ಭದ್ರಾವತಿ, ಜು. ೩: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಯಲ್ಲಿ ಒತ್ತಡ ಹೇರದೆ ಸರ್ಕಾರದ ನಿರ್ದೇಶನದಂತೆ ನಡೆದುಕೊಳ್ಳಬೇಕೆಂದು ಉಪ ತಹಸೀಲ್ದಾರ್ ಮಂಜನಾಯ್ಕ ಶನಿವಾರ ನಡೆದ ಸಭೆಯಲ್ಲಿ ಕಂಪನಿಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊರತುಪಡಿಸಿ ಉಳಿದೆಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗಾಗಿ ಮಹಿಳೆಯರಿಗೆ ಪೀಡಿಸುತ್ತಿದ್ದು, ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ಸಾಲ ಮರುಪಾವತಿಗೆ ಕಾಲಾವಕಾಶ ನೀಡದಿರುವುದು ಸರಿಯಲ್ಲ. ಕಂಪನಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಶುಕ್ರವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರು.
ಈ ಹಿನ್ನಲೆಯಲ್ಲಿ ಕಂಪನಿಗಳ ಸ್ಥಳೀಯ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ ಸಾಲ ವಸೂಲಾತಿಯಲ್ಲಿ ಕಾನೂನು ಬಾಹಿರವಾಗಿ ಒತ್ತಡ ಹೇರದೆ ಸರ್ಕಾರದ ನಿರ್ದೇಶನದಂತೆ ನಡೆದುಕೊಳ್ಳಬೇಕೆಂದು ತಿಳಿಸಲಾಯಿತು. ಇದಕ್ಕೆ ಕಂಪನಿಗಳ ವ್ಯವಸ್ಥಾಪಕರು ಪೂರಕವಾಗಿ ಸ್ಪಂದಿಸಿದ್ದು, ಸಾಲ ವಸೂಲಾತಿಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಶಶಿಕುಮಾರ್ ಎಸ್. ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment