಕ ಭಾಗದ ಜೀವನಾಡಿಯಾಗಿ ಮೈತಳೆದು ನಿಂತಿದೆ. ಇತ್ತೀಚಿನ ಕೆಲವು ವರ್ಷಗಳಿಂದ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತಿದ್ದು, ಇದರಿಂದಾಗಿ ಈ ವ್ಯಾಪ್ತಿಯ ರೈತರು ನೆಮ್ಮದಿ ಕಾಣುವಂತಾಗಿದೆ.
ಭದ್ರಾ ಜಲಾಶಯ:
ಪಶ್ಚಿಮಘಟ್ಟಗಳ ಪರ್ವತ ಶ್ರೇಣಿಯಲ್ಲಿ ಹುಟ್ಟಿ ಬೆಟ್ಟಗುಡ್ಡಗಳ ನಡುವೆ ಹರಿಯುವ ಭದ್ರೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರಿನ ಕೂಡಲಿಯಲ್ಲಿ ತುಂಗಾನದಿಯೊಂದಿಗೆ ಸೇರಿ ಮುಂದೆ ಹರಿದು ತುಂಗಾಭದ್ರಾ ಜಲಾಶಯ ಸೇರುತ್ತದೆ. ಈ ನದಿಗೆ ೧೯೬೫ರಲ್ಲಿ ಸುಮಾರು ೪೩ ಕೋಟಿ ರು. ವೆಚ್ಚದಲ್ಲಿ ಪ್ರಸ್ತುತ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ನಿರ್ಮಾಣಗೊಂಡ ಜಲಾಶಯ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ರೈತರಿಗೆ ವರದಾನವಾಗಿದೆ. ಒಟ್ಟು ೧,೬೨,೮೧೮ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ.
ಭದ್ರಾ ಜಲಾಶಯ ೧೮೬ ಅಡಿ ಎತ್ತರವಿದ್ದು, ಸುಮಾರು ೭೧ ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ವಿದೇಶಿ ತಂತ್ರಜ್ಞಾನದ ಅತ್ಯಾಧುನಿಕ ಸ್ವಯಂ ಚಾಲಿತ ೪ ಕ್ರೆಸ್ಟ್ಗೇಟ್ಗಳನ್ನು ಒಳಗೊಂಡಿದೆ. ಮೇಲ್ಭಾಗದಲ್ಲಿ ಎರಡು ಕಾರುಗಳು ಒಟ್ಟಿಗೆ ಚಲಿಸುವಷ್ಟು ವಿಶಾಲವಾದ ಸ್ಥಳಾವಕಾಶವಿದೆ. ಎಡ-ಬಲ ಎರಡು ಬೃಹತ್ ನಾಲೆಗಳನ್ನು ಒಳಗೊಂಡಿದೆ. ಎಡದಂಡೆ ನಾಲೆ ಮೂಲಕ ಶಿವಮೊಗ್ಗ ಹಾಗೂ ಭದ್ರಾವತಿ ತಾಲ್ಲೂಕಿನ ಸುಮಾರು ೮,೩೦೦ ಹೆಕ್ಟೇರು ಪ್ರದೇಶಕ್ಕೆ ಹಾಗೂ ಬಲದಂಡೆ ನಾಲೆ ಮೂಲಕ ತರೀಕೆರೆ ಹಾಗೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಜಲಾಶಯದ ನೀರನ್ನು ಕೇವಲ ಕೃಷಿ ಚಟುವಟಿಕೆಗಳಿಗೆ ಮಾತ್ರವಲ್ಲದೆ ಕುಡಿಯುವ ನೀರು, ಕೈಗಾರಿಕೆ ಹಾಗೂ ವಿದ್ಯುತ್ ಉತ್ಪಾದನೆಗೂ ಬಳಸಿಕೊಳ್ಳಲಾಗುತ್ತಿದೆ. ಸುಮಾರು ೩೯ ಮೆಗವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಕಳೆದ ಹಲವಾರುಗಳಿಂದ ವರ್ಷಗಳಿಂದ ಬಯಲುಸೀಮೆ ಹಾಗೂ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶ ದಿಂದ ಭದ್ರಾ ಮೇಲ್ಡಂಡೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆ ಇನ್ನೂ ಪ್ರಗತಿಯಲ್ಲಿದೆ.
೨೯ ಬಾರಿ ಪೂರ್ಣ ಪ್ರಮಾಣದಲ್ಲಿ ಭರ್ತಿ:
ಇದುವರೆಗೂ ಜಲಾಶಯ ಒಟ್ಟು ೨೯ ಬಾರಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದು, ೧೯೬೯ರಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣ ತಲುಪಿತ್ತು. ನಂತರ ೧೯೯೦ ರಿಂದ ೯೪ರ ವರೆಗೆ ೫ ಬಾರಿ, ೨೦೦೫ ರಿಂದ ೨೦೧೧ರ ವರೆಗೆ ೬ ಬಾರಿ, ೨೦೧೩ ಮತ್ತು ೨೦೧೪ರಲ್ಲಿ ಹಾಗೂ ೨೦೧೮ ಮತ್ತು ೨೦೧೯ ಹಾಗು ೨೦೨೦ರಲ್ಲಿ ಜಲಾಶಯ ಭರ್ತಿಯಾಗಿದ್ದು, ಹಲವು ಬಾರಿ ೧೭೦ ಅಡಿಗೂ ಅಧಿಕ ನೀರು ಸಂಗ್ರಹವಾದರೂ ಸಹ ಭರ್ತಿಯಾಗಿಲ್ಲ.
ಹಲವು ವಿಶೇಷತೆಗಳು:
ದೇಶದಲ್ಲಿ ೨ನೇ ಅತಿ ಎತ್ತರದ ಜಲಾಶಯ ಇದಾಗಿದ್ದು, ೧೮೬ ಅಡಿ ಎತ್ತರ ಹೊಂದಿದೆ. ಜಲಾಶಯದ ನೀರು ಬಿದಿರು ಹಸಿರಿನಿಂದ ಕಂಗೊಳಿಸುವುದು ವಿಶೇಷವಾಗಿದ್ದು, ಜಲಾಶಯದ ವ್ಯಾಪ್ತಿಯನ್ನು ಕಳಲೆ ಔಷಧಿ ಸಸಿಗಳು ಆವರಿಸಿಕೊಂಡಿವೆ. ಈ ಹಿನ್ನಲೆಯಲ್ಲಿ ಕ್ರಿಮಿಕೀಟಗಳಿಂದ ಮುಕ್ತಿಹೊಂದಿದ ಪರಿಶುದ್ಧ ನೀರು ಇದಾಗಿದೆ. ಭದ್ರಾ ಆಭಯಾರಣ್ಯದಲ್ಲಿ ೧೪೭ ಕಿ.ಮೀ. ವರೆಗೆ, ೫೨ ಕಿ.ಮೀ ಎನ್.ಆರ್ ಪುರದ ವರೆಗೆ, ೭೦ ಕಿ.ಮೀ. ಚಿಕ್ಕಮಗಳೂರುವರೆಗೆ, ೩೨ ಕಿ.ಮೀ. ಮುದ್ದಿನಕೊಪ್ಪದವರೆಗೆ ಜಲಾಶಯದ ನೀರು ವಿಸ್ತರಿಸಿಕೊಂಡಿದೆ. ಭದ್ರಾ ನದಿಗೆ ಯಾವುದೇ ಉಪನದಿಗಳಿಲ್ಲ. ಜಲಾಶಯದಲ್ಲಿ ಅಲ್ಲಲ್ಲಿ ಹಸಿರು ಗುಡ್ಡಗಳಿದ್ದು, ಪ್ರತಿ ವರ್ಷ ಆನೇಕ ಜಾತಿಯ ಪಕ್ಷಿಗಳು ದೇಶ-ವಿದೇಶಗಳಿಂದ ಇಲ್ಲಿಗೆ ವಲಸೆ ಬಂದು ಸುಮಾರು ೫-೬ ತಿಂಗಳುಗಳು ಇದ್ದು, ಪುನಃ ಹಿಂದಿರುಗುತ್ತವೆ. ಈ ಪಕ್ಷಿಗಳ ವೀಕ್ಷಣೆಗಾಗಿಯೇ ಗುಡ್ಡಗಳಲ್ಲಿ ಪ್ರವಾಸಿಗರಿಗೆ ವೀಕ್ಷಣಾ ಧಾಮಗಳನ್ನು ನಿರ್ಮಿಸಲಾಗಿದ್ದು, ಅಲ್ಲದೆ ಬೋಟಿಂಗ್ ವ್ಯವಸ್ಥೆ ಸಹ ಕಲ್ಪಿಸಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಜಲಾಶಯಕ್ಕೆ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ವೈಭವಯುತವಾಗಿ ಕಂಗೊಳಿಸುತ್ತದೆ. ಒಟ್ಟಾರೆ ಜಲಾಶಯ ಹಲವು ವಿಶೇಷತೆಗಳಿಂದ ಕೂಡಿದೆ.
ಶೀಘ್ರದಲ್ಲಿಯೇ ಜಲಾಶಯ ಭರ್ತಿ:
ಕಳೆದ ೫-೬ ದಿನಗಳಿಂದ ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದರಿಂದಾಗಿ ಶುಕ್ರವಾರ ಬೆಳಿಗ್ಗೆ ಜಲಾಶಯದ ನೀರಿನ ಮಟ್ಟ ೧೭೧.೧ ಅಡಿ ತಲುಪಿದ್ದು, ಇದೆ ರೀತಿ ಮಳೆಯಾದಲ್ಲಿ ಜಲಾಶಯ ಶೀಘ್ರದಲ್ಲಿಯೇ ಭರ್ತಿಯಾಗುವ ಲಕ್ಷಣಗಳು ಎದ್ದು ಕಾಣುತ್ತಿವೆ.
ಜಲಾಶಯದ ಗರಿಷ್ಠ ಮಟ್ಟ ೧೮೬ ಅಡಿಯಾಗಿದ್ದು, ಕಳೆದ ಬಾರಿ ಇದೆ ಅವಧಿಯಲ್ಲಿ ೧೫೩.೭ ಅಡಿ ತಲುಪಿತ್ತು. ಕಳೆದ ಬಾರಿಗೆ ಹೋಲಿಕೆ ಮಾಡಿದ್ದಲ್ಲಿ ಈ ಬಾರಿ ೧೮ ಅಡಿ ನೀರು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಕಳೆದ ಬಾರಿ ಆಗಸ್ಟ್ ತಿಂಗಳಿನಲ್ಲಿ ಜಲಾಶಯ ಭರ್ತಿಯಾಗಿತ್ತು. ಈ ಬಾರಿ ಮಳೆ ಇದೆ ರೀತಿ ಮುಂದುವರೆದಲ್ಲಿ ಈ ತಿಂಗಳ ಅಂತ್ಯದೊಳಗೆ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.
No comments:
Post a Comment