ಭದ್ರಾವತಿ ಜನ್ನಾಪುರ ಎನ್ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನೆಹರೂ ಯುವಕ ಕೇಂದ್ರದ ಪ್ರತಿನಿಧಿಗಳಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಫೆ. ೨೫: ಮಹಿಳೆಯರಿಗೆ ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯ ಸಹ ಬಹಳ ಮುಖ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ತಿಳಿಸಿದರು.
ಅವರು ಗುರುವಾರ ಜನ್ನಾಪುರ ಎನ್ಟಿಬಿ ಕಛೇರಿ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ನೆಹರೂ ಯುವಕ ಕೇಂದ್ರದ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಿಳೆಯರು ಕುಟುಂಬದ ಆಧಾರಸ್ತಂಭಗಳಾಗಿದ್ದು, ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹೆಚ್ಚಿನ ಮಹಿಳೆಯರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯವಾಗಿದೆ ಎಂದರು.
ಶಿವಮೊಗ್ಗ ನೆಹರೂ ಯುವ ಕೇಂದ್ರದ ಜಲ್ಲಾ ಯುವ ಅಧಿಕಾರಿ ಉಲ್ಲಾಸ್ ಮಾತನಾಡಿ, ಯುವ ಸಮುದಾಯಗಳ ಎಲ್ಲಾ ಚಟುವಟಿಕೆಗಳಿಗೆ ಯುವ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ. ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಜೊತೆಗೆ ಸಮುದಾಯದ ಸಂಘಟನೆಯಲ್ಲಿ ಪಾಲ್ಗೊಳ್ಳುವಿಕೆ ಹೆಚ್ಚಿಸಬೇಕೆಂದು ಕರೆ ನೀಡಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಗೌಡ, ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೇವತಿ, ಆಶಾ ಮೇಲ್ವಿಚಾರಕಿ ವಸಂತ ಸೇರಿದಂತೆ ಇನ್ನಿತರರು ಮಹಿಳೆಯರ ಆರೋಗ್ಯ ಕಾಳಜಿ ಕುರಿತು ಮಾಹಿತಿ ನೀಡಿದರು.
ಸ್ನೇಹ ಮಿಲನ ಮಹಿಳಾ ತಂಡದ ಅಧ್ಯಕ್ಷೆ ಕವಿತಾ ಸುರೇಶ್, ಪಿರಾಮಿಡ್ ಧ್ಯಾನಮಾಸ್ಟರ್ ಶುಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಅಧ್ಯಕ್ಷ ತಮಟೆ ಜಗದೀಶ್ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಶಿಕ್ಷಕಿ ಭಾರತಿ ಜಯರಾಮ್ ನಿರೂಪಿಸಿದರು. ಜನಪದ ಕಲಾವಿದ ದಿವಾಕರ್, ರಂಗಭೂಮಿ ಕಲಾವಿದ ಜಿ. ರವಿಕುಮಾರ್ ತಂಡದಿಂದ ಜಾನಪದ ಗೀತೆ ಗಾಯನ ನಡೆಯಿತು.
ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ವಿಪುಲರಾವ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಸವರಾಜ ಜಿ. ಆನೆಕೊಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಬಾಂಧ್ಯವ ಸ್ವಸಹಾಯ ಸಂಘದ ಧನಲಕ್ಷ್ಮಿ ಹಾಗು ನೆಹರೂ ಯುವ ಕೇಂದ್ರದ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.