Tuesday, November 30, 2021

ಛಲವಾದಿ ಮಹಾಸಭಾ ವತಿಯಿಂದ ಸಂವಿಧಾನ ದಿನ ಆಚರಣೆ


ಭದ್ರಾವತಿ ನಗರಸಭೆ ೨೫ನೇ ವಾರ್ಡ್ ವ್ಯಾಪ್ತಿಯ ಹುಡ್ಕೋ ಕಾಲೋನಿ ಮಾರುಕಟ್ಟೆ ಸಂಕೀರ್ಣದಲ್ಲಿರುವ ತಾಲೂಕು ಛಲವಾದಿ ಮಹಾಸಭಾ ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಹಾಗೂ ಗೌತಮ ಬುದ್ಧನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸಂವಿಧಾನ ಪೀಠಿಕೆ ವಾಚಿಸಲಾಯಿತು.
    ಭದ್ರಾವತಿ, ನ. ೩೦: ತಾಲೂಕು ಛಲವಾದಿ ಮಹಾಸಭಾ ವತಿಯಿಂದ ವಿಶೇಷವಾಗಿ ಸಂವಿಧಾನ ದಿನ ಆಚರಿಸಲಾಯಿತು.
    ನಗರಸಭೆ ೨೫ನೇ ವಾರ್ಡ್ ವ್ಯಾಪ್ತಿಯ ಹುಡ್ಕೋ ಕಾಲೋನಿ ಮಾರುಕಟ್ಟೆ ಸಂಕೀರ್ಣದಲ್ಲಿರುವ ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಹಾಗೂ ಗೌತಮ ಬುದ್ಧನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸಂವಿಧಾನ ಪೀಠಿಕೆ ವಾಚಿಸಲಾಯಿತು.
    ನ್ಯಾಯವಾದಿ ಟಿ. ಚಂದ್ರೇಗೌಡ ಸಂವಿಧಾನದ ಆಶಯ ಹಾಗು ಮಹತ್ವ ವಿವರಿಸಿದರು. ಸಮಾಜದ ಪ್ರಮುಖರಾದ ಜಯರಾಜ್ ಅಧ್ಯಕ್ಷತೆ ವಹಿಸಿದ್ದು, ಮಹಾಸಭಾ ಅಧ್ಯಕ್ಷ ಸುರೇಶ್, ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಶ್ರೀನಿವಾಸ್, ವಕೀಲೆ ವರಲಕ್ಷ್ಮೀ, ಉದ್ಯಮಿ ಎನ್. ಶ್ರೀನಿವಾಸ್, ಇಂಜಿನಿಯರ್ ಶಿವನಂಜಯ್ಯ, ಮಹೇಶ್, ಈ.ಪಿ ಬಸವರಾಜ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು:
    ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨ ಹಾಗು ಚುನಾವಣಾ ಸಾಕ್ಷರತಾ ಕ್ಲಬ್, ಶಿವಮೊಗ್ಗ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ೭೧ನೇ ಸಂವಿಧಾನ ದಿನ ಆಚರಿಸಲಾಯಿತು.
    ನೆಹರು ಯುವ ಕೇಂದ್ರದ ಉಲ್ಲಾಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಮೊಗ್ಗ ಕಲಾ ಕಾಲೇಜಿನ ಸತ್ಯನಾರಾಯಣ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾ ಡಾ.ಎಂ.ಜಿ ಉಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು.
    ಪ್ರಾಧ್ಯಾಪಕರಾದ ಡಾ. ಬಿ.ಎಂ ನಾಸಿರ್‌ಖಾನ್, ಶಿವರುದ್ರಪ್ಪ, ಡಾ. ಆರ್. ಸೀಮಾ ಮತ್ತು ಬಿ. ಗುರುಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.




ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨ ಹಾಗು ಚುನಾವಣಾ ಸಾಕ್ಷರತಾ ಕ್ಲಬ್, ಶಿವಮೊಗ್ಗ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ೭೧ನೇ ಸಂವಿಧಾನ ದಿನ ಆಚರಿಸಲಾಯಿತು.

ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಗೆ ಖಂಡನೆ

ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಮಿಸಿ ಮನವಿ


ಸಂಗೀತ ನಿರ್ದೇಶಕ ಹಂಸಲೇಖರವರು ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ನೇತೃತ್ವದಲ್ಲಿ  ಮಂಗಳವಾರ ಭದ್ರಾವತಿಯಲ್ಲಿ ತಹಸೀಲ್ದಾರ್‌ರವರಿಗೆ ಮನವಿ ಸಲ್ಲಿಸಿದವು.
     ಭದ್ರಾವತಿ, ನ. ೩೦: ಸಂಗೀತ ನಿರ್ದೇಶಕ ಹಂಸಲೇಖರವರು ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ನೇತೃತ್ವದಲ್ಲಿ  ಮಂಗಳವಾರ ತಹಸೀಲ್ದಾರ್‌ರವರಿಗೆ ಮನವಿ ಸಲ್ಲಿಸಿದವು.
     ಪ್ರಮುಖರು ಮಾತನಾಡಿ, ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಆಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ಮುಂಚೂಣಿಗೆ ಬಂದು ಸನಾತನ ಹಿಂದೂ ಧರ್ಮದ ಏಳಿಗೆಯ ಕಾರ್ಯವನ್ನು ಕೈಗೊಂಡಿರುತ್ತಾರೆ. ಸಮಾಜದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲು ದಲಿತ ಕೇರಿಗಳಲ್ಲಿ ಸಂಚರಿಸಿ ಧರ್ಮ ಜಾಗೃತಿ ಉಂಟು ಮಾಡುವ ಜೊತೆಗೆ ಅಸ್ಪೃಶ್ಯರು ಸಹ ಮುಖ್ಯವಾಹಿನಿಗೆ ಬರಲು ಶ್ರಮಿಸಿದ್ದ ಸಂತ ಶ್ರೇಷ್ಠರಾಗಿದ್ದಾರೆ ಎಂದರು.
    ಇಂತಹ ಮಹಾನ್ ಚೇತನ ಕುರಿತು ಹಂಸಲೇಖರವರು ಅವಹೇಳನಕಾರಿಯಾಗಿ ಮಾತನಾಡಿರುವುದು ಅಕ್ಷಮ್ಯ. ಇದರಿಂದಾಗಿ ಮಾಧ್ವ ಸಮಾಜ, ಬ್ರಾಹ್ಮಣ ಸಮಾಜ ಹಾಗು ಸಮಸ್ತ ಬಾಂಧವರ ಭಾವನೆಗಳಿಗೆ ನೋವುಂಟು ಮಾಡಿದೆ. ಇಷ್ಟೆ ಅಲ್ಲದೆ ಇತ್ತೀಚೆಗೆ ಕಿಡಿಗೇಡಿಯೋರ್ವ ಶ್ರೀಪಾದಂಗಳವರ ಭಾವಚಿತ್ರವನ್ನು ಪಾದರಕ್ಷೆಯಿಂದ ತುಳಿದು ಅಸಂಖ್ಯಾತ ಭಕ್ತರ ಭಾವನೆಗಳಿಗೆ ದುಃಖವನ್ನುಂಟು ಮಾಡಿರುತ್ತಾನೆ. ಈ ಕಿಡಿಗೇಡಿ ವಿರುದ್ಧ ವಿರುದ್ಧ ಹಾಗು ಅವಹೇಳನಕಾರಿಯಾಗಿ ಮಾತನಾಡಿರುವ ಹಂಸಲೇಖರವರ ವಿರುದ್ದ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
    ಮಾಧ್ವ ಮಹಾ ಮಂಡಳಿ, ಶ್ರೀ ಸಂಕರ್ಷಣ ಧರ್ಮ ಸಂಸ್ಥೆ, ಶ್ರೀ ಸತ್ಯಪ್ರಮೋದ ಸೇವಾ ಸಮಿತಿ, ಶ್ರೀ ಶ್ರೀನಿವಾಸ ಕಲ್ಯಾಣ ಸಮಿತಿ, ಶ್ರೀ ಹರಿದಾಸ ಭಜನಾ ಮಂಡಳಿ, ಕರಾವಳಿ ವಿಪ್ರ ಬಳಗ, ಶ್ರೀ ಗುರುರಾಜ ಸೇವಾ ಸಮಿತಿ, ಜ್ಞಾನವಾಹಿನಿ ಭಜನಾ ಮಂಡಳಿ, ಹರಿಪ್ರಿಯ ಭಜನಾ ಮಂಡಳಿ ಮತ್ತು ವಿಜಯೀಂದ್ರ ಭಕ್ತ ಮಂಡಳಿ ಪ್ರಮುಖರಾದ ವಿ. ಜಯತೀರ್ಥ, ನರಸಿಂಹಚಾರ್, ಗೋಪಾಲಚಾರ್, ಸಿ. ರಾಘವೇಂದ್ರ, ಜಿ. ರಮಾಕಾಂತ್, ಕೆ.ಆರ್ ವೆಂಕಟೇಶ್ ರಾವ್, ಎನ್. ವಂದನಾ, ಪವನ್‌ಕುಮಾರ್ ಉಡುಪ, ನಿರಂಜನಚಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು

ಬಿಳಿಕಿ ಮಠಕ್ಕೆ ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಭೇಟಿ : ಶ್ರೀಗಳಿಂದ ಆಶೀರ್ವಾದ

   
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ಭದ್ರಾವತಿ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
    ಭದ್ರಾವತಿ, ನ. ೩೦: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
    ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ(ಕಾಡಾ) ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೃಷಿಕೇಷ್ ಪೈ, ಮಹಿಳಾ ಪ್ರಮುಖರಾದ ಬಿಜೆಪಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ  ಶೋಭಾ ಪಾಟೀಲ್, ಆರ್.ಎಸ್. ಶೋಭಾ, ಮಾಲಾ ನಾಯ್ಕ್, ದೇವರಾಜ್ ಪಟೇಲ್, ಆನಂದ್, ಅವಿನಾಶ್, ಪ್ರಭಾಕರ್, ಚನ್ನೇಶ್, ಮಂಗೋಟೆ ರುದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Monday, November 29, 2021

ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦, ಡಿ.೧ರಂದು ಧಾರ್ಮಿಕ ಆಚರಣೆಗಳು

    ಭದ್ರಾವತಿ, ನ. ೨೯: ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ ಸಮೀಪ ೧೦೦ ವರ್ಷಗಳ ಇತಿಹಾಸವಿರುವ ಪುನರ್ ನಿರ್ಮಾಣ ಗೊಂಡಿರುವ ಶ್ರೀರಾಮ ಭಜನಾ ಮಂದಿರದ ಲೋಕಾರ್ಪಣೆ ಪೂರ್ವಭಾವಿಯಾಗಿ ಹೋಮ, ಹವನ ಹಾಗು ಶ್ರೀ ಸತ್ಯನಾರಾಯಣ ಪೂಜೆ ಸೇರಿದಂತೆ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ.
    ೧೯೨೧ರಲ್ಲಿ ಸ್ಥಾಪಿತಗೊಂಡ ಮಂದಿರ ಶಿಥಿಲಗೊಂಡ ಪರಿಣಾಮ ಯಾವುದೇ ಚಟುವಟಿಕೆಗಳು ನಡೆಯದೆ ಸುಮಾರು ೧ ದಶಕದಿಂದ ಪಾಳು ಬಿದ್ದಿದ್ದು, ಸ್ಥಳೀಯ ಸಮಾನ ಮನಸ್ಕರೆಲ್ಲಾ ಸೇರಿ ಮಂದಿರ ಪುನರ್ ನಿರ್ಮಾಣ ಮಾಡಬೇಕೆಂಬ ಧ್ಯೇಯೋದ್ದೇಶದೊಂದಿಗೆ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸರ್ಕಾರದಿಂದ ಅನುದಾನ ಪಡೆದುಕೊಂಡು ಮಂದಿರನ್ನು ಪುನರ್ ನಿರ್ಮಾಣಗೊಳಿಸಿದ್ದಾರೆ.
    ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦ರಂದು ರಾತ್ರಿ ೮ ಗಂಟೆಯಿಂದ ಹೋಮ ಹಾಗು ಡಿ.೧ರ ಬೆಳಿಗ್ಗೆ ೯.೩೦ಕ್ಕೆ ಸತ್ಯ ನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಶ್ರೀರಾಮ ಮಂಡಳಿ ಗೌರವಾಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಕೋರಿದ್ದಾರೆ.

ಅಶ್ಲೀಲ ನೃತ್ಯ ಪ್ರದರ್ಶನ ನಡೆಸುವ ವಾದ್ಯಗೋಷ್ಠಿ ಕಲಾತಂಡಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ : ಮನವಿ

ಅಶ್ಲೀಲ ನೃತ್ಯ ಪ್ರದರ್ಶನ ಮಾಡಿಸುವ ವಾದ್ಯಗೋಷ್ಠಿ ಕಲಾತಂಡ(ಆರ್ಕೆಸ್ಟ್ರಾ)ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಭದ್ರಾವತಿಯಲ್ಲಿ ವಾದ್ಯಗೋಷ್ಠಿ ಕಲಾವಿದರು ಹಾಗು ದಲಿತ ಸಂಘರ್ಷ ಸಮಿತಿ ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ನ. ೨೯: ಅಶ್ಲೀಲ ನೃತ್ಯ ಪ್ರದರ್ಶನ ಮಾಡಿಸುವ ವಾದ್ಯಗೋಷ್ಠಿ ಕಲಾತಂಡ(ಆರ್ಕೆಸ್ಟ್ರಾ)ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ವಾದ್ಯಗೋಷ್ಠಿ ಕಲಾವಿದರು ಹಾಗು ದಲಿತ ಸಂಘರ್ಷ ಸಮಿತಿ ಸೇರಿದಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ದಲಿತ ಸಂಘರ್ಷ ಸಮಿತಿ ಪ್ರಮುಖರು, ಪ್ರಗತಿಪರರು ಹಾಗು ಕಲಾವಿದರು ಮಾತನಾಡಿ, ನಗರದ ನಿವಾಸಿ ಹರೀಶ್ ಮಾಲೀಕತ್ವದ ಸೋನಿ ಮೆಲೋಡಿ ವಾದ್ಯ ಗೋಷ್ಠಿ ತಂಡ ಇತ್ತೀಚೆಗೆ ತುರುವೇಕೆರೆ ತಾಲೂಕಿನ ಗ್ರಾಮವೊಂದರಲ್ಲಿ ಆಯೋಜಿಸಲಾಗಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಮಹಿಳಾ ಕಲಾವಿದರನ್ನು ಬಳಸಿಕೊಂಡು ತುಂಡು ಉಡುಗೆಯ ಅಶ್ಲೀಲ ನೃತ್ಯ ಪ್ರದರ್ಶನ ನೀಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ ವ್ಯಾಪಾಕವಾಗಿ ಪ್ರಸಾರಗೊಳ್ಳುವ ಮೂಲಕ ಗೌರವಯುತವಾಗಿ ಗುರುತಿಸಿಕೊಂಡಿರುವ ಕಲಾವಿದರಿಗೆ ಮಸಿ ಬಳಿದಂತಾಗಿದ್ದು, ಕಲಾವಿದರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಈ ರೀತಿಯ ಘಟನೆ ಈ ಹಿಂದೆ ಸಹ ನಡೆದಿದ್ದು, ಈ ಸಂದರ್ಭದಲ್ಲಿ ಪುನಃ ಮರುಕಳುಹಿಸದಂತೆ ಎಚ್ಚರ ವಹಿಸುವುದಾಗಿ ಕ್ಷಮೆಯಾಚಿಸಲಾಗಿತ್ತು. ಆದರೆ ಇದೀಗ ಪುನಃ ಘಟನೆ ನಡೆದಿರುವುದು ಕಲಾವಿದರಿಗೆ ಅದರಲ್ಲೂ ಮಹಿಳಾ ಕಲಾವಿದರಿಗೆ ಹೆಚ್ಚಿನ ನೋವುಂಟು ಮಾಡಿದೆ. ಕಲೆಯನ್ನು ವೃತ್ತಿಯಾಗಿಸಿಕೊಂಡು ಬದುಕುತ್ತಿರುವ ಬಹಳಷ್ಟು ಕಲಾವಿದರಿಗೆ ಈ ಕೃತ್ಯ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಕಲಾವಿದರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ಕಲಾತಂಡಗಳಿಗೆ ಬೇಡಿಕೆ ಸಹ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಕೃತ್ಯ ನಡೆಸಿರುವುದು ಗೌರವಯುತವಾಗಿ ಗುರುತಿಸಿಕೊಂಡಿರುವ ಕಲಾವಿದರ ಬದುಕಿನ ಮೇಲೂ ದುಷ್ಪರಿಣಾಮ ಉಂಟುಮಾಡುತ್ತಿದೆ ಎಂದು ಅಳಲು ತೋರ್ಪಡಿಸಿಕೊಂಡರು.
    ಅಶ್ಲೀಲ ನೃತ್ಯ ಮಾಡಿಸುವ ವಾದ್ಯಗೋಷ್ಠಿ ಕಲಾ ತಂಡಗಳನ್ನು ತಕ್ಷಣ ರದ್ದುಗೊಳಿಸಿ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಆಗ್ರಹಿಸುವ ಜೊತೆಗೆ ರಾಜ್ಯದಲ್ಲಿರುವ ವಾದ್ಯಗೋಷ್ಠಿ ಕಲಾವಿದರಿಗೆ ಸರ್ಕಾರ ಪ್ರತಿವರ್ಷ ಸಾಲಸೌಲಭ್ಯ ಕಲ್ಪಿಸಿಕೊಡಬೇಕು. ಹಿರಿಯ ಕಲಾವಿದರಿಗೆ ಸಮರ್ಪಕವಾಗಿ ಮಾಸಾಶನ ವಿತರಿಸಬೇಕು ಮತ್ತು ನಿರ್ಗತಿಕ ಕಲಾವಿದರಿಗೆ ನಿವೇಶನ, ವಸತಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
    ವಾದ್ಯಗೋಷ್ಠಿ ಕಲಾವಿದರಾದ ಶಾಲಿನಿ, ಬಿ.ಆರ್ ಗೋಪಾಲ್, ವಿಜಯ್ ದಯಾಕರ್, ನೂರುಲ್ಲಾ, ಎ. ರಾಜು, ವೆಂಕಟೇಶ್, ಕಣ್ಣಪ್ಪ ಮತ್ತು ದಾಮೋಜಿ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಕೆ. ರಂಗನಾಥ್, ಸಂಘಟನಾ ಸಂಚಾಲಕ ಸುರೇಶ್, ಜಿಲ್ಲಾ ಸಂಘಟನಾ ಸಂಚಾಲಕ ಈಶ್ವರಪ್ಪ, ಮುಖಂಡರಾದ ಕುಪೇಂದ್ರಪ್ಪ, ಪಳನಿರಾಜ್,  ಹಾಗು ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ರಂಗನಾಥ್, ಈಶ್ವರಪ್ಪ, ಎನ್. ಕುಬೇಂದ್ರಪ್ಪ, ನ್ಯಾಷನಲ್ ಹ್ಯೂಮನ್ ರೈಟ್ಸ್ ಪ್ಯಾನಲ್ ಅಧ್ಯಕ್ಷ ಡಿ.ಜೆ ಪ್ರಭು, ಮೋಸಸ್, ದೀಪು, ನೂರುಲ್ಲಾ ಖಾನ್, ಶ್ರಮಿಕ್, ಮಾರ್ಟಿಸ್, ಶೃತಿ ಮೇರಮ್ಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Sunday, November 28, 2021

ಈ ಬಾರಿ ಪರಿಷತ್ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲುವು ಖಚಿತ : ಬಿ.ವೈ ರಾಘವೇಂದ್ರ

ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಶ್ರೀ ವರದರಾಜ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ನ. ೨೮: ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದ್ದು, ಭದ್ರಾವತಿ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಶಾಸಕರುಗಳಿದ್ದಾರೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಭಾನುಬಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ವರದರಾಜ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಬಿಜೆಪಿ ಪಕ್ಷಕ್ಕೆ ಎಲ್ಲೆಡೆ ಜನಬೆಂಬಲವಿದ್ದು, ಕಳೆದ ವಿಧಾನಪರಿಷತ್ ಚುನಾವಣೆ ನಂತರ ಕ್ಷೇತ್ರದ ಚಿತ್ರಣ ಸಂಪೂರ್ಣವಾಗಿ ಬದಲಾಗಿದೆ. ಎಲ್ಲಾ ಚುನಾವಣೆಗಳಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದ ವಿಧಾನಸಭೆವರೆಗೂ ಪಕ್ಷ ಬಲಿಷ್ಠವಾಗಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಯಾಗಿರುವ ಡಿ.ಎಸ್ ಅರುಣ್‌ರವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
    ಅಭ್ಯರ್ಥಿ ಡಿ.ಎಸ್ ಅರುಣ್ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಎದುರಾಗಿರುವ ವಿಧಾನಪರಿಷತ್ ಚುನಾವಣೆಯಲ್ಲಿ ೨೫ ಸ್ಥಾನಗಳ ಪೈಕಿ ಈಗಾಗಲೇ ೧೫ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಘೋಷಿಸಿದ್ದಾರೆ. ಅಲ್ಲದೆ ನನ್ನ ಪರವಾಗಿ ನಾನೇ ಅಭ್ಯರ್ಥಿ ಎಂದು ಮತಯಾಚನೆ ನಡೆಸುತ್ತಿದ್ದಾರೆ. ಇದರಿಂದಾಗಿ ಈ ಚುನಾವಣೆ ಎಷ್ಟು ಮಹತ್ವ ಪಡೆದುಕೊಂಡಿದೆ ಎಂಬುದು ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಂದು ಕೇವಲ ಬಿಜೆಪಿ ಅಭ್ಯರ್ಥಿ ಮಾತ್ರ ಕಣದಲ್ಲಿರುವುದು ಎಂಬ ಒಂದೇ ಆಲೋಚನೆಯೊಂದಿಗೆ ನನಗೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್, ಪ್ರಮುಖರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಶಿವರಾಜ್, ಜಿ. ಧರ್ಮಪ್ರಸಾದ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್,  ಪ್ರಮುಖರಾದ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪರಿಸರ ಶಿವರಾಮ್ ಆತ್ಮಕಥೆ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ


ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕ ಹೊರತಂದಿದ್ದಾರೆ. ಚಲನಚಿತ್ರ ನಟ, ನಿರ್ದೇಶಕ, ಪರಿಸರವಾದಿ ಸುರೇಶ್ ಹೆಬ್ಳಿಕರ್ ಪುಸ್ತಕ ಬಿಡುಗಡೆಗೊಳಿಸಿದರು.  
    ಭದ್ರಾವತಿ, ನ. ೨೮: ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕ ಹೊರತಂದಿದ್ದಾರೆ.
    ಪರಿಸರ ರಾಜ್ಯ ಪ್ರಶಸ್ತಿ ಮತ್ತು ಬಯಲಾಟ ಆಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪರಿಸರ ಶಿವರಾಮ್ ಉಕ್ಕಿನ ನಗರದ ಜನತೆಗೆ ಬಹುತೇಕ ಚಿರಪರಿಚಿತರಾಗಿದ್ದಾರೆ. ಇವರ ಆತ್ಮಕಥೆಯನ್ನು ಭದ್ರಾವತಿ ರಾಮಾಚಾರಿಯವರು ಅದ್ಭುತವಾಗಿ ಹೊರತಂದಿದ್ದು, ಪರಿಸರ ಶಿವರಾಮ್ ಅವರ ಜೀವನದ ನೈಜತೆಯನ್ನು ಓದುಗರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
    ಚಲನಚಿತ್ರ ನಟ, ನಿರ್ದೇಶಕ, ಪರಿಸರವಾದಿ ಸುರೇಶ್ ಹೆಬ್ಳಿಕರ್ ಪುಸ್ತಕ ಬಿಡುಗಡೆಗೊಳಿಸಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ. ಪುಸ್ತುಕ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿಗೆ ಮೊ: ೮೮೬೧೪೯೫೬೧೦ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎಸ್ ನಾರಾಯಣಪ್ಪ

ಭದ್ರಾವತಿ ಭೂತನಗುಡಿ ಓ.ಎಸ್.ಎಂ ರಸ್ತೆಯಲ್ಲಿರುವ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ಮತ್ತು ಉಪಾಧ್ಯಕ್ಷರಾಗಿ ಎನ್. ಮಂಜುನಾಥ್ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ನ. ೨೮: ನಗರದ ಭೂತನಗುಡಿ ಓ.ಎಸ್.ಎಂ ರಸ್ತೆಯಲ್ಲಿರುವ ದಿ ಎಕ್ಸ್‌ಟೆನ್‌ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಬಿ.ಎಸ್ ನಾರಾಯಣಪ್ಪ ಆಯ್ಕೆಯಾಗಿದ್ದಾರೆ.
    ಉಪಾಧ್ಯಕ್ಷರಾಗಿ ಎನ್. ಮಂಜುನಾಥ್ ಆಯ್ಕೆಯಾಗಿದ್ದು, ಚುನಾವಣಾಧಿಕಾರಿಯಾಗಿ ಡಿ. ಮಂಜಪ್ಪ ಕರ್ತವ್ಯ ನಿರ್ವಹಿಸಿದರು. ನಿರ್ದೇಶಕರಾದ ಕೆ.ಎಸ್ ಕೃಷ್ಣಪ್ಪ, ಕೆ. ಮಂಜಪ್ಪ, ಯು. ಸಂದಿಲ್‌ಕುಮಾರ್, ಕೃಷ್ಣಾನಂದ ರಾಯ್ಕರ್, ಆರ್.ಪಿ ವೆಂಕಟೇಶ್, ಜೆ.ಎಂ ರಾಜ, ಬಿ. ಮಂಜುಳಾ, ಕೆ. ವಸಂತಮ್ಮ, ಹೇಮಾವತಿ, ಶಾರದಬಾಯಿ ಮತ್ತು ಬಿ.ಎಚ್ ಮಂಜುನಾಥ್ ಉಪಸ್ಥಿತರಿದ್ದರು.

Saturday, November 27, 2021

ಲಾರಿಗೆ ಬೈಕ್ ಡಿಕ್ಕಿ : ೭ ವರ್ಷದ ಮಗು ಸಾವು



ಭದ್ರಾವತಿ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿರುವುದು.
 
ಭದ್ರಾವತಿ, ನ. ೨೭: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು ೭ ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರ ನಗರದ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿ ನಡೆದಿದೆ. 
ಬೈಕ್ ಸವಾರ ಶಿವಮೊಗ್ಗ ಮಿಳ್ಳಘಟ್ಟದ ನಿವಾಸಿ ಎಂದು ಗುರುತಿಸಲಾಗಿದ್ದು, ಈತ ಪತ್ನಿ ಹಾಗು ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಕಾರ್ಯ ನಿಮಿತ್ತ ಚಿಕ್ಕಮಗಳೂರಿಗೆ ತೆರಳಿದ್ದು, ಪುನಃ ಹಿಂದಿರುಗಿ ಶಿವಮೊಗ್ಗಕ್ಕೆ ಹೋಗುವಾಗ ಉಜ್ಜನಿಪುರ ಎಂಪಿಎಂ ಬಡಾವಣೆ ಬಳಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಈತನಿಗೆ ಗಂಬೀರ ಗಾಯಗಳಾಗಿದ್ದು, ಉಳಿದಂತೆ ಪತ್ನಿ ಮತ್ತು ಇನ್ನೊಂದು ೩ ವರ್ಷದ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕಾಗದನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ಪುನಃ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ : ಆರ್. ಪ್ರಸನ್ನಕುಮಾರ್


ಭದ್ರಾವತಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಮಾತನಾಡಿದರು.
    ಭದ್ರಾವತಿ, ನ. ೨೭: ರಾಜ್ಯದಲ್ಲಿ ಮುಂದಿನ ೬ ತಿಂಗಳಲ್ಲಿ ಪುನಃ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಚಿವರಾಗುವುದು ಬಹುತೇಕ ಖಚಿತ ಎಂದು ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಹೇಳಿದರು.
    ಅವರು ಶನಿವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರಿಂದ ಆಯ್ಕೆಯಾಗಿ ಸ್ವಾಯತ್ತ ಸಂಸ್ಥೆಗಳಾಗಿರುವ ಗ್ರಾಮ ಪಂಚಾಯಿತಿಗಳನ್ನು ಮುನ್ನಡೆಸಿಕೊಂಡು ಹೋಗುತ್ತಿರುವ ಸದಸ್ಯರು ಸ್ವತಂತ್ರವಾಗಿ ತಮ್ಮದೇ ಆದ ನಿರ್ಣಯಗಳನ್ನು ಕೈಗೊಳ್ಳಲಾಗದಂತಹ ಪರಿಸ್ಥಿತಿಗಳನ್ನು ನಿರ್ಮಾಣ ಮಾಡುವ ಜೊತೆಗೆ ಹಲವಾರು ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿರುವ ಸರ್ಕಾರದ ವಿರುದ್ಧ ಇಂದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ಮುಂದಿನ ೬ ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
    ಸಚಿವ ಕೆ.ಎಸ್ ಈಶ್ವರಪ್ಪ ಅವರು ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಆದರೆ ವಾಸ್ತವವಾಗಿ ಪಂಚಾಯಿತಿ ಸದಸ್ಯರಿಗೆ ಸೇರಿದ ಹಣವನ್ನು ಕಸಿದುಕೊಂಡು ಆ ಹಣದಲ್ಲಿ ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿ ಪಂಚಾಯಿತಿಗಳಿಗೆ ನೀಡಿ ಆ ಮೂಲಕ ಕಮೀಷನ್ ಹಣ ಪಡೆದುಕೊಳ್ಳುತ್ತಿದ್ದಾರೆ. ಪಂಚಾಯಿತಿ ಸದಸ್ಯರಿಗೆ ಯಾವುದೇ ನಿರ್ಣಯ ಕೈಗೊಳ್ಳದಂತೆ ಅಧಿಕಾರ ಮೊಟಕುಗೊಳಿಸಿದ್ದಾರೆ. ೧೪ನೇ ಹಣಕಾಸಿನ ಬದಲು ೧೫ನೇ ಹಣಕಾಸಿನಡಿ ಅಲ್ಪ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡಿ ಆ ಹಣದಲ್ಲೂ  ಲೂಟಿ ಹೊಡೆಯುತ್ತಿದ್ದಾರೆ. ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಇದುವರೆಗೂ ತನ್ನ ಹಣದಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
    ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಮಾಹಿತಿ ಸಂಗ್ರಹಿಸಿಕೊಂಡು ಮೀಸಲಾತಿ ರಚಿಸುವ ನೆಪದಲ್ಲಿ ಚುನಾವಣೆ ನಡೆಯದಂತೆ ಕುತಂತ್ರ ನಡೆಸಲಾಗುತ್ತಿದೆ. ಇದನ್ನು ವಿಧಾನ ಸಭೆ ಹಾಗು ವಿಧಾನ ಪರಿಷತ್‌ನಲ್ಲಿ ಚರ್ಚಿಸಲು ಮುಂದಾದರೆ ಕಿವಿ ಕೇಳಿಸದಂತೆ, ಸದಸ್ಯರ ಮಾತುಗಳಿಗೆ ಬೆಲೆಕೊಡದಂತೆ ವರ್ತಿಸುವ ಜೊತೆಗೆ ಸರ್ವಾಧಿಕಾರಿ ಧೋರಣೆಯೊಂದಿಗೆ ಈ ಸಂಬಂಧ ನಿರ್ಣಯ ಕೈಗೊಂಡಿದೆ. ಇಂತಹ ಸರ್ಕಾರಕ್ಕೆ ಪಾಠ ಕಲಿಸಬೇಕಾದರೆ ಕೇವಲ ಚುನಾವಣೆಯಿಂದ ಮಾತ್ರ ಸಾಧ್ಯವಾಗಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಂಡು ಈ ಬಾರಿ ಚುನಾವಣೆಯಲ್ಲಿ ನನ್ನನ್ನು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
       ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕಾದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಾಗಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿವೆ. ಬಿಜೆಪಿ ಸರ್ಕಾರ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ನನ್ನನ್ನು ೩ ಬಾರಿ ಆಯ್ಕೆ ಮಾಡಿರುವಂತೆ ಆರ್ ಪ್ರಸನ್ನಕುಮಾರ್ ಅವರನ್ನು ಸಹ ಆಯ್ಕೆ ಮಾಡಬೇಕು. ನಾವಿಬ್ಬರೂ ಜೊತೆಯಲ್ಲಿದ್ದಾಗ ಮಾತ್ರ ಇನ್ನೂ ಹೆಚ್ಚಿನ ಕೆಲಸ ಮಾಡಲು, ಹೆಚ್ಚಿನ ಅನುದಾನ ತರಲು ಸಾಧ್ಯ. ಈ ಹಿನ್ನಲೆಯಲ್ಲಿ ಮತ ನೀಡಿ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್, ತಾಲೂಕು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ. ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರ ಯುವ ಘಟಕದ ಜಿ. ವಿನೋದ್‌ಕುಮಾರ್, ಗ್ರಾಮಾಂತರ ಯುವ ಘಟಕದ ಅಧ್ಯಕ್ಷ ಆಫ್ತಾಬ್ ಅಹಮದ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ಮುಖಂಡರಾದ  ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಪ್ರಮುಖರಾದ ಬಿ.ಕೆ ಮೋಹನ್, ಬಿ.ಟಿ ನಾಗರಾಜ್, ಕೆ. ರಂಗನಾಥ್, ಶಾಂತವೀರನಾಯ್ಕ, ರವಿಕುಮಾರ್, ಇಸ್ಮಾಯಿಲ್ ಖಾನ್, ಟಿಪ್ಪುಸುಲ್ತಾನ್, ಮಣಿ ಎಎನ್‌ಎಸ್, ಗಂಗಾಧರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ನಗರಸಭೆ ಮತ್ತು ಪಂಚಾಯಿತಿಗಳ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

Friday, November 26, 2021

ನಕಲಿ ನೋಟು ಚಲಾವಣೆಗೆ ಯತ್ನ : ಇಬ್ಬರ ಬಂಧನ


ನಕಲಿ ನೋಟುಗಳ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಬಂಧಿಸಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವುದು.
    ಭದ್ರಾವತಿ, ನ. ೨೬: ನಕಲಿ ನೋಟುಗಳ ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಹಳೇನಗರ ಠಾಣೆ ಪೊಲೀಸರು ಬಂಧಿಸಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
    ತರೀಕೆರೆ ನಿವಾಸಿ ಅರುಣ್‌ಕುಮಾರ್(೨೩) ಮತ್ತು ಶಿವಮೊಗ್ಗ ನಿವಾಸಿ ಪ್ರೇಮ್‌ರಾಜ್(೨೩) ಬಂಧಿತರಾಗಿದ್ದು, ಈ ಇಬ್ಬರು ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಆಧಾರ ಮೇಲೆ ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಇವರಿಂದ ರು.೫೦೦ ಮುಖ ಬೆಲೆಯ ೧೮೨ ನಕಲಿ ನೋಟುಗಳನ್ನು ಹಾಗು ನೋಟುಗಳ ಮುದ್ರಣಕ್ಕೆ ಬಳಸುತ್ತಿದ್ದ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ.
    ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಹಳೇನಗರ ಪೊಲೀಸ್ ಠಾಣಾಧಿಕಾರಿ ಹಾಗು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಅಶ್ಲೀಲ ನೃತ್ಯ ಪ್ರದರ್ಶನ : ಕಲಾವಿದರಿಗೆ ಅಗೌರವ

ಕಾನೂನು ಕ್ರಮಕ್ಕೆ ಆಗ್ರಹಿಸಿ ನ.೨೯ರಂದು ಪ್ರತಿಭಟನೆ


ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಾದ್ಯ ಗೋಷ್ಠಿ ಕಲಾವಿದರು ಮತ್ತು ದಲಿತ ಮುಖಂಡರು ಮಾತನಾಡಿದರು.
    ಭದ್ರಾವತಿ, ನ. ೨೬: ಕಲೆಯ ನೈಜತೆ ಉಳಿಸುವ ಜೊತೆಗೆ ರಾಜ್ಯಾದ್ಯಂತ ಗುರುತಿಸಿಕೊಂಡಿರುವ, ಸಮಾಜದಲ್ಲಿ ಗೌರವಯುತವಾಗಿ ಕಾಣುತ್ತಿರುವ ವಾದ್ಯ ಗೋಷ್ಠಿ ಸಾಂಸ್ಕೃತಿಕ ಕಲಾವಿದರನ್ನು (ಆರ್ಕೆಸ್ಟ್ರಾ) ಅಗೌರವದಿಂದ ಕಾಣುವಂತಹ ಕೃತ್ಯಗಳು ನಡೆಯುತ್ತಿದ್ದು, ಇಂತಹ ಕೃತ್ಯಗಳಿಗೆ ಕಾರಣಕರ್ತರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನ.೨೯ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ವಾದ್ಯಗೋಷ್ಠಿ ಕಲಾವಿದರು ತಿಳಿಸಿದರು.
ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ನಿವಾಸಿ ಹರೀಶ್ ಮಾಲೀಕತ್ವದ ಸೋನಿ ಮೆಲೋಡಿ ವಾದ್ಯ ಗೋಷ್ಠಿ ತಂಡ ಇತ್ತೀಚೆಗೆ ತುರುವೇಕೆರೆಯಲ್ಲಿ ಜರುಗಿದ ಜಾತ್ರಾಮಹೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಕಲಾವಿದರನ್ನು ಬಳಸಿಕೊಂಡು ತುಂಡು ಉಡುಗೆಯ ಅಶ್ಲೀಲ ನೃತ್ಯ ಪ್ರದರ್ಶನ ನೀಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ ವ್ಯಾಪಾಕವಾಗಿ ಪ್ರಸಾರಗೊಳ್ಳುವ ಮೂಲಕ ಗೌರವಯುತವಾಗಿ ಗುರುತಿಸಿಕೊಂಡಿರುವ ಕಲಾವಿದರಿಗೆ ಮಸಿ ಬಳಿದಂತಾಗಿದೆ. ಕಲಾವಿದರನ್ನು ಅವಮಾನಿಸಿರುವ ಈ ಕೃತ್ಯವನ್ನು ಖಂಡಿಸುತ್ತೇವೆ ಎಂದರು.
    ಈ ರೀತಿಯ ಘಟನೆ ಈ ಹಿಂದೆ ಸಹ ನಡೆದಿದ್ದು, ಈ ಸಂದರ್ಭದಲ್ಲಿ ಪುನಃ ಮರುಕಳುಹಿಸದಂತೆ ಎಚ್ಚರ ವಹಿಸುವುದಾಗಿ ಕ್ಷಮೆಯಾಚಿಸಲಾಗಿತ್ತು. ಆದರೆ ಇದೀಗ ಪುನಃ ಘಟನೆ ನಡೆದಿರುವುದು ಕಲಾವಿದರಿಗೆ ಅದರಲ್ಲೂ ಮಹಿಳಾ ಕಲಾವಿದರಿಗೆ ಹೆಚ್ಚಿನ ನೋವುಂಟು ಮಾಡಿದೆ. ಕಲೆಯನ್ನು ವೃತ್ತಿಯಾಗಿಸಿಕೊಂಡು ಬದುಕುತ್ತಿರುವ ಬಹಳಷ್ಟು ಕಲಾವಿದರಿಗೆ ಈ ಕೃತ್ಯ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಕಲಾವಿದರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ಕಲಾತಂಡಗಳಿಗೆ ಬೇಡಿಕೆ ಸಹ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಕೃತ್ಯ ನಡೆಸಿರುವುದು ಗೌರವಯುತವಾಗಿ ಗುರುತಿಸಿಕೊಂಡಿರುವ ಕಲಾವಿದರ ಬದುಕಿನ ಮೇಲೂ ದುಷ್ಪರಿಣಾಮ ಉಂಟುಮಾಡುತ್ತಿದೆ ಎಂದು ಅಳಲು ತೋರ್ಪಡಿಸಿಕೊಂಡರು.
    ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ರಚಿಸಿಕೊಂಡಿರುವ ಹರೀಶ್ ಅದರ ಜಿಲ್ಲಾಧ್ಯಕ್ಷರಾಗಿದ್ದು, ಒಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಇವರ ಈ ವರ್ತನೆಯನ್ನು ಈ ಸಂಘದ ಪದಾಧಿಕಾರಿಗಳು ಸಹ ಪ್ರಶ್ನಿಸುತ್ತಿಲ್ಲ. ಹರೀಶ್ ವಿರುದ್ಧ ಜಿಲ್ಲಾಡಳಿತ ತಕ್ಷಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಕೃತ್ಯವನ್ನು ಖಂಡಿಸಿ ನ.೨೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದರು.
        ಗೌರವಯುತವಾಗಿ ಬದುಕುತ್ತಿರುವ ಕಲಾವಿದರ ಮೇಲೆ ದೌರ್ಜನ್ಯ :
   ಕಲಾವಿದರ ನೋವುಗಳಿಗೆ ಸ್ಪಂದಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಮುಖಂಡರು, ಕೆಲವರು ದುರುದ್ದೇಶದ ಹಿನ್ನಲೆಯಲ್ಲಿ ಸಂಘಟನೆ ಕಟ್ಟಿಕೊಂಡು ಗೌರವಯುತವಾಗಿ ಬದುಕುತ್ತಿರುವ ಕಲಾವಿದರ ಮೇಲೆ ದೌರ್ಜನ್ಯವೆಸಗುತ್ತಿರುವುದು ಸರಿಯಲ್ಲ. ಕಲಾವಿದರಿಗೆ ಹಣ ಮುಖ್ಯವಲ್ಲ ಗೌರವ ಮುಖ್ಯವಾಗಿದೆ. ತಾಲೂಕಿನ ಕಲಾವಿದರಿಗೆ ರಾಜ್ಯಾದ್ಯಂತ ದೊಡ್ಡ ದೊಡ್ಡ ನಗರಗಳಲ್ಲೂ ಬೇಡಿಕೆ ಇದೆ. ಉತ್ತಮ ಕಲಾವಿದರು ಇಲ್ಲಿದ್ದು, ತಾಲೂಕಿನ ಗೌರವ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕೃತ್ಯಕ್ಕೆ ಕಾರಣರಾಗಿರುವ ಹರೀಶ್ ತಕ್ಷಣ ಕ್ಷಮೆಯಾಗಿಸಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯ ನಡೆಸಬಾರದೆಂದು ಎಚ್ಚರಿಸುವ ಮೂಲಕ ಕಲಾವಿದರ ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಕಲಾವಿದರಾದ ಪಳನಿರಾಜ್, ಅನಿತಾ, ಬಿ.ಆರ್ ಗೋಪಾಲ್, ವಿಜಯ್ ದಯಾಕರ್, ನೂರುಲ್ಲಾ, ಎ. ರಾಜು, ವೆಂಕಟೇಶ್, ಪುಟ್ಟಣ್ಣ ಹಾಗು ಡಿಎಸ್‌ಎಸ್ ಮುಖಂಡರಾದ ಚಿನ್ನಯ್ಯ, ರಂಗನಾಥ್, ಈಶ್ವರಪ್ಪ, ಎನ್. ಕುಬೇಂದ್ರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಜೃಂಭಣೆಯಿಂದ ಜರುಗಿದ ಆಶ್ಲೇಷ ಬಲಿ ಪೂಜೆ


ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಪೂಜೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ನ. ೨೬: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಪೂಜೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
    ಪ್ರಧಾನ ಅರ್ಚಕ ಪ್ರಮೋದ್‌ಕುಮಾರ್ ನೇತೃತ್ವದಲ್ಲಿ ಆಶ್ಲೇಷ ಬಲಿ ಪೂಜೆ ಆಚರಣೆಗಳೊಂದಿಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿದವು.
    ಶ್ರೀ ಗುರುರಾಜ ಸೇವಾ ಸಮಿತಿ ಅಧ್ಯಕ್ಷರಾದ ಮುರುಳಿಧರ, ನಿರಂಜನ ಆಚಾರ್, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಉಪಾಧ್ಯಕ್ಷೆ ಉಮಾ ರಾಘವೇಂದ್ರ ತಂತ್ರಿ, ಸುಜಾತ ರಮಾಕಾಂತ್, ಯುವ ಮುಖಂಡ ಬಿ.ಎಸ್ ಗಣೇಶ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.


ನ.೨೮ರಿಂದ ಅಮಲೋದ್ಭವಿ ಮಾತೆ ದೇವಾಲಯದ ೮೩ನೇ ವರ್ಷದ ವಾರ್ಷಿಕೋತ್ಸವ

ಭದ್ರಾವತಿ ನ್ಯೂಟೌನ್  ಅಮಲೋದ್ಭವಿ ಮಾತೆ ದೇವಾಲಯ
    ಭದ್ರಾವತಿ, ನ. ೨೬: ನಗರದ ನ್ಯೂಟೌನ್ ಅಮಲೋದ್ಭವಿ ಮಾತೆಯ ದೇವಾಲಯದ ೮೩ನೇ ವರ್ಷದ ವಾರ್ಷಿಕೋತ್ಸವ ನ.೨೮ ರಿಂದ ಡಿ.೮ರ ವರೆಗೆ ನಡೆಯಲಿದೆ.
    ಜಗದ್ಗುರು ಪೋಪ್‌ರವರ ಕರೆಯೋಲೆಯಂತೆ ೨೦೨೩ರಲ್ಲಿ ನಡೆಯುವ ವಿಶ್ವ ಸಿನೋದ್ ಸಭೆಯ ಸಿದ್ದತಾ ಪ್ರಕ್ರಿಯೆಗಳಿಗೆ ಪೂರಕವಾಗಿರುವಂತೆ ಈ ಬಾರಿ ಹಲವು ಕಾರ್ಯಕ್ರಮಗಳೊಂದಿಗೆ 'ಅಮಲೋದ್ಭವಿ ಮಾತೆಯೊಡನೆ ಅನ್ಯೋನ್ಯತೆ, ಸಹಭಾಗಿತ್ವ ಮತ್ತು ಸುವಾರ್ತಾ ಸೇವೆಯೆಡೆಗೆ ಜೊತೆಯಾಗಿ ನಮ್ಮ ಪಯಣ' ಎಂಬ ಶೀರ್ಷಿಕೆಯೊಂದಿಗೆ ವಾರ್ಷಿಕೋತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಬಂಧ ಪ್ರತಿದಿನ ಸಂಜೆ ೫.೩೦ ರಿಂದ ಜಪಸರ ಪ್ರಾರ್ಥನೆ, ಪೂಜೆ ಮತ್ತು ಪ್ರಬೋಧನೆಗಳು ಜರುಗಲಿವೆ.
    ನ.೨೮ರಂದು ಸಂಜೆ ೫.೩೦ಕ್ಕೆ ಧ್ವಜಾರೋಹಣ, ಜಪಸರ ಪ್ರಾರ್ಥನೆ, ಪೂಜೆ ಮತ್ತು ಪ್ರಬೋಧನೆಯೊಂದಿಗೆ ವಾರ್ಷಿಕೋತ್ಸವಕ್ಕೆ ಚಾಲನೆ ದೊರೆಯಲಿದೆ. ಶಿವಮೊಗ್ಗ ಗುಡ್ ಶೆಪರ್ಡ್ ಧರ್ಮಕೇಂದ್ರದ ಗುರು ಫಾದರ್ ವಿರೇಶ್ ಮೋರಾಸ್ ಅಮಲೋದ್ಭವಿ ಮಾತೆ, ಅನ್ಯೋನ್ಯತೆ, ಸಹಭಾಗಿತ್ವ ಮತ್ತು ಸುವಾರ್ತಾ ಸೇವೆಯೆಡೆಗೆ ಜೊತೆಯಾಗಿ ಸಾಗುವ ನಮ್ಮ ಪಯಣಕ್ಕೆ ದಾರಿದೀಪ ವಿಷಯ ಕುರಿತು ಮಾತನಾಡಲಿದ್ದಾರೆ.  
    ನ.೨೯ರಂದು ನಡೆಯುವ ಕಾರ್ಯಕ್ರಮದಲ್ಲಿ ಅಮಲೋದ್ಭವಿ ಮಾತೆ ಜಪಸರ ಮಾಡಲು ಪ್ರೇರೆಪಿಸಿದ ತಾಯಿ ವಿಷಯ ಕುರಿತು ಮಾವಿನಕೆರೆ ಕಿರಿಯ ಪುಷ್ಪ ಸಂತ ತೆರೇಸಮ್ಮನವರ ಸುವಾರ್ತ ಕೇಂದ್ರದ ಧರ್ಮಗುರು ಫಾದರ್ ವೀನಸ್ ಪ್ರವೀಣ್, ನ.೩೦ರಂದು  ಅಮಲೋದ್ಭವಿ ಮಾತೆ ತಾಳ್ಮೆಯ ನಿಧಿ ವಿಷಯ ಕುರಿತು ಶಿವಮೊಗ್ಗ ಸೇಕೆರ್ಡ್ ಆರ್ಟ್ ಶಾಲೆ ಪ್ರಾಂಶುಪಾಲ ಫಾದರ್ ಲಾರೆನ್ಸ್, ಡಿ.೧ರಂದು ಅಮಲೋದ್ಭವಿ ಮಾತೆ ವಿಧೇಯತೆಯ ಮಾಗದರ್ಶಿ ವಿಷಯ ಕುರಿತು ಹಿರಿಯೂರು ವಿಯಾನ್ನಿ ಪ್ರೇಷಿತರ ಗೃಹದ ನಿರ್ದೇಶಕ ಫಾದರ್ ಸಂತೋಷ್, ಡಿ.೨ರಂದು ಅಮಲೋದ್ಭವಿ ಮಾತೆ ಪ್ರಾರ್ಥನೆ ಮಾಡಲು ಆದರ್ಶ ವಿಷಯ ಕುರಿತು ಕಾಗದನಗರ ಸಂತ ಜೋಸೆಫ್‌ರ ದೇವಾಲಯದ ಎಸ್‌ಡಿಬಿ ಫಾದರ್ ಡೋಮಿನಿಕ್, ಡಿ.೩ರಂದು ಅಮಲೋದ್ಭವಿ ಮಾತೆ ಅಚಲ ವಿಶ್ವಾಸದ ರಾಣಿ ವಿಷಯ ಕುರಿತು ಉಜ್ಜನಿಪುರ ಡಾನ್ ಬೋಸ್ಕೋ ಐಟಿಐ ನಿರ್ದೇಶಕ ಎಸ್‌ಡಿಬಿ ಫಾದರ್ ಆರೋಗ್ಯರಾಜ್ ಮತ್ತು ಡಿ.೪ರಂದು ಅಮಲೋದ್ಭವಿ ಮಾತೆ ದೇವರ ವಾಕ್ಯವನ್ನು ನಿಷ್ಠೆಯಿಂದ ಪಾಲಿಸಿದ ತಾಯಿ ವಿಷಯ ಕುರಿತು ಹಿರಿಯೂರು ಸ್ವರ್ಗ ಸ್ವೀಕೃತ ಮಾತೆಯ ದೇವಾಲಯದ ಧರ್ಮಗುರು ಫಾದರ್ ಫ್ರಾಂಕ್ಲಿನ್ ಡಿಸೋಜ ಮಾತನಾಡಲಿದ್ದಾರೆ.
    ಡಿ.೫ರಂದು ಫಾದರ್ ಫ್ರಾಂಕ್ಲಿನ್ ಡಿಸೋಜ ನೇತೃತ್ವದಲ್ಲಿ ಬ್ರದರ್ ಟಿ.ಕೆ ಜಾರ್ಜ್ ಮತ್ತು ತಂಡದವರಿಂದ ರೋಗಿಗಳಿಗೆ ವಿಶೇಷ ಪ್ರಾರ್ಥನೆ ಒಳಗೊಂಡಂತೆ ಧ್ಯಾನಕೂಟ, ಡಿ.೬ರಂದು ಜೇಡಿಕಟ್ಟೆ ಆಶಾಕಿರಣ ನಿರ್ದೇಶಕ ಫಾದರ್ ಪ್ರಕಾಶ್ ನೇತೃತ್ವದಲ್ಲಿ ಅಮಲೋದ್ಭವಿ ಮಾತೆ ಭಕ್ತಿಯ ಸುಧೆ ಕಾರ್ಯಕ್ರಮ ನಡೆಯಲಿದ್ದು, ಡಿ.೭ರಂದು ಕಡೂರಿನ ನಿತ್ಯಾಧಾರ ಮಾತೆ ದೇವಾಲಯದ ಧರ್ಮಗುರು ಫಾದರ್ ರಾಜೇಂದ್ರ ಅಮಲೋದ್ಭವಿ ಮಾತೆ ಕುಟುಂಬಗಳ ಮಹಾರಾಣಿ ವಿಷಯ ಕುರಿತು ಹಾಗು ಡಿ.೮ರಂದು ಹಾಸನ ಸಂತ ಅಂತೋಣಿಯವರ ದೇವಾಲಯದ ಧರ್ಮಗುರು ಫಾದರ್ ಜೋನಾಸ್ ಪ್ಯಾಟ್ರಿಕ್ ರಾವ್ ಅಮಲೋದ್ಭವಿ ಮಾಥೆ ಉದಾರತೆಯ ಗಣಿ ವಿಷಯ ಕುರಿತು ಮಾತನಾಡಲಿದ್ದಾರೆ.
    ಡಿ.೭ರಂದು ಸಂಜೆ ಅಲೋದ್ಭವಿ ಮಾತೆಯ ಭವ್ಯ ತೇರಿನ ಮೆರವಣಿಗೆ, ಭಕ್ತರಿಗೆ ಆಶೀರ್ವಾದ ಹಾಗು ಅನ್ನಸಂತರ್ಪಣೆ ಕಾರ್ಯಕ್ರಮಗಳು ಹಾಗು ಡಿ.೮ರಂದು ಸಂಜೆ ಅಡಂಬರದ ಬಲಿ ಪೂಜೆ, ವಿಶೇಷ ದಾನಿಗಳ ಸರಣೆ ಮತ್ತು ಸನ್ಮಾನ ಕಾರ್ಯಕ್ರಮಗಳೊಂದಿಗೆ ವಾರ್ಷಿಕೋತ್ಸವ ಮುಕ್ತಾಯಗೊಳ್ಳಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ದೇವಾಲಯದ ಧರ್ಮಗುರು ಫಾದರ್ ಲಾನ್ಸಿ ಡಿಸೋಜ ಮತ್ತು ಪಾಲನ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕೋರಿದ್ದಾರೆ.

Thursday, November 25, 2021

ವಿಜೃಂಭಣೆಯಿಂದ ಜರುಗಿದ ಶ್ರೀ ಚಿದಂಬರ ಜಯಂತಿ

ಭದ್ರಾವತಿ ಹಳೆನಗರದ ಶ್ರೀ ರಾಮೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ೨೫ನೇ ವರ್ಷದ ಶ್ರೀ ಚಿದಂಬರ ಜಯಂತಿ ವಿಜೃಂಭಣೆಯಿಂದ ನೆರವೇರಿತು.
    ಭದ್ರಾವತಿ, ನ. ೨೫: ಹಳೆನಗರದ ಶ್ರೀ ರಾಮೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ೨೫ನೇ ವರ್ಷದ ಶ್ರೀ ಚಿದಂಬರ ಜಯಂತಿ ವಿಜೃಂಭಣೆಯಿಂದ ನೆರವೇರಿತು.
    ಜಯಂತಿ ಅಂಗವಾಗಿ ಬೆಳಿಗ್ಗೆ ಕಾಕಡಾರತಿ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಸಹಸ್ರನಾಮ ಹಾಗೂ ಶ್ರೀ ಚಿದಂಬರ ಮೂಲಮಂತ್ರ ಹೋಮ, ರಾಜಬೀದಿ ಉತ್ಸವ ಮತ್ತು ಮಹಾಮಂಗಳಾರತಿ, ಪೂರ್ಣಾಹುತಿ, ಶ್ರೀ ಚಿದಂಬರ ತೊಟ್ಟಿಲು ಸೇವೆ ಹಾಗೂ ಹಾಗೂ ಲಲಿತ ಮಹಿಳಾ ಮಂಡಳಿಯಿಂದ ದೀಪೋತ್ಸವ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ  ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ಇಂದ್ರಸೇನರಾವ್, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ಜೆ.ಎಂ ಬಾಲಚಂದ್ರ ಗುತ್ತಲ್, ಆನಂದರಾವ್, ಪ್ರಭಾಕರರಾವ್, ರಾಮಚಂದ್ರ, ದತ್ತಾತ್ರಿ, ವಾಸುದೇವ್, ರಾಜಣ್ಣ ಸೇರಿದಂತೆ ಇನ್ನಿತರ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾವಹಿಸಿ : ಎಸಿಬಿ ಮಹಾನಿರ್ದೇಶಕರಿಗೆ ಮನವಿ

 


ಭದ್ರಾವತಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ವರ್ಷಗಳಿಂದ ಒಂದೇ ಕಡೆ  ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾ ವಹಿಸುವಂತೆ ಭ್ರಷ್ಟಾಚಾರ ನಿಗ್ರಹ ದಳದ ಅಪರ ಪೊಲೀಸ್ ಮಹಾನಿರ್ದೇಶಕರಿಗೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಮನವಿ ಮಾಡಿದ್ದಾರೆ. 

ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಸುಮಾರು  10 ರಿಂದ 15 ವರ್ಷಗಳವರೆಗೆ ಒಂದೇ ಕಡೆ ಕೆಲವು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು,  ಇವರಿಗೆ ಇಲಾಖೆ ಹಾಗೂ ಕಚೇರಿಯ ಸಂಪೂರ್ಣ ಮಾಹಿತಿ ಇದ್ದು, ಅಕ್ರಮವಾಗಿ ಹಣ, ಆಸ್ತಿ  ಸಂಪಾದಿಸಬೇಕೆಂಬ ಉದ್ದೇಶದೊಂದಿಗೆ ತಮ್ಮದೇ ಆದ ಪ್ರಭಾವ ಬಳಸಿಕೊಂಡು ಒಂದೇ ಸ್ಥಳದಲ್ಲಿಯೇ ಉಳಿದುಕೊಂಡು ಬಲಿಷ್ಠರಾಗಿದ್ದಾರೆ.   ಹಣವನ್ನು ಯಾವ ರೀತಿ ಪಡೆಯಬೇಕು. ಯಾರ ಮುಖಾಂತರ ಪಡೆಯಬೇಕು. ಯಾವ ರೀತಿ ಹಣ, ಆಸ್ತಿ ಹೊಂದಬೇಕೆಂಬ  ತಂತ್ರಗಾರಿಕೆಗಳನ್ನು ಅರಿತು ಕೊಂಡಿದ್ದಾರೆ.   

ಅರಣ್ಯ ಇಲಾಖೆ, ಪಂಚಾಯತ್ ರಾಜ್ ಖಾತೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಕೆಲವು ನೌಕರರು ತಮ್ಮ ನಿವೃತ್ತಿ ಅವಧಿಯನ್ನು ಸಂಪೂರ್ಣವಾಗಿ ಮುಗಿಸಿರುತ್ತಾರೆ. ಒಂದೇ ಕಡೆ ಕರ್ತವ್ಯ ನಿರ್ವಹಿಸಿರುವ ನೌಕರರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸುಮಾರು ೪-೫ ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾವಹಿಸಿದ್ದಲ್ಲಿ ಭ್ರಷ್ಟಾಚಾರಗಳು ಕಡಿಮೆಯಾಗುವ ಜೊತೆಗೆ  ಸಾ‍ರ್ವಜನಿಕರಿಗೆ ಲಂಚ ನೀಡುವ ಅನಿವಾರ್ಯತೆ, ಒತ್ತಡಗಳು ಕಡಿಮೆಯಾಗಲಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.  

ಸಾಧು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ ವೀರಭದ್ರಪ್ಪ ನಿಧನ


  ಕೆ.ಸಿ ವೀರಭದ್ರಪ್ಪ
 ಭದ್ರಾವತಿ, ನ. ೨೫: ತಾಲೂಕು ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆ ನಿವಾಸಿ, ಸಾಧು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ ವೀರಭದ್ರಪ್ಪ(೬೯) ಗುರುವಾರ ಮಧ್ಯಾಹ್ನ ನಿಧನ ಹೊಂದಿದರು.
    ಪತ್ನಿ, ಸಹೋದರ, ಸಹೋದರಿಯರನ್ನು ಹೊಂದಿದ್ದರು. ಸದಾಕಾಲ ಕ್ರಿಯಾಶೀಲರಾಗಿದ್ದ ಕೆ.ಸಿ ವೀರಭದ್ರಪ್ಪರವರು ಕಳೆದ ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ಮೂಲತಃ ಜಮೀನ್ದಾರ್ ಕುಟುಂಬದವರಾದ ವೀರಭದ್ರಪ್ಪ, ಪ್ರಸ್ತುತ ಸಾಧು ವೀರಶೈವ ಸಮಾಜದ ತಾಲೂಕು ಅಧ್ಯಕ್ಷರಾಗಿ, ಭದ್ರಾ ಕಾಲೋನಿ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ, ಹಾಲಪ್ಪವೃತ್ತ ಭದ್ರಾ ಪ್ರೌಢಶಾಲೆ ಆಡಳಿತ ಮಂಡಳಿ ನಿರ್ದೇಶಕರಾಗಿ ಹಾಗು ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಅಲ್ಲದೆ ೧೯೯೯ ರಿಂದ ೨೦೦೧ರವರೆಗೆ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಅಧ್ಯಕ್ಷರಾಗಿ, ೧೯೮೬ ರಿಂದ ೧೯೯೬ರವರೆಗೆ ವೀರಾಪುರ ರೈತರ ಸಹಕಾರ ಸಂಘ ಬ್ಯಾಂಕ್ ಅಧ್ಯಕ್ಷರಾಗಿ ಮತ್ತು ೨೦೦೫ ರಿಂದ ೨೦೧೭ರವರೆಗೆ ಸೀಗೆಬಾಗಿ ರೈತರ ನೀರು ಬಳಕೆದಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
    ೧೯೮೭ರಿಂದ ಲಯನ್ಸ್ ಕ್ಲಬ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ವೀರಭದ್ರಪ್ಪನವರು, ಖಜಾಂಚಿಯಾಗಿ, ಅಧ್ಯಕ್ಷರಾಗಿ, ವಲಯಾಧ್ಯಕ್ಷರಾಗಿ, ವಲಯ ಸಲಹೆಗಾರರಾಗಿ, ವಲಯ ರಾಯಬಾರಿಯಾಗಿ, ಡಿ.ಜಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಸಮುದಾಯ ಸೇವೆ, ಜಿಲ್ಲಾ ಗೌರ್‍ನರ್ ಪ್ರತಿನಿಧಿಯಾಗಿ, ಜಿಎಲ್‌ಟಿ ಮತ್ತು ಜಿಎಂಟಿ ಸಂಯೋಜಕರಾಗಿ, ಜಿಲ್ಲಾ ರಾಯಬಾರಿಯಾಗಿ ಹಾಗು ಪ್ರಸ್ತುತ ಲಯನ್ಸ್ ಕ್ಲಬ್ ೩೧೭-ಸಿ ಮೊದಲನೇ ಜಿಲ್ಲಾ ಉಪಗೌರ್‍ನರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
    ವೀರಶೈವ ಸಮಾಜದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ವೀರಭದ್ರಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Wednesday, November 24, 2021

ಆಜಾದಿ ಕ ಅಮೃತ್ ಮಹೋತ್ಸವ ಅಂಗವಾಗಿ ನೇತ್ರದಾನ ಪ್ರತಿಜ್ಞೆ

ನೇತ್ರದಾನ ನೋಂದಾಣಿ ಮಾಡಿಸಿ, ಜಾಗೃತಿ ಮೂಡಿಸಿದ ವಿಐಎಸ್‌ಎಲ್ ಸಮುದಾಯ


ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಎಚ್‌ಆರ್‌ಡಿ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಪ್ರತಿಜ್ಞೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು ೨೦೨ ಮಂದಿ ನೇತ್ರದಾನ ನೋಂದಾಣಿ ಮಾಡುವ ಮೂಲಕ ವಿಶೇಷವಾಗಿ ಗಮನ ಸೆಳೆದರು. ನೋಂದಾಣಿ ಅರ್ಜಿಗಳನ್ನು  ಕಾರ್ಖಾನೆಯ ಪ್ರಭಾರ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಹಸ್ತಾಂತರಿಸಿದರು.
    ಭದ್ರಾವತಿ, ನ. ೨೪: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾಯಂ ಕಾರ್ಮಿಕರು, ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರು ಮತ್ತು ಕುಟುಂಬ ವರ್ಗದವರು ಸಾಮಾಜಿಕ ಕಳಕಳಿಯೊಂದಿಗೆ ಸ್ವಯಂ ಪ್ರೇರಣೆಯಿಂದ ನೇತ್ರದಾನ ನೋಂದಾಣಿಗೆ ಮುಂದಾಗುವ ಮೂಲಕ ಗಮನ ಸೆಳೆದಿದ್ದಾರೆ.
    ಬುಧವಾರ ಕಾರ್ಖಾನೆಯ ಎಚ್‌ಆರ್‌ಡಿ ಕೇಂದ್ರದಲ್ಲಿ ಸಾರ್ವಜನಿಕ ಸಂಪರ್ಕ ಮತ್ತು ಮಾನವ ಸಂಪನ್ಮೂಲ ಇಲಾಖೆ,  ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ನಗರದ ನಯನ ಆಸ್ಪತ್ರೆ ಸಹಯೋಗದೊಂದಿಗೆ ಆಜಾದಿ ಕ ಅಮೃತ್ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಪ್ರತಿಜ್ಞೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು ೨೦೨ ಮಂದಿ ನೇತ್ರದಾನ ನೋಂದಾಣಿ ಮಾಡುವ ಮೂಲಕ ವಿಶೇಷವಾಗಿ ನೇತ್ರದಾನದ ಬಗ್ಗೆ ಸಮಾಜದಲ್ಲಿ ಹೊಂದಿರುವ ತಪ್ಪು ಕಲ್ಪನೆಗಳಿಂದ ಹೊರಬರುವಂತೆ ಜಾಗೃತಿ ಮೂಡಿಸಿದರು.
    ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ರಕ್ಷಿತ್ ಮಾತನಾಡಿ, ನೇತ್ರಗಳ ಸಂಗ್ರಹಣೆ, ದಾಸ್ತಾನು ಮತ್ತು ನೇತ್ರ ರಹಿತರಿಗೆ ಬಳಸುವಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ಕಾರ್ಯದ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ನೇತ್ರದಾನ ಮಾಡುವ ಪ್ರತಿಜ್ಞೆ ತೆಗೆದುಕೊಂಡ ಕಾರ್ಖಾನೆಯ ಸಮುದಾಯದ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು.  
ನಯನ ಆಸ್ಪತ್ರೆಯ ನೇತ್ರ ತಜ್ಞ ಡಾ. ಕುಮಾರಸ್ವಾಮಿ ನೇತ್ರದಾನದ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳ ಕುರಿತು ಮಾತನಾಡಿದರು. ಜೊತೆಗೆ ಭದ್ರಾವತಿಯ ಸುತ್ತಮುತ್ತಲಿನ ದಾನಿಗಳಿಂದ ನೇತ್ರಗಳನ್ನು ಸಂಗ್ರಹಿಸಿ, ಅದನ್ನು ಶಂಕರ ಕಣ್ಣಿನ ಆಸ್ಪತ್ರೆಗೆ ತಲುಪಿಸುವಲ್ಲಿ ನಯನ ಆಸ್ಪತ್ರೆಯ ಪಾತ್ರದ ಬಗ್ಗೆ ಮಾಹಿತಿ ನೀಡಿದರು.  
    ನೇತ್ರದಾನ ನೋಂದಾಣಿ ಅರ್ಜಿಗಳನ್ನು ಶಂಕರ ಕಣ್ಣಿನ ಆಸ್ಪತ್ರೆಗೆ ಹಸ್ತಾಂತರಿಸಿ ಮಾತನಾಡಿದ ಕಾರ್ಖಾನೆಯ ಪ್ರಭಾರ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ,  ಸಮುದಾಯದ ಉದಾತ್ತ ಕಾರ್ಯವಾದ ನೇತ್ರದಾನ ಮಾಡುವುದರ ಬಗ್ಗೆ ಕೈಗೊಂಡ ಪ್ರತಿಜ್ಞೆಗೆ ಪ್ರಶಂಸೆ ವ್ಯಕ್ತಪಡಿಸಿದರು. ಈ ರೀತಿಯ ಕಾರ್ಯಕ್ರಮಗಳಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಅಂಧತ್ವ ನಿರ್ಮೂಲನೆ ಮಾಡಬಹುದೆಂಬ ವಿಶ್ವಾಸವಿದೆ ಎಂದರು.  ವಿಐಎಸ್‌ಎಲ್ ವತಿಯಿಂದ ಮುಂದಿನ ದಿನಗಳಲ್ಲಿ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ನೆರವಾಗುವಂತೆ ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
    ಸಿಬ್ಬಂದಿ ಮತ್ತು ಆಡಳಿತ ವಿಭಾಗದ ಪ್ರಭಾರ ಮಹಾಪ್ರಬಂಧಕ ಪಿ.ಪಿ. ಚಕ್ರವರ್ತಿ,  ವಿಐಎಸ್‌ಎಲ್ ಆಸ್ಪತ್ರೆಯ ವೈಧ್ಯಕೀಯ ಮುಖ್ಯಸ್ಥ ಡಾ. ಎಂ.ವೈ. ಸುರೇಶ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಅಧ್ಯಕ್ಷ ಲೋಕನಾಥ್, ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್, ವಿವಿಧ ವಿಭಾಗಗಳ ಅಧಿಕಾರಿಗಳು, ಕಾರ್ಮಿಕ ಹಾಗು ಅಧಿಕಾರಿಗಳ ಸಂಘ ಮತ್ತು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್.ಎಸ್ ರಮೇಶ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಭದ್ರಾವತಿ, ನ. 24:  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಳಕೆದಾರರ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಪಶು ವೈದ್ಯಕೀಯ ಇಲಾಖೆಯ   ಎನ್.ಎಸ್ ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.    ಈಗಾಗಲೇ ಸಂಘದ ಅಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಸುಧೀಂದ್ರರೆಡ್ಡಿ ಆಯ್ಕೆಯಾಗಿದ್ದರು. ಉಪಾಧ್ಯಕ್ಷರ ಸ್ಥಾನ ತೆರವಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಸೋನಾಲ್ ಜಾಧವ್ ಕರ್ತವ್ಯ ನಿರ್ವಹಿಸಿದರು. 
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಎ.ಜಿ ರಂಗನಾಥಪ್ರಸಾದ್, ರಾಜಪ್ಪ, ಎ. ತಿಪ್ಪೇಸ್ವಾಮಿ, ಮಂಜುನಾಥ್, ಪ್ರಕಾಶ್, ಹನುಮಂತಪ್ಪ ಮತ್ತು ಪುಟ್ಟಲಿಂಗಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಮಧುಮೇಹಕ್ಕೆ ನಮ್ಮ ತಪ್ಪು ಜೀವನ ಶೈಲಿಯೇ ಕಾರಣ : ಡಾ. ವೀಣಾ ಎಸ್ ಭಟ್

ಭಾರತೀಯ ವೈದ್ಯಕೀಯ ಸಂಘ(ಐಎಂಎ) ತಾಲೂಕು ಶಾಖೆ, ಮಹಿಳಾ ಘಟಕ, ಶಿವಮೊಗ್ಗ ಮಲ್ನಾಡ್ ಆಫ್ತಾಲ್‌ಮಿಕ್ ಅಸೋಸಿಯೇಷನ್, ಸ್ತ್ರೀ ರೋಗ ತಜ್ಞರ ಸಂಘ, ಐತಾಳ್ ಚಾರಿಟೇಬಲ್ ಟ್ರಸ್ಟ್ ಮತ್ತು ಮಹಿಳಾ ಆರೋಗ್ಯ ವೇದಿಕೆ ವತಿಯಿಂದ ಭದ್ರಾವತಿ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ವಿಶ್ವ ಮಧುಮೇಹ ದಿನಚರಣೆ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ನ. ೨೪: ಹೆಚ್ಚುತ್ತಿರುವ ಮಧುಮೇಹಕ್ಕೆ ನಮ್ಮ ತಪ್ಪು ಜೀವನ ಶೈಲಿಯೇ ಕಾರಣವಾಗಿದ್ದು, ಪ್ರಸ್ತುತ ಆಹಾರದಲ್ಲಿ ಹೆಚ್ಚುತ್ತಿರುವ ಅಧಿಕ ಶರ್ಕರ ಪಿಷ್ಠ(ಕಾರ್ಬೋಹೈಡ್ರೇಟ್) ಬಳಕೆಯನ್ನು ಕಡಿಮೆಮಾಡಿ ಬದಲಾಗಿ ಬೇಳೆಕಾಳುಗಳು, ತರಕಾರಿ, ಮೊಳಕೆಕಾಳು, ಹಸಿರು ಸೊಪ್ಪುಗಳನ್ನು ಸೇವಿಸುವುದು ಮತ್ತು ನಿಯಮಿತ ವ್ಯಾಯಾಮ ಹಾಗು ವೈದ್ಯರ ಸಲಹೆ ಮೇರೆಗೆ ಸೂಕ್ತಚಿಕಿತ್ಸೆ, ಇವೆಲ್ಲವುಗಳಿಂದ ಮಧುಮೇಹ ನಿಯಂತ್ರಣ ಸಾಧ್ಯ ಎಂದು ಮಹಿಳಾ ವೇದಿಕೆ ಅಧ್ಯಕೆ ಡಾ. ವೀಣಾ ಎಸ್ ಭಟ್ ಹೇಳಿದರು.
    ಅವರು ವಿಶ್ವ ಮಧುಮೇಹ ದಿನಚರಣೆಯ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ತಾಲೂಕು ಶಾಖೆ, ಮಹಿಳಾ ಘಟಕ, ಶಿವಮೊಗ್ಗ ಮಲ್ನಾಡ್ ಆಫ್ತಾಲ್‌ಮಿಕ್ ಅಸೋಸಿಯೇಶನ್, ಸ್ತ್ರೀ ರೋಗ ತಜ್ಞರ ಸಂಘ, ಐತಾಳ್ ಚಾರಿಟೇಬಲ್ ಟ್ರಸ್ಟ್ ಮತ್ತು ಮಹಿಳಾ ಆರೋಗ್ಯ ವೇದಿಕೆ ವತಿಯಿಂದ ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ರಕ್ತದಲ್ಲಿನ ಗ್ಲೂಕೋಸ್ ಅಂಶದ ಪರೀಕ್ಷೆ, ಕಣ್ಣಿನ ಅಕ್ಷಿಪಟ್ಟಲದ ಬೇನೆ ತಪಾಸಣೆ ಹಾಗೂ ಮಧುಮೇಹ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಧುಮೇಹ ನಿಯಂತ್ರಣದಿಂದ ಕಣ್ಣು, ಹೃದಯ, ನರವ್ಯೂಹ, ಮೂತ್ರಪಿಂಡ, ಕಾಲಿನ ರಕ್ತನಾಳ ಹೀಗೆ ಬಹುಅಂಗಾಗಳಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದಾಗಿದೆ ಎಂದರು.
    ಐಎಂಎ ಕಾರ್ಯದರ್ಶಿ, ಮೂಳೆ ರೋಗ ತಜ್ಞ ಡಾ. ರಾಮಚಂದ್ರ ಕಾಮತ್ ಮಾತನಾಡಿ, ಮಧುಮೇಹ ಕಾಣಿಸಿಕೊಂಡವರಲ್ಲಿ ಸ್ನಾಯು ಹಾಗೂ ಮೂಳೆಗಳ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಬೊಜ್ಜು ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ  ಪ್ರಮುಖ ವೈರಿಯಾಗಿದ್ದು, ಈ ಹಿನ್ನಲೆಯಲ್ಲಿ ದೇಹದ ಸಮತೂಕ ನಿರ್ವಹಣೆಗೆ ಹೆಚ್ಚಿನ ಗಮನ ಹರಿಸಬೇಕೆಂದರು.
    ಐಎಂಎ ಉಪಾಧ್ಯಕ್ಷೆ ಡಾ. ಕವಿತಾಭಟ್ ಮಾತನಾಡಿ, ಸದ್ದಿಲ್ಲದೇ ನಮ್ಮನ್ನು ಆಕ್ರಮಿಸುವ ಮಧುಮೇಹ ಪತ್ತೆ ಹಚ್ಚಲು ಪ್ರತಿಯೊಬ್ಬರು ೨೫ ವರ್ಷಗಳ ನಂತರ ವಷಕ್ಕೊಮ್ಮೆಯಾದರೂ ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷಿಸಿಕೊಳ್ಳುತ್ತಿರಬೇಕು. ಜೀವನಶೈಲಿ ಬದಲಿಸಿಕೊಳ್ಳದ್ದಿದ್ದರೆ ಬಹಳಷ್ಟು ಆರೋಗ್ಯ ಸಮಸ್ಯೆಯನ್ನು ಮುಂದಿನ ಪೀಳಿಗೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಮಕ್ಕಳ ತಜ್ಞ ಡಾ. ಮಲ್ಲಿಕಾರ್ಜುನ್ ಸಾಲೇರ ಮಾತನಾಡಿ, ಪ್ರಸ್ತುತ  ಚಿಕ್ಕ ಮಕ್ಕಳಲ್ಲಿ ಸಹ ಮಧುಮೇಹ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.  
ಐಎಂಎ ತಾಲೂಕು ಅಧ್ಯಕ್ಷ, ನೇತ್ರ ತಜ್ಞ  ಡಾ. ಕುಮಾರ ಸ್ವಾಮಿ ಮಾತನಾಡಿದರು. ಮಹಿಳಾ ಆರೋಗ್ಯ ವೇದಿಕೆ ಕಾರ್ಯದರ್ಶಿ     ಡಾ. ಆಶಾ ಸ್ವಾಗತಿಸಿ ವಂದಿಸಿದರು. ೫೦ಕ್ಕೂ ಹೆಚ್ಚು ಜನರಿಗೆ ಉಚಿತ ಅಕ್ಷಿಪಟಲ ತಪಾಸಣೆ ಹಾಗೂ ರಕ್ತ ತಪಾಸಣೆ ನಡೆಸಲಾಯಿತು. ಅಲ್ಲದೆ ಸೂಕ್ತ ಸಲಹೆ ಸೂಚನೆ ನೀಡಲಾಯಿತು.

Tuesday, November 23, 2021

ಕೆಸರಿನ ಗದ್ದೆಯಂತಾದ ರಸ್ತೆ : ಗ್ರಾಮಸ್ಥರ ಸಂಚಾರಕ್ಕೆ ತೊಂದರೆ


ಭದ್ರಾವತಿ ತಾಲೂಕಿನ ಸಂಜೀವ ನಗರದಿಂದ ಕೊಮಾರನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಪರ್ಕಗೊಂಡಿರುವ ರಸ್ತೆ ಸುಮಾರು ೫ ವರ್ಷಗಳಿಂದ ಹಾಳಾಗಿದ್ದು, ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿ ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗಿದೆ.
    ಭದ್ರಾವತಿ, ನ. ೨೩: ತಾಲೂಕಿನ ಸಂಜೀವ ನಗರದಿಂದ ಕೊಮಾರನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಪರ್ಕಗೊಂಡಿರುವ ರಸ್ತೆ ಸುಮಾರು ೫ ವರ್ಷಗಳಿಂದ ಹಾಳಾಗಿದ್ದು, ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿ ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗಿದೆ.
    ಸಂಜೀವ ನಗರದಿಂದ ಕೊಮಾರನಹಳ್ಳಿಗೆ ಸಂಚರಿಸಲು ಇರುವ ಪ್ರಮುಖ ರಸ್ತೆ ಇದಾಗಿದ್ದು, ತುಂಬಾ ಹಾಳಾಗಿ ಅಲ್ಲಲ್ಲಿ ಬಾರಿ ಗಾತ್ರದ ಗುಂಡಿಗಳು ಬಿದ್ದಿವೆ. ಜೊತೆಗೆ ಜಲ್ಲಿಕಲ್ಲು ಕಿತ್ತುಕೊಂಡು ಹೊರಬಂದಿವೆ. ಮಳೆಯಿಂದಾಗಿ ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗುತ್ತಿದೆ.
    ಈ ರಸ್ತೆಯನ್ನು ತಕ್ಷಣ ದುರುಸ್ತಿಪಡಿಸುವಂತೆ ಸಂಬಂಧಪಟ್ಟ ಇಲಾಖೆಯವರಿಗೆ, ಸ್ಥಳೀಯ ಪಂಚಾಯಿತಿ ಸದಸ್ಯರಿಗೆ ಹಾಗು ಶಾಸಕರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ : ಜಂತುಹುಳು ಬಾಧೆಯಿಂದ ಎಚ್ಚರವಹಿಸಿ

ಕಾಗದ ನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎಂ. ಅಶೋಕ್

ಭದ್ರಾವತಿ ಕಾಗದ ನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿದರು.
    ಭದ್ರಾವತಿ, ನ. ೨೩:  ಜಂತುಹುಳುವಿನ ಬಾಧೆಯಿಂದ ಮಕ್ಕಳಲ್ಲಿ ರಕ್ತಹೀನತೆ, ಪೋಷಕಾಂಶದ ಕೊರತೆ, ಹಸಿವಾಗದಿರುವುದು, ನಿಶ್ಯಕ್ತಿ ಮತ್ತು ಆತಂಕ, ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವುದು ಇತ್ಯಾದಿ ರೋಗಲಕ್ಷಣಗಳು ಕಾಣಿಸಿಕೊಳ್ಳಲಿವೆ.  ಈ ರೋಗ ಲಕ್ಷಣಗಳನ್ನು ನಿಯಂತ್ರಿಸಲು ಮಕ್ಕಳಿಗೆ ವಯಸ್ಸಿಗೆ ಅನುಗುಣವಾಗಿ ಜಂತುಹುಳು ಮಾತ್ರೆ ನೀಡಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.
    ಅವರು ಮಂಗಳವಾರ ಕಾಗದ ನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಜಂತುಹುಳು ಮಾತ್ರೆ ಸೇವನೆಯಿಂದ ರಕ್ತಹೀನತೆ ನಿಯಂತ್ರಿಸುವ ಜೊತೆಗೆ ಪೋಷಕಾಂಶದ ಸುಧಾರಣೆ ಮತ್ತು ಕಲಿಕೆಯಲ್ಲಿ ಏಕಾಗ್ರತೆ ಉಂಟಾಗುತ್ತದೆ ಎಂದರು.
   ಪ್ರಾಂಶುಪಾಲ ಆರ್ ಸತೀಶ್ ಮಾತನಾಡಿ, ಸರ್ಕಾರದಿಂದ ಸಿಗುವ ಜಂತುಹುಳು ಮಾತ್ರೆ ಸದುಪಯೋಗಪಡಿಸಿಕೊಂಡು ಆರೋಗ್ಯ ಸುಧಾರಣೆ ಮಾಡಿಕೊಳ್ಳುವ ಜೊತೆಗೆ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು. ಕುಡಿಯಲು ಶುದ್ಧವಾದ ನೀರು ಬಳಸಬೇಕು. ಆಹಾರ ಸೇವಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಾಲಯ ಬಳಸಿದ ನಂತರ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು ಸೇರಿದಂತೆ ಇತ್ಯಾದಿ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಾ. ದತ್ತಾತ್ರೇಯ, ಹಿರಿಯ ಆರೋಗ್ಯ ಸಹಾಯಕಿಯರಾದ ರೇವತಿ, ಪ್ರಭಾವತಿ, ಇಂದ್ರ, ಅಂಕಿತ, ಮಮತಾ, ಹೆನ್ರಿ,  ದೈಹಿಕ ಶಿಕ್ಷಕ ಸಿದ್ದಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಒಕ್ಕಲಿಗರ ಸಂಘದ ಚುನಾವಣೆ : ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ನಾಮಪತ್ರ ಸಲ್ಲಿಕೆ

ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಶಿವಮೊಗ್ಗ-ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವ್ಯಾಪ್ತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಮಂಗಳವಾರ ಭದ್ರಾವತಿ ತಾಲೂಕು ಒಕ್ಕಲಿಗರ ಸಂಘ ಪ್ರತಿನಿಧಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ನಾಮಪತ್ರ ಸಲ್ಲಿಸಿದರು.
    ಭದ್ರಾವತಿ, ನ. ೨೩: ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಶಿವಮೊಗ್ಗ-ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವ್ಯಾಪ್ತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಮಂಗಳವಾರ ತಾಲೂಕು ಒಕ್ಕಲಿಗರ ಸಂಘ ಪ್ರತಿನಿಧಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ನಾಮಪತ್ರ ಸಲ್ಲಿಸಿದರು.
    ಒಕ್ಕಲಿಗ ಸಮುದಾಯದವರು ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ನಂತರ ಹೆಚ್ಚಿನ ಸಂಖ್ಯೆಯಲ್ಲಿ ೨ನೇ ಸ್ಥಾನದಲ್ಲಿದ್ದರೂ ಸಹ ತಾಲೂಕಿನಿಂದ ಇಲ್ಲಿಯವರೆಗೂ ನಿರ್ದೇಶಕರ ಸ್ಥಾನಕ್ಕೆ ಯಾರೊಬ್ಬರೂ ಸಹ ಆಯ್ಕೆಯಾಗದಿರುವುದು ಇಲ್ಲಿನ ಒಕ್ಕಲಿಗ ಸಮುದಾಯದವರಿಗೆ ಸವಾಲಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಹೇಗಾದರೂ ಮಾಡಿ ನಿರ್ದೇಶಕರ ಸ್ಥಾನ ತನ್ನದಾಗಿಸಿಕೊಳ್ಳಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕು ಒಕ್ಕಲಿಗರ ಸಂಘ ಈ ಬಾರಿ ಮುಂಚೂಣಿಗೆ ಬಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಅವರನ್ನು ಅಧಿಕೃತವಾಗಿ ಕಣಕ್ಕಿಳಿಸಿದೆ.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ಸದಸ್ಯ, ಸಹಕಾರಿ ಧುರೀಣ ಜೆ.ಪಿ ಯೋಗೇಶ್, ೩೩ನೇ ವಾರ್ಡಿನ ನಗರಸಭಾ ಸದಸ್ಯ ಆರ್. ಮೋಹನ್‌ಕುಮಾರ್,  ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್ ಮತ್ತು ಪ್ರಗತಿಪರ ಹೋರಾಟಗಾರ, ಮುಖಂಡ ಬಾಲಕೃಷ್ಣ ಸೇರಿದಂತೆ ಇನ್ನಿತರರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ತೀವ್ರ ಪೈಪೋಟಿಗೆ ಮುಂದಾಗಿದ್ದರು.
    ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ೨ ದಿನಗಳು ಮಾತ್ರ ಬಾಕಿ ಉಳಿದಿದ್ದ ಹಿನ್ನಲೆಯಲ್ಲಿ ಸೋಮವಾರ ಅಪ್ಪರ್‌ಹುತ್ತಾ ಅನನ್ಯ ವಿದ್ಯಾಸಂಸ್ಥೆ ಆವರಣದಲ್ಲಿ ಸಮುದಾಯದವರ ಬಹಿರಂಗ ಸಭೆ ನಡೆಸುವ ಮೂಲಕ ಅಂತಿಮವಾಗಿ ಎಸ್. ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
    ಎಸ್. ಕುಮಾರ್ ಸಮುದಾಯದ ಪ್ರಮುಖರಾದ ಶಾರದ ಅಪ್ಪಾಜಿ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಂಜುಂಡೇಗೌಡ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಮುಖಂಡರಾದ ಪದ್ಮನಾರಾಯಣ, ಭಾಗ್ಯಮ್ಮ, ಅನಿಲ್‌ಕುಮಾರ್, ಉಮೇಶ್ ಸೇರಿದಂತೆ ಇನ್ನಿತರರೊಂದಿಗೆ ನಾಮಪತ್ರ ಸಲ್ಲಿಸಿದರು.
    ಈ ನಡುವೆ ೩೩ನೇ ವಾರ್ಡಿನ ನಗರಸಭಾ ಸದಸ್ಯ ಆರ್. ಮೋಹನ್‌ಕುಮಾರ್ ಸಹ ಮಂಗಳವಾರ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದು, ನನ್ನ ಸ್ಪರ್ಧೆ ವೈಯಕ್ತಿಕವಾಗಿದೆ. ಯಾರ ವಿರುದ್ಧವೂ ನಾನು ಸ್ಪರ್ಧಿಸುತ್ತಿಲ್ಲ ಎಂದು ಆರ್. ಮೋಹನ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.

Monday, November 22, 2021

ಜಗತ್ತಿನ ಪ್ರಮುಖ ೨೫ ಭಾಷೆಗಳಲ್ಲಿ ಕನ್ನಡಕ್ಕೆ ಸ್ಥಾನ ಹೆಮ್ಮೆಯ ವಿಚಾರ : ಟಿ. ಮಲ್ಲಿಕಾರ್ಜುನ್

ಭದ್ರಾವತಿಯಲ್ಲಿ ಭೂಮಿಕಾ ವೇದಿಕೆ ವತಿಯಿಂದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಜಾನಪದ ಸಂಜೆ ಕಾರ್ಯಕ್ರಮದಲ್ಲಿ  ಶಿವಮೊಗ್ಗ ಜಾವಳ್ಳಿ ಜ್ಞಾನದೀಪ ಎಸ್.ಎಸ್ ಶಾಲೆಯ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಗಾಯಕ ಟಿ. ಮಲ್ಲಿಕಾರ್ಜುನ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ನ. ೨೨: ಕನ್ನಡ ಭಾಷೆಗೆ ಸುಮಾರು ೨೫೦೦ ವರ್ಷಗಳ ಇತಿಹಾಸವಿದ್ದು, ಜಗತ್ತಿನ ಪ್ರಮುಖ ೨೫ ಭಾಷೆಗಳಲ್ಲಿ ಕನ್ನಡ ಸಹ ಒಂದಾಗಿರುವುದು  ಹೆಮ್ಮೆಯ ವಿಚಾರವಾಗಿದೆ ಎಂದು ಶಿವಮೊಗ್ಗ ಜಾವಳ್ಳಿ ಜ್ಞಾನದೀಪ ಎಸ್.ಎಸ್ ಶಾಲೆಯ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಗಾಯಕ ಟಿ. ಮಲ್ಲಿಕಾರ್ಜುನ್ ಹೇಳಿದರು.
    ಭೂಮಿಕಾ ವೇದಿಕೆ ವತಿಯಿಂದ ನಗರದ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಮತ್ತು ಜಾನಪದ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಕನ್ನಡದ ಅತ್ಯಂತ ಪ್ರಾಚೀನ ಗ್ರಂಥವಾಗಿರುವ ಕವಿರಾಜಮಾರ್ಗ, ಗದ್ಯ ಕೃತಿ ವಡ್ಡಾರಾಧನೆ, ಪಂಪ, ರನ್ನರ ಕಾವ್ಯಗಳು ಕನ್ನಡ ಭಾಷೆ, ಸಾಹಿತ್ಯ ಅತ್ಯಂತ ಪ್ರಾಚೀನ ವಾದ್ದದ್ದು ಎಂಬುದಕ್ಕೆ ಸಾಕ್ಷಿಗಳಾಗಿವೆ ಎಂದರು.
    ಈ ನಡುವೆ ೧೨ನೇ ಶತಮಾನದಲ್ಲಿ ಜನರ ಭಾವನೆಯನ್ನು, ಭಕ್ತಿಯನ್ನು ಸರಳವಾಗಿ ಹೇಳುವ ವಚನ ಸಾಹಿತ್ಯ, ಹರಿಹರ, ರಾಘವಾಂಕ, ಕನಕದಾಸ, ಪುರಂದರ ದಾಸರು ಸೇರಿದಂತೆ ದಾಸಾದಿಗಳ ಸಾಹಿತ್ಯ, ಕನ್ನಡದ ಸಾಂಗತ್ಯ ಕವಿಗಳಲ್ಲಿ ಅಗ್ರಗಣ್ಯನಾದ ರತ್ನಾಕರವರ್ಣಿಯವರ ಕೃತಿಗಳು, ಹಳೇಗನ್ನಡ, ಹೊಸಗನ್ನಡ, ನವೋದಯ, ನವ್ಯ, ಪ್ರಗತಿಶೀಲ ಹಾಗು ಜಾನಪದ ಸಾಹಿತ್ಯಗಳು ಕನ್ನಡ ಭಾಷೆ, ಸಾಹಿತ್ಯಕ್ಕೆ ಮತ್ತಷ್ಟು ಮೆರಗು ತಂದುಕೊಟ್ಟಿವೆ ಎಂದರು.
    ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಾನಪದ ಗಾಯನ, ನೃತ್ಯ ರೂಪಕ, ಒಗಟು, ಕೋಲಾಟ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ಡಾ. ವೀಣಾಭಟ್ ಸ್ವಾಗತಿಸಿ, ಡಾ. ಎಚ್.ವಿ ನಾಗರಾಜ್ ವಂದಿಸಿದರು. ಶಾರದ ಶ್ರೀನಿವಾಸ್ ನಿರೂಪಿಸಿದರು. ವೇದಿಕೆ ಕಾರ್ಯದರ್ಶಿ ಮುನಿರಾಜ್ ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಚಲನಚಿತ್ರ ನಟ, ಸಮಾಜಸೇವಕ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ  ಸಂತಾಪ ಸೂಚಿಸಿ ಗೌರವ ಸಲ್ಲಿಸಲಾಯಿತು.






ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ : ೨೦ ಜನರ ವಿರುದ್ಧ ಪ್ರಕರಣ ದಾಖಲು

    ಭದ್ರಾವತಿ, ನ. ೨೨: ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಈ ಸಂಬಂಧ ಕಳೆದ ೩ ದಿನಗಳ ಹಿಂದೆ ನ.೧೯ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮದುವೆಗೆ ಸಹಕರಿಸಿದ ೨೦ ಜನರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಸೊರಬ ತಾಲೂಕಿನ ಅಪ್ರಾಪ್ತ ಬಾಲಕಿಯೊಂದಿಗೆ ತಾಲೂಕಿನ ಯುವಕನೋರ್ವ ನಾಗತಿಬೆಳಗಲು ಗ್ರಾಮದ ಸಮುದಾಯ ಭವನದಲ್ಲಿ ನ.೧೩ರಂದು ವಿವಾಹವಾಗಿದ್ದು, ಬಾಲ್ಯ ವಿವಾಹ ಎಂಬುದು ಖಚಿತವಾದ ಹಿನ್ನಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ ಹಾಗು ಪೊಲೀಸರು ಅಪ್ರಾಪ್ತ ಬಾಲಕಿ ರಕ್ಷಣೆಗೆ ಮುಂದ್ದಾಗಿದ್ದರು. ಆದರೆ ಸಂಬಂಧಿಕರು ಯಾವುದೇ ದೂರು ಕೊಡಲು ಮುಂದಾಗದ ಹಿನ್ನಲೆಯಲ್ಲಿ ಅಂತಿಮವಾಗಿ ಪೊಲೀಸರು ಬಾಲಕಿಯ ಹೇಳಿಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ. ಬಾಲಕಿಯನ್ನು ಶಿವಮೊಗ್ಗ ಸುರಭಿ ಉಜ್ವಲ ಕೇಂದ್ರಕ್ಕೆ ದಾಖಲಿಸಲಾಗಿದೆ.
    ಮದುವೆಗೆ ಸಹಕರಿಸಿದ ಅಪ್ರಾಪ್ತೆ ಬಾಲಕಿ ಹಾಗು ಯುವಕನ ಪೋಷಕರು, ಸಂಬಂಧಕರು,  ಸಮುದಾಯ ಭವನದ ಆಡಳಿತ ಮಂಡಳಿ ಅಧ್ಯಕ್ಷರು, ಖಜಾಂಚಿ ಹಾಗು ವ್ಯವಸ್ಥಾಪಕರು ಮತ್ತು ಮದುವೆ ಶಾಸ್ತ್ರ ನೆರವೇರಿಸಿಕೊಟ್ಟಿರುವ ಅರ್ಚಕರು ಸೇರಿದಂತೆ ಒಟ್ಟು ೨೦ ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎನ್ನಲಾಗಿದೆ.  

ಕನಕದಾಸರ ಸಂದೇಶ ಸಾರ್ಥಕಗೊಳಿಸುವ ಕಾರ್ಯ ಶ್ಲಾಘನೀಯ : ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ


ಭದ್ರಾವತಿಯಲ್ಲಿ ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ಸೋಮವಾರ ನಗರದ ರಂಗಪ್ಪ ವೃತ್ತದಲ್ಲಿ ಎಲ್ಲಾ ಜಾತಿ, ಸಮುದಾಯದವರೊಂದಿಗೆ ಒಗ್ಗೂಡಿ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ತಾವರೆಕರೆ ಶ್ರೀಗಳು ಹಾಗೂ ಬಿಳಿಕಿ ಶ್ರೀಗಳು ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ, ನ. ೧೧: ನಾವುಗಳು ಪುಸ್ತಕದಲ್ಲಿ ಓದಿ ತಿಳಿದುಕೊಂಡಿರುವ ಸಮಾಜದಲ್ಲಿ ಯಾವುದೇ ಜಾತಿ ಇಲ್ಲ. ಎಲ್ಲರೂ ಒಂದೇ ಎಂಬ ಕನಕದಾಸರ ಸಂದೇಶವನ್ನು ಉಕ್ಕಿನ ನಗರದಲ್ಲಿ ಇಂದು ಸನಾತನ ಹಿಂದೂ ಸಮಾಜ ಪರಿಷತ್ ಸಾರ್ಥಕಗೊಳಿಸುವ ಕಾರ್ಯ ಕೈಗೊಂಡಿರುವುದು ಶ್ಲಾಘನೀಯ ಎಂದು ತಾವರೆಕರೆ ಶಿಲಾ ಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
    ಶ್ರೀಗಳು ಸೋಮವಾರ ಸಂಜೆ ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ನಗರದ ರಂಗಪ್ಪವೃತ್ತದಲ್ಲಿ ಎಲ್ಲಾ ಜಾತಿ, ಸಮುದಾಯದವರೊಂದಿಗೆ ಒಗ್ಗೂಡಿ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
    ಜಗತ್ತಿಗೆ ಸಮಾನತೆ ಪರಿಕಲ್ಪನೆ ಸಾರಿದ ಕನಕದಾಸರು ಎಲ್ಲರಿಗೂ ಬೇಕು. ಭೂಮಿ ಇರುವುದು ಮಾನವ ಜಾತಿ ಮಾತ್ರ. ಮಾನವ ಜಾತಿಯಿಂದ ಮನುಷ್ಯ ಮಹಾದೇವನಾಗಿ ರೂಪುಗೊಳ್ಳಬೇಕು. ಈ ಮೂಲಕ ಸದೃಢ ಸಮಾಜ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾರ್ಯ ನಿರಂತರವಾಗಿ ನಡೆಯಬೇಕೆಂದರು.
      ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂ ಸಮಾಜದ ಎಲ್ಲಾ ಜಾತಿ ಸಮುದಾಯಗಳನ್ನು ಒಂದು ಗೂಡಿಸುವ ಕಾರ್ಯ ರಾಜ್ಯದಲ್ಲಿಯೇ ಮೊದಲ ಬಾರಿಗೆ ಉಕ್ಕಿನ ನಗರದಿಂದ ಕೈಗೊಂಡಿರುವುದು ಹೆಮ್ಮೆಯವಾಗಿದೆ. ಯಾವುದೇ ಕಾರ್ಯಕ್ಕೂ ಸಂಘಟನೆ ಬಹಳ ಮುಖ್ಯವಾಗಿದೆ. ಸಂಘಟನೆ ಮೂಲಕ ನಮ್ಮ ಗುರಿ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಮತ್ತಷ್ಟು ಸಂಘಟಿತರಾಗಬೇಕು. ಪ್ರಸ್ತುತ ಹಿಂದೂ ಸಮಾಜದಲ್ಲಿ ಮತಾಂತರ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕೆಂದರು.  
    ಪರಿಷತ್ ತಾಲೂಕು ಸಂಚಲನ ಸಮಿತಿ ಸದಸ್ಯ ಕೆ.ಎನ್ ಶ್ರೀಹರ್ಷ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
    ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಕುರುಬ ಸಮಾಜದ ಅಧ್ಯಕ್ಷ ಬಿ.ಎಂ ಸತೋಷ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ವಾಲ್ಮೀಕ ನಾಯಕ ಸಮಾಜದ ಬಸವರಾಜ ಬಿ. ಆನೇಕೊಪ್ಪ, ಭೋವಿ ಸಮಾಜದ ಜಿ. ಆನಂದಕುಮಾರ್, ಬ್ರಾಹ್ಮಣ ಸಮಾಜದ ರಮಾಕಾಂತ್, ಬಲಿಜ ಸಮಾಜದ ಅಧ್ಯಕ್ಷ ಸುಬ್ರಮಣ್ಯ, ಛಲವಾದಿ ಸಮಾಜದ ಅಧ್ಯಕ್ಷ ಚನ್ನಪ್ಪ, ದೇವಾಂಗ ಸಮಾಜದ ಅಧ್ಯಕ್ಷ ಎಂ. ಪ್ರಭಾಕರ್, ಪ್ರಮುಖರಾದ ಮಂಗೋಟೆ ರುದ್ರೇಶ್, ನಟರಾಜ್, ಸುಬ್ರಮಣ್ಯ, ಎಚ್. ರವಿಕುಮಾರ್, ಕೋಗಲೂರು ತಿಪ್ಪೇಸ್ವಾಮಿ, ಎಚ್. ತಿಮ್ಮಪ್ಪ, ಸಿ. ಚನ್ನಪ್ಪ, ಶಿವಾಜಿರಾವ್, ಸುಭಾಷ್, ಶ್ರೀನಿವಾಸ್, ಜಿಲ್ಲಾ ಯೂನಿಯನ್ ಬ್ಯಾಂಕ್ ದುಗ್ಗೇಶ್, ನಗರಸಭಾ ಸದಸ್ಯರಾದ ಕಾಂತರಾಜ್, ಶ್ರೇಯಸ್, ಪವನ್‌ಕುಮಾರ್ ಉಡುಪ ಸೇರಿದಂತೆ ಎಲ್ಲಾ ಜಾತಿ, ಸಮುದಾಯಗಳ ಪ್ರಮುಖರು ಪಾಲ್ಗೊಂಡಿದ್ದರು.

ವಿವಿಧೆಡೆ ದಾಸ ಶ್ರೇಷ್ಠ ಕನಕದಾಸರ ಜಯಂತಿ : ರೋಗಿಗಳಿಗೆ ಬ್ರೆಡ್, ಬಿಸ್ಕತ್ ವಿತರಣೆ, ಅನ್ನಸಂತರ್ಪಣೆ


ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
    ಭದ್ರಾವತಿ, ನ. ೨೨:  ದಾಸ ಶ್ರೇಷ್ಠ ಕನಕದಾಸರ ಜಯಂತಿ ನಗರದ ವಿವಿಧೆಡೆ ಅದ್ದೂರಿಯಾಗಿ ಜರುಗಿತು. ಜಯಂತಿ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
    ಕನಕ ಯುವಪಡೆ ಮತ್ತು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
    ಶಾಸಕ ಬಿ.ಕೆ ಸಂಗಮೇಶ್ವರ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ನಗರಸಭಾ ಸದಸ್ಯರಾದ ಶ್ರೇಯಸ್, ಕಾಂತರಾಜ್, ಅನಿತಾ ಮಲ್ಲೇಶ್, ಸುದೀಪ್‌ಕುಮಾರ್, ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಶಿವಣ್ಣಗೌಡ್ರು, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್‌ಕುಮಾರ್, ಕನಕ ಯುವಪಡೆ ಅಧ್ಯಕ್ಷ ಕುಮಾರ್(ಡೈರಿ) ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಕೇಶವ, ಕಾರ್ಯದರ್ಶಿ ಲೋಕೇಶ್, ಕಾನೂನು ಸಲಹೆಗಾರ ಹನುಮಂತ, ಸಹ ಕಾರ್ಯದರ್ಶಿ ಮಹಾದೇವ್ ಮತ್ತು  ಕಾರ್ಯದರ್ಶಿ ಶರತ್  ಹಾಗು ಕುರುಬ ಸಮಾಜ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
    ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕ ಸಮೀಪದ ವೃತ್ತದಲ್ಲಿ ಹಾಗು ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
        ಕನಕ ಆಟೋ ನಿಲ್ದಾಣದಲ್ಲಿ ಕನಕ ಜಯಂತಿ:
    ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದಲ್ಲಿರುವ ಕನಕ ಆಟೋ ನಿಲ್ದಾಣದಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಸ್ವರ ಸಂಗೀತ ಹಾಗು ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.



ಭದ್ರಾವತಿ ತಾಲೂಕು ಪಂಚಾಯಿತಿ ಕಛೇರಿ ಸಮೀಪದಲ್ಲಿರುವ ಕನಕ ಆಟೋ ನಿಲ್ದಾಣದಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಸ್ವರ ಸಂಗೀತ ಹಾಗು ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
    ಕನಕ ಆಟೋ ಚಾಲಕರ ಸಂಘದ ಅಧ್ಯಕ್ಷ ಸುರೇಶ್, ರವಿ, ರಮೇಶ್, ಚೇತನ್, ವೆಂಕಟೇಶ್, ತ್ಯಾಗರಾಜ್, ಮಂಜುನಾಥ್, ರಘು ದೇವರಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ :
    ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನಕದಾಸರ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಆಚರಿಸಲಾಯಿತು.


ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನಕದಾಸರ ಜಯಂತಿಯನ್ನು ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಆಚರಿಸಲಾಯಿತು.

    ತಹಸೀಲ್ದಾರ್ ಆರ್ ಪ್ರದೀಪ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭಾ ಸದಸ್ಯರಾದ ಜಾರ್ಜ್, ಟಿಪ್ಪುಸುಲ್ತಾನ್, ಸುದೀಪ್‌ಕುಮಾರ್, ಮೋಹನ್, ಬಿ. ಗಂಗಾಧರ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ಮಂಜಾನಾಯ್ಕ, ಅರಸು, ರಾಧಕೃಷ್ಣಭಟ್ ಸೇರಿದಂತೆ ಕಛೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.  

Sunday, November 21, 2021

ಸದೃಢ ಸಮಾಜ ನಿರ್ಮಾಣಕ್ಕೆ ದಾರ್ಶನಿಕರು, ಮಹಾತ್ಮರು, ಸಂತರನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನ

ನ.೨೨ರಂದು ಭದ್ರಾವತಿಯಲ್ಲಿ, ನ.೨೭ರಂದು ಶಿವಮೊಗ್ಗದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ : ಕೆ.ಎನ್ ಶ್ರೀಹರ್ಷ


ಸನಾತನ ಹಿಂದೂ ಸಮಾಜ ಪರಿಷತ್ ವತಿಯಿಂದ ಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಿಧ ಜಾತಿ, ಸಮುದಾಯಗಳ ಪ್ರಮುಖರು ಪಾಲ್ಗೊಂಡಿರುವುದು.  

    ಭದ್ರಾವತಿ, ನ. ೨೧: ಪುಣ್ಯ ಭೂಮಿಯಾದ ನಮ್ಮ ಭಾರತ ದೇಶದಲ್ಲಿ ಅನೇಕ ದಾರ್ಶನಿಕರು, ಮಹಾತ್ಮರು, ಸಂತರು ಮಾನವ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ಇವರೆಲ್ಲರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಭವಿಷ್ಯದಲ್ಲಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದೊಂದಿಗೆ ಜಿಲ್ಲೆಯಲ್ಲಿ ಸನಾತನ ಹಿಂದೂ ಸಮಾಜ ಪರಿಷತ್ ಅಸ್ತಿತ್ವಕ್ಕೆ ಬಂದಿದೆ. ಇದರ ಮೊದಲ ಉದ್ದೇಶ ನಗರದಲ್ಲಿ ನ.೨೨ರಂದು ಶ್ರೀ ಕನಕದಾಸರ ಜಯಂತಿ ಆಚರಣೆಯೊಂದಿಗೆ ಆರಂಭಗೊಳ್ಳಲಿದೆ ಎಂದು ಪರಿಷತ್ ತಾಲೂಕು ಸಂಚಲನಾ ಸಮಿತಿ ಸದಸ್ಯ ಕೆ.ಎನ್ ಶ್ರೀಹರ್ಷ ತಿಳಿಸಿದರು.
    ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾರ್ಶನಿಕರು, ಮಹಾತ್ಮರು, ಸಂತರನ್ನು ಆಯಾ ಸಮುದಾಯ, ಜಾತಿಗೆ ಸೀಮಿತವಾಗಿರಿಸುತ್ತಿರುವುದು ಸರಿಯಾದ ಸಂಗತಿಯಲ್ಲ. ಇವರು ಇಡೀ ಭಾರತೀಯ ಸಂಸ್ಕೃತಿಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದು,  ಇವರ ಸಂದೇಶಗಳನ್ನು ಸರ್ವವ್ಯಾಪಿಗೊಳಿಸುವ ಮೂಲಕ ಭವಿಷ್ಯದ ಸಮಾಜಕ್ಕೆ ತಿಳಿಸಿಕೊಡಬೇಕಾಗಿರುವುದು ಇಂದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಪರಿಷತ್ ಎಲ್ಲಾ ಜಾತಿ, ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಾಗಿದೆ ಎಂದರು.
    ಮುಂದಿನ ದಿನಗಳಲ್ಲಿ ಎಲ್ಲಾ ಜಾತಿ, ಸಮುದಾಯದವರು ಒಗ್ಗೂಡಿ ದಾರ್ಶನಿಕರು, ಮಹಾತ್ಮರು, ಸಂತರ ಜಯಂತಿಗಳನ್ನು ಕಡ್ಡಾಯವಾಗಿ ಆಚರಿಸುವಂತಾಗಬೇಕು. ಈ ಹಿನ್ನಲೆಯಲ್ಲಿ ನ.೨೭ರಂದು ಬೆಳಿಗ್ಗೆ ೧೦.೩೦ಕ್ಕೆ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶ್ರೀ ಕನಕದಾಸ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಪೂಜ್ಯ ಭಾರತ ಎಂಬ ಹೆಸರಿನಡಿ ಆಚರಿಸಲಾಗುತ್ತಿದೆ. ಶಿವಮೊಗ್ಗ ನಗರ ಭಜನಾ ಮಂಡಳಿಗಳ ಒಕ್ಕೂಟದ ಮಾತೆಯರಿಂದ ಕನಕದಾಸರ ಕೃತಿಗಳ ಸಮೂಹ ಗಾಯನ ನಡೆಯಲಿದೆ. ನಂತರ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರು ದಿವ್ಯ ಸಾನಿಧ್ಯವಹಿಸಲಿದ್ದು, ಶಿವಮೊಗ್ಗ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ಮತ್ತು ಹರಿಹರಪುರ ಶ್ರೀಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿರುವರು ಎಂದರು.
    ಇದೆ ರೀತಿ ನ.೨೨ರಂದು ಸಂಜೆ ೪ ಗಂಟೆಗೆ ನಗರದ ರಂಗಪ್ಪ ವೃತ್ತದಲ್ಲಿ ಕನಕದಾಸರ ಜಯಂತಿ ಆಚರಿಸಲಾಗುವುದು. ಎಲ್ಲಾ ಜಾತಿ, ಸಮುದಾಯವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಜಿಲ್ಲಾ ಸಂಚಾಲಕ ಡಾ. ಎಸ್. ದಿಲೀಪ್‌ಕುಮಾರ್ ಪಾಂಡೆ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಕುರುಬ ಸಮಾಜದ ಅಧ್ಯಕ್ಷ ಬಿ.ಎಂ ಸತೋಷ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಸೇರಿದಂತೆ ಇನ್ನಿತರರು ಮಾತನಾಡಿದರು.
    ವಿವಿಧ ಜಾತಿ, ಸಮುದಾಯಗಳ ಪ್ರಮುಖರಾದ ತೀರ್ಥಯ್ಯ, ಜಿ. ಸುರೇಶ್‌ಕುಮಾರ್, ಬಸವರಾಜ ಬಿ. ಆನೇಕೊಪ್ಪ, ಜಿ. ಆನಂದಕುಮಾರ್, ಸುಬ್ರಮಣ್ಯ, ಬಾಲಾಜಿ, ರಾಘವೇಂದ್ರ ಸರಾಟೆ, ಬಿ.ಎಸ್ ಮಂಜುನಾಥ್, ಲಕ್ಷ್ಮೀಕಾಂತ್, ಶಿವಾಜಿರಾವ್, ಸುಭಾಷ್, ಶ್ರೀನಿವಾಸ್, ಬದರಿನಾರಾಯಣ ಶ್ರೇಷ್ಠಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೇತ್ರದಾನ ಶ್ರೇಷ್ಠದಾನ : ನಟ ಪುನೀತ್‌ರಾಜ್‌ಕುಮಾರ್ ಕೊಡುಗೆ ಅಪಾರ

ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್


ಭದ್ರಾವತಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ನ. ೨೧: ಚಲನಚಿತ್ರ ನಟ ಪುನೀತ್‌ರಾಜ್‌ಕುಮಾರ್‌ರವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.
    ಅವರು ಭಾನುವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ರವರ ಸ್ಮರಣಾರ್ಥ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪುನೀತ್‌ರಾಜ್‌ಕುಮಾರ್‌ರವರು ಕೇವಲ ನಟರಾಗಿ ಮಾತ್ರವಲ್ಲದೆ ಹಲವಾರು ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವರನಟ ರಾಜ್‌ಕುಮಾರ್ ಅವರ ಕುಟುಂಬದವರು ನೇತ್ರದಾನ ಮಾಡುವ ಮೂಲಕ ಇತರರಿಗೆ ಬೆಳಕಾಗಿ ಇಂದಿಗೂ ನಮ್ಮೆಲ್ಲರ ನಡುವೆ ಉಳಿದುಕೊಂಡಿದ್ದಾರೆ. ದಾನಗಳಲ್ಲಿ ನೇತ್ರದಾನ ಶ್ರೇಷ್ಠವಾಗಿದ್ದು, ನಮ್ಮ ಸಾವಿನ ನಂತರ ಮಣ್ಣಲ್ಲಿ ಮಣ್ಣಾಗಿ ಹೋಗುವ ನೇತ್ರಗಳನ್ನು ಇತರರಿಗೆ ದಾನ ಮಾಡಿ ಅವರ ಮೂಲಕ ಜೀವಂತವಾಗಿ ಉಳಿದುಕೊಳ್ಳುವಂತಹ ವ್ಯಕ್ತಿಗಳು ನಾವಾಗಬೇಕು. ನೇತ್ರದಾನ ಅಭಿಯಾನದಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಈ ಮೂಲಕ ಸಮಾಜದಲ್ಲಿ ಅಂಧತ್ವ ನಿವಾರಣೆಯಾಗಬೇಕೆಂದರು.
    ಇದಕ್ಕೂ ಮೊದಲು ಉದ್ಯಮಿ ಬಿ.ಕೆ ಜಗನ್ನಾಥ, ಪ್ರಗತಿಪರ ಸಂಘಟನೆಗಳ ಮುಖಂಡರಾದ ಸುರೇಶ್, ಈ.ಬಿ ಬಸವರಾಜ್, ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ,  ಶಿಕ್ಷಕ ಎ. ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.
    ನೇತ್ರದಾನ ಅಭಿಯಾನದ ಜೊತೆಗೆ ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರಿಂದ ಪುನೀತ್‌ರಾಜ್‌ಕುಮಾರ್‌ರವರ ಅಭಿನಯದ ಚಲನಚಿತ್ರಗಳ ಸುಮಧುರ ಗೀತೆಗಳೊಂದಿಗೆ ಗೀತಾ ನಮನ, ಹಾಗು ಪುಷ್ಪ ನಮನ ಕಾರ್ಯಕ್ರಮಗಳು ಜರುಗಿದವು.  
    ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸೇರಿದಂತೆ ಸಾರ್ವಜನಿಕರು ನೇತ್ರದಾನ ನೋಂದಾಣಿ ಮಾಡಿಸಿಕೊಂಡರು. ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಕೆ ಸುಧೀಂದ್ರ ಅಧ್ಯಕ್ಷತೆ ವಹಿಸಿದ್ದರು.

ಕಸಾಪ ಚುನಾವಣೆ : ಶೇ.೫೫ರಷ್ಟು ಮತದಾನ

ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರಿಂದ ಹಕ್ಕು ಚಲಾವಣೆ


ಭದ್ರಾವತಿ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಹಕ್ಕನ್ನು ಚಲಾಯಿಸಿದರು.
    ಭದ್ರಾವತಿ, ನ. ೨೧: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತದಾನ ಭಾನುವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಶೇ.೫೫ರಷ್ಟು ಮತದಾನ ನಡೆದಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರು ಮತದಾನ ಮಾಡಿದರು.


ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತದಾನ ಭಾನುವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.
    ತಾಲೂಕಿನಲ್ಲಿ ಒಟ್ಟು ೧೨೦೨ ಮತದಾರರಿದ್ದು, ಈ ಪೈಕಿ ೬೫೭ ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಬೆಳಿಗ್ಗೆ ೮ ಗಂಟೆಯಿಂದ ಆರಂಭವಾದ ಮತದಾನ ಮಧ್ಯಾಹ್ನ ೧ ಗಂಟೆವರೆಗೂ ಬಿರುಸಿನ ನಡೆಯಿತು. ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಗಮನ ಸೆಳೆದರು.
    ಸುಮಾರು ೮೫ ವರ್ಷ ವಯೋಮಾನದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ಯಾಮಣ್ಣ ಸಹಾಯಕರೊಂದಿಗೆ ಆಗಮಿಸಿ ಮತಚಲಾಯಿಸಿದರು.


ರಾಜ್ಯಾಧ್ಯಕ್ಷ ಹಾಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಮಿನಿವಿಧಾನಸೌಧದ ಸಮೀಪ ಬೆಂಬಲಿಗರು ಮತಯಾಚನೆ ನಡೆಸಿದರು.
    ರಾಜ್ಯಾಧ್ಯಕ್ಷ ಹಾಗು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಮಿನಿವಿಧಾನಸೌಧದ ಸಮೀಪ ಬೆಂಬಲಿಗರು ಮತಯಾಚನೆ ನಡೆಸಿದರು. ಪರಿಷತ್ ಅಧ್ಯಕ್ಷರಾದ ಡಿ. ಮಂಜುನಾಥ್ ಮತ್ತು ಹಾಲಿ ಅಧ್ಯಕ್ಷ ಡಿ.ಬಿ ಶಂಕರಪ್ಪನವರ ನಡುವೆ ಹೆಚ್ಚಿನ ಪೈಪೋಟಿ ಇರುವುದು ಕಂಡು ಬಂದಿತು.
    ಯಾವುದೇ ಚುನಾವಣೆಗೆ ಕಡಿಮೆ ಇಲ್ಲದಂತೆ ಈ ಚುನಾವಣೆ ಸಹ ಕಂಡು ಬಂದಿದ್ದು, ಮತಗಟ್ಟೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

        ಡಿ. ಶಂಕರಪ್ಪಗೆ ಹೆಚ್ಚು ಮತ :
ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಸ್ಪರ್ಧಿಸಿರುವ ಹಾಲಿ ಅಧ್ಯಕ್ಷ ಡಿ. ಶಂಕರಪ್ಪ ಅವರಿಗೆ ೩೭೫ ಮತಗಳು ಲಭಿಸಿದ್ದು, ಮಾಜಿ ಅಧ್ಯಕ್ಷ ಡಿ. ಮಂಜುನಾಥ್‌ಗೆ ೨೫೨ ಮತಗಳು ಲಭಿಸಿವೆ. ಒಟ್ಟು ಚಲಾವಣೆಗೊಂಡಿರುವ ೬೫೭ ಮತಗಳಲ್ಲಿ ೬೨೭ ಮತಗಳು ಈ ಇಬ್ಬರ ಪಾಲಾಗಿದ್ದು, ಉಳಿದ ೩೦ ಮತಗಳು ಇನ್ನಿಬ್ಬರು ಅಭ್ಯರ್ಥಿಗಳ ಪಾಲಾಗಿವೆ.  

Saturday, November 20, 2021

ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಲು ಪ್ರಮುಖರಿಂದ ತೀವ್ರ ಪೈಪೋಟಿ : ಒಮ್ಮತದ ಅಭ್ಯರ್ಥಿಗೆ ಕಸರತ್ತು

ಆನಂದ್  ಎಸ್. ಕುಮಾರ್ ಯೋಗೇಶ್  ಮೋಹನ್‌ಕುಮಾರ್  ಬಾಲಕೃಷ್ಣ 

* ಅನಂತಕುಮಾರ್

    ಭದ್ರಾವತಿ, ನ. ೨೦: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತಿರುವ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಇದೀಗ ಹೆಚ್ಚು ಗಮನ ಸೆಳೆಯುತ್ತಿದ್ದು, ಶಿವಮೊಗ್ಗ-ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವ್ಯಾಪ್ತಿಯ ನಿರ್ದೇಶಕರ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಯುತ್ತಿದೆ.
    ಪ್ರಮುಖವಾಗಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಸಮುದಾಯದ ಪ್ರಭಾವಿ ವ್ಯಕ್ತಿಗಳು ಈ ಬಾರಿ ಚುನಾವಣೆಯಲ್ಲಿ ಪೈಪೋಟಿಗೆ ಮುಂದಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ತಾಲೂಕಿನಲ್ಲಿ ಇಲ್ಲಿಯವರೆಗೂ ನಿರ್ದೇಶಕರ ಸ್ಥಾನಕ್ಕೆ ಯಾರೊಬ್ಬರೂ ಸಹ ಆಯ್ಕೆಯಾಗದಿರುವುದು ಇಲ್ಲಿನ ಒಕ್ಕಲಿಗ ಸಮುದಾಯದವರಿಗೆ ಸವಾಲಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಹೇಗಾದರೂ ಮಾಡಿ ನಿರ್ದೇಶಕರ ಸ್ಥಾನ ತನ್ನದಾಗಿಸಿಕೊಳ್ಳಲು ಮುಂದಾಗಿದ್ದಾರೆ.
    ಈ ಹಿಂದೆ ವಿಧಾನಸಭಾ ಕ್ಷೇತ್ರದಿಂದ ಒಕ್ಕಲಿಗ ಸಮುದಾಯವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರು ಇದೀಗ ಇಲ್ಲದಿರುವುದು ಒಂದೆಡೆ ಸಮುದಾಯಕ್ಕೆ ಹಿನ್ನಡೆಯಾಗಿದೆ. ಆದರೂ ಸಹ ಅವರ ಸ್ಥಾನದಲ್ಲಿ ಇದೀಗ ತಾಲೂಕು ಒಕ್ಕಲಿಗ ಸಂಘ ಕಾರ್ಯನಿರ್ವಹಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆ ಮತ್ತಷ್ಟು ಗಮನ ಸೆಳೆಯಲು ಕಾರಣವಾಗಿದೆ.
    ಜಿಲ್ಲೆಯಲ್ಲಿ ತೀರ್ಥಹಳ್ಳಿ ನಂತರ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿರುವುದು ಭದ್ರಾವತಿ ತಾಲೂಕಿನಲ್ಲಿ ಮಾತ್ರ. ಈ ಹಿನ್ನಲೆಯಲ್ಲಿ ಚುನಾವಣೆಯಲ್ಲಿ ಈ ಎರಡು ತಾಲೂಕುಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಇದುವರೆಗೂ ತೀರ್ಥಹಳ್ಳಿ ತಾಲೂಕಿನವರೇ ಹೆಚ್ಚು ಬಾರಿ ಆಯ್ಕೆಯಾಗಿದ್ದಾರೆ. ಆದರೆ ತಾಲೂಕಿನಲ್ಲಿ ಇದುವರೆಗೂ ಯಾರೊಬ್ಬರು ಆಯ್ಕೆಯಾಗಿಲ್ಲ ಎಂಬ ಕೊರಗು ಇದೀಗ ಸಮುದಾಯದವರಲ್ಲಿ ಕಾಡುತ್ತಿದೆ. ಈ ನಡುವೆ ಹಲವಾರು ವರ್ಷಗಳಿಂದ ಸಮುದಾಯದವರು ರಾಜಕೀಯವಾಗಿ ಎರಡು ಬಣಗಳಾಗಿ ಗುರುತಿಸಿಕೊಂಡು ಬರುತ್ತಿದ್ದಾರೆ. ಆದರೂ ಸಹ ಸಮುದಾಯದವರು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಲು ಒಮ್ಮತದ ತೀರ್ಮಾನಕ್ಕೆ ಬದ್ದರಾಗಲು ಮುಂದಾಗಿದ್ದಾರೆ.
    ನಿರ್ದೇಶಕರ ಸ್ಥಾನದ ಚುನಾವಣೆಗೆ ಸ್ಪರ್ಧಿಸಲು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ಸದಸ್ಯ, ಸಹಕಾರಿ ಧುರೀಣ ಜೆ.ಪಿ ಯೋಗೇಶ್, ೩೪ನೇ ವಾರ್ಡಿನ ನಗರಸಭಾ ಸದಸ್ಯ ಆರ್. ಮೋಹನ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಶಿಮೂಲ್ ಮಾಜಿ ಅಧ್ಯಕ್ಷ ಡಿ. ಆನಂದ್, ಪ್ರಗತಿಪರ ಹೋರಾಟಗಾರ, ಮುಖಂಡ ಬಾಲಕೃಷ್ಣ ಸೇರಿದಂತೆ ಇನ್ನಿತರರು ತೀವ್ರ ಪೈಪೋಟಿಗೆ ಮುಂದಾಗಿದ್ದಾರೆ. ಈಗಾಗಲೇ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
    ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಇದೀಗ ತಾಲೂಕು ಒಕ್ಕಲಿಗರ ಸಂಘಕ್ಕೆ ಒಂದೆಡೆ ಸವಾಲಾಗಿದೆ. ಮತ್ತೊಂದೆಡೆ ವೈಯಕ್ತಿಕ ವರ್ಚಸ್ಸು, ಪ್ರತಿಷ್ಠೆ ಹಿನ್ನಲೆಯಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿರುವ ಕೆಲವರಿಗೆ ಹಿನ್ನಡೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಸಹ ಕಡಿಮೆ ಇದ್ದು, ಈ ಹಿನ್ನಲೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.