Sunday, September 5, 2021

ಮಕ್ಕಳ ಉಜ್ವಲ ಭವಿಷ್ಯದಿಂದ ದೇಶದ ಸಂವಿಧಾನ ಉಳಿವು ಸಾಧ್ಯ : ಶಾಸಕ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು.
    ಭದ್ರಾವತಿ, ಸೆ. ೫: ಅಮೂಲ್ಯವಾದ ಸೇವೆ ನೀಡುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು.  ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಶಿಕ್ಷಕರು ಸಮರ್ಪಕವಾಗಿ ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಭಾನುವಾರ ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.  
    ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ ದೇವರುಗಳಾಗಿದ್ದಾರೆ. ಜ್ಞಾನ ಸಂಪತ್ತು ಎಂಬುದು ಅಂಗಡಿಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ವಸ್ತು ಅಲ್ಲ. ಬದಲಾಗಿ ಶ್ರದ್ಧೆ, ಶ್ರಮದಿಂದ ಪಡೆಯುವುದಾಗಿದೆ ಎಂದರು.
ಸಮಾಜ ಸುಧಾರಣೆಯಲ್ಲಿ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದಾಗಿದ್ದು, ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ. ಶಿಕ್ಷಕರು ಎಂದಿಗೂ ಅಮರ. ತಮ್ಮ ಜವಾಬ್ದಾರಿಗಳನ್ನು ಅರಿತು ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹಾದಿಯಲ್ಲಿ ಎಲ್ಲರೂ ಸಾಗಿ ಶಿಕ್ಷಕ ವೃತ್ತಿಯ ಘನತೆ, ಗೌರವಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕೆಂದು ಕರೆ ನೀಡಿದರು.
    ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಮೇಶ್,  ಕೃಷ್ಣ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ, ನಗರಸಭಾ ಸದಸ್ಯರಾದ ಸರ್ವಮಂಗಳ, ರಿಯಾಜ್ ಅಹ್ಮದ್, ಮುಖಂಡರಾದ ಎಸ್.ಎಸ್ ಭೈರಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹರಿಬಾಬು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಕಾರ್ಯದರ್ಶಿ ಎಸ್.ಪಿ ಮೋಹನ್, ನಗರಸಭೆ ಪರಿಸರ ಇಂಜಿನಿಯರ್ ಪ್ರಭಾಕರ್, ಶಿಕ್ಷಕರ ಸಂಘದ ಮುಖಂಡರಾದ ಹನುಮಂತು, ಸುಮತಿ ಕಾರಂತ್, ಎಂ.ಸಿ ಆನಂದ್, ಸಿ. ಜಯಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ ಸ್ವಾಗತಿಸಿದರು. ಸುಮತಿ ಕಾರಂತ್ ಸಂಗಡಿಗರು ಪ್ರಾರ್ಥಿಸಿದರು. ಬಿಆರ್‌ಸಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವೈ.ಗಣೇಶ್ ವಂದಿಸಿದರು.  ತಾಲೂಕು ಕ್ರೀಡಾಧಿಕಾರಿ ಪ್ರಭು ಕಾರ್ಯಕ್ರಮ ನಿರೂಪಿಸಿದರು.  ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಒಟ್ಟು ೮೦ ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಯಿತು

No comments:

Post a Comment