Thursday, May 20, 2021

ಬಡ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಿಸಿ ವಿಶಿಷ್ಟ ರೀತಿಯ ಪ್ರತಿಭಟನೆ


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಗುರುವಾರ ಭದ್ರಾವತಿ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕರ ಕಛೇರಿ ಮುಂಭಾಗ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.
   ಭದ್ರಾವತಿ, ಮೇ. ೨೦: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಗುರುವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕರ ಕಛೇರಿ ಮುಂಭಾಗ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.
   ಕಟ್ಟಡ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂಕಷ್ಟದಲ್ಲಿರುವ ಬಡ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸುವ ಜೊತೆಗೆ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ತಕ್ಷಣ ಕಟ್ಟಡ ಕಾರ್ಮಿಕರಿಗೆ ೧೦,೦೦೦ ರು. ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
  ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು, ತಾಂತ್ರಿಕ ಸಲಹೆಗಾರ ಕೆ. ಮನೋಹರ್, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಪ್ರಮುಖರಾದ ಸುಬ್ರಮಣ್ಯ, ನಾರಾಯಣ ಸ್ವಾಮಿ, ಜಿ. ಸುರೇಶ್‌ಕುಮಾರ್, ನಿಸಾರ್, ಮೆಹಬೂಬ್, ಷಣ್ಮುಗಂ, ಲಿಯಾಖತ್, ಮಣಿಕಂಠ, ಕುಮಾರ್, ಗುರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ಬೇಕಾಬಿಟ್ಟಿ ಚರಂಡಿ ಕಾಮಗಾರಿ

ಗುಣಮಟ್ಟ ಸಹ ಕಳಪೆ, ಸ್ಥಳೀಯರಿಂದ ದೂರು



ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ಚರಂಡಿ ಕಾಮಗಾರಿ ಕೈಗೊಂಡಿರುವುದು.
   ಭದ್ರಾವತಿ, ಮೇ. ೨೦: ನಗರಸಭೆ ವ್ಯಾಪ್ತಿಯ ಜನ್ನಾಪುರದಲ್ಲಿ ಬಾಕ್ಸ್ ಮಾದರಿ ಚರಂಡಿ ಕಾಮಗಾರಿಯನ್ನು ಬೇಕಾಬಿಟ್ಟಿಯಾಗಿ ಹಾಗು ಕಳಪೆ ಗುಣಮಟ್ಟದಿಂದ ಕೈಗೊಳ್ಳಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.  
  ವಾರ್ಡ್ ನಂ.೨೮ರ ಎಂ.ಎಂ ರಸ್ತೆ ಜಯಶ್ರೀ ವೃತ್ತದಿಂದ ವಾರ್ಡ್ ೨೯ರ ಮಲ್ಲೇಶ್ವರ ಸಭಾಭವನದವರೆಗೂ ಮುಖ್ಯರಸ್ತೆಯಲ್ಲಿ ಬಾಕ್ಸ್ ಮಾದರಿ ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ. ಶಾಸಕರ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರು ಸಾಕಷ್ಟು ಲೋಪದೋಷ ವೆಸಗಿರುವುದು ಬೆಳಕಿಗೆ ಬಂದಿದೆ.
    ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದಾಗಿ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಮಳೆಗಾಲದಲ್ಲಿ  ಚರಂಡಿಯಲ್ಲಿ ನೀರು ಸರಾಗವಾಗಿ ಹರಿದುಹೋಗಲು ಸಾಧ್ಯವಾಗದೆ ನಿಂತುಕೊಳ್ಳಲಿದೆ. ಮತ್ತೊಂದೆಡೆ ಒಂದು ವೇಳೆ ವಿದ್ಯುತ್ ಕಂಬಗಳನ್ನು  ಸ್ಥಳಾಂತರಿಸಬೇಕಾದರೆ ನಿರ್ಮಾಣಗೊಂಡಿರುವ ಚರಂಡಿಯನ್ನು ಒಡೆಯಬೇಕಾಗುತ್ತದೆ. ಇದರಿಂದ ಕಾಮಗಾರಿ ಪುನಃ ಕೈಗೊಳ್ಳಬೇಕಾಗುತ್ತದೆ. ಅಲ್ಲದೆ ಸಾರ್ವಜನಿಕ ಹಣ ಪೋಲಾಗುತ್ತದೆ ಎಂದು ಆರೋಪಿಸಿದ್ದಾರೆ.
   ಚರಂಡಿ ಕಾಮಗಾರಿ ಗುಣಮಟ್ಟ ಸಹ ಕಳಪೆಯಿಂದ ಕೂಡಿದ್ದು, ಸಾಕಷ್ಟು ಲೋಪದೋಷಗಳು ಕಂಡು ಬರುತ್ತಿವೆ. ಈ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
   ವಾರ್ಡ್ ನಂ.೨೮ರ ನೂತನ ನಗರಸಭಾ ಸದಸ್ಯ ಕಾಂತರಾಜ್ ಪತ್ರಿಕೆಯೊಂದಿಗೆ ಮಾತನಾಡಿ, ಕಾಮಗಾರಿಯಲ್ಲಿ ಲೋಪದೋಷಗಳು ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ಕಾಮಗಾರಿ ನಡೆಯುವಾಗ ನಗರಸಭೆ ಚುನಾವಣೆ ಪ್ರಕ್ರಿಯೆಯಲ್ಲಿತ್ತು. ಈ ಹಿನ್ನಲೆಯಲ್ಲಿ ಸಂಬಂಧಪಟ್ಟ ಗುತ್ತಿಗೆದಾರ ಅಥವಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ದೂರುಗಳು ಸಾಧ್ಯವಾಗಲಿಲ್ಲ. ಕಳೆದ ೨ ತಿಂಗಳಿನಿಂದ ಗುತ್ತಿಗೆ ಕಾಮಗಾರಿ ಸ್ಥಗಿತಗೊಳಿಸಿದ್ದು, ಈ ಸಂಬಂಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.

ಭದ್ರಾವತಿಯಲ್ಲಿ ೨೦೪ ಸೋಂಕು ಪತ್ತೆ

ಭದ್ರಾವತಿ, ಮೇ. ೨೦: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಪುನಃ ಏರಿಕೆಯಾಗಿದ್ದು, ಗುರುವಾರ ೨೦೪ ಸೋಂಕು ದೃಢಪಟ್ಟಿದೆ.
     ಒಟ್ಟು ೩೭೯ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ಪೈಕಿ ೨೦೪ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ೧೨೩ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ೮೧ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ೩೯೫ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಲಾಕ್‌ಡೌನ್ ಅವಧಿ ಮುಕ್ತಾಯಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಂತದಲ್ಲೂ ಸೋಂಕು ನಿಯಂತ್ರಣಕ್ಕೆ ಬರದಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಲಾಕ್‌ಡೌನ್ ಬಿಗಿಗೊಳಿಸಲು ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

ಕೊರೋನಾ ಸಂಕಷ್ಟದಲ್ಲಿಯೂ ಜನರ ಹಣ ಲೂಟಿ : ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪ

ಭದ್ರಾವತಿ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ಕಛೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬಡ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
   ಭದ್ರಾವತಿ, ಮೇ. ೨೦: ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಮಾನವೀಯತೆ ಎಂಬುದೇ ಗೊತ್ತಿಲ್ಲ. ಕೊರೋನಾ ಸಂಕಷ್ಟದಲ್ಲಿಯೂ ಭ್ರಷ್ಟಾಚಾರದಲ್ಲಿ ತೊಡಗಿದೆ. ಜನರ ಹಣ ಲೂಟಿ ಹೊಡೆಯುತ್ತಿದೆ. ಇಂತಹ ಸರ್ಕಾರ ಜನರಿಗೆ ಅಗತ್ಯವಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
   ಅವರು ಗುರುವಾರ ನಗರದ ಸಿ.ಎನ್ ರಸ್ತೆಯಲ್ಲಿರುವ ಕಾರ್ಮಿಕ ಕಛೇರಿ ಆವರಣದಲ್ಲಿ ಬಡ ಕಟ್ಟಡ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
   ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಏನೋ ಆಗಿಬಿಡುತ್ತದೆ ಎಂಬ ಭ್ರಮೆಯಲ್ಲಿ ಜನ ಮತವನ್ನು ಕೊಟ್ಟರು.  ಆದರೆ ಇದುವರೆಗೂ ಏನು ಆಗಿಲ್ಲ. ದೇಶದಲ್ಲಿ ೭೦ ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೇಶದ ಜನರಿಗೆ ಎಲ್ಲವನ್ನು ನೀಡಿದೆ. ಬಡವರು, ದೀನದಲಿತರು, ಕಟ್ಟಡ ಕಾರ್ಮಿಕರ ಪರವಾಗಿ ಸ್ಪಂದಿಸಿದೆ. ಮಲ್ಲಿಕಾರ್ಜುನಖರ್ಗೆಯವರು ಕೇಂದ್ರದಲ್ಲಿ ಕಾರ್ಮಿಕ ಸಚಿವರಾಗಿದ್ದಾಗ ಹಲವಾರು ಬದಲಾವಣೆಗಳನ್ನು ತಂದು ಕಟ್ಟಡ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದರು. ಇದೀಗ ಬಿಜೆಪಿ ಸರ್ಕಾರ ಬಂದ ಮೇಲೆ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ವಿನಾಕಾರಣ ಕಾರ್ಮಿಕರಿಗೆ ತೊಂದರೆ ಮಾಡುತ್ತಿದ್ದಾರೆಂದು ಆರೋಪಿಸಿದರು.
    ರಾಜ್ಯ ಸರ್ಕಾರ ಕಾರ್ಮಿಕರಿಗೆ ಕೇವಲ ೨,೦೦೦ ರು. ಪರಿಹಾರ ಘೋಷಣೆ ಮಾಡಿರುವುದು ಸರಿಯಲ್ಲ. ಕನಿಷ್ಠ ೧೦,೦೦೦ ರು. ಪರಿಹಾರ ನೀಡಬೇಕು. ಈ ಸಂಬಂಧ ಈಗಾಗಲೇ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷ ನಾಯಕರಾದ ಸಿದ್ದರಾಮಯ್ಯನವರು ರಾಜ್ಯಸರ್ಕಾರಕ್ಕೆ ಒತ್ತಾಯಿಸಿದ್ದು, ಅಲ್ಲದೆ ಬಿಪಿಎಲ್ ಪಡಿತರ ಕುಟುಂಬಗಳಿಗೂ ೧೦,೦೦೦ ರು. ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ ಎಂದರು.
      ಜಿಲ್ಲೆಯಲ್ಲಿ ಆಕ್ಸಿಜನ್, ವೆಂಟಿಲೇಟರ್ ಇಲ್ಲ :
  ಜಿಲ್ಲೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರತಿ ದಿನ ಸಾವಿರಾರು ಮಂದಿ ಸೋಂಕಿಗೆ ಒಳಗಾಗಿ ನರಳುತ್ತಿದ್ದಾರೆ. ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆಗಳಿಲ್ಲ. ಇದರಿಂದಾಗಿ ಪ್ರತಿ ದಿನ ೨೦ ರಿಂದ ೩೦ ಜನ ಸಾಯುತ್ತಿದ್ದಾರೆ.  ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ಪ್ರಭಾವಿ ನಾಯಕರುಗಳಿದ್ದರೂ ಸಹ ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿಕೊಡಲು ಸಾಧ್ಯವಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.  
    ನೂತನ ನಗರಸಭಾ ಸದಸ್ಯರಾದ ಕೆ. ಸುದೀಪ್‌ಕುಮಾರ್, ಜಾರ್ಜ್ ಹಾಗು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಭದ್ರಾವತಿಯಲ್ಲಿ ಮೇ.೨೨, ೨೩ ಎರಡು ದಿನ ಸಂಪೂರ್ಣ ಲಾಕ್‌ಡೌನ್

ಭದ್ರಾವತಿ, ಮೇ. ೨೦: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೇ.೨೨ ಮತ್ತು ೨೩ರಂದು ಎರಡು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
   ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮೇ.೧೯ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಪೂರ್ಣ ಲಾಕ್‌ಡೌನ್ ಈ ಹಿನ್ನಲೆಯಲ್ಲಿ ಹಾಲು ಮತ್ತು ಔಷಧ ಅಂಗಡಿಗಳು ಹೊರತುಪಡಿಸಿ ಯಾವುದೇ ಅಂಗಡಿಮುಂಗಟ್ಟುಗಳು ತೆರೆಯುವಂತಿಲ್ಲ. ಅಲ್ಲದೆ ಅನಾವಶ್ಯಕವಾಗಿ ಜನ ಸಂಚಾರ ಸಹ ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲೇ ಇದ್ದು ಸಂಪೂರ್ಣ ಲಾಕ್‌ಡೌನ್‌ಗೆ ಸಹಕರಿಸುವಂತೆ ಕೋರಲಾಗಿದೆ.

ಕೊರೋನಾ ಸೋಂಕಿಗೆ ಒಳಗಾಗದವರಿಗೆ ಉಚಿತ ಔಷಧ ಸಾಮಾಗ್ರಿ ವಿತರಣೆ

ಕೊರೋನಾ ಸಂಕಷ್ಟದಿಂದ ಬಳಲುತ್ತಿರುವವರ ನೆರವಿಗೆ ಭದ್ರಾವತಿಯಲ್ಲಿ ಬಂಜಾರ ಸಮುದಾಯದವರು ಮುಂದಾಗಿದ್ದು, ಸೋಂಕಿತರಿಗೆ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.
  ಭದ್ರಾವತಿ, ಮೇ. ೨೦: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವವರ ನೆರವಿಗೆ ಬಂಜಾರ ಸಮುದಾಯದವರು ಮುಂದಾಗಿದ್ದು, ಸೋಂಕಿತರಿಗೆ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.
   ಬಂಜಾರ ಸಮುದಾಯದ ಬಹುತೇಕ ತಾಂಡಗಳು ನಗರ ಪ್ರದೇಶಗಳಿಂದ ಹೊರಭಾಗದಲ್ಲಿದ್ದು, ತಾಂಡಗಳಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಯಿತು.
   ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ್, ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ನಾಯ್ಕ್, ಪ್ರಮುಖರಾದ ಪ್ರವೀಣ್‌ಕುಮಾರ್, ನಾಗರಾಜನಾಯ್ಕ್, ಉಮಾಮಹೇಶ್ವರ, ಚಂದ್ರನಾಯ್ಕ್ ಸೇರಿದಂತೆ ಇನ್ನಿತರರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.