Friday, May 21, 2021

ಭದ್ರಾವತಿಯಲ್ಲಿ ಕೊರೋನಾ ಸೋಂಕಿಗೆ ೭ ಬಲಿ, ೧೮೨ ಮಂದಿಗೆ ಸೋಂಕು

ಭದ್ರಾವತಿ, ಮೇ. ೨೧: ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸದ್ಯಕ್ಕೆ ಇಳಿಮುಖವಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶುಕ್ರವಾರ ಒಟ್ಟು ೧೮೨ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ೭ ಮಂದಿ ಬಲಿಯಾಗಿದ್ದಾರೆ.
   ಒಟ್ಟು ೪೧೪ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೮೨ ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಪುನಃ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೇವಲ ೬೨ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ಒಟ್ಟು ೮೮ ಮಂದಿ ಮೃತಪಟ್ಟಿದ್ದಾರೆ.  ಒಟ್ಟು ೪೮೭ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ತಾಲೂಕಿನಲ್ಲಿ ಒಟ್ಟು ೪೯ ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
          ೨೨ರಂದು ಕೋವಿಡ್ ಸಂಬಂಧಿಗಳ ತಂಗುದಾಣ ಉದ್ಘಾಟನೆ :
    ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿರುವ ಕಟ್ಟಡದಲ್ಲಿ ಕೋವಿಡ್ ಸಂಬಂಧಿಗಳ ಅನುಕೂಲಕ್ಕಾಗಿ ಬಿಜೆಪಿ ಪಕ್ಷದವತಿಯಿಂದ ತೆರೆಯಲಾಗಿರುವ ತಂಗುದಾಣದ ಉದ್ಘಾಟನೆ ಮೇ.೨೨ರಂದು ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ. ಸಂಸದ ಬಿ.ವೈ ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ಲಾಕ್ ಡೌನ್ ಗೆ ಸಹಕರಿಸಲು ಸಂಗಮೇಶ್ವರ ಮನವಿ

ಸಿಐಟಿಯು ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗಾಗಿ ಮನೆಗಳಲ್ಲಿ ಪ್ರತಿಭಟನೆ ವಿಶಿಷ್ಟ ಹೋರಾಟ

ಏಕಾಂಗಿ ಹೋರಾಟದ ಮೂಲಕ ಗಮನ ಸೆಳೆದ ಜಿಲ್ಲಾ ಪ್ರಧಾನ ಕರ್ಯದರ್ಶಿ ಎಂ. ನಾರಾಯಣ


ಭದ್ರಾವತಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(ಸಿಐಟಿಯು) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣ ಶುಕ್ರವಾರ ಮನೆಗಳಲ್ಲಿ ಪ್ರತಿಭಟನೆ ವಿಶಿಷ್ಟ ಹೋರಾಟ ನಡೆಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ, ಮೇ. ೨೧: ಕೊರೋನಾ ಸೋಂಕು ೨ನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ತಕ್ಷಣ ಎಲ್ಲರಿಗೂ ಉಚಿತ ಲಸಿಕೆ ನೀಡುವ ಜೊತೆಗೆ ಲಾಕ್‌ಡೌನ್ ಪರಿಣಾಮದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರು, ರೈತರು ಮತ್ತು ಕೃಷಿ ಕೂಲಿಕಾರರಿಗೆ ೩ ತಿಂಗಳು ಕನಿಷ್ಠ ಮಾಸಿಕ ೧೦,೦೦೦ ರು. ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(ಸಿಐಟಿಯು) ವತಿಯಿಂದ ಶುಕ್ರವಾರ ಮನೆಗಳಲ್ಲಿ ಪ್ರತಿಭಟನೆ ವಿಶಿಷ್ಟ ಹೋರಾಟ ನಡೆಸಲಾಯಿತು.
     ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣ ತಮ್ಮ ಮನೆಯಲ್ಲಿ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗಮನ ಸೆಳೆದರು.
    ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಆಟೋ, ಟ್ಯಾಕ್ಸಿ, ಗೂಡ್ಸ್ ಸೇರಿದಂತೆ ಇನ್ನಿತರ ವಾಹನಗಳ ಚಾಲಕರು, ಬೀದಿಬದಿ ವ್ಯಾಪಾರಿಗಳು, ಮನೆಗೆಲಸಗಾರರು, ಹಮಾಲಿಗಳು, ಬಿಸಿಯೂಟ ನೌಕರರು, ದಿನಗೂಲಿಗಳು, ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು, ಮೆಕ್ಯಾನಿಕ್‌ಗಳು, ಕ್ಷೌರಿಕರು, ದೋಬಿಗಳು, ಸೆಕ್ಯೂರಿಟಿಗಳು ಸೇರಿದಂತೆ ಎಲ್ಲಾ ಅಸಂಘಟಿತ ಶ್ರಮಜೀವಿಗಳು, ಆದಾಯ ತೆರಿಗೆ ಪಾವತಿ ವ್ಯಾಪ್ತಿಯಲ್ಲಿ ಬರದಿರುವ ರೈತಕೂಲಿಕಾರರು, ಬಡರೈತರು ಹಾಗು ದಲಿತರು ಲಾಕ್‌ಡೌನ್ ಪರಿಣಾಮ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ತಕ್ಷಣ ಕನಿಷ್ಠ ಮಾಸಿಕ ೧೦,೦೦೦ ರು. ಪರಿಹಾರ ೩ ತಿಂಗಳು ನೀಡಬೇಕೆಂದು ಆಗ್ರಹಿಸಿದರು.
     ಕೈಗಾರಿಕೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಹಾಗು ಸಂಘಟಿತ ಕಾರ್ಮಿಕರಿಗೆ ಲಾಕ್‌ಡೌನ್ ಅವಧಿಯಲ್ಲಿ ನೀಡಲಾಗಿರುವ ರಜೆಗಳನ್ನು ಸಂಬಳ ಸಹಿತ ರಜೆ ಎಂದು ಘೋಷಿಸಬೇಕು. ಕೃಷಿ ವಿರೋಧಿ ಕಾಯ್ದೆಗಳನ್ನು ಕೈಬಿಟ್ಟು ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು. ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸುವ ಜೊತೆಗೆ ಪ್ರೋತ್ಸಾಹಧನ ನೀಡಬೇಕು. ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಬೆಳೆ ಪರಿಹಾರ ನೀಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ೨೦೦ ದಿನ ಉದ್ಯೋಗ ನೀಡಬೇಕು. ದಿನಕೂಲಿಯನ್ನು ೭೦೦ ರು. ಗಳಿಗೆ ಹೆಚ್ಚಿಸಬೇಕು. ಇಂದಿರಾ ಕ್ಯಾಂಟಿನ್‌ಗಳಲ್ಲಿ ಪೌಷ್ಠಿಕಾಂಶಯುಳ್ಳ ಗುಣಮಟ್ಟದ ಆಹಾರ ವಿತರಿಸಬೇಕು. ಪ್ರತಿ ವ್ಯಕ್ತಿಗೆ ಮಾಸಿಕ ೧೦ ಕೆ.ಜಿ ಅಕ್ಕಿ ೬ ತಿಂಗಳು ನೀಡಬೇಕು. ಕೊರೋನಾ ಚಿಕಿತ್ಸೆಯಲ್ಲಿ ಕಂಡು ಬರುತ್ತಿರುವ ಲೋಪದೋಷಗಳನ್ನು ತಕ್ಷಣ ಸರಿಪಡಿಸಿಕೊಂಡು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

೨ ದಿನದ ಸಂಪೂರ್ಣ ಲಾಕ್‌ಡೌನ್‌ಗೆ ಸಹಕರಿಸಿ : ಬಿ.ಕೆ ಸಂಗಮೇಶ್ವರ್

ಬಿ.ಕೆ ಸಂಗಮೇಶ್ವರ್
ಭದ್ರಾವತಿ, ಮೇ. ೨೧: ಕೊರೋನಾ ಸೋಂಕು ಎಲ್ಲೆಡೆ ಹೆಚ್ಚಳವಾಗುತ್ತಿದ್ದು, ಕ್ಷೇತ್ರದ ಜನರ ಆರೋಗ್ಯದ ದೃಷ್ಟಿಯಿಂದ ೨ ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದ್ದಾರೆ.
    ಈ ಕುಡಿತು ಪತ್ರಿಕೆಯೊಂದಿಗೆ ಮಾತನಾಡಿ, ಕೊರೋನಾ ಸೋಂಕು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬರು ಮನೆಯಲ್ಲಿಯೇ ಇದ್ದು ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕುರಿತು ಜಾಗೃತಿ ಹೊಂದಬೇಕು. ಜೊತೆಗೆ ವ್ಯಾಯಾಮ, ಧ್ಯಾನ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ವೃದ್ಧಿಸಿಕೊಳ್ಳಬೇಕು.
  ಕ್ಷೇತ್ರದ ಪ್ರತಿಯೊಬ್ಬರ ಆರೋಗ್ಯ ಮುಖ್ಯವಾಗಿದ್ದು, ೨ ದಿನದ ಸಂಪೂರ್ಣ ಲಾಕ್‌ಡೌನ್‌ಗೆ ಸಹಕರಿಸುವ ಮೂಲಕ ಕೊರೋನಾ ತೊಲಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾರ್ಯಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ.

https://youtu.be/JPBlhvNDAwA