Monday, October 18, 2021

ಸರ್ಕಾರದ ಆದೇಶ ಉಲ್ಲಂಘಿಸಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸ್ಥಾನಕ್ಕೆ ಗ್ರೇಡ್-೨ ಕಾರ್ಯದರ್ಶಿ ನೇಮಕ

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆಗ್ರಹ

ಸಾಮಾಜಿಕ ಹೋರಾಟಗಾರ ಶಿವಕುಮಾರ್ ಶಿವಕುಮಾರ್
    ಭದ್ರಾವತಿ, ಅ. ೧೮: ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳ ಸ್ಥಾನಕ್ಕೆ ಪ್ರಭಾರವಾಗಿ ಪಂಚಾಯಿತಿ ಗ್ರೇಡ್-೨  ಕಾರ್ಯದರ್ಶಿಗಳನ್ನು ನೇಮಕ ಮಾಡುವ ಮೂಲಕ ಸರ್ಕಾರದ ಆದೇಶ ಉಲ್ಲಂಘಿಸಲಾಗಿದ್ದು, ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸಿದ್ದಾರೆ.
    ಸರ್ಕಾರದ ಆದೇಶದ ಪ್ರಕಾರ ನಿವೃತ್ತಿ, ವರ್ಗಾವಣೆ ಸೇರಿದಂತೆ ಇನ್ನಿತರ ಕಾರಣಗಳಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸ್ಥಾನ ಖಾಲಿ ಇದ್ದಲ್ಲಿ  ಪ್ರಭಾರವಾಗಿ ಪಂಚಾಯಿತಿ ಗ್ರೇಡ್-೧ ಕಾರ್ಯದರ್ಶಿಯನ್ನು ನೇಮಿಸಬಹುದಾಗಿದೆ. ಒಂದು ಗ್ರೇಡ್-೧ ಕಾರ್ಯದರ್ಶಿ ಇಲ್ಲದಿದ್ದಲ್ಲಿ ಬೇರೆ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗೆ ಹೆಚ್ಚುವರಿಯಾಗಿ ಪ್ರಭಾರ ವಹಿಸಬಹುದಾಗಿದೆ. ಆದರೆ ತಾಲೂಕಿನಲ್ಲಿ ಈ ಆದೇಶವನ್ನು ಉಲ್ಲಂಘಿಸಿ ಅರಳಿಕೊಪ್ಪ, ಕಾರೇಹಳ್ಳಿ, ಮಂಗೋಟೆ, ಕಾಗೆಕೋಡಮಗ್ಗಿ, ದೊಡ್ಡೇರಿ, ಸೈದರಕಲ್ಲಹಳ್ಳಿ, ಗುಡಮಘಟ್ಟ ಸೇರಿದಂತೆ ಕೆಲವು ಗ್ರಾಮ ಪಂಚಾಯಿತಿಗಳಿಗೆ ಪಂಚಾಯಿತಿ ಗ್ರೇಡ್-೨ ಕಾರ್ಯದರ್ಶಿಗಳನ್ನು ಪ್ರಭಾರವಾಗಿ ನೇಮಕ ಮಾಡಲಾಗಿದೆ.
    ಪಂಚಾಯಿತಿ ಗ್ರೇಡ್-೨ ಕಾರ್ಯದರ್ಶಿಗಳಿಗೆ ಸೂಕ್ತ ತರಬೇತಿ ಇಲ್ಲದ ಕಾರಣ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಕೋಟ್ಯಾಂತರ ರು. ಹಣಕಾಸಿನ ವ್ಯವಹಾರ ನಿರ್ವಹಿಸುವುದು ಕಷ್ಟಕರವಾಗಿದೆ. ಅಲ್ಲದೆ ಕೆ.ಸಿ.ಎಸ್.ಆರ್ ನಿಯಮಾಳಿ ೧೯೫೭ರ ಪ್ರಕಾರ ಹಣಕಾಸಿನ ವ್ಯವಹಾರ ನಿರ್ವಹಿಸುವುದು ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ.
    ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಗ್ರೇಡ್-೨ ಕಾರ್ಯದರ್ಶಿ ಹುದ್ದೆಗಳಲ್ಲಿ ಕೆಲವರು ಬಹಳ ವರ್ಷಗಳಿಂದ ವರ್ಗಾವಣೆಗೊಳ್ಳದೆ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸರ್ಕಾರದ ಪೂರ್ವಾನುಮತಿ ಪಡೆಯದೇ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಮತ್ತು ಕಾರ್ಯದರ್ಶಿಗಳನ್ನು ಶೇ.೬೦ ರಿಂದ ೭೦ರಷ್ಟು ಮೂಲ ಗ್ರಾಮ ಪಂಚಾಯಿತಿಗಳಿಂದ ಬೇರೆ ಗ್ರಾಮ ಪಂಚಾಯಿತಿಗಳಿಗೆ ಪ್ರಭಾರವಾಗಿ ನೇಮಕ ಮಾಡಲಾಗಿರುತ್ತದೆ ಎಂದು ಆರೋಪಿಸಲಾಗಿದೆ.
ಸರ್ಕಾರದ ಆದೇಶಗಳಿಗೆ ಬೆಲೆಕೊಡದೆ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

No comments:

Post a Comment