Tuesday, June 22, 2021

ಗೋಣಿಬೀಡು, ಮಲ್ಲಿಗೇನಹಳ್ಳಿ ವ್ಯಾಪ್ತಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಭದ್ರಾವತಿ ತಾಲೂಕಿನ ಗೋಣಿಬೀಡು, ಮಲ್ಲಿಗೇನಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ.
ಭದ್ರಾವತಿ, ಜೂ. ೨೨: ತಾಲೂಕಿನ ಗೋಣಿಬೀಡು, ಮಲ್ಲಿಗೇನಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚು ಮಾಡಿದೆ.
    ಬೆಳಿಗ್ಗೆ ೧೦ ಗಂಟೆ ಸಮಯದಲ್ಲಿ  ಒಂಟಿ ಸಲಗ ಕಾಣಿಸಿಕೊಂಡಿದೆ. ತಕ್ಷಣ ಅಕ್ಕಪಕ್ಕದ ಗ್ರಾಮಸ್ಥರು ಪಟಾಕಿ ಸಿಡಿಸಿ ಕಾಡಿಗೆ ಓಡಿಸಿದ್ದಾರೆ. ಒಂಟಿ ಸಲಗ ಕಾಣಿಸಿಕೊಂಡಿರುವ ರಸ್ತೆಯಲ್ಲಿಯೇ ಬೆಳಗಿನ ಸಮಯದಲ್ಲಿ ಜನರು ವಾಯುವಿಹಾರಕ್ಕೆ ತೆರಳುತ್ತಾರೆ. ಇದರಿಂದಾಗಿ ಆತಂಕ ಹೆಚ್ಚು ಮಾಡಿದೆ.
   ಒಂಟಿ ಸಲಗ ಕಾಣಿಸಿಕೊಂಡಿರುವ ದೃಶ್ಯ ಸಾಮಾಜಿಕ ಸುದ್ದಿ ಜಾಲಗಳಲ್ಲಿ ಹರಿಡಾಡುತ್ತಿದೆ. ಒಂಟಿ ಸಲಗ ಕಾಣಿಸಿಕೊಂಡಿರುವುದು ನಿಜ ಎಂದು ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಭದ್ರಾ ಅಭಯಾರಣ್ಯದಿಂದ ಆನೆಗಳು ಬಂದು ಹೋಗುವುದು ಸಹಜ ಎಂದು ತಿಳಿಸಿದ್ದಾರೆ.

ಕೇವಲ ೧೮ ಸೋಂಕು : ೩ ಬಲಿ

ಭದ್ರಾವತಿ, ಜೂ. ೨೨: ತಾಲೂಕಿನಲ್ಲಿ ಕೊರೋನಾ ಸೋಂಕು ಬಹುತೇಕ ಉಳಿಮುಖವಾಗಿದ್ದು, ಮಂಗಳವಾರ ಕೇವಲ ೧೮ ಸೋಂಕು ಮಾತ್ರ ಪತ್ತೆಯಾಗಿದೆ. 
    ಗ್ರಾಮಾಂತರ ಭಾಗದಲ್ಲಿ ೧೦ ಹಾಗು ನಗರ ಭಾಗದಲ್ಲಿ ೮ ಸೋಂಕು ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಸೋಂಕಿಗೆ ೩  ಮಂದಿ ಬಲಿಯಾಗಿದ್ದಾರೆ. ಸೋಂಕು ಕಡಿಮೆಯಾದರೂ ಸಾವಿನ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕ ಹೆಚ್ಚು ಮಾಡಿದೆ.

ಜೂ.೨೩ರಂದು ಉಚಿತ ಟ್ಯಾಬ್ ವಿತರಣೆ

ಭದ್ರಾವತಿ, ಜೂ. ೨೨: ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಬೊಮ್ಮನಕಟ್ಟೆ ಸರ್‌ಎಂವಿ ವಿಜ್ಞಾನ ಕಾಲೇಜು ಹಾಗು ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮ ಜೂ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
    ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ. ವಿಷ್ಣುಮೂರ್ತಿ, ಡಾ. ರವೀಂದ್ರ, ಪ್ರೊ. ವರದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನ : ಸಸಿ ನೆಡುವ ಕಾರ್ಯಕ್ರಮ

ಭದ್ರಾವತಿ, ಜೂ. ೨೨: ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನದ ಅಂಗವಾಗಿ ಬಿಜೆಪಿ ರೈತ ಮೋರ್ಚಾ ತಾಲೂಕು ಮಂಡಲ ವತಿಯಿಂದ ಜೂ.೨೩ರಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
     ಬಿಳಿಕಿ ಮಠದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಠದ ಶ್ರೀ ರಾಚೋಟೇಶ್ವರಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಮಂಡಲದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವಿ ಸಂತೋಷ್ ಕೋರಿದ್ದಾರೆ.

ಬಿ.ಎಸ್ ಶಾಂತಣ್ಣ ನಿಧನ

ಬಿ.ಎಸ್ ಶಾಂತಣ್ಣ
   ಭದ್ರಾವತಿ, ಜೂ. ೨೨:  ನಗರದ ಹೊಸಮನೆ ಓಎಸ್‌ಎಂ ನಿವಾಸಿ, ವೀರಶೈವ ಸಮಾಜದ ಮುಖಂಡ ಬಿ.ಎಸ್ ಶಾಂತಣ್ಣ(೬೭) ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವಪುತ್ರ ಹೊಂದಿದ್ದರು. ಮೃತರ  ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ  ನೆರವೇರಿಸಲಾಯಿತು. ಶಾಸಕ ಬಿ.ಕೆ. ಸಂಗಮೇಶ್ವರ್, ತಾಲೂಕು ವೀರಶೈವ ಸಮಾಜ ಸೇರಿದಂತೆ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.