Monday, January 18, 2021

ಆರ್‌ಎಎಫ್ ಘಟಕ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿ : ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ


ಭದ್ರಾವತಿ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
   ಭದ್ರಾವತಿ, ಜ. ೧೮: ನಗರದ ಬುಳ್ಳಾಪುರ ಮಿಲ್ಟ್ರಿಕ್ಯಾಂಪ್‌ನಲ್ಲಿ ಕಳೆದ ೨ ದಿನಗಳ ಹಿಂದೆ ನೂತನವಾಗಿ ಕಾರ್ಯಾರಂಭಗೊಂಡಿರುವ ಕ್ಷಿಪ್ರ ಕಾರ್ಯ ಪಡೆ ಘಟಕದ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿಸುವಲ್ಲಿ ಸಹಕರಿಸಿದ ಭಾರತೀಯ ಜನತಾ ಪಕ್ಷದ ಜಿಲ್ಲಾ ಹಾಗು ತಾಲೂಕು ಮಟ್ಟದ ಮುಖಂಡರಿಗೆ, ಪದಾಧಿಕಾರಿಗಳಿಗೆ, ಎಲ್ಲಾ ಹಂತದ ಸಂಯೋಜಕರಿಗೆ, ಕಾರ್ಯಕರ್ತರಿಗೆ ಸಂಸದ ಬಿ.ವೈ ರಾಘವೇಂದ್ರ ಕೃತಜ್ಞತೆ ಸಲ್ಲಿಸಿದರು.
    ಸೋಮವಾರ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ವೈ ರಾಘವೇಂದ್ರ ಮಾತನಾಡಿ, ಮುಂದಿನ ದಿನಗಳಲ್ಲೂ ಇದೆ ರೀತಿ ಸಂಘಟಿತವಾಗಿ ಕಾರ್ಯ ನಿರ್ವಹಿಸುವಂತೆ ಕರೆ ನೀಡಿದರು.
    ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪಕ್ಷದ ಬೆಂಬಲಿತ ಸದಸ್ಯರನ್ನು ಅಭಿನಂದಿಸಲಾಯಿತು.
    ಪಕ್ಷದ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಭಾನುಪ್ರಕಾಶ್, ವಿಭಾಗ ಪ್ರಮುಖ್ ಗಿರೀಶ್ ಪಟೇಲ್, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಜಿಲ್ಲಾ ಪ್ರಧಾನ ಕರ್ಯದರ್ಶಿಗಳಾದ ಶಿವರಾಜ್, ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ್, ನಿಕಟಪೂರ್ವ ಅಧ್ಯಕ್ಷರಾದ ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಗೆ ಲಸಿಕೆ


ಕೋವಿಡ್-೧೯ ಲಸಿಕೆ ಹಾಕುವ ಕಾರ್ಯಕ್ರಮ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಹ ಮುಂದುವರೆಯಿತು. ಆರೋಗ್ಯ ಇಲಾಖೆ ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್ ಲಸಿಕೆ ಪಡೆದುಕೊಂಡರು..
    ಭದ್ರಾವತಿ, ಜ. ೧೮: ಕೋವಿಡ್-೧೯ ಲಸಿಕೆ ಹಾಕುವ ಕಾರ್ಯಕ್ರಮ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಹ ಮುಂದುವರೆಯಿತು
     ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ದೇವಾನಂದ್, ಹಿರಿಯ ಆರೋಗ್ಯ ಸಹಾಯಕರಾದ ನೀಲೇಶ್‌ರಾಜ್, ಹಾಲಸ್ವಾಮಿ, ವೈದ್ಯಾಧಿಕಾರಿ ಡಾ. ದೇವರಾಜ್, ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಕಿರಿಯ ಆರೋಗ್ಯ ಸಹಾಯಕರು ಹಾಗು ಸಿಬ್ಬಂದಿಗಳು ಲಸಿಕೆ ಪಡೆದುಕೊಂಡರು. ಕಿರಿಯ ಫಾರ್ಮಸಿ ಅಧಿಕಾರಿ ದತ್ತಾತ್ರೇಯರವರಿಗೆ ಮೊದಲ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
    ಶನಿವಾರದಿಂದ ಆರಂಭಗೊಂಡಿರುವ ಲಸಿಕೆ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲಾಗುತ್ತಿದೆ. ಸ್ಟಾಫ್ ನರ್ಸ್ ಡಯಾನ ಲಸಿಕೆ ಹಾಕಿದರು.

ಉತ್ಸವವಿಲ್ಲದ ೧೦೩ನೇ ಸಂಸ್ಥಾಪನಾ ದಿನ : ಕಾರ್ಮಿಕರ ಬಾಳಿಗೆ ವಿಐಎಸ್‌ಎಲ್ ಉತ್ಸವ ನೆನಪು ಮಾತ್ರ

ಅಂದಿನ ಮೈಸೂರು ರಾಜ್ಯದ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಾಯ ಮತ್ತು ಮಹಾರಾಜರಾಗಿದ್ದ ಕೃಷ್ಣರಾಜ ಒಡೆಯರ್ ಮಾರ್ಗದರ್ಶನದಲ್ಲಿ ಪ್ರಾಥಮಿಕ ತನಿಖೆಯನ್ನು ೧೯೧೫-೧೯೧೬ರ ನಡುವೆ ನಡೆಸಲಾಯಿತು.     
      * ಅನಂತಕುಮಾರ್
    ಭದ್ರಾವತಿ, ಜ. ೧೮: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೋಮವಾರ ಶಂಕು ಸ್ಥಾಪನೆಗೊಂಡು ೧೦೩ ವರ್ಷ ಕಳೆದಿದ್ದು, ಇದೀಗ ಕಾರ್ಖಾನೆ ವ್ಯಾಪ್ತಿಯಲ್ಲಿ ಸಂಭ್ರಮದ ಬದಲು ಸೂತಕದ ಛಾಯೆ ಆವರಿಸಿಕೊಂಡಿದೆ. ಕೋವಿಡ್-೧೯ರ ಪರಿಣಾಮ ಆಡಳಿತ ಮಂಡಳಿ ಈ ಬಾರಿ ವಿಐಎಸ್‌ಎಲ್ ಉತ್ಸವ ನಡೆಸದಿರುವುದು ಒಂದೆಡೆ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಕಾರ್ಮಿಕರು, ಕುಟುಂಬ ವರ್ಗದವರು ಸೇರಿದಂತೆ ನಗರದ ಜನತೆಯನ್ನು ನಿರಾಸೆಗೊಳಿಸಿದೆ. ಮತ್ತೊಂದೆಡೆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿರುವುದು ಈ ಬಾರಿಯ ಸಂಭ್ರಮವನ್ನು ಮತ್ತಷ್ಟು ಮೊಟಕುಗೊಳಿಸಿದೆ.
    ಸುಮಾರು ೨ ದಶಕಗಳಿಂದ ಕಾರ್ಖಾನೆ ಆಡಳಿತ ಮಂಡಳಿ ಸುಮಾರು ೧ ತಿಂಗಳ ಕಾಲ ವಿಐಎಸ್‌ಎಲ್ ಉತ್ಸವ ನಡೆಸುವ ಮೂಲಕ ಸಂಸ್ಥಾಪನಾ ದಿನ, ಸೈಲ್ ಡೇ ಹಾಗು ಗಣ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದೆ. ವಿಐಎಸ್‌ಎಲ್ ಉತ್ಸವದಲ್ಲಿ ಪ್ರತಿ ದಿನ ಸುಮಾರು ೫ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವುದು ವಿಶೇಷವಾಗಿದೆ. ಪ್ರತಿ ದಿನ ಸಂಜೆ ಮಕ್ಕಳ ವಿವಿಧ ಬಗೆಯ ಆಟಿಕೆಗಳು, ಗೃಹ ಬಳಕೆ ಸಾಮಾಗ್ರಿಗಳ ಮಾರಾಟ, ವಿಐಎಸ್‌ಎಲ್ ವಸ್ತು ಪ್ರದರ್ಶನ ಮಳಿಗೆಗಳು, ಬಗೆ ಬಗೆಯ ಆಹಾರ ಖಾದ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವದಲ್ಲಿ ಕಂಡು ಬರುತ್ತಿತ್ತು. ನಗರದ ಜನತೆ ೧ ತಿಂಗಳ ಕಾಲ ಸಂಭ್ರಮದಲ್ಲಿ ಕಾಲ ಕಳೆಯುತ್ತಿದ್ದರು. ಆದರೆ ಈ ಬಾರಿ ಕೋವಿಡ್-೧೯ರ ಹಿನ್ನಲೆಯಲ್ಲಿ ಉತ್ಸವ ಆಯೋಜಿಸಿಲ್ಲ.  ಈ ಹಿಂದೆ ಸುನಾಮಿ ಪ್ರವಾಹ ಸಂದರ್ಭದಲ್ಲಿ ಉತ್ಸವ ನಡೆಸಿರಲಿಲ್ಲ. ೨ ದಶಕದಲ್ಲಿ ಕೇವಲ ೨ ಬಾರಿ ಮಾತ್ರ ಉತ್ಸವ ನಡೆದಿಲ್ಲ ಎಂಬುದು ಬಿಟ್ಟರೇ ಬೇರೆ ಎಲ್ಲಾ ಸಂದರ್ಭದಲ್ಲೂ ಉತ್ಸವ ನಿಗದಿತ ದಿನಾಂಕದಂದು ಜನವರಿ ಆರಂಭದಿಂದ ಫೆಬ್ರವರಿವರೆಗೆ ನಡೆದಿರುವುದು ಗಮನಾರ್ಹ ಸಂಗತಿಯಾಗಿದೆ.
         ಆಡಳಿತ ಮಂಡಳಿಯಿಂದ ಸರಳವಾಗಿ ಸಂಸ್ಥಾಪನಾ ದಿನ ಆಚರಣೆ:
   ಕಾರ್ಖಾನೆಯ ಒಳಭಾಗದಲ್ಲಿರುವ ಆಡಳಿತ ಕಛೇರಿಯಲ್ಲಿ ಸರಳವಾಗಿ ಸಂಸ್ಥಾಪನಾ ದಿನ ಆಚರಿಸಲಾಯಿತು. ಕಛೇರಿ ಆವರಣದಲ್ಲಿರುವ ಕಾರ್ಖಾನೆಯ ಮೊದಲ ಅಧ್ಯಕ್ಷರು ಹಾಗು ಸಂಸ್ಥಾಪಕರಲ್ಲಿ ಒಬ್ಬರಾದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಕಾರ್ಖಾನೆಯ ಮಹಾಪ್ರಬಂಧಕ(ಸ್ಥಾವರ) ಮತ್ತು ಆಕ್ಟಿಂಗ್ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ೧೦೩ನೇ ಸಂಸ್ಥಾಪನಾ ದಿನ ಸೋಮವಾರ ಕಾರ್ಖಾನೆಯ ಒಳಭಾಗದಲ್ಲಿರುವ ಆಡಳಿತ ಕಛೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ಸರ್.ಎಂ.ವಿ ಪ್ರತಿಮೆಗೆ ಆಕ್ಟಿಂಗ್ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಮಾಲಾರ್ಪಣೆ ಮಾಡಿದರು.
    ಮಹಾಪ್ರಬಂಧಕರು ಪ್ರಭಾರಿ (ಸಿಬ್ಬಂದಿ ಮತ್ತು ಆಡಳಿತ) ಬಿ. ವಿಶ್ವನಾಥ್, ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ, ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಆರ್. ವೀರಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ೧೦೩ನೇ ಸಂಸ್ಥಾಪನಾ ದಿನ :
     ನಗರದಲ್ಲಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಲುವಾಗಿ ಅಂದಿನ ಮೈಸೂರು ರಾಜ್ಯದ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಾಯ ಮತ್ತು ಮಹಾರಾಜರಾಗಿದ್ದ ಕೃಷ್ಣರಾಜ ಒಡೆಯರ್ ಮಾರ್ಗದರ್ಶನದಲ್ಲಿ ಪ್ರಾಥಮಿಕ ತನಿಖೆಯನ್ನು ೧೯೧೫-೧೯೧೬ರ ನಡುವೆ ನಡೆಸಲಾಯಿತು. ಇದ್ದಿಲು ಇಂಧನ ಬಳಸಿ ಗಟ್ಟಿ ಕಬ್ಬಿಣ ತಯಾರಿಸುವ ಸಾಧ್ಯತೆಯನ್ನು ಪರಿಶೋಧಿಸಲಾಯಿತು. ಇದರ ಮುಖ್ಯ ಉದ್ದೇಶ ಬಾಬಾ ಬುಡನ್ ಗಿರಿ ಬೆಟ್ಟಗಳಲ್ಲಿ ಮತ್ತು ಕೆಮ್ಮಣ್ಣುಗುಂಡಿ ಬಳಿ ಇದ್ದ ಶ್ರೀಮಂತ ಕಬ್ಬಿಣದ ಅದಿರು ನಿಕ್ಷೇಪಗಳನ್ನು ಉಪಯೋಗಿಸಿ ಕಬ್ಬಿಣ ಮತ್ತು ಇತರ ಉತ್ಪನ್ನಗಳ ತಯಾರಿಕೆ ಆಗಿತ್ತು .ಈ ತನಿಖೆಯನ್ನು ಒಂದು ನ್ಯೂಯಾರ್ಕ್ ಮೂಲದ ಸಂಸ್ಥೆ ನಿರ್ವಹಿಸಿತು. ಇದರ ಫಲವಾಗಿ ೧೯೧೮ರಲ್ಲಿ ವಿಶ್ವೇಶ್ವರಯ್ಯನವರು ಈ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಜ.೧೮ರಂದು ಸಂಸ್ಥಾಪನಾ ದಿನ ಆಚರಿಸಿಕೊಂಡು ಬರಲಾಗುತ್ತಿದೆ.