ಬುಧವಾರ, ಅಕ್ಟೋಬರ್ 6, 2021

ಬೀದಿ ನಾಟಕದ ಮೂಲಕ ದುಶ್ಚಟ ನಿರ್ಮೂಲನೆ, ಕೊರೋನಾ ಜಾಗೃತಿ

ಭದ್ರಾವತಿ ಹೊಸೂರು ಗ್ರಾಮದಲ್ಲಿ ಅಂಬೇಡ್ಕರ್ ಕಲಾ ತಂಡದ ಕಲಾವಿಧರು ಕರೋನಾ ಜಾಗೃತಿ ಹಾಗೂ ದುಶ್ಚಟಗಳ ನಿರ್ಮೂಲನೆ ಕುರಿತು ಬೀದಿ ನಾಟಕದ ಮೂಲಕ ಪ್ರದರ್ಶಿಸಿದರು.
    ಭದ್ರಾವತಿ, ಅ. ೬: ರಾಜ್ಯಾದ್ಯಂತ ಗ್ರಾಮಗಳ ಅಭಿವೃದ್ಧಿ ಹಾಗು ದುಶ್ಚಟಗಳ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಇದೀಗ ವಿನೂತನ ಪ್ರಯೋಗಗಳೊಂದಿಗೆ ಗ್ರಾಮೀಣಮಟ್ಟದಲ್ಲಿ ಮತ್ತಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬೀದಿ ನಾಟಕದ ಮೂಲಕ ಕೊರೋನಾ ಜಾಗೃತಿ ಹಾಗೂ ದುಶ್ಚಟಗಳ ನಿರ್ಮೂಲನೆ ಕುರಿತು ಅರಿವು ಮೂಡಿಸಲಾಗುತ್ತಿದೆ.  
    ತಾಲೂಕಿನ ಹೊಳೆಹೊನ್ನೂರು ಭಾಗದ ಆನವೇರಿ ಹಾಗೂ ಹೊಸೂರು ಗ್ರಾಮಗಳಲ್ಲಿ ಅಂಬೇಡ್ಕರ್ ಕಲಾ ತಂಡದ ಕಲಾವಿದರು ತಮ್ಮ ಕಲೆಯ ಮೂಲಕ  ಗ್ರಾಮೀಣ ಜನರಿಗೆ ಮಹಾಮಾರಿ ಕೊರೋನಾ ಸೋಂಕು ಕುರಿತು ಹೆಚ್ಚಿನ ತಿಳುವಳಿಕೆ ಹೊಂದುವ ಜೊತೆಗೆ ಸೋಂಕು ಕಾಣಿಸಿಕೊಳ್ಳದಂತೆ ಎಚ್ಚರ ವಹಿಸುವುದು ಹಾಗು ಲಸಿಕೆಯ ಮಹತ್ವ ಮತ್ತು ಧೂಮಪಾನ, ಮದ್ಯಪಾನ, ತಂಬಾಕು ಪದಾರ್ಥಗಳು ಹಾಗು ಮಾದಕ ವಸ್ತುಗಳ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸುವ  ಕುರಿತು ಜಾಗೃತಿ ಮೂಡಿಸಿದರು.
      ಹೊಸೂರು ಗ್ರಾಮದಲ್ಲಿ ನಡೆದ ಬೀದಿ ನಾಟಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಸದಸ್ಯ ರಿಯಾಜ್‌ಮಹಮದ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡುತ್ತಿರುವ ಜಾಗೃತಿ ಅರಿವು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
    ಯೋಜನಾಧಿಕಾರಿ ಪ್ರಕಾಶ್, ಮೇಲ್ವಿಚಾರಕ ಪ್ರದೀಪ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರೀತಿ, ಪ್ರಭಾ,  ಸೇರಿದಂತೆ ಹಲವರಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ