Sunday, January 17, 2021

ಗೃಹ ಸಚಿವ ಅಮಿತ್ ಷಾ ವಿರುದ್ಧ ಎಎಪಿ ಆಕ್ರೋಶ :

ಕಾಂಗ್ರೆಸ್ ಮುಖಂಡರ ಬಂಧನ, ಮನವಿ ಪತ್ರದೊಂದಿಗೆ ಹಿಂದಿರುಗಿದ ಸಂಘಟನೆಗಳು

ಭದ್ರಾವತಿಯಲ್ಲಿ ಶನಿವಾರ ನಡೆದ ಆರ್‌ಎಎಫ್ ಘಟಕದ ಶಿಲಾನ್ಯಾಸ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಕಾಗದ ನಗರ ಠಾಣೆ ಪೊಲೀಸರು ಬಂಧಿಸಿರುವುದು.
ಭದ್ರಾವತಿ, ಜ. ೧೭: ಆರ್‌ಎಎಫ್ ಘಟಕ ಶಿಲಾನ್ಯಾಸ ನೆರವೇರಿಸಲು ಶನಿವಾರ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಆಮ್ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿದೆ.
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಮಾತನಾಡಿ, ಕೇಂದ್ರದ ಪ್ರಭಾವಿ ನಾಯಕರು ಹಾಗು ಪ್ರಮುಖ ಸಚಿವರುಗಳಲ್ಲಿ ಒಬ್ಬರಾಗಿರುವ ಗೃಹ ಸಚಿವ ಅಮಿತ್ ಷಾ ಅವರಿಂದ ಕ್ಷೇತ್ರದ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಆದರೆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ. ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಯಾವುದೇ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಸ್ತಾಪಿಸದೆ ಇರುವುದು ದುರಾದೃಷ್ಟಕರ ಸಂಗತಿಯಾಗಿದೆ. ಅಲ್ಲದೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅಧ್ಯಕ್ಷತೆವಹಿಸಿದ್ದ ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
        ಕಾಂಗ್ರೆಸ್ ಮುಖಂಡರ ಬಂಧನ:
   ಈ ನಡುವೆ ಸಮಾರಂಭಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಕಾಗದನಗರ ಠಾಣೆ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿರುವ ವಿಚಾರ ಬಹಿರಂಗಗೊಂಡಿದೆ.
ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳ ರಾಮಚಂದ್ರ, ಮುಖಂಡರಾದ ಎಂ. ಶಿವಕುಮಾರ್, ರಾಘವೇಂದ್ರ ಸರಾಟೆ, ರೂಪನಾರಾಯಣರವರನ್ನು ಬಂಧಿಸಿ ಬಿಡುಗಡೆಗೊಳಿಸಲಾಗಿದೆ.
     ಮನವಿ ಪತ್ರದೊಂದಿಗೆ ಹಿಂದಿರುಗಿದ ವಿವಿಧ ಸಂಘಟನೆ :
ಎಂಪಿಎಂ, ವಿಐಎಸ್‌ಎಲ್ ಕಾರ್ಖಾನೆಗಳ ಅಭಿವೃದ್ಧಿ ವಿಚಾರ,  ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗು ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ, ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರರಿಗೆ ಸಲ್ಲಿಸಲು ವಿವಿಧ ಸಂಘಟನೆಗಳು ಸಮಾರಂಭದ ವೇದಿಕೆ ಬಳಿ ಎದುರು ನೋಡುತ್ತಿದ್ದವು. ಆದರೆ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಿಲ್ಲ.

ಅಂತರಾಷ್ಟ್ರೀಯ ಯೋಗ ಪಟು ಡಿ. ನಾಗರಾಜ್‌ಗೆ ಚಿನ್ನದ ಪದಕ

ಅಂತರಾಷ್ಟ್ರೀಯ ಯೋಗ ಪಟು ಡಿ. ನಾಗರಾಜ್
ಭದ್ರಾವತಿ, ಜ. ೧೭: ಅಂತರಾಷ್ಟ್ರೀಯ ಯೋಗ ಪಟು, ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್ ಆನ್‌ಲೈನ್ ಇಂಟರ್‌ನ್ಯಾಷನಲ್ ಯೂನಿಕ್ ಯೋಗ ಕಂಟೆಸ್ಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
     ಪಶ್ಚಿಮ ಬಂಗಾಳ ಕೊಲ್ಕತಾದ ಯೋಗ ಎರ ವತಿಯಿಂದ ಸ್ವಾತಿ ಯೋಗ ಅಂಡ್ ಫಿಟ್ ಪಾಯಿಂಟ್ ಮತ್ತು ಯೋಗ ಆಬ್ಜೇಕ್ಟಿವ್ ಗ್ವೈಡ್ಲೇನ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ೪೦ ವರ್ಷ ಮೇಲ್ಪಟ್ಟ ವಯೋಮಾನದವರ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿಕೊಂಡಿದ್ದು, ಪಂದ್ಯಾವಳಿಯಲ್ಲಿ ಇರಾನ್, ಥೈಲಾಂಡ್, ಶ್ರೀಲಂಕಾ, ಸಿಂಗಾಪುರ, ಮಲೇಷಿಯಾ, ವಿಯೆಟ್ನಾಮ್ ಸೇರಿದಂತೆ ವಿವಿಧ ದೇಶಗಳ ಸುಮಾರು ೬೩೦ಕ್ಕೂ ಹೆಚ್ಚು ಯೋಗ ಪಟುಗಳು ಭಾಗವಹಿಸಿದ್ದರು.
     ಡಿ. ನಾಗರಾಜ್‌ರವರು ಸುಮಾರು ೩೫ ವರ್ಷಗಳಿಂದ ರಾಷ್ಟ್ರೀಯ, ಅಂತರಾಷ್ಟ್ರೀಯ ಮತ್ತು ರಾಜ್ಯಮಟ್ಟದ ವಿವಿಧ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಸುಮಾರು ೩೦೦ಕ್ಕೂ ಹೆಚ್ಚು ಪದಕಗಳನ್ನು ಪಡೆದುಕೊಂಡಿದ್ದು, ಇವರನ್ನು ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ಆರ್. ರಾಮಮೂರ್ತಿ, ಪ್ರಧಾನ ಕಾರ್ಯದರ್ಶಿ ಡಿ. ಪುಟ್ಟೇಗೌಡ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.

೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಡಾ. ಎಸ್.ಎಸ್ ವಿಜಯದೇವಿಗೆ ಕರಾವೇ ಅಭಿನಂದನೆ

ವಿಜಯದೇವಿಯವರ ಆಯ್ಕೆ ಭದ್ರಾವತಿ ನಗರದ ಹಿರಿಮೆ ಮತ್ತಷ್ಟು ಹೆಚ್ಚಿಸಿದೆ : ಎಂ. ಪರಮೇಶ್

ವಿಜಯಪುರ ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡದ ಮೊದಲ ಮಹಿಳಾ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಭದ್ರಾವತಿ ನಗರದ ನಿವಾಸಿ, ಸಾಹಿತಿ ಡಾ. ಎಸ್.ಎಸ್ ವಿಜಯದೇವಿಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜ. ೧೭: ವಿಜಯಪುರ ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡದ ಮೊದಲ ಮಹಿಳಾ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ನಗರದ ನಿವಾಸಿ, ಸಾಹಿತಿ ಡಾ. ಎಸ್.ಎಸ್ ವಿಜಯದೇವಿಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
  ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ಆಯೋಜಿಸಲಾಗಿರುವ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಜಯದೇವಿಯವರನ್ನು ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ.  ಸಂಶೋಧಕರು, ಲೇಖಕರು ಮತ್ತು ಸಾಹಿತಿಯಾಗಿರುವ ವಿಜಯದೇವಿಯವರು ಕನ್ನಡ ಭಾಷೆ ಹಾಗು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅನನ್ಯವಾಗಿದೆ. ಅವರನ್ನು ಆಯ್ಕೆ ಮಾಡಿರುವುದು ಭದ್ರಾವತಿ ನಗರದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್ ಪ್ರಶಂಸೆ ವ್ಯಕ್ತಪಡಿಸಿದರು.
ಮಮತ ವಿಜಯದೇವಿಯವರ ಕಿರುಪರಿಚಯ ಮಾಡಿಕೊಟ್ಟರು. ಅಭಿನಂದನೆ ಸ್ವೀಕರಿಸಿದ ವಿಜಯದೇವಿಯವರು ವೇದಿಕೆ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ ಕನ್ನಡ ನಾಡಿಗೆ ವಚನ ಸಾಹಿತ್ಯದ ಕೊಡುಗೆಯನ್ನು ವಿವರಿಸಿದರು.
ವೇದಿಕೆ ಪ್ರದಾನ ಕಾರ್ಯದರ್ಶಿ ಅಶೋಕ್‌ರಾವ್ ಘೋರ್ಪಡೆ, ಯುವ ಘಟಕದ ಅಧ್ಯಕ್ಷ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ ಹಾಗೂ ರಮೇಶ್, ಸದಸ್ಯರುಗಳಾದ ಪಿ. ನಾಗರಾಜ್, ಮಲ್ಲಿಕಾರ್ಜುನ್, ಪ್ರಾಣೇಶ್, ದಿಲೀಪ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಹಾಗೂ ಇತರೆ ಕರವೇ ಸದಸ್ಯರು ಉಪಸ್ಥಿತರಿದ್ದರು.