Monday, September 6, 2021

ದೇಶದಲ್ಲಿ ಬೆಲೆ ಏರಿಕೆಯಿಂದಾಗಿ ಬಡ, ಮಧ್ಯಮ ವರ್ಗ ಸಂಕಷ್ಟಕ್ಕೆ : ಬಿ.ಕೆ ಸಂಗಮೇಶ್ವರ್

ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಭದ್ರಾವತಿ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಸೆ. ೬: ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಹಾಗು ಮಧ್ಯಮ ವರ್ಗದವರು ಸಂಕಷ್ಟ ಅನುಭವಿಸುವಂತಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.
    ಅವರು ಸೋಮವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಅಡುಗೆ ಅನಿಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರ ಜೊತೆಗೆ ಇತರೆ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಕಾರ್ಖಾನೆಗಳು ಅಭಿವೃದ್ಧಿಯಾಗದೆ ಕಾರ್ಮಿಕರು ಬೀದಿ ಪಾಲಾಗುತ್ತಿದ್ದಾರೆ. ಕೃಷಿಗೆ ಸಂಬಂಧಿಸಿದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಅಸಾಧ್ಯವಾಗಿದೆ. ಹಲವಾರು ಜನವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿ ಬಡ ಹಾಗು ಮಧ್ಯಮ ವರ್ಗದವರನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿದರು.
    ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್ ಮಾತನಾಡಿ, ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸಲು ವಿಫಲವಾಗಿದೆ. ಜನವಿರೋಧಿ ನೀತಿಗಳ ಜೊತೆಗೆ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಕೋವಿಡ್ ಮಹಾಮಾರಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಇಂತಹ ಸರ್ಕಾರ ದೇಶದ ಜನರಿಗೆ ಅಗತ್ಯವಿಲ್ಲ. ರಾಷ್ಟ್ರಪತಿಗಳು ತಕ್ಷಣ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
    ನಗರಸಭಾ ಸದಸ್ಯರಾದ ಕೆ. ಸುದೀಪ್‌ಕುಮಾರ್, ಆರ್. ಶ್ರೇಯಸ್, ಜಾರ್ಜ್, ಯುವ ಘಟಕದ ನಗರ ಉಪಾಧ್ಯಕ್ಷ ತೇಜಸ್‌ಗೌಡ, ಪ್ರಧಾನ ಕಾರ್ಯದರ್ಶಿ ಭರತ್, ಮಧುಸೂಧನ್, ಶಂಕರ್, ನವೀನ್, ಚೇತನ್, ಕಾರ್ಯದರ್ಶಿಗಳಾದ ನಂದನ್, ಸುನಿಲ್, ಸಚಿನ್, ಮನು, ಸಂಜಯ್, ಸ್ಟೀಫನ್, ರಾಜ್‌ಕ್ರಿಸ್ಟಿ, ಸುನಿಲ್, ಯೋಗೀಶ್, ಸೋಮಣ್ಣ, ರಂಜಿತ್, ಧರ್ಮೇಂದ್ರ, ರಾಜ್‌ವೀರ್, ಗಗನ್, ಶ್ರೀನಿವಾಸ್, ಮುರುಳಿ, ಮಂಜು, ಹರೀಶ್, ಐಸಾಕ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    ಸೌದೆ ಒಲೆ ಹಚ್ಚುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.


No comments:

Post a Comment