Saturday, January 9, 2021

ಕಾಮಗಾರಿ ವಿಳಂಬ ಧೋರಣೆ ಖಂಡಿಸಿ ಜ.೧೧ರಂದು ಪ್ರತಿಭಟನಾ ಸತ್ಯಾಗ್ರಹ

ಭದ್ರಾವತಿ, ಜ. ೯: ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಿಂಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ಹಾಗು ಬಗರ್ ಹುಕುಂ ರೈತರ ಮತ್ತು ನಿವೇಶನ ರಹಿತ ಬಡವರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಟ ಸಮಿತಿ ವತಿಯಿಂದ ಜ.೧೧ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
   ೨೦೧೭ರಲ್ಲಿ ಆರಂಭಗೊಂಡಿರುವ ಅಂಬೇಡ್ಕರ್ ಭವನ ಕಾಮಗಾರಿ ಇಂದಿಗೂ ಮುಕ್ತಾಯಗೊಂಡಿಲ್ಲ. ತಕ್ಷಣ ಸರ್ಕಾರ ೫.೫೦ ಕೋ.ರು. ಹಣ ಬಿಡುಗಡೆಗೊಳಿಸಿ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಹಾಗು ತಾಲೂಕಿನಲ್ಲಿ ಬಗರ್ ಹುಕುಂ ರೈತರು, ನಿವೇಶನ ರಹಿತ ಬಡವರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದು, ಈ ಸಂಬಂಧ ಹಲವಾರು ಬಾರಿ ಹೋರಾಟ ನಡೆಸಿ ಮನವಿ ಸಹ ಸಲ್ಲಿಸಲಾಗಿದೆ. ಆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.


ಜಯಕರ್ನಾಟಕ ತಾಲೂಕು ಅಧ್ಯಕ್ಷರಾಗಿ ಆರ್. ಅರುಣ್

ಭದ್ರಾವತಿ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಜಯಕರ್ನಾಟಕ ಸಂಘಟನೆ ಪದಾಧಿಕಾರಿಗಳ ಸಭೆ ನಡೆಯಿತು.
ಭದ್ರಾವತಿ, ಜ. ೯: ಜಯಕರ್ನಾಟಕ ತಾಲೂಕು ಶಾಖೆ ಅಧ್ಯಕ್ಷರಾಗಿ ಕಾಗದನಗರದ ನಿವಾಸಿ, ಕಾಂಗ್ರೆಸ್ ಮುಖಂಡ ಆರ್. ಅರುಣ್ ನೇಮಕಗೊಂಡಿದ್ದಾರೆ.
    ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಪಿ. ಶರವಣ, ಕಾರ್ಯಾಧ್ಯಕ್ಷರಾಗಿ ವೈ. ಚೇತನ್, ಉಪಾಧ್ಯಕ್ಷರಾಗಿ ಜೀವನ್, ದಿವ್ಯರಾಜ್, ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ ಮತ್ತು ವಿಧಾನಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಸಹೋದರ ಸಿ.ಎಂ ಖಾದರ್ ನೇಮಕಗೊಂಡಿದ್ದಾರೆ.




ಜ.೧೭ರಂದು ಕ್ಷಿಪ್ರ ಕಾರ್ಯ ಪಡೆ ಘಟಕ ಉದ್ಘಾಟನೆ : ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಖುದ್ದು ಸ್ಥಳ ಪರಿಶೀಲನೆ ನಡೆಸಿದ ಸಂಸದ ಬಿ.ವೈ ರಾಘವೇಂದ್ರ

ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ಭದ್ರಾವತಿಯಲ್ಲಿ ಕಾರ್ಯಾರಂಭಗೊಳ್ಳಲಿರುವ ಆರ್‌ಎಎಫ್ ಘಟಕದ ಸ್ಥಳ ಪರಿಶೀಲನೆ ನಡೆಸಿತು.
ಭದ್ರಾವತಿ, ಜ. ೯: ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಗೆ ಮಂಜೂರಾತಿಯಾಗಿರುವ ಕೇಂದ್ರ ಮೀಸಲು ಪೊಲೀಸ್ ಪಡೆ ವಲಯದ ಕ್ಷಿಪ್ರ ಕಾರ್ಯ ಪಡೆ (ರ‍್ಯಾಪಿಡ್ ಆಕ್ಷನ್ ಪೋರ್ಸ್-ಆರ್‌ಎಎಫ್) ಘಟಕ ನಗರದ ಮಿಲ್ಟ್ರಿಕ್ಯಾಂಪ್ ಹೊಸ ಬುಳ್ಳಾಪುರದಲ್ಲಿ  ಕಾರ್ಯಾರಂಭಗೊಳ್ಳುತ್ತಿದ್ದು, ಜ.೧೭ರಂದು ಘಟಕದ ಶಿಲಾನ್ಯಾಸ ನೆರವೇರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿರುವ ಹಿನ್ನಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಸದ ಬಿ.ವೈ ರಾಘವೇಂದ್ರ ಶಿಲಾನ್ಯಾಸ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಅಮಿತ್ ಶಾರವರ ೨ ದಿನಗಳ ಕಾರ್ಯಕ್ರಮ ಪಟ್ಟಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರಕಟಿಸಿದ ಹಿನ್ನಲೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಖುದ್ದಾಗಿ ಹೆಲಿಪ್ಯಾಡ್ ಹಾಗು ಸಮಾರಂಭ ನಡೆಯಲಿರುವ ಸ್ಥಳಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಪೌರಾಯುಕ್ತ ಮನೋಹರ್, ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಮುಖಂಡ ಎಸ್. ದತ್ತಾತ್ರಿ, ಆರ್‌ಎಎಫ್ ಸ್ಥಳೀಯ ಅಧಿಕಾರಿಗಳು, ಇಂಜಿನಿಯರ್‌ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
ಈ ಹಿಂದೆ ಜ.೩ರಂದು ಕೇಂದ್ರ ಮೀಸಲು ಪೊಲೀಸ್ ಪಡೆ ಮಹಾನಿರ್ದೇಶಕರು, ರಾಜ್ಯ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರು, ಗುಪ್ತದಳ ಇಲಾಖೆ ಮಹಾನಿರ್ದೇಶಕರು, ದಾವಣಗೆರೆ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕರನ್ನೊಳಗೊಂಡ ತಂಡದೊಂದಿಗೆ ಸಹ ಭೇಟಿ ಸಹ ಪರಿಶೀಲನೆ ನಡೆಸಿದ್ದರು.