Monday, April 26, 2021

ಅಭ್ಯರ್ಥಿಗಳಿಂದ ಕೊನೆಯ ಕಸರತ್ತು : ಮನೆ ಮನೆ ಮತಯಾಚನೆ

ಭದ್ರಾವತಿ, ಏ. ೨೬: ನಗರಸಭೆ ೩೪ ವಾರ್ಡ್‌ಗಳ ಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳಿಂದ ಸೋಮವಾರ ಮತಯಾಚನೆಯ ಕೊನೆಯ ಕಸರತ್ತು ನಡೆಯಿತು. ಶನಿವಾರ ಮತ್ತು ಭಾನುವಾರ ವೀಕ್ ಎಂಡ್ ಲಾಕ್‌ಡೌನ್ ಹಿನ್ನಲೆಯಲ್ಲಿ ಬಹಿರಂಗ ಪ್ರಚಾರ ನಡೆಸಲು ಸಾಧ್ಯವಾಗಲಿಲ್ಲ. ಈ ನಡುವೆ ಭಾನುವಾರ ಸಂಜೆ ಬಹಿರಂಗ ಪ್ರಚಾರ ಮುಕ್ತಾಯಗೊಂಡಿತು. ಈ ಹಿನ್ನಲೆಯಲ್ಲಿ ಸೋಮವಾರ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
      ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ  ಹೆಬ್ಬಂಡಿ ಮತ್ತು ಜೇಡಿಕಟ್ಟೆ ವ್ಯಾಪ್ತಿಯ ವಾರ್ಡ್ ನಂ.೧ರಲ್ಲಿ ಒಟ್ಟು ೩೯೨೧ ಮತದಾರರಿದ್ದು,  ಒಟ್ಟು  ೪ ಮಂದಿ  ಕಣದಲ್ಲಿದ್ದಾರೆ.  ಬಿಜೆಪಿ ಪಕ್ಷದಿಂದ  ಬಿ.ಎಸ್ ಉಮಾವತಿ,  ಕಾಂಗ್ರೆಸ್ ಪಕ್ಷದಿಂದ ಮೀನಾಕ್ಷಿ , ಜೆಡಿಎಸ್ ಪಕ್ಷದಿಂದ ಟಿ. ರೇಖಾ ಹಾಗು ಒಬ್ಬರು ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದಾರೆ. ಈ ವಾರ್ಡ್‌ನಲ್ಲಿ ಕಳೆದ ೨ ಅವಧಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಜೆಡಿಎಸ್ ಪಕ್ಷದಿಂದ  ಆಯ್ಕೆಯಾಗಿದ್ದರು.
    ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ಲೋಯರ್‌ಹುತ್ತಾ ವ್ಯಾಪ್ತಿಯ ವಾರ್ಡ್ ನಂ.೨ರಲ್ಲಿ ಒಟ್ಟು ೩೩೧೮ ಮತದಾರರಿದ್ದು, ಈ ಬಾರಿ ೬ ಮಂದಿ ಚುನಾವಣಾ ಕಣದಲ್ಲಿದ್ದಾರೆ. ಜೆಡಿಎಸ್ ಪಕ್ಷದಿಂದ ನಗರಸಭೆ ಮಾಜಿ ಸದಸ್ಯ ಎಸ್.ಪಿ ಮೋಹನ್‌ರಾವ್ ಈ ಬಾರಿ ತಮ್ಮ ಪತ್ನಿ ಶಾಂತ ಅವರನ್ನು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಲಿಂಗಾಯಿತ ಸಮುದಾಯದ ಗೀತಾ ರಾಜ್‌ಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ ಪಕ್ಷದಿಂದ ಒಕ್ಕಲಿಗ ಸಮುದಾಯದ ಕೆ. ಲತಾ ಅವರನ್ನು ಕಣಕ್ಕಿಳಿಸಲಾಗಿದೆ. ಈ ವಾರ್ಡ್‌ನಲ್ಲಿ ಕಳೆದ ಬಾರಿ ಕೆಜೆಪಿ ಪಕ್ಷದಿಂದ ಸಹಕಾರಿ ಧುರೀಣ ಕೆ.ಎನ್ ಭೈರಪ್ಪಗೌಡ ಆಯ್ಕೆಯಾಗಿದ್ದರು.
      ವರ್ತಕರು, ತಮಿಳರು, ಗೌಳಿಗರು, ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಬಿ.ಎಚ್ ರಸ್ತೆ ಎಡ ಮತ್ತು ಮತ್ತು ಬಲಭಾಗ, ಚಾಮೇಗೌಡ ಏರಿಯಾ ವ್ಯಾಪ್ತಿಯನ್ನು ಒಳಗೊಂಡಿರುವ ವಾರ್ಡ್ ನಂ.೩ರಲ್ಲಿ ಒಟ್ಟು ೪೩೬೭ ಮತದಾರರಿದ್ದು, ಈ ಬಾರಿ ಒಟ್ಟು ೯ ಮಂದಿ ಕಣದಲ್ಲಿದ್ದಾರೆ. ಬಿಜೆಪಿ ಪಕ್ಷದ ವತಿಯಿಂದ ಯುವ ಮೋರ್ಚಾ ಕಾರ್ಯದರ್ಶಿ ನಕುಲ್ ಜೆ ರೇವಣಕರ್ ಅವರನ್ನು, ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಕ್ರಿಶ್ಚಿಯನ್ ಸಮುದಾಯದ ಜಾರ್ಚ್ ಅವರನ್ನು ಕಣಕ್ಕಿಳಿಸಲಾಗಿದೆ. ಜೆಡಿಎಸ್ ಪಕ್ಷದ ವತಿಯಿಂದ ನಗರಸಭೆ ಮಾಜಿ ಉಪಾಧ್ಯಕ್ಷೆ ಬಿ.ಕೆ ದೇವಿಕಾ ಹಾಗು ನಗರಸಭೆ ಮಾಜಿ ಸದಸ್ಯ ರಮೇಶ್ ದಂಪತಿ ಪುತ್ರ ಬಿ.ಆರ್ ಉಮೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಪಕ್ಷೇತರ ಅಭ್ಯರ್ಥಿಗಳಾಗಿ ಸ್ನೇಹ ಜೀವಿ ಬಳಗದ ಸದಸ್ಯ ಯೋಗೀಶ್, ಮುಖಂಡ ಸ್ಟೀಲ್‌ಟೌನ್ ರಮೇಶ್, ನವೀನ್‌ಕುಮಾರ್ ಸೇರಿದಂತೆ ೬ ಮಂದಿ ಸ್ಪರ್ಧೆಯಲ್ಲಿದ್ದಾರೆ. ಈ ವಾರ್ಡ್‌ನಲ್ಲಿ ಕಳೆದ ಬಾರಿ ಜೆಡಿಎಸ್ ಪಕ್ಷದಿಂದ ಎಸ್. ಮೀನಾಕ್ಷಿ ಆಯ್ಕೆಯಾಗಿದ್ದರು.
     ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ,  ಗ್ರಾಮದೇವತೆ ಶ್ರೀ ಹಳದಮ್ಮ ದೇವಿ ದೇವಸ್ಥಾನ ಸೇರಿದಂತೆ ಇನ್ನಿತರ ಧಾರ್ಮಿಕ ಪುಣ್ಯ ಕ್ಷೇತ್ರಗಳನ್ನು ಹೊಂದಿರುವ ಕನಕಮಂಟಪ ಮೈದಾನ ವ್ಯಾಪ್ತಿಯ ವಾರ್ಡ್ ನಂ. ೪ರಲ್ಲಿ ಒಟ್ಟು ೪೪೦೯ ಮತದಾರರಿದ್ದು, ೬ ಮಂದಿ ಚುನಾವಣಾ ಕಣದಲ್ಲಿದ್ದಾರೆ.  ಶಾಸಕ ಬಿ ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿ ಎಚ್. ವಿದ್ಯಾ ಕಾಂಗ್ರೆಸ್ ಪಕ್ಷದಿಂದ, ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಚನ್ನೇಶ್ ರವರ ಪತ್ನಿ ಅನುಪಮಾ, ಜೆಡಿಎಸ್ ಪಕ್ಷದ ಮುಖಂಡ ಹರೀಶ್ ರವರ ಪತ್ನಿ ಉಷಾ ಜೆಡಿಎಸ್ ಅಭ್ಯರ್ಥಿಯಾಗಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಗೀತಾ ಬಸವರಾಜ್ ಹಾಗು ಇಬ್ಬರು ಪಕ್ಷೇತರರು ಸ್ಪರ್ಧೆಯಲ್ಲಿದ್ದಾರೆ. ಕಳೆದ ಬಾರಿ ಈ ವಾರ್ಡ್ ನಲ್ಲಿ ಜೆಡಿಎಸ್ ಪಕ್ಷದಿಂದ ಕೆ.ಎನ್ ವಿದ್ಯಾಶ್ರೀ ಆಯ್ಕೆಯಾಗಿದ್ದರು. ಈ ಬಾರಿ ಈ ವಾರ್ಡ್  ಹೆಚ್ಚು ಗಮನ ಸೆಳೆಯುತ್ತಿದ್ದು, ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಕಂಡು ಬರುತ್ತಿದೆ.
      ಮುಸ್ಲಿಂ, ಕುರುಬರು, ಮರಾಠಿಗರು ಹೆಚ್ಚಾಗಿರುವ ಕೋಟೆ ಏರಿಯಾ ವ್ಯಾಪ್ತಿಯ ವಾರ್ಡ್ ನಂ.೫ರಲ್ಲಿ ಒಟ್ಟು ೩೪೦೫ ಮತದಾರರಿದ್ದು, ಈ ಬಾರಿ ಒಟ್ಟು ೬ ಮಂದಿ ಚುನಾವಣಾ ಕಣದಲ್ಲಿದ್ದಾರೆ. ನಗರಸಭೆ ಮಾಜಿ ಅಧ್ಯಕ್ಷೆ ವೈ. ರೇಣುಕಾ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದು, ಬಿಜೆಪಿ ಪಕ್ಷದಿಂದ ಮುಖಂಡ ಬಿ.ಎಸ್ ನಾರಾಯಣಪ್ಪನವರ ಪತ್ನಿ ಬಿ. ಶಶಿಕಲಾ ಅವರನ್ನು ಕಣಕ್ಕಿಳಿಸಲಾಗಿದೆ. ಹಾಲಿ ನಗರಸಭಾ ಸದಸ್ಯ ಮುರ್ತುಜಾ ಖಾನ್ ತಮ್ಮ ಪತ್ನಿ ತಬಸುಮ್ ಸುಲ್ತಾನ್ ಅವರನ್ನು ಜೆಡಿಎಸ್  ಪಕ್ಷದಿಂದ ಕಣಕ್ಕಿಳಿಸಿದ್ದು, ಆಮ್ ಆದ್ಮಿ ಪಾರ್ಟಿಯಿಂದ ರೇಷ್ಮಬಾನು, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ವತಿಯಿಂದ ನಸೀಮಾ ಖಾನಂ ಹಾಗು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸಹ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಕಳೆದ ಬಾರಿ ಈ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದಿಂದ ಮುರ್ತುಜಾ ಖಾನ್ ಆಯ್ಕೆಯಾಗಿದ್ದರು.
     ಶ್ರೀಮಂತ ವರ್ಗದವರು ಹೆಚ್ಚಾಗಿ  ವಾಸಿಸುತ್ತಿರುವ ಸಿದ್ಧಾರೂಢ ನಗರ ವ್ಯಾಪ್ತಿಯ ವಾರ್ಡ್ ನಂ.೬ರಲ್ಲಿ  ಒಟ್ಟು ೩೮೭೫ ಮತದಾರರಿದ್ದು, ಒಟ್ಟು ೪ ಮಂದಿ ಚುನಾವಣಾ ಕಣದಲ್ಲಿದ್ದಾರೆ.  ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಎಚ್ ರಾಮಪ್ಪ ಪುತ್ರ, ಬಿಜೆಪಿ  ಮಂಡಲ   ಕಾರ್ಯದರ್ಶಿ ಕೆ.ಆರ್ ಸತೀಶ್ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ, ನಿವೃತ್ತ ಅಧಿಕಾರಿ ರಾಮಕೃಷ್ಣಪ್ಪ ಅವರ ಪುತ್ರ ಆರ್. ಶ್ರೇಯಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ, ತಾಲೂಕು  ಪಂಚಾಯಿತಿ ಮಾಜಿ ಅಧ್ಯಕ್ಷ  ಚನ್ನಪ್ಪ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಹಾಗು  ಕುವೆಂಪು ಪ್ರವಾಸಿ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಡಿ. ರಾಜು  ಅವರ ಪತ್ನಿ ಸುಕನ್ಯಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಯಲ್ಲಿದ್ದಾರೆ. ಕಳೆದ ಬಾರಿ ಈ ವಾರ್ಡ್ ನಲ್ಲಿ ಜೆಡಿಎಸ್ ಪಕ್ಷದಿಂದ  ಶಿವರಾಜ್ ಆಯ್ಕೆಯಾಗಿದ್ದರು.
     ಬಹುತೇಕ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ದುರ್ಗಿಗುಡಿ ಹಾಗು ಖಲಂದರ್ ನಗರ ವ್ಯಾಪ್ತಿಯ ವಾರ್ಡ್ ನಂ.೭ರಲ್ಲಿ ಒಟ್ಟು ೩೭೦೩ ಮತದಾರರಿದ್ದು, ಈ ಬಾರಿ ೪ ಮಂದಿ ಚುನಾವಣಾ ಕಣದಲ್ಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪುತ್ರ ಬಿ.ಎಂ ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲಾಗಿದೆ. ಈ ಹಿನ್ನಲೆಯಲ್ಲಿ ಈ ವಾರ್ಡ್ ಹೆಚ್ಚು ಗಮನ ಸೆಳೆಯುತ್ತಿದೆ. ಹಾಲಿ ನಗರಸಭಾ ಸದಸ್ಯ ಶಿವರಾಜ್ ತಮ್ಮ ಪತ್ನಿ ಎಂ. ರೇಣುಕರನ್ನು, ಬಿಜೆಪಿ ಪಕ್ಷದಿಂದ  ಆಟೋ ಮೂರ್ತಿ ಅವರನ್ನು ಹಾಗು , ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ವತಿಯಿಂದ ದೇವೇಂದ್ರ ಪಾಟೀಲ್ ಅವರನ್ನು ಕಣಕ್ಕಿಳಿಸಲಾಗಿದೆ. ಕಳೆದ ಬಾರಿ ಈ ವಾರ್ಡ್‌ನಲ್ಲಿ ಟಿಪ್ಪು ಸುಲ್ತಾನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.

ಶಾಂತಿಯುತ ಮತದಾನಕ್ಕೆ ನಾವಿದ್ದೇವೆ : ಪೊಲೀಸ್ ಇಲಾಖೆಯಿಂದ ಜಾಗೃತಿ

ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ


ಭದ್ರಾವತಿ ನಗರಸಭೆ ೩೪ ವಾರ್ಡ್‌ಗಳ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ಸಂಜೆ ಪೊಲೀಸ್ ಇಲಾಖೆ ವತಿಯಿಂದ ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.
    ಭದ್ರಾವತಿ, ಏ. ೨೬:  ನಗರಸಭೆ ೩೪ ವಾರ್ಡ್‌ಗಳ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ಸಂಜೆ ಪೊಲೀಸ್ ಇಲಾಖೆ ವತಿಯಿಂದ ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.
     ಮತಗಟ್ಟೆಗಳಿಗೆ ಮತದಾರರು ನಿರ್ಭೀತಿಯಿಂದ ಆಗಮಿಸುವ ಜೊತೆಗೆ ಮಾಸ್ಕ್, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರ ಸೇರಿದಂತೆ  ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮತದಾನ ಯಶಸ್ವಿಗೊಳಿಸುವಂತೆ ಇಲಾಖೆ ವತಿಯಿಂದ ಮನವಿ ಮಾಡಲಾಯಿತು.    
        ಚುನಾವಣಾ ಹಿನ್ನಲೆಯಲ್ಲಿ ಭದ್ರತೆಗಾಗಿ ೨-ಡಿವೈಎಸ್‌ಪಿ,  ೪-ಸರ್ಕಲ್ ಇನ್ಸ್‌ಪೆಕ್ಟರ್, ೧೬-ಸಬ್ ಇನ್ಸ್‌ಪೆಕ್ಟರ್, ೩೭-ಎಎಸ್‌ಐ ಮತ್ತು ೨೩೧-ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು  ನಿಯೋಜಿಸಲಾಗಿದೆ.



ಕೊರೋನಾ ೨ನೇ ಅಲೆ ಭೀತಿ ನಡುವೆ ೩೪ ವಾರ್ಡ್‌ಗಳ ಮತದಾನಕ್ಕೆ ಕ್ಷಣಗಣನೆ

ಮಸ್ಟರಿಂಗ್ ಕೇಂದ್ರಗಳಿಂದ ನಿಯೋಜನೆಗೊಂಡ ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು-ಸಿಬ್ಬಂದಿಗಳು


ಮಂಗಳವಾರ ನಡೆಯಲಿರುವ ಭದ್ರಾವತಿ ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಚುನಾವಣಾ ಮಸ್ಟರಿಂಗ್ ಕೇಂದ್ರದಲ್ಲಿ ಅಧಿಕಾರಿಗಳು-ಸಿಬ್ಬಂದಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜನೆಗೊಳಿಸಿರುವುದು.
     ಭದ್ರಾವತಿ, ಏ. ೨೬: ರಾಜ್ಯಾದ್ಯಂತ ಕೊರೋನಾ ೨ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಒಂದೆಡೆ ರಾಜ್ಯ ಸರ್ಕಾರ ಏ.೨೭ರ ರಾತ್ರಿಯಿಂದ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಮತ್ತೊಂದೆಡೆ ಚುನಾವಣಾ ಆಯೋಗ ಹಲವು ಸವಾಲುಗಳೊಂದಿಗೆ ಸ್ಥಳೀಯ ಸಂಸ್ಥೆಗಳ ಚನಾವಣೆ ಮತದಾನವನ್ನು ಯಶಸ್ವಿಯಾಗಿ ನಡೆಸಲು ಸಿದ್ದತೆಗಳನ್ನು ಕೈಗೊಂಡಿದೆ. ಈ ಬಾರಿ ನಗರಸಭೆ ೩೫ ವಾರ್ಡ್‌ಗಳ ಪೈಕಿ ೩೪ ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಯೊಬ್ಬರು ನಿಧನ ಹೊಂದಿರುವ ಹಿನ್ನಲೆಯಲ್ಲಿ ಒಂದು ವಾರ್ಡಿನ ಚುನಾವಣೆ ರದ್ದಾಗಿದೆ.
     ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಚುನಾವಣಾ ಮಸ್ಟರಿಂಗ್ ಕೇಂದ್ರದಲ್ಲಿ ಈ ಕುರಿತು ಮಾಹಿತಿ ನೀಡಿದ ಚುನಾವಣಾ ನೋಡಲ್ ಅಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಈ ಬಾರಿ ಚುನಾವಣೆಯಲ್ಲಿ ಒಟ್ಟು ೧,೨೬,೬೧೩ ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಈ ಪೈಕಿ ೬೧,೩೫೫ ಪುರುಷ ಹಾಗು ೬೫,೨೫೮ ಮಹಿಳಾ ಮತದಾರರಿದ್ದು, ೨ ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು ೧೩೯ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಸುಮಾರು ೬೦೦ ಮಂದಿ ಚುನಾವಣಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದು, ಒಂದು ಮತಗಟ್ಟೆಗೆ ತಲಾ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಹಾಗು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಅಗತ್ಯವಿರುವಷ್ಟು ಸಿಬ್ಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ. ವಿವಿಧ ರಾಜಕೀಯ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಶಾಂತಿಯುತ ಮತದಾನಕ್ಕೆ ಸಹಕರಿಸುವಂತೆ ಹಾಗು ಸರ್ಕಾರದ ಆದೇಶದಂತೆ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಉಪಸ್ಥಿತರಿದ್ದರು.
           ಅಭ್ಯರ್ಥಿಗಳಲ್ಲಿ ಆತಂಕ:
    ರಾಜ್ಯ ಸರ್ಕಾರ ಮಂಗಳವಾರ ರಾತ್ರಿಯಿಂದ ಕರ್ಪ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಕೆಲ ಸಮಯ ಅಭ್ಯರ್ಥಿಗಳಲ್ಲಿ ಚುನಾವಣೆ ಮುಂದೂಡುವ ಆತಂಕ ಕಂಡು ಬಂದಿತು.  ಅಲ್ಲದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಮಂಗಳವಾರ ನಡೆಯಬೇಕಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲಾಗಿದೆ ಎಂಬ ಸುದ್ದಿಯಿಂದಾಗಿ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದರು. ಕೆಲ ಸಮಯದ ನಂತರ ಜಿಲ್ಲಾಧಿಕಾರಿಗಳು ಚುನಾವಣೆ ನಡೆಯುವ ಬಗ್ಗೆ ಸ್ಪಷ್ಟನೆ ಹೊರಡಿಸಿದ ಹಿನ್ನಲೆಯಲ್ಲಿ ಆತಂಕದಿಂದ ಅಭ್ಯರ್ಥಿಗಳು ನಿರಾಳರಾಗಿದ್ದು, ಮತದಾರರನ್ನು ಸೆಳೆಯಲು ಕೊನೆ ಕ್ಷಣದ ತಂತ್ರಗಾರಿಕೆಗಳಿಗೆ ಮೊರೆ ಹೋಗಿದ್ದಾರೆ.
       ಚುನಾವಣಾ ಅಧಿಕಾರಿಗಳು-ಸಿಬ್ಬಂದಿಗಳಿಗೂ ಗೊಂದಲ:
    ಪ್ರಸ್ತುತ ಪರಿಸ್ಥಿತಿಯಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ತಕ್ಷಣದ ತೀರ್ಮಾನಗಳಿಗೆ ತಕ್ಕಂತೆ ಅಧಿಕಾರಿಗಳು-ಸಿಬ್ಬಂದಿಗಳು ಬದಲಾವಣೆಗೊಂಡು ಗೊಂದಲದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಅಲ್ಲದೆ ಕೊರೋನಾ ೨ನೇ ಅಲೆ ಆತಂಕ ಸಹ ಅಧಿಕಾರಿಗಳು-ಸಿಬ್ಬಂದಿಗಳನ್ನು ಕಾಡುತ್ತಿದ್ದು, ಆದರೂ ಸಹ  ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ.