Monday, October 25, 2021

ಅನುದಾನ ಮಂಜೂರಾತಿ ಮಾಡಿಸಿಕೊಟ್ಟಿದ್ದರೂ ಅಭಿವೃದ್ಧಿ ಕಾಮಗಾರಿಗಳು ವಿಳಂಬ

ಕೆಡಿಪಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ

ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಯಿತು.
    ಭದ್ರಾವತಿ, ಅ. ೨೫: ತಾಲೂಕಿನಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಕಿದಿದ್ದು, ಸರ್ಕಾರದಿಂದ ಕೋಟ್ಯಾಂತರ ರು. ಅನುದಾನ ಮಂಜೂರಾತಿ ಮಾಡಿಸಿಕೊಟ್ಟಿದ್ದರೂ ಸಹ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
    ಅವರು ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು, ಪ್ರಗತಿಯಲ್ಲಿರುವ ಹಾಗು ಬಾಕಿ ಇರುವ ಕಾಮಗಾರಿಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ. ಆದರೆ ಸಭೆಗೆ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಸಭೆ ಯಾರಿಗಾಗಿ ನಡೆಸಬೇಕಾಗಿದೆ ಎಂಬ ಪ್ರಶ್ನೆ ಎದುರಾಗಿದೆ ಎಂದರು.
    ಪ್ರಮುಖವಾಗಿ ತಾಲೂಕಿನಲ್ಲಿ ಸಾಕಷ್ಟುಗಳು ರಸ್ತೆಗಳು ಹಾಳಾಗಿದ್ದು, ತುರ್ತು ಕಾಮಗಾರಿಗಳಿಗಾಗಿ ಸರ್ಕಾರಿಂದ ೮೦ ಲಕ್ಷ ರು. ಅನುದಾನ ಬಿಡುಗಡೆಯಾಗಿದೆ. ಲೋಕೋಪಯೋಗಿ ಹಾಗು ನೀರಾವರಿ ಇಲಾಖೆಗಳಿಗೆ ಕೋಟ್ಯಾಂತರ ರು. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಡಲಾಗಿದೆ. ಆದರೆ ಬಹಳಷ್ಟು ಕಾಮಗಾರಿಗಳು ಬಾಕಿ ಉಳಿದಿದ್ದು, ಅಲ್ಲದೆ ಕಾಮಗಾರಿಗಳನ್ನು ವಿಳಂಬವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದಕ್ಕೆ ಕಾರಣಗಳು ತಿಳಿದು ಬರುತ್ತಿಲ್ಲ. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕೆಂದರು.
    ಸಭೆಯಲ್ಲಿ ಪಾಲ್ಗೊಂಡಿದ್ದ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಮಾತನಾಡಿ, ಕಂದಾಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದರು. ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಮಾಹಿತಿಯನ್ನು ಮಂಡಿಸಿದರು.
    ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಉಪಸ್ಥಿತರಿದ್ದರು. ಕೆಡಿಪಿ ಸಮಿತಿ ಸದಸ್ಯರಾದ ಸುನೀತಾ ಮೋಹನ್, ನಾಗರಾಜ್‌ರಾವ್ ಅಂಬೋರೆ, ಗಜೇಂದ್ರಜೈನ್ ಮತ್ತು ಚಂದ್ರಪ್ಪ, ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಆರ್. ಮೋಹನ್‌ಕುಮಾರ್,  ನ್ಯಾಯವಾದಿ ಟಿ. ಚಂದ್ರೇಗೌಡ,  ವಿವಿಧ ಇಲಾಖೆ ಅಧಿಕಾರಿಗಳಾದ ಎಸ್.ಎಸ್.ವೈ ಶಿರಸ್ತೇದಾರ್ ರಾಧಾಕೃಷ್ಣಭಟ್, ಸಹಾಯಕ ಕೃಷಿ ನಿರ್ದೇಶಕ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕೆಎಸ್‌ಆರ್‌ಟಿಸಿ ಭದ್ರಾವತಿ ಘಟಕದ ವ್ಯವಸ್ಥಾಪಕಿ ಅಂಬಿಕಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕಾಂತರಾಜ್, ನಗರಸಭೆ ಸಹಾಯಕ ಇಂಜಿನಿಯರ್ ಶ್ರೀರಂಗರಾಜ ಪುರೆ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

No comments:

Post a Comment