Sunday, March 28, 2021

ಕಲ್ಮಶ ತುಂಬಿದ ಪರಿಸರದಲ್ಲಿ ಪರಿಶುದ್ಧರಾಗಲು ವಚನಗಳು ಸಹಕಾರಿ : ಡಾ. ವೀಣಾ ಎಸ್. ಭಟ್

ಭದ್ರಾವತಿಯಲ್ಲಿ ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇ  ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಡಾ. ವೀಣಾ ಎಸ್ ಭಟ್‌ರವರಿಗೆ ಶಿವಮೊಗ್ಗ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರು ಸಮ್ಮೇಳನದ ಧ್ವಜ ಹಸ್ತಾಂತರಿಸಿದರು.  
  ಭದ್ರಾವತಿ, ಮಾ. ೨೮: ಪ್ರಸ್ತುತ ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲೂ ಕಲ್ಮಶ ತುಂಬಿಕೊಂಡಿದ್ದು, ಇವುಗಳಿಂದ ಪರಿಶುದ್ಧರಾಗಲು ವಚನಗಳು ಸಹಕಾರಿಯಾಗಿವೆ ಎಂದು ನಗರದ ಸ್ತ್ರೀರೋಗ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಎಸ್. ಭಟ್ ಹೇಳಿದರು.
   ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇ  ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ  ಮಾತನಾಡಿದರು.
   ವಚನಗಳು ದೈನಂದಿನ ಬದುಕಿನ ಭಾಗವಾಗಬೇಕು, ಬಸವಾದಿ ಶರಣರ ಚಾರಿತ್ರಿಕ ಪಾತ್ರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು ಅವರು ಹಾಕಿಕೊಟ್ಟ ಹಾದಿಯಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡಬೇಕು. ಕಾಯಕ, ದಾಸೋಹದ ಪರಿಕಲ್ಪನೆ ಪ್ರತಿಯೊಬ್ಬರಲ್ಲಿಯೂ ಮೂಡಬೇಕು ಆಗ ಮಾತ್ರ ಬದುಕಿನ ಸಾರ್ಥಕತೆ ಸಾಧ್ಯ ಎಂದರು.
   ಜಗಜ್ಯೋತಿ ಬಸವಣ್ಣನವರ ಆಶಯದಂತೆ ನಮ್ಮ ನಡೆ-ನುಡಿ ಒಂದೇ ದಿಕ್ಕಿನಲ್ಲಿ ಸಾಗಬೇಕು. ಸಮಾನತೆ ಪರಿಕಲ್ಪನೆಯೊಂದಿಗೆ ಪರಿಶುದ್ಧ ಮನಸ್ಸು ಹೊಂದುವ ಮೂಲಕ ಬದುಕು ರೂಪಿಸಿಕೊಳ್ಳಬೇಕು. ಪರಿಶುದ್ಧ ಆಲೋಚನೆಗಳಿಂದ ನಮ್ಮ ದೇಹದ ಆರೋಗ್ಯ ವೃದ್ಧಿಸುವ ಜೊತೆಗೆ ಕೊರೋನಾದಂತಹ ಮಹಾಮಾರಿಯನ್ನೂ ಸಹ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಹೊಂದಬಹುದು. ಈ ನಿಟ್ಟಿನಲ್ಲಿ ಅಂತರಂಗ ಬಹಿರಂಗದ ಶುದ್ದಿ ವೈದ್ಯಲೋಕಕ್ಕೂ ಕೂಡ ಸವಾಲಾಗಿ ಪರಿಣಮಿಸುತ್ತದೆ ಎಂದರು.
  ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಶರಣರ ಬದುಕು ಜಾತಿ, ಧರ್ಮ ಸೇರಿದಂತೆ ಯಾವುದೇ ಬೇಧಭಾವವಿಲ್ಲದ ಸರ್ವಸಮಾನತೆಯ ಬದುಕಾಗಿದೆ. ಇದು ಕೇವಲ ೧೨ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ ಇಂದಿಗೂ ಪ್ರಸ್ತುತವಾಗಿದೆ. ಶರಣರ ಆಶಯದಂತೆ ನಮ್ಮ ಬದುಕು ರೂಪುಗೊಳ್ಳಬೇಕು ಎಂದರು.
   ಪ್ರಸ್ತುತ ಕ್ಷೇತ್ರದಲ್ಲಿ ಕೆಲವರು ಜಾತಿ, ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತಿ ರಾಜಕಾರಣ ಮಾಡಲು ಯತ್ನಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ರಾಜಕಾರಣದಲ್ಲಿ ಟೀಕೆ ಟಿಪ್ಪಣಿಗಳು ಸಾಮಾನ್ಯ ಅದನ್ನು ಎದುರಿಸುವ ಶಕ್ತಿ ದೇವರು ನನಗೆ ಕರುಣಿಸಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆಂದು ಇತ್ತೀಚೆಗೆ ಕ್ಷೇತ್ರದಲ್ಲಿ ಉಂಟಾಗಿರುವ ಅಹಿತಕರ ಬೆಳವಣಿಗೆಗಳ ಕುರಿತು ಸಂಗಮೇಶ್ವರ್ ಮಾರ್ಮಿಕವಾಗಿ ನುಡಿದರು.

ಬಲಿಜ ಸಮುದಾಯದ ಅಭಿವೃದ್ಧಿಗೆ ಬದ್ಧ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಭಾನುವಾರ ತಾಲೂಕು ಬಲಿಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರ ೧೮೬ನೇ ಆರಾಧನೆ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಶಾಸಕರ ನಿಧಿಯಿಂದ ೨೫ ಲಕ್ಷ ರು. ಅನುದಾನದ ಮಂಜೂರಾತಿ ಪತ್ರವನ್ನು ಸಮಾಜದ ಅಧ್ಯಕ್ಷರಿಗೆ ಸ್ವಾಮೀಜಿಯವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
    ಭದ್ರಾವತಿ, ಮಾ. ೨೮: ಬಲಿಜ ಸಮಾಜದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
   ಅವರು ಭಾನುವಾರ ತಾಲೂಕು ಬಲಿಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರ ೧೮೬ನೇ ಆರಾಧನೆ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
   ಬಲಿಜ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಸಮಾಜದವರು ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸುವ ಜೊತೆಗೆ ಸಮಾಜದ ಮುಖಂಡರೊಂದಿಗೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.
    ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸುವ ಜೊತೆಗೆ ಇನ್ನೂ ಹೆಚ್ಚಿನ ನೆರವು ನೀಡಲು ಸಿದ್ದನಿದ್ದೇನೆ. ಎಲ್ಲಾ ಸಮಾಜದವರು ನಮ್ಮೊಂದಿಗಿದ್ದಾರೆ. ವಿನಃಕಾರಣ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಒಳ್ಳೆಯ ಕಾರ್ಯಗಳನ್ನು ಮಾಡುವವರಿಗೆ ಸದಾಕಾಲ ಬೆಂಬಲ ನೀಡುವ ಮೂಲಕ ಸಮಾಜವನ್ನು ಕಟ್ಟುವ ಕೆಲಸ ಎಲ್ಲರೂ ಮಾಡಬೇಕೆಂದು ಕರೆ ನೀಡಿದರು.
    ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಕುಳ್ಳೂರು ಸುಕ್ಷೇತ್ರದ ಶ್ರೀ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಸದ್ಗುರು ಬಸವಾನಂದ ಭಾರತಿ ಮಹಾಸ್ವಾಮೀಜಿ ಮಾತನಾಡಿ, ಬಲಿಜ ಸಮಾಜ ಜನಸಂಖ್ಯೆಯಲ್ಲಿ ಚಿಕ್ಕ ಸಮುದಾಯವಾದರೂ ಸಂಘಟನೆಯಲ್ಲಿ ಬಲಿಷ್ಠವಾಗಿದೆ. ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಪ್ರತಿಯೊಬ್ಬರು ಸಮಾಜಕ್ಕೆ ತಮ್ಮದೇ ಆದ ಸೇವೆಯನ್ನು ನೀಡಬೇಕು. ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರು ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಇಂದಿಗೂ ಸ್ಮರಿಸುತ್ತೇವೆ. ಸಮಾಜಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡವರು ಕೊನೆಯವರೆಗೂ ನೆನಪಿನಲ್ಲಿ ಉಳಿದುಕೊಳ್ಳುತ್ತಾರೆ. ಇದನ್ನು ಎಲ್ಲರೂ ಅರ್ಥಮಾಡಿಕೊಂಡು ಮುನ್ನಡೆಬೇಕೆಂದರು.
   ಬಲಿಜ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ ನಡೆಸಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಸುಬ್ರಮಣ್ಯ ಅಧ್ಯಕ್ಷತೆ ವಹಿಸಿದ್ದರು.
    ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್ ನಿರೂಪಿಸಿದರು.
   ಗೌರವಾಧ್ಯಕ್ಷ ವೈ.ಎಸ್ ರಾಮಮೂರ್ತಿ, ಉಪಾಧ್ಯಕ್ಷರಾದ ಪದ್ಮಮ್ಮ ಹನುಮಂತಪ್ಪ, ಜೆ.ಎಸ್ ಸಂಜೀವಮೂರ್ತಿ, ಖಜಾಂಚಿ ಕೆ.ಜಿ. ಕುಮಾರಸ್ವಾಮಿ, ಸಹಕಾರ್ಯದರ್ಶಿ ದಶರಥಕುಮಾರ್, ಸಂಘಟನಾ ಕಾರ್ಯದರ್ಶಿ ಜಂಗಮಪ್ಪ ಸೇರಿದಂತೆ ಸಂಘದ ನಿರ್ದೇಶಕರು ಸೇರಿದಂತೆ ತಾಲೂಕಿನ ನಗರ ಹಾಗು ಗ್ರಾಮಾಂತರ ಭಾಗಗಳಿಂದ ಆಗಮಿಸಿದ್ದ ಬಲಿಜ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ನಮ್ಮನ್ನು ನಾವು ಅರ್ಥ ಮಾಡಿಕೊಳ್ಳದಿದ್ದರೆ ಭವಿಷ್ಯದಲ್ಲಿ ಆತಂಕ : ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ

ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಭಾನುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇಯ ಶರಣ ಸಾಹಿತ್ಯ ಸಮ್ಮೇಳನವನ್ನು ಕುವೆಂಪು ವಿಶ್ವ ವಿದ್ಯಾನಿಯಲದ ಕುಲಪತಿ ಪ್ರೊ. ಡಾ. ಬಿ.ಪಿ ವೀರಭದ್ರಪ್ಪ ಉದ್ಘಾಟಿಸಿದರು.
   ಭದ್ರಾವತಿ, ಮಾ. ೨೮: ಕೋವಿಡ್-೧೯ರ ಪರಿಣಮ ಕಳೆದ ೧ ವರ್ಷದಿಂದ ಮನುಷ್ಯನ ಬದುಕು ಸಂಯಮ ಕಳೆದು ಕೊಂಡಿದ್ದು, ನಮ್ಮನ್ನು ನಾವು ಸ್ವಯಂ ನಿಯಂತ್ರಣಕ್ಕೆ ಒಳಗಾಗಿ ಸ್ವೇಚ್ಛೆಯಿಂದ ಬದುಕುವಂತಾಗಿದೆ. ಈಗಲೂ ನಾವು ನಮ್ಮನ್ನು ಅರ್ಥ ಮಾಡಿಕೊಳ್ಳದಿದ್ದರೆ ಭವಿಷ್ಯದಲ್ಲಿ ದೊಡ್ಡ ಆತಂಕ ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
    ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇಯ ಶರಣ ಸಾಹಿತ್ಯ ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
   ಮನುಷ್ಯನ ಮಿತಿಮೀರಿದ ದುರಾಸೆಗಳಿಗೆ ಸ್ವಯಂ ಕಡಿವಾಣ ಹಾಕುವಲ್ಲಿ ಕೋವಿಡ್-೧೯ ಯಶಸ್ವಿಯಾಗಿದೆ. ಇಂದು ಮನುಷ್ಯ ಕೇವಲ ಹಣ, ಅಧಿಕಾರವೇ ಬದುಕು ಎಂಬುದನ್ನು ತಿಳಿದುಕೊಂಡಿದ್ದಾನೆ. ಇದರಿಂದ ತನ್ನತನವನ್ನು ಕಳೆದುಕೊಂಡಿದ್ದಾನೆ.  ಕೋವಿಡ್-೧೯ರ ಪರಿಣಾಮ ಕಳೆದ ೧ ವರ್ಷದಿಂದ ಏಕಾಂಗಿಯಾಗಿ ಕಾಲ ಕಳೆಯುವಂತಾಗಿದೆ. ಒಬ್ಬಂಟಿಯಾಗಿ ಮನೆಯಲ್ಲಿ ಉಳಿದುಕೊಳ್ಳಲಾಗದ ಬಹಳಷ್ಟು ಮಂದಿ ಮಾನಸಿಕವಾಗಿ ಅಸ್ವಸ್ಥತೆಗೆ ಒಳಗಾಗಿದ್ದಾರೆ. ಕೆಲವರು ಗೃಹ ಬಂಧನ, ಇನ್ನೂ ಕೆಲವರು ಸೆರೆವಾಸ ಎಂಬ ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ. ಆದರೆ ವಾಸ್ತವವಾಗಿ ಮನೆಯಲ್ಲಿನ ಪ್ರೀತಿ, ಸಹಬಾಳ್ವೆ, ಕುಟಂಬದ ಮಹತ್ವ ಅರಿಯಲು ಕೋವಿಡ್-೧೯ ಸಹಕಾರಿಯಾಗಿದೆ. ಇದನ್ನು ನಾವುಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಪುನಃ ನಮ್ಮ ಬದುಕು ಶರಣರ ಬದುಕಿನ ಕಡೆ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ ಅವರ ವಿಚಾರಧಾರೆಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕೆಂದರು.
    ಸಮ್ಮೇಳನ ಉದ್ಘಾಟಿಸಿದ ಕುವೆಂಪು ವಿಶ್ವ ವಿದ್ಯಾನಿಯಲದ ಕುಲಪತಿ ಪ್ರೊ. ಡಾ. ಬಿ.ಪಿ ವೀರಭದ್ರಪ್ಪ ಮಾತನಾಡಿ, ೧೨ನೇ ಶತಮಾನದ ಶರಣರ ಬದುಕು ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಎಲ್ಲರನ್ನು ನಮ್ಮವರು ಎಂದು ಕಾಣುವ ಮನೋಭಾವ, ಕಾಯಕದ ಮಹತ್ವ, ದಾಸೋಹದ ಮಹತ್ವ, ಸಮಸಮಾಜ ನಿರ್ಮಾಣದ ಪರಿಕಲ್ಪನೆ. ಇವೆಲ್ಲವನ್ನು ವಚನ ಸಾಹಿತ್ಯದ ಮೂಲಕ ಕೊಡುಗೆಯಾಗಿ ನೀಡಿದ ಶರಣರ ಬದುಕು ಆದರ್ಶಪ್ರಾಯ. ಅವರ ಆದರ್ಶಗಳನ್ನು ಇಂದಿನ ಸಮಾಜದಲ್ಲಿ ನಾವುಗಳು ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ. ನಮ್ಮ ಭವಿಷ್ಯದ ಮುಂದಿನ ಗುರಿ ಯಾವ ನಿಟ್ಟಿನಲ್ಲಿ ಸಾಗಬೇಕು. ಎದುರಾಗುವ ಸವಾಲುಗಳು ಸೇರಿದಂತೆ ಎಲ್ಲವನ್ನು ಈ ರೀತಿಯ ಸಾಹಿತ್ಯ ಸಮ್ಮೇಳನಗಳಿಂದ ಕಂಡುಕೊಳ್ಳಲು ಸಾಧ್ಯ ಎಂದರು.
     ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ವಿರುಪಾಕ್ಷಪ್ಪ ಪ್ರಾಸ್ತಾವಿಕ ಹಾಗು ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಆಶಯನುಡಿಗಳನ್ನಾಡಿದರು.
     ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷೆ ಡಾ. ವೀಣಾ ಎಸ್. ಭಟ್, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ ಮತ್ತು ಶ್ರೀ ಬಸವೇಶ್ವರ ಸಭಾಭವನ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಡಾ. ಬಿ.ಜಿ ಧನಂಜಯ್ಯ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿಕೊಟ್ಟರು. ಎನ್.ಎಸ್ ಮಲ್ಲಿಕಾರ್ಜುನಯ್ಯ ಸ್ವಾಗತಿಸಿದರು. ಕತ್ತಲಗೆರೆ ತಿಮ್ಮಪ್ಪ ನಿರೂಪಿಸಿದರು.