Tuesday, November 23, 2021

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ : ಜಂತುಹುಳು ಬಾಧೆಯಿಂದ ಎಚ್ಚರವಹಿಸಿ

ಕಾಗದ ನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎಂ. ಅಶೋಕ್

ಭದ್ರಾವತಿ ಕಾಗದ ನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಮಾತನಾಡಿದರು.
    ಭದ್ರಾವತಿ, ನ. ೨೩:  ಜಂತುಹುಳುವಿನ ಬಾಧೆಯಿಂದ ಮಕ್ಕಳಲ್ಲಿ ರಕ್ತಹೀನತೆ, ಪೋಷಕಾಂಶದ ಕೊರತೆ, ಹಸಿವಾಗದಿರುವುದು, ನಿಶ್ಯಕ್ತಿ ಮತ್ತು ಆತಂಕ, ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವುದು ಇತ್ಯಾದಿ ರೋಗಲಕ್ಷಣಗಳು ಕಾಣಿಸಿಕೊಳ್ಳಲಿವೆ.  ಈ ರೋಗ ಲಕ್ಷಣಗಳನ್ನು ನಿಯಂತ್ರಿಸಲು ಮಕ್ಕಳಿಗೆ ವಯಸ್ಸಿಗೆ ಅನುಗುಣವಾಗಿ ಜಂತುಹುಳು ಮಾತ್ರೆ ನೀಡಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.
    ಅವರು ಮಂಗಳವಾರ ಕಾಗದ ನಗರದ ಪೇಪರ್‌ಟೌನ್ ಆಂಗ್ಲ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಜಂತುಹುಳು ಮಾತ್ರೆ ಸೇವನೆಯಿಂದ ರಕ್ತಹೀನತೆ ನಿಯಂತ್ರಿಸುವ ಜೊತೆಗೆ ಪೋಷಕಾಂಶದ ಸುಧಾರಣೆ ಮತ್ತು ಕಲಿಕೆಯಲ್ಲಿ ಏಕಾಗ್ರತೆ ಉಂಟಾಗುತ್ತದೆ ಎಂದರು.
   ಪ್ರಾಂಶುಪಾಲ ಆರ್ ಸತೀಶ್ ಮಾತನಾಡಿ, ಸರ್ಕಾರದಿಂದ ಸಿಗುವ ಜಂತುಹುಳು ಮಾತ್ರೆ ಸದುಪಯೋಗಪಡಿಸಿಕೊಂಡು ಆರೋಗ್ಯ ಸುಧಾರಣೆ ಮಾಡಿಕೊಳ್ಳುವ ಜೊತೆಗೆ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು. ಕುಡಿಯಲು ಶುದ್ಧವಾದ ನೀರು ಬಳಸಬೇಕು. ಆಹಾರ ಸೇವಿಸುವ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಾಲಯ ಬಳಸಿದ ನಂತರ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು ಸೇರಿದಂತೆ ಇತ್ಯಾದಿ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಾ. ದತ್ತಾತ್ರೇಯ, ಹಿರಿಯ ಆರೋಗ್ಯ ಸಹಾಯಕಿಯರಾದ ರೇವತಿ, ಪ್ರಭಾವತಿ, ಇಂದ್ರ, ಅಂಕಿತ, ಮಮತಾ, ಹೆನ್ರಿ,  ದೈಹಿಕ ಶಿಕ್ಷಕ ಸಿದ್ದಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment