Monday, May 3, 2021

ಬಿ.ಇ ಪದವಿಧರೆ ಈಗ ನಗರಸಭೆ ಸದಸ್ಯೆ

ಭದ್ರಾವತಿ ನಗರಸಭೆ ೩೧ನೇ ವಾರ್ಡ್‌ಗೆ ನೂತನವಾಗಿ ಆಯ್ಕೆಯಾಗಿರುವ ಬಿ.ಇ ಪದವಿಧರೆ ಪಲ್ಲವಿ ದಿಲೀಪ್ ಗೆಲುವಿನ ಸಂಭ್ರಮದಲ್ಲಿರುವುದು.
    ಭದ್ರಾವತಿ, ಮೇ. ೩: ಜಿಂಕ್‌ಲೈನ್ ಕೊಳಚೆ ಪ್ರದೇಶ ವ್ಯಾಪ್ತಿಯನ್ನು ಹೊಂದಿರುವ ನಗರಸಭೆ ವಾರ್ಡ್ ನಂ.೩೧ರ ಮತದಾರರು ಈ ಬಾರಿ ಬಿ.ಇ ಪದವಿಧರೆಯನ್ನು ನಗರಸಭೆ ಸದಸ್ಯೆಯನ್ನಾಗಿ ಆಯ್ಕೆ ಮಾಡಿದ್ದಾರೆ.
     ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ದಿಲೀಪ್ ಅವರ ಪತ್ನಿ ಪಲ್ಲವಿ ನೂತನ ಸದಸ್ಯೆಯಾಗಿದ್ದು, ವಾರ್ಡ್‌ನ ಹಲವು ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಕುಟುಂಬ ಸದಸ್ಯರ ಸಹಕಾರದೊಂದಿಗೆ ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀಣಾ ಲಕ್ಷಣ ವಿರುದ್ಧ ೩೧೮ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
    ತಮ್ಮ ಗೆಲುವಿನ ಸಂತಸವನ್ನು ಪತ್ರಿಕೆಯೊಂದಿಗೆ ಹಂಚಿಕೊಂಡ ಪಲ್ಲವಿ, ಬಿ.ಇ ಪದವಿ ನಂತರ ಉದ್ಯೋಗಕ್ಕೆ ಸೇರಿಕೊಂಡಿದ್ದೆನು. ಮದುವೆ ನಂತರ ಉದ್ಯೋಗ ತೊರೆದು ಸದ್ಯ ಗೃಹಿಣಿಯಾಗಿ ಕುಟುಂಬ ಜವಾಬ್ದಾರಿಯನ್ನು ನಿಬಾಯಿಸುತ್ತಿದ್ದು, ಇದೀಗ ವಾರ್ಡ್ ನಿವಾಸಿಗಳು ನನ್ನನ್ನು ನಗರಸಭೆ ಸದಸ್ಯೆಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ನಾನು ಸಹ ವಾರ್ಡ್‌ನಲ್ಲಿಯೇ ಹುಟ್ಟಿ ಬೆಳೆದಿದ್ದು, ಈ ಹಿನ್ನಲೆಯಲ್ಲಿ ಇಲ್ಲಿನ ಜನರಿಗೆ ಚಿರಪರಿಚಿತಳಾಗಿದ್ದೇನೆ. ಅಲ್ಲದೆ ಇಲ್ಲಿನ ಎಲ್ಲಾ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ. ನಗರಸಭೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜೊತೆಗೆ ವಾರ್ಡ್ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
     ಪತಿ ದಿಲೀಪ್ ಮಾತನಾಡಿ, ಪ್ರಸ್ತುತ ನಗರಸಭೆ ಸದಸ್ಯರ ಪೈಕಿ ಪತ್ನಿ ಪಲ್ಲವಿ ಹೊರತುಪಡಿಸಿ ಬಿ.ಇ ಪದವಿ ಪಡೆದವರು ಯಾರು ಇಲ್ಲ. ಇವರ ವಿದ್ಯಾರ್ಹತೆಯನ್ನು ಗುರುತಿಸಿ ಮತದಾರರು ಬೆಂಬಲಿಸಿದ್ದಾರೆ. ಮತದಾರರು ಇವರ ಮೇಲೆ ಹೊಂದಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳಲಾಗುವುದು. ಅಲ್ಲದೆ ಪತ್ನಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.

ನಗರಸಭೆ ಚುನಾವಣೆ ನಿರೀಕ್ಷೆ ಹುಸಿ, ೧೦ ಸ್ಥಾನ ಪೈಕಿ ಕೇವಲ ೪ ಸ್ಥಾನ : ಸಂಸದ ಬಿ.ವೈ ರಾಘವೇಂದ್ರ

ಬಿ.ವೈ. ರಾಘವೇಂದ್ರ
    ಭದ್ರಾವತಿ, ಮೇ. ೩: ನಗರಸಭೆ ಚುನಾವಣೆ ಫಲಿತಾಂಶ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಬಿಜೆಪಿ ಪಕ್ಷ ಕೇವಲ ೪ ಸ್ಥಾನಗಳನ್ನು ಮಾತ್ರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸಲಾವುದು ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.
   ಅವರು ಸೋಮವಾರ ನಗರಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ್ದು, ಈ ಬಾರಿ ನಗರಸಭೆ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದ್ದೇವೆ. ೧೦ ಸ್ಥಾನಗಳು ಬರುವ ನಿರೀಕ್ಷೆ ಇತ್ತು. ಆದರೆ ಬೂತ್‌ಮಟ್ಟದ ಕಾರ್ಯಕರ್ತರ ಕೊರತೆಯಿಂದಾಗಿ ಕೇವಲ ೪ ಸ್ಥಾನಗಳನ್ನು ಮಾತ್ರ ಪಡೆದುಕೊಳ್ಳಲು ಸಾಧ್ಯವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಈ ರೀತಿ ಆಗದಂತೆ ಎಚ್ಚರವಹಿಸಲಾಗುವುದು ಎಂದರು.
      ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ :
    ನಗರದಲ್ಲಿ ಸುಮಾರು ೨೩ ಕೊಳಚೆ ಪ್ರದೇಶಗಳಿದ್ದು, ಸುಮಾರು ೬೩೮೮ ಮನೆಗಳಿಗೆ ಮುಂದಿನ ಒಂದು ತಿಂಗಳ ಒಳಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು.
    ಹಕ್ಕುಪತ್ರ ನೀಡುವ ಸಂಬಂಧ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯದ ಹಂತದಲ್ಲಿದ್ದು, ಕೊಳಚೆ ಪ್ರದೇಶದ ನಿವಾಸಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದರು.
       ಎಂಪಿಎಂ ಟೆಂಡರ್ ಪಡೆಯಲು ಯಾರು ಮುಂದೆ ಬಂದಿಲ್ಲ:
    ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಆರಂಭಿಸುವ ಸಂಬಂಧ ೬ ತಿಂಗಳಲ್ಲಿ ೩ ಬಾರಿ ಟೆಂಡರ್ ಕರೆಯಲಾಗಿದೆ. ಆದರೆ ಇದುವರೆಗೂ ಯಾರು ಸಹ ಟೆಂಡರ್ ಪಡೆಯಲು ಮುಂದೆ ಬಂದಿಲ್ಲ. ಆದಷ್ಟು ಶೀಘ್ರವಾಗಿ ಕಾರ್ಖಾನೆ ಆರಂಭಿಸುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
    ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಮುಖಂಡರಾದ ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಎಂ. ಪ್ರಭಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೊರೋನಾ ಸೋಂಕು ಅಪ್ಪ-ಮಗ ಸಾವು

ರಾಜಶೇಖರ್
    ಭದ್ರಾವತಿ, ಮೇ. ೩: ಕೊರೋನಾ ಸೋಂಕಿನ ಪರಿಣಾಮ ಚಿಕಿತ್ಸೆಗೆ ದಾಖಲಾಗಿದ್ದ ಅಪ್ಪ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ.
     ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಮೆಲ್ ನಿವೃತ್ತ ಅಧಿಕಾರಿ ರಾಜಶೇಖರ್(೬೫) ಭಾನುವಾರ ನಿಧನ ಹೊಂದಿದ್ದು, ಇವರ ಪುತ್ರ ಎಂ.ಆರ್ ದಯಾನಂದ(೪೧) ಸೋಮವಾರ ನಿಧನ ಹೊಂದಿದರು. ಇವರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.


ಎಂ.ಆರ್ ದಯಾನಂದ
      ದಯಾನಂದ ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದರು. ಮೃತರ ನಿಧನಕ್ಕೆ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಷಣ್ಮುಖರಾಧ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡದಂತೆ ಎಚ್ಚರ ವಹಿಸಿ : ಸಂಸದ ಬಿ.ವೈ ರಾಘವೇಂದ್ರ

ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸೋಮವಾರ ಕೋವಿಡ್-೧೯ ಮುಂಜಾಗ್ರತೆ ವಹಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿದರು.
    ಭದ್ರಾವತಿ, ಮೇ. ೩: ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡದಂತೆ ಹೆಚ್ಚಿನ ಜಾಗೃತಿ ವಹಿಸುವಂತೆ  ಸಂಸದ ಬಿ.ವೈ ರಾಘವೇಂದ್ರ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
    ಅವರು ಸೋಮವಾರ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಕೋವಿಡ್-೧೯ ಮುಂಜಾಗ್ರತೆ ವಹಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ಟ್ಯಾಂಕ್ ನಿರ್ಮಿಸಿರುವುದರಿಂದ ಸೂಕ್ತ ಸಮಯದಲ್ಲಿ ಆಕ್ಸಿಜನ್ ಒದಗಿಸಲು ಸಾಧ್ಯವಾಗಿದೆ. ವಿಐಎಸ್‌ಎಲ್ ಕಾರ್ಖಾನೆ ಒಳಭಾಗದಲ್ಲಿ ಖಾಸಗಿಯವರ ಸಹಭಾಗಿತ್ವದಲ್ಲಿ ಆಕ್ಸಿಜನ್ ಉತ್ಪಾದನೆ ಮಾಡಲಾಗುತ್ತಿದ್ದು, ಈ ಆಕ್ಸಿಜನ್ ಸಮರ್ಪಕವಾಗಿ ಬಳಸುವ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.
       ಕೊರೋನಾ ಸೋಂಕಿತರಿಗೆ ಆಹಾರ ಒದಗಿಸಲು ಸರ್ಕಾರ ತಲಾ ರು. ೨೫೦ ವೆಚ್ಚ ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಸೋಂಕಿತರಿಗೆ ಗುಣಮಟ್ಟದ ಆಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಸೋಂಕಿತರು ಹೊರಗಡೆ ತಿರುಗಾಡದಂತೆ ನಿಗಾವಹಿಸಬೇಕು. ಅಗತ್ಯ ಕಂಡು ಬಂದಲ್ಲಿ ಸೋಂಕಿತರಿಗೆ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.
      ತಾಲೂಕಿನಲ್ಲಿ ದಿನ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ವ್ಯಾಪಿಸದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು. ಶಿವಮೊಗ್ಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಾಗಿರುವ ಹಿನ್ನಲೆಯಲ್ಲಿ ಎಲ್ಲಾ ಅಧಿಕಾರಿಗಳು ಒಟ್ಟುಗೂಡಿ ಒಂದು ತಂಡವಾಗಿ ಕಾರ್ಯ ನಿರ್ವಹಿಸುವ ಮೂಲಕ ಕೊರೋಣ ನಿಯಂತ್ರಣಕ್ಕೆ ಶ್ರಮಿಸಬೇಕೆಂದರು ಕರೆ ನೀಡಿದರು.
     ಪೊಲೀಸ್ ಇಲಾಖೆಯವರು ಮಾಸ್ಕ್ ಧರಿಸದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ದೂರು ದಾಖಲಿಸಿಕೊಳ್ಳಬೇಕು.  ಸರ್ಕಾರಿ ಇಲಾಖೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಸರ್ಕಾರಿ ಕಛೇರಿಗೆ ಬರುವವರ ಮೇಲೆ ನಿಗಾವಹಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಿ. ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ನೀಡದಿರುವಂತೆ ಸಲಹೆ ನೀಡಿದರು.
    ಇದಕ್ಕೂ ಮೊದಲು ಸಭೆಯಲ್ಲಿ ಮಾಹಿತಿ ನೀಡಿದ  ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ೧೯  ಹಾಸಿಗೆಗಳನ್ನು ಸಿದ್ದಪಡಿಸಲಾಗಿದೆ. ಕಳೆದ ೨ ದಿನಗಳ ಹಿಂದೆ  ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇನ್ನೂ ೨೦ ಹಾಸಿಗೆಗಳನ್ನು ಹೆಚ್ಚಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೋಂಕಿತರಿಗೆ ಬೆಳಿಗ್ಗೆ ಉಪಹಾರ ಹೋಟೆಲ್‌ನಿಂದ ತಂದು ಪೂರೈಸಲಾಗುತ್ತಿದ್ದು, ಮಧ್ಯಾಹ್ನ ಆಸ್ಪತ್ರೆಯಲ್ಲಿಯೇ ಊಟ ನೀಡಲಾಗುತ್ತಿದೆ ಎಂದರು.
     ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಮಟ್ಟದ ಅಧಿಕಾರಿಗಳಾದ ಟಿ.ಎನ್ ಸೋಮಶೇಖರಯ್ಯ, ಕೆ.ಜೆ ತಮ್ಮಣ್ಣಗೌಡ, ಶಶಿಧರ್, ಕಾಂತರಾಜ್, ಎನ್ ಕೃಷ್ಣಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.