Thursday, September 16, 2021

ಸೆ.೨೧ರಂದು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೊದಲ ಪುಣ್ಯ ಸ್ಮರಣೆ

ಭದ್ರಾವತಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಹಾಗು ಪ್ರತಿಮೆ ಅನಾವರಣ ಸೆ.೨೧ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ತಾಲೂಕಿನ ಗೋಣಿಬೀಡು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶಾರದ ಅಪ್ಪಾಜಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  
    ಭದ್ರಾವತಿ, ಸೆ. ೧೬: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಹಾಗು ಪ್ರತಿಮೆ ಅನಾವರಣ ಸೆ.೨೧ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ತಾಲೂಕಿನ ಗೋಣಿಬೀಡು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾರದ ಅಪ್ಪಾಜಿ ತಿಳಿಸಿದರು.
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪ್ಪಾಜಿ ಅವರ ಪುಣ್ಯ ಸ್ಮರಣೆಯನ್ನು ರಾಜಕೀಯವಾಗಿ ಮಾಡುತ್ತಿಲ್ಲ. ನಮ್ಮ ಮನೆಯ ಕಾರ್ಯದಂತೆ ಮಾಡಲಾಗುತ್ತಿದ್ದು, ಯಾವುದೇ ರಾಜಕೀಯ ಬೇಧಭಾವವಿಲ್ಲದೆ ಕ್ಷೇತ್ರದ ಎಲ್ಲರೂ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
    ಎಲ್ಲಾ ರಾಜಕೀಯ ಪಕ್ಷದವರನ್ನು ಪುಣ್ಯ ಸ್ಮರಣೆ ಕಾರ್ಯಕ್ಕೆ ಆಹ್ವಾನಿಸಲಾಗಿದೆ. ಅಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹ ಬರುವ ನಿರೀಕ್ಷೆ ಇದೆ. ಎಲ್ಲರೂ ಒಗ್ಗೂಡಿ ಪುಣ್ಯಸ್ಮರಣೆ ಕಾರ್ಯವನ್ನು ಯಶಸ್ವಿಗೊಳಿಸುವ ಮೂಲಕ ಅಪ್ಪಾಜಿ ಅವರ ಆತ್ಮಕ್ಕೆ ಶಾಂತಿ ಕೋರಬೇಕೆಂದು ಮನವಿ ಮಾಡಿದರು.
    ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿ, ಅಪ್ಪಾಜಿ ಕ್ಷೇತ್ರದಲ್ಲಿ ಬಡ ವರ್ಗದವರ ಧ್ವನಿಯಾಗಿ ಮಾತ್ರವಲ್ಲದೆ ಎಲ್ಲಾ ಧರ್ಮದ, ಎಲ್ಲಾ ಜನಾಂಗದವರ ಪರವಾಗಿದ್ದರು. ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಅವರಲ್ಲಿನ ರಾಜಕೀಯ ಬದ್ದತೆಗೆ ಸಾಕ್ಷಿಯಾಗಿವೆ. ಅಧಿಕಾರ ಇರಲಿ, ಇಲ್ಲದಿರಲಿ ಎಲ್ಲಾ ಸಮಯದಲ್ಲೂ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಇಂತಹ ಧೀಮಂತ ನಾಯಕನ ಪುಣ್ಯ ಸ್ಮರಣೆಯನ್ನು ನಾವೆಲ್ಲರೂ ಸೇರಿ ಅವಿಸ್ಮರಣೀಯವಾಗಿಸಬೇಕಾಗಿದೆ ಎಂದರು.
    ಜಿಲ್ಲಾ ಪಂಚಾಯಿತಿ ಸದಸ್ಯರಾದ ಜೆ.ಪಿ ಯೋಗೇಶ್, ಎಸ್. ಮಣಿಶೇಖರ್, ಮಾಜಿ ಸದಸ್ಯ ಎಸ್. ಕುಮಾರ್, ಮುಖಂಡರಾದ ಟಿ.ಡಿ ಶ್ರೀಧರ್, ಕರಿಯಪ್ಪ, ಲೋಕೇಶ್ವರ್‌ರಾವ್, ನಂಜುಂಡೇಗೌಡ, ಡಾರ್ವಿ, ಮೈಲಾರಪ್ಪ, ಎಂ. ರಾಜು, ಫೀರ್‌ಷರೀಫ್, ದಿಲೀಪ್, ಕುಮಾರ್, ನಗರಸಭಾ ಸದಸ್ಯರಾದ ಬಸವರಾಜ ಆನೇಕೊಪ್ಪ, ಉದಯಕುಮಾರ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

No comments:

Post a Comment