ಸಿ.ಎಂ ಇಬ್ರಾಹಿಂ ಮತ್ತು ಕುಮಾರಸ್ವಾಮಿ
* ಅನಂತಕುಮಾರ್
ಭದ್ರಾವತಿ: ಮೂಲತಃ ಭದ್ರಾವತಿ ವಿಧಾನಸಭಾ ಕ್ಷೇತ್ರದವರಾದ ವಿಧಾನ ಪರಿಷತ್ ಸದಸ್ಯ, ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಇತ್ತೀಚೆಗೆ ಪುನಃ ತಮ್ಮ ಮಾತೃಪಕ್ಷಕ್ಕೆ ಮರಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಈ ರೀತಿಯ ಹೇಳಿಕೆಗಳನ್ನು ಈ ಹಿಂದೆ ಸಹ ನೀಡಿದ್ದರು ಎಂಬುದನ್ನು ಗಮನಿಸಬೇಕಾದ ಸಂಗತಿಯಾಗಿದೆ. ಇಬ್ರಾಹಿಂ ಇದುವರೆಗೂ ಕಾಂಗ್ರೆಸ್ ಬಿಟ್ಟು ಹೊರಬಂದಿಲ್ಲ. ಮುಂದೆ ಸಹ ಬರುವ ನಿರೀಕ್ಷೆ ಇಲ್ಲ. ಆದರೂ ಕ್ಷೇತ್ರದ ಮಟ್ಟಿಗೆ ಅವರ ಹೇಳಿಕೆಗಳು ಇದೀಗ ಸಕ್ರಿಯ ರಾಜಕಾರಣಕ್ಕೆ ಮರಳಿರುವ ಶಾರದ ಅಪ್ಪಾಜಿ ಅವರಿಗೆ ಹಿನ್ನಡೆಯನ್ನುಂಟು ಮಾಡುವುದು ಮಾತ್ರ ಖಚಿತವಾಗಿದೆ.
ಇಬ್ರಾಹಿಂ ಅವರು ಭದ್ರಾವತಿ ವಿಧಾನಸಭಾ ಕ್ಷೇತ್ರದವರೇ ಆದರೂ ಸಹ ಇದುವರೆಗೂ ಕ್ಷೇತ್ರದಲ್ಲಿ ನೆಲೆಕಾಣಲು ಸಾಧ್ಯವಾಗಿಲ್ಲ. ಈ ನಡುವೆ ಅವರ ಮಾತೃಪಕ್ಷ ಜಾತ್ಯಾತೀತ ಜನತಾದಳ ಅವರನ್ನು ಎಂದಿಗೂ ಕೈಬಿಟ್ಟಿಲ್ಲ ಎಂಬುದು ಸಹ ನೂರಕ್ಕೆ ನೂರರಷ್ಟು ಸತ್ಯ. ಇದಕ್ಕೆ ಉದಾಹರಣೆ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಇಬ್ರಾಹಿಂ ಕೇಂದ್ರ ಸಚಿವರಾಗಲು ಸಾಧ್ಯವಾಯಿತು. ಈಗಲೂ ಸಹ ಅವರ ಮೇಲೆ ಪಕ್ಷ ಅಷ್ಟೆ ಪ್ರೀತಿ, ವಿಶ್ವಾಸವನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಇದಕ್ಕೆ ಪೂರಕವೆಂಬಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಇತ್ತೀಚೆಗೆ ಇಬ್ರಾಹಿಂ ಕುರಿತು ನೀಡುತ್ತಿರುವ ಹೇಳಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ.
ಶಾರದ ಅಪ್ಪಾಜಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಆತ್ಮೀಯ ಸ್ನೇಹ ಬಾಂಧವ್ಯ ಇಬ್ರಾಹಿಂ ಮಾತೃಪಕ್ಷದಿಂದ ಕಳಚಿಕೊಳ್ಳುವಂತೆ ಮಾಡಿತ್ತು. ಸಿದ್ದಾರಾಮಯ್ಯ ಸಹ ಇಬ್ರಾಹಿಂ ಅವರನ್ನು ಎಂದಿಗೂ ಕಡೆಗಣಿಸಿಲ್ಲ. ಹಲವು ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಅಹಿತಕರ ಬೆಳವಣಿಗಳಿಂದ ಇಬ್ರಾಹಿಂ ಮನನೊಂದಿದ್ದರು. ಜೊತೆಗೆ ಪುನಃ ಮಾತೃಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರು. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲೂ ಸೂಕ್ತ ಸ್ಥಾನಮಾನಗಳನ್ನು ಕಲ್ಪಿಸಿಕೊಡುವ ಜೊತೆಗೆ ಈ ಹಿಂದಿನ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪ್ರಬಲವಾಗಿ, ರಾಜಕೀಯವಾಗಿ ಅಸ್ತಿತ್ವ ಕಂಡುಕೊಂಡಿರುವ ಬಿ.ಕೆ ಸಂಗಮೇಶ್ವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಿ ಇಬ್ರಾಹಿಂ ಸ್ಪರ್ದಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಆದರೆ ಇಬ್ರಾಹಿಂ ಚುನಾವಣೆಯಲ್ಲಿ ೩ನೇ ಸ್ಥಾನ ಕಾಯ್ದುಕೊಂಡಿದ್ದರು. ಇಬ್ರಾಹಿಂ ಇಂತಹ ಪರಿಸ್ಥಿತಿಯಲ್ಲೂ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಈ ಮೂಲಕ ಸಿದ್ದರಾಮಯ್ಯ ಸ್ನೇಹ ಬಾಂಧವ್ಯ ಮತ್ತಷ್ಟು ಗಟ್ಟಿ ಮಾಡಿಕೊಂಡಿದ್ದರು.
ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ತಮ್ಮದೇ ಆದ ವರ್ಚಸ್ಸಿನ ಮತಗಳನ್ನು ಹೊಂದಿದ್ದರು. ಅವರ ನಿಧನದ ನಂತರ ಅವರ ಸ್ಥಾನವನ್ನು ತುಂಬಬಹುದಾದ ಸಮರ್ಥ ನಾಯಕನ ಹುಡುಕಾಟದಲ್ಲಿ ತೊಡಗಿದ್ದ ಜೆಡಿಎಸ್ ಒಂದು ವರ್ಷದ ಬಳಿಕೆ ಅಪ್ಪಾಜಿಯವರ ವರ್ಚಸ್ಸಿನ ಮತ ಹಾಗು ಅನುಕಂಪದ ಮತಗಳನ್ನು ಸೆಳೆಯಲು ಅಪ್ಪಾಜಿ ಅವರ ಪತ್ನಿ ಶಾರದ ಅಪ್ಪಾಜಿಗೆ ನಾಯಕತ್ವ ವಹಿಸಿಕೊಡುವ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕ್ಷೇತ್ರದಲ್ಲಿ ಇಬ್ರಾಹಿಂ ಅಗತ್ಯವಿಲ್ಲದೆ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲುವ ಲಕ್ಷಣದ ವಾತಾವರಣ ಇದೀಗ ಕಂಡು ಬರುತ್ತಿದೆ. ಇಂತಹ ಸಂದರ್ಭದಲ್ಲಿ ಒಂದು ವೇಳೆ ಇಬ್ರಾಹಿಂ ಮಾತೃಪಕ್ಷಕ್ಕೆ ಮರಳಿ ಬಂದಲ್ಲಿ ಕ್ಷೇತ್ರದ ಮಟ್ಟಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದೆ. ಅದರಲ್ಲೂ ಶಾರದ ಅಪ್ಪಾಜಿಗೆ ಹಿನ್ನಡೆಯಾಗುವುದು ಬಹುತೇಕ ಖಚಿತವಾಗಿದೆ ಎಂಬ ಲೆಕ್ಕಚಾರಗಳ ರಾಜಕೀಯ ವಿಶ್ಲೇಷಣೆಗಳು ನಡೆಯುತ್ತಿವೆ. ಇಷ್ಟಕ್ಕೂ ಕಾಂಗ್ರೆಸ್ ಯಾವುದೇ ರೀತಿ ದ್ರೋಹ ಬಗೆದಿಲ್ಲ. ಆದರೂ ಇಬ್ರಾಹಿಂ ಮಾತೃಪಕ್ಷಕ್ಕೆ ಮರಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಇಂದೊಂದು ರೀತಿಯ ಅಪರೇಷನ್ ಕಾಂಗ್ರೆಸ್ ರೀತಿಯಲ್ಲಿ ಕಂಡು ಬರುತ್ತಿದೆ.
No comments:
Post a Comment